Posts Tagged ‘ಅಕ್ಶರ’

ಮಕ್ಕಳಿಗೆ ಬರೆಯಲು ಕಲಿಸುವ ಬಗೆ

ನುಡಿಯರಿಮೆಯ ಇಣುಕುನೋಟ – 17

ಓದಲು ಕಲಿಯುವುದಕ್ಕಿಂತಲೂ ಬರೆಯಲು ಕಲಿಯುವುದು ಮಕ್ಕಳ ಮಟ್ಟಿಗೆ ಹೆಚ್ಚು ತೊಡಕಿನ ಕೆಲಸ. ಇದಕ್ಕೆ ಕಾರಣವೇನೆಂದರೆ, ಬರೆಯಬೇಕಿದ್ದಲ್ಲಿ ಅವರು ಒಂದೇ ಬಾರಿಗೆ ಹಲವಾರು ತೀರ‍್ಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ: ಯಾವ ವಿಶಯಗಳ ಕುರಿತು ಬರೆಯಬೇಕು, ಆ ವಿಶಯಗಳನ್ನು ಯಾವ ರೀತಿಯಲ್ಲಿ ಜೋಡಿಸಿಕೊಳ್ಳಬೇಕು, ಎಂತಹ ಪದಗಳನ್ನು ಬಳಸಬೇಕು, ಅವನ್ನು ಒಟ್ಟುಗೂಡಿಸಿ ಸೊಲ್ಲುಗಳನ್ನು ಹೇಗೆ ಕಟ್ಟಬೇಕು, ಅವನ್ನು ಬರೆಯುವಲ್ಲಿ ಯಾವ ಬರಿಗೆಗಳನ್ನು ಬಳಸಬೇಕು ಎಂಬುದನ್ನೆಲ್ಲ ಅವರು ಒಂದೇ ಬಾರಿಗೆ ತೀರ‍್ಮಾನಿಸಿಕೊಳ್ಳಬೇಕಾಗುತ್ತದೆ. ಹೀಗೆ ಮಾಡಲು ಬರುವುದಿಲ್ಲವಾದಲ್ಲಿ, ಅವರ ಬರೆಯುವ ಕೆಲಸ ಮುಂದಕ್ಕೆ ಹೋಗುವುದೇ ಇಲ್ಲ.

ಹೆಚ್ಚಿನ ಮಕ್ಕಳಿಗೂ ಈ ತೊಡಕು ತೊಡಕಾದ ಕೆಲಸವನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ. ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಕಲಿಯುವಂತೆ ಯಾರಾದರೂ ಅವರಿಗೆ ನೆರವನ್ನಿತ್ತರೆ ಮಾತ್ರ, ಅವರು ಅದನ್ನು ಕಲಿಯಬಲ್ಲರು. ಇಲ್ಲವಾದರೆ, ಬರೆಯುವ ಕೆಲಸ ತಮಗೆ ಹೇಳಿದ್ದಲ್ಲ ಎಂಬುದಾಗಿ ಅವರು ಅದರಿಂದ ದೂರವೇ ಉಳಿಯುತ್ತಾರೆ. ಪರೀಕ್ಶೆಗಳಲ್ಲಿ ಬರೆಯಬೇಕಾದುದನ್ನೆಲ್ಲ ಉರುಹೊಡೆದು ಬರೆಯುವುದನ್ನಶ್ಟೇ ಅವರು ಮಾಡಬಲ್ಲರು.

ಹಾಗಾಗಿ, ಮಕ್ಕಳಿಗೆ ಬರೆಯಲು ಕಲಿಸುವವರು ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಹತೋಟಿಗೆ ತಂದುಕೊಳ್ಳುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕು. ಬರಿಗೆ(ಅಕ್ಶರ)ಗಳನ್ನು ಬರೆಯಲು ಕಲಿಯುವ ಸಮಯದಲ್ಲಿ ಅವರು ಈ ಕಲಿಕೆಯನ್ನು ಸರಿಯಾದ ಓರಣ(ಕ್ರಮ)ದಲ್ಲಿ ನಡೆಸುವ ಹಾಗೆ ನೋಡಿಕೊಳ್ಳಬೇಕು.

ಮಕ್ಕಳ ಕಯ್ಬರಹ ಓದಬಲ್ಲುದಾಗಿರಬೇಕು, ಮತ್ತು ಬರವಣಿಗೆ ಸಲೀಸಾಗಿರಬೇಕು. ಸಲೀಸಾಗಿ ಬರೆಯಲು ಬಾರದವರಿಗೆ ಬೇರೆ ವಿಶಯಗಳ ಕುರಿತು ಆಲೋಚಿಸಲು ಸಮಯವೇ ಸಿಗುವುದಿಲ್ಲ. ಸಲೀಸಾಗಿ ಬರೆಯಬೇಕಿದ್ದಲ್ಲಿ, ಮಕ್ಕಳು ಬರಿಗೆಗಳನ್ನು ಬರೆಯುವ ಬಗೆ, ಬಳಪವನ್ನು ಹಿಡಿಯುವ ಬಗೆ, ಮತ್ತು ಕಾಗದವನ್ನು ಎದುರು ಇರಿಸಿಕೊಳ್ಳುವ ಬಗೆ ಸರಿಯಾಗಿರಬೇಕು.

ಕೆಲವು ಮಕ್ಕಳು ಬರೆಯುವಾಗ ಬಲಗಯ್ಯನ್ನು ಬಳಸುವ ಬದಲು ಎಡಗಯ್ಯನ್ನು ಬಳಸುತ್ತಾರೆ. ಆದರೆ, ಇಂತಹ ಮಕ್ಕಳು ಬಲಗಯ್ಯಲ್ಲಿ ಬರೆಯುವವರನ್ನು ನೋಡಿ, ಅವರು ಬರೆಯುವ ಹಾಗೆಯೇ ಬರೆಯತೊಡಗುತ್ತಾರೆ. ಇದರಿಂದಾಗಿ ಅವರು ತೊಂದರೆಗೊಳಗಾಗುತ್ತಾರೆ. ಯಾಕೆಂದರೆ, ಹಾಗೆ ಬರೆಯುವಾಗ ಅವರಿಗೆ ತಮ್ಮ ಕಯ್ಬೆರಳು ಅಡ್ಡ ಬರುತ್ತದೆ, ಮತ್ತು ತಾವು ಬರೆದುದೇನೆಂಬುದು ಕಾಣಿಸುವುದಿಲ್ಲ. ಅದು ಕಾಣಿಸುವಂತೆ ಮಾಡಲು, ಅವರು ತಮ್ಮ ಮಣಿಗಂಟನ್ನು ಬಗ್ಗಿಸಿ ಬರೆಯಹೊರಡುತ್ತಾರೆ. ಆದರೆ ಹೀಗೆ ಮಾಡುವುದರಿಂದ ಅವರ ಬರವಣಿಗೆ ತುಂಬಾ ತೊಡಕಿನದಾಗಿಬಿಡುತ್ತದೆ.

ಎಡಗಯ್ಯಲ್ಲಿ ಬರೆಯುವ ಮಕ್ಕಳಿಗೆ ಅವರು ಬರೆಯಬೇಕಾಗಿರುವ ಬಗೆ ಹೇಗೆ ಎಂಬುದನ್ನು ಕಲಿಸಿಕೊಡಬೇಕು. ಬರೆಯುವ ಕಾಗದವನ್ನು ಇಲ್ಲವೇ ಪುಸ್ತಕವನ್ನು ಅವರು ಬಲಗಯ್ಯವರ ಹಾಗೆ ಎಡಕ್ಕೆ ತಿರುಗಿಸಿ ಇರಿಸಿಕೊಳ್ಳುವ ಬದಲು, ಬಲಕ್ಕೆ ತಿರುಗಿಸಿ ಇರಿಸಿಕೊಳ್ಳುವ ಹಾಗೆ ಮಾಡಬೇಕು, ಮತ್ತು ಪೆನ್ನನ್ನು ತುದಿಯಿಂದ ತುಸು ಮೇಲೆ ಹಿಡಿದುಕೊಳ್ಳಲು ಹೇಳಬೇಕು. ಬರೆಯುವಾಗ ಅವರು ಮಣಿಗಂಟನ್ನು ಬಗ್ಗಿಸಬಾರದು. ಎಡಗಯ್ಯವರಿಗೆ ತಕ್ಕುದಾಗಿರುವಂತಹ ಈ ಬರೆಯುವ ಬಗೆಯನ್ನು ಕಲಿತುಕೊಂಡಲ್ಲಿ ಮಾತ್ರ, ಅವರಿಗೆ ಸಲೀಸಾಗಿ ಬರೆಯಲು ಬರುತ್ತದೆ.

ಮಾತಿಗೂ ಬರಹಕ್ಕೂ ನಡುವೆ ಸೊಲ್ಲುಗಳ ರಚನೆಯಲ್ಲಿ ವ್ಯತ್ಯಾಸಗಳಿವೆಯಾದ ಕಾರಣ, ಬರೆಯಲು ಕಲಿಯುವ ಮಕ್ಕಳಿಗೆ ಬರಹಗಳಲ್ಲಿ ಎಂತಹ ಸೊಲ್ಲುಗಳನ್ನು ಬಳಸಬೇಕು ಎಂಬುದನ್ನೂ ಕಲಿಸಬೇಕಾಗುತ್ತದೆ. ಇಡೀ ಸೊಲ್ಲುಗಳನ್ನು ಬರೆಯುವುದು ಹೇಗೆ, ಚಿಕ್ಕ ಚಿಕ್ಕ ಸೊಲ್ಲುಗಳನ್ನು ಜೋಡಿಸಿ ಉದ್ದ ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ, ಒಂದು ಚಿಕ್ಕ ಸೊಲ್ಲಿನ ಒಳಗೆ ಬೇರೆ ಚಿಕ್ಕ ಸೊಲ್ಲುಗಳನ್ನು ಇರಿಸಿ ಸಿಕ್ಕಲು ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕಾಗುತ್ತದೆ. ಎಲ್ಲಾ ಮಕ್ಕಳಿಗೂ ಇದನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ.

ಸೊಲ್ಲುಗಳನ್ನು ಸೇರಿಸಿ ಕುರಳು(ಪಾರಾ)ಗಳನ್ನು ರಚಿಸುವ ಬಗೆಯನ್ನೂ ಅವರಿಗೆ ಕಲಿಸಿಕೊಡಬೇಕಾಗುತ್ತದೆ. ಒಳ್ಳೇ ಮಾದರಿ ಕುರಳುಗಳಲ್ಲಿ ಮೊದಲಿಗೆ ಮುಕ್ಯ ವಿಶಯವನ್ನು ಮುಂದಿಡುವ ಚಿಕ್ಕ ಸೊಲ್ಲಿರುತ್ತದೆ; ಆಮೇಲೆ, ಅದನ್ನು ಹೆಚ್ಚು ವಿವರವಾಗಿ ತಿಳಿಸುವ, ಮತ್ತು ಅದಕ್ಕೆ ಬೆಂಬಲ ನೀಡುವ ವಿಶಯಗಳು ಬರುತ್ತವೆ; ಮತ್ತು ಕೊನೆಯಲ್ಲಿ, ಮುಕ್ತಾಯಗೊಳಿಸುವ ಸೊಲ್ಲು ಬರುತ್ತದೆ. ಸೊಲ್ಲುಗಳನ್ನು ಈ ರೀತಿ ಒಂದಕ್ಕೊಂದು ಹೊಂದಿಕೊಳ್ಳುವ ಹಾಗೆ ಬರೆಯುವುದು ಹೇಗೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.

ಬರಹದಲ್ಲಿ ಬರುವ ಕುರಳುಗಳನ್ನು ಹೇಗೆ ಅಣಿಗೊಳಿಸುವುದು ಎಂಬುದನ್ನೂ ಅವರು ಕಲಿಯಬೇಕಾಗುತ್ತದೆ. ಇದು ಬೇರೆ ಬೇರೆ ಗುರಿಗಳಿಗಾಗಿ ಬಳಕೆಯಾಗುವ ಬರಹಗಳಲ್ಲಿ ಬೇರೆ ಬೇರಾಗಿರುತ್ತದೆ. ಒಂದು ಕತೆಯನ್ನು ಬರೆಯುವವರು ಅದರ ನೆಗಳ್ತೆ ಮುಂದೆ ಹೋಗುವುದಕ್ಕೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ಇದಕ್ಕೆ ಬದಲು, ಒಂದು ವಿಶಯದ ಮಟ್ಟಿಗೆ ಇನ್ನೊಬ್ಬರ ಒಪ್ಪಿಗೆ ಇಲ್ಲವೇ ಒಲವನ್ನು ಪಡೆಯಬೇಕೆಂದಿರುವವರು ಆ ವಿಶಯವನ್ನು ಓದುಗರ ಮುಂದಿರಿಸುವ ಮತ್ತು ಅದನ್ನು ಬೆಂಬಲಿಸುವ ವಿಚಾರಗಳನ್ನು ಕೊಡುವ ಬಗೆ ಹೇಗೆ ಎಂಬುದಕ್ಕೆ ಗಮನ ಕೊಡಬೇಕಾಗುತ್ತದೆ.

ಒಮ್ಮೆ ಬರೆದುದನ್ನು ಓದಿ ನೋಡಿ, ಅದು ಸರಿಯಿಲ್ಲವೆಂದು ಅನಿಸಿದಲ್ಲಿ ಅದನ್ನು ತಿದ್ದಿ ಸರಿಪಡಿಸುವುದು ಹೇಗೆ ಎಂಬುದನ್ನೂ ಮಕ್ಕಳು ತಿಳಿದಿರಬೇಕು. ಇದಕ್ಕಾಗಿ ಅವರು ತಾವು ಬರೆದಿರುವ ಸೊಲ್ಲನ್ನು ಬೇರೆ ಬೇರೆ ಬಗೆಗಳಲ್ಲಿ ಮಾರ‍್ಪಡಿಸುವುದು ಹೇಗೆ ಎಂಬುದನ್ನು ಕಲಿತಿರಬೇಕಾಗುತ್ತದೆ. ತಾವು ಬರೆದಿರುವ ಸೊಲ್ಲಿನ ಇಟ್ಟಳ (ಒಳರಚನೆ) ಎಂತಹದು, ಆ ಸೊಲ್ಲನ್ನು ಬೇರೆ ಯಾವ ಇಟ್ಟಳಗಳಿಗೆ ಮಾರ‍್ಪಡಿಸಬಹುದು ಎಂಬಂತಹ ಸೊಲ್ಲರಿಮೆಯ (ವ್ಯಾಕರಣದ) ತಿಳಿವು ಅವರಿಗಿದ್ದಲ್ಲಿ, ತಾವು ಬರೆದಿರುವ ಬರಹವನ್ನು ತಿದ್ದಿ ಸರಿಪಡಿಸುವ ಕೆಲಸವನ್ನು ಅವರು ಹೆಚ್ಚು ಚನ್ನಾಗಿ ನಡೆಸಬಲ್ಲರು.

ಬರವಣಿಗೆಯಲ್ಲಿ ಮಾಡಿರುವ ತಪ್ಪನ್ನು ಬರೆದವರೇ ಓದಿ ನೋಡಿ ಕಂಡುಕೊಳ್ಳುವಂತೆ ಮಾಡಿದಲ್ಲಿ, ಮತ್ತು ಅವು ಯಾಕೆ ತಪ್ಪಾಗಿವೆ ಎಂಬುದನ್ನೂ ತಿಳಿಯುವಂತೆ ಮಾಡಿದಲ್ಲಿ ಅವರ ಬರವಣಿಗೆ ಬೇಗನೆ ಮುಂದೆ ಸಾಗುತ್ತದೆ. ಬರೆದಶ್ಟೂ ಬರವಣಿಗೆ ಚನ್ನಾಗುತ್ತಾ ಹೋಗುತ್ತದೆ. ಹಾಗಾಗಿ, ಬರೆಯುವ ಸಂದರ‍್ಬಗಳು ಮಕ್ಕಳಿಗೆ ಹೆಚ್ಚು ಹೆಚ್ಚು ದೊರಕುವಂತೆ ಮಾಡಬೇಕು.

ಮಕ್ಕಳಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟಬೇಕೆಂಬುದು ಎಲ್ಲಕ್ಕಿಂತಲೂ ಮುಕ್ಯವಾದ ವಿಶಯ. ಏನನ್ನೇ ಬರೆಯಲಿ, ಅದು ಅವರಿಗೆ ನಲಿವನ್ನು ಮತ್ತು ಮೆಚ್ಚುಗೆಯನ್ನು ಕೊಡುವಂತಿರಬೇಕು. ಬೇರೆಯವರ ಒತ್ತಾಯಕ್ಕೆ ಬರೆಯುವ ಬರಹದಿಂದ ಅವರ ಬರವಣಿಗೆ ಒಳ್ಳೆಯದಾಗಲಾರದು.

ಏನಾದರೂ ಒಂದು ವಿಶಯವನ್ನು ಇನ್ನೊಬ್ಬರಿಗೆ ತಿಳಿಸಬೇಕೆಂಬ ತುಡಿತ ಮಕ್ಕಳಲ್ಲಿರುತ್ತದೆ. ಶಾಲೆಯಿಂದ ಮನೆಗೆ ಬಂದೊಡನೆ, ಶಾಲೆಯಲ್ಲಿ ಇಲ್ಲವೇ ಅಲ್ಲಿಂದ ಬರುವಾಗ ದಾರಿಯಲ್ಲಿ ಏನಾಯಿತು ಎಂಬುದನ್ನು ತಾಯಿಗೆ ಆದಶ್ಟು ಬೇಗನೆ ತಿಳಿಸಿಬಿಡಬೇಕೆಂಬ ಆತುರದಲ್ಲಿ ಮಕ್ಕಳಿರುತ್ತಾರೆ. ಗೆಳೆಯರನ್ನು ಕಂಡೊಡನೆ ತಮಗೆ ತಿಳಿದಿರುವ ಹೊಸ ವಿಶಯವೊಂದನ್ನು ಅವರಿಗೆ ತಿಳಿಸುವ ಆತುರವೂ ಅವರಿಗಿರುತ್ತದೆ.

ತಮ್ಮ ಮನಸ್ಸಿನಲ್ಲಿರುವ ಇಂತಹ ವಿಶಯಗಳನ್ನು ಮಾತಿನ ಮೂಲಕ ಇನ್ನೊಬ್ಬರಿಗೆ ತಿಳಿಸುವ ಹಾಗೆ ಬರಹದ ಮೂಲಕವೂ ತಿಳಿಸಲು ಬರುತ್ತದೆ ಎಂಬುದನ್ನು ಅವರಿಗೆ ತೋರಿಸಿಕೊಟ್ಟಲ್ಲಿ, ಅವರು ಬಹಳ ಬೇಗನೆ ಬರವಣಿಗೆಯಲ್ಲಿ ಮುಂದೆ ಹೋಗುತ್ತಾರೆ. ಮೊದಲಿಗೆ ಅವರ ಹತ್ತಿರ ಮಾತಿನ ಮೂಲಕ ಒಂದು ವಿಶಯವನ್ನು ತಿಳಿಸಲು ಹೇಳಿ, ಅದನ್ನು ಕಲಿಸುವವರೇ ಬರೆದು ತೋರಿಸಬಹುದು, ಮತ್ತು ಹಾಗೆ ಬರೆದುದನ್ನು ಅವರಿಗೆ ಓದಲು ಕೊಡಬಹುದು. ಹೀಗೆ ಮಾಡುವುದರಿಂದ ಅವರಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟುತ್ತದೆ.

ಬರೆಯಲು ಕಲಿಯಬೇಕೆಂದಿರುವವರಿಗೆ ಎರಡು ಬಗೆಯ ಕಲಿಕೆಗಳು ನೆರವು ನೀಡಬಲ್ಲುವು: ಮೊದಲನೆಯದಾಗಿ, ಬರೆಯಲಿರುವ ವಿಶಯದ ಕುರಿತು ಅವರು ಏನೆಲ್ಲಾ ಹೇಳಬಲ್ಲರೋ ಅದನ್ನೆಲ್ಲ ಹೇಳಲು ಬಿಡಬೇಕು. ಇದರಿಂದ ಅವರಲ್ಲಿ ಆಲೋಚಿಸುವ ಕಸುವು ಬೆಳೆಯುತ್ತದೆ. ಎರಡನೆಯದಾಗಿ, ಅವರಿಗೆ ಬೇರೆ ಯಾವುದಾದರೂ ಬರಹವನ್ನು ಎತ್ತಿಬರೆಯಲು ಕಲಿಸಬೇಕು. ಹೀಗೆ ಬರೆಯುವಾಗ, ಅಂತಹ ಬರಹಗಳಲ್ಲಿ ಸೊಲ್ಲುಗಳನ್ನು ಮತ್ತು ಕುರಲುಗಳನ್ನು ಯಾವ ರೀತಿಯಲ್ಲಿ ಅಳವಡಿಸಲಾಗಿದೆ ಎಂಬುದನ್ನು ಅವರು ಗಮನಿಸುವ ಹಾಗೆಯೂ ಮಾಡಬೇಕು.

ಓದುವ ಮತ್ತು ಬರೆಯುವ ಕೆಲಸಗಳೆರಡೂ ಬಹಳ ಮಟ್ಟಿಗೆ ಒಂದನ್ನೊಂದು ಅವಲಂಬಿಸಿವೆ. ಹಾಗಾಗಿ, ಅವೆರಡನ್ನೂ ಮಕ್ಕಳು ಒಟ್ಟೊಟ್ಟಾಗಿ ಕಲಿತುಕೊಳ್ಳುವಂತೆ ಮಾಡಬೇಕು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹಕ್ಕೆ ಮೇಲ್ಮೆ ಬಂದುದು ಹೇಗೆ?

ನುಡಿಯರಿಮೆಯ ಇಣುಕುನೋಟ – 14

ಮೊನ್ನೆ ಮೊನ್ನೆಯ ವರೆಗೂ ಸಮಾಜದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಕಲಿತರೆ ಸಾಕಿತ್ತು; ಉಳಿದವರೆಲ್ಲ ಅದರಿಂದ ದೂರವೇ ಉಳಿಯಬಹುದಿತ್ತು, ಮತ್ತು ಹೀಗೆ ಬರಹದಿಂದ ದೂರ ಉಳಿದುದರಿಂದಾಗಿ ಅವರಿಗೆ ಜೀವನದಲ್ಲಿ ಯಾವ ತೊಂದರೆಯೂ ಉಂಟಾಗುತ್ತಿರಲಿಲ್ಲ.

ಆದರೆ, ಇವತ್ತು ಎಲ್ಲಾ ಜನರೂ ಬರಹವನ್ನು ಕಲಿಯಬೇಕಾಗಿದೆ, ಮತ್ತು ಕಲಿತು ಬಳಸುತ್ತಿರಬೇಕಾಗಿದೆ. ಯಾಕೆಂದರೆ, ಹಾಗೆ ಮಾಡದವರಲ್ಲಿ ಹೆಚ್ಚಿನವರೂ ಇವತ್ತು ತಮ್ಮ ಜೀವನದಲ್ಲಿ ಸೋತುಹೋಗುತ್ತಿದ್ದಾರೆ. ಒಂದು ಸಮಾಜದ ಏಳಿಗೆಯಾಗಬೇಕಿದ್ದರೂ ಅದಕ್ಕೆ ಸೇರಿದ ಜನರೆಲ್ಲ ಬರಹವನ್ನು ಕಲಿಯುವುದು ಮತ್ತು ಬಳಸುವುದು ಇವತ್ತಿನ ಮಟ್ಟಿಗೆ ಅತ್ಯವಶ್ಯವಾಗಿದೆ.

ಇದುವರೆಗೂ ಇಲ್ಲದಿದ್ದ ಈ ಮೇಲ್ಮೆ ಬರಹಕ್ಕೆ ಬಂದುದು ಹೇಗೆ? ಮಿಲಿಯಗಟ್ಟಲೆ ವರ‍್ಶಗಳಿಂದಲೂ ಜನರ ನಡುವಿನ ಸಂಪರ‍್ಕಕ್ಕೆ ಕೊಂಡಿಯಾಗಿ, ಮತ್ತು ಮನಸ್ಸಿನಲ್ಲಿರುವ ಅನಿಸಿಕೆಗಳನ್ನು ಬೇರೆಯವರಿಗೆ ತಿಳಿಸಲು ಬೇಕಾಗುವ ಒಯ್ಯುಗೆಯಾಗಿ ಮಾತನ್ನೇ ಬಳಸಲಾಗುತ್ತಿತ್ತು. ಆದರೆ, ಸುಮಾರು ನಾಲ್ಕಯ್ದು ಸಾವಿರ ವರ‍್ಶಗಳಶ್ಟು ಹಿಂದೆ, ಮಾತನ್ನು ಬರಹಕ್ಕಿಳಿಸುವ ಬಗೆಯನ್ನು ಕಂಡುಹಿಡಿಯಲಾಯಿತು. ಮೊದಲಿಗೆ ಇದನ್ನು ನೆನಪಿಗೆ ನೆರವಾಗುವಂತಹ ಕೆಲಸಗಳಲ್ಲಿ ತೊಡಗಿಸಲಾಯಿತು; ಆದರೆ ಆಮೇಲೆ, ದೂರ ಇರುವವರನ್ನು ಸಂಪರ‍್ಕಿಸುವುದಕ್ಕಾಗಿಯೂ ಇದನ್ನು ಬಳಸಲು ತೊಡಗಲಾಯಿತು.

ಹೀಗಿದ್ದರೂ, ಬರಹವೆಂಬುದು ಮೊನ್ನೆ ಮೊನ್ನೆಯ ವರೆಗೂ ಕೆಲವೇ ಕೆಲವು ಜನರ ಸೊತ್ತಾಗಿ ಮಾತ್ರ ಉಳಿದಿತ್ತು, ಮತ್ತು ಕೆಲವೇ ಕೆಲವು ನುಡಿಗಳನ್ನು ಆಡುವವರಲ್ಲಿ ಮಾತ್ರ ಅದು ಬಳಕೆಯಲ್ಲಿತ್ತು. ಸುಮಾರು ಮುನ್ನೂರು-ನಾನ್ನೂರು ವರ‍್ಶಗಳಶ್ಟು ಹಿಂದೆ ಬರಹಗಳನ್ನು ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ವಿಶಯದಲ್ಲಿ ಒಂದು ದೊಡ್ಡ ಕ್ರಾಂತಿಯನ್ನೇ ಉಂಟುಮಾಡಿತು; ಅದರಲ್ಲೂ ಬರಹದಲ್ಲಿ ಬರುವ ಒಂದೊಂದು ಬರಿಗೆಗೂ ಒಂದೊಂದು ಮೊಳೆಯನ್ನು ಬಳಸಿ ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ಕ್ರಾಂತಿ ಇನ್ನಶ್ಟು ವೇಗವಾಗಿ ಹಲವಾರು ನುಡಿಗಳನ್ನು ಆವರಿಸುವ ಹಾಗೆ ಮಾಡಿತು.

ಈ ಕ್ರಾಂತಿ ನಡೆಯುವ ಮೊದಲು, ಬರಹಗಳನ್ನು ಕಯ್ಯಲ್ಲಿ ನಕಲುಮಾಡಬೇಕಾಗಿತ್ತು; ಇದು ತುಂಬಾ ತೊಡಕಿನ ಮತ್ತು ತುಂಬಾ ಸಮಯ ತಗಲುವ ಕೆಲಸವಾಗಿತ್ತು; ಕೆಲವು ಮಂದಿ ಮಾತ್ರ ಈ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದರು, ಮತ್ತು ಇದರಿಂದಾಗಿ, ಬರಹವನ್ನು ಬಳಸುವವರ ಎಣಿಕೆ ತುಂಬಾ ಕಡಿಮೆಯಾಗಿಯೇ ಉಳಿದಿತ್ತು.

ಆದರೆ, ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಮತ್ತು ಅದಕ್ಕಾಗಿ ತೊಗಲು, ತೊಗಟೆ ಮೊದಲಾದವುಗಳನ್ನು ಬಳಸುವ ಬದಲು ಕಾಗದವನ್ನು ಬಳಸಲು ತೊಡಗಿದುದರಿಂದಾಗಿ, ಅವನ್ನು ತುಂಬಾ ಕಡಿಮೆ ಬೆಲೆಗೆ ಉಂಟುಮಾಡಲು, ಮತ್ತು ತುಂಬಾ ಸುಲಬವಾಗಿ ಉಂಟುಮಾಡಲು ಸಾದ್ಯವಾಯಿತು. ಇದರಿಂದಾಗಿ, ಅವುಗಳ ಪ್ರತಿಗಳನ್ನು ಒಮ್ಮೆಗೇನೇ ಸಾವಿರಾರು ಜನರಿಗೆ ತಲುಪಿಸಲು ಸಾದ್ಯವಾಯಿತು. ಇದಲ್ಲದೆ, ಅವನ್ನು ಬಳಸುವ ಕೆಲಸವೂ ತುಂಬಾ ಸುಲಬವಾಯಿತು.

ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಬರಹಗಳಲ್ಲಿ ಬಳಕೆಯಾಗುವ ಬರಿಗೆ(ಅಕ್ಶರ)ಗಳು, ಪದಗಳು, ಸೊಲ್ಲುಗಳು ಮೊದಲಾದುವೆಲ್ಲ ಎಲ್ಲಾ ಕಡೆಗಳಲ್ಲೂ ಹೆಚ್ಚುಕಡಿಮೆ ಒಂದೇ ರೂಪದಲ್ಲಿ ಉಳಿಯುವಂತಾಯಿತು, ಮತ್ತು ಇದರಿಂದಾಗಿ, ನಾಡಿನ ಒಂದು ಮೂಲೆಯಲ್ಲಿ ಉಂಟುಮಾಡಿದ ಬರಹವನ್ನು ಎಲ್ಲಾ ಕಡೆಗಳಲ್ಲಿರುವ ಜನರೂ ಸುಲಬವಾಗಿ ಓದಿ ತಿಳಿದುಕೊಳ್ಳುವಂತೆ ಮಾಡಲು ಸಾದ್ಯವಾಯಿತು.

ಹಿಂದಿನ ಕಾಲದಲ್ಲಿ ಬರಹಗಳನ್ನು ಯಾರಾದರೂ ಒಬ್ಬರು ದೊಡ್ಡದಾಗಿ ಓದುತ್ತಿದ್ದರು, ಮತ್ತು ಉಳಿದವರು ಅವರ ಸುತ್ತಲೂ ಕುಳಿತು ಅದನ್ನು ಕೇಳುತ್ತಿದ್ದರು; ಎಲ್ಲರಿಗೂ ತಮ್ಮವೇ ಆದ ಬರಹಗಳ ಪ್ರತಿಗಳು ದೊರೆಯತೊಡಗಿದ ಮೇಲೆ, ಅವನ್ನು ಗಟ್ಟಿಯಾಗಿ ಓದುವ ಬದಲು ಮನಸ್ಸಿನಲ್ಲೇನೇ ಓದುವ ಬಗೆ ಬಳಕೆಗೆ ಬಂತು. ಇದಕ್ಕನುಗುಣವಾಗಿ, ಬರಹಗಳ ಬಗೆಗಳಲ್ಲೂ ಹಲವು ಮಾರ‍್ಪಾಡುಗಳು ನಡೆದುವು.

ದಿನಪತ್ರಿಕೆ, ವಾರಪತ್ರಿಕೆ ಮೊದಲಾದುವನ್ನು ಅಚ್ಚುಹಾಕಿಸಿ, ಅವು ಒಮ್ಮೆಗೇನೇ ಲಕ್ಶಾಂತರ ಜನರನ್ನು ತಲಪುವ ಹಾಗೆ ಮಾಡಲಾಯಿತು, ಮತ್ತು ಬರಹವನ್ನು ಕಲಿಯುವವರಿಗೆಲ್ಲ ಅವರದೇ ಆದ ಕಲಿಕೆಯ ಪುಸ್ತಕಗಳು ಸಿಗುವಂತೆ ಮಾಡಲಾಯಿತು. ಬರಹದ ಬಳಕೆಯಲ್ಲಿ ಮತ್ತು ಕಲಿಕೆಯಲ್ಲಿ ಇಂತಹ ಹಲವಾರು ಮಾರ‍್ಪಾಡುಗಳು ಅವನ್ನು ಕಾಗದದಲ್ಲಿ ಅಚ್ಚುಹಾಕಲು ತೊಡಗಿದ ಮೇಲೆ ನಡೆದುಹೋಗಿವೆ. ಹಲವಾರು ಒಳನುಡಿಗಳನ್ನಾಡುವ ಜನರ ನಡುವೆ ಒಂದೇ ಬಗೆಯ ಬರಹದ ನುಡಿ ಬಳಕೆಗೆ ಬಂದಿರುವುದಕ್ಕೂ ಈ ರೀತಿ ಬರಹಗಳನ್ನು ಅಚ್ಚುಹಾಕಲು ತೊಡಗಿದುದೇ ಕಾರಣವಾಗಿದೆ.

ಬರಹಕ್ಕೆ ಈ ರೀತಿ ಹೆಚ್ಚು ಹೆಚ್ಚು ಮೇಲ್ಮೆ ಸಿಗುತ್ತಿದ್ದಂತೆ, ಜನರ ನಡವಳಿಕೆಗಳಲ್ಲೂ ಹಲವು ಬಗೆಯ ಮಾರ‍್ಪಾಡುಗಳು ಉಂಟಾಗತೊಡಗಿದುವು: ಜನರು ತಿಳಿವನ್ನು ಕೂಡಿಡುವ ಬಗೆ ಬೇರಾಯಿತು; ಮೊದಲಿಗೆ ಎಲ್ಲವನ್ನೂ ನೆನಪಿನಲ್ಲಿಯೇ ಉಳಿಸಿಕೊಳ್ಳಬೇಕಾಗಿತ್ತು; ಆದರೆ ಬರಹ ಹೆಚ್ಚು ಹೆಚ್ಚು ಬಳಕೆಗೆ ಬಂದಂತೆ, ತಿಳಿವನ್ನು ಹಲವು ಬಗೆಯ ಬರಹಗಳಲ್ಲಿ ಮತ್ತು ಪುಸ್ತಕಗಳಲ್ಲಿ ಕೂಡಿಡಲಾಯಿತು.

ಗಾದೆಗಳು, ಹಾಡುಗಳು, ಸೂತ್ರಗಳು, ನೀತಿಕತೆಗಳು ಮೊದಲಾದುವೆಲ್ಲ ತಿಳಿವನ್ನು ನೆನಪಿನಲ್ಲಿ ಕೂಡಿಡಲು ಬೇಕಾಗುವಂತಹ ಬಗೆಗಳು; ಬರಹಗಳಲ್ಲಿ ಕೂಡಿಡುವುದಕ್ಕೆ ಇಂತಹ ನೆನಪಿಸಲು ನೆರವಾಗುವ ಬಗೆಗಳು ಬೇಕಾಗುವುದಿಲ್ಲ. ಇದಕ್ಕೆ ಬದಲು, ಪುಸ್ತಕಗಳಲ್ಲಿ ಕಾಣಿಸುವಂತಹ ತಲೆಬರಹಗಳು, ಪಸುಗೆಗಳು, ದಪ್ಪಬರಿಗೆ, ತೆಳುಬರಿಗೆ ಮೊದಲಾದ ಬರಿಗೆರೂಪಗಳು, ಪಟ್ಟಿಗಳು, ಸುಟ್ಟಗೆಗಳು ಮೊದಲಾದ ಓದುವಲ್ಲಿ ನೆರವಾಗುವ ಬೇರೆಯೇ ಹಲವು ಬಗೆಗಳನ್ನು ಬಳಕೆಗೆ ತರಬೇಕಾಯಿತು.

ತಿಳಿವನ್ನು ಕೂಡಿಡುವ ಬಗೆಯಲ್ಲಿ ಮಾರ‍್ಪಾಡಾದುದರಿಂದಾಗಿ, ತಿಳಿವಿಗೂ ವಯಸ್ಸಿಗೂ ನಡುವಿದ್ದ ಸಂಬಂದ ಇಲ್ಲವಾಯಿತು; ಯಾವ ವಿಶಯದಲ್ಲಿ ಬೇಕಿದ್ದರೂ ಪುಸ್ತಕಗಳನ್ನು ಓದುವ ಮೂಲಕ, ದೊಡ್ಡವರಿಗಿಂತ ಹೆಚ್ಚು ತಿಳಿವನ್ನು ಚಿಕ್ಕವರು ಪಡೆಯಬಲ್ಲವರಾದರು. ಇದಲ್ಲದೆ, ಎಶ್ಟು ತಿಳಿವನ್ನು ಮತ್ತು ಎಶ್ಟು ಬಗೆಯ ತಿಳಿವನ್ನು ಪುಸ್ತಕಗಳಲ್ಲಿ ಕೂಡಿಡಬಲ್ಲೆವು ಎಂಬುದಕ್ಕೆ ಒಂದು ಮಿತಿಯೇ ಇಲ್ಲದಿರುವ ಹಾಗಾಯಿತು. ಹೊಸ ಹೊಸ ತಿಳಿವುಗಳನ್ನು ಪಡೆಯುತ್ತಿರುವಾಗಲೂ ಹಳೆಯವನ್ನು ಕಳೆದುಕೊಳ್ಳದೆ ಉಳಿಸಿಕೊಳ್ಳಲು ಸಾದ್ಯವಾಯಿತು.

ತಿಳಿವನ್ನು ಬರಹರೂಪದಲ್ಲಿ ಉಳಿಸಿಕೊಳ್ಳಲು ತೊಡಗಿದುದರಿಂದಾಗಿ ಜನರು ಅದನ್ನೊಂದು ವಸ್ತುವಿನ ಹಾಗೆ ಕಾಣಲು ತೊಡಗಿದರು, ಮತ್ತು ಅದನ್ನು ಕಂಡುಹಿಡಿದವರು ಅದರ ಮೇಲೆ ತಮ್ಮ ಒಡೆತನವನ್ನು ಹೇರಲು ತೊಡಗಿದರು. ತಾವು ಕಂಡುಹಿಡಿದ ತಿಳಿವನ್ನು ಒಂದು ಪುಸ್ತಕದ ರೂಪದಲ್ಲಿ ಅಚ್ಚುಹಾಕಿಸಿ, ಅದನ್ನು ಸಾವಿರಾರು ಜನರಿಗೆ ತಲಪಿಸುವ ಮೂಲಕ, ಕೆಲವರು ಸಾಕಶ್ಟು ಹಣವನ್ನೂ ಕಲೆಹಾಕಿದರು.

ತಿಳಿವು ಎಂಬುದು ಬರಹವನ್ನು ಬಳಸಲು ತಿಳಿಯದವರಲ್ಲಿ ಅವರು ಮಾಡುವ ಕೆಲಸದ ಅಂಗವಾಗಿರುತ್ತದೆ; ಕೆಲಸ ಮಾಡಿದ ಅನುಬವವೇ ಅವರಲ್ಲಿ ತಿಳಿವಿನ ರೂಪದಲ್ಲಿರುತ್ತದೆ; ಅದನ್ನು ಅವರು ಆ ಕೆಲಸದಿಂದ ಬೇರ‍್ಪಡಿಸಿ ಪರಿಶೀಲಿಸಲಾರರು; ಅದರ ಕುರಿತಾಗಿ ಅವರು ಆಡಬಲ್ಲ ಮಾತುಗಳೂ ಅದನ್ನು ಬಳಸಿ ನಡೆಸಬಲ್ಲ ಕೆಲಸದೊಂದಿಗೆ ಹೆಣೆದುಕೊಂಡಿರುತ್ತವೆ.

ಇದಕ್ಕೆ ಬದಲು, ಕಾಗದದಲ್ಲಿ ಬರೆದ ಇಲ್ಲವೇ ಅಚ್ಚುಹಾಕಿದ ತಿಳಿವು ಅದನ್ನು ಬಳಸಿ ನಡೆಸುವ ಕೆಲಸಕ್ಕಿಂತ ಬೇರಾಗಿ ಉಳಿಯುತ್ತದೆ; ಅದನ್ನು ತಿರುತಿರುಗಿ ಓದಿ, ಆ ತಿಳಿವು ಸರಿಯೋ ತಪ್ಪೋ ಎಂದು ವಿಮರ‍್ಶಿಸಲು ಬರುತ್ತದೆ. ಹಾಗಾಗಿ, ಬರಹವನ್ನು ಬಳಸುವವರಿಗೂ ಅವನ್ನು ಬಳಸದವರಿಗೂ ನಡುವೆ ಅವರು ಆಲೋಚಿಸುವ ಬಗೆಯಲ್ಲೇ ಹಲವು ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ.

ನಿಜಕ್ಕೂ ಬರಹ ಬಾರದವರು ಬರಹ ಬಲ್ಲವರಿಗಿಂತ ಜಾಣ್ಮೆಯಲ್ಲಾಗಲಿ, ಬುದ್ದಿವಂತಿಕೆಯಲ್ಲಾಗಲಿ ಕಡಿಮೆಯೇನಲ್ಲ; ಬರಹ ಬಲ್ಲವರಶ್ಟೇ ಜಾಣ್ಮೆಯಿಂದ ಮತ್ತು ಅವರಶ್ಟೇ ಚನ್ನಾಗಿ ಬರಹ ಬಾರದವರೂ ತಮ್ಮ ಜೀವನವನ್ನು ನಡೆಸಬಲ್ಲರು. ಆದರೆ, ಈ ಎರಡು ಬಗೆಯ ಜನರೂ ಒಂದೇ ನಾಡಿನಲ್ಲಿ ನೆಲೆಸಿದ್ದು, ಆ ನಾಡಿನ ಆಡಳಿತವನ್ನು ನಡೆಸುವ ಮತ್ತು ಅದರ ಕುರಿತಾಗಿ ತೀರ‍್ಮಾನಗಳನ್ನು ಕಯ್ಗೊಳ್ಳುವ ಮಂದಿಯೆಲ್ಲ ಬರಹಬಲ್ಲವರಾಗಿದ್ದಲ್ಲಿ, ಆ ನಾಡಿನಲ್ಲಿರುವ ಬರಹ ಬಾರದ ಜನರಲ್ಲಿ ಹೆಚ್ಚಿನವರೂ ತಮ್ಮ ಜೀವನದಲ್ಲಿ ಸೋತುಹೋಗುತ್ತಲೇ ಇರಬೇಕಾಗುತ್ತದೆ.

ಅದರಲ್ಲೂ ನಮ್ಮ ನಾಡಿನಲ್ಲಿರುವ ಹಾಗೆ ಆಡಳಿತವು ಮಂದಿಯಾಳ್ವಿಕೆಯದಾಗಿದ್ದಲ್ಲಿ, ಎಲ್ಲಾ ಮಂದಿಯೂ ಅದರಲ್ಲಿ ಸರಿಯಾಗಿ ತಮ್ಮ ಹೊಣೆಯನ್ನರಿತು ಪಾಲ್ಗೊಳ್ಳಬೇಕಾಗುತ್ತದೆ; ಹಾಗಾಗಿ, ಒಂದು ನಾಡಿನ ಮಂದಿಯಾಳ್ವಿಕೆ (ಪ್ರಜಾಪ್ರಬುತ್ವ) ಚನ್ನಾಗಿ ನಡೆಯಬೇಕಿದ್ದಲ್ಲಿ, ಎಲ್ಲರಿಗೂ ಬರಹದ ತಿಳಿವಿರುವುದು ಅತ್ಯವಶ್ಯ. ಇಲ್ಲವಾದರೆ, ಆ ನಾಡಿನಲ್ಲಿರುವ ಬರಹ ಬಾರದವರು ತಮ್ಮ ಏಳಿಗೆಗೆ ಮಾತ್ರವಲ್ಲದೆ ಇಡೀ ನಾಡಿನ ಏಳಿಗೆಗೂ ತೊಡಕಾಗುತ್ತಾರೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹವನ್ನು ಮಾರ‍್ಪಡಿಸಿ ಗೆದ್ದವರು

ನುಡಿಯರಿಮೆಯ ಇಣುಕುನೋಟ – 8

ಜಗತ್ತಿನ ಹಲವು ನುಡಿಗಳಲ್ಲಿ ಇತ್ತೀಚೆಗೆ, ಎಂದರೆ ಕಳೆದ ನೂರು-ನೂರಯ್ವತ್ತು ವರ‍್ಶಗಳಲ್ಲಿ, ನೂರಾರು ವರ‍್ಶಗಳಿಂದ ಬಳಕೆಯಲ್ಲಿದ್ದ ಬರಹಗಳನ್ನು ಮಾರ‍್ಪಡಿಸಿ, ಅವುಗಳಲ್ಲಿ ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲಾಗಿದೆ, ಮತ್ತು ಇದರಿಂದಾಗಿ ಆ ನುಡಿಗಳನ್ನಾಡುವ ಜನರಲ್ಲಿ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆ.

ಜನರ ಜೀವನದಲ್ಲಿ ಇತ್ತೀಚೆಗೆ ಬರಹ ಹೆಚ್ಚು ಹೆಚ್ಚು ಮುಕ್ಯವಾಗುತ್ತಿರುವುದು, ಮತ್ತು ಒಂದು ನಾಡಿನಲ್ಲಿರುವ ಎಲ್ಲಾ ಜನರೂ ಬರಹಬಲ್ಲವರಾಗದೆ ಆ ನಾಡಿನ ಏಳಿಗೆಯಾಗಲಾರದೆಂಬ ಪರಿಸ್ತಿತಿ ಉಂಟಾಗಿರುವುದು ಅವರು ಇಂತಹ ಮಾರ‍್ಪಾಡುಗಳನ್ನು ನಡೆಸಲು ಮುಕ್ಯ ಕಾರಣ.

ಬರಹಗಳನ್ನು ಎರಡು ಬಗೆಗಳಲ್ಲಿ ಈ ಕಾರಣಕ್ಕಾಗಿ ಮಾರ‍್ಪಡಿಸಲಾಗಿದೆ: ಅವುಗಳ ಬರಿಗೆ(ಅಕ್ಶರ)ಗಳಲ್ಲಿ ಬೇಕಾದವುಗಳನ್ನು ಮಾತ್ರ ಉಳಿಸಿಕೊಂಡು ಬೇಡದವುಗಳನ್ನು ತೆಗೆದುಹಾಕಿರುವುದು ಒಂದು ಬಗೆಯ ಮಾರ‍್ಪಾಡು, ಮತ್ತು ಬಳಕೆಯಲ್ಲಿರುವ ಬರಿಗೆಗಳನ್ನೇ ಬಿಟ್ಟುಕೊಟ್ಟು, ಅವುಗಳ ಬದಲಿಗೆ ಬೇರೆ ಬಗೆಯ ಬರಿಗೆಗಳನ್ನು ಬಳಸತೊಡಗಿರುವುದು ಇನ್ನೊಂದು ಬಗೆಯ ಮಾರ‍್ಪಾಡು.

ಗ್ರೀಕ್ ಬರಹದಲ್ಲಿ ಪದಗಳನ್ನು ಹಿಂದಿನ ಕಾಲದಲ್ಲಿದ್ದಂತೆ ಬರೆಯಲು ಹಲವು ಹೆಚ್ಚಿನ ಬರಿಗೆಗಳನ್ನು ಬಳಸಲಾಗುತ್ತಿತ್ತು; ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡಲು, 1982ರಲ್ಲಿ ಬೇಡದಿರುವ ಬರಿಗೆಗಳನ್ನೆಲ್ಲ ಬಿಟ್ಟುಕೊಡಲಾಯಿತು. ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಬರಿಗೆಗಳ ಬಳಕೆಯಿಲ್ಲ; ಕೆಲವರು ಗ್ರೀಕ್ ಪಂಡಿತರು ಮಾತ್ರ ಅವನ್ನು ಬಳಸುತ್ತಿದ್ದಾರೆ.

ಜಪಾನೀಸ್ ಬರಹದ ಕನ ಬರಿಗೆಗಳು ಒಂಬತ್ತನೇ ಶತಮಾನದಲ್ಲಿ ಸರಿಯಾಗಿದ್ದುವು; ಆದರೆ, ಆಮೇಲೆ ಮಾತಿನಲ್ಲಿ ನಡೆದ ಮಾರ‍್ಪಾಡುಗಳಿಂದಾಗಿ ಅವಕ್ಕೂ ಅವುಗಳ ಓದಿಗೂ ನಡುವೆ ಹಲವು ವ್ಯತ್ಯಾಸಗಳು ಮೂಡಿಬಂದುವು. 1946ರಲ್ಲಿ ಇವನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾರ‍್ಪಡಿಸಲಾಯಿತು, ಮತ್ತು ಓದಿನಲ್ಲಿಲ್ಲದ ಕೆಲವು ಬರಿಗೆಗಳನ್ನು ಬಿಟ್ಟುಕೊಡಲಾಯಿತು.

ಕೊರಿಯನ್ ಬರಹದಲ್ಲಿ ಅವರವೇ ಆದ ಪದಗಳನ್ನು ಬರೆಯಲು ಹಂಗುಲ್ ಎಂಬ ತುಂಬಾ ಚನ್ನಾಗಿರುವ ಬರಿಗೆಗಳನ್ನು ಬಳಸಲಾಗುತ್ತಿದೆ; ಆದರೆ, ಚಯ್ನೀಸ್‌ನಿಂದ ಎರವಲು ಪಡೆದ ಪದಗಳನ್ನು ಬರೆಯಲು ತೊಡಕು ತೊಡಕಾಗಿರುವ ಚಯ್ನೀಸ್ ಮೂಲದ ಹಂಜ ಎಂಬ ಬರಿಗೆಗಳನ್ನು ಬಳಸಲಾಗುತ್ತಿದೆ. 1949ರಲ್ಲಿ ಈ ಚಯ್ನೀಸ್ ಎರವಲು ಪದಗಳನ್ನೂ ಹಂಗುಲ್‌ನಲ್ಲಿಯೇ ಬರೆಯುವ ನಿರ‍್ದಾರವನ್ನು ಉತ್ತರ ಕೊರಿಯಾದಲ್ಲಿ ಮಾಡಲಾಯಿತು, ಮತ್ತು ಇದರಿಂದಾಗಿ ಆ ನಾಡಿನಲ್ಲಿ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಯಿತು.

ದಕ್ಶಿಣ ಕೊರಿಯಾದಲ್ಲೂ ಹಂಜ ಬರಿಗೆಗಳ ಎಣಿಕೆಯನ್ನು ಸಾಕಶ್ಟು ಕಡಿಮೆ ಮಾಡಲಾಗಿದೆ, ಮತ್ತು ಅವನ್ನು ಎಲಿಮೆಂಟರಿ ಶಾಲೆಗಳಲ್ಲಿ ಕಲಿಸದಿರುವಂತೆ, ಮತ್ತು ಮಕ್ಕಳ ಪುಸ್ತಕಗಳಲ್ಲಿ, ಮತ್ತು ಎಲ್ಲಾ ಜನರೂ ಓದಬೇಕಾಗಿರುವ ಬರಹಗಳಲ್ಲಿ ಬಳಸದಿರುವಂತೆ ನೋಡಿಕೊಳ್ಳಲಾಗುತ್ತಿದೆ.

ಬರಹಗಳಲ್ಲಿ ಬರುವ ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡುವುದಕ್ಕಾಗಿ ಟರ‍್ಕಿ, ಇಂಡೊನೇಶ್ಯಾ, ಮಲಯೇಶ್ಯಾ, ಸೋಮಾಲಿಯಾ ಮೊದಲಾದೆಡೆಗಳಲ್ಲಿ, ಮತ್ತು ಸೋವಿಯಟ್ ಯೂನಿಯನ್‌ನ ಹಲವು ನಾಡುಗಳಲ್ಲಿ ಅರೇಬಿಕ್ ಮೂಲದ ಬರಿಗೆಗಳನ್ನು ಬಿಟ್ಟುಕೊಟ್ಟು ರೋಮನ್ ಮೂಲದ ಬರಿಗೆಗಳನ್ನು ಬಳಕೆಗೆ ತರಲಾಗಿದೆ. ಇದರಿಂದಾಗಿ ಈ ನಾಡುಗಳಲ್ಲಿಯೂ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತಿದೆ.

ಇದಕ್ಕೆ ಬದಲು, ಅರೇಬಿಕ್ ಬರಿಗೆಗಳನ್ನು ಬಳಸುತ್ತಿರುವ ಇರಾನ್, ಇರಾಕ್ ಮೊದಲಾದ ಹಲವು ನಾಡುಗಳಲ್ಲಿ ಇವತ್ತಿಗೂ ಬರಹ ಬಲ್ಲವರ ಎಣಿಕೆ ತುಂಬಾ ಕಡಿಮೆಯಿದೆ. ಇದಕ್ಕೆ ಕೆಲವು ಸಾಮಾಜಿಕ ತೊಡಕುಗಳೂ ಕಾರಣವಿರಬಹುದು; ಆದರೆ, ಬರಹಗಳಲ್ಲಿ ಪದಗಳನ್ನು ಓದುವ ಹಾಗೆ ಬರೆಯದಿರುವುದು, ಮತ್ತು ಇದರಿಂದಾಗಿ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ತೊಡಕಿನದಾಗಿರುವುದೂ ಒಂದು ಕಾರಣವೆಂಬುದರಲ್ಲಿ ಸಂಶಯವಿಲ್ಲ.

ಪದಗಳನ್ನು ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲು ಇತ್ತೀಚೆಗೆ ಬೇರೆ ಹಲವಾರು ನುಡಿಗಳ ಬರಹಗಳಲ್ಲೂ ಮಾರ‍್ಪಾಡುಗಳನ್ನು ನಡೆಸಲಾಗಿದೆ. ವಿಯೆಟ್ನಾಮ್‌ನಲ್ಲಿ ಚಯ್ನೀಸ್ ಬರಿಗೆಗಳ ಬದಲು ರೋಮನ್ ಮೂಲದ ಬರಿಗೆಗಳನ್ನು ಬಳಸಲು ತೊಡಗಿದುದರಿಂದಾಗಿ ಇವತ್ತು ವಿಯೆಟ್ನಮೀಸ್ ಬರಹಗಳಲ್ಲಿ ಚಯ್ನೀಸ್ ಎರವಲುಗಳನ್ನೂ ಓದುವ ಹಾಗೆಯೇ ಬರೆಯಲು ಸಾದ್ಯವಾಗಿದೆ; ಈ ಮಾರ‍್ಪಾಡನ್ನು ನಡೆಸಿದ ಬಳಿಕ ಅಲ್ಲಿಯೂ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತದೆ.

ಯುರೋಪಿನ ಹಲವಾರು ನುಡಿಗಳಲ್ಲೂ ಇತ್ತೀಚೆಗೆ ಬರಹಗಳಲ್ಲಿ ಮಾರ‍್ಪಾಡುಗಳನ್ನು ನಡೆಸುವ ಮೂಲಕ ಓದಿಗೂ ಬರಹಕ್ಕೂ ನಡುವಿರುವ ಅಂತರವನ್ನು ಕಡಿಮೆ ಮಾಡಲಾಗಿದೆ. ಹೆಸರು(ನಾಮ)ಪದಗಳನ್ನು ಬರೆಯುವಾಗ ಅವುಗಳ ಮೊದಲಿಗೆ ದೊಡ್ಡ ಬರಿಗೆಯನ್ನು ಬಳಸಬೇಕೆಂಬ ಕಟ್ಟಲೆಯನ್ನು ಡೇನಿಶ್‌ನಲ್ಲಿ ಬಿಟ್ಟುಕೊಡಲಾಗಿದೆ; ಕೊಟ್ಟಹೆಸರುಗಳಲ್ಲಿ ಮಾತ್ರ ಈ ಕಟ್ಟಲೆಯನ್ನು ಉಳಿಸಿಕೊಳ್ಳಲಾಗಿದೆ.

ಜರ‍್ಮನಿ, ಆಸ್ಟ್ರಿಯಾ, ಮತ್ತು ಸ್ವಿಜರ್‌ಲೇಂಡ್‌ಗಳಲ್ಲಿಯೂ ಜರ‍್ಮನ್ ಬರಹಗಳಲ್ಲಿರುವ ಬರಿಗೆಗಳ ಬಳಕೆಯಲ್ಲಿ ಹಲವು ಮಾರ‍್ಪಾಡುಗಳನ್ನು ನಡೆಸಬೇಕೆಂಬ ತೀರ‍್ಮಾನಕ್ಕೆ ಇತ್ತೀಚೆಗೆ ಬರಲಾಗಿತ್ತು; ಪದಗಳನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯಬೇಕೆಂಬುದೇ ಈ ಮಾರ‍್ಪಾಡುಗಳ ಮುಕ್ಯ ಉದ್ದೇಶವಾಗಿತ್ತು. ಈ ತೀರ‍್ಮಾನವನ್ನು 1996ರಲ್ಲಿ ಬಳಕೆಗೆ ತರಲಾಯಿತು.
ಆದರೆ, ಇದನ್ನು ವಿರೋದಿಸುವವರೂ ಕೆಲವರಿದ್ದು, ಜರ‍್ಮನಿಯಲ್ಲಿ ಈ ಮಾರ‍್ಪಾಡುಗಳನ್ನು ಬಳಸುವುದು ಶಾಲೆಗಳಲ್ಲಿ ಮಾತ್ರ ಕಡ್ಡಾಯವಾಗಿದೆ. ಹೀಗಿದ್ದರೂ, ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಮಾರ‍್ಪಡಿಸಿದ ಬರಿಗೆಗಳೇ ಬಳಕೆಯಾಗುತ್ತಿವೆ; ಕೆಲವು ಪತ್ರಿಕೆಗಳು ಮತ್ತು ಪುಸ್ತಕಗಳು ಮಾತ್ರ ಹಳೇ ಬರಹಕ್ಕೆ ಜೋತುಬಿದ್ದಿವೆ.

ಪೋರ‍್ಚುಗೀಸ್ ಬರಹದಲ್ಲೂ ಅದನ್ನು ಬಳಸುವ ಹಲವು ನಾಡುಗಳು ಒಟ್ಟುಸೇರಿ ಇಂತಹದೇ ಮಾರ‍್ಪಾಡನ್ನು ಬಳಕೆಗೆ ತಂದಿವೆ; ಇದಕ್ಕೆ ಮೊದಲು, ಪದಗಳನ್ನು ಅವುಗಳ ಮೂಲರೂಪ ಎಂತಹದು ಎಂಬುದನ್ನು ಸೂಚಿಸುವಂತೆ ಬರೆಯಲಾಗುತ್ತಿತ್ತು; ಆದರೆ, ಈ ರೂಪಗಳಿಗೂ ಅವನ್ನು ಓದುವ ಬಗೆಗೂ ನಡುವೆ ಯಾವ ಹೊಂದಾಣಿಕೆಯೂ ಇರಲಿಲ್ಲ; ಹಾಗಾಗಿ, ಅವುಗಳ ಈ ಹಳೆಯ ರೂಪಗಳನ್ನು ಬಿಟ್ಟುಕೊಟ್ಟು, ಆದಶ್ಟು ಮಟ್ಟಿಗೆ ಇವತ್ತು ಅವನ್ನು ಹೇಗೆ ಓದಲಾಗುತ್ತದೆಯೋ ಹಾಗೆಯೇ ಬರೆಯುವಂತೆ ಅವುಗಳಲ್ಲಿ ಮಾರ‍್ಪಾಡುಗಳನ್ನು ಮಾಡಲಾಗಿದೆ.

ಒಂದು ನಾಡಿನಲ್ಲಿ ಓದು-ಬರಹ ಬಲ್ಲವರ ಎಣಿಕೆ ಎಶ್ಟಿದೆ ಎಂಬುದು ಆ ನಾಡಿನ ಬರಹಗಳಲ್ಲಿ ಬಳಕೆಯಾಗುತ್ತಿರುವ ಬರಿಗೆಗಳನ್ನು ಕಲಿಯಲು ಮತ್ತು ಬಳಸಲು ಎಶ್ಟು ಸುಲಬ ಎಂಬುದರ ಮೇಲೆ ಮಾತ್ರವಲ್ಲದೆ, ಅಲ್ಲಿನ ಜನರ ಮೇಲೆ ಓದಿನ ಕುರಿತಾಗಿ ಎಂತಹ ಆಳ್ವಿಕೆಯ ಒತ್ತಡ, ನೆರೆಹೊರೆಯ ಒತ್ತಡ, ಮತ್ತು ಮನೆಯವರ ಒತ್ತಡವಿದೆ ಎಂಬುದರ ಮೇಲೂ ಅವಲಂಬಿಸಿರುತ್ತದೆ; ಹಾಗಾಗಿ, ಕನ್ನಡದ ಬರಿಗೆಗಳಲ್ಲಿ ಮಾರ‍್ಪಾಡುಗಳನ್ನು ಮಾಡದಿದ್ದರೂ ಬರಹ ಬಲ್ಲವರ ಎಣಿಕೆ ಹೆಚ್ಚಬಲ್ಲುದು ಎಂಬುದಾಗಿ ಕೆಲವರಿಗೆ ಅನಿಸಬಹುದು.

ಆದರೆ, ಬರಿಗೆಗಳ ತೊಡಕೂ ಬರಹ ಬಲ್ಲವರ ಎಣಿಕೆ ಕಡಿಮೆಯಿರಲು ಒಂದು ಕಾರಣ ಎಂಬುದನ್ನು ಕಂಡುಕೊಂಡು, ಮೇಲೆ ಕೊಟ್ಟಿರುವಂತಹ ಹಲವಾರು ನುಡಿಗಳ ಬರಹಗಳಲ್ಲಿ ಬರಿಗೆಗಳನ್ನು ಮಾರ‍್ಪಡಿಸಲಾಗಿದೆ, ಮತ್ತು ಹಾಗೆ ಮಾಡುವ ಮೂಲಕ ಬರಹ ಬಲ್ಲವರ ಎಣಿಕೆಯನ್ನು ಹೆಚ್ಚಿಸಿಕೊಳ್ಳಲಾಗಿದೆ ಎಂಬುದನ್ನು ಮರೆಯಬಾರದು.

ಇಂಗ್ಲಿಶ್‌ನಲ್ಲಿ ಉಲಿಕೆಗೂ ಬರಿಗೆಗೂ ನಡುವೆ ಹೊಂದಾಣಿಕೆ ತುಂಬಾ ಕಡಿಮೆಯಿದೆಯಾದರೂ ಅದನ್ನು ಕಲಿಯುವವರ ಎಣಿಕೆ ತುಂಬಾ ಹೆಚ್ಚಿದೆಯಲ್ಲ ಎಂದು ಕೆಲವರು ಹೇಳಬಹುದು. ಆದರೆ, ಇಂಗ್ಲಿಶ್ ಬರಹದ ಈ ಸ್ಪೆಲ್ಲಿಂಗ್ ತೊಡಕಿನಿಂದಾಗಿ, ಅದನ್ನು ಕಲಿಯುವ ಮಕ್ಕಳಿಗೆ ಬೇರೆ ಬರಹಗಳನ್ನು ಕಲಿಯಲು ಬೇಕಾಗುವ ಸಮಯದ ಮೂರು ಪಾಲಶ್ಟು ಸಮಯ ಬೇಕಾಗುತ್ತದೆ.

ಇದಲ್ಲದೆ, ಹಾಗೆ ಕಶ್ಟಪಟ್ಟು ಕಲಿತವರಲ್ಲಿಯೂ ಹಲವರಿಗೆ ಸರಿಯಾಗಿ ಓದುವುದು ಹೇಗೆ ಎಂಬುದೇ ಗೊತ್ತಾಗಿರುವುದಿಲ್ಲ, ಮತ್ತು ಇದರಿಂದಾಗಿ ಅವರು ಆದಶ್ಟು ಮಟ್ಟಿಗೆ ಓದಿನಿಂದ ದೂರವೇ ಉಳಿಯಲು ಬಯಸುತ್ತಾರೆ. ಅಮೆರಿಕಾದಂತಹ ಮುಂದುವರಿದ ನಾಡುಗಳಲ್ಲೂ ಈ ತೊಂದರೆಯಿದೆ.

ಕನ್ನಡದ ಮಕ್ಕಳು ಈ ರೀತಿ ಕನ್ನಡ ಬರಹಗಳನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ತೊಂದರೆಗೊಳಗಾಗದಂತೆ ಮಾಡಲು, ಮತ್ತು ಅವನ್ನು ಎಲ್ಲಾ ಮಕ್ಕಳೂ ಸುಲಬವಾಗಿ ಮತ್ತು ಸರಿಯಾಗಿ ಓದಲು ಸಾದ್ಯವಾಗುವಂತೆ ಮಾಡಲು ಋ, ಷ, ಮಹಾಪ್ರಾಣ ಮೊದಲಾದ ಕನ್ನಡದ ಮಟ್ಟಿಗೆ ಬೇಡದಿರುವ ಕೆಲವು ಬರಿಗೆಗಳನ್ನು ಇವತ್ತು ಬಿಟ್ಟುಕೊಡಬೇಕಾಗಿದೆ. ಕನ್ನಡಿಗರಿಗೆ ತಮ್ಮ ನುಡಿಯ ಮೇಲಿರುವ ಕೀಳರಿಮೆಯನ್ನು ಇಲ್ಲವಾಗಿಸುವಲ್ಲಿಯೂ ಇದು ನೆರವಾಗಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹ ಕನ್ನಡ ಮತ್ತು ಆಡುಗನ್ನಡ

ನುಡಿಯರಿಮೆಯ ಇಣುಕುನೋಟ – 1

ಆಡುನುಡಿಯೆಂಬುದು ಜಾಗದಿಂದ ಜಾಗಕ್ಕೆ ಬದಲಾಗುವುದು ಸಹಜ. ನಮ್ಮ ನಲ್ಮೆಯ ಕನ್ನಡ ನುಡಿಗೂ ಈ ಮಾತು ಒಪ್ಪುತ್ತದೆ. ಬೇರೆ ಬೇರೆ ಊರುಗಳಲ್ಲಿರುವ ಕನ್ನಡಿಗರು ಬೇರೆ ಬೇರೆ ಆಡುಗನ್ನಡಗಳನ್ನು ಬಳಸುವುದು ನಮ್ಮೆಲ್ಲರ ಗಮನಕ್ಕೆ ಬಂದಿರುತ್ತದೆ. ಹಾಗೆಯೇ ಜಾತಿಯಿಂದ ಜಾತಿಗೂ ಆಡುಗನ್ನಡ ಬದಲಾಗುವುದನ್ನೂ ನಾವೆಲ್ಲರೂ ಕಂಡಿರುತ್ತೇವೆ. ಎತ್ತುಗೆಗಾಗಿ, ಮಯ್ಸೂರಿನ ಆಡುಗನ್ನಡಕ್ಕೂ ಹುಬ್ಬಳ್ಳಿಯ ಆಡುಗನ್ನಡಕ್ಕೂ ನಡುವೆ, ಮತ್ತು ಮಯ್ಸೂರಿನಲ್ಲೇನೇ ಬ್ರಾಹ್ಮಣರ ಆಡುಗನ್ನಡಕ್ಕೂ ಒಕ್ಕಲಿಗರ ಆಡುಗನ್ನಡಕ್ಕೂ ನಡುವೆ ವ್ಯತ್ಯಾಸವಿದೆ.

ಆದರೆ, ಬರಹ ಕನ್ನಡ ಹೀಗೆ ಬೇರೆ ಬೇರೆಯಾಗಿ ಇರುವಂತಿಲ್ಲ. ಅದು ಎಲ್ಲರಿಗೂ ಸಮನಾಗಿದ್ದು, ‘ಎಲ್ಲರ ಕನ್ನಡ’ವಾಗಿರಬೇಕಾಗುತ್ತದೆ; ಯಾಕೆಂದರೆ, ಜಾಗ ಮತ್ತು ಜಾತಿಗಳ ಎಲ್ಲೆಗಳನ್ನು ಮೀರಿ ಜನರನ್ನು ಬೆಸೆಯುವ ಒಂದು ವಿಶೇಶವಾದ ಕೆಲಸ ಅದರದು. ಹಲವು ಬಗೆಯ ಆಡುಗನ್ನಡಗಳನ್ನು ಬಳಸುವ ಎಲ್ಲಾ ಕನ್ನಡಿಗರಿಗೂ ಸಮಾನವಾಗಿರಬೇಕಾದಂತಹ ಬರಹ ಕನ್ನಡ ಅವರೆಲ್ಲರ ಆಡುಗನ್ನಡಕ್ಕಿಂತಲೂ ಬೇರಾಗಿಯೇ ಇರಬೇಕಾಗುತ್ತದೆ ಎಂದು ಸುಲಬವಾಗಿ ಕಾಣಬಹುದು.

ಬರಹ ಕನ್ನಡ ಬೇರೆ ಬೇರೆ ಆಡುಗನ್ನಡಗಳಿಗಿಂತ ಬೇರಾಗಿರಬೇಕಾದುದು ಅನಿವಾರ‍್ಯ ಎಂದ ಮಾತ್ರಕ್ಕೆ ಅದು ಅವುಗಳಿಗಿಂತ ತುಂಬಾ ದೂರದಲ್ಲಿರುವುದೂ ಅನಿವಾರ‍್ಯ ಎಂದೇನಿಲ್ಲ; ಆದಶ್ಟು ಹತ್ತಿರವೂ ಇರಬಹುದು. ಅದು ನಮ್ಮೆಲ್ಲರಿಗಿಂತ ದೂರದಲ್ಲಿರಬೇಕೋ ಹತ್ತಿರದಲ್ಲಿರಬೇಕೋ ಎಂಬ ಪ್ರಶ್ನೆಯನ್ನು ಹಾಕಿಕೊಂಡರೆ, ಯಾರೂ ‘ದೂರದಲ್ಲಿರಬೇಕು’ ಎಂಬ ಉತ್ತರವನ್ನು ಕೊಡಲಾರರು. ಬರಹ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೂ ಆದಶ್ಟು ಹತ್ತಿರವಿರುವಂತೆ ಮಾಡಿದಲ್ಲಿ, ಕನ್ನಡವನ್ನು ಓದಲು ಮತ್ತು ಬರೆಯಲು ಕಲಿಯುವ ಕೆಲಸ ಎಲ್ಲಾ ಕನ್ನಡಿಗರಿಗೂ ಸುಲಬವಾಗುತ್ತದೆ ಎಂದು ಯಾರಾದರೂ ಕಾಣಬಹುದು. ಆದುದರಿಂದ ಹಾಗೆ ಮಾಡಬೇಕಾಗಿರುವುದು ಕನ್ನಡದ ಮತ್ತು ಅದರ ಮೂಲಕ ಕನ್ನಡಿಗರ ಏಳಿಗೆಗೆ ಬಹಳ ಮುಕ್ಯವಾದ ಕೆಲಸ.

ಎಲ್ಲರಿಗೂ ಆದಶ್ಟು ಹತ್ತಿರವಿರುವ ಬರಹ ಕನ್ನಡದಲ್ಲಿ ಸಂಸ್ಕ್ರುತ, ಇಂಗ್ಲಿಶ್, ಹಿಂದಿ ಮೊದಲಾದ ಬೇರೆ ನುಡಿಗಳಿಂದ ಪಡೆಯುವ ಎರವಲು ಪದಗಳನ್ನು ಒಂದು ಮಿತಿಯಲ್ಲಿರಿಸಿಕೊಳ್ಳುವುದು ಅನಿವಾರ‍್ಯವೆಂದು ಹೇಳಬೇಕಾಗಿಯೇ ಇಲ್ಲ. ಜಾಗ ಮತ್ತು ಜಾತಿಯ ತಾರತಮ್ಯವಿಲ್ಲದೆ ಎಲ್ಲರೂ ಬರಹವನ್ನು ಬಳಸತೊಡಗಿದಾಗ, ಅಂತಹ ಎರವಲು ಪದಗಳು ಒಂದು ಮಿತಿಯಲ್ಲಿ ಇದ್ದೇ ಇರುತ್ತವೆ; ಬಹುಶಹ ನೂರಕ್ಕೆ ಅಯ್ದು ಇಲ್ಲವೇ ಹತ್ತಕ್ಕಿಂತ ಹೆಚ್ಚು ಇರಲಾರವು. ತನ್ನ ಸೊಗಡನ್ನು ಉಳಿಸಿಕೊಂಡಿರುವ ಅಂತಹ ಬರಹಗಳನ್ನು ಓದುವ ಮತ್ತು ಬರೆಯುವ ಕೆಲಸ ಕೆಲವರಿಗಶ್ಟೇ ಅಲ್ಲ, ಎಲ್ಲರಿಗೂ ಸುಲಬದ್ದಾಗುತ್ತದೆ.

ಹಲವು ಕಡೆ ಕನ್ನಡದ್ದೇ ಆದ ಪದಗಳನ್ನು ಬರಹ ಕನ್ನಡದಲ್ಲಿ ಬಳಸುವುದು ಒಳ್ಳೆಯ ಬರವಣಿಗೆಯ ಗುರುತಲ್ಲ ಎಂಬ ಒಂದು ವಿಚಿತ್ರವಾದ ಅನಿಸಿಕೆ ಕೆಲವರಲ್ಲಿದೆ; ಕನ್ನಡದ್ದೇ ಆದ ಪದಗಳ ಬದಲು ಸಂಸ್ಕ್ರುತದ ಎರವಲುಗಳನ್ನು ಬಳಸುವುದರಿಂದ ಬರಹ ಮೇಲ್ಮಟ್ಟದ್ದಾಗುತ್ತದೆಯೆಂಬ ಬ್ರಮೆ ಅದೇಕೋ ಅವರಲ್ಲಿದೆ. ‘ನಾಯಿ’ ಎಂದು ಬರೆಯುವ ಬದಲು ‘ಶ್ವಾನ’ ಎಂದು ಬರೆಯುವುದು, ‘ಕೂದಲು’ ಎಂಬುದರ ಬದಲು ‘ಕೇಶ’ ಎನ್ನುವುದು, ‘ಹಲ್ಲು’ ಎನ್ನುವ ಬದಲು ‘ದಂತ’ ಎನ್ನುವುದು, ‘ಕೂಡಿಸುವುದು’ ಎನ್ನುವ ಬದಲು ‘ಸಂಕಲನ’ ಎನ್ನುವುದು, ಇವೆಲ್ಲ ಮೇಲ್ಮಟ್ಟದ ಕನ್ನಡ ಬರವಣಿಗೆಯ ಗುರುತುಗಳು ಎಂದು ಹಲವರು ತಿಳಿದಿದ್ದಾರೆ. ಆದರೆ ಈ ರೀತಿಯ ಬಳಕೆಗಳು ಬರಹ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸುವಂತವಲ್ಲ, ದೂರವಾಗಿಸುವಂತವು ಎಂದು ತಿಳಿದುಕೊಳ್ಳಲು ಕಶ್ಟವಿಲ್ಲ.

ಹೊಸ ಹೊಸ ಪದಗಳನ್ನು ಉಂಟುಮಾಡಬೇಕಾದಾಗಲಂತೂ ಸಂಸ್ಕ್ರುತವನ್ನು ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂದು ಹೆಚ್ಚಿನ ಕನ್ನಡದ ಬರಹಗಾರರೂ ತಿಳಿದಿದ್ದಾರೆ. ಆದರೆ ಅಂತಹ ಪದಗಳನ್ನು ಬಳಸಿರುವ ಕನ್ನಡ ಬರಹ ಎಲ್ಲರಿಗೂ ಹತ್ತಿರವಾಗುವ ಬದಲು ದೂರ ಉಳಿಯುತ್ತದೆ, ಮತ್ತು ಅದನ್ನು ಕಲಿಯುವ ಮತ್ತು ಬಳಸುವ ಕೆಲಸ ಹೆಚ್ಚಿನ ಕನ್ನಡಿಗರಿಗೂ ತೊಡಕಿನದಾಗುತ್ತದೆ. ಹೊಸ ಪದಗಳನ್ನು ಉಂಟುಮಾಡುವುದರ ಗುರಿ ಕನ್ನಡಿಗರಿಗೆಲ್ಲ ಆ ಪದಗಳು ಸೂಚಿಸುವ ವಿಶಯ ಇಲ್ಲವೇ ವಸ್ತುವಿನ ಪರಿಚಯ ಮಾಡಿಸುವುದು ಎಂಬುದನ್ನು ನೆನಪಿನಲ್ಲಿಟ್ಟರೆ ಹೆಜ್ಜೆಹೆಜ್ಜೆಗೂ ಸಂಸ್ಕ್ರುತವನ್ನು ಮೊರೆಹೊಗುವುದು ತಾನೇ ನಿಲ್ಲುತ್ತದೆ.

ಹೊಸ ಪದಗಳನ್ನು ಉಂಟುಮಾಡಲು ಕನ್ನಡದ್ದೇ ಆದ ಪದಗಳನ್ನು ಮತ್ತು ಬೇರುಗಳನ್ನು ಬಳಸಬಹುದು; ಇವು ಹೊಸಗನ್ನಡದಲ್ಲಿ ಸಿಗದಿದ್ದರೆ ಹಳೆಗನ್ನಡದಿಂದ, ಇಲ್ಲವೇ ಆಡುಗನ್ನಡಗಳಿಂದ ಪಡೆದುಕೊಳ್ಳಬಹುದು. ಹೆಚ್ಚಿನವರೂ ಕೇಳಿಲ್ಲದ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಸಂಸ್ಕ್ರುತದವು ಎಂಬ ಒಂದೇ ಕಾರಣಕ್ಕಾಗಿ ಬಳಸಿ ಹೊಸ ಪದಗಳನ್ನು ಉಂಟುಮಾಡುವುದಕ್ಕಿಂತಲೂ, ಹೆಚ್ಚಿನವರೂ ಕೇಳಿರುವ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಯಾವ ನುಡಿಯವಾಗಿದ್ದರೂ (ಎತ್ತುಗೆಗೆ ಇಂಗ್ಲೀಶಿನವಾಗಿದ್ದರೂ) ಎರವಲಾಗಿ ಪಡೆದು ಬಳಸಿಕೊಳ್ಳಬಹುದು.

ಇವತ್ತು ಕನ್ನಡ ಬರಹದಲ್ಲಿ ಕನ್ನಡಕ್ಕೆ ನಿಜಕ್ಕೂ ಬೇಡದಿರುವ ಹಲವು ಬರಿಗೆಗಳನ್ನು (ಅಕ್ಶರಗಳನ್ನು) ಬಳಸಲಾಗುತ್ತದೆ; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಸಂಸ್ಕ್ರುತದಲ್ಲಿ ಇರುವ ಹಾಗೆಯೇ ಬರೆಯಬೇಕು (ಕೆಲವು ಅಪವಾದಗಳನ್ನು ಹೊರತುಪಡಿಸಿ) ಎಂಬ ಕಟ್ಟಲೆಯೊಂದನ್ನು ಉಳಿಸಿಕೊಳ್ಳುವುದಕ್ಕಾಗಿ ಹತ್ತು ಮಹಾಪ್ರಾಣ ಬರಿಗೆಗಳು, ಋಕಾರ, ಷಕಾರ, ಐ, ಔ, ಙ, ಞ, ವಿಸರ‍್ಗ ಎಂಬಂತಹ ಒಟ್ಟು ಹದಿನೇಳು ಹೆಚ್ಚಿನ ಬರಿಗೆಗಳನ್ನು ಕನ್ನಡ ಬರಹದಲ್ಲಿ ಬಳಸಲಾಗುತ್ತಿದೆ. (ಇದಲ್ಲದೆ ರಕಾರಕ್ಕೆ ಎಂಬ ಒಂದು ಹೆಚ್ಚಿನ ರೂಪವನ್ನೂ ಬಳಸಲಾಗುತ್ತಿದೆ.)

ಇವುಗಳಲ್ಲಿ ಹೆಚ್ಚಿನವೂ ಕನ್ನಡ ಬರಹದ ಓದಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಓದಿನಲ್ಲಿಲ್ಲದ ಬರಿಗೆಗಳನ್ನು ಬರಹದಲ್ಲಿ ಕಾಣಿಸುವುದು ತುಂಬಾ ತೊಡಕಿನ ಕೆಲಸ; ಎಶ್ಟು ತೊಡಕಿನ ಕೆಲಸವೆಂಬುದು ಇವತ್ತಿನ ಕನ್ನಡ ಬರಹಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗುತ್ತದೆ: ಅವುಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸಿಕೊಳ್ಳುವುದು ಮಹಾಪ್ರಾಣದಂತಹ ಈ ಹೆಚ್ಚಿನ ಬರಿಗೆಗಳನ್ನು ಬಳಸುವುದರಲ್ಲೇ ಆಗಿದೆ.

ಬರಹದ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೆ ಹತ್ತಿರ ತರಲು ಬೇಡದ ಈ ಹದಿನೇಳು ಬರಿಗೆಗಳನ್ನು ಬಿಟ್ಟುಬಿಡುವುದೇ ಒಳಿತು. ಹಾಗೆಯೇ ಇಂಗ್ಲಿಶ್, ಹಿಂದಿ, ಮರಾಟಿ, ಉರ‍್ದು, ಮೊದಲಾದ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳ ಹಾಗೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನೂ ಹೆಚ್ಚಿನ ಕನ್ನಡಿಗರೂ ಓದುವ ಹಾಗೆಯೇ ಬರೆಯುವುದು ಒಳಿತು. ಅವನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬೇಕೆಂಬ ಕಟ್ಟಳೆಯನ್ನು ಉಳಿಸಿಕೊಳ್ಳಬೇಕಾಗಿಲ್ಲ.

ಹಳೆಗನ್ನಡದ ಸಮಯದಲ್ಲಿ ಕನ್ನಡಿಗರಿಗೆ ಇಂತಹದೊಂದು ಸ್ವಾತಂತ್ರ್ಯವಿತ್ತು; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಅವರು ಸಂಸ್ಕ್ರುತದಲ್ಲಿರುವ ಹಾಗೆಯೇ ಬೇಕಿದ್ದರೂ ಬರೆಯಬಲ್ಲವರಾಗಿದ್ದರು; ಇಲ್ಲವೇ ಕನ್ನಡದ ಸ್ವರೂಪಕ್ಕೆ ಹೊಂದಿಕೆಯಾಗುವ ಹಾಗೆ ಅದರಲ್ಲಿ ಮಾರ‍್ಪಾಡುಗಳನ್ನು ಮಾಡಿಯೂ ಬಳಸಬಲ್ಲವರಾಗಿದ್ದರು.
ಬರಹದ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸಲು ಈಗ ಕನ್ನಡಿಗರು ಮಾಡಬೇಕಿರುವ ಮಾರ‍್ಪಾಡು ಇದಕ್ಕಿಂತ ಬೇರಾದುದೇನಲ್ಲ. ಮಿತಿಯಿಲ್ಲದೆ ಸಂಸ್ಕ್ರುತದಿಂದ ಎರವಲಾಗಿ ಪಡೆಯುವುದನ್ನು ಕಡಿಮೆ ಮಾಡುವುದು, ಮತ್ತು ಸಂಸ್ಕ್ರುತ ಬಲ್ಲವರು ಮಾತ್ರವಲ್ಲದೆ ಎಲ್ಲರೂ ಬರಹ ಕನ್ನಡದಿಂದ ಪಡೆಯುವುದನ್ನು ಪಡೆಯುವುದಶ್ಟೇ ಅಲ್ಲದೆ, ಬರಹ ಕನ್ನಡದ ಮೂಲಕ ಕೊಡುವುದನ್ನು ಎಲ್ಲರೂ ಕೊಡುವಂತೆಯೂ ಮಾಡುವುದು ಕನ್ನಡದ ಏಳಿಗೆಗೆ ಇಂದು ಅನಿವಾರ‍್ಯವಾಗಿದೆ.

ಈ ಇಪ್ಪತ್ತೊಂದನೆಯ ಶತಮಾನದಲ್ಲೂ ಹಲವು ಮಂದಿ ಕನ್ನಡಿಗರು ಬರವಣಿಗೆಯ ಪ್ರಪಂಚದಲ್ಲಿ ಆಟಕ್ಕಶ್ಟೇ ಅಲ್ಲ, ಲೆಕ್ಕಕ್ಕೆ ಬರುವಂತೆಯೂ ಪಾಲ್ಗೊಳ್ಳಲು ಆಗದಿರಲು ಹಲವು ಬಗೆಯ ತೊಡಕುಗಳು ಕಾರಣವಾಗಿವೆ. ಎತ್ತುಗೆಗಾಗಿ, ಕೆಳವರ‍್ಗದ ಜನರ ಬಡತನ ಮತ್ತು ಅರಿಯಮೆಗಳು ಅವರ ಮಕ್ಕಳನ್ನು ಶಾಲೆಗಳಿಂದ ದೂರ ಇರಿಸುತ್ತವೆ. ಹಲವರಾದ ಅವರ ಕನ್ನಡಕ್ಕಿಂತ ಕೆಲವರಾದ ತಮ್ಮ ಕನ್ನಡಕ್ಕೆ ಹತ್ತಿರವಿರುವಂತೆಯೇ ಬರಹದ ಕನ್ನಡವನ್ನು ಇಟ್ಟುಕೊಳ್ಳಲು ಮೇಲ್ವರ‍್ಗದವರು ಬಯಸುವುದು ಇದಕ್ಕೆ ಒತ್ತಾಸೆಯಾಗಿರುತ್ತದೆ. ಕೆಳವರ‍್ಗದವರನ್ನು ಅವರಿರುವಲ್ಲಿಯೇ ಇರಲು ಬಿಡುವುದು ಮೇಲ್ವರ‍್ಗದವರ ಮನದಾಳದ ಬಯಕೆಯಾಗಿರಲಿಕ್ಕಿಲ್ಲ; ಕನ್ನಡಿಗರ ನೆತ್ತರಿನಲ್ಲಿ ಇಂತಹ ನಂಜಿಲ್ಲ. ಆದರೂ ಅವರು ಇರುವಲ್ಲೇ ಇರುವಂತೆ ಮಾಡುತ್ತಿರುವ ಕೆಲವು ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿಕೊಳ್ಳುವುದು ಹಿರಿಮೆಯಾದೀತು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter