Posts Tagged ‘ಆಡುಗನ್ನಡ’

ಹೆಚ್ಚು ಬರಿಗೆಗಳಿರುವುದು ಸಿರಿತನವಲ್ಲ

ನುಡಿಯರಿಮೆಯ ಇಣುಕುನೋಟ – 13

ಕನ್ನಡ ಪದಗಳನ್ನು ಹೆಚ್ಚಿನವರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ನಮಗೆ ಬೇಕಾಗುವುದು ಒಟ್ಟು 31 ಬರಿಗೆಗಳು ಮಾತ್ರ. ಆದರೆ, ಇವತ್ತು ನಾವು ಕನ್ನಡ ಬರಹಗಳಲ್ಲಿ 48 (ಇಲ್ಲವೇ ಅದಕ್ಕಿಂತಲೂ ಹೆಚ್ಚು) ಬರಿಗೆಗಳನ್ನು ಬಳಸುತ್ತಿದ್ದೇವೆ. ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಟ್ಟಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ಸುಲಬವಾಗಬಲ್ಲುದು.

ಇದನ್ನು ವಿರೋದಿಸುವವರಲ್ಲಿ ಕೆಲವರ ವಾದ ಹೀಗಿರುತ್ತದೆ: ಕನ್ನಡ ಬರಹದಲ್ಲಿ ಈ ರೀತಿ ಹೆಚ್ಚು ಬರಿಗೆಗಳಿರುವುದು ಅದರ ಶ್ರೀಮಂತಿಕೆ; ಅವನ್ನು ಕಳೆದುಕೊಳ್ಳುವುದೆಂದರೆ, ಕನ್ನಡ ಬರಹವನ್ನು ಬಡತನಕ್ಕೆ ನೂಕಿದ ಹಾಗೆ, ಮತ್ತು ಅದರ ಸಂಸ್ಕ್ರುತಿಯನ್ನು ನಾಶಮಾಡಿದ ಹಾಗೆ.

ಆದರೆ, ಈ ವಾದ ನಿಜಕ್ಕೂ ಸರಿಯಲ್ಲ; ಪದಗಳನ್ನು ಓದುವ ಹಾಗೆಯೇ ಬರೆಯಲು ಎಶ್ಟು ಬರಿಗೆಗಳು ಬೇಕಾಗುತ್ತವೆಯೋ ಅಶ್ಟನ್ನು ಮಾತ್ರ ಉಳಿಸಿಕೊಂಡಿರುವ ಬರಹವೇ ತುಂಬಾ ಒಳ್ಳೆಯ ಬರಹವೆಂದೆನಿಸುತ್ತದೆ. ಬೇಕಾದುದಕ್ಕಿಂತ ಹೆಚ್ಚು ಬರಿಗೆಗಳನ್ನು ಬಳಸುವ ಬರಹವನ್ನು ಕಲಿಯುವುದೂ ಕಶ್ಟ, ಬಳಸುವುದೂ ಕಶ್ಟ.

ಹಳೆಗನ್ನಡದಲ್ಲಿ ಱ ಮತ್ತು ೞಗಳೆಂಬ ಎರಡು ಹೆಚ್ಚಿನ ಬರಿಗೆಗಳಿದ್ದುವು; ಆ ಕಾಲದಲ್ಲಿ ರ-ಱ ಮತ್ತು ಳ-ೞಗಳ ನಡುವೆ ಓದಿನಲ್ಲಿ ವ್ಯತ್ಯಾಸವಿದ್ದ ಕಾರಣ, ಅವನ್ನು ಬರಹದಲ್ಲಿ ಬಳಸುತ್ತಿದ್ದುದು ಹಳೆಗನ್ನಡದ ಮಟ್ಟಿಗೆ ಸಿರಿತನವಾಗಿತ್ತು; ಆದರೆ, ಇವತ್ತು ನಾವು ಅವೆರಡು ಬರಿಗೆಗಳನ್ನೂ ಬಿಟ್ಟುಕೊಟ್ಟಿದ್ದೇವೆ; ಯಾಕೆಂದರೆ, ನಮ್ಮ ಓದಿನಲ್ಲಿ ಅವುಗಳ ನಡುವಿನ ವ್ಯತ್ಯಾಸ ಇಲ್ಲವಾಗಿದೆ.

ಈ ಹೆಚ್ಚಿನ ಬರಿಗೆಗಳಿರುವುದು ಸಿರಿತನವೆಂದು, ಇಲ್ಲವೇ ಕನ್ನಡ ಬರಹದ ಸಂಸ್ಕ್ರುತಿಯೆಂದು ಅವನ್ನು ಇವತ್ತಿಗೂ ಉಳಿಸಿಕೊಂಡಿದ್ದಲ್ಲಿ, ನಮ್ಮ ಓದಿನಲ್ಲಿಲ್ಲದ ಈ ಎರಡು ಬಗೆಯ ವ್ಯತ್ಯಾಸಗಳನ್ನು ಬರಹದಲ್ಲಿ ಕಾಣಿಸುವ ಒಂದು ದೊಡ್ಡ ತೊಡಕು ನಮ್ಮದಾಗುತ್ತಿತ್ತು. ಕರೆ ‘ಬರಹೇಳು’, ಕರೆ ‘ಹಾಲು ಕರೆ’, ಊರು ‘ಹಳ್ಳಿ’, ಊರು ‘ನಿಲ್ಲಿಸು’, ತೆರೆ ‘ಕಡಲಿನ ತೆರೆ’, ತೆರೆ ‘ಬಾಗಿಲು ತೆರೆ’ ಎಂಬಂತಹ ಹಲವಾರು ಪದಗಳನ್ನು ಬರೆಯುವಾಗ, ಯಾವ ಪದದಲ್ಲಿ ರಕಾರವನ್ನು ಬಳಸಬೇಕು, ಮತ್ತು ಯಾವುದರಲ್ಲಿ ಱಕಾರವನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು. ಯಾಕೆಂದರೆ, ಮೇಲಿನ ಪದಜೋಡಿಗಳಲ್ಲಿ ರಕಾರವನ್ನು ಮೊದಲನೆಯದರಲ್ಲೂ ಱಕಾರವನ್ನು ಎರಡನೆಯದರಲ್ಲೂ ಬಳಸಬೇಕಾಗುತ್ತಿತ್ತು.

ಇದೇ ರೀತಿಯಲ್ಲಿ, ಉಳಿ ‘ಕೆತ್ತುವ ಉಳಿ’, ಉಳಿ ‘ ಮನೆಯಲ್ಲಿ ಉಳಿ’, ಎಳೆ ‘ಎಳತು’, ಎಳೆ ‘ಎಳೆದಾಡು’, ಬಳಸು ‘ನೇರವಲ್ಲದ’, ಬಳಸು ‘ಉಪಯೋಗಿಸು’ ಎಂಬಂತಹ ಬೇರೆ ಹಲವಾರು ಪದಜೋಡಿಗಳಲ್ಲಿ ಳಕಾರವನ್ನು ಯಾವ ಪದದಲ್ಲಿ ಬಳಸಬೇಕು ಮತ್ತು ೞಕಾರವನ್ನು ಯಾವ ಪದದಲ್ಲಿ ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು (ಎರಡನೆಯ ಪದದಲ್ಲಿ ೞಕಾರವಿತ್ತು).

ಹೊಸಗನ್ನಡವನ್ನು ಬಳಕೆಗೆ ತಂದವರು ಈ ಸಿರಿತನದ ಇಲ್ಲವೇ ಸಂಸ್ಕ್ರುತಿಯ ಹೊರೆಯನ್ನು ನಮ್ಮ ಮೇಲೆ ಹೊರಿಸ ಹೋಗದೆ ಒಂದು ದೊಡ್ಡ ಉಪಕಾರವನ್ನೇ ಮಾಡಿದ್ದಾರೆ. ಆದರೆ, ಸಂಸ್ಕ್ರುತದಿಂದ ಬಂದ ಎರವಲು ಪದಗಳ ಮಟ್ಟಿಗೆ ಮಾತ್ರ, ಅವರು ಇಂತಹದೇ ಇನ್ನೊಂದು ಬಗೆಯ ತೊಡಕನ್ನು ಇಲ್ಲವಾಗಿಸದೆ ಹಾಗೆಯೇ ಉಳಿಸಿದ್ದಾರೆ. ಸಂಸ್ಕ್ರುತದ ವಿಶಯವಾಗಿ ಅವರಿಗಿದ್ದ ಮೇಲರಿಮೆಯೇ ಇದಕ್ಕೆ ಕಾರಣ.

ಈ ಎರವಲು ಪದಗಳಲ್ಲಿ ಬರುವ ರು-ಋ, ಶ-ಷ, ಅಲ್ಪಪ್ರಾಣ-ಮಹಾಪ್ರಾಣ ಮೊದಲಾದವುಗಳ ನಡುವಿನ ವ್ಯತ್ಯಾಸ ಹೆಚ್ಚಿನ ಕನ್ನಡಿಗರ ಓದಿನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಹಾಗಾಗಿ, ಅವನ್ನು ಬರಹದಲ್ಲಿ ಕಾಣಿಸಬೇಕಿದ್ದರೆ, ಯಾವ ಪದದಲ್ಲಿ ಯಾವುದನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ. ಹಳೆಗನ್ನಡದ ರ-ಱ ಮತ್ತು ಳ-ೞ ವ್ಯತ್ಯಾಸಗಳ ಹಾಗೆಯೇ ಇವೂ ಕೂಡ ಕನ್ನಡ ಬರಹವನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ಹೆಚ್ಚಿನ ಕನ್ನಡಿಗರಿಗೂ ಅನವಶ್ಯಕವಾಗಿ ತೊಡಕನ್ನು ಉಂಟುಮಾಡುತ್ತವೆ.

ಸಂಸ್ಕ್ರುತ ಎರವಲುಗಳಾದ ಅವಶ್ಯ-ಮನುಷ್ಯ, ವಿಶಾಲ-ಕಷಾಯ, ಕೃಶ-ಕೃಷಿ, ಶಿಶು-ವಿಷು, ನಶಿಸು-ದೂಷಿಸು, ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಶ-ಷ ವ್ಯತ್ಯಾಸ ಕಾಣಿಸುತ್ತದೆ, ಆದರೆ ಅವುಗಳ ಓದಿನಲ್ಲಿ ಕಾಣಿಸುವುದಿಲ್ಲ; ಇದೇ ರೀತಿಯಲ್ಲಿ ಬೋಧಿಸು-ಭೇದಿಸು, ವರ್ಧಿಸು-ಮರ್ದಿಸು, ವಿಧಾನ-ವಿದಾಯ, ಸಂಪಾದಿಸು-ಸಂಬಂಧಿಸು ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಕಾಣಿಸುವ ಅಲ್ಪಪ್ರಾಣ-ಮಹಾಪ್ರಾಣ ವ್ಯತ್ಯಾಸವೂ ಓದಿನಲ್ಲಿಲ್ಲ.

ಹಳೆಗನ್ನಡದ ವ್ಯತ್ಯಾಸಗಳ ಹಾಗೆ, ಓದಿನಲ್ಲಿಲ್ಲದ ಈ ಸಂಸ್ಕ್ರುತ ಎರವಲುಗಳ ನಡುವಿನ ವ್ಯತ್ಯಾಸವನ್ನೂ ಬಿಟ್ಟುಕೊಡುವ ಮೂಲಕ ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗುವ ಹಾಗೆ ಮಾಡಬೇಕಾಗಿದೆ, ಮತ್ತು ಅದು ಎಲ್ಲಾ ಕನ್ನಡಿಗರನ್ನೂ ತಲಪುವ ಹಾಗೆ ಮಾಡಬೇಕಾಗಿದೆ. ಓದಿನಲ್ಲಿ ಕಾಣಿಸಿಕೊಳ್ಳದ ಈ ಹೆಚ್ಚಿನ ಬರಿಗೆಗಳು ಕನ್ನಡ ಬರಹದ ಸಿರಿವಂತಿಕೆಯೂ ಅಲ್ಲ, ಸಂಸ್ಕ್ರುತಿಯೂ ಅಲ್ಲ. ಕನ್ನಡ ಬರಹವನ್ನು ಬಳಸುವಲ್ಲಿ ಅವು ಒಂದು ಅವಶ್ಯವಿಲ್ಲದ ಹೊರೆ ಮಾತ್ರ.

ಓದಿನಲ್ಲಿಲ್ಲದ ಬರಿಗೆ ಒಂದು ಬರಹಕ್ಕೆ ಬೇಕಾಗುವುದಿಲ್ಲವೆಂಬುದಕ್ಕೆ ಸಂಸ್ಕ್ರುತದಿಂದಲೇ ಒಂದು ಎತ್ತುಗೆಯನ್ನು ಕೊಡಬಹುದು: ಕನ್ನಡ ಬರಹದಲ್ಲಿ ಎ-ಏ ಮತ್ತು ಒ-ಓ ಎಂಬ ವ್ಯತ್ಯಾಸ ಇದೆ; ಆದರೆ, ಸಂಸ್ಕ್ರುತ ಬರಹದಲ್ಲಿ ಈ ವ್ಯತ್ಯಾಸವಿಲ್ಲ. ಆದರೆ ಈ ಕಾರಣಕ್ಕಾಗಿ, ಕನ್ನಡ ಬರಹ ಸಂಸ್ಕ್ರುತ ಬರಹಕ್ಕಿಂತ ಹೆಚ್ಚು ಶ್ರೀಮಂತವಾದುದೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಸಂಸ್ಕ್ರುತ ಪದಗಳ ಓದಿನಲ್ಲಿ ಕಾಣಿಸದಿರುವ ಈ ವ್ಯತ್ಯಾಸ ಸಂಸ್ಕ್ರುತ ಬರಹದಲ್ಲಿ ಇಲ್ಲದಿರುವುದು ಸಂಸ್ಕ್ರುತ ಬರಹದ ಸಿರಿತನವಲ್ಲದೆ ಬಡತನವಲ್ಲ.

ಪದಗಳಲ್ಲಿ ಎಶ್ಟು ಉಲಿಗಳು ಬಳಕೆಯಾಗುತ್ತವೆ, ಮತ್ತು ಯಾವ ಉಲಿಗಳು ಬಳಕೆಯಾಗುತ್ತವೆ ಎಂಬ ವಿಶಯದಲ್ಲಿ ನುಡಿಗಳು ಒಂದರಿಂದೊಂದು ತೀರಾ ಬೇರಾಗಿರಬಲ್ಲುವು. ಆಪ್ರಿಕಾದ ಬೊತ್ಸ್‌ವಾನಾದಲ್ಲಿ ಬಳಕೆಯಲ್ಲಿರುವ ಕೆಲವು ನುಡಿಗಳಲ್ಲಿ ನೂರಕ್ಕಿಂತಲೂ ಹೆಚ್ಚು ಉಲಿಗಳು ಬಳಕೆಯಲ್ಲಿದ್ದು, ಅವನ್ನು ಓದುವಂತೆ ಬರೆಯಲು ನೂರಕ್ಕಿಂತಲೂ ಹೆಚ್ಚು ಬರಿಗೆಗಳು ಬೇಕಾಗುತ್ತವೆ. ಇದಕ್ಕೆ ಬದಲು, ಪಾಪುವಾ ನ್ಯೂಗಿನಿಯ ರೋತೋಕಸ್ ಎಂಬ ನುಡಿಯಲ್ಲಿ ಹತ್ತು-ಹನ್ನೆರಡು ಉಲಿಗಳು ಮಾತ್ರ ಬಳಕೆಯಲ್ಲಿದ್ದು, ಅವನ್ನು ಓದುವ ಹಾಗೆ ಬರೆಯಲು ಹತ್ತು-ಹನ್ನೆರಡು ಬರಿಗೆಗಳು ಮಾತ್ರ ಸಾಕಾಗುತ್ತವೆ.

ಜಗತ್ತಿನಲ್ಲಿರುವ ಎಲ್ಲಾ ನುಡಿಗಳಲ್ಲೂ ಬಳಕೆಯಲ್ಲಿರುವ ಉಲಿಗಳನ್ನು ಬರೆಯಬೇಕಿದ್ದಲ್ಲಿ ನೂರಾರು ಬರಿಗೆಗಳು ಮತ್ತು ಇನ್ನೂ ಹಲವಾರು ಬಗೆಯ ಗುರುತುಗಳು ಬೇಕಾಗುತ್ತವೆ. ಹಾಗಾಗಿ, ಯಾವುದೇ ಒಂದು ನುಡಿಯಲ್ಲೂ ಬೇಕಾದುದಕ್ಕಿಂತ ಹತ್ತೋ ಇಪ್ಪತ್ತೋ ಹೆಚ್ಚು ಬರಿಗೆಗಳಿದ್ದಲ್ಲಿ, ಅವುಗಳ ನೆರವಿನಿಂದ ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವಂತೆಯೇ ಬರೆಯಲು ಬರುತ್ತದೆಯೆಂಬುದು ಪೊಳ್ಳು ವಾದ.

ನಿಜಕ್ಕೂ ಕನ್ನಡ ಬರಹದಲ್ಲಿರುವ ಈ ಹೆಚ್ಚಿನ ಬರಿಗೆಗಳು ಸಂಸ್ಕ್ರುತ ಎರವಲುಗಳನ್ನು ಮಾತ್ರ ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯಲು ನೆರವಾಗುತ್ತವೆ; ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವ ಹಾಗೆ ಬರೆಯಬೇಕಿದ್ದಲ್ಲಿ, ಅದಕ್ಕಾಗಿ ಬೇರೆಯೇ ಹೆಚ್ಚಿನ ಬರಿಗೆಗಳನ್ನು ಉಂಟುಮಾಡಿಕೊಳ್ಳಬೇಕಾಗುತ್ತದೆ. ತುಳು ನುಡಿಯ ಪದಗಳನ್ನು ಅದರಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗಿರುವ ಬರಿಗೆಗಳು ಸಾಕಾಗುವುದಿಲ್ಲ; ಇನ್ನೊಂದು ಹೆಚ್ಚಿನ ಉಕಾರ ಮತ್ತು ಇನ್ನೆರಡು ಹೆಚ್ಚಿನ ಎಕಾರಗಳು ಬೇಕಾಗುತ್ತವೆ.

ನಿಜಕ್ಕೂ ಕನ್ನಡದವೇ ಆದ ಆಡುನುಡಿಗಳನ್ನೂ ಅವುಗಳಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗ ಬಳಕೆಯಾಗುತ್ತಿರುವ ಬರಿಗೆಗಳು ಸಾಕಾಗುವುದಿಲ್ಲ; ಗುಲ್ಬರ‍್ಗ ಕನ್ನಡದಲ್ಲಿ ಬರುವ ಎರಡು ಬಗೆಯ ಅಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ, ಸುಳ್ಯದ ಗವ್ಡ ಕನ್ನಡದಲ್ಲಿ ಬರುವ ಎರಡು ಬಗೆಯ ಉಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ ಬರೆದು ತೋರಿಸಲು ಕನ್ನಡ ಬರಹದಲ್ಲಿ ಬರಿಗೆಗಳಿಲ್ಲ.

ಹಾಗಾಗಿ, ಕನ್ನಡ ಬರಹದಲ್ಲಿ ಬರುವ ಪದಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ಬೇಕಾಗುವ 31 ಬರಿಗೆಗಳನ್ನು ಮಾತ್ರ ಉಳಿಸಿಕೊಳ್ಳುವುದೇ ಜಾಣತನ; ಉಳಿದುವನ್ನೆಲ್ಲ ಹೆಚ್ಚಿನ ಕನ್ನಡಿಗರೂ ಓದಬೇಕಾಗಿರುವ ಬರಹಗಳಿಂದ ತೆಗೆದುಹಾಕಬೇಕಾಗಿದೆ, ಮತ್ತು ಹಾಗೆ ಮಾಡುವ ಮೂಲಕ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಬಳಸುವಂತೆ ಮಾಡಬೇಕಾಗಿದೆ. ಸಂಸ್ಕ್ರುತಿ, ಶ್ರೀಮಂತಿಕೆ ಎಂಬಂತಹ ದೊಡ್ಡ ದೊಡ್ಡ ಪದಗಳನ್ನು ಬಳಸಿ ಓದುಗರು ಗೊಂದಲದಲ್ಲಿ ಬೀಳುವ ಹಾಗೆ ಮಾಡುವುದರಿಂದ ಕನ್ನಡಿಗರಿಗೇನೇ ಅನ್ಯಾಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಯಾವುದು ಕನ್ನಡದ ಸೊಗಡು?

ನುಡಿಯರಿಮೆಯ ಇಣುಕುನೋಟ – 5

ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳನ್ನು ಕನ್ನಡ ಬರಹದಿಂದ ತೆಗೆದುಹಾಕಿದರೆ ಕನ್ನಡದಸೊಗಡು (ಎಂದರೆ ಸಂಸ್ಕ್ರುತಿ) ಅಳಿದುಹೋಗುತ್ತದೆಯೆಂದು ಕೆಲವರಿಗೆ ಅನಿಸುತ್ತದೆ. ಆದರೆ, ನಿಜಕ್ಕೂ ಈ ಮಾರ‍್ಪಾಡು ಕನ್ನಡದ ಸೊಗಡನ್ನು ಉಳಿಸುತ್ತದೆಯಲ್ಲದೆ ಅಳಿಸುವುದಿಲ್ಲ.

ಕನ್ನಡ ಕಾವ್ಯಗಳಲ್ಲಿ ತುಂಬಾ ಸಂಸ್ಕ್ರುತ (ತತ್ಸಮ) ಪದಗಳನ್ನು ಬಳಸಿದೆವಾದರೆ ಅವು ಕಕ್ಕಸ(ಕರ‍್ಕಶ)ವಾಗುತ್ತವೆಯೆಂದು ಕವಿರಾಜಮಾರ‍್ಗದಲ್ಲಿ ಹೇಳಲಾಗಿದೆ; ಆ ರೀತಿ ಕಕ್ಕಸವಾಗದಂತೆ ತನ್ನ ಕಾವ್ಯಗಳಲ್ಲಿ ತದ್ಬವ ಪದಗಳನ್ನು ಮಾತ್ರವೇ ಬಳಸಿರುವ ಆಂಡಯ್ಯನಿಗೆ ‘ಕನ್ನಡದ ಕಾವ’ ಎಂದರೆ, ಕನ್ನಡದ ಸೊಗಡನ್ನು (ಸಂಸ್ಕ್ರುತಿಯನ್ನು) ಕಾಪಾಡಿದವನು ಎಂಬ ಬಿರುದನ್ನು ಕೊಡಲಾಗಿದೆ. ತತ್ಸಮ ಪದಗಳನ್ನು ಬಳಸದುದರಿಂದಾಗಿ ಆತನು ಕನ್ನಡದ ಸೊಗಡನ್ನು ಕಳೆದಿದ್ದಾನೆಂದು ಯಾರೂ ಆತನನ್ನು ದೂರಿಲ್ಲ.

ಸಂಸ್ಕ್ರುತ ಎರವಲುಗಳನ್ನು ಕನ್ನಡಿಗರು ಹೇಗೆ ಓದುತ್ತಾರೋ ಹಾಗೆಯೇ ಬರೆಯೋಣ ಎನ್ನುವುದೂ ಇದೇ ರೀತಿಯಲ್ಲಿ ಕನ್ನಡದ ಸೊಗಡನ್ನು ಉಳಿಸುವ ಪ್ರಯತ್ನವಲ್ಲದೆ ಅಳಿಸುವ ಪ್ರಯತ್ನವಲ್ಲ. ಯಾಕೆಂದರೆ, ಸಂಸ್ಕ್ರುತ ಎರವಲುಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆದಲ್ಲಿ, ಅವು ತದ್ಬವ ಪದಗಳ ಹಾಗೆ ಕನ್ನಡದ ಸೊಗಡನ್ನು ಕಾಪಾಡುತ್ತವೆ.

ಸಂಸ್ಕ್ರುತ ಎರವಲುಗಳನ್ನು ತದ್ಬವರೂಪದಲ್ಲಿ ಬರೆಯುವಾಗ, ಅವುಗಳಲ್ಲಿರುವ ಶ-ಷಗಳ ನಡುವಿನ ವ್ಯತ್ಯಾಸ, ರು-ಋಗಳ ನಡುವಿನ ವ್ಯತ್ಯಾಸ, ಮತ್ತು ಅಲ್ಪಪ್ರಾಣ-ಮಹಾಪ್ರಾಣಗಳ ನಡುವಿನ ವ್ಯತ್ಯಾಸಗಳು ಇಲ್ಲವಾಗುತ್ತವೆ; ಸಂಸ್ಕ್ರುತ ಎರವಲುಗಳನ್ನು ಹೆಚ್ಚಿನ ಕನ್ನಡಿಗರೂ ಓದುವ ಹಾಗೆ ಬರೆಯುವಾಗಲೂ ಇಂತಹವೇ ವ್ಯತ್ಯಾಸಗಳು ಇಲ್ಲವಾಗುತ್ತವೆ. ಹಾಗಾಗಿ, ತದ್ಬವ ಪದಗಳ ಬಳಕೆಯಿಂದ ಹೇಗೆ ಕನ್ನಡ ನುಡಿಯ ಸಂಸ್ಕ್ರುತಿ ನಾಶವಾಗುವುದಿಲ್ಲವೋ ಹಾಗೆಯೇ ಸಂಸ್ಕ್ರುತ ಎರವಲುಗಳನ್ನು ಓದುವ ಹಾಗೆ ಬರೆಯುವುದರಿಂದಲೂ ಕನ್ನಡ ನುಡಿಯ ಸಂಸ್ಕ್ರುತಿ ನಾಶವಾಗುವುದಿಲ್ಲ.

ಹೆಚ್ಚಿನ ಕನ್ನಡಿಗರೂ ಮಹಾಪ್ರಾಣ, ಷಕಾರ, ಋಕಾರ ಮೊದಲಾದುವನ್ನು ಮಾತನಾಡುವಾಗ ಇಲ್ಲವೇ ಓದುವಾಗ ಬಳಸುವುದಿಲ್ಲ ಎಂಬುದಾಗಿ ನಾನು ಹೇಳಿರುವುದು ಬರಿಯ ಊಹೆಯ ಮೇಲಲ್ಲ. ಅದಕ್ಕೆ ಸಾಕಶ್ಟು ಅರಕೆಯ ಆದಾರವಿದೆ: ಸುಮಾರು ಒಂದೂವರೆ ತಿಂಗಳು ಮಯ್ಸೂರು ಜಿಲ್ಲೆಯಲ್ಲೆಲ್ಲ ಸುತ್ತಾಡಿ, ಅಲ್ಲಿನ ಬೇರೆ ಬೇರೆ ಜಾತಿ ಮತ್ತು ಪಂಗಡಗಳ ಜನರ ಮಾತನ್ನು ಗಮನಿಸಿದ್ದೇನೆ. ಆಮೇಲೆ, ಅಂತಹದೇ ಅರಕೆಯನ್ನು ದಕ್ಶಿಣ ಕನ್ನಡ ಮತ್ತು ಗುಲ್ಬರ‍್ಗ ಜಿಲ್ಲೆಗಳಲ್ಲೂ ನಡೆಸಿದ್ದೇನೆ.

ಇದಲ್ಲದೆ, ಹಲವು ಮಂದಿ ಸಂಸ್ಕ್ರುತ ಪಂಡಿತರ ಕನ್ನಡ ಮಾತನ್ನೂ ನಾನು ಗಮನಿಸಿದ್ದೇನೆ. ಬರಿಯ ಪದಗಳನ್ನು ಉಲಿದು ತೋರಿಸುವಾಗ ಅವರು ಈ ವ್ಯತ್ಯಾಸಗಳನ್ನು ಹೆಚ್ಚುಕಡಿಮೆ ಸರಿಯಾಗಿಯೇ ಉಳಿಸಿಕೊಳ್ಳುತ್ತಾರೆ; ಆದರೆ, ಅವನ್ನೇ ಮಾತಿನಲ್ಲಿ ಬಳಸುವಾಗ ಈ ಎಲ್ಲಾ ವ್ಯತ್ಯಾಸಗಳೂ ಇಲ್ಲವಾಗುತ್ತವೆ.

ನಿಜಕ್ಕೂ ಶ-ಷಗಳ ನಡುವೆ, ಇಲ್ಲವೇ ಮಹಾಪ್ರಾಣ-ಅಲ್ಪಪ್ರಾಣಗಳ ನಡುವೆ ಕನ್ನಡಿಗರ ಮಾತಿನಲ್ಲಿ ಯಾವ ವ್ಯತ್ಯಾಸವೂ ಇಲ್ಲ; ಯಾರಾದರೂ ಈ ವ್ಯತ್ಯಾಸ ಕೇಳಿಸುವ ಹಾಗೆ ಮಾತನಾಡಿದರೆ, ಕೇಳುವವರಿಗೆ ಅದು ಅಸ್ವಾಬಾವಿಕವೆಂದು ಅನಿಸುತ್ತದೆ.

ಕನ್ನಡಿಗರ ಮಾತಿನಲ್ಲಿ ಇಲ್ಲವೇ ಓದಿನಲ್ಲಿಲ್ಲದ ಈ ಸಂಸ್ಕ್ರುತ ಪದಗಳ ವ್ಯತ್ಯಾಸವನ್ನು ಕನ್ನಡ ಬರಹದಲ್ಲಿ ಸುಮಾರು ಒಂದೂವರೆ ಸಾವಿರ ವರ‍್ಶಗಳಿಂದಲೂ ಉಳಿಸಿಕೊಂಡು ಬರಲಾಗಿದೆ. ಮೊನ್ನೆ ಮೊನ್ನೆಯ ವರೆಗೂ ಕನ್ನಡ ಬರಹವನ್ನು ಮೇಲ್ವರ‍್ಗದ ಕೆಲವೇ ಕೆಲವು ಮಂದಿ ಮಾತ್ರ ಬಳಸುತ್ತಿದ್ದರಾದ ಕಾರಣ, ಇದು ಅಂತಹ ತೊಡಕಿನ ಸಂಗತಿಯೆಂದು ಯಾರಿಗೂ ಅನಿಸಿರಲಿಲ್ಲ.

ಆದರೆ, ಇವತ್ತು ಎಲ್ಲಾ ವರ‍್ಗದ ಜನರೂ ಕನ್ನಡ ಬರಹವನ್ನು ಕಲಿತು ಬಳಸಲು ತೊಡಗಬೇಕಾಗಿದೆ; ಯಾಕೆಂದರೆ, ಬರಹವನ್ನು ಬಳಸಲಾರದವರು ತಮ್ಮ ಜೀವನದಲ್ಲಿ ಒಂದು ಅತ್ಯಮೂಲ್ಯವಾದ ಸಾದನದಿಂದ ವಂಚಿತರಾಗುತ್ತಾರೆ. ಒಂದು ನಾಡಿನಲ್ಲಿ ಅಂತಹ ಜನ ಹೆಚ್ಚು ಇದ್ದಶ್ಟೂ ಆ ನಾಡು ಹಿಂದೆಯೇ ಉಳಿದಿರುತ್ತದೆ. ಇವತ್ತು ಬರಹಕ್ಕೆ ಅಂತಹ ಪ್ರಾಮುಕ್ಯತೆ ಬಂದಿದೆ.

ಹಾಗಾಗಿ, ಕನ್ನಡ ಬರಹವನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ಒಂದು ದೊಡ್ಡ ತೊಡಕಾಗಿರುವ ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಡುವುದೇ ಇವತ್ತು ನಮ್ಮ ಮುಂದಿರುವ ಸರಿಯಾದ ದಾರಿ. ಹಾಗೆ ಮಾಡುವುದರಿಂದ ಕನ್ನಡ ಬರಹದ ಸೊಗಡು ಇಲ್ಲವೇ ಸಂಸ್ಕ್ರುತಿ ಉಳಿಯುತ್ತದೆಯಲ್ಲದೆ ಅಳಿಯುವುದಿಲ್ಲ; ಅದರ ಮೇಲೆ ಹೊರಿಸಲಾಗಿರುವ ಬೇರೊಂದು ಸಂಸ್ಕ್ರುತಿಯ ಹೊರೆ ಮಾತ್ರ ಇಲ್ಲವಾಗುತ್ತದೆ.

ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಟ್ಟಲ್ಲಿ ಮದ್ಯ-ಮಧ್ಯ, ದನ-ಧನ ಎಂಬಂತಹ ಹಲವು ಪದಗಳ ನಡುವಿನ ವ್ಯತ್ಯಾಸ ಇಲ್ಲವಾಗಿ, ಗೊಂದಲವುಂಟಾಗಬಲ್ಲುದು ಎಂಬುದಾಗಿ ಕೆಲವರು ವಾದಿಸುತ್ತಾರೆ; ಆದರೆ, ಈ ವಾದದಲ್ಲಿ ನಿಜಕ್ಕೂ ತಿರುಳಿಲ್ಲ. ಯಾಕೆಂದರೆ, ಕನ್ನಡಿಗರ ಮಾತಿನಲ್ಲಿ ಇಲ್ಲವೇ ಓದಿನಲ್ಲಿ, ಮೇಲೆ ವಿವರಿಸಿದ ಹಾಗೆ, ಈ ವ್ಯತ್ಯಾಸ ಹೇಗಿದ್ದರೂ ಇಲ್ಲ, ಮತ್ತು ಇದರಿಂದಾಗಿ ಯಾವ ಗೊಂದಲವೂ ಆಗುತ್ತಾ ಇಲ್ಲ.

ಇದಲ್ಲದೆ, ಯಾವುದೇ ಒಂದು ನುಡಿಯ ಪದನೆರಕೆಯನ್ನು ಬಿಡಿಸಿ ನೋಡಿದರೂ ಅದರಲ್ಲಿ ಒಂದಕ್ಕಿಂತ ಹೆಚ್ಚು ಹುರುಳಿರುವ ನೂರಾರು ಪದಗಳು ಕಾಣಲು ಸಿಗುತ್ತವೆ. ಸಂಸ್ಕ್ರುತದಲ್ಲಂತೂ ಇದು ಇನ್ನೂ ಹೆಚ್ಚು; ಅದರ ಹೆಚ್ಚಿನ ಪದಗಳಿಗೂ ಅಯ್ದು ಇಲ್ಲವೇ ಹೆಚ್ಚು ಹುರುಳುಗಳಿವೆಯೆಂದು ಹೇಳಲಾಗುತ್ತದೆ.

ಸಂಸ್ಕ್ರುತದ ಅರ್ಥ ಪದಕ್ಕೆ ‘ಹುರುಳು’ ಮತ್ತು ‘ಹಣ’ ಎಂಬವುಗಳು ಮಾತ್ರವಲ್ಲದೆ, ‘ಉದ್ದೇಶ’, ‘ಕಾರಣ’, ‘ವಸ್ತು’ ಮೊದಲಾದ ಬೇರೆಯೂ ಹಲವು ಹುರುಳುಗಳಿವೆ; ವಿಷ ಪದಕ್ಕೆ ‘ನಂಜು’ ಎಂಬ ಹುರುಳು ಮಾತ್ರವಲ್ಲದೆ, ‘ನೀರು’ ಮತ್ತು ‘ಸೇವಕ’ ಎಂಬ ಹುರುಳುಗಳೂ ಇವೆ (ಮೋನಿಯರ್ ವಿಲ್ಲಿಯಂಸ್ ಅವರ ಸಂಸ್ಕ್ರುತ-ಇಂಗ್ಲಿಶ್ ಡಿಕ್ಶ್‌ನರಿ ನೋಡಿ). ಆದರೆ, ಈ ರೀತಿ ಒಂದೇ ಪದಕ್ಕೆ ಹಲವು ಹುರುಳುಗಳಿರುವುದನ್ನು ಯಾರೂ ಸಂಸ್ಕ್ರುತದ ಕೊರತೆಯೆಂದು ಹೇಳುವುದಿಲ್ಲ; ಅದಕ್ಕೆ ಬದಲಾಗಿ, ಅದು ಸಂಸ್ಕ್ರುತದ ಶ್ರೀಮಂತಿಕೆಯೆಂದು ಹೇಳುತ್ತಾರೆ.

ಸಾಮಾನ್ಯವಾಗಿ ಪದಗಳನ್ನು ಬಳಸಿರುವ ಸಂದರ‍್ಬವೇ ಅವುಗಳನ್ನು ಯಾವ ಹುರುಳಿನಲ್ಲಿ ಬಳಸಲಾಗಿದೆ ಎಂಬುದನ್ನು ತಿಳಿಸುತ್ತದೆ; ‘ಹುಡುಗ ಮಾರ‍್ಗದ ಮದ್ಯದಲ್ಲಿ ನಿಂತಿದ್ದಾನೆ’ ಎಂದು ಬರೆದರೆ, ಅದರಲ್ಲಿ ಮದ್ಯದಲ್ಲಿ ಎಂಬುದನ್ನು ‘ನಡುವೆ’ ಎಂಬ ಹುರುಳಿನಲ್ಲಿ ಬಳಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ; ಇಲ್ಲಿ ಮದ್ಯ ಎಂಬುದಕ್ಕೆ ‘ಸಾರಾಯಿ’ ಎಂಬ ಹುರುಳಿರಬಹುದೆಂದು ಯಾರಿಗೂ ಅನಿಸುವುದಿಲ್ಲ. ಇದನ್ನು ಮಧ್ಯದಲ್ಲಿ ಎಂಬುದಾಗಿ ನೋಡಿ ಬಳಕೆಯಾದವರಿಗೆ ಮಾತ್ರ ಇದು ತಪ್ಪೆಂದು ಅನಿಸುತ್ತದೆ, ಅಶ್ಟೆ. ಹುರುಳಿನ ಗೊಂದಲವೇನೂ ಉಂಟಾಗುವುದಿಲ್ಲ.

ಎರಡು ಹುರುಳುಗಳಿರುವ ಪದಗಳನ್ನು ಅವುಗಳ ಎರಡು ಹುರುಳೂ ಒಟ್ಟಿಗೆ ಬರುವ ಹಾಗೆ ಬರೆಯುವುದು ಕವಿಗಳು, ಮತ್ತು ಬೇಕೆಂದೇ ತಮ್ಮ ಓದುಗರನ್ನು ಗೊಂದಲದಲ್ಲಿ ಸಿಲುಕಿಸಲು ಬಯಸುವವರು ಮಾತ್ರ. ಬಾಕಿ ಉಳಿದವರೆಲ್ಲ ಓದುಗರ ಗಮನಕ್ಕೆ ತಮ್ಮ ಮನಸ್ಸಿನಲ್ಲಿರುವ ಒಂದು ಹುರುಳು ಮಾತ್ರ ಬರುವ ಹಾಗೆ ಬರೆಯುತ್ತಾರೆ; ಈ ವಿಶಯದಲ್ಲಿ ಗೊಂದಲವೇನಾದರೂ ಉಂಟಾಗಬಹುದೆಂಬ ಸಂಶಯ ಅವರಿಗೆ ಇದೆಯಾದಲ್ಲಿ, ಅವರು ಬೇರೆಯೇ ಪದವನ್ನು ಬಳಸುತ್ತಾರೆ, ಇಲ್ಲವೇ ಗೊಂದಲವಾಗದಂತೆ ಸೊಲ್ಲನ್ನು ಮಾರ‍್ಪಡಿಸಿ ಬರೆಯುತ್ತಾರೆ.

ಇದಲ್ಲದೆ, ಸಾಮಾನ್ಯವಾಗಿ ಅಂತಹ ಪದಗಳಿಗಿರುವ ಎರಡು (ಇಲ್ಲವೇ ಹೆಚ್ಚು) ಹುರುಳುಗಳಲ್ಲಿ ಸಂದರ‍್ಬಕ್ಕೆ ಹೊಂದಿಕೆಯಾಗುವಂತಹ ಒಂದು ಹುರುಳು ಮಾತ್ರ ಓದುಗರ ಗಮನಕ್ಕೆ ಬರುತ್ತದೆ. ಅವಕ್ಕೆ ಇನ್ನೊಂದು ಹುರುಳೂ ಇದೆಯೆಂಬುದು ಅವರ ಗಮನಕ್ಕೆ ಬರುವುದೇ ಇಲ್ಲ. ಕೆಲವೊಮ್ಮೆ ಈ ವಿಶಯವನ್ನು ಅವರ ಗಮನಕ್ಕೆ ತರಬೇಕಿದ್ದಲ್ಲಿ, ಆ ಪದಗಳನ್ನು ಅವುಗಳ ಇನ್ನೊಂದು ಹುರುಳಿಗೆ ಹೊಂದಿಕೆಯಾಗುವಂತಹ ಬೇರೊಂದು ಸೊಲ್ಲಿನಲ್ಲಿ ಬಳಸಿ ತೋರಿಸಬೇಕಾಗುತ್ತದೆ.

ಮಹಾಪ್ರಾಣ, ಷಕಾರ, ಋಕಾರ ಮೊದಲಾದವುಗಳನ್ನು ಬಳಸದಿದ್ದರೆ ಹುರುಳಿನ ಮಟ್ಟಿಗೆ ಯಾವ ಗೊಂದಲವೂ ಉಂಟಾಗುವುದಿಲ್ಲ ಎಂಬ ಈ ಮಾತನ್ನು ಬೆಂಬಲಿಸುವ ಇನ್ನೊಂದು ವಿಶಯವೇನೆಂದರೆ, 2006 ರ ಬಳಿಕ ನಾನು ಬರೆದ ಎಲ್ಲಾ ಒಂಬತ್ತು ಪುಸ್ತಕಗಳಲ್ಲೂ (ಒಟ್ಟು 2600 ಪುಟಗಳು) ಈ ಬರಿಗೆಗಳನ್ನು ಬಳಸಿಲ್ಲ; ಹಾಗಿದ್ದರೂ, ಇದುವರೆಗೆ ಅವನ್ನು ಓದಿದವರಲ್ಲಿ ಯಾರೊಬ್ಬರೂ ಅದರಿಂದಾಗಿ ವಿಶಯವನ್ನು ತಿಳಿದುಕೊಳ್ಳುವಲ್ಲಿ ತಮಗೆ ತೊಂದರೆಯಾಗಿದೆಯೆಂದು ಹೇಳಿಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹ ಕನ್ನಡ ಮತ್ತು ಆಡುಗನ್ನಡ

ನುಡಿಯರಿಮೆಯ ಇಣುಕುನೋಟ – 1

ಆಡುನುಡಿಯೆಂಬುದು ಜಾಗದಿಂದ ಜಾಗಕ್ಕೆ ಬದಲಾಗುವುದು ಸಹಜ. ನಮ್ಮ ನಲ್ಮೆಯ ಕನ್ನಡ ನುಡಿಗೂ ಈ ಮಾತು ಒಪ್ಪುತ್ತದೆ. ಬೇರೆ ಬೇರೆ ಊರುಗಳಲ್ಲಿರುವ ಕನ್ನಡಿಗರು ಬೇರೆ ಬೇರೆ ಆಡುಗನ್ನಡಗಳನ್ನು ಬಳಸುವುದು ನಮ್ಮೆಲ್ಲರ ಗಮನಕ್ಕೆ ಬಂದಿರುತ್ತದೆ. ಹಾಗೆಯೇ ಜಾತಿಯಿಂದ ಜಾತಿಗೂ ಆಡುಗನ್ನಡ ಬದಲಾಗುವುದನ್ನೂ ನಾವೆಲ್ಲರೂ ಕಂಡಿರುತ್ತೇವೆ. ಎತ್ತುಗೆಗಾಗಿ, ಮಯ್ಸೂರಿನ ಆಡುಗನ್ನಡಕ್ಕೂ ಹುಬ್ಬಳ್ಳಿಯ ಆಡುಗನ್ನಡಕ್ಕೂ ನಡುವೆ, ಮತ್ತು ಮಯ್ಸೂರಿನಲ್ಲೇನೇ ಬ್ರಾಹ್ಮಣರ ಆಡುಗನ್ನಡಕ್ಕೂ ಒಕ್ಕಲಿಗರ ಆಡುಗನ್ನಡಕ್ಕೂ ನಡುವೆ ವ್ಯತ್ಯಾಸವಿದೆ.

ಆದರೆ, ಬರಹ ಕನ್ನಡ ಹೀಗೆ ಬೇರೆ ಬೇರೆಯಾಗಿ ಇರುವಂತಿಲ್ಲ. ಅದು ಎಲ್ಲರಿಗೂ ಸಮನಾಗಿದ್ದು, ‘ಎಲ್ಲರ ಕನ್ನಡ’ವಾಗಿರಬೇಕಾಗುತ್ತದೆ; ಯಾಕೆಂದರೆ, ಜಾಗ ಮತ್ತು ಜಾತಿಗಳ ಎಲ್ಲೆಗಳನ್ನು ಮೀರಿ ಜನರನ್ನು ಬೆಸೆಯುವ ಒಂದು ವಿಶೇಶವಾದ ಕೆಲಸ ಅದರದು. ಹಲವು ಬಗೆಯ ಆಡುಗನ್ನಡಗಳನ್ನು ಬಳಸುವ ಎಲ್ಲಾ ಕನ್ನಡಿಗರಿಗೂ ಸಮಾನವಾಗಿರಬೇಕಾದಂತಹ ಬರಹ ಕನ್ನಡ ಅವರೆಲ್ಲರ ಆಡುಗನ್ನಡಕ್ಕಿಂತಲೂ ಬೇರಾಗಿಯೇ ಇರಬೇಕಾಗುತ್ತದೆ ಎಂದು ಸುಲಬವಾಗಿ ಕಾಣಬಹುದು.

ಬರಹ ಕನ್ನಡ ಬೇರೆ ಬೇರೆ ಆಡುಗನ್ನಡಗಳಿಗಿಂತ ಬೇರಾಗಿರಬೇಕಾದುದು ಅನಿವಾರ‍್ಯ ಎಂದ ಮಾತ್ರಕ್ಕೆ ಅದು ಅವುಗಳಿಗಿಂತ ತುಂಬಾ ದೂರದಲ್ಲಿರುವುದೂ ಅನಿವಾರ‍್ಯ ಎಂದೇನಿಲ್ಲ; ಆದಶ್ಟು ಹತ್ತಿರವೂ ಇರಬಹುದು. ಅದು ನಮ್ಮೆಲ್ಲರಿಗಿಂತ ದೂರದಲ್ಲಿರಬೇಕೋ ಹತ್ತಿರದಲ್ಲಿರಬೇಕೋ ಎಂಬ ಪ್ರಶ್ನೆಯನ್ನು ಹಾಕಿಕೊಂಡರೆ, ಯಾರೂ ‘ದೂರದಲ್ಲಿರಬೇಕು’ ಎಂಬ ಉತ್ತರವನ್ನು ಕೊಡಲಾರರು. ಬರಹ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೂ ಆದಶ್ಟು ಹತ್ತಿರವಿರುವಂತೆ ಮಾಡಿದಲ್ಲಿ, ಕನ್ನಡವನ್ನು ಓದಲು ಮತ್ತು ಬರೆಯಲು ಕಲಿಯುವ ಕೆಲಸ ಎಲ್ಲಾ ಕನ್ನಡಿಗರಿಗೂ ಸುಲಬವಾಗುತ್ತದೆ ಎಂದು ಯಾರಾದರೂ ಕಾಣಬಹುದು. ಆದುದರಿಂದ ಹಾಗೆ ಮಾಡಬೇಕಾಗಿರುವುದು ಕನ್ನಡದ ಮತ್ತು ಅದರ ಮೂಲಕ ಕನ್ನಡಿಗರ ಏಳಿಗೆಗೆ ಬಹಳ ಮುಕ್ಯವಾದ ಕೆಲಸ.

ಎಲ್ಲರಿಗೂ ಆದಶ್ಟು ಹತ್ತಿರವಿರುವ ಬರಹ ಕನ್ನಡದಲ್ಲಿ ಸಂಸ್ಕ್ರುತ, ಇಂಗ್ಲಿಶ್, ಹಿಂದಿ ಮೊದಲಾದ ಬೇರೆ ನುಡಿಗಳಿಂದ ಪಡೆಯುವ ಎರವಲು ಪದಗಳನ್ನು ಒಂದು ಮಿತಿಯಲ್ಲಿರಿಸಿಕೊಳ್ಳುವುದು ಅನಿವಾರ‍್ಯವೆಂದು ಹೇಳಬೇಕಾಗಿಯೇ ಇಲ್ಲ. ಜಾಗ ಮತ್ತು ಜಾತಿಯ ತಾರತಮ್ಯವಿಲ್ಲದೆ ಎಲ್ಲರೂ ಬರಹವನ್ನು ಬಳಸತೊಡಗಿದಾಗ, ಅಂತಹ ಎರವಲು ಪದಗಳು ಒಂದು ಮಿತಿಯಲ್ಲಿ ಇದ್ದೇ ಇರುತ್ತವೆ; ಬಹುಶಹ ನೂರಕ್ಕೆ ಅಯ್ದು ಇಲ್ಲವೇ ಹತ್ತಕ್ಕಿಂತ ಹೆಚ್ಚು ಇರಲಾರವು. ತನ್ನ ಸೊಗಡನ್ನು ಉಳಿಸಿಕೊಂಡಿರುವ ಅಂತಹ ಬರಹಗಳನ್ನು ಓದುವ ಮತ್ತು ಬರೆಯುವ ಕೆಲಸ ಕೆಲವರಿಗಶ್ಟೇ ಅಲ್ಲ, ಎಲ್ಲರಿಗೂ ಸುಲಬದ್ದಾಗುತ್ತದೆ.

ಹಲವು ಕಡೆ ಕನ್ನಡದ್ದೇ ಆದ ಪದಗಳನ್ನು ಬರಹ ಕನ್ನಡದಲ್ಲಿ ಬಳಸುವುದು ಒಳ್ಳೆಯ ಬರವಣಿಗೆಯ ಗುರುತಲ್ಲ ಎಂಬ ಒಂದು ವಿಚಿತ್ರವಾದ ಅನಿಸಿಕೆ ಕೆಲವರಲ್ಲಿದೆ; ಕನ್ನಡದ್ದೇ ಆದ ಪದಗಳ ಬದಲು ಸಂಸ್ಕ್ರುತದ ಎರವಲುಗಳನ್ನು ಬಳಸುವುದರಿಂದ ಬರಹ ಮೇಲ್ಮಟ್ಟದ್ದಾಗುತ್ತದೆಯೆಂಬ ಬ್ರಮೆ ಅದೇಕೋ ಅವರಲ್ಲಿದೆ. ‘ನಾಯಿ’ ಎಂದು ಬರೆಯುವ ಬದಲು ‘ಶ್ವಾನ’ ಎಂದು ಬರೆಯುವುದು, ‘ಕೂದಲು’ ಎಂಬುದರ ಬದಲು ‘ಕೇಶ’ ಎನ್ನುವುದು, ‘ಹಲ್ಲು’ ಎನ್ನುವ ಬದಲು ‘ದಂತ’ ಎನ್ನುವುದು, ‘ಕೂಡಿಸುವುದು’ ಎನ್ನುವ ಬದಲು ‘ಸಂಕಲನ’ ಎನ್ನುವುದು, ಇವೆಲ್ಲ ಮೇಲ್ಮಟ್ಟದ ಕನ್ನಡ ಬರವಣಿಗೆಯ ಗುರುತುಗಳು ಎಂದು ಹಲವರು ತಿಳಿದಿದ್ದಾರೆ. ಆದರೆ ಈ ರೀತಿಯ ಬಳಕೆಗಳು ಬರಹ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸುವಂತವಲ್ಲ, ದೂರವಾಗಿಸುವಂತವು ಎಂದು ತಿಳಿದುಕೊಳ್ಳಲು ಕಶ್ಟವಿಲ್ಲ.

ಹೊಸ ಹೊಸ ಪದಗಳನ್ನು ಉಂಟುಮಾಡಬೇಕಾದಾಗಲಂತೂ ಸಂಸ್ಕ್ರುತವನ್ನು ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂದು ಹೆಚ್ಚಿನ ಕನ್ನಡದ ಬರಹಗಾರರೂ ತಿಳಿದಿದ್ದಾರೆ. ಆದರೆ ಅಂತಹ ಪದಗಳನ್ನು ಬಳಸಿರುವ ಕನ್ನಡ ಬರಹ ಎಲ್ಲರಿಗೂ ಹತ್ತಿರವಾಗುವ ಬದಲು ದೂರ ಉಳಿಯುತ್ತದೆ, ಮತ್ತು ಅದನ್ನು ಕಲಿಯುವ ಮತ್ತು ಬಳಸುವ ಕೆಲಸ ಹೆಚ್ಚಿನ ಕನ್ನಡಿಗರಿಗೂ ತೊಡಕಿನದಾಗುತ್ತದೆ. ಹೊಸ ಪದಗಳನ್ನು ಉಂಟುಮಾಡುವುದರ ಗುರಿ ಕನ್ನಡಿಗರಿಗೆಲ್ಲ ಆ ಪದಗಳು ಸೂಚಿಸುವ ವಿಶಯ ಇಲ್ಲವೇ ವಸ್ತುವಿನ ಪರಿಚಯ ಮಾಡಿಸುವುದು ಎಂಬುದನ್ನು ನೆನಪಿನಲ್ಲಿಟ್ಟರೆ ಹೆಜ್ಜೆಹೆಜ್ಜೆಗೂ ಸಂಸ್ಕ್ರುತವನ್ನು ಮೊರೆಹೊಗುವುದು ತಾನೇ ನಿಲ್ಲುತ್ತದೆ.

ಹೊಸ ಪದಗಳನ್ನು ಉಂಟುಮಾಡಲು ಕನ್ನಡದ್ದೇ ಆದ ಪದಗಳನ್ನು ಮತ್ತು ಬೇರುಗಳನ್ನು ಬಳಸಬಹುದು; ಇವು ಹೊಸಗನ್ನಡದಲ್ಲಿ ಸಿಗದಿದ್ದರೆ ಹಳೆಗನ್ನಡದಿಂದ, ಇಲ್ಲವೇ ಆಡುಗನ್ನಡಗಳಿಂದ ಪಡೆದುಕೊಳ್ಳಬಹುದು. ಹೆಚ್ಚಿನವರೂ ಕೇಳಿಲ್ಲದ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಸಂಸ್ಕ್ರುತದವು ಎಂಬ ಒಂದೇ ಕಾರಣಕ್ಕಾಗಿ ಬಳಸಿ ಹೊಸ ಪದಗಳನ್ನು ಉಂಟುಮಾಡುವುದಕ್ಕಿಂತಲೂ, ಹೆಚ್ಚಿನವರೂ ಕೇಳಿರುವ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಯಾವ ನುಡಿಯವಾಗಿದ್ದರೂ (ಎತ್ತುಗೆಗೆ ಇಂಗ್ಲೀಶಿನವಾಗಿದ್ದರೂ) ಎರವಲಾಗಿ ಪಡೆದು ಬಳಸಿಕೊಳ್ಳಬಹುದು.

ಇವತ್ತು ಕನ್ನಡ ಬರಹದಲ್ಲಿ ಕನ್ನಡಕ್ಕೆ ನಿಜಕ್ಕೂ ಬೇಡದಿರುವ ಹಲವು ಬರಿಗೆಗಳನ್ನು (ಅಕ್ಶರಗಳನ್ನು) ಬಳಸಲಾಗುತ್ತದೆ; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಸಂಸ್ಕ್ರುತದಲ್ಲಿ ಇರುವ ಹಾಗೆಯೇ ಬರೆಯಬೇಕು (ಕೆಲವು ಅಪವಾದಗಳನ್ನು ಹೊರತುಪಡಿಸಿ) ಎಂಬ ಕಟ್ಟಲೆಯೊಂದನ್ನು ಉಳಿಸಿಕೊಳ್ಳುವುದಕ್ಕಾಗಿ ಹತ್ತು ಮಹಾಪ್ರಾಣ ಬರಿಗೆಗಳು, ಋಕಾರ, ಷಕಾರ, ಐ, ಔ, ಙ, ಞ, ವಿಸರ‍್ಗ ಎಂಬಂತಹ ಒಟ್ಟು ಹದಿನೇಳು ಹೆಚ್ಚಿನ ಬರಿಗೆಗಳನ್ನು ಕನ್ನಡ ಬರಹದಲ್ಲಿ ಬಳಸಲಾಗುತ್ತಿದೆ. (ಇದಲ್ಲದೆ ರಕಾರಕ್ಕೆ ಎಂಬ ಒಂದು ಹೆಚ್ಚಿನ ರೂಪವನ್ನೂ ಬಳಸಲಾಗುತ್ತಿದೆ.)

ಇವುಗಳಲ್ಲಿ ಹೆಚ್ಚಿನವೂ ಕನ್ನಡ ಬರಹದ ಓದಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಓದಿನಲ್ಲಿಲ್ಲದ ಬರಿಗೆಗಳನ್ನು ಬರಹದಲ್ಲಿ ಕಾಣಿಸುವುದು ತುಂಬಾ ತೊಡಕಿನ ಕೆಲಸ; ಎಶ್ಟು ತೊಡಕಿನ ಕೆಲಸವೆಂಬುದು ಇವತ್ತಿನ ಕನ್ನಡ ಬರಹಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗುತ್ತದೆ: ಅವುಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸಿಕೊಳ್ಳುವುದು ಮಹಾಪ್ರಾಣದಂತಹ ಈ ಹೆಚ್ಚಿನ ಬರಿಗೆಗಳನ್ನು ಬಳಸುವುದರಲ್ಲೇ ಆಗಿದೆ.

ಬರಹದ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೆ ಹತ್ತಿರ ತರಲು ಬೇಡದ ಈ ಹದಿನೇಳು ಬರಿಗೆಗಳನ್ನು ಬಿಟ್ಟುಬಿಡುವುದೇ ಒಳಿತು. ಹಾಗೆಯೇ ಇಂಗ್ಲಿಶ್, ಹಿಂದಿ, ಮರಾಟಿ, ಉರ‍್ದು, ಮೊದಲಾದ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳ ಹಾಗೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನೂ ಹೆಚ್ಚಿನ ಕನ್ನಡಿಗರೂ ಓದುವ ಹಾಗೆಯೇ ಬರೆಯುವುದು ಒಳಿತು. ಅವನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬೇಕೆಂಬ ಕಟ್ಟಳೆಯನ್ನು ಉಳಿಸಿಕೊಳ್ಳಬೇಕಾಗಿಲ್ಲ.

ಹಳೆಗನ್ನಡದ ಸಮಯದಲ್ಲಿ ಕನ್ನಡಿಗರಿಗೆ ಇಂತಹದೊಂದು ಸ್ವಾತಂತ್ರ್ಯವಿತ್ತು; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಅವರು ಸಂಸ್ಕ್ರುತದಲ್ಲಿರುವ ಹಾಗೆಯೇ ಬೇಕಿದ್ದರೂ ಬರೆಯಬಲ್ಲವರಾಗಿದ್ದರು; ಇಲ್ಲವೇ ಕನ್ನಡದ ಸ್ವರೂಪಕ್ಕೆ ಹೊಂದಿಕೆಯಾಗುವ ಹಾಗೆ ಅದರಲ್ಲಿ ಮಾರ‍್ಪಾಡುಗಳನ್ನು ಮಾಡಿಯೂ ಬಳಸಬಲ್ಲವರಾಗಿದ್ದರು.
ಬರಹದ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸಲು ಈಗ ಕನ್ನಡಿಗರು ಮಾಡಬೇಕಿರುವ ಮಾರ‍್ಪಾಡು ಇದಕ್ಕಿಂತ ಬೇರಾದುದೇನಲ್ಲ. ಮಿತಿಯಿಲ್ಲದೆ ಸಂಸ್ಕ್ರುತದಿಂದ ಎರವಲಾಗಿ ಪಡೆಯುವುದನ್ನು ಕಡಿಮೆ ಮಾಡುವುದು, ಮತ್ತು ಸಂಸ್ಕ್ರುತ ಬಲ್ಲವರು ಮಾತ್ರವಲ್ಲದೆ ಎಲ್ಲರೂ ಬರಹ ಕನ್ನಡದಿಂದ ಪಡೆಯುವುದನ್ನು ಪಡೆಯುವುದಶ್ಟೇ ಅಲ್ಲದೆ, ಬರಹ ಕನ್ನಡದ ಮೂಲಕ ಕೊಡುವುದನ್ನು ಎಲ್ಲರೂ ಕೊಡುವಂತೆಯೂ ಮಾಡುವುದು ಕನ್ನಡದ ಏಳಿಗೆಗೆ ಇಂದು ಅನಿವಾರ‍್ಯವಾಗಿದೆ.

ಈ ಇಪ್ಪತ್ತೊಂದನೆಯ ಶತಮಾನದಲ್ಲೂ ಹಲವು ಮಂದಿ ಕನ್ನಡಿಗರು ಬರವಣಿಗೆಯ ಪ್ರಪಂಚದಲ್ಲಿ ಆಟಕ್ಕಶ್ಟೇ ಅಲ್ಲ, ಲೆಕ್ಕಕ್ಕೆ ಬರುವಂತೆಯೂ ಪಾಲ್ಗೊಳ್ಳಲು ಆಗದಿರಲು ಹಲವು ಬಗೆಯ ತೊಡಕುಗಳು ಕಾರಣವಾಗಿವೆ. ಎತ್ತುಗೆಗಾಗಿ, ಕೆಳವರ‍್ಗದ ಜನರ ಬಡತನ ಮತ್ತು ಅರಿಯಮೆಗಳು ಅವರ ಮಕ್ಕಳನ್ನು ಶಾಲೆಗಳಿಂದ ದೂರ ಇರಿಸುತ್ತವೆ. ಹಲವರಾದ ಅವರ ಕನ್ನಡಕ್ಕಿಂತ ಕೆಲವರಾದ ತಮ್ಮ ಕನ್ನಡಕ್ಕೆ ಹತ್ತಿರವಿರುವಂತೆಯೇ ಬರಹದ ಕನ್ನಡವನ್ನು ಇಟ್ಟುಕೊಳ್ಳಲು ಮೇಲ್ವರ‍್ಗದವರು ಬಯಸುವುದು ಇದಕ್ಕೆ ಒತ್ತಾಸೆಯಾಗಿರುತ್ತದೆ. ಕೆಳವರ‍್ಗದವರನ್ನು ಅವರಿರುವಲ್ಲಿಯೇ ಇರಲು ಬಿಡುವುದು ಮೇಲ್ವರ‍್ಗದವರ ಮನದಾಳದ ಬಯಕೆಯಾಗಿರಲಿಕ್ಕಿಲ್ಲ; ಕನ್ನಡಿಗರ ನೆತ್ತರಿನಲ್ಲಿ ಇಂತಹ ನಂಜಿಲ್ಲ. ಆದರೂ ಅವರು ಇರುವಲ್ಲೇ ಇರುವಂತೆ ಮಾಡುತ್ತಿರುವ ಕೆಲವು ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿಕೊಳ್ಳುವುದು ಹಿರಿಮೆಯಾದೀತು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter