ಸಾಹಿತಿಗೆ ವ್ಯಾಕರಣದ ತಿಳಿವು ಬೇಕೇ?

ನುಡಿಯರಿಮೆಯ ಇಣುಕುನೋಟ – 21

ಕತೆ, ಕಾದಂಬರಿ, ನಾಟಕ ಮೊದಲಾದ ನಲ್ಬರಹಗಳನ್ನು ಬರೆಯುವ ಸಾಹಿತಿಗಳಿಗೆ ಕನ್ನಡ ನುಡಿಯ ವ್ಯಾಕರಣದ ತಿಳಿವಿನಿಂದ ಯಾವ ಬಗೆಯ ನೆರವೂ ಸಿಗಲಾರದೆಂಬ ಅನಿಸಿಕೆ ಹಲವು ಮಂದಿ ಬರಹಗಾರರಲ್ಲಿದೆ. “ಕನ್ನಡ ವ್ಯಾಕರಣ”ವೆಂಬ ಹೆಸರಿನಲ್ಲಿ ಇವತ್ತು ಶಾಲೆಗಳಲ್ಲಿ ಕಲಿಸುತ್ತಿರುವುದು ನಿಜಕ್ಕೂ ಕನ್ನಡದ ವ್ಯಾಕರಣವೇ ಅಲ್ಲದಿರುವುದು ಇದಕ್ಕೆ ಮುಕ್ಯ ಕಾರಣ; ನಿಜವಾದ ಕನ್ನಡದ ವ್ಯಾಕರಣ ಎಂತಹದು, ಅದು ಹೇಗೆ ಕನ್ನಡದಲ್ಲಿ ಪದಗಳನ್ನು ಮತ್ತು ಸೊಲ್ಲುಗಳನ್ನು ಕಟ್ಟುವ ಬಗೆಯನ್ನು ತಿಳಿಸಿಕೊಡುತ್ತದೆ, ಮತ್ತು ಈ ತಿಳಿವಿನ ಮೂಲಕ ಹೇಗೆ ಬರಹಗಳನ್ನು ಸರಿಯಾಗಿ ಬರೆಯಲು ಇಲ್ಲವೇ ಬರೆದುದನ್ನು ಸರಿಪಡಿಸಲು ಬರುತ್ತದೆ ಎಂಬುದನ್ನು ತಿಳಿಸಿಕೊಟ್ಟಲ್ಲಿ ಯಾರೂ ಅದರ ನೆರವನ್ನು ಅಲ್ಲಗಳೆಯಲಾರರು.

ಹಲವು ಜನರಿಗೆ ತುಂಬಾ ಸ್ವಾರಸ್ಯವಾದ ವಿಶಯಗಳು ಹೊಳೆಯುತ್ತಿರುತ್ತವೆ; ಆದರೆ, ಅವನ್ನು ಇತರರಿಗೆ ತಿಳಿಯುವ ಹಾಗೆ ಬರೆಯುವುದು ಹೇಗೆ ಎಂದು ಗೊತ್ತಾಗುವುದಿಲ್ಲ. ಕತೆ, ಕವಿತೆ ಮೊದಲಾದುವನ್ನು ಕಲ್ಪಿಸಿಕೊಳ್ಳುವಶ್ಟೇ ಓದುಗರಿಗೆ ತಲಪುವ ಹಾಗೆ ಅವನ್ನು ಬರೆಯುವುದೂ ಮುಕ್ಯವಾದ ಕೆಲಸವಾಗಿದೆ. ಈ ಎರಡನೇ ಕೆಲಸವನ್ನು ನಡೆಸುವುದು ಹೇಗೆ ಎಂಬುದನ್ನು ಕಲಿಯಬೇಕೆಂದಿರುವವರಿಗೆ ಸೊಲ್ಲರಿಮೆಯ (ವ್ಯಾಕರಣದ) ತಿಳಿವು ಹಲವು ಬಗೆಗಳಲ್ಲಿ ನೆರವಿಗೆ ಬರಬಲ್ಲುದು. ಇದಲ್ಲದೆ, ಹಲವು ಮಂದಿ ಬರಹಗಾರರಿಗೆ ತಮ್ಮ ಬರಹವನ್ನು ಸಾವಗಿಸುವುದು ಹೇಗೆ ಎಂಬುದು ತಿಳಿದಿರುವುದಿಲ್ಲ.

ಅವುಗಳಲ್ಲಿ ಬರುವ ಕೆಲವು ಕುರಳು(ಪಾರಾ)ಗಳನ್ನು ಅವರು ಒಂದೆರಡು ಪುಟಗಳಶ್ಟು ಉದ್ದಕ್ಕೂ ಎಳೆಯುತ್ತಿರುತ್ತಾರೆ. ಇದರಿಂದಾಗಿ ಅವನ್ನು ಓದುವವರಿಗೆ ಉಸಿರುಕಟ್ಟಿದ ಹಾಗಾಗುತ್ತದೆ. ತಡೆ(,), ಅರೆಕೊನೆ(;), ಅಡ್ಡಗೆರೆ(-) ಮೊದಲಾದ ಬರಹದ ಗುರುತುಗಳನ್ನೂ ಅವರು ಸರಿಯಾಗಿ ಬಳಸುವುದಿಲ್ಲ. ಹಾಗಾಗಿ, ಅವರ ಬರಹಗಳು ಚನ್ನಾಗಿದ್ದರೂ ಹೆಚ್ಚಿನ ಓದುಗರಿಗೂ ತೊಡಕಿನವಾಗಿ ಕಾಣಿಸುತ್ತವೆ. ಬರಹದ ಗುರುತುಗಳನ್ನು ಸರಿಯಾಗಿ, ಓದುಗರಿಗೆ ನೆರವಾಗುವ ಹಾಗೆ, ಬಳಸಬೇಕಿದ್ದಲ್ಲಿ ಅದಕ್ಕೆ ಸೊಲ್ಲರಿಮೆಯ ತಿಳಿವು ಬೇಕಾಗುತ್ತದೆ. ಬಣ್ಣಗಳ ಅರಿವು ಕಲೆಗಾರರಿಗೆ ಹೇಗೆ ನೆರವು ನೀಡಬಲ್ಲುದೋ ಹಾಗೆಯೇ ಸೊಲ್ಲುಗಳ ಅರಿವು ನಲ್ಬರಹಗಾರರಿಗೂ ನೆರವು ನೀಡಬಲ್ಲುದು.

ಕನ್ನಡದಲ್ಲಿ ಎಂತಹ ಸೊಲ್ಲುಗಳು ಬಳಕೆಯಲ್ಲಿವೆ, ಅವುಗಳ ನಡುವಿನ ವ್ಯತ್ಯಾಸಗಳು ಎಂತಹವು, ಓದುಗರ ಮೇಲೆ ಅವು ಎಂತಹ ಪರಿಣಾಮವನ್ನು ಬೀರುತ್ತವೆ ಎಂಬಂತಹ ವಿಶಯಗಳನ್ನು ತಿಳಿಯಲು ಸೊಲ್ಲರಿಮೆಯ ತಿಳಿವು ನೆರವಿಗೆ ಬರುತ್ತದೆ. ಎತ್ತುಗೆಗಾಗಿ, ಒಂದು ಕತೆಯಲ್ಲಿ ಒಬ್ಬ ವ್ಯಕ್ತಿಯ ಪರಿಚೆಯನ್ನು ಮಾಡಿಕೊಡಬೇಕಾದಾಗ, ಎಸಕ(ಕ್ರಿಯಾ)ಪದಗಳಿಲ್ಲದಿರುವ ಚಿಕ್ಕ ಚಿಕ್ಕ ಸೊಲ್ಲುಗಳನ್ನು ಬಳಸಬೇಕಾಗುತ್ತದೆ; ಇದಕ್ಕೆ ಬದಲು, ಕತೆ ಬಹಳ ಬೇಗನೆ ಮುಂದಕ್ಕೆ ಹೋಗುವಂತೆ ಮಾಡಬೇಕಿದ್ದಲ್ಲಿ ಎಸಕ ಪದಗಳಿರುವಂತಹ ಚಿಕ್ಕ ಚಿಕ್ಕ ಸೊಲ್ಲುಗಳನ್ನು ಬಳಸಬೇಕಾಗುತ್ತದೆ. ಇಂತಹ ಚಿಕ್ಕ ಚಿಕ್ಕ ಸೊಲ್ಲುಗಳ ಬದಲು, ಹಲವಾರು ಒಳಸೊಲ್ಲುಗಳಿರುವ ಉದ್ದುದ್ದವಾದ ಸಿಕ್ಕಲು ಸೊಲ್ಲುಗಳನ್ನು ಬಳಸಿದಲ್ಲಿ, ಕತೆಯ ವೇಗ ಕಡಿಮೆಯಾಗಿ, ಅದು ತುಂಬಾ ಮೆಲ್ಲನೆ ಸಾಗುವಂತಾಗುತ್ತದೆ.

ಎಸಕ ಪದಗಳಲ್ಲಿ ಕೆಲವು ತೀರಾ ಬಡವಾಗಿರುತ್ತವೆ; ಆದರೆ ಇನ್ನು ಕೆಲವು ತುಂಬಾ ಹುಲುಸಾಗಿದ್ದು, ಎಸಕಗಳನ್ನು ಎದ್ದುಕಾಣುವಂತೆ ಓದುಗರ ಮುಂದಿರಿಸಬಲ್ಲುವು. ಎತ್ತುಗೆಗಾಗಿ, ಇರು, ಮಾಡು, ಆಗು, ಹೇಳು, ತಿನ್ನು, ನಡೆ, ಬರು ಮೊದಲಾದುವು ತೀರಾ ಬಡವಾಗಿರುವ ಎಸಕ ಪದಗಳು. ಅವನ್ನು ಬಳಸಿರುವಲ್ಲೂ ಎಸಕಗಳು ಎದ್ದುಕಾಣಿಸುವ ಹಾಗೆ ಮಾಡಬೇಕಿದ್ದರೆ, ಅವಕ್ಕೆ ಯಾವುದಾದರೊಂದು ಪರಿಚೆಪದವನ್ನು ಸೇರಿಸಬೇಕಾಗುತ್ತದೆ (ಕತಕತನೆ ಕುದಿಯಿತು, ದೊಪ್ಪನೆ ಬಿತ್ತು, ತಟಕ್ಕನೆ ಹೇಳಿದಳು). ಆದರೆ ಈ ರೀತಿ ಪರಿಚೆ ಪದಗಳನ್ನು ಸೇರಿಸಿ ಹೇಳುವುದಕ್ಕಿಂತಲೂ, ಅಂತಹ ಪರಿಚೆಗಳನ್ನು ಒಳಗೊಂಡಿರುವ ಹುಲುಸುಪದಗಳನ್ನು ಬಳಸುವುದು ಹೆಚ್ಚು ಒಳ್ಳೆಯದು. ನುಗ್ಗು, ಮುತ್ತು, ಚಿವುಟು, ದುಮುಕು, ನುಸುಳು ಮೊದಲಾದುವು ಇಂತಹ ಪರಿಚೆಗಳನ್ನು ಒಳಗೊಂಡಿರುವ ಹುಲುಸುಪದಗಳು. ಅವನ್ನು ಬಳಸಿರುವಲ್ಲಿ ಸೊಲ್ಲುಗಳು ಹೆಚ್ಚು ಅಡಕವಾಗಿಯೂ ಇರುತ್ತವೆ.

ಜನರು ಒಳಗೆ ಹೋದರು ಎಂಬ ಸೊಲ್ಲು ತಿಳಿಸುವ ಎಸಕವನ್ನೇ ಜನರು ಒಳಗೆ ನುಗ್ಗಿದರು ಎಂಬುದು ನಿಜಕ್ಕೂ ಏನು ನಡೆಯಿತು ಎಂಬುದನ್ನು ಹೆಚ್ಚು ಚನ್ನಾಗಿ, ಕಣ್ಣಿಗೆ ಕಟ್ಟುವಂತೆ ತಿಳಿಸುತ್ತದೆ. ಇಂತಹದೇ ವ್ಯತ್ಯಾಸವನ್ನು ಅವನು ಕೆಳಗೆ ಹಾರಿದ ಎನ್ನುವುದಕ್ಕೂ ಅವನು ಕೆಳಗೆ ದುಮುಕಿದ ಎನ್ನುವುದಕ್ಕೂ ನಡುವೆ ಕಾಣಬಹುದು. ಸನ್ನಿವೇಶಕ್ಕೆ ತಕ್ಕ ಹಾಗೆ ಇಂತಹ ಹೆಚ್ಚು ಹುಲುಸಾಗಿರುವ ಪದಗಳನ್ನು ಆರಿಸಿಕೊಳ್ಳುವ ಜಾಣ್ಮೆ ಬರಹಗಾರರಿಗಿರಬೇಕು. ಈ ಅಳವನ್ನು ಪಡೆಯುವಲ್ಲಿ ಬರಹಗಾರರಿಗೆ ಸೊಲ್ಲರಿಮೆ ನೆರವು ನೀಡಬಲ್ಲುದು. ಹುಲುಸಾಗಿರುವ ಎಸಕಪದ ಸಿಗದಿದ್ದಲ್ಲಿ ಅಣಕು ಪದಗಳನ್ನು ಬಳಸಬೇಕಾಗುತ್ತದೆ.

ಕನ್ನಡದಲ್ಲಿ ಇಂತಹ ಎರಡು ಬಗೆಯ ಪದಗಳು ಬಳಕೆಯಲ್ಲಿವೆ: ಚಿಲ್ಲನೆ, ತಟ್ಟನೆ, ದುಡುಮ್ಮನೆ, ತಟಾರನೆ, ದಿಡೀರನೆ ಮೊದಲಾದ ಒತ್ತುಬರಿಗೆ ಇಲ್ಲವೇ ಉದ್ದ ತೆರೆಯುಲಿಯಿರುವ ಪದಗಳು, ಮತ್ತು ಚಟಚಟನೆ, ದಡದಡನೆ, ಪಳಪಳನೆ ಮೊದಲಾದ ಒತ್ತುಬರಿಗೆ ಇಲ್ಲವೇ ಉದ್ದ ತೆರೆಯುಲಿಯಿಲ್ಲದ ಪದಗಳು. ಇವುಗಳಲ್ಲಿ ಮೊದಲನೇ ಬಗೆಯ ಪದಗಳು ಒಮ್ಮೆಗೇನೇ ನಡೆದು ಹೋಗುವ ಎಸಕಗಳ ಪರಿಚೆಯನ್ನು ಸೂಚಿಸುತ್ತವೆ; ಇದನ್ನು ದೊಪ್ಪನೆ ಕೆಳಗೆ ಬಿತ್ತು, ಗಬಕ್ಕನೆ ಬಾಯಿ ಹಾಕಿತು, ಬುರ್ರನೆ ಹಾರಿಹೋಯಿತು ಮೊದಲಾದ ಎತ್ತುಗೆಗಳಲ್ಲಿ ಕಾಣಬಹುದು. ಎರಡನೇ ಬಗೆಯ ಪದಗಳು ತುಸು ಹೊತ್ತು ನಡೆಯುತ್ತಿರುವ ಎಸಕಗಳ ಪರಿಚೆಯನ್ನು ಸೂಚಿಸುತ್ತವೆ. ಎಲ್ಲರೂ ದಡದಡನೆ ಇಳಿದು ಬಂದರು, ಪಳಪಳನೆ ಹೊಳೆಯುತ್ತಿತ್ತು, ಗಬಗಬನೆ ತಿಂದುಮುಗಿಸಿದ ಮೊದಲಾದ ಎತ್ತುಗೆಗಳಲ್ಲಿ ಇದನ್ನು ಕಾಣಬಹುದು.

ಅಣಕುಪದಗಳ ನಡುವಿರುವ ಈ ವ್ಯತ್ಯಾಸವನ್ನು ಗಮನಿಸದಿದ್ದಲ್ಲಿ ತೊಂದರೆಯಾಗುತ್ತದೆ: ಎತ್ತುಗೆಗಾಗಿ, ದಡಕ್ಕೆಂದು ಗಾಡಿ ಕೊರಕಲಲ್ಲಿ ಬಿದ್ದು ಎದ್ದು ಕುಲುಕಾಡುತ್ತ ಸಾಗಿತ್ತು ಎಂಬ ಸೊಲ್ಲಿನಲ್ಲಿ ತುಸು ಹೊತ್ತು ನಡೆಯುತ್ತಿರುವ ಒಂದು ಎಸಕವನ್ನು ಸೂಚಿಸಲಾಗಿದೆ; ಆದರೆ, ಇದರಲ್ಲಿ ಒಮ್ಮೆಗೇನೇ ನಡೆದು ಹೋಗುವಂತಹ ಎಸಕದ ಪರಿಚೆಯನ್ನು ಸೂಚಿಸಬಲ್ಲ ದಡಕ್ಕನೆ ಎಂಬ ಅಣಕು ಪದವನ್ನು ಬಳಸಲಾಗಿದೆ, ಮತ್ತು ಇದರಿಂದಾಗಿ ಈ ಸೊಲ್ಲು ಅಶ್ಟು ಚನ್ನಾಗಿ ಓದಿಸಿಕೊಂಡು ಹೋಗುವುದಿಲ್ಲ. ಇದಕ್ಕೆ ಬದಲು, ತುಸು ಹೊತ್ತು ನಡೆಯುವಂತಹ ಎಸಕದ ಪರಿಚೆಯನ್ನೇ ತಿಳಿಸಬಲ್ಲ ದಡದಡನೆ ಎಂಬಂತಹ ಅಣಕು ಪದವನ್ನು ಬಳಸಿದಲ್ಲಿ ಅದು ಹೆಚ್ಚು ಚನ್ನಾಗಿ ಓದಿಸಿಕೊಂಡು ಹೋಗಬಲ್ಲುದು.

ಬರಹದಲ್ಲಿ ಬರುವ ಕೆಲವು ಸೊಲ್ಲುಗಳು ಯಾಕೆ ಅಶ್ಟು ಚನ್ನಾಗಿ ಓದಿಸಿ ಕೊಂಡು ಹೋಗುತ್ತವೆ, ಮತ್ತು ಬೇರೆ ಕೆಲವು ಸೊಲ್ಲುಗಳು ಯಾಕೆ ಆ ರೀತಿ ಓದಿಸಿಕೊಂಡು ಹೋಗುವುದಿಲ್ಲ ಎಂಬುದನ್ನು ತಿಳಿಯಲು, ಮತ್ತು ಚನ್ನಾಗಿ ಓದಿಸಿಕೊಂಡು ಹೋಗದಿರುವ ಸೊಲ್ಲೊಂದು ತಮ್ಮ ಬರಹದಲ್ಲಿ ಬಂದಿದೆಯಾದರೆ, ಅದನ್ನು ಬದಲಾಯಿಸುವುದು ಹೇಗೆ ಎಂಬುದನ್ನು ತಿಳಿಯಲು ಸೊಲ್ಲರಿಮೆಯ ತಿಳಿವು ಈ ರೀತಿ ಬರಹಗಾರರ ನೆರವಿಗೆ ಬರಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹದಲ್ಲಿ ಯಾವುದು ಸರಿ, ಯಾವುದು ತಪ್ಪು?

ನುಡಿಯರಿಮೆಯ ಇಣುಕುನೋಟ – 20

ಕನ್ನಡದಲ್ಲಿ ಬಳಕೆಯಾಗುವ ಪದಗಳು ಮತ್ತು ಪದರೂಪಗಳುಸರಿಯೋ ತಪ್ಪೋ ಎಂಬುದನ್ನು ತೀರ‍್ಮಾನಿಸುವಲ್ಲಿ ನಾವು ಯಾವ ಕಟ್ಟಲೆಗಳನ್ನು ಬಳಸಬೇಕು? ಕನ್ನಡದ ಕಟ್ಟಲೆಗಳನ್ನೇ ಬಳಸಬೇಕೆಂದು ಯಾರೂ ಹೇಳಬಹುದು. ಆದರೆ, ಇವತ್ತು ಹಲವು ಮಂದಿ ಕನ್ನಡದ ವಿದ್ವಾಂಸರಿಗೆ ಇದು ಒಪ್ಪಿಗೆಯಾಗುವುದಿಲ್ಲ. ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡದಲ್ಲಿ ಬಳಸುವಾಗ ಸಂಸ್ಕ್ರುತದ ಕಟ್ಟಲೆಗಳನ್ನೇ ತಪ್ಪದೆ ಬಳಸಬೇಕೆಂಬುದಾಗಿ ಅವರು ಹೇಳುತ್ತಾರೆ. ಕನ್ನಡದ ವಿದ್ವಾಂಸರಲ್ಲಿ ಹಿಂದಿನ ಕಾಲದಿಂದಲೂ ಬೆಳೆದುಬಂದಿರುವ ಕನ್ನಡದ ಕುರಿತಾಗಿರುವ ಕೀಳರಿಮೆ ಮತ್ತು ಸಂಸ್ಕ್ರುತದ ಕುರಿತಾಗಿರುವ ಅತಿಯಾದ ಆದರ ಮತ್ತು ಅಬಿಮಾನಗಳೇ ಇದಕ್ಕೆ ಕಾರಣ.

ಎತ್ತುಗೆಗಾಗಿ, ಸೊಲ್ಲರಿಗರನ್ನು ಸೂಚಿಸಲು ಸಂಸ್ಕ್ರುತದಲ್ಲಿ ಎರಡು ಪದಗಳಿವೆ. ಇವುಗಳಲ್ಲಿ ‘ವಯ್ಯಾಕರಣಃ’ ಎಂಬುದು ಗಂಡಸರನ್ನು ಸೂಚಿಸುತ್ತದೆ ಮತ್ತು ‘ವಯ್ಯಾಕರಣೀ’ ಎಂಬುದು ಹೆಂಗಸರನ್ನು ಸೂಚಿಸುತ್ತದೆ. ಆದರೆ, ಕನ್ನಡದಲ್ಲಿ ಗಂಡಸರನ್ನು ಸೂಚಿಸುವುದಕ್ಕಾಗಿಯೂ ‘ವಯ್ಯಾಕರಣಿ’ ಎಂಬ ಪದವೇ ಬಳಕೆಗೆ ಬಂದಿದೆ. ಇದನ್ನು ಕಿಟ್ಟೆಲ್ ಅವರ ಡಿಕ್ಶನರಿಯಲ್ಲಿ ನೋಡಬಹುದು. ಆದರೆ ಇದು ತಪ್ಪು, ಗಂಡಸರನ್ನು ಸೂಚಿಸಲು ‘ವಯ್ಯಾಕರಣ’ ಎಂಬುದನ್ನೇ ಬಳಸಬೇಕು ಎಂಬುದಾಗಿ ಕೆಲವರು ಕನ್ನಡದ ವಿದ್ವಾಂಸರು ವಾದಿಸುತ್ತಾರೆ.

ಇದಕ್ಕೆ ಅವರಿಗೆ ಸಂಸ್ಕ್ರುತ ವ್ಯಾಕರಣದ ಕಟ್ಟಲೆಯೇ ಆದಾರ. ಆದರೆ ನಿಜಕ್ಕೂ ಇದು ಸರಿಯಲ್ಲ. ಯಾಕೆಂದರೆ, ಯಾವ ನುಡಿಯಿಂದಲೇ ಆಗಲಿ ಒಂದು ಪದವನ್ನು ಎರವಲಾಗಿ ಪಡೆದ ಮೇಲೆ, ಅದನ್ನು ಯಾವ ರೀತಿಯಲ್ಲಿ ಮತ್ತು ಯಾವ ರೂಪದಲ್ಲಿ ಬಳಸಬೇಕು ಎಂಬುದಕ್ಕೆ ಎರವಲಾಗಿ ಪಡೆದ ನುಡಿಯಲ್ಲಿರುವ ಬಳಕೆಯ ಕಟ್ಟಲೆಗಳೇ ಆದಾರವಾಗಬೇಕಲ್ಲದೆ ಎರವಲು ಕೊಟ್ಟ ನುಡಿಯ ಕಟ್ಟಲೆಗಳಲ್ಲ.

ಎತ್ತುಗೆಗಾಗಿ, ಸಂಸ್ಕ್ರುತದಿಂದ ಹಲವು ನಾಮಪದಗಳನ್ನು ನಾವು ಕನ್ನಡಕ್ಕೆ ಎರವಲಾಗಿ ಪಡೆದು ಬಳಸುತ್ತೇವೆ. ಇವುಗಳಲ್ಲಿ ಕೆಲವಕ್ಕೆ ಇಸು ಒಟ್ಟನ್ನು ಸೇರಿಸಿ ಕ್ರಿಯಾಪದಗಳಾಗಿ ಮಾಡಿಯೂ ಬಳಸುತ್ತೇವೆ (ಜಪ-ಜಪಿಸು, ಕೋಪ-ಕೋಪಿಸು, ರುಚಿ-ರುಚಿಸು). ಆದರೆ, ಈ ಬಳಕೆಗೆ ಕನ್ನಡದ ಕಟ್ಟಲೆಗಳು ಆದಾರವಲ್ಲದೆ ಸಂಸ್ಕ್ರುತದ ಕಟ್ಟಲೆಗಳಲ್ಲ.

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳ ಲಿಂಗವನ್ನು ನಿರ‍್ದರಿಸುವಲ್ಲೂ ನಾವು ಕನ್ನಡದ ಕಟ್ಟಲೆಗಳನ್ನು ಬಳಸುತ್ತೇವಲ್ಲದೆ ಸಂಸ್ಕ್ರುತದ ಕಟ್ಟಲೆಗಳನ್ನಲ್ಲ. ಎತ್ತುಗೆಗಾಗಿ, ಸಂಸ್ಕ್ರುತದಲ್ಲಿ ಪುಲ್ಲಿಂಗದಲ್ಲಿರುವ ದೇಶ, ಮಾರ‍್ಗ, ದೀಪ ಮೊದಲಾದ ಪದಗಳನ್ನು, ಮತ್ತು ಸ್ತ್ರೀಲಿಂಗದಲ್ಲಿರುವ ನದಿ, ಲಿಪಿ, ಚರ‍್ಚೆ ಮೊದಲಾದ ಪದಗಳನ್ನು ನಾವು ನಪುಂಸಕ ಲಿಂಗದಲ್ಲಿ ಬಳಸುತ್ತೇವಲ್ಲದೆ ಪುಲ್ಲಿಂಗ ಇಲ್ಲವೇ ಸ್ತ್ರೀಲಿಂಗದಲ್ಲಲ್ಲ. ಸಂಸ್ಕ್ರುತದಲ್ಲಿ ನಾಮಪದಗಳಿಂದ ಬೇರಾದ ಗುಣಪದಗಳೆಂಬ ಪದಗಳಿಲ್ಲ.

ಹೀಗಿದ್ದರೂ, ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ವ್ಯಾವಹಾರಿಕ, ಸಾಮಾಜಿಕ, ಯಾಂತ್ರಿಕ ಮೊದಲಾದ ಹಲವು ಪದಗಳನ್ನು ನಾವು ನಾಮಪದಗಳಿಂದ ಬೇರಾಗಿರುವ ಗುಣಪದಗಳಾಗಿ ಬಳಸುತ್ತೇವೆ. ಹಾಗಾಗಿ, ವಯ್ಯಾಕರಣಿಯಂತಹ ಪದಗಳ ಮಟ್ಟಿಗೂ ನಾವು ಇದೇ ಕ್ರಮವನ್ನು ಅನುಸರಿಸುವುದು ಸರಿಯಾದ ದಾರಿ. ಕನ್ನಡದಲ್ಲಿ ಅವು ಯಾವ ರೀತಿಯಲ್ಲಿ ಬಳಕೆಗೆ ಬಂದಿವೆ ಎಂಬುದು ನಮಗೆ ಮುಕ್ಯವಲ್ಲದೆ ಆ ಬಳಕೆ ಸಂಸ್ಕ್ರುತದ ನಿಯಮಗಳಿಗೆ ಅನುಸಾರವಾಗಿದೆಯೇ ಇಲ್ಲವೇ ಎಂಬುದು ಮುಕ್ಯವಲ್ಲ.

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ಬರುವ ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳು ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಕಾಣಿಸುವುದಿಲ್ಲ; ಹಾಗಿದ್ದರೂ ‘ಅವನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು; ಇಲ್ಲವಾದರೆ ಅದು ತಪ್ಪಾಗುತ್ತದೆ’ ಎಂದು ಹೇಳುವುದೂ ಸಂಸ್ಕ್ರುತದ ಕಟ್ಟಲೆಗಳನ್ನು ಕನ್ನಡದ ಮೇಲೆ ಹೊರಿಸುವ ತಪ್ಪು ದಾರಿಯಾಗಿದೆ. ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಈ ಎರವಲು ಪದಗಳು ಹೇಗೆ ಕಾಣಿಸುತ್ತವೆಯೋ ಹಾಗೆ ಬರೆಯುವುದೇ ಕನ್ನಡದ ಮಟ್ಟಿಗೆ ಸರಿಯಾದ ದಾರಿ.

ಇನ್ನೊಂದು ಬಗೆಯ ‘ತಪ್ಪು’ಗಳು ಆಡುನುಡಿಯಿಂದ ಪದಗಳನ್ನು ಇಲ್ಲವೇ ಪದರೂಪಗಳನ್ನು ಬರಹಕ್ಕೆ ತಂದು ಬಳಸುವಲ್ಲಿ ಕಾಣಿಸಿಕೊಳ್ಳುತ್ತವೆ. ಆಡುನುಡಿಯೆಂಬುದು ಊರಿನಿಂದ ಊರಿಗೆ ಮತ್ತು ಜಾತಿಯಿಂದ ಜಾತಿಗೆ ಬೇರೆ ಬೇರಾಗಿರುತ್ತದೆ. ಆದರೆ, ಬರಹದ ನುಡಿ ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕೆಂದು ನಾವು ಬಯಸುತ್ತೇವೆ. ಯಾಕೆಂದರೆ, ಹಾಗಿಲ್ಲವಾದರೆ ಒಂದು ಊರಿನ ಮತ್ತು ಜಾತಿಯ ಬರಹಗಾರರು ಬರೆದುದನ್ನು ಇನ್ನೊಂದು ಊರಿನ ಮತ್ತು ಜಾತಿಯ ಜನರಿಗೆ ಓದಿ ಅರ‍್ತಮಾಡಿಕೊಳ್ಳಲು ಕಶ್ಟವಾಗುತ್ತದೆ.

ಈ ಸಮಾನತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಬರಹದ ನುಡಿಯಲ್ಲಿ ಎಂತಹ ಮಾರ‍್ಪಾಡನ್ನು ನಡೆಸುವುದಿದ್ದರೂ ಅದು ಎಲ್ಲಾ ಊರು ಮತ್ತು ಜಾತಿಗಳಿಗೆ ಸೇರಿದ ಜನರಿಗೂ ಒಪ್ಪಿಗೆಯಾಗುವಂತಹದಾಗಿರಬೇಕು. ಎಲ್ಲಾ ಬರಹಗಾರರೂ ತಮಗೆ ಅನಿಸಿದ ಹಾಗೆ ತಮ್ಮ ಬರಹದ ನುಡಿಯಲ್ಲಿ ಮಾರ‍್ಪಾಡುಗಳನ್ನು ಮಾಡಹೊರಟರೆ ಈ ಸಮಾನತೆ ಪೂರ‍್ತಿ ಅಳಿದು ಹೋದೀತು.

ಬರಹದಲ್ಲಿ ತಪ್ಪು-ಸರಿ ಎಂಬ ಪರಿಕಲ್ಪನೆಯನ್ನು ಈ ಅರ‍್ತದಲ್ಲಿ ಬಳಸಲು ಸಾದ್ಯವಿದೆ. ಕನ್ನಡದ ಕೆಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಬಿದ್ದುಹೋಗಿದೆ; ಹಾಲು ಎಂಬುದು ಆಲು ಎಂದಾಗಿದೆ, ಹಣ್ಣು ಎಂಬುದು ಅಣ್ಣು ಎಂದಾಗಿದೆ, ಹುಳ ಎಂಬುದು ಉಳ ಎಂದಾಗಿದೆ. ಈ ರೀತಿ ಕೆಲವರು ಕನ್ನಡಿಗರು ತಮ್ಮ ಆಡುನುಡಿಯ ಪದಗಳಲ್ಲಿದ್ದ ಹಕಾರವನ್ನು ಕಳೆದುಕೊಂಡುದರಲ್ಲಿ ತಪ್ಪಾಗಿರುವಂತಹದು ಏನೂ ಇಲ್ಲ. ಅದು ಅವರ ಆಡುನುಡಿಯಲ್ಲಿ ಸ್ವಾಬಾವಿಕವಾಗಿ ನಡೆದಿರುವ ಒಂದು ಮಾರ‍್ಪಾಡು ಮಾತ್ರ. ಇದಲ್ಲದೆ, ಅದು ಅವರ ಆಡುನುಡಿಯನ್ನು ಕೆಡಿಸಿಲ್ಲ; ಅದರ ಜೀವಂತಿಕೆಯನ್ನು ಉಳಿಸಿದೆ.

ಆದರೆ, ಕನ್ನಡದ ಬೇರೆ ಹಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಈ ರೀತಿ ಬಿದ್ದುಹೋಗಿಲ್ಲ; ಹಾಗಾಗಿ, ಇವತ್ತು ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕಾದ ಬರಹದ ಕನ್ನಡದಲ್ಲಿ ಹಕಾರವನ್ನು ಉಳಿಸಿಕೊಳ್ಳಬೇಕೇ ಇಲ್ಲವೇ ಬಿದ್ದುಹೋಗಲು ಬಿಡಬೇಕೇ ಎಂಬುದನ್ನು ನಿರ‍್ದರಿಸಬೇಕಾಗುತ್ತದೆ. ಉಳಿಸಬೇಕೆಂದು ಹೆಚ್ಚಿನ ಕನ್ನಡಿಗರೂ ಬಯಸುವುದಾದರೆ, ಬರಹದಲ್ಲಿ ಹಕಾರವನ್ನು ಬಳಸದಿರುವುದು (ಇಲ್ಲವೇ ಬೇಡದಲ್ಲಿ ಬಳಸುವುದು) ‘ತಪ್ಪಾ’ಗುತ್ತದೆ.

ಇದೇ ರೀತಿಯಲ್ಲಿ, ಇವತ್ತು ಬಡಗ ಕರ‍್ನಾಟಕದ ಕೆಲವು ಆಡುನುಡಿಗಳಲ್ಲಿ ನಾಮಪದಗಳ ಕೊನೆಯಲ್ಲಿದ್ದ ಎಕಾರ ಇಕಾರವಾಗಿದೆ. ಮನೆ ಎಂಬುದು ಮನಿ ಎಂದಾಗಿದೆ, ಕಾಗೆ ಎಂಬುದು ಕಾಗಿ ಎಂದಾಗಿದೆ, ಕುದುರೆ ಎಂಬುದು ಕುದ್ರಿ ಎಂದಾಗಿದೆ. ಆದರೆ ಕನ್ನಡದ ಬೇರೆ ಆಡುನುಡಿಗಳಲ್ಲಿ ಈ ಮಾರ‍್ಪಾಡು ನಡೆದಿಲ್ಲ. ಇಲ್ಲೂ ಕೂಡ, ಎಲ್ಲರಿಗೂ ಸಮಾನವಾಗಿರಬೇಕಾದ ಬರಹದ ಕನ್ನಡಕ್ಕೆ ಈ ಮಾರ‍್ಪಾಡನ್ನು ತರಬೇಕೇ ಬೇಡವೇ ಎಂಬುದನ್ನು ತೀರ‍್ಮಾನಿಸಬೇಕಾಗುತ್ತದೆ, ಮತ್ತು ಬೇಡವೆಂದು ತೀರ‍್ಮಾನಿಸಿದಲ್ಲಿ ಹಾಗೆ ತರುವುದು ಬರಹದ ಮಟ್ಟಿಗೆ ‘ತಪ್ಪು’ ಎಂಬುದಾಗಿ ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಬೇಕಾಗುತ್ತದೆ.

ಆದರೆ, ಇಂತಹ ಯಾವ ಮಾರ‍್ಪಾಡೂ ಬರಹದ ಕನ್ನಡವನ್ನು ಕೆಡಿಸುವುದಿಲ್ಲ ಎಂಬುದನ್ನು ಇಲ್ಲಿ ಗಮನಿಸುವುದು ಅವಶ್ಯ. ಆಲು ಇಲ್ಲವೇ ಮನಿ ಎಂಬ ಪದರೂಪದಲ್ಲಿಲ್ಲದಂತಹ ನುಡಿಯ ಬಳಕೆಗೆ ಅವಶ್ಯವಾಗಿರುವ ಯಾವ ಅಂಶವೂ ಹಾಲು ಇಲ್ಲವೇ ಮನೆ ಎಂಬ ಪದರೂಪದಲ್ಲಿಲ್ಲ. ಇಲ್ಲಿ ತಪ್ಪು ಮತ್ತು ಸರಿ ಎಂಬವುಗಳು ಎಂತಹ ಬರಹ ನಮ್ಮೊಳಗೆ ಸಮಾನವಾಗಿ ಉಳಿಯಬೇಕು ಎಂಬ ತೀರ‍್ಮಾನವನ್ನಶ್ಟೇ ಅವಲಂಬಿಸಿದೆ. ಇವತ್ತು ಬಳಕೆಯಲ್ಲಿರುವ ತೀರ‍್ಮಾನವನ್ನು ನಾವು ಅವಶ್ಯವೆಂದೆನಿಸಿದಲ್ಲಿ ಮಾರ‍್ಪಡಿಸಬಲ್ಲೆವು, ಮತ್ತು ಹಾಗೆ ಮಾರ‍್ಪಡಿಸಿದಾಗ ಇವತ್ತು ತಪ್ಪು ಎಂದು ತಿಳಿದಿರುವ ಪದರೂಪಗಳು ಸರಿಯೆಂದೆನಿಸಬಲ್ಲುವು.

ಸಂಸ್ಕ್ರುತ ಎರವಲುಗಳನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು ಎಂಬ ಕಟ್ಟಲೆ ಕನ್ನಡದ ಮಟ್ಟಿಗೆ ತೀರ ಅನವಶ್ಯಕವಾದುದು ಮಾತ್ರವಲ್ಲ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಸುಲಬವಾಗಿ ಕಲಿತು ತಮ್ಮದಾಗಿಸಿಕೊಳ್ಳುವಲ್ಲಿ ಒಂದು ದೊಡ್ಡ ತೊಡಕಾಗಿದೆ; ಕೆಲವೇ ಕೆಲವು ಜನರಶ್ಟೇ ಬರಹವನ್ನು ಬಳಸುತ್ತಿದ್ದ ಹಿಂದಿನ ಕಾಲದಲ್ಲಿ ಈ ಕಟ್ಟಲೆ ಹೆಚ್ಚು ತೊಡಕಿನದೆಂದು ಅನಿಸುತ್ತಿರಲಿಲ್ಲ. ಆದರೆ, ಇವತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗಬೇಕಾಗಿದೆ; ಹಾಗಾಗಿ, ಕನ್ನಡಕ್ಕೆ ಬೇಡದ ಈ ಸಂಸ್ಕ್ರುತದ ಹೊರೆಯನ್ನು ತೆಗೆದುಹಾಕುವುದೇ ಒಳ್ಳೆಯದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಕಲಿಕೆ ಮತ್ತು ಅರಕೆ

ನುಡಿಯರಿಮೆಯ ಇಣುಕುನೋಟ – 19

ಯಾವುದಾದರೂ ಒಂದು ವಿಶಯವನ್ನು ಕಲಿಯುವುದಕ್ಕೂ, ಅದರ ಮೇಲೆ ಅರಕೆ (ಸಂಶೋದನೆ) ನಡೆಸುವುದಕ್ಕೂ ನಡುವೆ ಕೆಲವು ಮುಕ್ಯವಾದ ವ್ಯತ್ಯಾಸಗಳಿವೆ; ನಾವು ಎತ್ತಿಕೊಂಡ ವಿಶಯದ ಮೇಲೆ ಬೇರೆ ಬೇರೆ ಹೊತ್ತಗೆಗಳಲ್ಲಿ, ಬಿಡಿ ಬರಹಗಳಲ್ಲಿ, ಮತ್ತು ಅವನ್ನು ಓದಿ ತಿಳಿದುಕೊಂಡಿರುವ ತಿಳಿವಿಗರಲ್ಲಿ ಸಾಕಶ್ಟು ತಿಳಿವುಗಳು ಕಲೆತಿರುತ್ತವೆ. ಅಂತಹ ಹೊತ್ತಗೆ ಮತ್ತು ಬಿಡಿ ಬರಹಗಳನ್ನು ಓದಿ, ತಿಳಿವಿಗರು ಹೇಳುವುದನ್ನು ಕೇಳಿ, ಆ ವಿಶಯದ ಕುರಿತು ತಿಳಿವನ್ನು ಕಲೆಹಾಕುವುದಕ್ಕೆ ಕಲಿಕೆ ಎಂದು ಹೆಸರು.

ಅರಕೆ ಎಂಬುದು ಇದಕ್ಕಿಂತ ತೀರ ಬೇರಾದುದು; ಒಂದು ವಿಶಯದ ಕುರಿತು ತಮ್ಮ ಸಮಾಜದಲ್ಲಿ ಕಲೆತಿರುವ ತಿಳಿವಿನಲ್ಲಿ ತಪ್ಪುಗಳು ಏನಾದರೂ ಇವೆಯೇ, ಮತ್ತು ಆ ವಿಶಯದ ಕುರಿತಾಗಿ ಯಾರಿಗೂ ತಿಳಿಯದಿರುವಂತಹ ಹೊಸ ಸಂಗತಿಗಳೇನಾದರೂ ಇವೆಯೇ ಎಂಬುದನ್ನು ಕಂಡುಹಿಡಿಯುವುದೇ ಅರಕೆ.

ಈ ವ್ಯತ್ಯಾಸದಂತೆ, ಒಂದು ವಿಶಯವನ್ನು ನಮಗೆ ಕಲಿಯಬೇಕೆಂದಿದ್ದಲ್ಲಿ ಅದಕ್ಕೆ ಕಲಿಸುಗರ ನೆರವು ಬೇಕಾಗುತ್ತದೆ; ಆದರೆ, ಒಂದು ವಿಶಯದ ಕುರಿತು ಅರಕೆಯನ್ನು ನಡೆಸಬೇಕೆಂದಿದ್ದಲ್ಲಿ, ಅದಕ್ಕೆ ನಮಗೆ ‘ದಾರಿತೋರುಗರ’ ನೆರವು ಬೇಕಾಗುತ್ತಲ್ಲದೆ ಕಲಿಸುಗರ ನೆರವು ಬೇಕಾಗುವುದಿಲ್ಲ.

ಕಲಿಯುವವರ ಮಟ್ಟಿಗೆ ಕಲಿಸುಗರೆಂದರೆ ಎಲ್ಲವನ್ನೂ ತಿಳಿದವರು; ಕಲಿಯುವವರಲ್ಲಿ ಏಳುವ ಸಂಶಯಗಳನ್ನೆಲ್ಲ ಇಲ್ಲವಾಗಿಸುವ ಅಳವು ಅವರಿಗಿದೆ; ಹಾಗಾಗಿ, ಅವರು ಏನು ಹೇಳುತ್ತಿದ್ದಾರೆ ಎಂಬುದನ್ನು ಕಿವಿಗೊಟ್ಟು ಕೇಳಿ, ಅದನ್ನು ಸರಿಯಾಗಿ ತಿಳಿದುಕೊಳ್ಳುವುದೇ ಕಲಿಗರು ಮಾಡಬೇಕಾಗಿರುವ ಮುಕ್ಯ ಕೆಲಸ.

ಆದರೆ, ಅರಕೆಯನ್ನು ನಡೆಸುವವರ ಮಟ್ಟಿಗೆ ಎಲ್ಲವನ್ನೂ ತಿಳಿದವರು ಯಾರೂ ಇಲ್ಲ; ದಾರಿತೋರುಗರು ಅವರಿಗೆ ಯಾವ ರೀತಿಯಲ್ಲಿ ಅರಕೆಯನ್ನು ನಡೆಸಬಹುದು ಎಂಬುದನ್ನು ತಿಳಿಸಬಲ್ಲರಲ್ಲದೆ, ಅರಕೆಯ ಕೊನೆಯ ತೀರ‍್ಮಾನ ಹೇಗಿರಬಹುದು, ಇಲ್ಲವೇ ಹೇಗಿರಬೇಕು ಎಂಬುದನ್ನು ತಿಳಿಸಲಾರರು. ಅದನ್ನು ತಮ್ಮ ಅರಕೆಗಳ ಮೂಲಕ ಹೊಸದಾಗಿ ಕಂಡುಹಿಡಿಯುವುದೇ ಅರಕೆಯನ್ನು ನಡೆಸುವವರ ಮುಕ್ಯ ಕೆಲಸ. ಈ ರೀತಿ, ಯಾರಿಗೂ ಗೊತ್ತಿಲ್ಲದಿರುವ ಸಂಗತಿಗಳನ್ನು ಕಂಡುಹಿಡಿಯುವ ಮೂಲಕ, ಮತ್ತು ತಪ್ಪು ತಪ್ಪಾಗಿ ತಿಳಿದುಕೊಂಡಿರುವ ಸಂಗತಿಗಳನ್ನು ಸರಿಪಡಿಸುವ ಮೂಲಕ ಸಮಾಜದಲ್ಲಿರುವ ತಿಳಿವಿನ ಬೊಕ್ಕಸವನ್ನು ಹಿರಿದಾಗಿಸುವುದೇ ಅರಕೆ ನಡೆಸುವವರ ಕೆಲಸವಾಗಿದೆ.

ಕಲಿಕೆಗೂ ಅರಕೆಗೂ ನಡುವೆ ವ್ಯತ್ಯಾಸವಿರುವ ಹಾಗೆ, ಕಲಿಕೆಯನ್ನು ಕೊಡಿಸುವ ಕಲಿಸುಗರಿಗೂ ಅರಕೆಯನ್ನು ನಡೆಸಲು ದಾರಿತೋರುಗರಿಗೂ ನಡುವೆ ವ್ಯತ್ಯಾಸವಿರುವುದು ಅವಶ್ಯ. ಕಲಿಸುಗನೊಬ್ಬ ತಾನು ಕಲಿಸುವ ವಿಶಯವನ್ನು ಸರಿಯಾಗಿ ತಿಳಿದಿರಬೇಕು ಮಾತ್ರವಲ್ಲ, ತಾನು ತಿಳಿದಿರುವುದೆಲ್ಲವೂ ಸರಿ ಎಂಬ ಆತ್ಮವಿಶ್ವಾಸವೂ ಆತನಲ್ಲಿರಬೇಕು. ಈ ವಿಶಯದಲ್ಲಿ ಸ್ವಲ್ಪವಾದರೂ ಸಂಶಯವಿದೆಯಾದರೆ, ಆತ ಎದೆಗಾರಿಕೆಯಿಂದ ಕಲಿಗರಿಗೆ ಕಲಿಸಿಕೊಡಲಾರ.

ಆದರೆ, ಅರಕೆಯನ್ನು ನಡೆಸುವವರು, ಮತ್ತು ಅರಕೆಗೆ ದಾರಿ ತೋರಿಸುವವರು ಯಾವ ಹೇಳಿಕೆಯನ್ನೂ ಪೂರ‍್ತಿಯಾಗಿ ಸರಿಯೆಂದು ತಿಳಿದುಕೊಳ್ಳಬಾರದು. ಎಲ್ಲವನ್ನೂ ಸಂಶಯದಿಂದ ನೋಡಿದಾಗ ಮಾತ್ರ ಅವರ ಅರಕೆ ಮುಂದೆ ಹೋಗಬಲ್ಲುದು. ಎಂತಹ ದೊಡ್ಡ ತಿಳಿವಿಗರು ಹೇಳಿದ್ದನ್ನೂ ಹಾಗೆಯೇ ಒಪ್ಪಿಕೊಳ್ಳದೆ ವಿಚಾರಣೆಗೆ ಒಳಪಡಿಸಲು ಅವರು ಅಣಿಯಾಗಿರಬೇಕು.

ಈ ಕಾರಣಕ್ಕಾಗಿ, ಪರೀಕ್ಶೆಗಳಲ್ಲಿ ರ‍್ಯಾಂಕ್ ಗಳಿಸುವ ಕಲಿಗ ಉತ್ತಮ ಅರಕೆಗಾರನಾಗಬೇಕೆಂದೇನಿಲ್ಲ. ಇದೇ ರೀತಿಯಲ್ಲಿ, ಕಲಿಗರ ಅಚ್ಚುಮೆಚ್ಚಿನ ಕಲಿಸುಗ ಅರಕೆಗಳಿಗೆ ಒಳ್ಳೆಯ ದಾರಿತೋರುಗನಾಗಬೇಕೆಂದೂ ಇಲ್ಲ. ಕಲಿಯುವುದಕ್ಕೆ ಮತ್ತು ಕಲಿಸುವುದಕ್ಕೆ ಬೇಕಾಗುವ ಮನೋಬಾವ ಅರಕೆಗೆ ಮತ್ತು ಅದರ ದಾರಿತೋರಿಕೆಗೆ ಬೇಕಾಗುವ ಮನೋಬಾವಕ್ಕಿಂತ ತೀರ ಬೇರಾಗಿರುವುದೇ ಇದಕ್ಕೆ ಕಾರಣ.

ನಮ್ಮ ವಿಶ್ವವಿದ್ಯಾಲಯಗಳಲ್ಲಿ ಈ ಎರಡು ಕೆಲಸಗಳನ್ನೂ ಒಬ್ಬರೇ ಮಾಡಬೇಕಾಗುವುದರಿಂದ, ಹೆಚ್ಚಿನೆಡೆಗಳಲ್ಲೂ ಅರಕೆಯ ಹೆಸರಿನಲ್ಲಿ ಕಲಿಕೆ ಮಾತ್ರ ನಡೆಯುವುದು ಕಾಣಿಸುತ್ತದೆ. ಈ ಎರಡು ಬಗೆಯ ಕೆಲಸಗಳನ್ನು ಒಬ್ಬರಿಗೇನೇ ನಡೆಸಿಕೊಂಡು ಹೋಗಲು ಹೆಚ್ಚಿನವರಿಗೂ ಸಾದ್ಯವಾಗದಿರುವುದೇ ಇದಕ್ಕೆ ಕಾರಣ.

ಒಮ್ಮೆ ನನ್ನ ಮಿತ್ರರೊಬ್ಬರು ಡಾಕ್ಟರೇಟ್ ಪದವಿಗಾಗಿ ತಾವು ಬರೆದ ಪೆರ‍್ಬರಹವನ್ನು ನನಗೆ ತೋರಿಸಿದರು. ಅದನ್ನು ಓದಿದಾಗ ನನಗೆ ತುಂಬಾ ಆಶ್ಚರ‍್ಯವಾಯಿತು: ಮೂವತ್ತು ವರ‍್ಶಗಳಶ್ಟು ಹಳೆಯ ಸಿದ್ದಾಂತಗಳನ್ನು ಬಳಸಿ ಅವರು ಅದನ್ನು ಬರೆದಿದ್ದರು. ಆ ಸಿದ್ದಾಂತಗಳಲ್ಲಿ ಹೆಚ್ಚಿನವೂ ಸರಿಯಲ್ಲ ಎಂದು ಅವರಿಗೆ ಸ್ಪಶ್ಟವಾಗಿ ತಿಳಿದಿದ್ದರೂ ಅವರು ಹೀಗೆ ಮಾಡಿದ್ದರು. “ಇದು ಯಾಕೆ ಹೀಗೆ?” ಎಂದು ನಾನು ಕೇಳಿದಾಗ ಅವರು ಹೇಳಿದರು, “ನನ್ನ ದಾರಿತೋರುಗರು ತಮ್ಮ ಡಾಕ್ಟರೇಟ್ ಪೆರ‍್ಬರಹದಲ್ಲಿ ಈ ಸಿದ್ದಾಂತಗಳನ್ನು ಬಳಸಿದ್ದಾರೆ; ಈಗ ನಾನು ಹೊಸ ಸಿದ್ದಾಂತಗಳನ್ನು ಬಳಸಿದಲ್ಲಿ, ಅವರು ಹಿಂದೆ ಬರೆದಿದ್ದ ಪೆರ‍್ಬರಹ ಸರಿಯಲ್ಲ ಎಂಬುದಾಗಿ ನಾನು ಹೇಳಿದ ಹಾಗಾದೀತು. ಹಾಗೆ ಮಾಡಿದಲ್ಲಿ, ನನ್ನ ಪೆರ‍್ಬರಹಕ್ಕೆ ಅವರ ಒಪ್ಪಿಗೆ ಸಿಗಲಾರದು.”

ನಮ್ಮ ವಿಶ್ವವಿದ್ಯಾಲಯಗಳಲ್ಲಿ ಜಾಗತಿಕ ಮಟ್ಟದ ಅರಕೆಗಳು ನಡೆಯದಿರುವುದಕ್ಕೆ ಒಂದು ಮುಕ್ಯವಾದ ಕಾರಣವನ್ನು ಇದು ಬಹಳ ಸ್ಪಶ್ಟವಾಗಿ ತಿಳಿಸುತ್ತದೆ. ತಮ್ಮ ದಾರಿತೋರಿಕೆಯಲ್ಲಿ ಪೆರ‍್ಬರಹಗಳನ್ನು ಬರೆಯುತ್ತಿರುವ ಅರಕೆಗಾರರು ತಾವು ಬರೆದಿರುವ ಪೆರ‍್ಬರಹಕ್ಕಿಂತ ಒಂದು ಹೆಜ್ಜೆ ಮುಂದೆ ಹೋದರೂ ಬೇಸರಪಟ್ಟುಕೊಳ್ಳುವ ತಿಳಿವಿಗರಿರುವಶ್ಟು ದಿವಸ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಅರಕೆಗಳನ್ನು ನಡೆಸುವುದು ಅಸಾದ್ಯವೆಂದೇ ಹೇಳಬಹುದು. ತನ್ನ ಕಲಿಗನಿಂದ ಸೋಲನ್ನು ಬಯಸುವ ತಿಳಿವಿಗರು ಮಾತ್ರ ನಿಜಕ್ಕೂ ಅರಕೆಗೆ ದಾರಿತೋರಿಸಬಲ್ಲರು. ಅಂತಹ ತಿಳಿವಿಗರು ನಮ್ಮಲ್ಲಿ ಬೆರಳೆಣಿಕೆಯಶ್ಟೂ ಇಲ್ಲ ಎಂಬುದು ಬೇಸರದ ಸಂಗತಿ.

ಈ ಮಾತು ಎಶ್ಟು ಸರಿ ಎಂಬುದನ್ನು ಕನ್ನಡದ ಸೊಲ್ಲರಿಮೆಯ (ವ್ಯಾಕರಣದ) ಕುರಿತಾಗಿ ನಡೆದಿರುವ ಅರಕೆಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗಬಹುದು. ಕೇಶಿರಾಜನೇ ಮೊದಲಾದ ಕನ್ನಡದ ಸೊಲ್ಲರಿಗರು ಏನು ಹೇಳಿದ್ದಾರೆ ಎಂಬುದನ್ನು ಚರ‍್ಚಿಸುವುದು ಸೊಲ್ಲರಿಮೆಯ ಕಲಿಕೆಯಲ್ಲದೆ ಅರಕೆಯಲ್ಲ. ಅವರು ಬರೆದಿರುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ತಪ್ಪುಗಳೇನಾದರೂ ಇವೆಯೇ? ಇದ್ದರೆ ಅವನ್ನು ಇಲ್ಲವಾಗಿಸುವುದು ಹೇಗೆ? ಅವರು ಹೇಳದೇ ಇರುವಂತಹ ಸೊಲ್ಲರಿಮೆಯ ಕಟ್ಟಲೆಗಳು ಯಾವುವಾದರೂ ಇವೆಯೇ? ಇದ್ದರೆ ಅವು ಎಂತಹವು? ಎಂಬಂತಹ ವಿಶಯಗಳ ಕುರಿತು ಚರ‍್ಚೆ ನಡೆದಲ್ಲಿ ಮಾತ್ರ ಈ ಸೊಲ್ಲರಿಮೆಗಳ ಮೇಲೆ ಅರಕೆ ನಡೆದಿದೆಯೆಂದು ಹೇಳಬಹುದು.

ಹಳೆಗನ್ನಡದಲ್ಲಿ ದ, ದಪ, ಮತ್ತು ವ ಎಂಬ ಮೂರು ಹೊತ್ತಿನ ಒಟ್ಟುಗಳು (ಕಾಲಪ್ರತ್ಯಯಗಳು) ಬಳಕೆಯಾಗುತ್ತವೆ, ಮತ್ತು ಇವು ಹಿಂಬೊತ್ತು (ಬೂತ), ಈಪೊತ್ತು (ವರ‍್ತಮಾನ), ಮತ್ತು ಮುಂಬೊತ್ತು (ಬವಿಶ್ಯತ್) ಎಂಬ ಮೂರು ಹೊತ್ತುಗಳನ್ನು ತಿಳಿಸುತ್ತವೆ ಎಂಬುದಾಗಿ ಕೇಶಿರಾಜನೇ ಮೊದಲಾದ ಎಲ್ಲಾ ಕನ್ನಡದ ಸೊಲ್ಲರಿಗರೂ ಹೇಳುತ್ತಾರೆ. ಆದರೆ, ನಿಜಕ್ಕೂ ಈ ಹೇಳಿಕೆ ಸರಿಯಲ್ಲ; ಎತ್ತುಗೆಗಾಗಿ, ಪಂಪಬಾರತದ “ಸೆರಗಂ ಬಗೆದೊಡೆ ಸಾವಾದಪುದು” ಎಂಬ ಸೊಲ್ಲಿಗೆ ‘ಸಹಾಯವನ್ನು ಬಯಸಿದರೆ ಸಾವಾಗುತ್ತದೆ’ ಎಂಬ ಹುರುಳಿದ್ದು, ಅದರಲ್ಲಿ ಬಂದಿರುವ ದಪ ಒಟ್ಟಿಗೆ ಮುಂದೆ ಏನಾಗಬಲ್ಲುದು ಎಂಬುದನ್ನು ತಿಳಿಸುವ ಮುಂಬೊತ್ತಿನ ಹುರುಳಿದೆಯಲ್ಲದೆ ಈಗ ಏನಾಗುತ್ತಿದೆ ಎಂಬುದನ್ನು ತಿಳಿಸುವ ಈಪೊತ್ತಿನ ಹುರುಳಿಲ್ಲ.

ಆದರೆ, ಹಳೆಗನ್ನಡದ ಸೊಲ್ಲರಿಮೆಯ ಕುರಿತಾಗಿ ಅರಕೆ ನಡೆಸಿದವರು ಯಾರೂ ಇದನ್ನು ಗಮನಿಸಿದ ಹಾಗೆ ಕಾಣಿಸುವುದಿಲ್ಲ. ಇಂತಹ ಇನ್ನೂ ಹಲವಾರು ತಪ್ಪುಗಳು ಕೇಶಿರಾಜನೇ ಮೊದಲಾದ ಕನ್ನಡದ ಸೊಲ್ಲರಿಗರು ತಿಳಿಸುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ಕಾಣಿಸುತ್ತವೆ; ಇದಲ್ಲದೆ, ಅವರು ಹೇಳದಿರುವಂತಹ ಬೇರೆ ಹಲವು ಕಟ್ಟಲೆಗಳೂ ಹಳೆಗನ್ನಡದ ಸೊಲ್ಲರಿಮೆಯನ್ನು ವಿವರಿಸಲು ಬೇಕಾಗುತ್ತವೆ. ಇವುಗಳಲ್ಲಿ ಕೆಲವನ್ನಾದರೂ ಪಟ್ಟಿಮಾಡಬಲ್ಲವರು ಮಾತ್ರ ನಿಜಕ್ಕೂ ಹಳೆಗನ್ನಡದ ಮೇಲೆ ಅರಕೆ ನಡೆಸಿದ್ದಾರೆಂದು ಹೇಳಲು ಬರುತ್ತದೆ.

ಬೇರೆ ಬಗೆಯ ತಿಳಿವುಗಳ ಕುರಿತಾಗಿಯೂ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಮತ್ತು ಬೇರೆ ಬಗೆಯ ಅರಕೆಮನೆಗಳಲ್ಲಿ ಇವತ್ತು “ಅರಕೆ”ಗಳು ನಡೆಯುತ್ತಿವೆ; ಆದರೆ, ಇವುಗಳಲ್ಲಿ ಹೆಚ್ಚಿನವೂ ಮೇಲೆ ವಿವರಿಸಿದ ಹಾಗೆ ದಾರಿತಪ್ಪಿರುವ ಅರಕೆಗಳು; ಹೊಸ ತಿಳಿವನ್ನು ಕಂಡುಹಿಡಿಯುವ ಇಲ್ಲವೇ ಹಳೇ ತಿಳಿವನ್ನು ಸಾಣೆಗೆ ಹಿಡಿಯುವ ಉದ್ದೇಶ ಅವಕ್ಕಿಲ್ಲ. ಹಾಗಾಗಿ, ಅರಕೆಗಾರರಿಗೆ ಒಂದು ಡಿಗ್ರಿಯನ್ನು ಕೊಡಿಸುವ ಕೆಲಸವನ್ನಶ್ಟೇ ಅವು ನಡೆಸಬಲ್ಲುವು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ನುಡಿಗಳ ನಡುವಿನ ನಂಟಸ್ತಿಕೆ

ನುಡಿಯರಿಮೆಯ ಇಣುಕುನೋಟ – 18

ಜನರ ನಡುವೆ ಕಾಣಿಸುವ ಹಾಗೆ, ಅವರಾಡುವ ನುಡಿಗಳನಡುವೆಯೂ ‘ನಂಟಸ್ತಿಕೆ’ಯನ್ನು ಕಾಣಲು ಸಾದ್ಯವಿದೆ. ಕೆಲವು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆಯೆಂದು ಹೇಳಬಹುದು, ಮತ್ತು ಬೇರೆ ಕೆಲವು ನುಡಿಗಳ ನಡುವೆ ದೂರದ ನಂಟಸ್ತಿಕೆ ಮಾತ್ರ ಇದೆಯೆಂದು ಹೇಳಬಹುದು. ಆದರೆ, ಇನ್ನು ಕೆಲವು ನುಡಿಗಳ ನಡುವೆ ಯಾವ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳಲು ಬರುವುದಿಲ್ಲ. ಹಾಗೆ ಹೇಳಲು ಯಾವ ಆದಾರವೂ ದೊರಕದಿರುವುದೇ ಇದಕ್ಕೆ ಕಾರಣ.

ಎತ್ತುಗೆಗಾಗಿ, ಕನ್ನಡ ಮತ್ತು ತಮಿಳು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಕನ್ನಡ ಮತ್ತು ತುಳು ನುಡಿಗಳ ನಡುವೆ ಇದಕ್ಕಿಂತ ಸ್ವಲ್ಪ ದೂರದ ನಂಟಸ್ತಿಕೆಯಿದೆ. ಇದೇ ರೀತಿಯಲ್ಲಿ, ಹಿಂದಿ ಮತ್ತು ಮರಾಟಿ ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಹಿಂದಿ ಮತ್ತು ಇಂಗ್ಲಿಶ್ ನುಡಿಗಳ ನಡುವೆ ದೂರದ ನಂಟಸ್ತಿಕೆಯಿದೆ. ಆದರೆ ಕನ್ನಡ ಮತ್ತು ಹಿಂದಿ ನುಡಿಗಳ ನಡುವೆ, ಇಲ್ಲವೇ ಕನ್ನಡ ಮತ್ತು ಇಂಗ್ಲಿಶ್ ನುಡಿಗಳ ನಡುವೆ, ಹತ್ತಿರದ್ದಾಗಲಿ ದೂರದ್ದಾಗಲಿ ಯಾವುದೇ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳುವುದಕ್ಕೆ ಯಾವ ಆದಾರವೂ ದೊರಕುವುದಿಲ್ಲ.

ನುಡಿಗಳ ನಡುವಿನ ನಂಟಸ್ತಿಕೆಯನ್ನು ಜನರ ನಡುವಿನ ನಂಟಸ್ತಿಕೆಯ ಹಾಗೆ ಅವುಗಳ ಹುಟ್ಟು ಮತ್ತು ಬೆಳವಣಿಗೆಗಳ ಆದಾರದ ಮೇಲೆ ಕಲ್ಪಿಸಿಕೊಳ್ಳಲಾಗಿದೆ. ಆದರೆ, ಜನರ ಹುಟ್ಟಿಗೂ ನುಡಿಗಳ ಹುಟ್ಟಿಗೂ ನಡುವೆ ಹಲವು ವ್ಯತ್ಯಾಸಗಳಿವೆ. ಎತ್ತುಗೆಗಾಗಿ, ಜನರಲ್ಲಿ ಹೆಣ್ಣು-ಗಂಡುಗಳ ಕೂಡಿಕೆಯಿಂದ ಮಗು ಹುಟ್ಟುತ್ತದೆ; ಆದರೆ ನುಡಿಗಳಲ್ಲಿ ಆ ರೀತಿ ಎರಡು ನುಡಿಗಳ ಕೂಡಿಕೆಯಿಂದ ಮೂರನೆಯ ನುಡಿ ಹುಟ್ಟಿಕೊಳ್ಳುವುದಿಲ್ಲ; ಒಂದು ನುಡಿಯಿದ್ದದ್ದು ಇನ್ನೊಂದು ನುಡಿಯಾಗಿ ಬದಲಾಗುತ್ತದೆ, ಇಲ್ಲವೇ ಎರಡು ನುಡಿಗಳಾಗಿ ಒಡೆದುಕೊಳ್ಳುತ್ತದೆ.

ಎತ್ತುಗೆಗಾಗಿ, ಸಂಸ್ಕ್ರುತ ನುಡಿ ಇವತ್ತಿನ ಮರಾಟಿ ನುಡಿಯಾಗಿ ಬದಲಾಗಿದೆಯೆಂದು ಹೇಳಬಹುದು; ಇಲ್ಲವೇ ಅದೇ ನುಡಿ ಮರಾಟಿ, ಕೊಂಕಣಿ, ಹಿಂದಿ, ಗುಜರಾತಿ, ಪಂಜಾಬಿ, ಬಂಗಾಲಿ ಮೊದಲಾದ ಇವತ್ತಿನ ಹಲವು ನುಡಿಗಳಾಗಿ ಒಡೆದುಕೊಂಡಿದೆಯೆಂದೂ ಹೇಳಬಹುದು. ಆದರೆ, ಇದೇ ರೀತಿಯಲ್ಲಿ ಸಂಸ್ಕ್ರುತ ನುಡಿ ಕನ್ನಡ ನುಡಿಯಾಗಿ ಬದಲಾಗಿದೆಯೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳ ನಡುವೆ ಅವುಗಳ ಪದಗಳಲ್ಲಿ ಮತ್ತು ವ್ಯಾಕರಣ ನಿಯಮಗಳಲ್ಲಿ ಹಲವು ಬುಡಕಟ್ಟಿನ ವ್ಯತ್ಯಾಸಗಳಿವೆ. ಈ ಎಲ್ಲಾ ವ್ಯತ್ಯಾಸಗಳೂ ಹೇಗೆ ಉಂಟಾಗಿವೆ ಎಂಬುದನ್ನು ವಿವರಿಸಲು ಇದುವರೆಗೆ ಯಾರಿಗೂ ಸಾದ್ಯವಾಗಿಲ್ಲ.

ಇಂತಹ ವಿವರಿಸಲು ಸಾದ್ಯವಾಗದ ವ್ಯತ್ಯಾಸಗಳಿರುವ ಕಾರಣ, ಸಂಸ್ಕ್ರುತ ಮತ್ತು ಕನ್ನಡ ನುಡಿಗಳನ್ನು ಎರಡು ತೀರ ಬೇರಾಗಿರುವ ಮೂಲನುಡಿಗಳಿಂದ ಬೆಳೆದು ಬಂದಿರುವವುಗಳೆಂಬುದಾಗಿ ಪರಿಗಣಿಸಬೇಕಾಗಿದೆ. ಸಂಸ್ಕ್ರುತ ‘ಇಂಡೋ-ಆರ‍್ಯನ್’ ಎಂಬ ಹೆಸರಿನ ಮೂಲ ನುಡಿಯಿಂದ, ಮತ್ತು ಕನ್ನಡ ಅದಕ್ಕಿಂತ ತೀರ ಬೇರಾಗಿರುವ ‘ದ್ರಾವಿಡ’ ಎಂಬ ಹೆಸರಿನ ಮೂಲ ನುಡಿಯಿಂದ ಬೆಳೆದು ಬಂದಿದೆಯೆಂಬುದಾಗಿ ಇವತ್ತು ಕಲ್ಪಿಸಿಕೊಳ್ಳಬೇಕಾಗಿದೆ.

ನುಡಿಗಳನ್ನು ಈ ರೀತಿ ಬೇರೆ ಬೇರೆ ನುಡಿಕುಟುಂಬಗಳಲ್ಲಿ ಇರಿಸಿ ಹೇಳಲು ಮುಕ್ಯವಾಗಿ ಅವುಗಳ ಚರಿತ್ರೆ ಆದಾರವಾಗಿರುತ್ತದೆ. ಒಂದು ನುಡಿಯನ್ನಾಡುವ ಜನ ದೂರ ದೂರದಲ್ಲಿರುವ ಊರುಗಳಿಗೆ ಹೋಗಿ ನೆಲೆಸಿದಾಗ, ಅವರೊಳಗಿನ ಸಂಪರ‍್ಕ ಕಡಿಮೆಯಾಗುತ್ತಾ ಹೋಗುತ್ತದೆ, ಮತ್ತು ಇದರಿಂದಾಗಿ, ಅವರು ಬಳಸುವ ನುಡಿಯಲ್ಲಿ ಬದಲಾವಣೆಗಳು ಒಂದೇ ದಿಕ್ಕಿನಲ್ಲಿ ನಡೆಯದೆ ಬೇರೆ ಬೇರೆ ದಿಕ್ಕುಗಳಲ್ಲಿ ನಡೆಯತೊಡಗುತ್ತವೆ.

ಎತ್ತುಗೆಗಾಗಿ, ಕನ್ನಡ ನುಡಿಯನ್ನಾಡುವ ಜನ ಬಡಗು ಕರ‍್ನಾಟಕ, ತೆಂಕು ಕರ‍್ನಾಟಕ ಮತ್ತು ಕರಾವಳಿ ಎಂಬ ಮೂರು ಮುಕ್ಯ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರಾಡುವ ನುಡಿಯೂ ಬಡಗು, ತೆಂಕು ಮತ್ತು ಕರಾವಳಿ ಎಂಬ ಮೂರು ಮುಕ್ಯ ಒಳನುಡಿಗಳಾಗಿ ವ್ಯತ್ಯಾಸಗಳನ್ನು ತೋರಿಸುತ್ತದೆ. ಈ ಒಳನುಡಿಗಳ ನಡುವೆ ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ ಎಂಬುದು ಈ ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ ಇವರ ನಡುವೆ ಎಂತಹ ಸಂಪರ‍್ಕ ಸಾದ್ಯವಿತ್ತು ಎಂಬುದರ ಮೇಲೆ ಅವಲಂಬಿಸಿದೆ.

ನುಡಿಗಳೆಲ್ಲ ಈ ರೀತಿ ಅವನ್ನಾಡುವ ಜನರ ನಡುವಿರುವ ಸಂಪರ‍್ಕ ಕಡಿಮೆಯಾದಾಗ ಬೇರೆ ಬೇರೆ ಒಳನುಡಿಗಳಾಗಿ ಒಡೆದುಕೊಳ್ಳುತ್ತವೆ, ಮತ್ತು ಆಮೇಲೆ ಅವೇ ಒಳನುಡಿಗಳು ಸ್ವತಂತ್ರ ನುಡಿಗಳಾಗಿ ಬೆಳೆಯುತ್ತವೆ ಎಂಬ ಈ ಅಬಿಪ್ರಾಯದ ಮೇಲೆ ನುಡಿಕುಟುಂಬಗಳ ಕಲ್ಪನೆಯನ್ನು ನಿಲ್ಲಿಸಲಾಗಿದೆ. ಹಿಂದೆ ಒಂದು ಕಾಲದಲ್ಲಿ ಕೆಲವೇ ಕೆಲವು ಮೂಲ ನುಡಿಗಳಿದ್ದಿರಬೇಕು, ಮತ್ತು ಈ ಮೂಲ ನುಡಿಗಳು ಮೇಲೆ ಸೂಚಿಸಿದ ಹಾಗೆ ಕವಲೊಡೆದು ಬೇರೆ ಬೇರೆ ನುಡಿಗಳಾದುದರಿಂದಾಗಿ, ಇವತ್ತು ಸಾವಿರಾರು ನುಡಿಗಳು ಬಳಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ ಎಂಬುದೇ ಈ ಕಲ್ಪನೆ.

ಈ ಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ಇವತ್ತು ಬಳಕೆಯಲ್ಲಿರುವ ಸಾವಿರಾರು ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಪ್ರಯತ್ನ ನಡೆಯುತ್ತಿದೆ. ಎಂದರೆ, ಈ ಸಾವಿರಾರು ನುಡಿಗಳು ಹದಿನಯ್ದಿಪ್ಪತ್ತು ಮೂಲ ನುಡಿಗಳಿಂದ ಅವುಗಳಲ್ಲಿ ಬೇರೆ ಬೇರೆ ರೀತಿಯ ಬದಲಾವಣೆಗಳಾಗುವುದರ ಮೂಲಕ ಹೇಗೆ ಬೆಳೆದು ಬಂದಿರಬೇಕು ಎಂಬುದನ್ನು ತೋರಿಸಿ ಕೊಡುವ ಪ್ರಯತ್ನ ನಡೆಯುತ್ತಿದೆ.

ಇವತ್ತು ಬೇರೆ ಬೇರಾಗಿ ಕಾಣಿಸುವ ಎರಡು ನುಡಿಗಳು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ನಾವು ತೋರಿಸಿಕೊಡಬೇಕಿದ್ದಲ್ಲಿ, (ಎಂದರೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ವಾದಿಸಬೇಕಿದ್ದಲ್ಲಿ) ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳೆಲ್ಲ ಮೂಲ ನುಡಿಯೊಂದರಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಬೇಕು. ಎಂದರೆ, ಆ ಮೂಲ ನುಡಿಯನ್ನಾಡುವ ಜನರು ದೂರದ ಎರಡು ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ, ಅವರ ಮಾತಿನಲ್ಲಿ ಬದಲಾವಣೆಗಳು ಎರಡು ಬೇರೆ ಬೇರೆ ದಿಕ್ಕುಗಳಲ್ಲಿ ನಡೆದಿರಬೇಕು, ಮತ್ತು ಒಂದು ಪ್ರದೇಶದಲ್ಲಿ ನಡೆದ ಬದಲಾವಣೆಗಳು ಇನ್ನೊಂದು ಪ್ರದೇಶದಲ್ಲಿ ನಡೆಯದಿದ್ದುದೇ ಆ ಎರಡು ಪ್ರದೇಶಗಳ ಜನರ ಮಾತುಗಳ (ಎಂದರೆ ನುಡಿಗಳ) ನಡುವೆ ಇವತ್ತು ಕಾಣಿಸುವ ವ್ಯತ್ಯಾಸಗಳಿಗೆ ಮೂಲ ಕಾರಣ ಎಂಬುದನ್ನು ತೋರಿಸಿಕೊಡಬೇಕು.

ಹಾಗಾಗಿ, ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಕೆಲಸದಲ್ಲಿ ಅವುಗಳ ನಡುವೆ ಕಾಣಿಸುವ ಹೋಲಿಕೆಗಳಿಗಿಂತಲೂ ವ್ಯತ್ಯಾಸಗಳಿಗೇನೇ ಹೆಚ್ಚಿನ ಮಹತ್ವವಿದೆ. ಎರಡು ನುಡಿಗಳ ನಡುವೆ ಸ್ವಲ್ಪವೂ ಹೋಲಿಕೆ ಕಾಣಿಸದಿದ್ದರೂ, ಅವುಗಳ ನಡುವಿರುವ ವ್ಯತ್ಯಾಸಗಳೆಲ್ಲ ಆ ಎರಡು ನುಡಿಗಳ ಚರಿತ್ರೆಯಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ಮೇಲೆ ಸೂಚಿಸಿದ ಹಾಗೆ ತೋರಿಸಿಕೊಟ್ಟಲ್ಲಿ, ಅವನ್ನು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ಹೇಳಲು ಬರುತ್ತದೆ. ಇದಕ್ಕೆ ಬದಲು, ಎರಡು ನುಡಿಗಳ ನಡುವೆ ಎಶ್ಟೇ ಹೋಲಿಕೆಯಿರಲಿ, ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳನ್ನು ಒಂದು ಮೂಲ ನುಡಿಯಲ್ಲಿ ಬೇರೆ ಬೇರೆ ದಿಕ್ಕುಗಳಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಲು ಬರುವುದಿಲ್ಲವಾದಲ್ಲಿ, ಅವು ಒಂದೇ ನುಡಿ ಕುಟುಂಬಕ್ಕೆ ಸೇರಿದವುಗಳೆಂದು ವಾದಿಸಲು ಬರುವುದಿಲ್ಲ.

ಎರಡು ನುಡಿಗಳ ನಡುವೆ ಹೋಲಿಕೆಗಳು ಕಾಣಿಸಿಕೊಳ್ಳಲು ಬೇರೆ ಕಾರಣಗಳೂ ಇರಬಲ್ಲುವು: ಎತ್ತುಗೆಗಾಗಿ, ಅವುಗಳಲ್ಲಿ ಒಂದು ಇನ್ನೊಂದರಿಂದ ಹಲವಾರು ಪದಗಳನ್ನು ಎರವಲಾಗಿ ಪಡೆದಿದೆಯಾದರೆ, ಅವೆರಡರ ನಡುವೆ ತುಂಬಾ ಹೋಲಿಕೆಯಿದೆಯೆಂದು ಅನಿಸಬಹುದು. ಇದಲ್ಲದೆ, ಆಕಸ್ಮಿಕವಾಗಿಯೂ ಎರಡು ನುಡಿಗಳಲ್ಲಿ ಬಳಕೆಯಾಗುವ ಪದಗಳ ನಡುವೆ ಹೋಲಿಕೆಗಳು ಕಾಣಿಸಬಹುದು. ನುಡಿಗಳನ್ನು ಬಳಸುವ, ಬೆಳೆಸುವ ಮತ್ತು ಬದಲಾಯಿಸುವವರೆಲ್ಲರೂ ಮನುಶ್ಯರೇ ಆಗಿರುವುದರಿಂದ, ಇಂತಹ ಆಕಸ್ಮಿಕ ಹೋಲಿಕೆಗಳು ಕಾಣಿಸಿಕೊಳ್ಳುವುದರಲ್ಲಿ ಅಚ್ಚರಿಯೇನಿಲ್ಲ.

ಹಾಗಾಗಿ, ಎರಡು ನುಡಿಗಳ ನಡುವೆ ಕಾಣಿಸುವ ಹೋಲಿಕೆಗಳ ಆದಾರದ ಮೇಲೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ಹೇಳಲು ಬರುವುದಿಲ್ಲ. ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಯಾವ ರೀತಿಯಲ್ಲಿ ಮೂಡಿಬಂದಿವೆ ಎಂಬುದನ್ನು ಮೇಲೆ ಸೂಚಿಸಿದ ಹಾಗೆ ವಿವರಿಸಲು ಸಾದ್ಯವಾಗುವುದಿದ್ದಲ್ಲಿ ಮಾತ್ರ ಅವನ್ನು ಒಂದೇ ಕುಟುಂಬದ ನುಡಿಗಳೆಂದು, ಎಂದರೆ ಚಾರಿತ್ರಿಕವಾಗಿ ಅವು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ಪರಿಗಣಿಸಲು ಸಾದ್ಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಮಕ್ಕಳಿಗೆ ಬರೆಯಲು ಕಲಿಸುವ ಬಗೆ

ನುಡಿಯರಿಮೆಯ ಇಣುಕುನೋಟ – 17

ಓದಲು ಕಲಿಯುವುದಕ್ಕಿಂತಲೂ ಬರೆಯಲು ಕಲಿಯುವುದು ಮಕ್ಕಳ ಮಟ್ಟಿಗೆ ಹೆಚ್ಚು ತೊಡಕಿನ ಕೆಲಸ. ಇದಕ್ಕೆ ಕಾರಣವೇನೆಂದರೆ, ಬರೆಯಬೇಕಿದ್ದಲ್ಲಿ ಅವರು ಒಂದೇ ಬಾರಿಗೆ ಹಲವಾರು ತೀರ‍್ಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ: ಯಾವ ವಿಶಯಗಳ ಕುರಿತು ಬರೆಯಬೇಕು, ಆ ವಿಶಯಗಳನ್ನು ಯಾವ ರೀತಿಯಲ್ಲಿ ಜೋಡಿಸಿಕೊಳ್ಳಬೇಕು, ಎಂತಹ ಪದಗಳನ್ನು ಬಳಸಬೇಕು, ಅವನ್ನು ಒಟ್ಟುಗೂಡಿಸಿ ಸೊಲ್ಲುಗಳನ್ನು ಹೇಗೆ ಕಟ್ಟಬೇಕು, ಅವನ್ನು ಬರೆಯುವಲ್ಲಿ ಯಾವ ಬರಿಗೆಗಳನ್ನು ಬಳಸಬೇಕು ಎಂಬುದನ್ನೆಲ್ಲ ಅವರು ಒಂದೇ ಬಾರಿಗೆ ತೀರ‍್ಮಾನಿಸಿಕೊಳ್ಳಬೇಕಾಗುತ್ತದೆ. ಹೀಗೆ ಮಾಡಲು ಬರುವುದಿಲ್ಲವಾದಲ್ಲಿ, ಅವರ ಬರೆಯುವ ಕೆಲಸ ಮುಂದಕ್ಕೆ ಹೋಗುವುದೇ ಇಲ್ಲ.

ಹೆಚ್ಚಿನ ಮಕ್ಕಳಿಗೂ ಈ ತೊಡಕು ತೊಡಕಾದ ಕೆಲಸವನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ. ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಕಲಿಯುವಂತೆ ಯಾರಾದರೂ ಅವರಿಗೆ ನೆರವನ್ನಿತ್ತರೆ ಮಾತ್ರ, ಅವರು ಅದನ್ನು ಕಲಿಯಬಲ್ಲರು. ಇಲ್ಲವಾದರೆ, ಬರೆಯುವ ಕೆಲಸ ತಮಗೆ ಹೇಳಿದ್ದಲ್ಲ ಎಂಬುದಾಗಿ ಅವರು ಅದರಿಂದ ದೂರವೇ ಉಳಿಯುತ್ತಾರೆ. ಪರೀಕ್ಶೆಗಳಲ್ಲಿ ಬರೆಯಬೇಕಾದುದನ್ನೆಲ್ಲ ಉರುಹೊಡೆದು ಬರೆಯುವುದನ್ನಶ್ಟೇ ಅವರು ಮಾಡಬಲ್ಲರು.

ಹಾಗಾಗಿ, ಮಕ್ಕಳಿಗೆ ಬರೆಯಲು ಕಲಿಸುವವರು ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಹತೋಟಿಗೆ ತಂದುಕೊಳ್ಳುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕು. ಬರಿಗೆ(ಅಕ್ಶರ)ಗಳನ್ನು ಬರೆಯಲು ಕಲಿಯುವ ಸಮಯದಲ್ಲಿ ಅವರು ಈ ಕಲಿಕೆಯನ್ನು ಸರಿಯಾದ ಓರಣ(ಕ್ರಮ)ದಲ್ಲಿ ನಡೆಸುವ ಹಾಗೆ ನೋಡಿಕೊಳ್ಳಬೇಕು.

ಮಕ್ಕಳ ಕಯ್ಬರಹ ಓದಬಲ್ಲುದಾಗಿರಬೇಕು, ಮತ್ತು ಬರವಣಿಗೆ ಸಲೀಸಾಗಿರಬೇಕು. ಸಲೀಸಾಗಿ ಬರೆಯಲು ಬಾರದವರಿಗೆ ಬೇರೆ ವಿಶಯಗಳ ಕುರಿತು ಆಲೋಚಿಸಲು ಸಮಯವೇ ಸಿಗುವುದಿಲ್ಲ. ಸಲೀಸಾಗಿ ಬರೆಯಬೇಕಿದ್ದಲ್ಲಿ, ಮಕ್ಕಳು ಬರಿಗೆಗಳನ್ನು ಬರೆಯುವ ಬಗೆ, ಬಳಪವನ್ನು ಹಿಡಿಯುವ ಬಗೆ, ಮತ್ತು ಕಾಗದವನ್ನು ಎದುರು ಇರಿಸಿಕೊಳ್ಳುವ ಬಗೆ ಸರಿಯಾಗಿರಬೇಕು.

ಕೆಲವು ಮಕ್ಕಳು ಬರೆಯುವಾಗ ಬಲಗಯ್ಯನ್ನು ಬಳಸುವ ಬದಲು ಎಡಗಯ್ಯನ್ನು ಬಳಸುತ್ತಾರೆ. ಆದರೆ, ಇಂತಹ ಮಕ್ಕಳು ಬಲಗಯ್ಯಲ್ಲಿ ಬರೆಯುವವರನ್ನು ನೋಡಿ, ಅವರು ಬರೆಯುವ ಹಾಗೆಯೇ ಬರೆಯತೊಡಗುತ್ತಾರೆ. ಇದರಿಂದಾಗಿ ಅವರು ತೊಂದರೆಗೊಳಗಾಗುತ್ತಾರೆ. ಯಾಕೆಂದರೆ, ಹಾಗೆ ಬರೆಯುವಾಗ ಅವರಿಗೆ ತಮ್ಮ ಕಯ್ಬೆರಳು ಅಡ್ಡ ಬರುತ್ತದೆ, ಮತ್ತು ತಾವು ಬರೆದುದೇನೆಂಬುದು ಕಾಣಿಸುವುದಿಲ್ಲ. ಅದು ಕಾಣಿಸುವಂತೆ ಮಾಡಲು, ಅವರು ತಮ್ಮ ಮಣಿಗಂಟನ್ನು ಬಗ್ಗಿಸಿ ಬರೆಯಹೊರಡುತ್ತಾರೆ. ಆದರೆ ಹೀಗೆ ಮಾಡುವುದರಿಂದ ಅವರ ಬರವಣಿಗೆ ತುಂಬಾ ತೊಡಕಿನದಾಗಿಬಿಡುತ್ತದೆ.

ಎಡಗಯ್ಯಲ್ಲಿ ಬರೆಯುವ ಮಕ್ಕಳಿಗೆ ಅವರು ಬರೆಯಬೇಕಾಗಿರುವ ಬಗೆ ಹೇಗೆ ಎಂಬುದನ್ನು ಕಲಿಸಿಕೊಡಬೇಕು. ಬರೆಯುವ ಕಾಗದವನ್ನು ಇಲ್ಲವೇ ಪುಸ್ತಕವನ್ನು ಅವರು ಬಲಗಯ್ಯವರ ಹಾಗೆ ಎಡಕ್ಕೆ ತಿರುಗಿಸಿ ಇರಿಸಿಕೊಳ್ಳುವ ಬದಲು, ಬಲಕ್ಕೆ ತಿರುಗಿಸಿ ಇರಿಸಿಕೊಳ್ಳುವ ಹಾಗೆ ಮಾಡಬೇಕು, ಮತ್ತು ಪೆನ್ನನ್ನು ತುದಿಯಿಂದ ತುಸು ಮೇಲೆ ಹಿಡಿದುಕೊಳ್ಳಲು ಹೇಳಬೇಕು. ಬರೆಯುವಾಗ ಅವರು ಮಣಿಗಂಟನ್ನು ಬಗ್ಗಿಸಬಾರದು. ಎಡಗಯ್ಯವರಿಗೆ ತಕ್ಕುದಾಗಿರುವಂತಹ ಈ ಬರೆಯುವ ಬಗೆಯನ್ನು ಕಲಿತುಕೊಂಡಲ್ಲಿ ಮಾತ್ರ, ಅವರಿಗೆ ಸಲೀಸಾಗಿ ಬರೆಯಲು ಬರುತ್ತದೆ.

ಮಾತಿಗೂ ಬರಹಕ್ಕೂ ನಡುವೆ ಸೊಲ್ಲುಗಳ ರಚನೆಯಲ್ಲಿ ವ್ಯತ್ಯಾಸಗಳಿವೆಯಾದ ಕಾರಣ, ಬರೆಯಲು ಕಲಿಯುವ ಮಕ್ಕಳಿಗೆ ಬರಹಗಳಲ್ಲಿ ಎಂತಹ ಸೊಲ್ಲುಗಳನ್ನು ಬಳಸಬೇಕು ಎಂಬುದನ್ನೂ ಕಲಿಸಬೇಕಾಗುತ್ತದೆ. ಇಡೀ ಸೊಲ್ಲುಗಳನ್ನು ಬರೆಯುವುದು ಹೇಗೆ, ಚಿಕ್ಕ ಚಿಕ್ಕ ಸೊಲ್ಲುಗಳನ್ನು ಜೋಡಿಸಿ ಉದ್ದ ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ, ಒಂದು ಚಿಕ್ಕ ಸೊಲ್ಲಿನ ಒಳಗೆ ಬೇರೆ ಚಿಕ್ಕ ಸೊಲ್ಲುಗಳನ್ನು ಇರಿಸಿ ಸಿಕ್ಕಲು ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕಾಗುತ್ತದೆ. ಎಲ್ಲಾ ಮಕ್ಕಳಿಗೂ ಇದನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ.

ಸೊಲ್ಲುಗಳನ್ನು ಸೇರಿಸಿ ಕುರಳು(ಪಾರಾ)ಗಳನ್ನು ರಚಿಸುವ ಬಗೆಯನ್ನೂ ಅವರಿಗೆ ಕಲಿಸಿಕೊಡಬೇಕಾಗುತ್ತದೆ. ಒಳ್ಳೇ ಮಾದರಿ ಕುರಳುಗಳಲ್ಲಿ ಮೊದಲಿಗೆ ಮುಕ್ಯ ವಿಶಯವನ್ನು ಮುಂದಿಡುವ ಚಿಕ್ಕ ಸೊಲ್ಲಿರುತ್ತದೆ; ಆಮೇಲೆ, ಅದನ್ನು ಹೆಚ್ಚು ವಿವರವಾಗಿ ತಿಳಿಸುವ, ಮತ್ತು ಅದಕ್ಕೆ ಬೆಂಬಲ ನೀಡುವ ವಿಶಯಗಳು ಬರುತ್ತವೆ; ಮತ್ತು ಕೊನೆಯಲ್ಲಿ, ಮುಕ್ತಾಯಗೊಳಿಸುವ ಸೊಲ್ಲು ಬರುತ್ತದೆ. ಸೊಲ್ಲುಗಳನ್ನು ಈ ರೀತಿ ಒಂದಕ್ಕೊಂದು ಹೊಂದಿಕೊಳ್ಳುವ ಹಾಗೆ ಬರೆಯುವುದು ಹೇಗೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.

ಬರಹದಲ್ಲಿ ಬರುವ ಕುರಳುಗಳನ್ನು ಹೇಗೆ ಅಣಿಗೊಳಿಸುವುದು ಎಂಬುದನ್ನೂ ಅವರು ಕಲಿಯಬೇಕಾಗುತ್ತದೆ. ಇದು ಬೇರೆ ಬೇರೆ ಗುರಿಗಳಿಗಾಗಿ ಬಳಕೆಯಾಗುವ ಬರಹಗಳಲ್ಲಿ ಬೇರೆ ಬೇರಾಗಿರುತ್ತದೆ. ಒಂದು ಕತೆಯನ್ನು ಬರೆಯುವವರು ಅದರ ನೆಗಳ್ತೆ ಮುಂದೆ ಹೋಗುವುದಕ್ಕೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ಇದಕ್ಕೆ ಬದಲು, ಒಂದು ವಿಶಯದ ಮಟ್ಟಿಗೆ ಇನ್ನೊಬ್ಬರ ಒಪ್ಪಿಗೆ ಇಲ್ಲವೇ ಒಲವನ್ನು ಪಡೆಯಬೇಕೆಂದಿರುವವರು ಆ ವಿಶಯವನ್ನು ಓದುಗರ ಮುಂದಿರಿಸುವ ಮತ್ತು ಅದನ್ನು ಬೆಂಬಲಿಸುವ ವಿಚಾರಗಳನ್ನು ಕೊಡುವ ಬಗೆ ಹೇಗೆ ಎಂಬುದಕ್ಕೆ ಗಮನ ಕೊಡಬೇಕಾಗುತ್ತದೆ.

ಒಮ್ಮೆ ಬರೆದುದನ್ನು ಓದಿ ನೋಡಿ, ಅದು ಸರಿಯಿಲ್ಲವೆಂದು ಅನಿಸಿದಲ್ಲಿ ಅದನ್ನು ತಿದ್ದಿ ಸರಿಪಡಿಸುವುದು ಹೇಗೆ ಎಂಬುದನ್ನೂ ಮಕ್ಕಳು ತಿಳಿದಿರಬೇಕು. ಇದಕ್ಕಾಗಿ ಅವರು ತಾವು ಬರೆದಿರುವ ಸೊಲ್ಲನ್ನು ಬೇರೆ ಬೇರೆ ಬಗೆಗಳಲ್ಲಿ ಮಾರ‍್ಪಡಿಸುವುದು ಹೇಗೆ ಎಂಬುದನ್ನು ಕಲಿತಿರಬೇಕಾಗುತ್ತದೆ. ತಾವು ಬರೆದಿರುವ ಸೊಲ್ಲಿನ ಇಟ್ಟಳ (ಒಳರಚನೆ) ಎಂತಹದು, ಆ ಸೊಲ್ಲನ್ನು ಬೇರೆ ಯಾವ ಇಟ್ಟಳಗಳಿಗೆ ಮಾರ‍್ಪಡಿಸಬಹುದು ಎಂಬಂತಹ ಸೊಲ್ಲರಿಮೆಯ (ವ್ಯಾಕರಣದ) ತಿಳಿವು ಅವರಿಗಿದ್ದಲ್ಲಿ, ತಾವು ಬರೆದಿರುವ ಬರಹವನ್ನು ತಿದ್ದಿ ಸರಿಪಡಿಸುವ ಕೆಲಸವನ್ನು ಅವರು ಹೆಚ್ಚು ಚನ್ನಾಗಿ ನಡೆಸಬಲ್ಲರು.

ಬರವಣಿಗೆಯಲ್ಲಿ ಮಾಡಿರುವ ತಪ್ಪನ್ನು ಬರೆದವರೇ ಓದಿ ನೋಡಿ ಕಂಡುಕೊಳ್ಳುವಂತೆ ಮಾಡಿದಲ್ಲಿ, ಮತ್ತು ಅವು ಯಾಕೆ ತಪ್ಪಾಗಿವೆ ಎಂಬುದನ್ನೂ ತಿಳಿಯುವಂತೆ ಮಾಡಿದಲ್ಲಿ ಅವರ ಬರವಣಿಗೆ ಬೇಗನೆ ಮುಂದೆ ಸಾಗುತ್ತದೆ. ಬರೆದಶ್ಟೂ ಬರವಣಿಗೆ ಚನ್ನಾಗುತ್ತಾ ಹೋಗುತ್ತದೆ. ಹಾಗಾಗಿ, ಬರೆಯುವ ಸಂದರ‍್ಬಗಳು ಮಕ್ಕಳಿಗೆ ಹೆಚ್ಚು ಹೆಚ್ಚು ದೊರಕುವಂತೆ ಮಾಡಬೇಕು.

ಮಕ್ಕಳಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟಬೇಕೆಂಬುದು ಎಲ್ಲಕ್ಕಿಂತಲೂ ಮುಕ್ಯವಾದ ವಿಶಯ. ಏನನ್ನೇ ಬರೆಯಲಿ, ಅದು ಅವರಿಗೆ ನಲಿವನ್ನು ಮತ್ತು ಮೆಚ್ಚುಗೆಯನ್ನು ಕೊಡುವಂತಿರಬೇಕು. ಬೇರೆಯವರ ಒತ್ತಾಯಕ್ಕೆ ಬರೆಯುವ ಬರಹದಿಂದ ಅವರ ಬರವಣಿಗೆ ಒಳ್ಳೆಯದಾಗಲಾರದು.

ಏನಾದರೂ ಒಂದು ವಿಶಯವನ್ನು ಇನ್ನೊಬ್ಬರಿಗೆ ತಿಳಿಸಬೇಕೆಂಬ ತುಡಿತ ಮಕ್ಕಳಲ್ಲಿರುತ್ತದೆ. ಶಾಲೆಯಿಂದ ಮನೆಗೆ ಬಂದೊಡನೆ, ಶಾಲೆಯಲ್ಲಿ ಇಲ್ಲವೇ ಅಲ್ಲಿಂದ ಬರುವಾಗ ದಾರಿಯಲ್ಲಿ ಏನಾಯಿತು ಎಂಬುದನ್ನು ತಾಯಿಗೆ ಆದಶ್ಟು ಬೇಗನೆ ತಿಳಿಸಿಬಿಡಬೇಕೆಂಬ ಆತುರದಲ್ಲಿ ಮಕ್ಕಳಿರುತ್ತಾರೆ. ಗೆಳೆಯರನ್ನು ಕಂಡೊಡನೆ ತಮಗೆ ತಿಳಿದಿರುವ ಹೊಸ ವಿಶಯವೊಂದನ್ನು ಅವರಿಗೆ ತಿಳಿಸುವ ಆತುರವೂ ಅವರಿಗಿರುತ್ತದೆ.

ತಮ್ಮ ಮನಸ್ಸಿನಲ್ಲಿರುವ ಇಂತಹ ವಿಶಯಗಳನ್ನು ಮಾತಿನ ಮೂಲಕ ಇನ್ನೊಬ್ಬರಿಗೆ ತಿಳಿಸುವ ಹಾಗೆ ಬರಹದ ಮೂಲಕವೂ ತಿಳಿಸಲು ಬರುತ್ತದೆ ಎಂಬುದನ್ನು ಅವರಿಗೆ ತೋರಿಸಿಕೊಟ್ಟಲ್ಲಿ, ಅವರು ಬಹಳ ಬೇಗನೆ ಬರವಣಿಗೆಯಲ್ಲಿ ಮುಂದೆ ಹೋಗುತ್ತಾರೆ. ಮೊದಲಿಗೆ ಅವರ ಹತ್ತಿರ ಮಾತಿನ ಮೂಲಕ ಒಂದು ವಿಶಯವನ್ನು ತಿಳಿಸಲು ಹೇಳಿ, ಅದನ್ನು ಕಲಿಸುವವರೇ ಬರೆದು ತೋರಿಸಬಹುದು, ಮತ್ತು ಹಾಗೆ ಬರೆದುದನ್ನು ಅವರಿಗೆ ಓದಲು ಕೊಡಬಹುದು. ಹೀಗೆ ಮಾಡುವುದರಿಂದ ಅವರಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟುತ್ತದೆ.

ಬರೆಯಲು ಕಲಿಯಬೇಕೆಂದಿರುವವರಿಗೆ ಎರಡು ಬಗೆಯ ಕಲಿಕೆಗಳು ನೆರವು ನೀಡಬಲ್ಲುವು: ಮೊದಲನೆಯದಾಗಿ, ಬರೆಯಲಿರುವ ವಿಶಯದ ಕುರಿತು ಅವರು ಏನೆಲ್ಲಾ ಹೇಳಬಲ್ಲರೋ ಅದನ್ನೆಲ್ಲ ಹೇಳಲು ಬಿಡಬೇಕು. ಇದರಿಂದ ಅವರಲ್ಲಿ ಆಲೋಚಿಸುವ ಕಸುವು ಬೆಳೆಯುತ್ತದೆ. ಎರಡನೆಯದಾಗಿ, ಅವರಿಗೆ ಬೇರೆ ಯಾವುದಾದರೂ ಬರಹವನ್ನು ಎತ್ತಿಬರೆಯಲು ಕಲಿಸಬೇಕು. ಹೀಗೆ ಬರೆಯುವಾಗ, ಅಂತಹ ಬರಹಗಳಲ್ಲಿ ಸೊಲ್ಲುಗಳನ್ನು ಮತ್ತು ಕುರಲುಗಳನ್ನು ಯಾವ ರೀತಿಯಲ್ಲಿ ಅಳವಡಿಸಲಾಗಿದೆ ಎಂಬುದನ್ನು ಅವರು ಗಮನಿಸುವ ಹಾಗೆಯೂ ಮಾಡಬೇಕು.

ಓದುವ ಮತ್ತು ಬರೆಯುವ ಕೆಲಸಗಳೆರಡೂ ಬಹಳ ಮಟ್ಟಿಗೆ ಒಂದನ್ನೊಂದು ಅವಲಂಬಿಸಿವೆ. ಹಾಗಾಗಿ, ಅವೆರಡನ್ನೂ ಮಕ್ಕಳು ಒಟ್ಟೊಟ್ಟಾಗಿ ಕಲಿತುಕೊಳ್ಳುವಂತೆ ಮಾಡಬೇಕು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಮಕ್ಕಳಿಗೆ ಓದಲು ಕಲಿಸುವ ಬಗೆ

ನುಡಿಯರಿಮೆಯ ಇಣುಕುನೋಟ – 16

ಎಲ್ಲಾ ಮಕ್ಕಳೂ ತಮ್ಮ ತಾಯ್ನುಡಿಯಲ್ಲಿ ಮಾತನಾಡಲು ತಾವಾಗಿಯೇ ಕಲಿತುಕೊಳ್ಳುತ್ತಾರೆ; ಕೆಲವರು ಈ ಕಲಿಕೆಯನ್ನು ಬೇಗನೆ ನಡೆಸಬಹುದು, ಮತ್ತು ಕೆಲವರು ಅದಕ್ಕಾಗಿ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಆದರೆ ಮಿದುಳಿನ ತೊಂದರೆಯಿಲ್ಲದ ಯಾವ ಮಗುವೂ ತನ್ನ ತಾಯ್ನುಡಿಯಲ್ಲಿ ಮಾತನಾಡಲು ಕಲಿಯದಿರುವುದಿಲ್ಲ.

ಹಾಗಾಗಿ, ಮಾತಿನ ಕಲಿಕೆಯನ್ನು ಮಕ್ಕಳು ಹುಟ್ಟಿನಿಂದಲೇ ಪಡೆದುಕೊಂಡು ಬಂದ ಅಳವೆಂದು ಹೇಳಲಾಗುತ್ತದೆ. ಆದರೆ, ಓದಿನ ಕಲಿಕೆ ಆ ರೀತಿಯದಲ್ಲ; ಹೆಚ್ಚಿನ ಮಕ್ಕಳಿಗೂ ಓದುವ ಬಗೆಯನ್ನು ಯಾರಾದರೂ ಕಲಿಸಿಕೊಟ್ಟಲ್ಲಿ ಮಾತ್ರ ಅವರು ಅದನ್ನು ಕಲಿಯುತ್ತಾರೆ. ಸಯ್ಕಲ್ ತುಳಿಯುವುದು, ಈಜುವುದು ಮೊದಲಾದವುಗಳ ಹಾಗೆ, ಓದು ಹುಟ್ಟಿನಿಂದ ಬರುವ ಅಳವಲ್ಲ; ಕಲಿತು ಪಡೆಯುವ ಅಳವು.

ಬರಹಗಳನ್ನು ಸಲೀಸಾಗಿ ಓದಲು ಕಲಿಯಬೇಕಾದರೆ, ಮಕ್ಕಳು ಕೆಲವು ಚಳಕ(ಕವ್ಶಲ್ಯ)ಗಳನ್ನು ತಮ್ಮದಾಗಿಸಿಕೊಳ್ಳಬೇಕಾಗುತ್ತದೆ: ಮಾತಿನಲ್ಲಿ ಬರುವ ಪದಗಳನ್ನೆಲ್ಲ ಉಲಿಗಳ ಸೇರಿಕೆಯಿಂದ ಉಂಟುಮಾಡಲಾಗಿದೆ ಎಂಬುದನ್ನು ಅವರು ಗಮನಿಸಬೇಕು, ಮತ್ತು ಪುಟಗಳಲ್ಲಿ ಬರುವ ಗುರುತುಗಳಿಗೂ ಈ ಮಾತಿನ ಉಲಿಗಳಿಗೂ ನಡುವೆ ಎಂತಹ ಸಂಬಂದವಿದೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.

ಇದಲ್ಲದೆ, ಪುಟಗಳಲ್ಲಿ ಬರುವ ಈ ಗುರುತುಗಳ ಜೋಡಣೆಗಳಲ್ಲಿ ಪದ, ಪದಕಂತೆ ಮತ್ತು ಸೊಲ್ಲುಗಳನ್ನು ಕಾಣಲು, ಮತ್ತು ಅವುಗಳಿಂದ ಬರಹಗಾರನು ಏನು ಹೇಳುತ್ತಿದ್ದಾನೆ ಎಂಬುದನ್ನು (ಎಂದರೆ ಬರಹದ ಹುರುಳನ್ನು) ತಿಳಿಯಲು ಅವರು ಕಲಿಯಬೇಕು.

ಮಾತಿನಲ್ಲಿ ಬರುವ ಪದಗಳು ಉಲಿಗಳ ಸೇರಿಕೆಯಿಂದ ಉಂಟಾಗುತ್ತವೆ ಎಂಬುದನ್ನು ಗಮನಿಸುವಂತೆ ಮಾಡಲು ಮಕ್ಕಳಿಗೆ ಕೆಲವು ಆಟಗಳನ್ನು ಕಲಿಸಬಹುದು: ಮನೆ, ಮಾತು, ಮೋಡ, ಮುಗಿಲು ಎಂಬಂತಹ ಪದಗಳಲ್ಲೆಲ್ಲ ಮೊದಲಿಗೆ ಮಕಾರ ಬಂದಿದೆ, ಕೆಲವು ಪದಗಳಿಂದ ಈ ಮಕಾರವನ್ನು ತೆಗೆದು ಹಾಕಿದರೆ ಬೇರೊಂದು ಪದ ಸಿಗುತ್ತದೆ (ಮತ್ತೆ-ಅತ್ತೆ, ಮಾಡು-ಆಡು, ಮಿಡಿ-ಇಡಿ), ಕೆಲವು ಪದಗಳಲ್ಲಿ ಮಕಾರದ ಬದಲು ಕಕಾರವನ್ನು ಬಳಸಿದರೆ ಬೇರೆ ಪದ ಸಿಗುತ್ತದೆ (ಮತ್ತೆ-ಕತ್ತೆ, ಮಾಡು-ಕಾಡು, ಮಿಡಿ-ಕಿಡಿ) ಎಂಬಂತಹ ವಿಶಯಗಳನ್ನು ಅವರು ಗಮನಿಸುವ ಹಾಗೆ ಮಾಡಬಹುದು, ಮತ್ತು ಪದಗಳನ್ನು ಉಲಿಗಳಾಗಿ ಒಡೆಯುವ ಬಗೆಯನ್ನು ಕಲಿಸಬಹುದು. ಇದರಿಂದ, ಪದಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ಅವರು ತಿಳಿಯುವ ಹಾಗೆ ಮಾಡಬಹುದು.

ಕನ್ನಡ ಬರಹದ ಪುಟಗಳಲ್ಲಿ ಕಾಣಿಸುವ ಗುರುತು(ಬರಿಗೆ)ಗಳಿಗೂ ಅವನ್ನು ಓದುವಲ್ಲಿ ಬಳಕೆಯಾಗುವ ಉಲಿಗಳಿಗೂ ನಡುವೆ ನೇರವಾದ ಸಂಬಂದವಿದೆ; ಇಂಗ್ಲಿಶ್ ಬರಹದಲ್ಲಿರುವ ಹಾಗೆ ಅದು ತೊಡಕು ತೊಡಕಾಗಿಲ್ಲ. ಹಾಗಾಗಿ, ಕನ್ನಡ ಬರಹಗಳನ್ನು ಓದಲು ಕಲಿಯುವ ಮಕ್ಕಳು ಬರಿಗೆಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ಗಮನಿಸುವಂತೆ ಮಾಡುವುದು ಹೆಚ್ಚು ತೊಡಕಿನ ಕೆಲಸವಲ್ಲ. ಆದರೆ, ಸಂಸ್ಕ್ರುತದ ಎರವಲು ಪದಗಳಲ್ಲಿ ಬಳಕೆಯಾಗುತ್ತಿರುವ ಅಲ್ಪಪ್ರಾಣ-ಮಹಾಪ್ರಾಣ, ರು-ಋ, ಶ-ಷ ಮೊದಲಾದ ಹಲವು ವ್ಯತ್ಯಾಸಗಳು ಓದಿನಲ್ಲಿ ಕಾಣಿಸುವುದಿಲ್ಲ, ಮತ್ತು ಇವುಗಳಿಂದಾಗಿ ಉಲಿಗಳಿಗೂ ಬರಿಗೆಗಳಿಗೂ ನಡುವಿರುವ ಸಂಬಂದವನ್ನು ಗಮನಿಸುವಲ್ಲಿ ಹೆಚ್ಚಿನ ಮಕ್ಕಳೂ ಗೊಂದಲದಲ್ಲಿ ಬೀಳುತ್ತಾರೆ. ಹಾಗಾಗಿ, ಕನ್ನಡದ ಮಟ್ಟಿಗೆ ಅನವಶ್ಯಕವಾಗಿರುವ ಈ ವ್ಯತ್ಯಾಸಗಳನ್ನು ಮಕ್ಕಳ ಓದಿನಿಂದ ದೂರ ಇರಿಸುವುದು ಒಳ್ಳೆಯದು.

ಬರಿಗೆಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ತಿಳಿಯುವುದು ಬರಹವನ್ನು ಓದಲು ಕಲಿಯುವಲ್ಲಿ ತುಂಬಾ ಮುಕ್ಯವಾದ ಕೆಲಸ. ಈ ನಂಟನ್ನು ತಿಳಿದುಕೊಂಡವರಿಗೆ ತಮಗೆ ಗೊತ್ತಿರುವ ಪದಗಳನ್ನು ಮಾತ್ರವಲ್ಲದೆ ಗೊತ್ತಿಲ್ಲದ ಪದಗಳನ್ನೂ ಓದಲು ಬರುತ್ತದೆ. ಈ ನಂಟನ್ನು ತಿಳಿಯದ ಮಕ್ಕಳು ಪದಗಳನ್ನು ಚಿತ್ರಗಳ ಹಾಗೆ ಇಡಿ ಇಡಿಯಾಗಿ ಓದಲು ಹೋಗುತ್ತಾರೆ, ಮತ್ತು ಇದರಿಂದಾಗಿ ಬರಹದಲ್ಲಿ ಹೊಸ ಪದಗಳು ಕಾಣಿಸಿಕೊಂಡಾಗ ಅವರ ಓದು ಮುಂದೆ ಸಾಗುವುದಿಲ್ಲ.

ಇತ್ತೀಚೆಗೆ ನಡೆಸಿದ ಹಲವು ಮಿದುಳಿನ ಅರಕೆಗಳು ಓದಿನಲ್ಲಿ ಬೇಗನೆ ಮುಂದೆ ಹೋಗುವ ಮಕ್ಕಳಿಗೂ ಹಿಂದೆ ಬೀಳುವ ಮಕ್ಕಳಿಗೂ ನಡುವೆ ಅವರು ಪದಗಳನ್ನು ಓದುವ ಬಗೆಯಲ್ಲೇ ಇಂತಹ ವ್ಯತ್ಯಾಸವಿದೆಯೆಂಬುದನ್ನು ಸ್ಪಶ್ಟವಾಗಿ ತೋರಿಸಿಕೊಟ್ಟಿವೆ. ಓದಿನಲ್ಲಿ ಬೇಗನೆ ಮುಂದೆ ಹೋಗುವ ಮಕ್ಕಳು ಓದುತ್ತಿರುವಾಗ, ಅವರ ಮಿದುಳಿನಲ್ಲಿ ಮೂರು ಜಾಗಗಳು ಮಿಂಚುತ್ತಿರುತ್ತವೆ: ಬರಿಗೆಗಳನ್ನು ಗುರುತಿಸುವ ಕಣ್ಣಿಗೆ ಸಂಬಂದಿಸಿದ ಜಾಗ, ಅವನ್ನು ಉಲಿಗಳೊಂದಿಗೆ ಜೋಡಿಸುವ ಕಿವಿಗೆ ಸಂಬಂದಿಸಿದ ಜಾಗ, ಮತ್ತು ಅವನ್ನು ಹುರುಳಿನೊಂದಿಗೆ ಸಂಬಂದಿಸುವ ಮಿದುಳಿನ ಹಿಂಬಾಗದಲ್ಲಿರುವ ಜಾಗ. ಓದಿನಲ್ಲಿ ಹಿಂದೆ ಬೀಳುವ ಮಕ್ಕಳು ಓದುತ್ತಿರುವಾಗ, ಅವರ ಮಿದುಳಿನಲ್ಲಿ ಕಣ್ಣಿಗೆ ಮತ್ತು ಹುರುಳಿಗೆ ಸಂಬಂದಿಸಿದ ಜಾಗಗಳು ಮಾತ್ರ ಮಿಂಚುತ್ತಿರುತ್ತವಲ್ಲದೆ, ಕಿವಿಗೆ ಸಂಬಂದಿಸಿದ ಜಾಗ ಮಿಂಚುತ್ತಿರುವುದಿಲ್ಲ. ಎಂದರೆ, ಪದಗಳನ್ನು ಬರಿಗೆಗಳಾಗಿ ಒಡೆದು, ಅವನ್ನು ಉಲಿಗಳೊಂದಿಗೆ ಸಂಬಂದಿಸಿ ಓದುವುದು ಹೇಗೆ ಎಂಬುದನ್ನು ಅವರು ಕಲಿತಿಲ್ಲ.

ಒಮ್ಮೆ ಪದಗಳನ್ನು ಬರಿಗೆಗಳಾಗಿ ಬಿಡಿಸಿ, ಅವನ್ನು ಉಲಿಗಳೊಂದಿಗೆ ಸಂಬಂದಿಸಲು ಕಲಿತಮೇಲೆ, ಆಗಾಗ ಬರುವ ಪದಗಳನ್ನು ಇಡಿ ಇಡಿಯಾಗಿ ಗುರುತಿಸಿ ಓದುವ ಬಗೆಯನ್ನೂ ಮಕ್ಕಳು ಕಲಿತುಕೊಳ್ಳಬೇಕಾಗುತ್ತದೆ; ಯಾಕೆಂದರೆ, ಬರಹಗಳನ್ನು ಬೇಗನೆ ಮತ್ತು ಸಲೀಸಾಗಿ ಓದಲು ಇಂತಹ ಕಲಿಕೆಯೂ ಬೇಕಾಗುತ್ತದೆ. ಆದರೆ, ಆಮೇಲೆಯೂ, ಅಪರೂಪಕ್ಕೆ ಬರುವ ಪದಗಳನ್ನು ಮತ್ತು ಹೊಸ ಪದಗಳನ್ನು ಓದಲು ಅವನ್ನು ಬರಿಗೆಗಳಾಗಿ ಒಡೆದು ಉಲಿಗಳೊಂದಿಗೆ ಸಂಬಂದಿಸುವ ಬಗೆ ಅವರಿಗೆ ಬೇಕಾಗುತ್ತದೆ.

ಬರಹಗಳಲ್ಲಿ ಬರುವ ಪದಗಳನ್ನು ಓದುವ ಬಗೆ ಹೇಗೆ ಎಂಬುದನ್ನು ಕಲಿತರೆ ಸಾಲದು, ಅವನ್ನು ಪದಕಂತೆಗಳಾಗಿ ಮತ್ತು ಸೊಲ್ಲುಗಳಾಗಿ ಜೋಡಿಸಿ, ಅವುಗಳಿಂದ ಹುರುಳನ್ನು ಪಡೆಯುವುದು ಹೇಗೆ ಎಂಬುದನ್ನೂ ಮಕ್ಕಳು ಕಲಿಯಬೇಕಾಗುತ್ತದೆ. ಅವರ ಓದು ಬೇಗನೆ ಮತ್ತು ಸಲೀಸಾಗಿ ನಡೆಯುತ್ತಿದೆಯಾದರೆ ಮಾತ್ರ ಅವರಿಗೆ ಈ ರೀತಿ ತಮ್ಮ ಓದಿನಿಂದ ಹುರುಳನ್ನು ಪಡೆಯಲು ಬರುತ್ತದೆ. ತುಂಬಾ ಮೆಲ್ಲಗೆ ಓದುವ ಮಕ್ಕಳಿಗೆ ಪದಗಳು ಮಾತ್ರ ಕಾಣಿಸುತ್ತವಲ್ಲದೆ ಪದಕಂತೆಗಳು ಇಲ್ಲವೇ ಸೊಲ್ಲುಗಳು ಕಾಣಿಸುವುದಿಲ್ಲ.

ಓದಲು ಕಲಿಯುತ್ತಿರುವ ಮಕ್ಕಳ ಮಿದುಳಿನಲ್ಲಿ ಮಾತಿನ ಪದನೆರಕೆ (ಪದಕೋಶ) ಮತ್ತು ಓದಿನ ಪದನೆರಕೆ ಎಂಬುದಾಗಿ ಎರಡು ಬಗೆಯ ಪದನೆರಕೆಗಳು ನೆಲೆಗೊಳ್ಳುತ್ತವೆ; ಇವುಗಳಲ್ಲಿ ಓದಿನ ಪದನೆರಕೆಯನ್ನು ಹಿಗ್ಗಿಸುವ ಮೂಲಕ ಮಕ್ಕಳು ಓದಿನಲ್ಲಿ ಮುಂದೆ ಬರುವಂತೆ ಮಾಡಬಹುದು. ಬಗೆ ಬಗೆಯ ಬರಹಗಳನ್ನು, ಮತ್ತು ಹೆಚ್ಚು ಹೆಚ್ಚು ಬರಹಗಳನ್ನು ಅವರು ಓದುವ ಹಾಗೆ ಮಾಡುವ ಮೂಲಕ ಅವರ ಈ ಓದಿನ ಪದನೆರಕೆಯನ್ನು ಹಿಗ್ಗಿಸಲು ಬರುತ್ತದೆ.

ಕೆಲವು ಮಂದಿ ತಾಯ್ತಂದೆಯರು ಪಟ್ಯಪುಸ್ತಕಗಳನ್ನು ಹೊರತುಪಡಿಸಿ ಬೇರೆ ಯಾವುದನ್ನೂ ಮಕ್ಕಳು ಓದಬಾರದೆಂದು ಕಟ್ಟಲೆ ಮಾಡುತ್ತಾರೆ; ಕತೆ ಕಾದಂಬರಿಗಳನ್ನು ಓದಿ ಸಮಯ ಹಾಳುಮಾಡಬಾರದೆಂದು ಆಗಾಗ ಮಕ್ಕಳಿಗೆ ಹೇಳುತ್ತಿರುತ್ತಾರೆ. ಆದರೆ, ಬರೇ ಪಟ್ಯಪುಸ್ತಕಗಳನ್ನು ಮಾತ್ರವೇ ಓದುತ್ತಿದ್ದರೆ ಮಕ್ಕಳ ಓದಿನ ಪದನೆರಕೆ ತುಂಬಾ ಚಿಕ್ಕದಾಗಿಯೇ ಉಳಿಯುತ್ತದೆ. ಅದನ್ನು ಹಿಗ್ಗಿಸಬೇಕಿದ್ದಲ್ಲಿ ಅವರು ಎಲ್ಲಾ ಬಗೆಯ ಬರಹಗಳನ್ನೂ ಓದುತ್ತಿರಬೇಕು. ಹಾಗಾಗಿ, ಹೆಚ್ಚು ಹೆಚ್ಚು ಪುಸ್ತಕಗಳನ್ನು ಮತ್ತು ಬೇರೆ ಬಗೆಯ ಬರಹಗಳನ್ನು ಅವರು ಓದುವಂತೆ ಮಾಡಬೇಕು.

ಓದಿನಲ್ಲಿ ತಮಗೆ ತಿಳಿಯದ ಪದ ಬಂದಾಗ, ಅದರ ಹುರುಳನ್ನು ಪದನೆರಕೆಯ ನೆರವಿನಿಂದ ಕಂಡುಹಿಡಿಯುವುದು ಹೇಗೆ ಎಂಬುದನ್ನೂ ಅವರಿಗೆ ತೋರಿಸಿಕೊಡಬೇಕು. ಪದನೆರಕೆಗಳಲ್ಲಿ ಪದಗಳಿಗೆ ಹಲವು ಹುರುಳುಗಳನ್ನು ಕೊಟ್ಟಿರುತ್ತಾರೆ. ಇವುಗಳಲ್ಲಿ ತಮ್ಮ ಓದಿಗೆ ಹೊಂದಿಕೆಯಾಗುವಂತಹದನ್ನು ಆರಿಸಿಕೊಳ್ಳುವುದು ಹೇಗೆ ಎಂಬುದನ್ನೂ ಅವರಿಗೆ ತೋರಿಸಿಕೊಡಬೇಕು. ಈ ರೀತಿ ತಮ್ಮ ಓದಿಗೆ ಪದನೆರಕೆಯ ನೆರವನ್ನು ಪಡೆಯಲು ಕಲಿತ ಮಕ್ಕಳ ಓದಿನ ಪದನೆರಕೆಯೂ ಬೇಗನೆ ಹಿಗ್ಗುತ್ತದೆ.

ಓದಿನಲ್ಲಿ ಹಿಂದೆ ಬೀಳುವ ಮಕ್ಕಳು ಬೇರೆ ವಿಶಯಗಳಲ್ಲೂ ಹಿಂದೆ ಬೀಳುತ್ತಾರೆ; ಯಾಕೆಂದರೆ, ಈ ಎಲ್ಲಾ ವಿಶಯಗಳ ಕಲಿಕೆಯನ್ನೂ ಅವರು ಓದಿನ ಮೂಲಕವೇ ನಡೆಸಬೇಕಾಗುತ್ತದೆ. ಹಾಗಾಗಿ, ಮಕ್ಕಳು ಬೇಗನೆ ಮತ್ತು ಸಲೀಸಾಗಿ ಓದಲು ಕಲಿಯುವಂತೆ ಮಾಡುವುದು, ಮತ್ತು ಇದಕ್ಕಾಗಿ ಅವರ ಓದು ಸರಿಯಾದ ಕ್ರಮದಲ್ಲಿ ಮುಂದುವರಿಯುವಂತೆ ಮಾಡುವುದು ತುಂಬಾ ಮುಕ್ಯವಾದ ಕೆಲಸವಾಗಿದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಮಕ್ಕಳಿಗೆ ವ್ಯಾಕರಣ ಕಲಿಸಬೇಕೇ?

ನುಡಿಯರಿಮೆಯ ಇಣುಕುನೋಟ – 15

ಬೇಕು ಎನ್ನುತ್ತಿದ್ದಾರೆ ಇತ್ತೀಚೆಗೆ ಹಲವು ಮಂದಿ ತಿಳಿವಿಗರು; ಆದರೆ, ವ್ಯಾಕರಣವನ್ನು ಹಿಂದಿನ ಹಾಗೆ ಒಂದು ವಿಶಯವಾಗಿ ಕಲಿಸುವ ಬದಲು, ಮಕ್ಕಳ ಓದು ಮತ್ತು ಬರಹಗಳ ಕಲಿಕೆಗೆ ನೆರವಾಗುವ ಹಾಗೆ ನೇರವಲ್ಲದ ಬಗೆಯಲ್ಲಿ ಅದನ್ನು ಕಲಿಸಬೇಕು ಎಂಬುದು ಹೆಚ್ಚಿನ ತಿಳಿವಿಗರ ತೀರ‍್ಮಾನವಾಗಿದೆ.

ನಿಜಕ್ಕೂ ವ್ಯಾಕರಣದ ಕಟ್ಟಲೆಗಳನ್ನು ಮಕ್ಕಳಿಗೆ ಕಲಿಸುವುದು ತುಂಬಾ ತೊಡಕಿನ ಕೆಲಸ. ಯಾಕೆಂದರೆ, ಮೊದಲನೆಯದಾಗಿ, ಈ ಕಟ್ಟಲೆಗಳೆಲ್ಲ ತೊಡಕು ತೊಡಕಾದವುಗಳು; ಅವನ್ನು ವಿವರಿಸಲು ಬೇರೆಯೇ ಆದ ಅರಿಮೆಯ ಪದಗಳು ಬೇಕಾಗುತ್ತವೆ. ಇದಲ್ಲದೆ, ಅವುಗಳಲ್ಲಿ ಯಾವ ಕಟ್ಟಲೆಯೂ ಬೇರೆಯಾಗಿ ನಿಲ್ಲುವುದಿಲ್ಲ; ಎಲ್ಲವೂ ಒಂದರೊಡನೊಂದು ಹೆಣೆದಿರುತ್ತವೆ. ಹಾಗಾಗಿ, ವ್ಯಾಕರಣದ ಯಾವ ಕಟ್ಟಲೆಯನ್ನು ಕಲಿಸಬೇಕಿದ್ದರೂ, ಅದಕ್ಕೆ ಬೇರೆ ಕಟ್ಟಲೆಗಳೊಂದಿಗಿರುವ ಕೊಂಡಿಗಳನ್ನೂ ಕಲಿಸಿಕೊಡಬೇಕಾಗುತ್ತದೆ.

ಎರಡನೆಯದಾಗಿ, ವ್ಯಾಕರಣದ ಕಟ್ಟಲೆಗಳು ಓದಿಗೆ ಇಲ್ಲವೇ ಬರಹಕ್ಕೆ ಯಾವ ರೀತಿಯಲ್ಲಿ ನೆರವಿಗೆ ಬರಬಲ್ಲುವು ಎಂಬುದು ಅವನ್ನು ಕಲಿಯುವವರಿಗೆ ಸುಲಬವಾಗಿ ಗೊತ್ತಾಗುವುದಿಲ್ಲ, ಮತ್ತು ಅವು ಯಾಕೆ ಬೇಕಾಗುತ್ತವೆ ಎಂಬುದನ್ನು ತಿಳಿಯದವರಿಗೆ ಅವನ್ನು ಕಲಿಯುವಲ್ಲಿ ಯಾವ ಹುರುಪೂ ಇರುವುದಿಲ್ಲ. ಅವುಗಳ ಕಲಿಕೆ ಬರಿಯ ಒಂದು ಯಾಂತ್ರಿಕ ಕೆಲಸವಾಗಿಬಿಡುತ್ತದೆ.

ಹಿಂದಿನ ಕಾಲದ ಶಾಲೆಗಳಲ್ಲಿ ವ್ಯಾಕರಣವನ್ನು ಬೇರೆಯೇ ಒಂದು ವಿಶಯವಾಗಿ ಕಲಿಸಲಾಗುತ್ತಿತ್ತು, ಮತ್ತು ಈ ಕಾರಣದಿಂದಾಗಿ, ಅದೊಂದು ತುಂಬಾ ತೊಡಕು ತೊಡಕಾದ, ಮತ್ತು ತೀರಾ ಅನವಶ್ಯಕವಾದ ವಿಶಯವೆಂಬುದಾಗಿ ಅದನ್ನು ಕಲಿಯುವವರಿಗೆ ಮಾತ್ರವಲ್ಲ, ಅದನ್ನು ಕಲಿಸುವವರಿಗೂ ಅನಿಸುತ್ತಿತ್ತು. ಅಯ್ದಾರು ವರ‍್ಶ ಅದನ್ನು ಕಲಿಸಿದರೂ ಮಕ್ಕಳ ಓದಿನಲ್ಲಿ ಇಲ್ಲವೇ ಬರವಣಿಗೆಯಲ್ಲಿ ಅದರಿಂದಾಗಿ ಯಾವ ಮಾರ‍್ಪಾಡೂ ಉಂಟಾಗುವುದಿಲ್ಲ ಎಂಬುದನ್ನು ಸಂಶೋದನೆಗಳು ತೋರಿಸಿಕೊಟ್ಟುವು. ಇದನ್ನು ಗಮನಿಸಿದ ಹಲವು ತಿಳಿವಿಗರು ನುಡಿಯ ಕಲಿಕೆಗೆ ವ್ಯಾಕರಣದ ತಿಳಿವು ಬೇಕಾಗಿಲ್ಲ, ಮತ್ತು ಅದನ್ನು ಶಾಲೆಗಳಲ್ಲಿ ಕಲಿಸಬೇಕಾಗಿಲ್ಲ ಎಂಬ ತೀರ‍್ಮಾನಕ್ಕೆ ಬಂದಿದ್ದರು.

ಆದರೆ, ನಿಜಕ್ಕೂ ಇದೊಂದು ತಪ್ಪಾದ ತೀರ‍್ಮಾನವಾಗಿತ್ತು; ಯಾಕೆಂದರೆ, ಯಾವ ಕೆಲಸವೇ ಆಗಲಿ, ಅದನ್ನು ಜಾಣ್ಮೆಯಿಂದ ನಡೆಸಬೇಕೆಂದಿರುವವರಿಗೆ ಅದರ ಒಳಗುಟ್ಟಿನ ತಿಳಿವು ನೆರವಿಗೆ ಬಂದೇ ಬರುತ್ತದೆ. ಎತ್ತುಗೆಗಾಗಿ, ಕಾರನ್ನು ಓಡಿಸುವವರು ಅದರ ಬೇರೆ ಬೇರೆ ಅಂಗಗಳ ಗುರಿ, ಅವುಗಳ ಅಳವು-ನಲುವುಗಳು, ಅವುಗಳ ಕೆಲಸದ ಮೇಲೆ ಗಾಳಿ, ಮಳೆ, ಬಿಸಿಲು, ಮತ್ತು ದಾರಿಂii ಗೊತ್ತುಪಾಡುಗಳಿಂದ ಉಂಟಾಗಬಹುದಾದ ಅಡಚಣೆಗಳು ಮೊದಲಾದುವನ್ನು ಸರಿಯಾಗಿ ತಿಳಿದುಕೊಂಡಿರುವರಾದರೆ, ಆ ಕೆಲಸವನ್ನು ಅವರು ಹೆಚ್ಚು ಜಾಣ್ಮೆಯಿಂದ ನಡೆಸಬಲ್ಲರು.

ಓದುವ ಮತ್ತು ಬರೆಯುವ ಕೆಲಸಗಳೂ ಹೀಗೆಯೇ. ಅವುಗಳ ಒಳಗುಟ್ಟನ್ನು ತಿಳಿದುಕೊಂಡವರಿಗೆ ಅವನ್ನು ಹೆಚ್ಚು ಸುಳುವಾಗಿ ಮತ್ತು ಹೆಚ್ಚು ಚನ್ನಾಗಿ ನಡೆಸಲು ಬರುತ್ತದೆ. ಬರಹಗಳಲ್ಲಿ ಹಲವು ಬಗೆಗಳಿದ್ದು, ಅವನ್ನು ಓದಿ ತಿಳಿದುಕೊಳ್ಳುವಲ್ಲಿ ಇಲ್ಲವೇ ಅಂತಹವೇ ಬರಹಗಳನ್ನು ಹೊಸದಾಗಿ ಬರೆಯುವಲ್ಲಿ ಹಲವಾರು ಬಗೆಯ ವ್ಯಾಕರಣದ ಕಟ್ಟಲೆಗಳನ್ನು ಬಳಸಬೇಕಾಗುತ್ತದೆ; ಹಾಗಾಗಿ, ಅಂತಹ ಕಟ್ಟಲೆಗಳ ತಿಳಿವು ಈ ಕೆಲಸಗಳನ್ನು ಜಾಣ್ಮೆಯಿಂದ ನಡೆಸುವಲ್ಲಿ ನೆರವಾಗದಿರದು.

ಆದರೆ, ಮೇಲೆ ಸೂಚಿಸಿದ ಹಾಗೆ, ವ್ಯಾಕರಣದ ಕಟ್ಟಲೆಗಳನ್ನು ನೇರವಾಗಿ ಕಲಿಸಹೋಗದೆ, ಓದುವ ಮತ್ತು ಬರೆಯುವ ಕೆಲಸಗಳಲ್ಲಿ ಅವು ಹೇಗೆ ನೆರವಾಗುತ್ತವೆ ಎಂಬುದನ್ನು ತೋರಿಸಿಕೊಡುವ ಮೂಲಕ ಕಲಿಸಿದಲ್ಲಿ ಮಾತ್ರ ಅವು ಮಕ್ಕಳ ಓದು-ಬರಹದ ಕಲಿಕೆಯ ಮೇಲೆ ಪರಿಣಾಮವನ್ನು ಬೀರಬಲ್ಲುವು.

ಎತ್ತುಗೆಗಾಗಿ, ಕೆಲವು ಸೊಲ್ಲು(ವಾಕ್ಯ)ಗಳ ಹುರುಳೇನೆಂಬುದನ್ನು ತಿಳಿದುಕೊಳ್ಳುವಲ್ಲಿ ಮಕ್ಕಳಿಗೆ ತೊಂದರೆಯಾಗುತ್ತಿರಬಹುದು; ಅಂತಹ ಸೊಲ್ಲುಗಳಲ್ಲಿ ಮುಕ್ಯ ಅಂಶಗಳನ್ನು ಮುಕ್ಯವಲ್ಲದ ಅಂಶಗಳಿಂದ ಬೇರ‍್ಪಡಿಸುವುದು ಹೇಗೆ ಎಂಬುದನ್ನು ಮಕ್ಕಳಿಗೆ ತೋರಿಸಿಕೊಟ್ಟಲ್ಲಿ, ಅವರು ಅವುಗಳ ಹುರುಳನ್ನು ಸುಲಬವಾಗಿ ತಿಳಿದುಕೊಳ್ಳಬಲ್ಲರು. ಆದರೆ, ಸೊಲ್ಲುಗಳಲ್ಲಿ ಮುಕ್ಯ ಅಂಶ ಯಾವುದು ಮತ್ತು ಮುಕ್ಯವಲ್ಲದ ಅಂಶ ಯಾವುದು ಎಂಬುದನ್ನು ತೋರಿಸಿಕೊಡಬೇಕಾದರೆ, ಅವನ್ನು ಹೇಗೆ ಕಟ್ಟಲಾಗಿದೆ, ಅವುಗಳ ಒಳರಚನೆಯೆಂತಹದು ಎಂಬಂತಹ ವ್ಯಾಕರಣಕ್ಕೆ ಸಂಬಂದಿಸಿರುವ ಕಟ್ಟಲೆಗಳನ್ನು ಕಲಿಸಬೇಕಾಗುತ್ತದೆ.

ಇತ್ತೀಚೆಗೆ ಹೆಚ್ಚು ಹೆಚ್ಚು ಮಂದಿ ತಿಳಿವಿಗರು ಓದು-ಬರಹದ ಕಲಿಕೆಯಲ್ಲಿ ವ್ಯಾಕರಣದ ಕೊಡುಗೆ ನಿಜಕ್ಕೂ ತುಂಬ ದೊಡ್ಡದು ಎಂಬುದನ್ನು ಕಂಡುಕೊಳ್ಳುತ್ತಿದ್ದಾರೆ. ಮಕ್ಕಳು ತಾವು ಓದಿ ತಿಳಿದುಕೊಳ್ಳಬೇಕಾಗಿರುವ ಇಲ್ಲವೇ ಬರೆಯಬೇಕಾಗಿರುವ ಸೊಲ್ಲುಗಳ ಒಳರಚನೆಯೆಂತಹದು ಎಂಬುದನ್ನು ಗಮನಿಸುವ ಹಾಗೆ ಮಾಡಿದಲ್ಲಿ ಅವರಿಗೆ ಆ ಕೆಲಸವನ್ನು ನಡೆಸಲು ಹೆಚ್ಚು ಸುಲಬವಾಗುತ್ತದೆ ಎಂಬುದನ್ನೂ ಅವರು ಕಂಡುಕೊಳ್ಳುತ್ತಿದ್ದಾರೆ.

ಇಂತಹ ತಿಳುವಳಿಕೆ ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗಿಂತಲೂ ಹಿಂದೆ ಬೀಳುವ ಮಕ್ಕಳಿಗೆ ಹೆಚ್ಚು ನೆರವಾಗುತ್ತದೆ ಎಂಬುದನ್ನೂ ಕಂಡುಕೊಳ್ಳಲಾಗಿದೆ. ಎತ್ತುಗೆಗಾಗಿ, ಮಾತಿನಲ್ಲಿ ಬರುವ ಹಾಗೆ ತುಂಡು ತುಂಡಾಗಿರುವ ಸೊಲ್ಲುಗಳು ಬರಹದಲ್ಲಿ ಬರಬಾರದು; ಅವೆಲ್ಲ ಇಡಿ ಇಡಿಯಾಗಿರಬೇಕು; ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳನ್ನಾಗಿ ಮಾತ್ರ ಬಳಸಬಹುದು ಎಂದು ಹೇಳಿಕೊಟ್ಟಾಗ, ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗೆ ತಾವೇನು ಮಾಡಬೇಕು ಎಂಬುದು ಒಡನೆಯೇ ಗೊತ್ತಾಗುತ್ತದೆ.

ಆದರೆ, ತರಗತಿಯಲ್ಲಿ ಹಿಂದೆ ಬೀಳುವ ಮಕ್ಕಳಿಗೆ ಅದು ಗೊತ್ತಾಗುವುದಿಲ್ಲ. ಅವರಿಗೆ ಅದು ಗೊತ್ತಾಗುವ ಹಾಗೆ ಮಾಡಬೇಕಿದ್ದಲ್ಲಿ, ತುಂಡು ಸೊಲ್ಲುಗಳಿಗೂ ಇಡೀ ಸೊಲ್ಲುಗಳಿಗೂ ನಡುವಿರುವ ವ್ಯತ್ಯಾಸ ಎಂತಹದು ಎಂಬುದನ್ನು, ಮತ್ತು ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳಾಗಿ ಮಾಡಿ ಬಳಸುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕಾಗುತ್ತದೆ. ಎಂದರೆ, ಇಡಿಯಾಗಿರುವ ಸೊಲ್ಲುಗಳ ಒಳರಚನೆಯ ಹಿಂದಿರುವ ವ್ಯಾಕರಣದ ಕಟ್ಟಲೆಗಳನ್ನು ಅವರಿಗೆ ವಿವರಿಸಬೇಕಾಗುತ್ತದೆ.

ಕನ್ನಡದ ಮಟ್ಟಿಗೆ ಹೇಳುವುದಾದರೆ, ಇನ್ನೊಂದು ಸಮಸ್ಯೆಯೂ ವ್ಯಾಕರಣದ ಕಲಿಕೆಯನ್ನು ಕಾಡುತ್ತಿದೆ; ಅದೇನೆಂದರೆ, ಇವತ್ತು ಕನ್ನಡ ವ್ಯಾಕರಣದ ಹೊತ್ತಗೆಗಳಲ್ಲಿ ಕಾಣಿಸಿಕೊಳ್ಳುವ ಕಟ್ಟಲೆಗಳಲ್ಲಿ ಹೆಚ್ಚಿನವನ್ನೂ ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಯಾರಿಗೂ ಸಾದ್ಯವಾಗಲಾರದು. ಯಾಕೆಂದರೆ, ಈ ವ್ಯಾಕರಣಗಳನ್ನು ಬರೆದವರು ಸಂಸ್ಕ್ರುತ ವ್ಯಾಕರಣದಲ್ಲಿದ್ದ ಕಟ್ಟಲೆಗಳನ್ನು ಹಾಗೆಯೇ ಕನ್ನಡಕ್ಕೆ ತಂದುಹಾಕಿದ್ದಾರಲ್ಲದೆ, ನಿಜಕ್ಕೂ ಕನ್ನಡ ಪದಗಳ ಇಲ್ಲವೇ ಸೊಲ್ಲುಗಳ ಬಳಕೆಯ ಹಿಂದೆ ಎಂತಹ ಕಟ್ಟಲೆಗಳು ಅಡಗಿವೆ ಎಂಬುದನ್ನು ಕಂಡುಹಿಡಿಯುವ ಮೂಲಕ ಅವನ್ನು ಬರೆದಿಲ್ಲ.

ಹಾಗಾಗಿ, ಈ ಕಟ್ಟಲೆಗಳನ್ನು ಸಂಸ್ಕ್ರುತ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಬಹುದಲ್ಲದೆ, ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಲಾರದು. ಕನ್ನಡ ಬರಹಗಳಲ್ಲಿ ಕನ್ನಡದವೇ ಆದ ಬೇರೆಯೇ ಕಟ್ಟಲೆಗಳು ಬಳಕೆಯಾಗುತ್ತವೆ; ಈ ಕಟ್ಟಲೆಗಳು ಎಂತಹವು ಎಂಬುದನ್ನು ಇವತ್ತು ಕಂಡುಹಿಡಿಯಬೇಕಾಗಿದೆ, ಮತ್ತು ಮಕ್ಕಳ ಓದು-ಬರಹದ ಕಲಿಕೆಗೆ ಅವು ಹೇಗೆ ನೆರವಾಗಬಲ್ಲುವು ಎಂಬುದನ್ನೂ ಕಂಡುಹಿಡಿಯಬೇಕಾಗಿದೆ. ಈ ಎರಡು ಕೆಲಸಗಳನ್ನು ನಡೆಸಿದ ಮೇಲಶ್ಟೇ ಮಕ್ಕಳಿಗೆ ಅವರ ಓದಿನ ಮತ್ತು ಬರಹದ ಕಲಿಕೆಯಲ್ಲಿ ನೆರವಾಗುವ ಹಾಗೆ ಕನ್ನಡ ವ್ಯಾಕರಣದ ಕಟ್ಟಲೆಗಳನ್ನು ಕಲಿಸಲು ಸಾದ್ಯವಾಗಬಲ್ಲುದು.

ಮಾತಿನ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಮತ್ತು ಅನುಬವಗಳನ್ನು ಇನ್ನೊಬ್ಬರಿಗೆ ಹೇಗೆ ತಿಳಿಸುತ್ತೇವೆ, ಮತ್ತು ಇನ್ನೊಬ್ಬರು ಬಳಸಿದ ಮಾತುಗಳಿಂದ ಅವರ ಅನಿಸಿಕೆ ಮತ್ತು ಅನುಬವಗಳು ಎಂತಹವು ಎಂಬುದು ನಮಗೆ ಹೇಗೆ ಗೊತ್ತಾಗುತ್ತದೆ ಎಂಬುದನ್ನು ವ್ಯಾಕರಣ ತಿಳಿಸುತ್ತದೆ. ಮನುಶ್ಯನಲ್ಲಿ ಮಾತ್ರವೇ ಕಾಣಿಸಿಕೊಳ್ಳುವ ಈ ಒಂದು ವಿಶಿಶ್ಟವಾದ ಅಳವಿನ ಕುರಿತಾಗಿ ಏನು ಹೇಳಬೇಕಿದ್ದರೂ ವ್ಯಾಕರಣದಲ್ಲಿ ಬಳಕೆಯಾಗುವ ಅರಿಮೆಯ ಪದಗಳನ್ನು ಬಳಸಲೇಬೇಕಾಗುತ್ತದೆ. ಹಾಗಾಗಿ, ಮಕ್ಕಳಿಗೆ ಈ ಅರಿಮೆಯ ತಿಳಿವು ದೊರಕುವಂತೆ ಮಾಡುವುದು ಬೇರೆಲ್ಲಾ ಬಗೆಯ ಅರಿಮೆ(ವಿಜ್ನಾನ)ಗಳ ತಿಳಿವು ದೊರಕುವಂತೆ ಮಾಡುವಶ್ಟೇ ಮುಕ್ಯವಾದುದು.

ಹಾಗಾಗಿ, ಅದರ ತಿಳಿವನ್ನು ಮಕ್ಕಳಿಗೆ ಯಾವಾಗ ಮತ್ತು ಹೇಗೆ ಕೊಡಿಸಬಹುದು ಎಂಬ ವಿಶಯದಲ್ಲಿ ಚರ‍್ಚೆ ನಡೆಸಬಹುದಲ್ಲದೆ, ಅದು ಬೇಕೇ ಬೇಡವೇ ಎಂಬ ವಿಶಯದಲ್ಲಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹಕ್ಕೆ ಮೇಲ್ಮೆ ಬಂದುದು ಹೇಗೆ?

ನುಡಿಯರಿಮೆಯ ಇಣುಕುನೋಟ – 14

ಮೊನ್ನೆ ಮೊನ್ನೆಯ ವರೆಗೂ ಸಮಾಜದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಕಲಿತರೆ ಸಾಕಿತ್ತು; ಉಳಿದವರೆಲ್ಲ ಅದರಿಂದ ದೂರವೇ ಉಳಿಯಬಹುದಿತ್ತು, ಮತ್ತು ಹೀಗೆ ಬರಹದಿಂದ ದೂರ ಉಳಿದುದರಿಂದಾಗಿ ಅವರಿಗೆ ಜೀವನದಲ್ಲಿ ಯಾವ ತೊಂದರೆಯೂ ಉಂಟಾಗುತ್ತಿರಲಿಲ್ಲ.

ಆದರೆ, ಇವತ್ತು ಎಲ್ಲಾ ಜನರೂ ಬರಹವನ್ನು ಕಲಿಯಬೇಕಾಗಿದೆ, ಮತ್ತು ಕಲಿತು ಬಳಸುತ್ತಿರಬೇಕಾಗಿದೆ. ಯಾಕೆಂದರೆ, ಹಾಗೆ ಮಾಡದವರಲ್ಲಿ ಹೆಚ್ಚಿನವರೂ ಇವತ್ತು ತಮ್ಮ ಜೀವನದಲ್ಲಿ ಸೋತುಹೋಗುತ್ತಿದ್ದಾರೆ. ಒಂದು ಸಮಾಜದ ಏಳಿಗೆಯಾಗಬೇಕಿದ್ದರೂ ಅದಕ್ಕೆ ಸೇರಿದ ಜನರೆಲ್ಲ ಬರಹವನ್ನು ಕಲಿಯುವುದು ಮತ್ತು ಬಳಸುವುದು ಇವತ್ತಿನ ಮಟ್ಟಿಗೆ ಅತ್ಯವಶ್ಯವಾಗಿದೆ.

ಇದುವರೆಗೂ ಇಲ್ಲದಿದ್ದ ಈ ಮೇಲ್ಮೆ ಬರಹಕ್ಕೆ ಬಂದುದು ಹೇಗೆ? ಮಿಲಿಯಗಟ್ಟಲೆ ವರ‍್ಶಗಳಿಂದಲೂ ಜನರ ನಡುವಿನ ಸಂಪರ‍್ಕಕ್ಕೆ ಕೊಂಡಿಯಾಗಿ, ಮತ್ತು ಮನಸ್ಸಿನಲ್ಲಿರುವ ಅನಿಸಿಕೆಗಳನ್ನು ಬೇರೆಯವರಿಗೆ ತಿಳಿಸಲು ಬೇಕಾಗುವ ಒಯ್ಯುಗೆಯಾಗಿ ಮಾತನ್ನೇ ಬಳಸಲಾಗುತ್ತಿತ್ತು. ಆದರೆ, ಸುಮಾರು ನಾಲ್ಕಯ್ದು ಸಾವಿರ ವರ‍್ಶಗಳಶ್ಟು ಹಿಂದೆ, ಮಾತನ್ನು ಬರಹಕ್ಕಿಳಿಸುವ ಬಗೆಯನ್ನು ಕಂಡುಹಿಡಿಯಲಾಯಿತು. ಮೊದಲಿಗೆ ಇದನ್ನು ನೆನಪಿಗೆ ನೆರವಾಗುವಂತಹ ಕೆಲಸಗಳಲ್ಲಿ ತೊಡಗಿಸಲಾಯಿತು; ಆದರೆ ಆಮೇಲೆ, ದೂರ ಇರುವವರನ್ನು ಸಂಪರ‍್ಕಿಸುವುದಕ್ಕಾಗಿಯೂ ಇದನ್ನು ಬಳಸಲು ತೊಡಗಲಾಯಿತು.

ಹೀಗಿದ್ದರೂ, ಬರಹವೆಂಬುದು ಮೊನ್ನೆ ಮೊನ್ನೆಯ ವರೆಗೂ ಕೆಲವೇ ಕೆಲವು ಜನರ ಸೊತ್ತಾಗಿ ಮಾತ್ರ ಉಳಿದಿತ್ತು, ಮತ್ತು ಕೆಲವೇ ಕೆಲವು ನುಡಿಗಳನ್ನು ಆಡುವವರಲ್ಲಿ ಮಾತ್ರ ಅದು ಬಳಕೆಯಲ್ಲಿತ್ತು. ಸುಮಾರು ಮುನ್ನೂರು-ನಾನ್ನೂರು ವರ‍್ಶಗಳಶ್ಟು ಹಿಂದೆ ಬರಹಗಳನ್ನು ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ವಿಶಯದಲ್ಲಿ ಒಂದು ದೊಡ್ಡ ಕ್ರಾಂತಿಯನ್ನೇ ಉಂಟುಮಾಡಿತು; ಅದರಲ್ಲೂ ಬರಹದಲ್ಲಿ ಬರುವ ಒಂದೊಂದು ಬರಿಗೆಗೂ ಒಂದೊಂದು ಮೊಳೆಯನ್ನು ಬಳಸಿ ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ಕ್ರಾಂತಿ ಇನ್ನಶ್ಟು ವೇಗವಾಗಿ ಹಲವಾರು ನುಡಿಗಳನ್ನು ಆವರಿಸುವ ಹಾಗೆ ಮಾಡಿತು.

ಈ ಕ್ರಾಂತಿ ನಡೆಯುವ ಮೊದಲು, ಬರಹಗಳನ್ನು ಕಯ್ಯಲ್ಲಿ ನಕಲುಮಾಡಬೇಕಾಗಿತ್ತು; ಇದು ತುಂಬಾ ತೊಡಕಿನ ಮತ್ತು ತುಂಬಾ ಸಮಯ ತಗಲುವ ಕೆಲಸವಾಗಿತ್ತು; ಕೆಲವು ಮಂದಿ ಮಾತ್ರ ಈ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದರು, ಮತ್ತು ಇದರಿಂದಾಗಿ, ಬರಹವನ್ನು ಬಳಸುವವರ ಎಣಿಕೆ ತುಂಬಾ ಕಡಿಮೆಯಾಗಿಯೇ ಉಳಿದಿತ್ತು.

ಆದರೆ, ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಮತ್ತು ಅದಕ್ಕಾಗಿ ತೊಗಲು, ತೊಗಟೆ ಮೊದಲಾದವುಗಳನ್ನು ಬಳಸುವ ಬದಲು ಕಾಗದವನ್ನು ಬಳಸಲು ತೊಡಗಿದುದರಿಂದಾಗಿ, ಅವನ್ನು ತುಂಬಾ ಕಡಿಮೆ ಬೆಲೆಗೆ ಉಂಟುಮಾಡಲು, ಮತ್ತು ತುಂಬಾ ಸುಲಬವಾಗಿ ಉಂಟುಮಾಡಲು ಸಾದ್ಯವಾಯಿತು. ಇದರಿಂದಾಗಿ, ಅವುಗಳ ಪ್ರತಿಗಳನ್ನು ಒಮ್ಮೆಗೇನೇ ಸಾವಿರಾರು ಜನರಿಗೆ ತಲುಪಿಸಲು ಸಾದ್ಯವಾಯಿತು. ಇದಲ್ಲದೆ, ಅವನ್ನು ಬಳಸುವ ಕೆಲಸವೂ ತುಂಬಾ ಸುಲಬವಾಯಿತು.

ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಬರಹಗಳಲ್ಲಿ ಬಳಕೆಯಾಗುವ ಬರಿಗೆ(ಅಕ್ಶರ)ಗಳು, ಪದಗಳು, ಸೊಲ್ಲುಗಳು ಮೊದಲಾದುವೆಲ್ಲ ಎಲ್ಲಾ ಕಡೆಗಳಲ್ಲೂ ಹೆಚ್ಚುಕಡಿಮೆ ಒಂದೇ ರೂಪದಲ್ಲಿ ಉಳಿಯುವಂತಾಯಿತು, ಮತ್ತು ಇದರಿಂದಾಗಿ, ನಾಡಿನ ಒಂದು ಮೂಲೆಯಲ್ಲಿ ಉಂಟುಮಾಡಿದ ಬರಹವನ್ನು ಎಲ್ಲಾ ಕಡೆಗಳಲ್ಲಿರುವ ಜನರೂ ಸುಲಬವಾಗಿ ಓದಿ ತಿಳಿದುಕೊಳ್ಳುವಂತೆ ಮಾಡಲು ಸಾದ್ಯವಾಯಿತು.

ಹಿಂದಿನ ಕಾಲದಲ್ಲಿ ಬರಹಗಳನ್ನು ಯಾರಾದರೂ ಒಬ್ಬರು ದೊಡ್ಡದಾಗಿ ಓದುತ್ತಿದ್ದರು, ಮತ್ತು ಉಳಿದವರು ಅವರ ಸುತ್ತಲೂ ಕುಳಿತು ಅದನ್ನು ಕೇಳುತ್ತಿದ್ದರು; ಎಲ್ಲರಿಗೂ ತಮ್ಮವೇ ಆದ ಬರಹಗಳ ಪ್ರತಿಗಳು ದೊರೆಯತೊಡಗಿದ ಮೇಲೆ, ಅವನ್ನು ಗಟ್ಟಿಯಾಗಿ ಓದುವ ಬದಲು ಮನಸ್ಸಿನಲ್ಲೇನೇ ಓದುವ ಬಗೆ ಬಳಕೆಗೆ ಬಂತು. ಇದಕ್ಕನುಗುಣವಾಗಿ, ಬರಹಗಳ ಬಗೆಗಳಲ್ಲೂ ಹಲವು ಮಾರ‍್ಪಾಡುಗಳು ನಡೆದುವು.

ದಿನಪತ್ರಿಕೆ, ವಾರಪತ್ರಿಕೆ ಮೊದಲಾದುವನ್ನು ಅಚ್ಚುಹಾಕಿಸಿ, ಅವು ಒಮ್ಮೆಗೇನೇ ಲಕ್ಶಾಂತರ ಜನರನ್ನು ತಲಪುವ ಹಾಗೆ ಮಾಡಲಾಯಿತು, ಮತ್ತು ಬರಹವನ್ನು ಕಲಿಯುವವರಿಗೆಲ್ಲ ಅವರದೇ ಆದ ಕಲಿಕೆಯ ಪುಸ್ತಕಗಳು ಸಿಗುವಂತೆ ಮಾಡಲಾಯಿತು. ಬರಹದ ಬಳಕೆಯಲ್ಲಿ ಮತ್ತು ಕಲಿಕೆಯಲ್ಲಿ ಇಂತಹ ಹಲವಾರು ಮಾರ‍್ಪಾಡುಗಳು ಅವನ್ನು ಕಾಗದದಲ್ಲಿ ಅಚ್ಚುಹಾಕಲು ತೊಡಗಿದ ಮೇಲೆ ನಡೆದುಹೋಗಿವೆ. ಹಲವಾರು ಒಳನುಡಿಗಳನ್ನಾಡುವ ಜನರ ನಡುವೆ ಒಂದೇ ಬಗೆಯ ಬರಹದ ನುಡಿ ಬಳಕೆಗೆ ಬಂದಿರುವುದಕ್ಕೂ ಈ ರೀತಿ ಬರಹಗಳನ್ನು ಅಚ್ಚುಹಾಕಲು ತೊಡಗಿದುದೇ ಕಾರಣವಾಗಿದೆ.

ಬರಹಕ್ಕೆ ಈ ರೀತಿ ಹೆಚ್ಚು ಹೆಚ್ಚು ಮೇಲ್ಮೆ ಸಿಗುತ್ತಿದ್ದಂತೆ, ಜನರ ನಡವಳಿಕೆಗಳಲ್ಲೂ ಹಲವು ಬಗೆಯ ಮಾರ‍್ಪಾಡುಗಳು ಉಂಟಾಗತೊಡಗಿದುವು: ಜನರು ತಿಳಿವನ್ನು ಕೂಡಿಡುವ ಬಗೆ ಬೇರಾಯಿತು; ಮೊದಲಿಗೆ ಎಲ್ಲವನ್ನೂ ನೆನಪಿನಲ್ಲಿಯೇ ಉಳಿಸಿಕೊಳ್ಳಬೇಕಾಗಿತ್ತು; ಆದರೆ ಬರಹ ಹೆಚ್ಚು ಹೆಚ್ಚು ಬಳಕೆಗೆ ಬಂದಂತೆ, ತಿಳಿವನ್ನು ಹಲವು ಬಗೆಯ ಬರಹಗಳಲ್ಲಿ ಮತ್ತು ಪುಸ್ತಕಗಳಲ್ಲಿ ಕೂಡಿಡಲಾಯಿತು.

ಗಾದೆಗಳು, ಹಾಡುಗಳು, ಸೂತ್ರಗಳು, ನೀತಿಕತೆಗಳು ಮೊದಲಾದುವೆಲ್ಲ ತಿಳಿವನ್ನು ನೆನಪಿನಲ್ಲಿ ಕೂಡಿಡಲು ಬೇಕಾಗುವಂತಹ ಬಗೆಗಳು; ಬರಹಗಳಲ್ಲಿ ಕೂಡಿಡುವುದಕ್ಕೆ ಇಂತಹ ನೆನಪಿಸಲು ನೆರವಾಗುವ ಬಗೆಗಳು ಬೇಕಾಗುವುದಿಲ್ಲ. ಇದಕ್ಕೆ ಬದಲು, ಪುಸ್ತಕಗಳಲ್ಲಿ ಕಾಣಿಸುವಂತಹ ತಲೆಬರಹಗಳು, ಪಸುಗೆಗಳು, ದಪ್ಪಬರಿಗೆ, ತೆಳುಬರಿಗೆ ಮೊದಲಾದ ಬರಿಗೆರೂಪಗಳು, ಪಟ್ಟಿಗಳು, ಸುಟ್ಟಗೆಗಳು ಮೊದಲಾದ ಓದುವಲ್ಲಿ ನೆರವಾಗುವ ಬೇರೆಯೇ ಹಲವು ಬಗೆಗಳನ್ನು ಬಳಕೆಗೆ ತರಬೇಕಾಯಿತು.

ತಿಳಿವನ್ನು ಕೂಡಿಡುವ ಬಗೆಯಲ್ಲಿ ಮಾರ‍್ಪಾಡಾದುದರಿಂದಾಗಿ, ತಿಳಿವಿಗೂ ವಯಸ್ಸಿಗೂ ನಡುವಿದ್ದ ಸಂಬಂದ ಇಲ್ಲವಾಯಿತು; ಯಾವ ವಿಶಯದಲ್ಲಿ ಬೇಕಿದ್ದರೂ ಪುಸ್ತಕಗಳನ್ನು ಓದುವ ಮೂಲಕ, ದೊಡ್ಡವರಿಗಿಂತ ಹೆಚ್ಚು ತಿಳಿವನ್ನು ಚಿಕ್ಕವರು ಪಡೆಯಬಲ್ಲವರಾದರು. ಇದಲ್ಲದೆ, ಎಶ್ಟು ತಿಳಿವನ್ನು ಮತ್ತು ಎಶ್ಟು ಬಗೆಯ ತಿಳಿವನ್ನು ಪುಸ್ತಕಗಳಲ್ಲಿ ಕೂಡಿಡಬಲ್ಲೆವು ಎಂಬುದಕ್ಕೆ ಒಂದು ಮಿತಿಯೇ ಇಲ್ಲದಿರುವ ಹಾಗಾಯಿತು. ಹೊಸ ಹೊಸ ತಿಳಿವುಗಳನ್ನು ಪಡೆಯುತ್ತಿರುವಾಗಲೂ ಹಳೆಯವನ್ನು ಕಳೆದುಕೊಳ್ಳದೆ ಉಳಿಸಿಕೊಳ್ಳಲು ಸಾದ್ಯವಾಯಿತು.

ತಿಳಿವನ್ನು ಬರಹರೂಪದಲ್ಲಿ ಉಳಿಸಿಕೊಳ್ಳಲು ತೊಡಗಿದುದರಿಂದಾಗಿ ಜನರು ಅದನ್ನೊಂದು ವಸ್ತುವಿನ ಹಾಗೆ ಕಾಣಲು ತೊಡಗಿದರು, ಮತ್ತು ಅದನ್ನು ಕಂಡುಹಿಡಿದವರು ಅದರ ಮೇಲೆ ತಮ್ಮ ಒಡೆತನವನ್ನು ಹೇರಲು ತೊಡಗಿದರು. ತಾವು ಕಂಡುಹಿಡಿದ ತಿಳಿವನ್ನು ಒಂದು ಪುಸ್ತಕದ ರೂಪದಲ್ಲಿ ಅಚ್ಚುಹಾಕಿಸಿ, ಅದನ್ನು ಸಾವಿರಾರು ಜನರಿಗೆ ತಲಪಿಸುವ ಮೂಲಕ, ಕೆಲವರು ಸಾಕಶ್ಟು ಹಣವನ್ನೂ ಕಲೆಹಾಕಿದರು.

ತಿಳಿವು ಎಂಬುದು ಬರಹವನ್ನು ಬಳಸಲು ತಿಳಿಯದವರಲ್ಲಿ ಅವರು ಮಾಡುವ ಕೆಲಸದ ಅಂಗವಾಗಿರುತ್ತದೆ; ಕೆಲಸ ಮಾಡಿದ ಅನುಬವವೇ ಅವರಲ್ಲಿ ತಿಳಿವಿನ ರೂಪದಲ್ಲಿರುತ್ತದೆ; ಅದನ್ನು ಅವರು ಆ ಕೆಲಸದಿಂದ ಬೇರ‍್ಪಡಿಸಿ ಪರಿಶೀಲಿಸಲಾರರು; ಅದರ ಕುರಿತಾಗಿ ಅವರು ಆಡಬಲ್ಲ ಮಾತುಗಳೂ ಅದನ್ನು ಬಳಸಿ ನಡೆಸಬಲ್ಲ ಕೆಲಸದೊಂದಿಗೆ ಹೆಣೆದುಕೊಂಡಿರುತ್ತವೆ.

ಇದಕ್ಕೆ ಬದಲು, ಕಾಗದದಲ್ಲಿ ಬರೆದ ಇಲ್ಲವೇ ಅಚ್ಚುಹಾಕಿದ ತಿಳಿವು ಅದನ್ನು ಬಳಸಿ ನಡೆಸುವ ಕೆಲಸಕ್ಕಿಂತ ಬೇರಾಗಿ ಉಳಿಯುತ್ತದೆ; ಅದನ್ನು ತಿರುತಿರುಗಿ ಓದಿ, ಆ ತಿಳಿವು ಸರಿಯೋ ತಪ್ಪೋ ಎಂದು ವಿಮರ‍್ಶಿಸಲು ಬರುತ್ತದೆ. ಹಾಗಾಗಿ, ಬರಹವನ್ನು ಬಳಸುವವರಿಗೂ ಅವನ್ನು ಬಳಸದವರಿಗೂ ನಡುವೆ ಅವರು ಆಲೋಚಿಸುವ ಬಗೆಯಲ್ಲೇ ಹಲವು ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ.

ನಿಜಕ್ಕೂ ಬರಹ ಬಾರದವರು ಬರಹ ಬಲ್ಲವರಿಗಿಂತ ಜಾಣ್ಮೆಯಲ್ಲಾಗಲಿ, ಬುದ್ದಿವಂತಿಕೆಯಲ್ಲಾಗಲಿ ಕಡಿಮೆಯೇನಲ್ಲ; ಬರಹ ಬಲ್ಲವರಶ್ಟೇ ಜಾಣ್ಮೆಯಿಂದ ಮತ್ತು ಅವರಶ್ಟೇ ಚನ್ನಾಗಿ ಬರಹ ಬಾರದವರೂ ತಮ್ಮ ಜೀವನವನ್ನು ನಡೆಸಬಲ್ಲರು. ಆದರೆ, ಈ ಎರಡು ಬಗೆಯ ಜನರೂ ಒಂದೇ ನಾಡಿನಲ್ಲಿ ನೆಲೆಸಿದ್ದು, ಆ ನಾಡಿನ ಆಡಳಿತವನ್ನು ನಡೆಸುವ ಮತ್ತು ಅದರ ಕುರಿತಾಗಿ ತೀರ‍್ಮಾನಗಳನ್ನು ಕಯ್ಗೊಳ್ಳುವ ಮಂದಿಯೆಲ್ಲ ಬರಹಬಲ್ಲವರಾಗಿದ್ದಲ್ಲಿ, ಆ ನಾಡಿನಲ್ಲಿರುವ ಬರಹ ಬಾರದ ಜನರಲ್ಲಿ ಹೆಚ್ಚಿನವರೂ ತಮ್ಮ ಜೀವನದಲ್ಲಿ ಸೋತುಹೋಗುತ್ತಲೇ ಇರಬೇಕಾಗುತ್ತದೆ.

ಅದರಲ್ಲೂ ನಮ್ಮ ನಾಡಿನಲ್ಲಿರುವ ಹಾಗೆ ಆಡಳಿತವು ಮಂದಿಯಾಳ್ವಿಕೆಯದಾಗಿದ್ದಲ್ಲಿ, ಎಲ್ಲಾ ಮಂದಿಯೂ ಅದರಲ್ಲಿ ಸರಿಯಾಗಿ ತಮ್ಮ ಹೊಣೆಯನ್ನರಿತು ಪಾಲ್ಗೊಳ್ಳಬೇಕಾಗುತ್ತದೆ; ಹಾಗಾಗಿ, ಒಂದು ನಾಡಿನ ಮಂದಿಯಾಳ್ವಿಕೆ (ಪ್ರಜಾಪ್ರಬುತ್ವ) ಚನ್ನಾಗಿ ನಡೆಯಬೇಕಿದ್ದಲ್ಲಿ, ಎಲ್ಲರಿಗೂ ಬರಹದ ತಿಳಿವಿರುವುದು ಅತ್ಯವಶ್ಯ. ಇಲ್ಲವಾದರೆ, ಆ ನಾಡಿನಲ್ಲಿರುವ ಬರಹ ಬಾರದವರು ತಮ್ಮ ಏಳಿಗೆಗೆ ಮಾತ್ರವಲ್ಲದೆ ಇಡೀ ನಾಡಿನ ಏಳಿಗೆಗೂ ತೊಡಕಾಗುತ್ತಾರೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಹೆಚ್ಚು ಬರಿಗೆಗಳಿರುವುದು ಸಿರಿತನವಲ್ಲ

ನುಡಿಯರಿಮೆಯ ಇಣುಕುನೋಟ – 13

ಕನ್ನಡ ಪದಗಳನ್ನು ಹೆಚ್ಚಿನವರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ನಮಗೆ ಬೇಕಾಗುವುದು ಒಟ್ಟು 31 ಬರಿಗೆಗಳು ಮಾತ್ರ. ಆದರೆ, ಇವತ್ತು ನಾವು ಕನ್ನಡ ಬರಹಗಳಲ್ಲಿ 48 (ಇಲ್ಲವೇ ಅದಕ್ಕಿಂತಲೂ ಹೆಚ್ಚು) ಬರಿಗೆಗಳನ್ನು ಬಳಸುತ್ತಿದ್ದೇವೆ. ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಟ್ಟಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ಸುಲಬವಾಗಬಲ್ಲುದು.

ಇದನ್ನು ವಿರೋದಿಸುವವರಲ್ಲಿ ಕೆಲವರ ವಾದ ಹೀಗಿರುತ್ತದೆ: ಕನ್ನಡ ಬರಹದಲ್ಲಿ ಈ ರೀತಿ ಹೆಚ್ಚು ಬರಿಗೆಗಳಿರುವುದು ಅದರ ಶ್ರೀಮಂತಿಕೆ; ಅವನ್ನು ಕಳೆದುಕೊಳ್ಳುವುದೆಂದರೆ, ಕನ್ನಡ ಬರಹವನ್ನು ಬಡತನಕ್ಕೆ ನೂಕಿದ ಹಾಗೆ, ಮತ್ತು ಅದರ ಸಂಸ್ಕ್ರುತಿಯನ್ನು ನಾಶಮಾಡಿದ ಹಾಗೆ.

ಆದರೆ, ಈ ವಾದ ನಿಜಕ್ಕೂ ಸರಿಯಲ್ಲ; ಪದಗಳನ್ನು ಓದುವ ಹಾಗೆಯೇ ಬರೆಯಲು ಎಶ್ಟು ಬರಿಗೆಗಳು ಬೇಕಾಗುತ್ತವೆಯೋ ಅಶ್ಟನ್ನು ಮಾತ್ರ ಉಳಿಸಿಕೊಂಡಿರುವ ಬರಹವೇ ತುಂಬಾ ಒಳ್ಳೆಯ ಬರಹವೆಂದೆನಿಸುತ್ತದೆ. ಬೇಕಾದುದಕ್ಕಿಂತ ಹೆಚ್ಚು ಬರಿಗೆಗಳನ್ನು ಬಳಸುವ ಬರಹವನ್ನು ಕಲಿಯುವುದೂ ಕಶ್ಟ, ಬಳಸುವುದೂ ಕಶ್ಟ.

ಹಳೆಗನ್ನಡದಲ್ಲಿ ಱ ಮತ್ತು ೞಗಳೆಂಬ ಎರಡು ಹೆಚ್ಚಿನ ಬರಿಗೆಗಳಿದ್ದುವು; ಆ ಕಾಲದಲ್ಲಿ ರ-ಱ ಮತ್ತು ಳ-ೞಗಳ ನಡುವೆ ಓದಿನಲ್ಲಿ ವ್ಯತ್ಯಾಸವಿದ್ದ ಕಾರಣ, ಅವನ್ನು ಬರಹದಲ್ಲಿ ಬಳಸುತ್ತಿದ್ದುದು ಹಳೆಗನ್ನಡದ ಮಟ್ಟಿಗೆ ಸಿರಿತನವಾಗಿತ್ತು; ಆದರೆ, ಇವತ್ತು ನಾವು ಅವೆರಡು ಬರಿಗೆಗಳನ್ನೂ ಬಿಟ್ಟುಕೊಟ್ಟಿದ್ದೇವೆ; ಯಾಕೆಂದರೆ, ನಮ್ಮ ಓದಿನಲ್ಲಿ ಅವುಗಳ ನಡುವಿನ ವ್ಯತ್ಯಾಸ ಇಲ್ಲವಾಗಿದೆ.

ಈ ಹೆಚ್ಚಿನ ಬರಿಗೆಗಳಿರುವುದು ಸಿರಿತನವೆಂದು, ಇಲ್ಲವೇ ಕನ್ನಡ ಬರಹದ ಸಂಸ್ಕ್ರುತಿಯೆಂದು ಅವನ್ನು ಇವತ್ತಿಗೂ ಉಳಿಸಿಕೊಂಡಿದ್ದಲ್ಲಿ, ನಮ್ಮ ಓದಿನಲ್ಲಿಲ್ಲದ ಈ ಎರಡು ಬಗೆಯ ವ್ಯತ್ಯಾಸಗಳನ್ನು ಬರಹದಲ್ಲಿ ಕಾಣಿಸುವ ಒಂದು ದೊಡ್ಡ ತೊಡಕು ನಮ್ಮದಾಗುತ್ತಿತ್ತು. ಕರೆ ‘ಬರಹೇಳು’, ಕರೆ ‘ಹಾಲು ಕರೆ’, ಊರು ‘ಹಳ್ಳಿ’, ಊರು ‘ನಿಲ್ಲಿಸು’, ತೆರೆ ‘ಕಡಲಿನ ತೆರೆ’, ತೆರೆ ‘ಬಾಗಿಲು ತೆರೆ’ ಎಂಬಂತಹ ಹಲವಾರು ಪದಗಳನ್ನು ಬರೆಯುವಾಗ, ಯಾವ ಪದದಲ್ಲಿ ರಕಾರವನ್ನು ಬಳಸಬೇಕು, ಮತ್ತು ಯಾವುದರಲ್ಲಿ ಱಕಾರವನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು. ಯಾಕೆಂದರೆ, ಮೇಲಿನ ಪದಜೋಡಿಗಳಲ್ಲಿ ರಕಾರವನ್ನು ಮೊದಲನೆಯದರಲ್ಲೂ ಱಕಾರವನ್ನು ಎರಡನೆಯದರಲ್ಲೂ ಬಳಸಬೇಕಾಗುತ್ತಿತ್ತು.

ಇದೇ ರೀತಿಯಲ್ಲಿ, ಉಳಿ ‘ಕೆತ್ತುವ ಉಳಿ’, ಉಳಿ ‘ ಮನೆಯಲ್ಲಿ ಉಳಿ’, ಎಳೆ ‘ಎಳತು’, ಎಳೆ ‘ಎಳೆದಾಡು’, ಬಳಸು ‘ನೇರವಲ್ಲದ’, ಬಳಸು ‘ಉಪಯೋಗಿಸು’ ಎಂಬಂತಹ ಬೇರೆ ಹಲವಾರು ಪದಜೋಡಿಗಳಲ್ಲಿ ಳಕಾರವನ್ನು ಯಾವ ಪದದಲ್ಲಿ ಬಳಸಬೇಕು ಮತ್ತು ೞಕಾರವನ್ನು ಯಾವ ಪದದಲ್ಲಿ ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು (ಎರಡನೆಯ ಪದದಲ್ಲಿ ೞಕಾರವಿತ್ತು).

ಹೊಸಗನ್ನಡವನ್ನು ಬಳಕೆಗೆ ತಂದವರು ಈ ಸಿರಿತನದ ಇಲ್ಲವೇ ಸಂಸ್ಕ್ರುತಿಯ ಹೊರೆಯನ್ನು ನಮ್ಮ ಮೇಲೆ ಹೊರಿಸ ಹೋಗದೆ ಒಂದು ದೊಡ್ಡ ಉಪಕಾರವನ್ನೇ ಮಾಡಿದ್ದಾರೆ. ಆದರೆ, ಸಂಸ್ಕ್ರುತದಿಂದ ಬಂದ ಎರವಲು ಪದಗಳ ಮಟ್ಟಿಗೆ ಮಾತ್ರ, ಅವರು ಇಂತಹದೇ ಇನ್ನೊಂದು ಬಗೆಯ ತೊಡಕನ್ನು ಇಲ್ಲವಾಗಿಸದೆ ಹಾಗೆಯೇ ಉಳಿಸಿದ್ದಾರೆ. ಸಂಸ್ಕ್ರುತದ ವಿಶಯವಾಗಿ ಅವರಿಗಿದ್ದ ಮೇಲರಿಮೆಯೇ ಇದಕ್ಕೆ ಕಾರಣ.

ಈ ಎರವಲು ಪದಗಳಲ್ಲಿ ಬರುವ ರು-ಋ, ಶ-ಷ, ಅಲ್ಪಪ್ರಾಣ-ಮಹಾಪ್ರಾಣ ಮೊದಲಾದವುಗಳ ನಡುವಿನ ವ್ಯತ್ಯಾಸ ಹೆಚ್ಚಿನ ಕನ್ನಡಿಗರ ಓದಿನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಹಾಗಾಗಿ, ಅವನ್ನು ಬರಹದಲ್ಲಿ ಕಾಣಿಸಬೇಕಿದ್ದರೆ, ಯಾವ ಪದದಲ್ಲಿ ಯಾವುದನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ. ಹಳೆಗನ್ನಡದ ರ-ಱ ಮತ್ತು ಳ-ೞ ವ್ಯತ್ಯಾಸಗಳ ಹಾಗೆಯೇ ಇವೂ ಕೂಡ ಕನ್ನಡ ಬರಹವನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ಹೆಚ್ಚಿನ ಕನ್ನಡಿಗರಿಗೂ ಅನವಶ್ಯಕವಾಗಿ ತೊಡಕನ್ನು ಉಂಟುಮಾಡುತ್ತವೆ.

ಸಂಸ್ಕ್ರುತ ಎರವಲುಗಳಾದ ಅವಶ್ಯ-ಮನುಷ್ಯ, ವಿಶಾಲ-ಕಷಾಯ, ಕೃಶ-ಕೃಷಿ, ಶಿಶು-ವಿಷು, ನಶಿಸು-ದೂಷಿಸು, ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಶ-ಷ ವ್ಯತ್ಯಾಸ ಕಾಣಿಸುತ್ತದೆ, ಆದರೆ ಅವುಗಳ ಓದಿನಲ್ಲಿ ಕಾಣಿಸುವುದಿಲ್ಲ; ಇದೇ ರೀತಿಯಲ್ಲಿ ಬೋಧಿಸು-ಭೇದಿಸು, ವರ್ಧಿಸು-ಮರ್ದಿಸು, ವಿಧಾನ-ವಿದಾಯ, ಸಂಪಾದಿಸು-ಸಂಬಂಧಿಸು ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಕಾಣಿಸುವ ಅಲ್ಪಪ್ರಾಣ-ಮಹಾಪ್ರಾಣ ವ್ಯತ್ಯಾಸವೂ ಓದಿನಲ್ಲಿಲ್ಲ.

ಹಳೆಗನ್ನಡದ ವ್ಯತ್ಯಾಸಗಳ ಹಾಗೆ, ಓದಿನಲ್ಲಿಲ್ಲದ ಈ ಸಂಸ್ಕ್ರುತ ಎರವಲುಗಳ ನಡುವಿನ ವ್ಯತ್ಯಾಸವನ್ನೂ ಬಿಟ್ಟುಕೊಡುವ ಮೂಲಕ ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗುವ ಹಾಗೆ ಮಾಡಬೇಕಾಗಿದೆ, ಮತ್ತು ಅದು ಎಲ್ಲಾ ಕನ್ನಡಿಗರನ್ನೂ ತಲಪುವ ಹಾಗೆ ಮಾಡಬೇಕಾಗಿದೆ. ಓದಿನಲ್ಲಿ ಕಾಣಿಸಿಕೊಳ್ಳದ ಈ ಹೆಚ್ಚಿನ ಬರಿಗೆಗಳು ಕನ್ನಡ ಬರಹದ ಸಿರಿವಂತಿಕೆಯೂ ಅಲ್ಲ, ಸಂಸ್ಕ್ರುತಿಯೂ ಅಲ್ಲ. ಕನ್ನಡ ಬರಹವನ್ನು ಬಳಸುವಲ್ಲಿ ಅವು ಒಂದು ಅವಶ್ಯವಿಲ್ಲದ ಹೊರೆ ಮಾತ್ರ.

ಓದಿನಲ್ಲಿಲ್ಲದ ಬರಿಗೆ ಒಂದು ಬರಹಕ್ಕೆ ಬೇಕಾಗುವುದಿಲ್ಲವೆಂಬುದಕ್ಕೆ ಸಂಸ್ಕ್ರುತದಿಂದಲೇ ಒಂದು ಎತ್ತುಗೆಯನ್ನು ಕೊಡಬಹುದು: ಕನ್ನಡ ಬರಹದಲ್ಲಿ ಎ-ಏ ಮತ್ತು ಒ-ಓ ಎಂಬ ವ್ಯತ್ಯಾಸ ಇದೆ; ಆದರೆ, ಸಂಸ್ಕ್ರುತ ಬರಹದಲ್ಲಿ ಈ ವ್ಯತ್ಯಾಸವಿಲ್ಲ. ಆದರೆ ಈ ಕಾರಣಕ್ಕಾಗಿ, ಕನ್ನಡ ಬರಹ ಸಂಸ್ಕ್ರುತ ಬರಹಕ್ಕಿಂತ ಹೆಚ್ಚು ಶ್ರೀಮಂತವಾದುದೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಸಂಸ್ಕ್ರುತ ಪದಗಳ ಓದಿನಲ್ಲಿ ಕಾಣಿಸದಿರುವ ಈ ವ್ಯತ್ಯಾಸ ಸಂಸ್ಕ್ರುತ ಬರಹದಲ್ಲಿ ಇಲ್ಲದಿರುವುದು ಸಂಸ್ಕ್ರುತ ಬರಹದ ಸಿರಿತನವಲ್ಲದೆ ಬಡತನವಲ್ಲ.

ಪದಗಳಲ್ಲಿ ಎಶ್ಟು ಉಲಿಗಳು ಬಳಕೆಯಾಗುತ್ತವೆ, ಮತ್ತು ಯಾವ ಉಲಿಗಳು ಬಳಕೆಯಾಗುತ್ತವೆ ಎಂಬ ವಿಶಯದಲ್ಲಿ ನುಡಿಗಳು ಒಂದರಿಂದೊಂದು ತೀರಾ ಬೇರಾಗಿರಬಲ್ಲುವು. ಆಪ್ರಿಕಾದ ಬೊತ್ಸ್‌ವಾನಾದಲ್ಲಿ ಬಳಕೆಯಲ್ಲಿರುವ ಕೆಲವು ನುಡಿಗಳಲ್ಲಿ ನೂರಕ್ಕಿಂತಲೂ ಹೆಚ್ಚು ಉಲಿಗಳು ಬಳಕೆಯಲ್ಲಿದ್ದು, ಅವನ್ನು ಓದುವಂತೆ ಬರೆಯಲು ನೂರಕ್ಕಿಂತಲೂ ಹೆಚ್ಚು ಬರಿಗೆಗಳು ಬೇಕಾಗುತ್ತವೆ. ಇದಕ್ಕೆ ಬದಲು, ಪಾಪುವಾ ನ್ಯೂಗಿನಿಯ ರೋತೋಕಸ್ ಎಂಬ ನುಡಿಯಲ್ಲಿ ಹತ್ತು-ಹನ್ನೆರಡು ಉಲಿಗಳು ಮಾತ್ರ ಬಳಕೆಯಲ್ಲಿದ್ದು, ಅವನ್ನು ಓದುವ ಹಾಗೆ ಬರೆಯಲು ಹತ್ತು-ಹನ್ನೆರಡು ಬರಿಗೆಗಳು ಮಾತ್ರ ಸಾಕಾಗುತ್ತವೆ.

ಜಗತ್ತಿನಲ್ಲಿರುವ ಎಲ್ಲಾ ನುಡಿಗಳಲ್ಲೂ ಬಳಕೆಯಲ್ಲಿರುವ ಉಲಿಗಳನ್ನು ಬರೆಯಬೇಕಿದ್ದಲ್ಲಿ ನೂರಾರು ಬರಿಗೆಗಳು ಮತ್ತು ಇನ್ನೂ ಹಲವಾರು ಬಗೆಯ ಗುರುತುಗಳು ಬೇಕಾಗುತ್ತವೆ. ಹಾಗಾಗಿ, ಯಾವುದೇ ಒಂದು ನುಡಿಯಲ್ಲೂ ಬೇಕಾದುದಕ್ಕಿಂತ ಹತ್ತೋ ಇಪ್ಪತ್ತೋ ಹೆಚ್ಚು ಬರಿಗೆಗಳಿದ್ದಲ್ಲಿ, ಅವುಗಳ ನೆರವಿನಿಂದ ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವಂತೆಯೇ ಬರೆಯಲು ಬರುತ್ತದೆಯೆಂಬುದು ಪೊಳ್ಳು ವಾದ.

ನಿಜಕ್ಕೂ ಕನ್ನಡ ಬರಹದಲ್ಲಿರುವ ಈ ಹೆಚ್ಚಿನ ಬರಿಗೆಗಳು ಸಂಸ್ಕ್ರುತ ಎರವಲುಗಳನ್ನು ಮಾತ್ರ ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯಲು ನೆರವಾಗುತ್ತವೆ; ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವ ಹಾಗೆ ಬರೆಯಬೇಕಿದ್ದಲ್ಲಿ, ಅದಕ್ಕಾಗಿ ಬೇರೆಯೇ ಹೆಚ್ಚಿನ ಬರಿಗೆಗಳನ್ನು ಉಂಟುಮಾಡಿಕೊಳ್ಳಬೇಕಾಗುತ್ತದೆ. ತುಳು ನುಡಿಯ ಪದಗಳನ್ನು ಅದರಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗಿರುವ ಬರಿಗೆಗಳು ಸಾಕಾಗುವುದಿಲ್ಲ; ಇನ್ನೊಂದು ಹೆಚ್ಚಿನ ಉಕಾರ ಮತ್ತು ಇನ್ನೆರಡು ಹೆಚ್ಚಿನ ಎಕಾರಗಳು ಬೇಕಾಗುತ್ತವೆ.

ನಿಜಕ್ಕೂ ಕನ್ನಡದವೇ ಆದ ಆಡುನುಡಿಗಳನ್ನೂ ಅವುಗಳಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗ ಬಳಕೆಯಾಗುತ್ತಿರುವ ಬರಿಗೆಗಳು ಸಾಕಾಗುವುದಿಲ್ಲ; ಗುಲ್ಬರ‍್ಗ ಕನ್ನಡದಲ್ಲಿ ಬರುವ ಎರಡು ಬಗೆಯ ಅಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ, ಸುಳ್ಯದ ಗವ್ಡ ಕನ್ನಡದಲ್ಲಿ ಬರುವ ಎರಡು ಬಗೆಯ ಉಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ ಬರೆದು ತೋರಿಸಲು ಕನ್ನಡ ಬರಹದಲ್ಲಿ ಬರಿಗೆಗಳಿಲ್ಲ.

ಹಾಗಾಗಿ, ಕನ್ನಡ ಬರಹದಲ್ಲಿ ಬರುವ ಪದಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ಬೇಕಾಗುವ 31 ಬರಿಗೆಗಳನ್ನು ಮಾತ್ರ ಉಳಿಸಿಕೊಳ್ಳುವುದೇ ಜಾಣತನ; ಉಳಿದುವನ್ನೆಲ್ಲ ಹೆಚ್ಚಿನ ಕನ್ನಡಿಗರೂ ಓದಬೇಕಾಗಿರುವ ಬರಹಗಳಿಂದ ತೆಗೆದುಹಾಕಬೇಕಾಗಿದೆ, ಮತ್ತು ಹಾಗೆ ಮಾಡುವ ಮೂಲಕ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಬಳಸುವಂತೆ ಮಾಡಬೇಕಾಗಿದೆ. ಸಂಸ್ಕ್ರುತಿ, ಶ್ರೀಮಂತಿಕೆ ಎಂಬಂತಹ ದೊಡ್ಡ ದೊಡ್ಡ ಪದಗಳನ್ನು ಬಳಸಿ ಓದುಗರು ಗೊಂದಲದಲ್ಲಿ ಬೀಳುವ ಹಾಗೆ ಮಾಡುವುದರಿಂದ ಕನ್ನಡಿಗರಿಗೇನೇ ಅನ್ಯಾಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಯಾವುದು ಕನ್ನಡ ವ್ಯಾಕರಣ?

ನುಡಿಯರಿಮೆಯ ಇಣುಕುನೋಟ – 12

ಕೇಶಿರಾಜನ ಕಾಲದಿಂದಲೂ ಕನ್ನಡ ಪಂಡಿತರು ಯಾವುದನ್ನು‘ಕನ್ನಡ ವ್ಯಾಕರಣ’ ಎಂಬುದಾಗಿ ಕರೆಯುತ್ತ ಬಂದಿದ್ದಾರೋ ಅದು ನಿಜಕ್ಕೂ ಕನ್ನಡದ ವ್ಯಾಕರಣವೇ ಅಲ್ಲ; ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳು ಕನ್ನಡದಲ್ಲೂ ಇರಬಹುದು, ಇಲ್ಲವೇ ಇರಬೇಕು ಎಂಬ ತಪ್ಪು ಕಲ್ಪನೆಯಲ್ಲಿ ಆ ಕಟ್ಟಲೆಗಳನ್ನು ಕನ್ನಡದಲ್ಲಿ ಕಾಣಲು ನಡೆಸಿದ ಒಂದು ವ್ಯರ‍್ತ ಪ್ರಯತ್ನ ಮಾತ್ರ.

ನಮ್ಮ ಶಾಲೆಗಳಲ್ಲಿ ಮಕ್ಕಳಿಗೆ ಇದೇ ಕನ್ನಡದ್ದಲ್ಲದ ವ್ಯಾಕರಣವನ್ನು ಕಲಿಸಲಾಗುತ್ತಿದೆ. ಅದನ್ನು ಯಾಕೆ ‘ಕನ್ನಡ ವ್ಯಾಕರಣ’ವೆಂದು ಕರೆಯಬೇಕು ಎಂಬುದನ್ನು ಮಕ್ಕಳೂ ತಿಳಿಯಲಾರರು, ಅದನ್ನು ಕಲಿಸುವ ಮಾಸ್ತರರೂ ತಿಳಿಸಿಕೊಡಲಾರರು. ಇನ್ನು ಅದರಿಂದ ಪ್ರಯೋಜನವನ್ನೇನಾದರೂ ಪಡೆಯುವುದಂತೂ ದೂರವೇ ಉಳಿಯಿತು.

ನಿಜಕ್ಕೂ ಈ ‘ವ್ಯಾಕರಣ’ ಎಂಬುದು ಏನು ಮಾಡಬೇಕು? ಒಂದು ನುಡಿಯಲ್ಲಿ ಬರುವ ಪದಗಳ ಒಳರಚನೆ ಎಂತಹದು, ಪದಗಳನ್ನು ಬಳಸಿ ಆ ನುಡಿಯಲ್ಲಿ ಸೊಲ್ಲು(ವಾಕ್ಯ)ಗಳನ್ನು ಉಂಟುಮಾಡುವುದು ಹೇಗೆ, ಮತ್ತು ಸೊಲ್ಲುಗಳನ್ನು ಬಳಸಿ ಅದರಲ್ಲಿ ಬರಹಗಳನ್ನು ಬರೆಯುವುದು ಹೇಗೆ ಎಂಬಂತಹ ಸೊಲ್ಲುಗಳ ಕುರಿತಾಗಿರುವ ತಿಳಿವನ್ನು ಅದು ನಮಗೆ ಒದಗಿಸಬೇಕು.
ಕನ್ನಡದ ಕುರಿತಾಗಿರುವ ಇಂತಹ ತಿಳಿವನ್ನು ನಾವು ಇಲ್ಲಿ ‘ಕನ್ನಡದ ಸೊಲ್ಲರಿಮೆ’ ಎಂದು ಕರೆಯೋಣ; ಯಾಕೆಂದರೆ, ‘ಕನ್ನಡ ವ್ಯಾಕರಣ’ ಎಂಬುದಕ್ಕೆ ಇವತ್ತು ಮೇಲೆ ವಿವರಿಸಿದಂತಹ ಬೇರೆಯೇ ಹುರುಳಿದೆ.

ಪಾಣಿನಿಯೇ ಮೊದಲಾದ ಸಂಸ್ಕ್ರುತದ ಪಂಡಿತರು ಆ ನುಡಿಯಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ, ಅವುಗಳ ಹಿಂದಿರುವ ಕಟ್ಟಲೆಗಳು ಎಂತಹವು ಎಂಬುದನ್ನು ಕಂಡುಹಿಡಿದಿದ್ದರು, ಮತ್ತು ಅಂತಹ ಕಟ್ಟಲೆಗಳನ್ನು ಒಟ್ಟುಗೂಡಿಸಿ, ಅದನ್ನು ‘ಸಂಸ್ಕ್ರುತ ವ್ಯಾಕರಣ’ ಎಂಬುದಾಗಿ ಕರೆದಿದ್ದರು; ಅಂತಹದೇ ಕೆಲಸವನ್ನು ಇವತ್ತು ನಾವು ಕನ್ನಡದಲ್ಲಿ ನಡೆಸಬೇಕಾಗಿದೆ.
ಸೊಲ್ಲುಗಳನ್ನು ಕಟ್ಟುವ ಬಗೆ ಸಂಸ್ಕ್ರುತದಲ್ಲಿರುವುದಕ್ಕಿಂತ ಕನ್ನಡದಲ್ಲಿ ತೀರ ಬೇರಾಗಿದೆ; ಹಾಗಾಗಿ, ಸಂಸ್ಕ್ರುತ ವ್ಯಾಕರಣದಲ್ಲಿ ಬರುವ ಕಟ್ಟಲೆಗಳಿಗಿಂತ ತೀರ ಬೇರಾಗಿರುವ ಕಟ್ಟಲೆಗಳು ‘ಕನ್ನಡದ ಸೊಲ್ಲರಿಮೆ’ಯಲ್ಲಿ ಬರಬೇಕಾಗುತ್ತದೆ.

ಸಂಸ್ಕ್ರುತದಲ್ಲಿ ಎರಡು (ಇಲ್ಲವೇ ಹೆಚ್ಚು) ಪದಗಳನ್ನು ಒಟ್ಟುಸೇರಿಸಿ ಹೊಸಪದವನ್ನು ಉಂಟುಮಾಡುವ ಹೊಲಬನ್ನು ‘ಸಮಾಸ’ ಎಂಬುದಾಗಿ ಕರೆಯಲಾಗುತ್ತದೆ; ನಾಮಪದಗಳನ್ನು ಮಾತ್ರ ಈ ರೀತಿ ಸಂಸ್ಕ್ರುತದಲ್ಲಿ ಒಟ್ಟುಸೇರಿಸಲು ಬರುತ್ತದೆ. ಹಾಗಾಗಿ, ಒಟ್ಟುಸೇರಿಸಿದ ಪದಗಳಲ್ಲಿ ಯಾವುದು ಮುಕ್ಯ ಎಂಬುದರ ಮೇಲೆ ಈ ಸಮಾಸಗಳನ್ನು ತತ್ಪುರುಶ (ಎರಡನೆಯದು ಮುಕ್ಯ), ಅವ್ಯಯೀಬಾವ (ಮೊದಲನೆಯದು ಮುಕ್ಯ), ದ್ವಂದ್ವ (ಎರಡೂ ಮುಕ್ಯ) ಮತ್ತು ಬಹುವ್ರೀಹಿ (ಎರಡೂ ಮುಕ್ಯವಲ್ಲ, ಬೇರೊಂದು ಪದ ಮುಕ್ಯ) ಎಂಬ ನಾಲ್ಕು ಬಗೆಗಳಲ್ಲಿ ಗುಂಪಿಸಬಹುದೆಂದು ಸಂಸ್ಕ್ರುತ ವ್ಯಾಕರಣಗಳು ಹೇಳುತ್ತವೆ.

ಆದರೆ, ಕನ್ನಡದಲ್ಲಿ ಎರಡು ಪದಗಳನ್ನು ಒಟ್ಟುಸೇರಿಸಿ ಹೊಸದೊಂದು ಪದವನ್ನು ಉಂಟುಮಾಡುವ ಬಗೆ ಇದರಿಂದ ತೀರ ಬೇರಾದುದು. ನಾಮಪದ, ಕ್ರಿಯಾಪದ, ಮತ್ತು ಗುಣಪದಗಳೆಂಬ ಮೂರು ಬಗೆಯ ಪದಗಳನ್ನು ಇಂತಹ ಹೊಸಪದಗಳ ಮೊದಲನೆಯ ಪದವಾಗಿ ಬಳಸಲು ಬರುತ್ತದೆ; ಅವುಗಳ ಎರಡನೆಯ ಪದ ಮಾತ್ರ ಯಾವಾಗಲೂ ಹೆಸರುಪದವಾಗಿರುತ್ತದೆ.

ಕಯ್ಮಗ್ಗ, ಬಯಲಾಟ, ನೆಲಗಡಲೆ ಎಂಬಂತಹ ಪದಗಳಲ್ಲಿ ಎರಡು ನಾಮಪದಗಳು ಒಟ್ಟುಸೇರಿವೆ; ಕಡೆಗೋಲು, ಸಿಡಿಮದ್ದು, ಬಿಚ್ಚುಕತ್ತಿ ಎಂಬಂತಹ ಪದಗಳಲ್ಲಿ ಕ್ರಿಯಾಪದ ಮತ್ತು ನಾಮಪದಗಳು ಒಟ್ಟುಸೇರಿವೆ (ಕಡೆ, ಸಿಡಿ ಮತ್ತು ಬಿಚ್ಚು ಎಂಬವು ಕ್ರಿಯಾಪದಗಳು); ಬಿಸಿನೀರು, ದೊಡ್ಡಮ್ಮ, ಬೆಳ್ಳುಳ್ಳಿ ಎಂಬಂತಹ ಪದಗಳಲ್ಲಿ ಗುಣಪದ ಮತ್ತು ನಾಮಪದಗಳು ಒಟ್ಟುಸೇರಿವೆ.
ಹಾಗಾಗಿ, ಕನ್ನಡದಲ್ಲಿ ಬರುವ ‘ಸಮಾಸ’ ಯಾವ ಬಗೆಯದು ಎಂಬುದನ್ನು ತಿಳಿಯಬೇಕಿದ್ದಲ್ಲಿ ಅಂತಹ ಹೊಸಪದಗಳಲ್ಲಿ ಮೊದಲಿಗೆ ಯಾವ ಬಗೆಯ ಪದ ಬಂದಿದೆ ಎಂಬುದನ್ನು ತಿಳಿಯಬೇಕಲ್ಲದೆ, ಸಂಸ್ಕ್ರುತದ ಹಾಗೆ ಯಾವ ಪದ ಮುಕ್ಯ ಎಂಬುದನ್ನಲ್ಲ.

ಇಂಗ್ಲಿಶ್‌ನಂತಹ ಬೇರೆ ನುಡಿಗಳಿಂದ ಹೊಸ ಹೊಸ ವಿಶಯಗಳನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕಾಗಿ ಹಲವಾರು ಹೊಸ ಪದಗಳನ್ನು ಕನ್ನಡದಲ್ಲಿ ಉಂಟುಮಾಡಿಕೊಳ್ಳಬೇಕಾಗುತ್ತದೆ. ನಿಜಕ್ಕೂ ಕನ್ನಡ ಪದಗಳ ಒಳರಚನೆಯೆಂತಹದು ಎಂಬುದನ್ನು ತಿಳಿದವರು ಮಾತ್ರ ಈ ಕೆಲಸವನ್ನು ಸರಿಯಾಗಿ ನಡೆಸಬಲ್ಲರು.

ಸಂಸ್ಕ್ರುತ ಪದಗಳ ಒಳರಚನೆಯೇ ಕನ್ನಡ ಪದಗಳಿಗೂ ಇದೆ ಎಂಬ ತಪ್ಪು ತಿಳಿವನ್ನು ‘ಕನ್ನಡ ವ್ಯಾಕರಣ’ಗಳಿಂದ ಪಡೆದಿರುವ ಕನ್ನಡ ಪಂಡಿತರಿಗೆ ಇಂತಹ ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡುವುದು ಹೇಗೆ ಎಂಬುದು ಗೊತ್ತೇ ಇರುವುದಿಲ್ಲ. ಹಾಗಾಗಿ, ಹೊಸಪದಗಳು ಬೇಕಾದಾಗಲೆಲ್ಲ ಅವರು ಅವನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡದೊಳಗೆ ತುರುಕುತ್ತಾರೆ, ಮತ್ತು ಸಂಸ್ಕ್ರುತದ ನೆರವಿಲ್ಲದೆ ಕನ್ನಡದಲ್ಲಿ ಹೊಸಪದಗಳನ್ನು ಉಂಟುಮಾಡಲು ಸಾದ್ಯವೇ ಇಲ್ಲ ಎಂಬ ತಪ್ಪು ತೀರ‍್ಮಾನಕ್ಕೆ ಬರುತ್ತಾರೆ.

ಕ್ರಿಯಾಪದಗಳನ್ನು ನಾಮಪದಗಳೊಂದಿಗೆ ಸೇರಿಸಿ ಹೊಸಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಲು ಬರುವುದಿಲ್ಲವಾದರೂ ಕನ್ನಡದಲ್ಲಿ ಬರುತ್ತದೆ ಎಂಬ ಕನ್ನಡದ್ದೇ ಆದ ಸೊಲ್ಲರಿಮೆಯ ಕಟ್ಟಲೆಯನ್ನು ತಿಳಿದವರಿಗೆ ನೂರಾರು ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಇಂಗುಗುಂಡಿ, ಇಡುಗಂಟು, ಇಳಿನೀರು, ಉಜ್ಜುಗಾಯ, ಉಬ್ಬುಗನ್ನಡಿ, ಕಟ್ಟುಪಟ್ಟಿ, ಕರೆಸಾಲ, ತಡೆಯೋಟ, ತೇಲುಮನೆ, ತಳ್ಳುಗುಂಡಿ ಮೊದಲಾದ ಇಂತಹ ಪದಗಳು ಕನ್ನಡ ಬರಹದಲ್ಲೂ ತುಂಬಾ ಚನ್ನಾಗಿ ಹೊಂದಿಕೊಳ್ಳುತ್ತವೆ.

ಕನ್ನಡದ ಆಡುನುಡಿಗಳಲ್ಲಿಯೂ ಈ ಹೊಲಬನ್ನು ಬಳಸಿ ಉಂಟುಮಾಡಿರುವ ತುಂಬುಕಡಬು, ಬಿಚ್ಚೋಲೆ, ತೂಗುದೀಪ ಎಂಬಂತಹ ಹಲವಾರು ಪದಗಳು ಬಳಕೆಯಲ್ಲಿವೆ; ಆದರೆ, ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳೇ ಕನ್ನಡದಲ್ಲೂ ಇವೆಯೆಂಬುದಾಗಿ ಬ್ರಮಿಸುವ ‘ಕನ್ನಡ ವ್ಯಾಕರಣ’ಗಳಿಂದಾಗಿ ದಾರಿತಪ್ಪಿರುವ ಕನ್ನಡ ಪಂಡಿತರು ತಮ್ಮಲ್ಲಿ ಸ್ವಾಬಾವಿಕವಾಗಿ ಬೆಳೆದುಬಂದಿರಬಹುದಾದ ಈ ತಾಯ್ನುಡಿಯ ಅಳವನ್ನೇ ಕಳೆದುಕೊಂಡಿದ್ದಾರೆ.

ಸಂಸ್ಕ್ರುತದ ವಾಕ್ಯಗಳಲ್ಲಿ ಏಳು ವಿಬಕ್ತಿಗಳು ಬಳಕೆಯಾಗುತ್ತವೆ ಎಂಬುದನ್ನು ಸಂಸ್ಕ್ರುತದ ಪಂಡಿತರು ಕಂಡುಕೊಂಡಿದ್ದಾರೆ; ಕನ್ನಡದ ಸೊಲ್ಲುಗಳನ್ನು ಪರಿಶೀಲಿಸಿದೆವಾದರೆ, ಅವುಗಳಲ್ಲಿ ಬರುವ ಪದಗಳಿಗೆ ಒಟ್ಟು ನಾಲ್ಕು ವಿಬಕ್ತಿರೂಪಗಳು ಮಾತ್ರ ಕಾಣಿಸುತ್ತವಲ್ಲದೆ, ಏಳು ವಿಬಕ್ತಿ ರೂಪಗಳು ಕಾಣಿಸುವುದಿಲ್ಲ; ಹಾಗಿರುವಾಗ, ಸಂಸ್ಕ್ರುತದ ಹಾಗೆ ಕನ್ನಡದಲ್ಲೂ ಏಳು ವಿಬಕ್ತಿಗಳಿರಬೇಕು ಎಂದು ಬ್ರಮಿಸಿ, ಅವನ್ನು ಕಾಣಲು ಪ್ರಯತ್ನಿಸುವ ‘ಕನ್ನಡದ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕನ್ನಡದಲ್ಲಿ ಮೂರು ಕಾಲಗಳಿವೆಯೆಂದು ‘ಕನ್ನಡ ವ್ಯಾಕರಣ’ಗಳು ಹೇಳುತ್ತವೆ; ಇದರಂತೆ, ಮಾಡುತ್ತೇನೆ ಎಂಬ ರೂಪ ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಬೇಕು, ಮತ್ತು ಮಾಡುವೆನು ಎಂಬ ರೂಪ ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸಬೇಕು.

ಆದರೆ, ನಿಜಕ್ಕೂ ಕನ್ನಡದಲ್ಲಿ ನಾಳೆ ಮಾಡುತ್ತೇನೆ, ಬರುವ ವರ‍್ಶ ಮಾಡುತ್ತೇನೆ ಎಂಬಂತಹ ಸೊಲ್ಲುಗಳಲ್ಲಿ ಕಾಣಿಸುವ ಹಾಗೆ, ಮಾಡುತ್ತೇನೆ ಎಂಬುದು ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸುತ್ತದೆ; ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಲು ಮಾಡುತ್ತಿದ್ದೇನೆ ಎಂಬ ಮಾಡು ಪದಕ್ಕೆ ಇರು ಪದವನ್ನು ಸೇರಿಸಿರುವ ಬೇರೆಯೇ ಪದರೂಪವನ್ನು ಬಳಸಲಾಗುತ್ತದೆ. ಇಂತಹ ಕಣ್ಣಿಗೆ ಹೊಡೆದು ಕಾಣಿಸುವಂತಹ ತಪ್ಪುಗಳಿರುವ ‘ಕನ್ನಡ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕಂಪ್ಯೂಟರ್‌ಗಳನ್ನು ಬಳಸಿ ಒಂದು ನುಡಿಯ ಸೊಲ್ಲುಗಳನ್ನು ಇನ್ನೊಂದು ನುಡಿಗೆ ಅನುವಾದಿಸಲು ಬರುತ್ತದೆ; ಆದರೆ, ಹೀಗೆ ಮಾಡಬೇಕಿದ್ದಲ್ಲಿ, ಆ ಎರಡು ನುಡಿಗಳ ವಿವರವಾದ ಸೊಲ್ಲರಿಮೆಗಳನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಬೇಕಾಗುತ್ತದೆ. ಇಂಗ್ಲಿಶ್ ನುಡಿಗೆ ಈಗಾಗಲೇ ಸಾಕಶ್ಟು ವಿವರವಾದ ವ್ಯಾಕರಣವನ್ನು ಬರೆಯಲಾಗಿದ್ದು, ಅದನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಲಾಗಿದೆ; ಕನ್ನಡಕ್ಕೂ ಇಂತಹದೊಂದು ವಿವರವಾದ ಸೊಲ್ಲರಿಮೆಯನ್ನು ಬರೆದಲ್ಲಿ, ಇಂಗ್ಲಿಶ್ ಬರಹಗಳನ್ನು ಕನ್ನಡಕ್ಕೆ ಅನುವಾದಿಸುವಲ್ಲಿಯೂ ಕಂಪ್ಯೂಟರನ್ನು ಬಳಸಲು ಸಾದ್ಯವಾಗಬಹುದು.

ಆದರೆ, ಇಂತಹ ಕೆಲಸಕ್ಕೆ ಸಂಸ್ಕ್ರುತ ವ್ಯಾಕರಣವನ್ನೇ ‘ಕನ್ನಡ ವ್ಯಾಕರಣ’ವೆಂದು ಬ್ರಮಿಸುವ ಕೇಶಿರಾಜನ ಕನ್ನಡ ವ್ಯಾಕರಣವಾಗಲಿ, ಇವತ್ತು ಶಾಲೆಗಳಲ್ಲಿ ಕಲಿಸುವ ‘ಕನ್ನಡ ವ್ಯಾಕರಣ’ವಾಗಲಿ ಯಾವ ನೆರವನ್ನೂ ನೀಡಲಾರದು. ಕನ್ನಡದಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಬಲ್ಲ ‘ಕನ್ನಡದ ಸೊಲ್ಲರಿಮೆ’ಯೊಂದೇ ಈ ಕೆಲಸದಲ್ಲಿ ನೆರವನ್ನು ನೀಡಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

1 3 4 5 6 7