Posts Tagged ‘ಇಂಗ್ಲಿಶ್’

ನುಡಿಮಾರಲು ಎಣ್ಣುಕಗಳ ಬಳಕೆ

ನುಡಿಯರಿಮೆಯ ಇಣುಕುನೋಟ – 34

ಒಂದು ನುಡಿಯಲ್ಲಿರುವ ಬರಹವನ್ನು ಇನ್ನೊಂದು ನುಡಿಗೆ ಮಾರ್ಪಡಿಸುವುದನ್ನು ನುಡಿಮಾರಿಕೆ (ಅನುವಾದ) ಎಂದು ಕರೆಯಬಹುದು. ಈ ಕೆಲಸವನ್ನು ನಡೆಸಲು ಸಾಮಾನ್ಯವಾಗಿ ತುಂಬಾ ಸಮಯ ತಗಲುತ್ತದೆ; ಗಂಟೆಗೆ ಅಯ್ದಾರು ಪುಟಗಳನ್ನಶ್ಟೇ ನುಡಿಮಾರಲು ಬರುತ್ತದೆ. ಕೆಲವು ಬಗೆಯ ಬರಹಗಳನ್ನು ತುಸು ಬೇಗನೆ ನುಡಿಮಾರಬಹುದು, ಆದರೆ ಬೇರೆ ಕೆಲವು ಬಗೆಯ ಬರಹಗಳನ್ನು ನುಡಿಮಾರಲು ಇನ್ನಶ್ಟು ಹೊತ್ತು ತಗಲಬಹುದು. ಇವತ್ತು ನುಡಿಮಾರಬೇಕಾಗಿರುವ ಬರಹಗಳ ಎಣಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇಂಗ್ಲಿಶ್ನಂತಹ ನುಡಿಗಳಿಂದ ಸಾವಿರಾರು ಬರಹಗಳನ್ನು ನುಡಿಮಾರುತ್ತಲೇ ಇರಬೇಕಾಗುತ್ತದೆ. ಕೊನೆಯಿಲ್ಲದ ಈ ಕೆಲಸಕ್ಕೆ ಎಶ್ಟು ಮಂದಿ ನುಡಿಮಾರುಗರಿದ್ದರೂ ಸಾಕಾಗುವುದಿಲ್ಲ.

ಹಾಗಾಗಿ, ಎಣ್ಣುಕ(ಕಂಪ್ಯೂಟರ್)ಗಳನ್ನು ಬಳಸಿ ಈ ಕೆಲಸವನ್ನು ಹೆಚ್ಚು ಬೇಗನೆ ಮತ್ತು ಕಡಿಮೆ ವೆಚ್ಚದಲ್ಲಿ ನಡೆಸಬಹುದಲ್ಲವೇ ಎಂಬುದಾಗಿ ಹಲವರಲ್ಲಿ ಆಸಕ್ತಿ ಮೂಡಿದ್ದು, ಕಳೆದ ಅಯ್ವತ್ತು ವರ್ಶಗಳಿಂದ ಈ ವಿಶಯದಲ್ಲಿ ಅರಕೆಗಳು ನಡೆಯುತ್ತಿವೆ. ಗಂಟೆಗೆ ನೂರಿನ್ನೂರು ಪುಟಗಳಶ್ಟು ಬರಹಗಳನ್ನು ಇವತ್ತಿನ ಎಣ್ಣುಕಗಳು ನುಡಿಮಾರಿಕೊಡಬಲ್ಲುವು. ಆದರೆ, ಅವು ನುಡಿಮಾರಿದ ಈ ಬರಹಗಳಲ್ಲಿ ಹಲವು ತಪ್ಪುಗಳೂ ಉಳಿದಿರುತ್ತವೆ, ಮತ್ತು ಈ ತಪ್ಪುಗಳನ್ನೆಲ್ಲ ಕಯ್ಯಿಂದಲೇ ತಿದ್ದಿ ಸರಿಪಡಿಸಬೇಕಾಗುತ್ತದೆ. ಯಾಕೆಂದರೆ, ನುಡಿಮಾರುವ ಸಮಯದಲ್ಲಿ ನಾವು ನಡೆಸಬೇಕಾಗಿರುವ ಹಲವು ಕೆಲಸಗಳಲ್ಲಿ ಕೆಲವನ್ನು ನಡೆಸಲು ಎಣ್ಣುಕಗಳಿಗೆ ಸಾದ್ಯವೇ ಆಗುವುದಿಲ್ಲ, ಮತ್ತು ಅಂತಹ ವಿಶಯಗಳಲ್ಲಿ ಅವು ಹಲವು ತಪ್ಪುಗಳನ್ನು ಮಾಡುತ್ತವೆ. ಕೆಲವು ಬಗೆಯ ಬರಹಗಳ ಮಟ್ಟಿಗಂತೂ ಈ ರೀತಿ ಎಣ್ಣುಕಗಳು ಕೊಡುವ ನುಡಿಮಾರಿಕೆಯನ್ನು ತಿದ್ದಲು ಹೋಗುವುದಕ್ಕಿಂತಲೂ ಎಣ್ಣುಕಗಳ ನೆರವಿಲ್ಲದೆ ನೇರವಾಗಿ ನುಡಿಮಾರುವುದೇ ಸುಳುವಾದ ಕೆಲಸವೆಂದು ಅನಿಸಬಲ್ಲುದು.

ಎಣ್ಣುಕಗಳು ಬರಹಗಳನ್ನು ನುಡಿಮಾರಬೇಕಿದ್ದಲ್ಲಿ ಅವಕ್ಕೆ ಹಲವು ಬಗೆಯ ಅರಿವುಗಳು ಬೇಕಾಗುತ್ತವೆ. ಬರಹದಲ್ಲಿ ಬಳಕೆಯಾಗುವ ಪದಗಳಿಗೆ ಎಂತಹ ಹುರುಳುಗಳೆಲ್ಲ ಇವೆ ಎಂಬುದನ್ನು ಅವು ಅರಿತಿರಬೇಕು, ಮತ್ತು ಇದಕ್ಕಾಗಿ ಅವುಗಳಲ್ಲಿ ಪದನೆರಕೆಗಳಿರಬೇಕು. ಪದಗಳು ಸೊಲ್ಲುಗಳಲ್ಲಿ ಹೇಗೆ ಬಳಕೆಯಾಗುತ್ತವೆ, ಮತ್ತು ಅವುಗಳ ಹಲವು ಹುರುಳುಗಳಲ್ಲಿ ಒಂದು ಹುರುಳು ಹೇಗೆ ಆಯ್ಕೆಗೊಳ್ಳುತ್ತದೆ ಎಂಬುದನ್ನು ಅವು ಅರಿತಿರಬೇಕು, ಮತ್ತು ಇದನ್ನು ಅವಕ್ಕೆ ತಿಳಿಸಬಲ್ಲ ಸೊಲ್ಲರಿಮೆಯ (ವ್ಯಾಕರಣದ) ಕಟ್ಟಲೆಗಳು ಅವುಗಳಲ್ಲಿ ಇರಬೇಕು. ಬರಹಗಳಲ್ಲಿ ಬರುವ ಪದಗಳ ಹುರುಳು ಅವನ್ನು ಬಳಸಿರುವ ಕುಳ್ಳಿಹ(ಸಂದರ್ಬ)ದ ಮೇಲೂ ಅವಲಂಬಿಸಿರುತ್ತದೆ. ಮಾನವನ ಮಿದುಳು ಈ ವ್ಯತ್ಯಾಸವನ್ನು ಸುಳುವಾಗಿ ಅರಿತುಕೊಂಡು, ಕುಳ್ಳಿಹಕ್ಕೆ ಹೊಂದಿಕೆಯಾಗುವಂತಹ ಹುರುಳನ್ನು ಆಯ್ದುಕೊಳ್ಳಬಲ್ಲುದು. ಆದರೆ, ಈ ಕೆಲಸವನ್ನು ನಡೆಸಲು ಬೇಕಾಗುವ ಅರಿವನ್ನು ಎಣ್ಣುಕಗಳಿಗೆ ಕೊಡಿಸುವುದು ಹೇಗೆ ಎಂಬುದಿನ್ನೂ ತಿಳಿವಿಗರಿಗೆ ಗೊತ್ತಾಗಿಲ್ಲ. ಹಾಗಾಗಿ, ಈ ವಿಶಯದಲ್ಲಿ ಎಣ್ಣುಕಗಳು ತುಂಬಾ ತಪ್ಪು ಮಾಡುತ್ತಿವೆ.

ಇವತ್ತು ನುಡಿಮಾರುವ ಕೆಲಸಕ್ಕಾಗಿ ಎಣ್ಣುಕಗಳಲ್ಲಿ ಮುಕ್ಯವಾಗಿ ಎರಡು ಬಗೆಯ ಹಮ್ಮುಗೆಗಳನ್ನು ಬಳಸಲಾಗುತ್ತದೆ. ಇವನ್ನು ಮಾರೆಡೆ ಹಮ್ಮುಗೆ ಮತ್ತು ಎಡೆನುಡಿ ಹಮ್ಮುಗೆ ಎಂಬುದಾಗಿ ಕರೆಯಬಹುದು. ಇವುಗಳಲ್ಲಿ ಮೊದಲನೆಯದನ್ನು ಬಳಸುವವರು ತಿಳಿವನ್ನು ನೇರವಾಗಿ ಮೂಲನುಡಿಯಿಂದ ಈಡುನುಡಿಗೆ ಮಾರೆಡೆಗೊಳಿಸು(ವರ್ಗಾಯಿಸು)ತ್ತಾರೆ, ಮತ್ತು ಎರಡನೆಯದನ್ನು ಬಳಸುವವರು ತಿಳಿವನ್ನು ಮೊದಲಿಗೆ ಒಂದು ಕಲ್ಪಿತವಾಗಿರುವ ಎಡೆನುಡಿಗೆ ಮಾರೆಡೆಗೊಳಿಸಿ, ಅಲ್ಲಿಂದ ಈಡುನುಡಿಗೆ ಮಾರೆಡೆಗೊಳಿಸುತ್ತಾರೆ.

ಮಾರೆಡೆ ಹಮ್ಮುಗೆಯಲ್ಲಿ ಮೂರು ಹಂತಗಳಿರುತ್ತವೆ: ಮೊದಲನೆಯ ಹಂತದಲ್ಲಿ ಮೂಲ ಬರಹದ ಹುರುಳೇನು ಎಂಬುದನ್ನು ಕಂಡುಹಿಡಿದು, ಅದನ್ನು ಮೂಲನುಡಿಯದೇ ಆದ ಒಂದು ಕಲ್ಪಿತ ರೂಪಕ್ಕೆ ಬದಲಾಯಿಸಲಾಗುತ್ತದೆ; ಎರಡನೆಯ ಹಂತದಲ್ಲಿ ಅದನ್ನು ಅಂತಹದೇ ಆದ ಒಂದು ಈಡುನುಡಿಯ ಕಲ್ಪಿತ ರೂಪಕ್ಕೆ ಮಾರೆಡೆಗೊಳಿಸಲಾಗುತ್ತದೆ; ಮತ್ತು ಮೂರನೆಯ ಹಂತದಲ್ಲಿ ಈಡುನುಡಿಯ ಈ ಕಲ್ಪಿತ ರೂಪವನ್ನು ಅದರ ಬರಹರೂಪಕ್ಕೆ ಮಾರ್ಪಡಿಸಲಾಗುತ್ತದೆ.

ಮಾರೆಡೆ ಹಮ್ಮುಗೆಗಿಂತ ಎಡೆನುಡಿ ಹಮ್ಮುಗೆ ಸೊಲ್ಲುಗಳಿಗೆ ಕಲ್ಪಿತ ರೂಪವನ್ನು ಕೊಡುವಲ್ಲಿ ಮಾತ್ರ ಬೇರಾಗಿರುತ್ತದೆ. ಮೂಲನುಡಿಯ ಬರಹವನ್ನು ಅದರದೇ ಆದ ಕಲ್ಪಿತ ರೂಪಕ್ಕೆ ಮಾರ್ಪಡಿಸುವ ಬದಲು, ಈ ಹಮ್ಮುಗೆಯಲ್ಲಿ ಅದನ್ನು ಒಂದು ಎಡೆನುಡಿಗೆ (ಕಲ್ಪಿತವಾಗಿರುವ ನುಡಿಗೆ) ಮಾರ್ಪಡಿಸಲಾಗುತ್ತದೆ. ಹೀಗೆ ಮಾಡುವುದರಿಂದ ಸಿಗುವ ಪ್ರಯೋಜನವೇನೆಂದರೆ, ಆಮೇಲೆ ಈ ಎಡೆನುಡಿಯಿಂದ ಬೇರೆ ಯಾವ ನುಡಿಗೆ ಬೇಕಿದ್ದರೂ ಬರಹವನ್ನು ನುಡಿಮಾರಬಹುದು. ಎತ್ತುಗೆಗಾಗಿ, ಕನ್ನಡದ ಒಂದು ಬರಹವನ್ನು ಎಡೆನುಡಿಯ ಬರಹವಾಗಿ ಮಾರ್ಪಡಿಸಿದಲ್ಲಿ, ಆಮೇಲೆ ಅದನ್ನು ನೇರವಾಗಿ ತಮಿಳು, ತೆಲುಗು, ಮಲಯಾಳ, ಹಿಂದಿ ಮೊದಲಾದ ಬೇರೆ ಹಲವು ನುಡಿಗಳಲ್ಲಿ ಯಾವುದರ ಬರಹವಾಗಿ ಬೇಕಿದ್ದರೂ ಮಾರ್ಪಡಿಸಿಕೊಳ್ಳಬಹುದು.

ಇದಕ್ಕೆ ಬದಲು, ಮಾರೆಡೆ ಹಮ್ಮುಗೆಯಲ್ಲಿ ಒಂದೊಂದು ನುಡಿಜೋಡಿಗೂ ನುಡಿಮಾರಲು ಬೇಕಾಗುವ ಕೆಲಸಗಳನ್ನೆಲ್ಲ ಬೇರೆ ಬೇರಾಗಿ ಮಾಡಿಕೊಳ್ಳಬೇಕಾಗುತ್ತದೆ. ಜಗತ್ತಿನ ಎಲ್ಲಾ ನುಡಿಗಳಿಗೂ ಸಮಾನವಾಗಬಹುದಾದಂತಹ, ಎಂದರೆ ಯಾವುದೇ ಒಂದು ನುಡಿಯ ಪರಿಚೆಯನ್ನೂ ಬಳಸದಿರುವಂತಹ ಎಡೆನುಡಿಯೊಂದನ್ನು ಉಂಟುಮಾಡಬಲ್ಲೆವು ಎಂಬ ಹುಚ್ಚು ಉತ್ಸಾಹ ಈ ಎಡೆನುಡಿ ಹಮ್ಮುಗೆಯನ್ನು ಹಮ್ಮಿಕೊಳ್ಳಲು ಹೊರಟಿದ್ದ ತಿಳಿವಿಗರಲ್ಲಿತ್ತು. ಆದರೆ ಸಮಯ ಕಳೆದಂತೆಲ್ಲ, ಇದು ತಲಪಲಾಗದ ಗುರಿ ಎಂಬುದು ಸ್ಪಶ್ಟವಾಗುತ್ತಿದೆ.

ಮೇಲಿನ ಎರಡು ಬಗೆಯ ಹಮ್ಮುಗೆಗಳಿಂತ ತೀರ ಬೇರಾಗಿರುವ ಇನ್ನೊಂದು ಬಗೆಯ ಹಮ್ಮುಗೆಯನ್ನೂ ಕೆಲವರು ತಿಳಿವಿಗರು ಬಳಕೆಗೆ ತಂದಿದ್ದಾರೆ. ಇದರಲ್ಲಿ ಈಗಾಗಲೇ ಉಂಟುಮಾಡಿರುವ ನುಡಿಮಾರಿಕೆಗಳನ್ನು ಬಳಸಿಕೊಳ್ಳುವಂತಹ ಅಳವನ್ನು ಎಣ್ಣುಕಗಳಿಗೆ ಕೊಡಿಸಲಾಗುತ್ತದೆ. ಈ ಅಳವಿನ ನೆರವಿನಿಂದ, ಎಣ್ಣುಕಗಳು ಎರಡು ನುಡಿಗಳ ನಡುವೆ ಈಗಾಗಲೇ ನಡೆಸಿರುವ ನುಡಿಮಾರಿಕೆಗಳಲ್ಲಿ ಒಂದು ನುಡಿಯ ಪದ, ಪದರೂಪ, ಸೊಲ್ಲಿನ ಇಟ್ಟಳ ಮೊದಲಾದವುಗಳಿಗೆ ಬದಲಾಗಿ ಇನ್ನೊಂದು ನುಡಿಯಲ್ಲಿ ಯಾವ ಪದ, ಪದರೂಪ, ಸೊಲ್ಲಿನ ಇಟ್ಟಳ ಮೊದಲಾದವುಗಳನ್ನು ಹೆಚ್ಚಿನೆಡೆಗಳಲ್ಲೂ ಬಳಸಲಾಗಿದೆ ಎಂಬುದನ್ನು ಕಂಡುಕೊಳ್ಳುತ್ತವೆ, ಮತ್ತು ಈ ವಿಶಯವನ್ನು ನೆನಪಿನಲ್ಲಿರಿಸಿಕೊಂಡು, ಅಂತಹವೇ ಆದ ಪದ, ಪದರೂಪ, ಸೊಲ್ಲಿನ ಇಟ್ಟಳ ಮೊದಲಾದುವನ್ನು ಬೇಕಾದಾಗ ಬಳಸುವ ಅಳವನ್ನು ತಾವೇ ಉಂಟುಮಾಡಿಕೊಳ್ಳುತ್ತವೆ.

ಎತ್ತುಗೆಗಾಗಿ, ಇಂಗ್ಲಿಶ್ ಮತ್ತು ಫ಼್ರೆಂಚ್ ನುಡಿಗಳ ನಡುವೆ ಹಲವಾರು ಬರಹಗಳನ್ನು ಈಗಾಗಲೇ ನುಡಿಮಾರಲಾಗಿದೆ. ಈ ಬರಹಗಳಲ್ಲಿ ಯಾವ ಇಂಗ್ಲಿಶ್ ಪದಗಳಿಗೆ ಬದಲಾಗಿ ಯಾವ ಫ಼್ರೆಂಚ್ ಪದಗಳು ಅತಿ ಹೆಚ್ಚು ಕಡೆಗಳಲ್ಲಿ ಬಳಕೆಯಾಗುತ್ತವೆ ಎಂಬುದನ್ನು ಎಣ್ಣುಕಗಳು ಗಮನಿಸಿಕೊಳ್ಳುತ್ತವೆ. ಹೊಸದಾಗಿ ಬರಹವೊಂದನ್ನು ಇಂಗ್ಲಿಶ್ನಿಂದ ಫ಼್ರೆಂಚ್ ನುಡಿಗೆ ಇಲ್ಲವೇ ಫ಼್ರೆಂಚ್ನಿಂದ ಇಂಗ್ಲಿಶ್ ನುಡಿಗೆ ನುಡಿಮಾರಬೇಕಾದಾಗ, ಈ ಎಣ್ಣುಕಗಳು ಒಂದೊಂದು ಪದಕ್ಕೂ ಸಮನಾಗಿರುವ ಪದಗಳಲ್ಲಿ ಆ ರೀತಿ ತುಂಬಾ ಹೆಚ್ಚು ಬಾರಿ ಬಳಕೆಯಾಗಿರುವ ಪದವನ್ನೇ ಆರಿಸಿಕೊಳ್ಳುತ್ತವೆ, ಮತ್ತು ಇದರಿಂದಾಗಿ, ಅವು ನಡೆಸುವ ನುಡಿಮಾರಿಕೆ ಓದುಗರಿಗೆ ಹೆಚ್ಚು ಮೆಚ್ಚುಗೆಯಾಗುವ ಹಾಗಾಗುತ್ತದೆ.

ಎಣ್ಣುಕಗಳು ನುಡಿಮಾರಿರುವ ಬರಹಗಳನ್ನು ಅರಿವಿಗರು ತಿದ್ದುತ್ತಿರುವಂತೆ, ಅವು ತಮ್ಮ ನುಡಿಮಾರಿಕೆಯ ಅಳವನ್ನು ಹೆಚ್ಚಿಸಿಕೊಳ್ಳುವಂತಹ ಹಮ್ಮುಗೆಯನ್ನೂ ಉಂಟುಮಾಡಲಾಗಿದೆ. ಇದರಿಂದಾಗಿ, ಹೆಚ್ಚು ಹೆಚ್ಚು ಬರಹಗಳನ್ನು ಎಣ್ಣುಕಗಳ ನೆರವಿನಿಂದ ನುಡಿಮಾರಿದಂತೆ, ಮತ್ತು ಅಂತಹ ಹೆಚ್ಚು ಹೆಚ್ಚು ಬರಹಗಳನ್ನು ಸರಿಪಡಿಸಿದಂತೆ, ಹೆಚ್ಚು ಹೆಚ್ಚು ಚನ್ನಾಗಿರುವ ನುಡಿಮಾರಿಕೆಯನ್ನು ಅವು ನಡೆಸುವಂತಾಗುತ್ತದೆ. ಗೂಗಲ್ನಂತಹ ಸರ್ವರ್ಗಳಲ್ಲಿ ಇಂತಹ ನುಡಿಮಾರಿಕೆಗಳನ್ನು ಅಳವಡಿಸಲಾಗಿದೆ. ಕನ್ನಡಕ್ಕೆ ಹೆಚ್ಚು ಚನ್ನಾಗಿರುವ ಎಣ್ಣುಕದ ನುಡಿಮಾರಿಕೆ ದೊರಕಲು ಇವನ್ನು ನಾವು ಹೆಚ್ಚು ಹೆಚ್ಚು ಬಳಸುತ್ತಿರಬೇಕು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಕನ್ನಡ ನುಡಿಯ ಸೊಗಡು

ನುಡಿಯರಿಮೆಯ ಇಣುಕುನೋಟ – 33

ಎಲ್ಲಾ ನುಡಿಗಳಿಗೂ ಅವುಗಳದೇ ಆದ ಒಂದು ಸೊಗಡುಎಂಬುದಿರುತ್ತದೆ. ಇದನ್ನು ಬರಹಗಳು ಹೆಚ್ಚು ಕೆಡದಂತೆ ಉಳಿಸಿಕೊಳ್ಳಬೇಕು. ಇಲ್ಲವಾದರೆ ಅವು ತಮ್ಮ ಜೀವಂತಿಕೆಯನ್ನು ಕಳೆದುಕೊಳ್ಳುತ್ತವೆ, ಮತ್ತು ಸಾಮಾನ್ಯ ಜನರಿಂದ ದೂರವಾಗುತ್ತವೆ. ಅಂತಹ ಬರಹಗಳನ್ನು ಕಲಿಯುವ ಮತ್ತು ಬಳಸುವ ಕೆಲಸವೂ ಆ ನುಡಿಯನ್ನಾಡುವ ಜನರಿಗೆ ತುಂಬಾ ತೊಡಕಿನದಾಗುತ್ತದೆ. ನುಡಿಗಳಿಗಿರುವ ಈ ಸೊಗಡು ಅವುಗಳ ಪದಗಳಲ್ಲಿ ಬರುವ ಉಲಿಗಳಲ್ಲಿ, ಉಲಿಗಳ ಓರಣಗಳಲ್ಲಿ, ಪದಗಳಿಗೆ ಒಟ್ಟು(ಪ್ರತ್ಯಯ)ಗಳನ್ನು ಇಲ್ಲವೇ ಬೇರೆ ಪದಗಳನ್ನು ಸೇರಿಸಿದಾಗ ಅವುಗಳ ಉಲಿಗಳಲ್ಲಿ ನಡೆಯುವ ಮಾರ್ಪಾಡುಗಳಲ್ಲಿ, ಪದಗಳನ್ನು ಸೇರಿಸಿ ಬೇರೆ ಪದಗಳನ್ನು ಉಂಟುಮಾಡುವ ಬಗೆಗಳಲ್ಲಿ, ಮತ್ತು ಪದಗಳಿಂದ ಪದಕಂತೆಗಳನ್ನು ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳಲ್ಲಿ ಕಾಣಿಸಿಕೊಳ್ಳುತ್ತದೆ.

ಕನ್ನಡಕ್ಕೂ ಇಂತಹ ತನ್ನದೇ ಆದ ಒಂದು ಸೊಗಡಿದೆ, ಮತ್ತು ಅದು ಸಂಸ್ಕ್ರುತ, ಹಿಂದಿ, ಇಂಗ್ಲಿಶ್ ಮೊದಲಾದ ಬೇರೆ ನುಡಿಗಳಿಗಿರುವ ಸೊಗಡಿಗಿಂತ ತೀರ ಬೇರಾಗಿದೆ; ಕನ್ನಡದ ಉಲಿಗಳು, ಅವುಗಳ ಓರಣಗಳು, ಅವುಗಳ ಸೇರಿಕೆಯ ಮಾರ್ಪಾಡುಗಳು, ಕನ್ನಡದಲ್ಲಿ ಪದ, ಪದಕಂತೆ ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳು ಮೊದಲಾದುವನ್ನು ಸಂಸ್ಕ್ರುತದಂತಹ ಬೇರೆ ನುಡಿಗಳಲ್ಲಿ ಕಾಣಿಸುವ ಬಗೆಗಳೊಂದಿಗೆ ಹೋಲಿಸಿ ನೋಡಿದಾಗ, ನಿಜಕ್ಕೂ ಕನ್ನಡದ ಸೊಗಡು ಎಂತಹದು ಎಂಬುದು ಗೊತ್ತಾಗುತ್ತದೆ.

(1) ಸಂಸ್ಕ್ರುತ ಪದಗಳಲ್ಲಿ ಬಳಕೆಯಾಗುವ ಖಛಠಥಫ ಮತ್ತು ಘಝಢಧಭಗಳೆಂಬ ಒತ್ತುಸಿರಿನ ಬರಿಗೆಗಳು (ಮಹಾಪ್ರಾಣಾಕ್ಶರಗಳು) ಕನ್ನಡ ಪದಗಳಲ್ಲಿಲ್ಲ; ಆದರೆ, ಸಂಸ್ಕ್ರುತ ಪದಗಳಲ್ಲಿ ಕಾಣಿಸದಿರುವ ಗಿಡ್ಡ ಎಕಾರ ಮತ್ತು ಒಕಾರಗಳು ಕನ್ನಡ ಪದಗಳಲ್ಲಿವೆ. ಸಂಸ್ಕ್ರುತದಲ್ಲಿರುವ ಋಕಾರ ಮತ್ತು ಷಕಾರಗಳು ಕನ್ನಡದಲ್ಲಿಲ್ಲ; ಆದರೆ, ಸಂಸ್ಕ್ರುತದಲ್ಲಿಲ್ಲದ ಎಯ್, ಒಯ್, ಉಯ್, ಆಯ್, ಒವ್, ಇವ್ ಮೊದಲಾದ ಹಲವು ಸ್ವರ ಮತ್ತು ಯಕಾರ ಇಲ್ಲವೇ ವಕಾರಗಳ ಜೋಡಿಗಳು ಕನ್ನಡದಲ್ಲಿವೆ.

(2) ಈ ಎರಡು ನುಡಿಗಳಿಗೂ ಸಮಾನವಾಗಿರುವ ಅಕ್ಶರಗಳು ಹಲವಿವೆಯಾದರೂ ಅವು ಒಂದೇ ರೀತಿಯಾಗಿ ಬಳಕೆಯಾಗುವುದಿಲ್ಲ. ಸಂಸ್ಕ್ರುತದಲ್ಲಿ ಒತ್ತಕ್ಶರಗಳಿಂದ ಮೊದಲಾಗುವ ಪದಗಳು ಸಾಕಶ್ಟಿವೆ (ಕ್ರಾಂತಿ, ಕ್ಷಮೆ, ಜ್ಞಾನ, ಜ್ಯೋತಿ, ದ್ವೇಷ, ಮ್ಲೇಚ್ಛ). ಆದರೆ ಕನ್ನಡದವೇ ಆದ ಪದಗಳಲ್ಲಿ ಆ ರೀತಿ ಒತ್ತಕ್ಶರಗಳು ಪದಗಳ ಮೊದಲಿಗೆ ಬರುವುದಿಲ್ಲ. ಪದಗಳ ನಡುವೆ ಬರಬಲ್ಲ ಒತ್ತಕ್ಶರಗಳಲ್ಲೂ ಸಂಸ್ಕ್ರುತ ಮತ್ತು ಕನ್ನಡ ನುಡಿಗಳ ನಡುವೆ ವ್ಯತ್ಯಾಸವಿದೆ. ಸಂಸ್ಕ್ರುತದ ಭಕ್ತ, ಅಜ್ಞಾನ, ವತ್ಸ, ಮತ್ಸ್ಯ ಮೊದಲಾದ ಪದಗಳಲ್ಲಿ ನಡುವೆ ಬಂದಿರುವ ಕ್ತ್, ಜ್ಞ್, ತ್ಸ್, ತ್ಸ್ಯ್ ಮೊದಲಾದ ಹಲವು ಬಗೆಯ ಒತ್ತಕ್ಶರಗಳು ಕನ್ನಡ ಪದಗಳಲ್ಲಿ ಕಾಣಿಸುವುದಿಲ್ಲ.

(3) ಎರಡು ಇಲ್ಲವೇ ಹೆಚ್ಚು ಪದಗಳನ್ನು ಒಟ್ಟುಸೇರಿಸಿ ಹೊಸ ಪದಗಳನ್ನು ತಯಾರಿಸುವ ಹೊಲಬುಗಳು ಈ ಎರಡು ನುಡಿಗಳಲ್ಲಿ ಬೇರೆ ಬೇರಾಗಿವೆ. ಸಂಸ್ಕ್ರುತದಲ್ಲಿ ಸಾಮಾನ್ಯವಾಗಿ ಹೆಸರುಪದಗಳನ್ನು ಮಾತ್ರ ಇಂತಹ ರಚನೆಗಳಲ್ಲಿ ಬಳಸಲಾಗುತ್ತದೆ; ಆದರೆ, ಕನ್ನಡದಲ್ಲಿ ಹೆಸರುಪದ (ತಲೆಗೂದಲು, ಬಯಲಾಟ), ಎಸಕಪದ (ಚುಚ್ಚುಮದ್ದು, ಕಡೆಗೋಲು) ಮತ್ತು ಪರಿಚೆಪದಗಳೆಂಬ (ದೊಡ್ಡಮ್ಮ, ಬಿಸಿನೀರು) ಮೂರು ಬಗೆಯ ಪದಗಳನ್ನೂ ಇಂತಹ ರಚನೆಗಳಲ್ಲಿ ಬಳಸಲು ಬರುತ್ತದೆ.

(4) ಕನ್ನಡದಲ್ಲಿ ಸಾಮಾನ್ಯವಾಗಿ ಎರಡಕ್ಕಿಂತ ಹೆಚ್ಚು ಪದಗಳನ್ನು ಈ ರೀತಿ ಜೋಡಿಸುವುದು ಅಪರೂಪ; ಆದರೆ, ಸಂಸ್ಕ್ರುತದಲ್ಲಿ ಮೂರು-ನಾಲ್ಕು ಪದಗಳನ್ನು ಸೇರಿಸಿ ರಚಿಸಿರುವ ಜೋಡುಪದಗಳೂ ಬೇಕಾದಶ್ಟಿವೆ (ಪೂರ್ವಜನ್ಮಕೃತಂ, ಮತ್ತಮಾತಂಗಗಾಮಿ, ಸಕಲನೀತಿಶಾಸ್ತ್ರತತ್ವಜ್ಞಃ).

(5) ಒಟ್ಟು(ಪ್ರತ್ಯಯ)ಗಳನ್ನು ಸೇರಿಸಿ ಹೊಸ ಪದಗಳನ್ನು ತಯಾರಿಸುವ ವಿಶಯದಲ್ಲೂ ಕನ್ನಡ ಸಂಸ್ಕ್ರುತಕ್ಕಿಂತ ಬೇರಾಗಿದೆ. ಕನ್ನಡದಲ್ಲಿ ಒಂದಕ್ಕಿಂತ ಹೆಚ್ಚು ಒಟ್ಟುಗಳನ್ನು ಸೇರಿಸಿ ರಚಿಸಿರುವ ಪದಗಳು ತುಂಬಾ ಕಡಿಮೆ; ಆದರೆ, ಸಂಸ್ಕ್ರುತದ ಹೆಚ್ಚಿನ ಪದಗಳಲ್ಲೂ ಎರಡು ಇಲ್ಲವೇ ಹೆಚ್ಚು ಒಟ್ಟುಗಳು ಸೇರಿರುವುದನ್ನು ಕಾಣಬಹುದು (ಅ-ಜ್ಞಾನ್-ಇ, ಕರ್-ತೃ-ತ್ವ). ಕನ್ನಡದಲ್ಲಿ ಒಟ್ಟುಗಳನ್ನು ಪದಗಳ ಕೊನೆಯಲ್ಲಿ ಮಾತ್ರ ಬಳಸಲು ಬರುತ್ತದೆ; ಆದರೆ, ಸಂಸ್ಕ್ರುತದಲ್ಲಿ ಅವನ್ನು ಪದಗಳ ಮೊದಲಿಗೂ ಬಳಸಬಹುದು (ಸತ್ಯ-ಅಸತ್ಯ, ಸ್ವಾಗತ-ಸುಸ್ವಾಗತ, ಜೀವಿ-ನಿರ್ಜೀವಿ, ರಕ್ಷಣೆ-ಸಂರಕ್ಷಣೆ).

(6) ಪದಕ್ಕೆ ಪದ ಸೇರಿದಾಗ, ಇಲ್ಲವೇ ಪದಕ್ಕೆ ಒಟ್ಟು ಸೇರಿದಾಗ, ಅವುಗಳಲ್ಲಿ ನಡೆಯುವ ಸೇರಿಕೆಯ ಬದಲಾವಣೆಗಳು ಕನ್ನಡ ಮತ್ತು ಸಂಸ್ಕ್ರುತ ನುಡಿಗಳಲ್ಲಿ ಬೇರೆ ಬೇರಾಗಿವೆ: ಇಕಾರದ ಅನಂತರ ಅಕಾರ ಬಂದಾಗ, ಕನ್ನಡದಲ್ಲಿ ಇಕಾರ ಬಿದ್ದುಹೋಗಿ ಅಕಾರ ಉಳಿಯುತ್ತದೆ (ಅಲ್ಲಿ+ಅಲ್ಲಿ=ಅಲ್ಲಲ್ಲಿ); ಆದರೆ, ಸಂಸ್ಕ್ರುತದಲ್ಲಿ ಇಕಾರ ಯಕಾರವಾಗುತ್ತದೆ (ಅತಿ+ಅಲ್ಪ=ಅತ್ಯಲ್ಪ). ಅಕಾರದ ಅನಂತರ ಇಕಾರ ಬಂದರೂ ಕನ್ನಡದಲ್ಲಿ ಇಂತಹದೇ ಮೊದಲನೆಯ ಸ್ವರ ಬಿದ್ದುಹೋಗಿ ಎರಡನೆಯದು ಉಳಿಯುತ್ತದೆ (ಅಲ್ಲಿಂದ+ಇಳಿದು=ಅಲ್ಲಿಂದಿಳಿದು); ಆದರೆ, ಸಂಸ್ಕ್ರುತದಲ್ಲಿ ಅವೆರಡೂ ಬಿದ್ದುಹೋಗಿ ಹೊಸದೊಂದು ಸ್ವರ (ಏಕಾರ) ಬಂದುಸೇರುತ್ತದೆ (ರಾಜ+ಇಂದ್ರ=ರಾಜೇಂದ್ರ).

(7) ಒಟ್ಟುಗಳನ್ನು ಸೇರಿಸಿ ಹೊಸಪದಗಳನ್ನು ರಚಿಸುವಲ್ಲಿ ಕನ್ನಡ ಮತ್ತು ಸಂಸ್ಕ್ರುತಗಳ ನಡುವೆ ಹಲವು ಮುಕ್ಯವಾದ ವ್ಯತ್ಯಾಸಗಳಿವೆ: ಸಂಸ್ಕ್ರುತ ಪದಗಳಿಗೆ ಯ ಇಲ್ಲವೇ ಇಕ ಒಟ್ಟನ್ನು ಸೇರಿಸಿದಾಗ, ಹಲವು ತೊಡಕಾದ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಪದಗಳ ಮೊದಲಿಗೆ ಬರುವ ಗಿಡ್ಡ ಅಕಾರ ಉದ್ದ ಆ ಎಂದಾಗುವುದು (ಚಪಲ-ಚಾಪಲ್ಯ, ಪ್ರಮಾಣ-ಪ್ರಾಮಾಣಿಕ), ಇ, ಈ ಮತ್ತು ಏ ಸ್ವರಗಳು ಐ ಎಂದಾಗುವುದು (ನಿಸರ್ಗ-ನೈಸರ್ಗಿಕ, ದೀನ-ದೈನ್ಯ, ಚೇತನ-ಚೈತನ್ಯ), ಉ, ಊ ಮತ್ತು ಓ ಸ್ವರಗಳು ಔ ಎಂದಾಗುವುದು (ಸುಖ-ಸೌಖ್ಯ, ಪೂರ್ವಾಹ್ನ-ಪೌರ್ವಾಹ್ನಿಕ, ಲೋಕ-ಲೌಕಿಕ) ಮೊದಲಾದವು ಇಂತಹ ಕೆಲವು ಸಂಸ್ಕ್ರುತದ ನಿಯಮಗಳು.

ಆದರೆ, ಕನ್ನಡದಲ್ಲಿ ಒಟ್ಟುಗಳನ್ನು ಸೇರಿಸಿ ಪದಗಳನ್ನು ರಚಿಸುವಲ್ಲಿ ಇವಕ್ಕಿಂತ ತೀರ ಬೇರಾಗಿರುವ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಇವು (ಕನ್ನಡಿಗರ ಮಟ್ಟಿಗೆ) ಸಂಸ್ಕ್ರುತದ ಸೇರಿಕೆಯ ನಿಯಮಗಳಶ್ಟು ತೊಡಕಿನವಾಗಿಲ್ಲ. ಕನ್ನಡ ಪದಗಳಿಗೆ ಇಕೆ ಒಟ್ಟನ್ನು ಸೇರಿಸಿದಾಗ ಪದಗಳ ಕೊನೆಯ ಉಕಾರ ಬಿದ್ದುಹೋಗುತ್ತದೆ (ಬಳಲು-ಬಳಲಿಕೆ, ಹೊಗಳು-ಹೊಗಳಿಕೆ, ಅಂಜು-ಅಂಜಿಕೆ) ಮತ್ತು ಪದಗಳ ಕೊನೆಯ ಇಕಾರ ಹಾಗೆಯೇ ಉಳಿದು ಇಕೆ ಒಟ್ಟಿನ ಮೊದಲ ಸ್ವರ ಬಿದ್ದುಹೋಗುತ್ತದೆ (ಇರಿ-ಇರಿಕೆ, ತಿರಿ-ತಿರಿಕೆ, ಇಳಿ-ಇಳಿಕೆ).

ಕನ್ನಡದ ಸೊಗಡು ಸಂಸ್ಕ್ರುತದ ಸೊಗಡಿಗಿಂತ ತೀರ ಬೇರಾದುದು ಎಂಬುದನ್ನು ಅವು ಬಳಸುವ ಪದಗಳ ಸ್ವರೂಪದಲ್ಲಿ ಕಾಣಿಸುವಂತಹ ಈ ವ್ಯತ್ಯಾಸಗಳು ತುಂಬಾ ಸ್ಪಶ್ಟವಾಗಿ ತೋರಿಸಿಕೊಡುತ್ತವೆ. ಕನ್ನಡ ಬರಹದಲ್ಲಿ ಹೆಚ್ಚು ಹೆಚ್ಚು ಸಂಸ್ಕ್ರುತ ಪದಗಳನ್ನು ಅವುಗಳಲ್ಲಿ ಸ್ವಲ್ಪವೂ ಬದಲಾವಣೆಯನ್ನು ಮಾಡದೆ ಬಳಸಿದಲ್ಲಿ ಅಂತಹ ಬರಹ ತನ್ನದೇ ಆದ ಸೊಗಡನ್ನು ಪೂರ್ತಿ ಕಳೆದುಕೊಳ್ಳುತ್ತದೆ. ಈ ರೀತಿ ತನ್ನ ಹುಟ್ಟುಸೊಗಡನ್ನು ಕಳೆದುಕೊಳ್ಳುವ ಬರಹ ತನ್ನತನವನ್ನೂ ಕಳೆದುಕೊಳ್ಳುತ್ತದೆ, ಮತ್ತು ಅದರ ಜೀವಂತಿಕೆ ನಶ್ಟವಾಗಿ ಅದರಲ್ಲಿ ಕ್ರುತಕತೆ ತುಂಬಿಕೊಳ್ಳುತ್ತದೆ. ಇದಲ್ಲದೆ, ಅಂತಹ ಬರಹಕ್ಕೂ ಹೆಚ್ಚಿನ ಕನ್ನಡಿಗರ ಮಾತಿಗೂ ನಡುವೆ ದೊಡ್ಡ ಕಂದಕವೇರ್ಪಟ್ಟು, ಅದು ಅವರೆಲ್ಲರಿಂದಲೂ ದೂರವಾಗುತ್ತದೆ. ಯಾಕೆಂದರೆ, ಬರಹ ಆ ರೀತಿ ಬದಲಾದಾಗಲೂ ಜನರ ಆಡುನುಡಿ ಅದಕ್ಕನುಗುಣವಾಗಿ ಬದಲಾಗುವುದಿಲ್ಲ. ಅದು ತನ್ನ ಪದಸ್ವರೂಪವನ್ನು ಮತ್ತು ಜೀವಂತಿಕೆಯನ್ನು ಉಳಿಸಿಕೊಂಡಿರುತ್ತದೆ.

ಇದಕ್ಕೆ ಕಾರಣವೇನೆಂದರೆ, ಆಡುನುಡಿಯನ್ನು ಮಕ್ಕಳು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುತ್ತಾರೆ; ಅದನ್ನು ಮಕ್ಕಳಿಗೆ ಯಾರೂ ಕಲಿಸಿಕೊಡಬೇಕಾಗಿಲ್ಲ. ಹಾಗಾಗಿ, ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಮಾರೆಡೆಗೊಳ್ಳುವಾಗ, ಅದು ತಿರುತಿರುಗಿ ಹೊಸತನವನ್ನು ಮತ್ತು ಜೀವಂತಿಕೆಯನ್ನು ಪಡೆಯುತ್ತಿರುತ್ತದೆ. ಆದರೆ, ಬರಹವನ್ನು ಮಕ್ಕಳು ಶಾಲೆಯಲ್ಲಿ ದೊಡ್ಡವರ ನೆರವಿನಿಂದ ಕಲಿಯಬೇಕಾಗುತ್ತದೆ; ಅದನ್ನು ಅವರು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುವುದಿಲ್ಲ.

ಹಾಗಾಗಿ, ಬರಹಗಾರರು ಕಾಲದಿಂದ ಕಾಲಕ್ಕೆ ಅದನ್ನು ಹೊಸದಾಗಿಸಿಕೊಳ್ಳದಿದ್ದರೆ, ಮತ್ತು ಆಡುನುಡಿಗೆ ಹತ್ತಿರವಾಗುವಂತೆ ಮಾರ್ಪಡಿಸಿಕೊಳ್ಳದಿದ್ದರೆ, ಅದು ಕ್ರುತಕವಾಗುತ್ತಾ ಹೋಗಿ ತನ್ನ ಹುಟ್ಟುಸೊಗಡನ್ನು ಮತ್ತು ಜೀವಂತಿಕೆಯನ್ನು ಕಳೆದುಕೊಳ್ಳುತ್ತದೆ. ಕನ್ನಡದಲ್ಲಿ ಕತೆ-ಕಾದಂಬರಿಗಳನ್ನು ಬರೆಯುವವರು ತಮ್ಮ ಬರಹ ಈ ರೀತಿ ಕ್ರುತಕವಾಗದಂತೆ ನೋಡಿಕೊಳ್ಳುತ್ತಾರೆ; ಆದರೆ, ಬೇರೆ ಬಗೆಯ ಬರಹಗಳನ್ನು ಬರೆಯುವವರು ಇದನ್ನು ಮಾಡಲು ಹೋಗದುದರಿಂದಾಗಿ ಇವತ್ತು ಅಂತಹ ಬರಹಗಳು ತುಂಬಾ ಕ್ರುತಕವಾಗಿದ್ದು ಸಾಮಾನ್ಯ ಜನರಿಗೆ ತಿಳಿಯದ ಹಾಗಾಗಿವೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಕನ್ನಡ ಬರಹಗಳಲ್ಲಿ ‘ಕರಣ’ದ ಹಾವಳಿ

ನುಡಿಯರಿಮೆಯ ಇಣುಕುನೋಟ – 32

ಕನ್ನಡ ಬರಹಗಳಲ್ಲಿ ಇತ್ತೀಚೆಗೆ ಸಂಸ್ಕ್ರುತದ ‘ಕರಣ’ ಎಂಬ ಪದದ ಬಳಕೆ ತುಂಬಾ ಹೆಚ್ಚಾಗುತ್ತಿದೆ; ಅದನ್ನು ಬಳಸುವವರು ನಿಜಕ್ಕೂ ಅದು ಬೇಕೇ ಇಲ್ಲವೇ ಬೇಡವೇ ಎಂಬುದನ್ನು ಗಮನಿಸುವುದೇ ಇಲ್ಲ. ಹಲವೆಡೆಗಳಲ್ಲಿ ಅದಕ್ಕೆ ಬದಲು ಕನ್ನಡದ್ದೇ ಆದ ‘ಇಸು’ ಒಟ್ಟನ್ನು ಬಳಸುವುದೇ ಕನ್ನಡದ ಮಟ್ಟಿಗೆ ಒಳ್ಳೆಯದು. ಯಾಕೆಂದರೆ, ‘ಕರಣ’ ಪದದ ಬಳಕೆಯಿಂದಾಗಿ ಮೂಡುವ ಹಲವು ಬಗೆಯ ಗೊಂದಲಗಳು ‘ಇಸು’ ಒಟ್ಟಿನ ಬಳಕೆಯಲ್ಲಿ ಕಾಣಿಸುವುದಿಲ್ಲ. ಇದಲ್ಲದೆ, ಕನ್ನಡದ್ದೇ ಆದ ‘ಇಸು’ ಒಟ್ಟಿನ ಬಳಕೆಯ ಹಿಂದಿರುವ ಕಟ್ಟಲೆಗಳು ಎಲ್ಲಾ ಕನ್ನಡಿಗರಿಗೂ ತಿಳಿದಿರುತ್ತವೆ; ಹಾಗಾಗಿ, ‘ಕರಣ’ ಪದದ ಬಳಕೆಯ ಹಾಗೆ ಹೊಸ ಕಟ್ಟಲೆಗಳನ್ನು ಅವರು ಕಲಿಯಬೇಕಾಗುವುದಿಲ್ಲ.

ಸಂಸ್ಕ್ರುತದ ಎರವಲುಗಳೊಂದಿಗೆ ಮಾತ್ರವಲ್ಲದೆ ಇಂಗ್ಲಿಶ್, ಪರ್ಶಿಯನ್ ಮೊದಲಾದ ಬೇರೆ ಎರವಲು ಪದಗಳೊಂದಿಗೆ, ಮತ್ತು ಕನ್ನಡದವೇ ಆದ ಪದಗಳೊಂದಿಗೂ ಈ ‘ಕರಣ’ ಎಂಬುದನ್ನು ಬಳಸಲಾಗುತ್ತದೆ; ಸಬಲೀಕರಣ, ಉದಾರೀಕರಣ, ಪ್ರಮಾಣೀಕರಣ ಎಂಬ ಪದಗಳ ಹಾಗೆ, ಡಿಜಿಟಲೀಕರಣ, ಅಯಾನೀಕರಣ, ಕಾಸಗೀಕರಣ, ದಾಕಲೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ.

ಕನ್ನಡದ ಹಸಿರು ಪದದಿಂದ ಹಸಿರೀಕರಣ, ಅಗಲ ಪದದಿಂದ ಅಗಲೀಕರಣ, ಮತ್ತು ಕಯ್ಗಾರಿಕೆ ಪದದಿಂದ ಕಯ್ಗಾರಿಕೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ. ಇಂತಹ ಹಲವು ಕಡೆಗಳಲ್ಲಿ ಸಬಲಿಸು, ಪ್ರಮಾಣಿಸು, ಡಿಜಿಟಲಿಸು, ಅಯಾನಿಸು, ದಾಕಲಿಸು, ಹಸಿರಿಸು, ಅಗಲಿಸು ಎಂಬಂತಹ ಪದಗಳನ್ನು ಮತ್ತು ಅವುಗಳ ಹೆಸರುರೂಪಗಳಾದ ಪ್ರಮಾಣಿಸುವಿಕೆ, ದಾಕಲಿಸುವಿಕೆ, ಅಯಾನಿಸುವಿಕೆ, ಹಸಿರಿಸುವಿಕೆ ಎಂಬಂತಹ ಪದಗಳನ್ನೂ ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ.

‘ಕರಣ’ ಎಂಬುದನ್ನು ಬಳಸುವವರಲ್ಲಿ ಹಲವರಿಗೆ ಅದರೊಂದಿಗೆ ಬರುವ ಹೆಸರುಪದದಲ್ಲಿ ಎಂತಹ ಮಾರ್ಪಾಡುಗಳನ್ನೆಲ್ಲ ಮಾಡಬೇಕು ಎಂಬ ವಿಶಯದಲ್ಲೂ ಗೊಂದಲಗಳಿವೆ; ಕೆಲವರು ಆದುನಿಕೀಕರಣ, ಜಾಗತಿಕೀಕರಣ, ಯಾಂತ್ರಿಕೀಕರಣ ಎಂದು ಬರೆದರೆ, ಇನ್ನು ಕೆಲವರು ಆದುನೀಕರಣ, ಜಗತೀಕರಣ, ಯಾಂತ್ರೀಕರಣ ಎಂಬುದಾಗಿ ಬರೆಯುತ್ತಾರೆ. ಸಾಮಾಜೀಕರಣವೂ ಇದೆ, ಸಮಾಜೀಕರಣವೂ ಇದೆ; ಸಾದ್ರುಶೀಕರಣವೂ ಇದೆ, ತುರ್ತುಕರಣವೂ ಇದೆ. ಮೇಲಿನ ಪದಗಳಲ್ಲಿ ಬಳಕೆಯಾಗಿರುವ ಮಹಾಪ್ರಾಣಾಕ್ಶರಗಳನ್ನು ಈ ಅಂಕಣದಲ್ಲಿ ಕಯ್ಬಿಡಲಾಗಿದೆ; ಆದರೆ, ಅದರ ಬಳಕೆಯಲ್ಲೂ ಸಾಕಶ್ಟು ಗೊಂದಲಗಳಿವೆ.

‘ಕರಣ’ ಪದವನ್ನು ಬಳಸುವವರೂ ಆ ಪದಗಳಿಂದ ಎಸಕ(ಕ್ರಿಯಾ)ಪದಗಳನ್ನು ಉಂಟುಮಾಡಬೇಕಿದ್ದಲ್ಲಿ ಕನ್ನಡದ ‘ಇಸು’ ಒಟ್ಟನ್ನು ಬಳಸಲೇಬೇಕಾಗುತ್ತದೆ; ಸಬಲೀಕರಣ, ದಾಕಲೀಕರಣ, ಡಿಜಿಟಲೀಕರಣ ಎಂಬಂತಹ ಪದಗಳನ್ನು ಬಳಸುವವರು ಅವುಗಳಿಂದ ಎಸಕಪದವನ್ನು ಪಡೆಯಬೇಕಿದ್ದಲ್ಲಿ ಸಬಲೀಕರಿಸು, ದಾಕಲೀಕರಿಸು, ಡಿಜಿಟಲೀಕರಿಸು ಎಂಬುದಾಗಿ ಇಸು ಒಟ್ಟನ್ನು ಸೇರಿಸಿಯೇ ಹೇಳಬೇಕಾಗುತ್ತದೆ; ಇದಕ್ಕೆ ಬದಲು ಸಬಲಿಸು, ದಾಕಲಿಸು, ಡಿಜಿಟಲಿಸು ಎಂದಶ್ಟೇ ಹೇಳಿದರೆ ಸಾಕಾಗುವುದಿಲ್ಲವೇ? ಅವುಗಳ ನಡುವೆ ಕರಣವನ್ನು ಯಾಕೆ ತಂದುಹಾಕಬೇಕು? ಸ್ತಿರೀಕರಣಗೊಳ್ಳು ಎಂಬುದೂ ಇಂತಹದೇ ಇನ್ನೊಂದು ಅನವಶ್ಯಕವಾದ ಕರಣ ಪದವನ್ನು ಸೇರಿಸಿರುವ ಪದರೂಪ; ಸ್ತಿರಗೊಳ್ಳು ಎಂಬುದು ಹೆಚ್ಚು ಅಡಕವಾಗಿ ಅದೇ ಹುರುಳನ್ನು ಕೊಡಬಲ್ಲುದು.

ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡುವಲ್ಲೂ ಕನ್ನಡದ ಅರಿವಿಗರು ಈ ‘ಕರಣ’ ಪದವನ್ನು ಹಲವೆಡೆಗಳಲ್ಲಿ ಬಳಸಿದ್ದಾರೆ; ಕಾರ್ಬನೀಕರಣ, ನಯ್ಟ್ರೀಕರಣ, ಪಾಲಿಮರೀಕರಣ ಎಂಬಂತಹ ಈ ಪದಗಳನ್ನು ಬಳಸಿದಲ್ಲಿ, ಅವಕ್ಕೆ ಸಂಬಂದಿಸಿದಂತೆ ಕರಿಸು (ಅಯಾನೀಕರಿಸು), ಕ್ರುತ (ಅಯಾನೀಕ್ರುತ), ಕಾರಕ (ಅಯಾನೀಕಾರಕ), ಕಾರಿ (ಅಯಾನೀಕಾರಿ) ಎಂಬಂತಹ ಕರಣ ಪದಕ್ಕೆ ಸಂಬಂದಿಸಿದಂತಹ ಬೇರೆ ಕೆಲವು ಪದಗಳನ್ನೂ ಬಳಸಬೇಕಾಗುತ್ತದೆ, ಮತ್ತು ಅವು ಕನ್ನಡದ್ದಲ್ಲವಾದ ಕಾರಣ, ಅವನ್ನು ಬಳಸುವಲ್ಲಿ ಹಲವಾರು ತಪ್ಪುಗಳೂ ಕಾಣಿಸಿಕೊಳ್ಳುತ್ತವೆ; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದಲ್ಲಿ ಕನ್ನಡದಲ್ಲಿ ಈಗಾಗಲೇ ಬಳಕೆಯಲ್ಲಿರುವ ಮತ್ತು ಎಲ್ಲಾ ಕನ್ನಡಿಗರಿಗೂ ತಿಳಿದಿರುವ ಇಸುವಿಕೆ (ಅಯಾನಿಸುವಿಕೆ), ಇಸಿದ (ಅಯಾನಿಸಿದ), ಇಸುವ (ಅಯಾನಿಸುವ) ಎಂಬಂತಹ ರೂಪಗಳನ್ನು ಬಳಸಲು ಬರುತ್ತದೆ.

ಇಂತಹ ಕಡೆಗಳಲ್ಲಿ ಅರಿವಿಗರು ಇನ್ನೂ ಒಂದು ತೊಡಕನ್ನು ಎದುರಿಸಬೇಕಾಗುತ್ತದೆ: ಇಂಗ್ಲಿಶ್ನ ಅಯ್ಸ್ ಎಂಬ ಒಟ್ಟು ಬಂದಿರುವಲ್ಲಿ ಕರಿಸು ಎಂಬುದನ್ನು ಬಳಸುವ (ಪೋಲರಯ್ಸ್ – ದ್ರುವೀಕರಿಸು, ಅನೊಡಯ್ಸ್ – ಅನೊಡೀಕರಿಸು) ಈ ಅರಿವಿಗರು ಇಂಗ್ಲಿಶ್ನ ಅಯ್ಸ್ ಎಂಬುದಕ್ಕಿರುವ ಮಾಡುವಿಕೆ ಮತ್ತು ಆಗುವಿಕೆ ಎಂಬ ಎರಡು ಹುರುಳುಗಳಲ್ಲಿ ಒಂದನ್ನು ಮಾತ್ರ ತಿಳಿಸಬಲ್ಲರು; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದರೆ ಆ ಎರಡು ಹುರುಳುಗಳನ್ನೂ ತಿಳಿಸಬಲ್ಲರು. ಯಾಕೆಂದರೆ, ಕರಣ ಎಂಬುದಕ್ಕೆ ಆಗುವಿಕೆ ಎಂಬ ಹುರುಳು ಸಿಗಲಾರದು; ಆದರೆ, ಇಸು ಎಂಬುದನ್ನು ಬಳಸಿರುವ ಅನೋಡಿಸು, ಅಲ್ಯೂಮಿನಿಸು ಎಂಬುವಕ್ಕೆ ಆಗುವಿಕೆಯ ಹುರುಳೂ ಸಿಗಬಲ್ಲುದು.

ಅರಿಮೆಯ (ಪಾರಿಬಾಶಿಕ)ಪದಗಳನ್ನು ಉಂಟುಮಾಡುವಲ್ಲಿ ಆತ್ಮಕ ಎಂಬುದನ್ನು ಬಳಸುವುದೂ ಇಂತಹದೇ ಒಂದು ಬೇಕಿಲ್ಲದ ಚಾಳಿ. ನುಡಿಯರಿಮೆಯ ಒಂದು ಪದನೆರಕೆಯಲ್ಲಿ ಈ ರೀತಿ ಆತ್ಮಕ ಎಂಬುದನ್ನು ಬಳಸಿರುವ ಇನ್ನೂರಯ್ವತ್ತಕ್ಕಿಂತಲೂ ಹೆಚ್ಚು (ಎಂದರೆ, ಸುಮಾರು ನೂರಕ್ಕೆ ಹದಿಮೂರರಶ್ಟು) ಪದಗಳಿವೆ! ಇವುಗಳಲ್ಲಿ ಹೆಚ್ಚಿನವುಗಳಲ್ಲಿಯೂ ಆತ್ಮಕ ಎಂಬುದನ್ನು ಬಳಸಬೇಕಾಗಿಯೇ ಇಲ್ಲ (ವ್ಯಾಕರಣಾತ್ಮಕ ನಿಯಮ – ವ್ಯಾಕರಣ ನಿಯಮ, ದ್ವನ್ಯಾತ್ಮಕ ರಚನೆ – ದ್ವನಿರಚನೆ, ಪ್ರೇರಣಾತ್ಮಕ ವಾಕ್ಯ – ಪ್ರೇರಣ ವಾಕ್ಯ). ಅರಿಮೆಯ ಪದಗಳು ಸಿಕ್ಕಲಾಗಿದ್ದಶ್ಟೂ ಒಳ್ಳೆಯದು ಎಂಬ ಅನಿಸಿಕೆ ಈ ಪದಗಳನ್ನು ಉಂಟುಮಾಡಿರುವ ಅರಿವಿಗರಲ್ಲಿರುವ ಹಾಗೆ ಕಾಣಿಸುತ್ತದೆ.

ಇದಲ್ಲದೆ, ತಮ್ಮ ಬರಹಗಳಲ್ಲಿ ಎಲ್ಲರಿಗೂ ಗೊತ್ತಾಗುವ ಕನ್ನಡದವೇ ಆದ ಪದಗಳನ್ನು ಬಳಸುವ ಬದಲು ಸಂಸ್ಕ್ರುತದ ಎರವಲುಗಳನ್ನು ತಂದು ತುಂಬಿಸಿದರೆ ಅವುಗಳ ಮಟ್ಟ ಮೇಲೇರುತ್ತದೆಯೆಂದು ಕೆಲವರು ತಿಳಿದ ಹಾಗಿದೆ. ಆದರೆ, ಹಲವು ಮಂದಿ ಹೀಗೆ ಮಾಡುವಲ್ಲಿ ಹಲವು ಬಗೆಯ ತಪ್ಪುಗಳನ್ನೂ ಮಾಡಿ ನಗುವಿಗೆ ಎಡೆಮಾಡಿಕೊಡುತ್ತಾರೆ. ‘ಕಾರಣ’ ಎಂಬ ಪದದ ಬದಲು ಹಲವು ಮಂದಿ ‘ಸಕಾರಣ’ ಎಂಬ ಪದವನ್ನು ಬಳಸುತ್ತಾರೆ; ಆದರೆ, ಇವೆರಡರ ನಡುವೆ ಹುರುಳಿನಲ್ಲಿ ವ್ಯತ್ಯಾಸವಿದೆ ಎಂಬುದನ್ನು ಅವರು ಗಮನಿಸುವುದಿಲ್ಲ. ಸಕಾರಣ ಎಂಬುದಕ್ಕೆ ‘ಕಾರಣವಿರುವ’ ಎಂಬ ಹುರುಳಿದೆ. ಇದನ್ನು ಗಮನಿಸದ ಕೆಲವರ ಬರಹಗಳಲ್ಲಿ ಸಕಾರಣವಿಲ್ಲದೆ, ಸಕಾರಣ ನೀಡದೆ, ಸಕಾರಣಗಳಿರಲಿಲ್ಲ ಎಂಬಂತಹ ಬಳಕೆಗಳನ್ನು ಕಾಣಬಹುದು! ಆದರೆ, ಇಂತಹದೇ ಬಳಕೆ ಮುಂದುವರಿದರೆ, ಸಕಾರಣ ಎಂಬುದಕ್ಕೆ ಕನ್ನಡದಲ್ಲಿ ಬರಿಯ ಕಾರಣ ಎಂಬುದರ ಹುರುಳೇ ಇರುವಂತಾದೀತು.

ಇಹಲೋಕ ಮತ್ತು ಪರಲೋಕ ಎಂಬ ಬೇರೆ ಎರಡು ಸಂಸ್ಕ್ರುತ ಎರವಲುಗಳ ಬಳಕೆಯೂ ಇಂತಹದೇ. ಅವುಗಳ ನಿಜವಾದ ಹುರುಳು ಏನೆಂದು ತಿಳಿಯದಿದ್ದರೂ ಬಳಸುವ ಆಸೆ. ಆತನನ್ನು ಕಚ್ಚಿದ ಹಾವೇ ಸತ್ತುಹೋಯಿತು ಎಂಬುದನ್ನು ಹೇಳಬೇಕಿರುವಲ್ಲಿ ಕಚ್ಚಿದ ಹಾವೇ ಇಹಲೋಕಕ್ಕೆ ಹೋಯಿತು ಎಂಬುದಾಗಿ ಬರೆದಿರುವುದನ್ನು ಕಾಣಬಹುದು! ಇಹಲೋಕ ಮತ್ತು ಪರಲೋಕಗಳೆಂಬ ಈ ಪದಗಳ ಬದಲು ಈ ಲೋಕ ಮತ್ತು ಬೇರೆ ಲೋಕ ಎಂಬ ಎಲ್ಲರಿಗೂ ಗೊತ್ತಾಗುವ ಪದಕಂತೆಗಳನ್ನು ಬಳಸಿದ್ದರೆ, ಇಂತಹ ತಪ್ಪು ಮಾಡಿ ನಗೆಪಾಟಲಾಗುವ ಹಾಗಾಗುತ್ತಿರಲಿಲ್ಲ.

ದಿನಪತ್ರಿಕೆಗಳಲ್ಲಿ ತಲೆಬರಹವನ್ನು ಬರೆಯುವವರೂ ಇಂತಹದೇ ಕೀಳರಿಮೆಯಿಂದ ಬಳಲುತ್ತಿರುವ ಹಾಗೆ ಕಾಣಿಸುತ್ತದೆ. ಒಂದು ಬರಹದಲ್ಲಿ ಉದ್ದಕ್ಕೂ ನಾಯಿ, ಬೆಕ್ಕು, ಕೋಳಿ, ಮೀನು ಎಂಬಂತಹ ಕನ್ನಡದವೇ ಆದ ಪದಗಳನ್ನು ಬರುತ್ತವೆ; ಆದರೆ, ತಲೆಬರಹದಲ್ಲಿ ಮಾತ್ರ ಶ್ವಾನ, ಮಾರ್ಜಾಲ, ಕುಕ್ಕುಟ, ಮತ್ಸ್ಯ ಎಂಬಂತಹ ಸಂಸ್ಕ್ರುತ ಎರವಲುಗಳು ಬರುತ್ತವೆ. ತಲೆಬರಹದಲ್ಲಿ ಎಲ್ಲರಿಗೂ ಗೊತ್ತಿರುವ ನಾಯಿ, ಬೆಕ್ಕು, ಮೀನು ಮೊದಲಾದ ಕನ್ನಡ ಪದಗಳು ಬಂದರೆ ದಿನಪತ್ರಿಕೆಯ ತಕ್ಕಮೆ ಇಲ್ಲವಾಗಬಹುದೆಂಬ ಹೆದರಿಕೆ ಅವರಿಗಿರುವಂತೆ ತೋರುತ್ತದೆ. ತನ್ನ ಮುದಿ ತಂದೆಯನ್ನು ಅಪ್ಪ ಎನ್ನಲು ಹಿಂಜರಿಯುವ ದೊಡ್ಡ ಅದಿಕಾರಿಯ ಕೀಳು ಸಂಸ್ಕ್ರುತಿಯಿದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ನುಡಿಯ ಕಲಿಕೆ ಮತ್ತು ಕಲಿಕೆನುಡಿ

ನುಡಿಯರಿಮೆಯ ಇಣುಕುನೋಟ – 9

ಇಂಗ್ಲಿಶ್‌ನಂತಹ ಒಂದು ನುಡಿಯನ್ನು ಮಕ್ಕಳಿಗೆ ಕಲಿಸುವುದಕ್ಕೂ ಅದನ್ನೇ ಗಣಿತ, ವಿಜ್ನಾನ, ಚರಿತ್ರೆ ಮೊದಲಾದ ವಿಶಯಗಳನ್ನು ಕಲಿಸುವಲ್ಲಿ ಕಲಿಕೆನುಡಿಯಾಗಿ ಬಳಸುವುದಕ್ಕೂ ನಡುವೆ ತುಂಬಾ ವ್ಯತ್ಯಾಸವಿದೆ. ನಿಜಕ್ಕೂ ಇವತ್ತು ಹೆಚ್ಚಿನ ಜನರಿಗೂ ಬೇಕಾಗಿರುವುದು ಇಂಗ್ಲಿಶ್ ನುಡಿಯ ಕಲಿಕೆಯಲ್ಲದೆ, ಅದನ್ನು ಕಲಿಕೆನುಡಿಯಾಗಿ ಬಳಸಬೇಕೆಂಬುದಲ್ಲ. ಆದರೆ, ಈ ವ್ಯತ್ಯಾಸವನ್ನು ತಿಳಿದುಕೊಳ್ಳಲಾರದ ಜನರು ತಮ್ಮ ಮಕ್ಕಳನ್ನು ಎಶ್ಟೇ ಕಶ್ಟವಾದರೂ ಹೆದರದೆ ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸುವ ‘ಇಂಗ್ಲಿಶ್ ಶಾಲೆ’ಗಳಿಗೆ ಕಳಿಸುತ್ತಿದ್ದಾರೆ.

ಆದರೆ, ಹೀಗೆ ಮಾಡುವುದರಿಂದ ಅವರಲ್ಲಿ ಹೆಚ್ಚಿನವರ ಆಸೆಯೂ ಕಯ್ಗೂಡುವುದಿಲ್ಲ. ಮೇಲ್ವರ‍್ಗದ ಮಕ್ಕಳು ಇಂತಹ ಶಾಲೆಗಳಿಗೆ ಹೋಗಿ ದೊಡ್ಡ ದೊಡ್ಡ ಕೆಲಸಗಳನ್ನು ಹಿಡಿದು ಲಕ್ಶ ಲಕ್ಶ ಸಂಪಾದಿಸುವುದನ್ನು ನೋಡಿ, ತಮ್ಮ ಮಕ್ಕಳೂ ಹಾಗೆಯೇ ಮುಂದೆ ಬರಬೇಕೆಂದು ಅವರು ಬಯಸುವುದು ಸಹಜ. ಆದರೆ, ಇಂಗ್ಲಿಶ್ ಶಾಲೆಗಳು ಅವರ ಈ ಬಯಕೆಯನ್ನು ಪೂರಯ್ಸಲಾರವು.

ಇದಕ್ಕೆ ಹಲವು ಕಾರಣಗಳಿವೆ: ಮೊದಲನೆಯದಾಗಿ, ಇಂಗ್ಲಿಶ್ ಶಾಲೆಗಳಲ್ಲೂ ಹಲವು ಬಗೆಗಳಿವೆ; ಇಂಗ್ಲಿಶ್ ನುಡಿಯನ್ನು ಮತ್ತು ಬೇರೆ ವಿಶಯಗಳನ್ನು ತುಂಬಾ ಚನ್ನಾಗಿ ಕಲಿಸಬಲ್ಲ ಶಾಲೆಗಳು ಕೆಲವಾದರೆ, ಯಾವುದನ್ನೂ ಸರಿಯಾಗಿ ಕಲಿಸಲಾಗದ ಶಾಲೆಗಳು ಹಲವು; ಕೆಳವರ‍್ಗದ ಮಕ್ಕಳಲ್ಲಿ ಹೆಚ್ಚಿನವರೂ ಇಂತಹ ಎರಡನೇ ಬಗೆಯ ಶಾಲೆಗಳಿಗೆ ಮಾತ್ರವೇ ಹೋಗಬಲ್ಲರಾದ ಕಾರಣ, ಅವರ ಕಲಿಕೆ ಅಲ್ಲಿಯೂ ಕುಂಟುತ್ತಲೇ ನಡೆಯುತ್ತದೆ.

ತಮಗೆ ಮಾತನಾಡಲು ತಿಳಿದಿರುವ ನುಡಿಯನ್ನು ಕಲಿಕೆನುಡಿಯಾಗಿ ಪಡೆದಿರುವ ಮಕ್ಕಳು ತಮಗೆ ಸ್ವಲ್ಪವೂ ತಿಳಿಯದಿರುವ ಇಂಗ್ಲಿಶ್‌ನಂತಹ ನುಡಿಯನ್ನು ಕಲಿಕೆನುಡಿಯಾಗಿ ಪಡೆದಿರುವ ಮಕ್ಕಳಿಗಿಂತ ಬೇಗನೆ ತಮ್ಮ ಕಲಿಕೆಯಲ್ಲಿ ಮುಂದೆ ಹೋಗಬಲ್ಲರೆಂಬುದನ್ನು ಎಲ್ಲಾ ಬಗೆಯ ಅರಕೆಗಳೂ ತೋರಿಸಿಕೊಟ್ಟಿವೆ; ಇಂಗ್ಲಿಶ್ ನುಡಿಯನ್ನು ಕಲಿಯುವಲ್ಲಿಯೂ ಅವರು ಇಂಗ್ಲಿಶ್ ಕಲಿಕೆನುಡಿಯಾಗಿರುವ ಶಾಲೆಗಳ ಮಕ್ಕಳಿಗಿಂತ ಬೇಗನೆ ಮುಂದೆ ಹೋಗಬಲ್ಲರು.

ದಕ್ಶಿಣ ಆಪ್ರಿಕಾದಲ್ಲಿ ಎಂಟನೇ ತರಗತಿಯ ವರೆಗೂ ಕಲಿಕೆನುಡಿಯಾಗಿ ತಾಯ್ನುಡಿಯನ್ನು ಬಳಸುತ್ತಿದ್ದ ಶಾಲೆಗಳಲ್ಲಿ ಮಕ್ಕಳು ಹನ್ನೆರಡನೇ ತರಗತಿಯಲ್ಲಿ ನೂರಕ್ಕೆ ೮೪ರಂತೆ ಪಾಸಾಗುತ್ತಿದ್ದರು. ತಾಯ್ತಂದೆಯವರ ಒತ್ತಾಯದ ಮೇಲೆ, ಅಯ್ದನೇ ತರಗತಿಯಿಂದಲೇ ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸಲು 1976ರಲ್ಲಿ ತೊಡಗಲಾಯಿತು. 1992ರಲ್ಲಿ ಈ ಮಕ್ಕಳ ಕಲಿಕೆಯನ್ನು ಪರೀಕ್ಶಿಸಿದಾಗ, ಹನ್ನೆರಡನೇ ತರಗತಿಯ ಮಕ್ಕಳು ನೂರಕ್ಕೆ 44ರಂತೆ ಪಾಸಾಗುವ ಮಟ್ಟಕ್ಕೆ ಇಳಿದಿದ್ದುದು ಕಂಡುಬಂತು. ಇಂಗ್ಲಿಶ್ ನುಡಿಯ ಕಲಿಕೆಯಲ್ಲೂ ಪಾಸಾಗುವವರ ಎಣಿಕೆ ಅಶ್ಟೇ ಕೆಳಗೆ ಇಳಿದಿತ್ತು.

ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸಿಯೂ ಮೇಲ್ವರ‍್ಗದ ಮಕ್ಕಳು ಇವತ್ತು ಮುಂದೆ ಬರುತ್ತಿರುವುದಕ್ಕೆ ಕಾರಣ ಬೇರೆಯೇ ಇದೆ. ಅವರಿಗೆ ಶಾಲೆಯ ಕಲಿಕೆ ಮಾತ್ರವಲ್ಲದೆ ಬೇರೆಯೂ ಹಲವು ಬಗೆಯ ಕಲಿಕೆಗಳು ನೆರವು ನೀಡುತ್ತಿವೆ. ಇಂತಹ ನೆರವು ಕೆಳವರ‍್ಗದ ಮಕ್ಕಳಿಗೆ ಸಿಗುವುದಿಲ್ಲ. ಮಕ್ಕಳಿಗೆ ಎಶ್ಟು ಪದಗಳ ಮೇಲೆ ಹತೋಟಿಯಿದೆ ಎಂಬುದರ ಮೇಲೆ ಅವರು ತಮ್ಮ ಕಲಿಕೆಯಲ್ಲಿ ಎಶ್ಟು ಮುಂದೆ ಹೋಗಬಲ್ಲರು ಎಂಬುದು ಅವಲಂಬಿಸಿರುತ್ತದೆ, ಮತ್ತು ಸಾಮಾನ್ಯವಾಗಿ, ಮಕ್ಕಳ ಹತೋಟಿಯಲ್ಲಿರುವ ಪದಗಳ ಎಣಿಕೆ ಅವರ ತಾಯ್ತಂದೆಯರು ಬರಹಬಲ್ಲವರೋ ಇಲ್ಲವೇ ಬರಹಬಾರದವರೋ ಎಂಬುದರ ಮೇಲೆಯೂ ಅವಲಂಬಿಸಿರುತ್ತದೆ.

ಹೆಚ್ಚು ಪದಗಳ ಮೇಲೆ ಹತೋಟಿಯಿರುವ ಮಕ್ಕಳು ಹೆಚ್ಚು ಬರಹಗಳನ್ನು ಓದಿ ತಿಳಿದುಕೊಳ್ಳಬಲ್ಲರು, ಮತ್ತು ಇದರಿಂದಾಗಿ ಅವರ ಹತೋಟಿಯಲ್ಲಿರುವ ಪದಗಳ ಎಣಿಕೆ ಬಹಳ ಬೇಗನೆ ಹೆಚ್ಚುತ್ತಾ ಹೋಗುತ್ತದೆ; ಇದಕ್ಕೆ ಬದಲು, ಕಡಿಮೆ ಪದಗಳ ಮೇಲೆ ಹತೊಟಿಯಿರುವ ಮಕ್ಕಳು ಪಟ್ಯಪುಸ್ತಕಗಳನ್ನು ಬಿಟ್ಟು ಬೇರೆ ಬರಹಗಳನ್ನು ಓದಲು ಹೋಗುವುದಿಲ್ಲ, ಮತ್ತು ಇದರಿಂದಾಗಿ ಅವರ ಹತೋಟಿಯಲ್ಲಿರುವ ಪದಗಳ ಎಣಿಕೆ ತುಂಬಾ ಮೆಲ್ಲಗೆ ಹೆಚ್ಚುತ್ತಿರುತ್ತದೆ. ಇಂಗ್ಲಿಶ್ ಕಲಿಕೆನುಡಿಯಾಗಿರುವ ಶಾಲೆಗಳಲ್ಲಿ ಕಲಿಯುವ ಮೇಲ್ವರ‍್ಗದವರ ಮಕ್ಕಳಿಗೆ ತಮ್ಮ ಹತೋಟಿಯಲ್ಲಿರುವ ಇಂಗ್ಲಿಶ್ ಪದಗಳನ್ನು ಹೆಚ್ಚಿಸಲು ಮನೆಯಲ್ಲಿಯೂ ನೆರವು ಸಿಗುತ್ತದೆ; ಆದರೆ, ಕೆಳವರ‍್ಗದ ಮಕ್ಕಳಿಗೆ ಇಂತಹ ಮನೆಯ ನೆರವು ಸಿಗುವುದಿಲ್ಲ. ಇದರಿಂದಾಗಿಯೂ ಅವರು ಇಂತಹ ಶಾಲೆಗಳಲ್ಲಿ ಹಿಂದೆ ಬೀಳುತ್ತಾರೆ.

ಇನ್ನೊಂದು ವಿಶಯವೇನೆಂದರೆ, ಎರಡು ಇಲ್ಲವೇ ಮೂರನೇ ತರಗತಿಯ ವರೆಗೆ ಮಕ್ಕಳು ಕಲಿಯುವುದು ಓದುವುದು ಮತ್ತು ಬರೆಯುವುದು ಹೇಗೆ ಎಂಬುದನ್ನು. ತಮಗೆ ತಿಳಿಯದಿರುವ ಇಂಗ್ಲಿಶ್ ನುಡಿಯಲ್ಲಿ ಇದನ್ನು ನಡೆಸುವುದು ಅವರಿಗೆ ಅಶ್ಟೊಂದು ತೊಡಕಿನದಾಗಿರುವುದಿಲ್ಲ. ಆದರೆ, ಮೂರು ಇಲ್ಲವೇ ನಾಲ್ಕನೇ ತರಗತಿಯಿಂದ ಅವರು ತಮ್ಮ ಓದಿನ ಮೂಲಕ ಗಣಿತ, ವಿಜ್ನಾನ ಮೊದಲಾದ ಹಲವು ಬಗೆಯ ವಿಶಯಗಳನ್ನು ತಿಳಿದುಕೊಳ್ಳಲು ತೊಡಗಬೇಕಾಗುತ್ತದೆ; ಕಣ್ಣಿಗೆ ಕಾಣದ ಮತ್ತು ಕಿವಿಗೆ ಕೇಳಿಸದ ಪರಿಕಲ್ಪನೆಗಳನ್ನು ಅರಿತುಕೊಳ್ಳಬೇಕಾಗುತ್ತದೆ.

ಇಂತಹ ಕೆಲಸಗಳನ್ನು ನಡೆಸಲು ಇಂಗ್ಲಿಶ್ ನುಡಿಯನ್ನು ತುಂಬಾ ಚನ್ನಾಗಿ ಕಲಿಸುವ ಶಾಲೆಗಳಲ್ಲೂ ಮಕ್ಕಳಿಗೆ ಆರೇಳು ವರ‍್ಶಗಳ ಕಲಿಕೆ ಬೇಕಾಗುತ್ತದೆಯೆಂದು ಕಂಡುಹಿಡಿಯಲಾಗಿದೆ. ಇಂಗ್ಲಿಶ್ ಕಲಿಕೆನುಡಿಯಾಗಿರುವಲ್ಲಿ ಈ ಕೆಲಸಗಳನ್ನು ನಾಲ್ಕನೇ ತರಗತಿಯಿಂದಲೇ ನಡೆಸಬೇಕಾಗುತ್ತದೆಯಾದ ಕಾರಣ, ಹೆಚ್ಚಿನ ಮಕ್ಕಳೂ ಇದರಲ್ಲಿ ಸೋಲುತ್ತಾರೆ, ಮತ್ತು ಹಲವು ಮಂದಿ ಮಕ್ಕಳು ಈ ತೊಡಕನ್ನು ಎದುರಿಸಲಾಗದೆ ಶಾಲೆಯಿಂದ ಹೊರಬೀಳುತ್ತಾರೆ. ಇಲ್ಲಿಯೂ ಮೇಲ್ವರ‍್ಗದವರ ಮತ್ತು ಬಲ್ಲಿದರ ಮಕ್ಕಳಿಗಿಂತ ಕೆಳವರ‍್ಗದವರ ಮತ್ತು ಬಡವರ ಮಕ್ಕಳೇ ಹೆಚ್ಚು ಸೋಲುತ್ತಾರೆ.

ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸುವ ಮಕ್ಕಳಿಗೆ ತಮ್ಮ ತಾಯ್ನುಡಿಯ ಮೇಲೆ, ಮತ್ತು ಅದನ್ನು ಬಳಸುವ ತಾಯ್ತಂದೆಯರು, ನೆಂಟರು, ನೆರೆಹೊರೆಯವರು ಮೊದಲಾದವರ ಮೇಲೆ ಕೀಳರಿಮೆ ಬೆಳೆಯುತ್ತದೆ; ತಮ್ಮ ಕಲಿಕೆ ಮುಂದುವರಿದಂತೆಲ್ಲ ಮಕ್ಕಳು ಇವರಿಂದ ದೂರವಾಗುತ್ತಾ ಹೋಗುತ್ತಾರೆ. ಈ ತೊಡಕು ಮೇಲ್ವರ‍್ಗದವರ ಮಕ್ಕಳಿಗಿಂತಲೂ ಕೆಳವರ‍್ಗದ ಮಕ್ಕಳನ್ನು ಹೆಚ್ಚು ಕಾಡುತ್ತದೆ. ಯಾಕೆಂದರೆ, ಮೇಲ್ವರ‍್ಗದ ಮಕ್ಕಳ ತಾಯ್ತಂದೆಯರು, ನೆಂಟರು ಮತ್ತು ನೆರೆಹೊರೆಯವರು ಸಾಮಾನ್ಯವಾಗಿ ಇಂಗ್ಲಿಶ್ ತಿಳಿದಿರುತ್ತಾರೆ.

ಇಂತಹ ಹಲವು ಸಮಸ್ಯೆಗಳಿರುವುದರಿಂದಾಗಿ, ಕೆಳವರ‍್ಗದ ಮಕ್ಕಳು ಮೇಲೆ ಬರಬೇಕಿದ್ದಲ್ಲಿ, ಮತ್ತು ತಮ್ಮೊಂದಿಗೆ ತಮ್ಮ ಸಮಾಜವನ್ನೂ ಮೇಲೆ ತರಬೇಕಿದ್ದಲ್ಲಿ, ಅವರಿಗೆ ಕಲಿಕೆನುಡಿಯಾಗಿ ಕನ್ನಡವನ್ನೇ ಬಳಸುತ್ತಿರಬೇಕು. ಇದರೊಂದಿಗೆ ಇಂಗ್ಲಿಶ್ ನುಡಿಯನ್ನೂ ಒಂದು ವಿಶಯವಾಗಿ ಮಾತ್ರ ಕಲಿಸುತ್ತಿರಬೇಕಲ್ಲದೆ ಕಲಿಕೆನುಡಿಯಾಗಿ ಬಳಸಲು ಹೋಗಬಾರದು.

ಇಂಗ್ಲಿಶ್ ನುಡಿಯ ಕಲಿಕೆಯಲ್ಲಿ ಅವರು ಹಿಂದೆ ಬೀಳುತ್ತಿರುವುದಕ್ಕೆ ಅವರ ಕಲಿಕೆನುಡಿಯಾಗಿ ಕನ್ನಡವನ್ನು ಬಳಸುತ್ತಿರುವುದು ಕಾರಣವಲ್ಲ; ಇಂಗ್ಲಿಶ್ ನುಡಿಯನ್ನು ಅವರಿಗೆ ಶಾಲೆಯಲ್ಲಿ ಸರಿಯಾಗಿ ಕಲಿಸದಿರುವುದೇ ಕಾರಣ. ಹಾಗಾಗಿ, ಕಲಿಕೆನುಡಿಯನ್ನು ಬದಲಾಯಿಸುವುದರಿಂದ ಅವರು ಇಂಗ್ಲಿಶ್ ಕಲಿಕೆಯಲ್ಲಿ ಮುಂದೆ ಹೋಗುವ ಬದಲು, ಬೇರೆ ವಿಶಯಗಳ ಕಲಿಕೆಯಲ್ಲೂ ಹಿಂದೆ ಬೀಳಲು ತೊಡಗುತ್ತಾರೆ.

ಇವತ್ತು ಮುಂದೆ ಬಂದಿರುವ ಎಲ್ಲಾ ನಾಡುಗಳಲ್ಲೂ ಮಕ್ಕಳ ಕಲಿಕೆನುಡಿ ಅವರ ತಾಯ್ನುಡಿಯಾಗಿದೆ; ಇಂಗ್ಲಿಶ್‌ನಂತಹ ಬೇರೊಂದು ನುಡಿಯನ್ನು ಕಲಿಕೆನುಡಿಯಾಗಿ ಬಳಸುವ ಯಾವ ನಾಡೂ ಇದುವರೆಗೆ ಮುಂದೆ ಬಂದಿಲ್ಲ. ಇದಕ್ಕೆ ಕಾರಣವೇನೆಂದರೆ, ತಮ್ಮ ನಾಡಿನದಲ್ಲದ ಕಲಿಕೆನುಡಿಯಲ್ಲಿ ಕಲಿತವರು ನಾಡಿನ ಸಾಮಾನ್ಯ ಜನರಿಂದ ಬೇರಾಗಿಯೇ ಉಳಿಯುತ್ತಾರೆ, ಮತ್ತು ಅವರ ಕಲಿಕೆಯಿಂದ ಸಾಮಾನ್ಯ ಜನರಿಗೆ ಯಾವ ಪ್ರಯೋಜನವೂ ದೊರಕುವುದಿಲ್ಲ.

ಹಾಗಾಗಿ, ಕಲಿಯುವ ಮಕ್ಕಳ ವಯ್ಯಕ್ತಿಕ ಏಳಿಗೆಗೆ ಮಾತ್ರವಲ್ಲದೆ, ಅವರ ಸಮಾಜದ ಮತ್ತು ನಾಡಿನ ಏಳಿಗೆಗಾಗಿಯೂ ಕಲಿಕೆನುಡಿಯಾಗಿ ಅವರ ತಾಯ್ನುಡಿ ಇಲ್ಲವೇ ಪರಿಸರದ ನುಡಿಯನ್ನು ಬಳಸುವುದೇ ಸರಿಯಾದ ದಾರಿ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹವನ್ನು ಮಾರ‍್ಪಡಿಸಿ ಗೆದ್ದವರು

ನುಡಿಯರಿಮೆಯ ಇಣುಕುನೋಟ – 8

ಜಗತ್ತಿನ ಹಲವು ನುಡಿಗಳಲ್ಲಿ ಇತ್ತೀಚೆಗೆ, ಎಂದರೆ ಕಳೆದ ನೂರು-ನೂರಯ್ವತ್ತು ವರ‍್ಶಗಳಲ್ಲಿ, ನೂರಾರು ವರ‍್ಶಗಳಿಂದ ಬಳಕೆಯಲ್ಲಿದ್ದ ಬರಹಗಳನ್ನು ಮಾರ‍್ಪಡಿಸಿ, ಅವುಗಳಲ್ಲಿ ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲಾಗಿದೆ, ಮತ್ತು ಇದರಿಂದಾಗಿ ಆ ನುಡಿಗಳನ್ನಾಡುವ ಜನರಲ್ಲಿ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆ.

ಜನರ ಜೀವನದಲ್ಲಿ ಇತ್ತೀಚೆಗೆ ಬರಹ ಹೆಚ್ಚು ಹೆಚ್ಚು ಮುಕ್ಯವಾಗುತ್ತಿರುವುದು, ಮತ್ತು ಒಂದು ನಾಡಿನಲ್ಲಿರುವ ಎಲ್ಲಾ ಜನರೂ ಬರಹಬಲ್ಲವರಾಗದೆ ಆ ನಾಡಿನ ಏಳಿಗೆಯಾಗಲಾರದೆಂಬ ಪರಿಸ್ತಿತಿ ಉಂಟಾಗಿರುವುದು ಅವರು ಇಂತಹ ಮಾರ‍್ಪಾಡುಗಳನ್ನು ನಡೆಸಲು ಮುಕ್ಯ ಕಾರಣ.

ಬರಹಗಳನ್ನು ಎರಡು ಬಗೆಗಳಲ್ಲಿ ಈ ಕಾರಣಕ್ಕಾಗಿ ಮಾರ‍್ಪಡಿಸಲಾಗಿದೆ: ಅವುಗಳ ಬರಿಗೆ(ಅಕ್ಶರ)ಗಳಲ್ಲಿ ಬೇಕಾದವುಗಳನ್ನು ಮಾತ್ರ ಉಳಿಸಿಕೊಂಡು ಬೇಡದವುಗಳನ್ನು ತೆಗೆದುಹಾಕಿರುವುದು ಒಂದು ಬಗೆಯ ಮಾರ‍್ಪಾಡು, ಮತ್ತು ಬಳಕೆಯಲ್ಲಿರುವ ಬರಿಗೆಗಳನ್ನೇ ಬಿಟ್ಟುಕೊಟ್ಟು, ಅವುಗಳ ಬದಲಿಗೆ ಬೇರೆ ಬಗೆಯ ಬರಿಗೆಗಳನ್ನು ಬಳಸತೊಡಗಿರುವುದು ಇನ್ನೊಂದು ಬಗೆಯ ಮಾರ‍್ಪಾಡು.

ಗ್ರೀಕ್ ಬರಹದಲ್ಲಿ ಪದಗಳನ್ನು ಹಿಂದಿನ ಕಾಲದಲ್ಲಿದ್ದಂತೆ ಬರೆಯಲು ಹಲವು ಹೆಚ್ಚಿನ ಬರಿಗೆಗಳನ್ನು ಬಳಸಲಾಗುತ್ತಿತ್ತು; ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡಲು, 1982ರಲ್ಲಿ ಬೇಡದಿರುವ ಬರಿಗೆಗಳನ್ನೆಲ್ಲ ಬಿಟ್ಟುಕೊಡಲಾಯಿತು. ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಬರಿಗೆಗಳ ಬಳಕೆಯಿಲ್ಲ; ಕೆಲವರು ಗ್ರೀಕ್ ಪಂಡಿತರು ಮಾತ್ರ ಅವನ್ನು ಬಳಸುತ್ತಿದ್ದಾರೆ.

ಜಪಾನೀಸ್ ಬರಹದ ಕನ ಬರಿಗೆಗಳು ಒಂಬತ್ತನೇ ಶತಮಾನದಲ್ಲಿ ಸರಿಯಾಗಿದ್ದುವು; ಆದರೆ, ಆಮೇಲೆ ಮಾತಿನಲ್ಲಿ ನಡೆದ ಮಾರ‍್ಪಾಡುಗಳಿಂದಾಗಿ ಅವಕ್ಕೂ ಅವುಗಳ ಓದಿಗೂ ನಡುವೆ ಹಲವು ವ್ಯತ್ಯಾಸಗಳು ಮೂಡಿಬಂದುವು. 1946ರಲ್ಲಿ ಇವನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾರ‍್ಪಡಿಸಲಾಯಿತು, ಮತ್ತು ಓದಿನಲ್ಲಿಲ್ಲದ ಕೆಲವು ಬರಿಗೆಗಳನ್ನು ಬಿಟ್ಟುಕೊಡಲಾಯಿತು.

ಕೊರಿಯನ್ ಬರಹದಲ್ಲಿ ಅವರವೇ ಆದ ಪದಗಳನ್ನು ಬರೆಯಲು ಹಂಗುಲ್ ಎಂಬ ತುಂಬಾ ಚನ್ನಾಗಿರುವ ಬರಿಗೆಗಳನ್ನು ಬಳಸಲಾಗುತ್ತಿದೆ; ಆದರೆ, ಚಯ್ನೀಸ್‌ನಿಂದ ಎರವಲು ಪಡೆದ ಪದಗಳನ್ನು ಬರೆಯಲು ತೊಡಕು ತೊಡಕಾಗಿರುವ ಚಯ್ನೀಸ್ ಮೂಲದ ಹಂಜ ಎಂಬ ಬರಿಗೆಗಳನ್ನು ಬಳಸಲಾಗುತ್ತಿದೆ. 1949ರಲ್ಲಿ ಈ ಚಯ್ನೀಸ್ ಎರವಲು ಪದಗಳನ್ನೂ ಹಂಗುಲ್‌ನಲ್ಲಿಯೇ ಬರೆಯುವ ನಿರ‍್ದಾರವನ್ನು ಉತ್ತರ ಕೊರಿಯಾದಲ್ಲಿ ಮಾಡಲಾಯಿತು, ಮತ್ತು ಇದರಿಂದಾಗಿ ಆ ನಾಡಿನಲ್ಲಿ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಯಿತು.

ದಕ್ಶಿಣ ಕೊರಿಯಾದಲ್ಲೂ ಹಂಜ ಬರಿಗೆಗಳ ಎಣಿಕೆಯನ್ನು ಸಾಕಶ್ಟು ಕಡಿಮೆ ಮಾಡಲಾಗಿದೆ, ಮತ್ತು ಅವನ್ನು ಎಲಿಮೆಂಟರಿ ಶಾಲೆಗಳಲ್ಲಿ ಕಲಿಸದಿರುವಂತೆ, ಮತ್ತು ಮಕ್ಕಳ ಪುಸ್ತಕಗಳಲ್ಲಿ, ಮತ್ತು ಎಲ್ಲಾ ಜನರೂ ಓದಬೇಕಾಗಿರುವ ಬರಹಗಳಲ್ಲಿ ಬಳಸದಿರುವಂತೆ ನೋಡಿಕೊಳ್ಳಲಾಗುತ್ತಿದೆ.

ಬರಹಗಳಲ್ಲಿ ಬರುವ ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡುವುದಕ್ಕಾಗಿ ಟರ‍್ಕಿ, ಇಂಡೊನೇಶ್ಯಾ, ಮಲಯೇಶ್ಯಾ, ಸೋಮಾಲಿಯಾ ಮೊದಲಾದೆಡೆಗಳಲ್ಲಿ, ಮತ್ತು ಸೋವಿಯಟ್ ಯೂನಿಯನ್‌ನ ಹಲವು ನಾಡುಗಳಲ್ಲಿ ಅರೇಬಿಕ್ ಮೂಲದ ಬರಿಗೆಗಳನ್ನು ಬಿಟ್ಟುಕೊಟ್ಟು ರೋಮನ್ ಮೂಲದ ಬರಿಗೆಗಳನ್ನು ಬಳಕೆಗೆ ತರಲಾಗಿದೆ. ಇದರಿಂದಾಗಿ ಈ ನಾಡುಗಳಲ್ಲಿಯೂ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತಿದೆ.

ಇದಕ್ಕೆ ಬದಲು, ಅರೇಬಿಕ್ ಬರಿಗೆಗಳನ್ನು ಬಳಸುತ್ತಿರುವ ಇರಾನ್, ಇರಾಕ್ ಮೊದಲಾದ ಹಲವು ನಾಡುಗಳಲ್ಲಿ ಇವತ್ತಿಗೂ ಬರಹ ಬಲ್ಲವರ ಎಣಿಕೆ ತುಂಬಾ ಕಡಿಮೆಯಿದೆ. ಇದಕ್ಕೆ ಕೆಲವು ಸಾಮಾಜಿಕ ತೊಡಕುಗಳೂ ಕಾರಣವಿರಬಹುದು; ಆದರೆ, ಬರಹಗಳಲ್ಲಿ ಪದಗಳನ್ನು ಓದುವ ಹಾಗೆ ಬರೆಯದಿರುವುದು, ಮತ್ತು ಇದರಿಂದಾಗಿ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ತೊಡಕಿನದಾಗಿರುವುದೂ ಒಂದು ಕಾರಣವೆಂಬುದರಲ್ಲಿ ಸಂಶಯವಿಲ್ಲ.

ಪದಗಳನ್ನು ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲು ಇತ್ತೀಚೆಗೆ ಬೇರೆ ಹಲವಾರು ನುಡಿಗಳ ಬರಹಗಳಲ್ಲೂ ಮಾರ‍್ಪಾಡುಗಳನ್ನು ನಡೆಸಲಾಗಿದೆ. ವಿಯೆಟ್ನಾಮ್‌ನಲ್ಲಿ ಚಯ್ನೀಸ್ ಬರಿಗೆಗಳ ಬದಲು ರೋಮನ್ ಮೂಲದ ಬರಿಗೆಗಳನ್ನು ಬಳಸಲು ತೊಡಗಿದುದರಿಂದಾಗಿ ಇವತ್ತು ವಿಯೆಟ್ನಮೀಸ್ ಬರಹಗಳಲ್ಲಿ ಚಯ್ನೀಸ್ ಎರವಲುಗಳನ್ನೂ ಓದುವ ಹಾಗೆಯೇ ಬರೆಯಲು ಸಾದ್ಯವಾಗಿದೆ; ಈ ಮಾರ‍್ಪಾಡನ್ನು ನಡೆಸಿದ ಬಳಿಕ ಅಲ್ಲಿಯೂ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತದೆ.

ಯುರೋಪಿನ ಹಲವಾರು ನುಡಿಗಳಲ್ಲೂ ಇತ್ತೀಚೆಗೆ ಬರಹಗಳಲ್ಲಿ ಮಾರ‍್ಪಾಡುಗಳನ್ನು ನಡೆಸುವ ಮೂಲಕ ಓದಿಗೂ ಬರಹಕ್ಕೂ ನಡುವಿರುವ ಅಂತರವನ್ನು ಕಡಿಮೆ ಮಾಡಲಾಗಿದೆ. ಹೆಸರು(ನಾಮ)ಪದಗಳನ್ನು ಬರೆಯುವಾಗ ಅವುಗಳ ಮೊದಲಿಗೆ ದೊಡ್ಡ ಬರಿಗೆಯನ್ನು ಬಳಸಬೇಕೆಂಬ ಕಟ್ಟಲೆಯನ್ನು ಡೇನಿಶ್‌ನಲ್ಲಿ ಬಿಟ್ಟುಕೊಡಲಾಗಿದೆ; ಕೊಟ್ಟಹೆಸರುಗಳಲ್ಲಿ ಮಾತ್ರ ಈ ಕಟ್ಟಲೆಯನ್ನು ಉಳಿಸಿಕೊಳ್ಳಲಾಗಿದೆ.

ಜರ‍್ಮನಿ, ಆಸ್ಟ್ರಿಯಾ, ಮತ್ತು ಸ್ವಿಜರ್‌ಲೇಂಡ್‌ಗಳಲ್ಲಿಯೂ ಜರ‍್ಮನ್ ಬರಹಗಳಲ್ಲಿರುವ ಬರಿಗೆಗಳ ಬಳಕೆಯಲ್ಲಿ ಹಲವು ಮಾರ‍್ಪಾಡುಗಳನ್ನು ನಡೆಸಬೇಕೆಂಬ ತೀರ‍್ಮಾನಕ್ಕೆ ಇತ್ತೀಚೆಗೆ ಬರಲಾಗಿತ್ತು; ಪದಗಳನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯಬೇಕೆಂಬುದೇ ಈ ಮಾರ‍್ಪಾಡುಗಳ ಮುಕ್ಯ ಉದ್ದೇಶವಾಗಿತ್ತು. ಈ ತೀರ‍್ಮಾನವನ್ನು 1996ರಲ್ಲಿ ಬಳಕೆಗೆ ತರಲಾಯಿತು.
ಆದರೆ, ಇದನ್ನು ವಿರೋದಿಸುವವರೂ ಕೆಲವರಿದ್ದು, ಜರ‍್ಮನಿಯಲ್ಲಿ ಈ ಮಾರ‍್ಪಾಡುಗಳನ್ನು ಬಳಸುವುದು ಶಾಲೆಗಳಲ್ಲಿ ಮಾತ್ರ ಕಡ್ಡಾಯವಾಗಿದೆ. ಹೀಗಿದ್ದರೂ, ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಮಾರ‍್ಪಡಿಸಿದ ಬರಿಗೆಗಳೇ ಬಳಕೆಯಾಗುತ್ತಿವೆ; ಕೆಲವು ಪತ್ರಿಕೆಗಳು ಮತ್ತು ಪುಸ್ತಕಗಳು ಮಾತ್ರ ಹಳೇ ಬರಹಕ್ಕೆ ಜೋತುಬಿದ್ದಿವೆ.

ಪೋರ‍್ಚುಗೀಸ್ ಬರಹದಲ್ಲೂ ಅದನ್ನು ಬಳಸುವ ಹಲವು ನಾಡುಗಳು ಒಟ್ಟುಸೇರಿ ಇಂತಹದೇ ಮಾರ‍್ಪಾಡನ್ನು ಬಳಕೆಗೆ ತಂದಿವೆ; ಇದಕ್ಕೆ ಮೊದಲು, ಪದಗಳನ್ನು ಅವುಗಳ ಮೂಲರೂಪ ಎಂತಹದು ಎಂಬುದನ್ನು ಸೂಚಿಸುವಂತೆ ಬರೆಯಲಾಗುತ್ತಿತ್ತು; ಆದರೆ, ಈ ರೂಪಗಳಿಗೂ ಅವನ್ನು ಓದುವ ಬಗೆಗೂ ನಡುವೆ ಯಾವ ಹೊಂದಾಣಿಕೆಯೂ ಇರಲಿಲ್ಲ; ಹಾಗಾಗಿ, ಅವುಗಳ ಈ ಹಳೆಯ ರೂಪಗಳನ್ನು ಬಿಟ್ಟುಕೊಟ್ಟು, ಆದಶ್ಟು ಮಟ್ಟಿಗೆ ಇವತ್ತು ಅವನ್ನು ಹೇಗೆ ಓದಲಾಗುತ್ತದೆಯೋ ಹಾಗೆಯೇ ಬರೆಯುವಂತೆ ಅವುಗಳಲ್ಲಿ ಮಾರ‍್ಪಾಡುಗಳನ್ನು ಮಾಡಲಾಗಿದೆ.

ಒಂದು ನಾಡಿನಲ್ಲಿ ಓದು-ಬರಹ ಬಲ್ಲವರ ಎಣಿಕೆ ಎಶ್ಟಿದೆ ಎಂಬುದು ಆ ನಾಡಿನ ಬರಹಗಳಲ್ಲಿ ಬಳಕೆಯಾಗುತ್ತಿರುವ ಬರಿಗೆಗಳನ್ನು ಕಲಿಯಲು ಮತ್ತು ಬಳಸಲು ಎಶ್ಟು ಸುಲಬ ಎಂಬುದರ ಮೇಲೆ ಮಾತ್ರವಲ್ಲದೆ, ಅಲ್ಲಿನ ಜನರ ಮೇಲೆ ಓದಿನ ಕುರಿತಾಗಿ ಎಂತಹ ಆಳ್ವಿಕೆಯ ಒತ್ತಡ, ನೆರೆಹೊರೆಯ ಒತ್ತಡ, ಮತ್ತು ಮನೆಯವರ ಒತ್ತಡವಿದೆ ಎಂಬುದರ ಮೇಲೂ ಅವಲಂಬಿಸಿರುತ್ತದೆ; ಹಾಗಾಗಿ, ಕನ್ನಡದ ಬರಿಗೆಗಳಲ್ಲಿ ಮಾರ‍್ಪಾಡುಗಳನ್ನು ಮಾಡದಿದ್ದರೂ ಬರಹ ಬಲ್ಲವರ ಎಣಿಕೆ ಹೆಚ್ಚಬಲ್ಲುದು ಎಂಬುದಾಗಿ ಕೆಲವರಿಗೆ ಅನಿಸಬಹುದು.

ಆದರೆ, ಬರಿಗೆಗಳ ತೊಡಕೂ ಬರಹ ಬಲ್ಲವರ ಎಣಿಕೆ ಕಡಿಮೆಯಿರಲು ಒಂದು ಕಾರಣ ಎಂಬುದನ್ನು ಕಂಡುಕೊಂಡು, ಮೇಲೆ ಕೊಟ್ಟಿರುವಂತಹ ಹಲವಾರು ನುಡಿಗಳ ಬರಹಗಳಲ್ಲಿ ಬರಿಗೆಗಳನ್ನು ಮಾರ‍್ಪಡಿಸಲಾಗಿದೆ, ಮತ್ತು ಹಾಗೆ ಮಾಡುವ ಮೂಲಕ ಬರಹ ಬಲ್ಲವರ ಎಣಿಕೆಯನ್ನು ಹೆಚ್ಚಿಸಿಕೊಳ್ಳಲಾಗಿದೆ ಎಂಬುದನ್ನು ಮರೆಯಬಾರದು.

ಇಂಗ್ಲಿಶ್‌ನಲ್ಲಿ ಉಲಿಕೆಗೂ ಬರಿಗೆಗೂ ನಡುವೆ ಹೊಂದಾಣಿಕೆ ತುಂಬಾ ಕಡಿಮೆಯಿದೆಯಾದರೂ ಅದನ್ನು ಕಲಿಯುವವರ ಎಣಿಕೆ ತುಂಬಾ ಹೆಚ್ಚಿದೆಯಲ್ಲ ಎಂದು ಕೆಲವರು ಹೇಳಬಹುದು. ಆದರೆ, ಇಂಗ್ಲಿಶ್ ಬರಹದ ಈ ಸ್ಪೆಲ್ಲಿಂಗ್ ತೊಡಕಿನಿಂದಾಗಿ, ಅದನ್ನು ಕಲಿಯುವ ಮಕ್ಕಳಿಗೆ ಬೇರೆ ಬರಹಗಳನ್ನು ಕಲಿಯಲು ಬೇಕಾಗುವ ಸಮಯದ ಮೂರು ಪಾಲಶ್ಟು ಸಮಯ ಬೇಕಾಗುತ್ತದೆ.

ಇದಲ್ಲದೆ, ಹಾಗೆ ಕಶ್ಟಪಟ್ಟು ಕಲಿತವರಲ್ಲಿಯೂ ಹಲವರಿಗೆ ಸರಿಯಾಗಿ ಓದುವುದು ಹೇಗೆ ಎಂಬುದೇ ಗೊತ್ತಾಗಿರುವುದಿಲ್ಲ, ಮತ್ತು ಇದರಿಂದಾಗಿ ಅವರು ಆದಶ್ಟು ಮಟ್ಟಿಗೆ ಓದಿನಿಂದ ದೂರವೇ ಉಳಿಯಲು ಬಯಸುತ್ತಾರೆ. ಅಮೆರಿಕಾದಂತಹ ಮುಂದುವರಿದ ನಾಡುಗಳಲ್ಲೂ ಈ ತೊಂದರೆಯಿದೆ.

ಕನ್ನಡದ ಮಕ್ಕಳು ಈ ರೀತಿ ಕನ್ನಡ ಬರಹಗಳನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ತೊಂದರೆಗೊಳಗಾಗದಂತೆ ಮಾಡಲು, ಮತ್ತು ಅವನ್ನು ಎಲ್ಲಾ ಮಕ್ಕಳೂ ಸುಲಬವಾಗಿ ಮತ್ತು ಸರಿಯಾಗಿ ಓದಲು ಸಾದ್ಯವಾಗುವಂತೆ ಮಾಡಲು ಋ, ಷ, ಮಹಾಪ್ರಾಣ ಮೊದಲಾದ ಕನ್ನಡದ ಮಟ್ಟಿಗೆ ಬೇಡದಿರುವ ಕೆಲವು ಬರಿಗೆಗಳನ್ನು ಇವತ್ತು ಬಿಟ್ಟುಕೊಡಬೇಕಾಗಿದೆ. ಕನ್ನಡಿಗರಿಗೆ ತಮ್ಮ ನುಡಿಯ ಮೇಲಿರುವ ಕೀಳರಿಮೆಯನ್ನು ಇಲ್ಲವಾಗಿಸುವಲ್ಲಿಯೂ ಇದು ನೆರವಾಗಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ತಮಿಳರ ದಾರಿ ಮತ್ತು ನಮ್ಮ ದಾರಿ

ನುಡಿಯರಿಮೆಯ ಇಣುಕುನೋಟ – 7

ಎಲ್ಲರೂ ಬಳಸಬೇಕಿರುವ ಕನ್ನಡ ಬರಹದಲ್ಲಿ ಮಹಾಪ್ರಾಣ, ಋಕಾರ, ಷಕಾರ ಮೊದಲಾದ ಕೆಲವು ಕನ್ನಡಕ್ಕೆ ಬೇಡದ ಬರಿಗೆಗಳನ್ನು ಬಿಟ್ಟುಕೊಡುವುದು ಒಳ್ಳೆಯದು ಎಂಬುದಾಗಿ, ಇಲ್ಲವೇ ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳನ್ನು ಒಂದು ಮಿತಿಯಲ್ಲಿ ಇರಿಸಿಕೊಳ್ಳುವುದು ಒಳ್ಳೆಯದು ಎಂಬುದಾಗಿ ಹೇಳಿದಾಗ, ಇದು ತಮಿಳಿನ ದ್ರಾವಿಡ ಕಳಗಂ ಹಿಡಿದ ದಾರಿ ಎಂಬ ಮರುನುಡಿ ಕೇಳಿಬರುತ್ತದೆ.

ಆದರೆ, ಈ ಮರುನುಡಿ ಸರಿಯಲ್ಲ. ನಾವು ತಮಿಳರಿಂದಕಲಿಯಬಹುದಾದ ವಿಶಯಗಳೂ ಕೆಲವಿವೆ; ಆದರೆ ಹಾಗೆಂದು, ಎಲ್ಲಾ ವಿಶಯಗಳಲ್ಲೂ ಅವರನ್ನು ಕಣ್ಣುಮುಚ್ಚಿ ಹಿಂಬಾಲಿಸಬೇಕೆಂದೇನಿಲ್ಲ. ನಮಗೆ ಸರಿಯೆಂದು ಕಂಡುದನ್ನು ಅವರಿಂದ ಕಲಿಯೋಣ, ಮತ್ತು ಬೇರೆ ವಿಶಯಗಳಲ್ಲಿ ನಮ್ಮದೇ ಆದ ದಾರಿಯನ್ನೂ ಕಂಡುಕೊಳ್ಳೋಣ.

ತಮ್ಮ ನುಡಿಯ ಕುರಿತಾಗಿ ತಮಿಳರಿಗೆ ಎಲ್ಲೆಯಿಲ್ಲದ ಹೆಮ್ಮೆ ಮತ್ತು ಒಲುಮೆಗಳಿವೆ; ಆದರೆ, ಕನ್ನಡದ ತಿಳಿವಿಗರಿಗೆ ತಮ್ಮ ನುಡಿಯ ಕುರಿತು ಕೀಳರಿಮೆಯಿದೆ. ಎಂತಹ ಹೊಸ ಪದವನ್ನು ಬೇಕಿದ್ದರೂ ತಮ್ಮ ನುಡಿಯಲ್ಲಿ ಉಂಟುಮಾಡಲು ಬರುತ್ತದೆ ಎಂಬುದನ್ನು ತಮಿಳರು ಕಂಡುಕೊಂಡಿದ್ದಾರೆ, ಮತ್ತು ಅದನ್ನು ಬಳಕೆಗೂ ತಂದಿದ್ದಾರೆ; ಆದರೆ, ಕನ್ನಡದ ತಿಳಿವಿಗರು ಹೊಸ ಪದಗಳನ್ನುಂಟುಮಾಡಲು ಸಂಸ್ಕ್ರುತದ ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂಬುದಾಗಿ ಕಯ್ಚೆಲ್ಲಿ ಕುಳಿತಿದ್ದಾರೆ.

ತಮಿಳಿನ ಅರಿಮೆಯ ಪದನೆರಕೆಗಳಲ್ಲಿ ನೂರಕ್ಕೆ ತೊಂಬತ್ತಯ್ದರಶ್ಟು ತಮಿಳು ಪದಗಳಿವೆ; ಆದರೆ, ಕನ್ನಡದ ಅರಿಮೆಯ ಪದನೆರಕೆಗಳಲ್ಲಿ ನೂರಕ್ಕೆ ಹತ್ತರಶ್ಟೂ ಕನ್ನಡದ ಪದಗಳಿಲ್ಲ! ಇಂತಹ ಕೆಲವು ವಿಶಯಗಳಲ್ಲಿ ನಾವು ತಮಿಳರನ್ನು ಹಿಂಬಾಲಿಸಿದಲ್ಲಿ, ಅದು ನಮ್ಮ ನುಡಿಯ ಮತ್ತು ಸಮಾಜದ ಏಳಿಗೆಗೆ ನೆರವಾಗಬಲ್ಲುದು.

ಆದರೆ, ಬೇರೆ ಕೆಲವು ವಿಶಯಗಳಲ್ಲಿ ಅವರು ಹಿಡಿದ ದಾರಿ ನಮಗೆ ಬೇಕಿಲ್ಲ. ದ್ರಾವಿಡ ಕಳಗಗಳು ನಡೆಸಿದ ಚಳವಳಿಯಿಂದಾಗಿ, ತಮಿಳು ಬರಹದಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳು ತುಂಬಾ ಕಡಿಮೆಯಾದುವೇನೋ ನಿಜ; ಆದರೆ, ಇದರಿಂದ ಬರಹದ ತಮಿಳಿಗೂ ತಮಿಳಿನ ಆಡುನುಡಿಗಳಿಗೂ ನಡುವಿದ್ದ ಅಂತರ ಕಡಿಮೆಯಾಗುವ ಬದಲು ಹೆಚ್ಚಾಗಿದೆ.

ಯಾಕೆಂದರೆ, ಬರಹದಿಂದ ತೆಗೆದು ಹಾಕಿದ ಸಂಸ್ಕ್ರುತ ಪದಗಳಿಗೆ ಬದಲಾಗಿ ಇವರು ಹಳೆತಮಿಳಿನ ಪದಗಳನ್ನೇ ಬಳಕೆಗೆ ತಂದಿದ್ದಾರೆ; ಇವು ಹೊಸತಮಿಳಿನ ಪದಗಳಿಗಿಂತ ಹಲವು ವಿಶಯಗಳಲ್ಲಿ ಬೇರಾಗಿವೆ. ಇದಲ್ಲದೆ, ಹೆಚ್ಚುಕಡಿಮೆ ಹದಿಮೂರನೇ ಶತಮಾನದ ತಮಿಳನ್ನೇ ಬರಹಗಳಲ್ಲಿ ಬಳಸಲು ತೊಡಗಿದ್ದಾರೆ. ಇದು ಕನ್ನಡ ಬರಹಗಳಲ್ಲಿ ಇವತ್ತು ಹೊಸಗನ್ನಡದ ಬದಲು ಹಳೆಗನ್ನಡವನ್ನು ಬಳಸಲು ಹೊರಡುವ ಹಾಗೆ ಎನ್ನಬಹುದು.

ಇಂತಹ ತಮಿಳರ ದಾರಿ ನಮಗೆ ಬೇಕಾಗಿಲ್ಲ. ಕನ್ನಡ ಬರಹದಲ್ಲಿ ಯಾವ ಮಾರ‍್ಪಾಡನ್ನು ಮಾಡುವುದಿದ್ದರೂ ಅದಕ್ಕೆ ಕನ್ನಡ ಬರಹಕ್ಕೂ ಕನ್ನಡದ ಆಡುನುಡಿಗಳಿಗೂ ನಡುವಿರುವ ವ್ಯತ್ಯಾಸವನ್ನು ಕಡಿಮೆಮಾಡುವುದೇ ಮುಕ್ಯ ಗುರಿಯಾಗಿರಬೇಕು. ಕನ್ನಡಕ್ಕೆ ಬೇಕಿಲ್ಲದ ಮಹಾಪ್ರಾಣ, ಋಕಾರ, ಷಕಾರಗಳನ್ನು ಬರಹದಲ್ಲಿ ಬಳಸದಿರುವುದು, ಮತ್ತು ಹೆಚ್ಚು ಹೆಚ್ಚು ಕನ್ನಡದವೇ ಆದ ಪದಗಳನ್ನು ಬಳಸುವುದು ಎಂಬ ಈ ಎರಡು ಮಾರ‍್ಪಾಡುಗಳಿಗೂ ಇದೇ ಮುಕ್ಯ ಗುರಿಯಾಗಿದೆ.

ಇನ್ನು ತಮಿಳು ಬರಹದಲ್ಲಿ ಮಹಾಪ್ರಾಣ, ಋಕಾರ, ಗಜಡದಬ ಮೊದಲಾದ ಕೆಲವು ಬರಿಗೆಗಳು ಬಳಕೆಯಾಗದಿರುವುದಕ್ಕೆ ದ್ರಾವಿಡ ಕಳಗಗಳು ಕಾರಣವಲ್ಲ. ಇತ್ತೀಚೆಗೆ ನಡೆಸಿದ ಯಾವ ಮಾರ‍್ಪಾಡೂ ಅದಕ್ಕೆ ಕಾರಣವಲ್ಲ. ಬ್ರಾಹ್ಮೀಲಿಪಿಯನ್ನು ತಮಿಳಿಗೆ ಅಳವಡಿಸುವ ಸಮಯದಲ್ಲೇನೇ, ಎಂದರೆ ಸುಮಾರು ಎರಡು ಸಾವಿರ ವರ‍್ಶಗಳಶ್ಟು ಹಿಂದೆಯೇ ತಮಿಳು ಬರಹದಲ್ಲಿ ಈ ಬರಿಗೆಗಳನ್ನು ಬಳಸದಿರಲು ತೀರ‍್ಮಾನಿಸಲಾಗಿತ್ತು.

ಆವತ್ತಿನ ತಮಿಳು ಓದಿಗೆ ಈ ಬರವಣಿಗೆ ಸರಿಯಾಗಿಯೂ ಇದ್ದಿರಬೇಕು; ಆದರೆ, ಆಮೇಲೆ ತಮಿಳು ನುಡಿಯಲ್ಲಿ ಹಲವಾರು ಮಾರ‍್ಪಾಡುಗಳು ನಡೆದಿದ್ದು, ಇದರಿಂದಾಗಿ ಇವತ್ತಿನ ಓದಿಗೂ ಬರಹಕ್ಕೂ ನಡುವೆ ಹಲವು ವ್ಯತ್ಯಾಸಗಳು ಮೂಡಿಬಂದಿವೆ. ಈ ವ್ಯತ್ಯಾಸಗಳನ್ನನುಸರಿಸಿ ತಮಿಳು ಬರಹದಲ್ಲಿ ಹೆಚ್ಚಿನ ಮಾರ‍್ಪಾಡನ್ನೇನೂ ನಡೆಸಿಲ್ಲವಾದ ಕಾರಣ, ಅದರ ಬಳಕೆಯಲ್ಲಿ ಇವತ್ತು ಕೆಲವು ತೊಡಕುಗಳು ಕಾಣಿಸಿಕೊಳ್ಳುತ್ತಿವೆ.

ಸಂಸ್ಕ್ರುತ ಕಾವ್ಯಗಳನ್ನು ಇಲ್ಲವೇ ಬೇರೆ ಸಂಸ್ಕ್ರುತ ಬರಹಗಳನ್ನು ಬರೆಯಲು ಬೇಕಾಗುವ ಹಲವು ಹೆಚ್ಚಿನ ಬರಿಗೆಗಳನ್ನು ತಮಿಳು ಬರಹದಲ್ಲೇನೇ ಉಳಿಸಿಕೊಳ್ಳುವ ಬದಲು, ಅವರು ಗ್ರಂತ ಲಿಪಿಯೆಂಬ ಬೇರೆಯೇ ಒಂದು ಬಗೆಯ ಬರಹವನ್ನು ಬಳಕೆಗೆ ತಂದಿದ್ದರು. ಹಾಗಾಗಿ, ಈ ಬರಿಗೆಗಳ ತೊಡಕು ಅವರ ಬರಹವನ್ನು ತಟ್ಟಿಲ್ಲ.

ಕನ್ನಡ ಬರಹ ಉತ್ತರದಿಂದ ವಲಸೆಬಂದ ಬ್ರಾಹ್ಮಣರ ಕೊಡುಗೆಯಾಗಿದೆ; ಈ ಬ್ರಾಹ್ಮಣರು ಆರ‍್ಯರಾಗಿದ್ದು, ಸಂಸ್ಕ್ರುತದ ಮೇಲೆ ಅವರಿಗೆ ಹೆಚ್ಚಿನ ಮಮತೆ ಮತ್ತು ಪೂಜ್ಯಬಾವವಿತ್ತು. ಹಾಗಾಗಿ, ಅವರು ಕನ್ನಡದ ಬರಹದಲ್ಲಿ ಸಂಸ್ಕ್ರುತ ಬರಹಕ್ಕೆ ಬೇಕಾಗುವ ಎಲ್ಲಾ ಬರಿಗೆಗಳನ್ನೂ, ಅವು ಕನ್ನಡಕ್ಕೆ ಬೇಡವಾಗಿದ್ದರೂ, ಉಳಿಸಿಕೊಂಡಿದ್ದರು, ಮತ್ತು ಕನ್ನಡಕ್ಕೆ ಬೇಕಾಗುವ ಎ, ಒ, ಱ, ೞದಂತಹ ಕೆಲವು ಹೆಚ್ಚಿನ ಬರಿಗೆಗಳನ್ನೂ ಹೊಸದಾಗಿ ಸೇರಿಸಿಕೊಂಡಿದ್ದರು.

ಮೊನ್ನೆ ಮೊನ್ನೆವರೆಗೂ ಕನ್ನಡ ಬರಹ ಮುಕ್ಯವಾಗಿ ಬ್ರಾಹ್ಮಣರ ಬಳಕೆಯಲ್ಲೇ ಉಳಿದುಕೊಂಡಿತ್ತು; ಕೆಳವರ‍್ಗದ ಜನರು ಅದರಿಂದ ದೂರವೇ ಉಳಿದಿದ್ದರು. ತುಂಬಾ ಸಂಸ್ಕ್ರುತ ಪದಗಳನ್ನು ಬಳಸುವ, ಮತ್ತು ಕನ್ನಡಕ್ಕೆ ಬೇಕಿಲ್ಲದ ಹಲವು ಬರಿಗೆಗಳನ್ನು ಬಳಸುವ ಈ ಬರಹವೂ ಅವರು ಈ ರೀತಿ ಅದರಿಂದ ದೂರ ಉಳಿಯಲು ಒಂದು ಕಾರಣವಾಗಿತ್ತು.

ಆದರೆ, ಇವತ್ತು ಬರಹಕ್ಕೆ ಕಳೆದ ಎರಡು ಸಾವಿರ ವರ‍್ಶಗಳಲ್ಲೂ ಇಲ್ಲದಿದ್ದಂತಹ ಮೇಲ್ಮೆ ದೊರೆತಿದೆ; ಇವತ್ತಿನ ಸಮಾಜದಲ್ಲಿ ಬರಹದ ಅರಿವಿಲ್ಲದವರು ಯಾರೂ ಮುಂದೆ ಬರಲು ಸಾದ್ಯವೇ ಇಲ್ಲ ಎಂಬಂತಹ ಪರಿಸ್ತಿತಿಯುಂಟಾಗಿದೆ; ಇದಲ್ಲದೆ, ಎಲ್ಲಾ ಜನರೂ ಬರಹಬಲ್ಲವರಾಗದೆ ಇವತ್ತು ಯಾವ ಸಮಾಜವೂ ಏಳಿಗೆಹೊಂದಲಾರದು. ಹಾಗಾಗಿ, ಕನ್ನಡಿಗರ, ಅವರ ಸಮಾಜದ, ಮತ್ತು ಅವರ ಬರಹದ ಏಳಿಗೆಗಾಗಿ, ಇವತ್ತು ಕನ್ನಡ ಬರಹ ಎಲ್ಲರನ್ನೂ ತಲಪುವಂತೆ ಮಾಡಬೇಕಾಗಿದೆ, ಮತ್ತು ಇದಕ್ಕಾಗಿ ಕನ್ನಡಕ್ಕೆ ಬೇಕಿಲ್ಲದ ಹಲವು ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಡಬೇಕಾಗಿದೆ.

ಇಲ್ಲಿ ಇನ್ನೊಂದು ವಿಶಯವನ್ನೂ ಗಮನಿಸಬೇಕಾಗಿದೆ: ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳನ್ನು ಕಡಿಮೆಮಾಡಬೇಕು ಎಂದು ಹೇಳಿದರೆ, ದ್ರಾವಿಡ ಕಳಗಂನವರು ಹೇಳುತ್ತಿದ್ದ ಹಾಗೆ, ಸಂಸ್ಕ್ರುತ ಪದಗಳನ್ನು ಬರಹಗಳಲ್ಲಿ ಬಳಸಲೇ ಕೂಡದು ಎಂದು ಹೇಳಿದ ಹಾಗಾಗುವುದಿಲ್ಲ. ನಿಜಕ್ಕೂ ಹಾಗೆ ಹೇಳಲಾಗಿದೆಯಾದರೆ, ಸಂಸ್ಕ್ರುತ ಎರವಲುಗಳನ್ನು ಕನ್ನಡದಲ್ಲಿ ಬರೆಯುವಾಗ ಮಹಾಪ್ರಾಣ, ಋಕಾರ ಮೊದಲಾದವುಗಳನ್ನು ಬಳಸಬೇಕಾಗಿಲ್ಲ ಎಂಬ ಇನ್ನೊಂದು ಹೇಳಿಕೆ ಬೇಕಾಗುವುದೇ ಇಲ್ಲ!

ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳ ಎಣಿಕೆ ಹೆಚ್ಚಾದಾಗಲೆಲ್ಲ, ಅದನ್ನು ಕಡಿಮೆ ಮಾಡಬೇಕೆಂಬುದಾಗಿ ಹಿಂದಿನಿಂದಲೂ ಕನ್ನಡದ ಬರಹಗಾರರು ಹೇಳುತ್ತಾ ಬಂದಿದ್ದಾರೆ. ಕವಿರಾಜಮಾರ‍್ಗಕಾರನಿಂದ ಹಿಡಿದು ಬಿಎಂಶ್ರೀಯವರ ವರೆಗೂ ಹಲವು ಮಂದಿ ಈ ವಿಶಯದಲ್ಲಿ ತಮ್ಮ ಬೇಸರವನ್ನು ಹೊರಗೆಡಹಿದ್ದಾರೆ.

ಇವತ್ತು ಅರಿಮೆಯ (ವಿಜ್ನಾನದ) ಬರಹಗಳಿಗೆ ಬೇಕಾಗುವ ಹೊಸ ಪದಗಳನ್ನೆಲ್ಲ ಸಂಸ್ಕ್ರುತದ ಪದ ಮತ್ತು ಒಟ್ಟುಗಳನ್ನು ಬಳಸಿ ಹೊಸದಾಗಿ ಉಂಟುಮಾಡಿಕೊಳ್ಳಲಾಗುತ್ತಿದೆ; ಕನ್ನಡದ ಪದ ಮತ್ತು ಒಟ್ಟುಗಳನ್ನು ತುಂಬಾ ಅಪರೂಪವಾಗಿ ಮಾತ್ರವೇ ಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ, ಅರಿಮೆಯ ಪದನೆರಕೆಗಳಲ್ಲಿ ಕನ್ನಡದವೇ ಆದ ಪದಗಳಿರುವುದು ತೀರಾ ಕಡಿಮೆ.

ಇಂತಹ ಪದನೆರಕೆಗಳನ್ನು ‘ಕನ್ನಡ’ದವೆಂದು ಹೇಳುವುದೇ ವಿಚಿತ್ರವಾಗಿ ಕಾಣಿಸುತ್ತದೆ. ನಿಜಕ್ಕೂ ಈ ರೀತಿ ಇಂಗ್ಲಿಶ್ ಪದಗಳಿಗೆ ಬದಲಾಗಿ ಸಂಸ್ಕ್ರುತ ಪದಗಳನ್ನು ಬಳಸುವ ಬದಲು, ಇಂಗ್ಲಿಶ್ ಪದಗಳನ್ನು ಹಾಗೆಯೇ ಎರವಲು ಪಡೆಯುವುದೇ ಕನ್ನಡಿಗರ ಮಟ್ಟಿಗೆ ಹೆಚ್ಚು ನೆರವಾಗಬಲ್ಲುದು; ಯಾಕೆಂದರೆ, ಮುಂದೆ ಹೆಚ್ಚಿನ ತಿಳಿವನ್ನು ಪಡೆಯಲು ಅವರು ಇಂಗ್ಲಿಶ್ ಬರಹಗಳನ್ನು ಓದಬೇಕಾಗುತ್ತದೆಯಲ್ಲದೆ, ಸಂಸ್ಕ್ರುತದಲ್ಲಿ ಅವರಿಗೆ ಇವತ್ತಿನ ಅರಿಮೆಗಳ ಕುರಿತಾಗಿ ಎಂತಹ ಓದೂ ದೊರಕಲಾರದು.

ಆದರೆ, ಈ ವಿಶಯಗಳ ಕುರಿತಾಗಿ ಮಕ್ಕಳಿಗೆ ಅಡಿಕಲಿಕೆ ದೊರೆಯುವಂತೆ ಮಾಡಲು, ಮತ್ತು ಆಳವಾದ ತಿಳಿವು ದೊರೆಯುವಂತೆ ಮಾಡಲು, ಸಂಸ್ಕ್ರುತ ಇಲ್ಲವೇ ಇಂಗ್ಲಿಶ್ ಪದಗಳನ್ನು ಬಳಸುವ ಬದಲು ನಮ್ಮವೇ ಆದ ಕನ್ನಡ ಪದಗಳನ್ನು ಬಳಸುವುದೇ ಸರಿಯಾದ ದಾರಿ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ನಿಮ್ಮ ಮಗುವಿಗೆ ಇಂಗ್ಲಿಶ್ ನುಡಿ ಮಾತ್ರ ಸಾಕೇ?

ನುಡಿಯರಿಮೆಯ ಇಣುಕುನೋಟ – 6

ಇವತ್ತು ಹಲವು ಜನರು ತಮ್ಮ ಮಕ್ಕಳನ್ನು ಇಂಗ್ಲಿಶ್ಕಲಿಕೆನುಡಿಯ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ; ಇಂತಹ ಹಲವು ಶಾಲೆಗಳಲ್ಲಿ ಮಕ್ಕಳು ಇಂಗ್ಲಿಶ್ ನುಡಿಯನ್ನು ಮಾತ್ರ ಬಳಸಬೇಕು, ಕನ್ನಡವನ್ನು ಬಳಸಲೇ ಕೂಡದು ಎಂಬ ಒಂದು ಕಟ್ಟಲೆಯನ್ನು ಮಾಡಿರುತ್ತಾರೆ. ಮಕ್ಕಳು ಶಾಲೆಯಲ್ಲಿ ಇಂಗ್ಲಿಶ್ ನುಡಿಯನ್ನು ಮಾತ್ರವೇ ಬಳಸುತ್ತಿದ್ದಲ್ಲಿ ಅವರಿಗೆ ಅದನ್ನು ಬೇಗನೆ ಮತ್ತು ತಪ್ಪಿಲ್ಲದೆ ಬಳಸಲು ಬರಬಹುದೆಂಬ ತಪ್ಪು ಅನಿಸಿಕೆಯೇ ಈ ಕಟ್ಟಲೆಗೆ ಕಾರಣ.

ಕೆಲವು ಮನೆಗಳಲ್ಲಿಯೂ ಇದೇ ಕಾರಣಕ್ಕಾಗಿ ಮಕ್ಕಳೊಂದಿಗೆ ಅವರ ತಾಯ್ತಂದೆಯರು ಇಂಗ್ಲಿಶ್ ನುಡಿಯನ್ನೇ ಬಳಸತೊಡಗುತ್ತಾರೆ. ಆದರೆ, ಹೀಗೆ ಮಾಡುವುದರಿಂದ ಮಕ್ಕಳು ಚಿಕ್ಕಂದಿನಲ್ಲಿ ಕಲಿತಿದ್ದ ಕನ್ನಡ ನುಡಿಯನ್ನು ಮರೆಯುತ್ತಾ ಹೋಗುತ್ತಾರೆ, ಮತ್ತು ಕೊನೆಗೆ ಅವರಿಗೆ ಅದರಲ್ಲಿ ಮಾತನಾಡಲು ಬರುವುದಿಲ್ಲವೆಂದೇ ಆಗುತ್ತದೆ.

ಮಕ್ಕಳ ಬೆಳವಣಿಗೆಯ ಮಟ್ಟಿಗೆ ಇದು ಸರಿಯೇ ಎಂಬುದನ್ನು ಈ ಶಾಲೆಗಳನ್ನು ನಡೆಸುವವರಾಗಲಿ, ಇಲ್ಲವೇ ಮಕ್ಕಳ ತಾಯಿತಂದೆಯರಾಗಲಿ ಪರಿಶೀಲಿಸಿದ ಹಾಗಿಲ್ಲ. ಇಂಗ್ಲಿಶ್ ಕಲಿಯುವ ಮಕ್ಕಳು ಅದರೊಂದಿಗೆ ತರಗತಿಯಲ್ಲಿ ತಮ್ಮ ತಾಯ್ನುಡಿಯನ್ನೂ ಬಳಸುತ್ತಿದ್ದರೆ ಅವರಿಗೆ ಸರಿಯಾಗಿ ಇಂಗ್ಲಿಶ್ ಕಲಿಯಲು ಬರುವುದಿಲ್ಲ ಎಂಬ ಅನಿಸಿಕೆ ಹಿಂದಿನ ಕಾಲದಲ್ಲಿತ್ತು; ಆದರೆ, ಕಳೆದ ಕೆಲವು ವರ‍್ಶಗಳಲ್ಲಿ, ಅದರಲ್ಲೂ ಕಳೆದ ಹತ್ತು-ಹದಿನಯ್ದು ವರ‍್ಶಗಳಲ್ಲಿ ನಡೆಸಿದ ಅರಕೆಗಳೆಲ್ಲವೂ ಇದು ತಪ್ಪು ಅನಿಸಿಕೆಯೆಂಬುದನ್ನು ತೋರಿಸಿಕೊಟ್ಟಿವೆ.

ಒಂದು ನುಡಿಯನ್ನು ಶಾಲೆಗೆ ಬರುವ ಮೊದಲೇ ಕಲಿತಿರುವ ಮಕ್ಕಳು ಎರಡನೇ ನುಡಿಯನ್ನು ಆ ನುಡಿಯ ಮೂಲಕವೇನೇ ಕಲಿಯಬೇಕಾಗುತ್ತದೆ; ಮೊದಲಿಗೆ ಅವರು ತಮ್ಮ ತಾಯ್ನುಡಿಯ ಪದಗಳನ್ನು ಮತ್ತು ಕಟ್ಟಲೆಗಳನ್ನು ಎರಡನೇ ನುಡಿಯ ಮಾತುಗಳಲ್ಲಿ ಸೇರಿಸಿ ಹೇಳಬಹುದು; ಆದರೆ, ಇದು ಅವರ ಕಲಿಕೆಯ ಒಂದು ಹಂತವನ್ನು ಸೂಚಿಸುತ್ತದೆಯಲ್ಲದೆ, ಅವರು ಕಲಿಕೆಯಲ್ಲಿ ಗೊಂದಲಗೊಂಡಿರುವುದನ್ನಾಗಲಿ, ತಪ್ಪು ದಾರಿ ಹಿಡಿದಿರುವುದನ್ನಾಗಲಿ ಸೂಚಿಸುವುದಿಲ್ಲ. ಕಲಿಕೆ ಮುಂದುವರಿದಂತೆಲ್ಲ ಅವರು ಈ ಎರಡು ನುಡಿಗಳ ಪದಗಳನ್ನು ಮತ್ತು ಕಟ್ಟಲೆಗಳನ್ನು ಬೇರೆ ಬೇರಾಗಿ ಇರಿಸಿಕೊಳ್ಳಲು ಕಲಿಯುತ್ತಾರೆ.

ಮೊದಲನೇ ನುಡಿಯನ್ನು ಅವರು ಶಾಲೆಯಲ್ಲಿ ಬಳಸಲೇಬಾರದೆಂಬುದಾಗಿ ಅವರ ಮೇಲೆ ಒತ್ತಾಯ ಹೇರಿದರೆ, ಅವರಿಗೆ ಅದರ ಮೇಲೆ ಕೀಳರಿಮೆಯುಂಟಾಗುತ್ತದೆ ಮಾತ್ರವಲ್ಲ, ಅವರ ಎರಡನೇ ನುಡಿಯ ಕಲಿಕೆಯೂ ತೊಡಕಿನದಾಗುತ್ತದೆ. ಮಕ್ಕಳಿಗೆ ಚನ್ನಾಗಿ ತಿಳಿದಿರುವ ನುಡಿಯನ್ನು ಉಳಿಸಿ, ಅದರ ಮೂಲಕ ಎರಡನೆಯ ನುಡಿಯನ್ನು ಕಲಿಸುವುದೇ ಸರಿಯಾದ ದಾರಿ.

ಇದಲ್ಲದೆ, ಈ ಎರಡು ನುಡಿಗಳ ಬಳಕೆಯಲ್ಲೂ ಮಕ್ಕಳು ಒಂದೇ ರೀತಿಯಲ್ಲಿ ಪಳಗುವಂತೆ ಮಾಡುವ ಮೂಲಕ, ಅವರು ಒಂದು ನುಡಿಯನ್ನು ಮಾತ್ರವೇ ಬಳಸಬಲ್ಲ ಮಕ್ಕಳಿಗಿಂತ ಜಾಣತನದಲ್ಲಿ, ಬುದ್ದಿವಂತಿಕೆಯಲ್ಲಿ, ಮತ್ತು ನುಡಿಯನ್ನು ಬಳಸಲು ಬೇಕಾಗುವ ಹಲವು ಬಗೆಯ ಚಳಕಗಳಲ್ಲಿ ಮುಂದೆ ಹೋಗುತ್ತಾರೆ ಎಂಬುದನ್ನು ಇತ್ತೀಚೆಗೆ ನಡೆಸಿದ ಹಲವು ಅರಕೆಗಳು ತೋರಿಸಿಕೊಟ್ಟಿವೆ.

ಎರಡು ನುಡಿಗಳನ್ನು ಬಳಸುವವರು ಎರಡು ಬಗೆಯ ಪದಗಳನ್ನು ಮತ್ತು ಕಟ್ಟಲೆಗಳನ್ನು ತಿಳಿದುಕೊಳ್ಳಬೇಕಾಗುತ್ತದೆ, ಮತ್ತು ಅವುಗಳಲ್ಲಿ ಒಂದು ನುಡಿಯನ್ನು ಬಳಸುವಾಗ ಆ ನುಡಿಗೆ ಸಂಬಂದಿಸಿದ ಪದಗಳು ಮತ್ತು ಕಟ್ಟಲೆಗಳು ಮಾತ್ರ ಬಳಕೆಯಾಗುವಂತೆ, ಮತ್ತು ಇನ್ನೊಂದು ನುಡಿಗೆ ಸಂಬಂದಿಸಿದ ಪದಗಳು ಮತ್ತು ಕಟ್ಟಲೆಗಳು ಬಳಕೆಯಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಹೀಗೆ ಮಾಡುವಲ್ಲಿ ಪಳಗಿರುವ ಮಕ್ಕಳು ತಾವು ಕಲಿತ ಈ ಚಳಕವನ್ನು ಬೇರೆ ಕೆಲಸಗಳಲ್ಲೂ ಬಳಸಬಲ್ಲರು.

ಎತ್ತುಗೆಗಾಗಿ, ಯಾವುದಾದರೊಂದು ತೊಡಕನ್ನು ಬಗೆಹರಿಸಬೇಕಾದಾಗ, ಈ ಮಕ್ಕಳು ಅದಕ್ಕೆ ಸಂಬಂದಿಸಿದ ವಿಶಯಗಳನ್ನು ಮಾತ್ರವೇ ಗಮನದಲ್ಲಿರಿಸಿಕೊಂಡು, ಅದಕ್ಕೆ ಸಂಬಂದಿಸದ ವಿಶಯಗಳನ್ನು ದೂರ ಇರಿಸಬಲ್ಲರು. ಹಾಗಾಗಿ, ತೊಡಕುಗಳನ್ನು ಬಗೆಹರಿಸುವಲ್ಲಿ ಅವರು ಒಂದು ನುಡಿಯಲ್ಲಿ ಮಾತ್ರವೇ ಪಳಗಿರುವ ಮಕ್ಕಳಿಗಿಂತ ಮುಂದಿರುತ್ತಾರೆ.

ಎರಡು ನುಡಿಗಳಲ್ಲಿ ಪಳಗಿರುವ ಮಕ್ಕಳು ಸಂದರ‍್ಬಕ್ಕನುಸಾರವಾಗಿ ಒಂದು ನುಡಿಯಿಂದ ಇನ್ನೊಂದು ನುಡಿಗೆ ನೆಗೆಯುತ್ತಿರಬಲ್ಲರು; ಒಂದು ಮಾತನ್ನು ಒಂದು ನುಡಿಯಲ್ಲಿ ಹೇಳಿ, ಒಡನೆಯೇ ಇನ್ನೊಂದು ಮಾತನ್ನು ಇನ್ನೊಂದು ನುಡಿಯಲ್ಲಿ ಹೇಳಬಲ್ಲರು; ಎಂದರೆ, ಒಂದು ನುಡಿಯ ಪದ ಮತ್ತು ಕಟ್ಟಲೆಗಳನ್ನು ಬಳಸುತ್ತಿರುವವರು ಒಡನೆಯೇ ಇನ್ನೊಂದು ನುಡಿಯ ಪದ ಮತ್ತು ಕಟ್ಟಲೆಗಳನ್ನು ಬಳಸಲು ತೊಡಗಬಲ್ಲರು. ಯಾವ ಸಂದರ‍್ಬದಲ್ಲಿ ಯಾವ ನುಡಿಯನ್ನು ಬಳಸಬೇಕು ಎಂಬುದೂ ಅವರಿಗೆ ತಿಳಿದಿರುತ್ತದೆ.

ಎರಡು ನುಡಿಗಳಲ್ಲಿ ಪಳಗುತ್ತಿರುವಾಗ ಪಡೆದ ಈ ಚಳಕವನ್ನೂ ಅವರು ಬೇರೆ ಕೆಲಸಗಳನ್ನು ನಡೆಸುವಲ್ಲಿ ಬಳಸಿಕೊಳ್ಳಬಲ್ಲರು. ಹಾಗಾಗಿ, ಒಂದು ನುಡಿಯನ್ನು ಮಾತ್ರವೇ ತಿಳಿದಿರುವ ಮಕ್ಕಳ ಮನಸ್ಸಿಗಿಂತ ಅವರ ಮನಸ್ಸು ಹೊಸ ಹೊಸ ಸಂದರ‍್ಬಗಳಿಗೆ ಹೊಂದಿಕೊಳ್ಳುವಂತಹ ಗುಣವನ್ನು ಹೆಚ್ಚು ಪಡೆದಿರುತ್ತದೆ, ಮತ್ತು ಈ ಕಾರಣಕ್ಕಾಗಿ ಅವರಿಗೆ ಹೆಚ್ಚು ತಾಳ್ಮೆಯಿರುತ್ತದೆ.

ಬೇರ‍್ಪಡಿಸುವುದು ಮತ್ತು ಒಂದೆಡೆ ಸೇರಿಸುವುದು ಎಂಬುದಾಗಿ ಎರಡು ಬಗೆಯ ಬಗೆತಗಳಿವೆ: ಒಂದು ವಸ್ತುವಿಗೆ ಎಶ್ಟೆಲ್ಲಾ ಬಳಕೆಗಳಿವೆ ಎಂಬುದನ್ನು ಕಂಡುಕೊಳ್ಳುವುದು ಬೇರ‍್ಪಡಿಸುವ ಬಗೆತ, ಮತ್ತು ಒಂದು ತೊಡಕಿಗೆ ಸಂಬಂದಿಸಿದ ಹಲವಾರು ವಿಶಯಗಳನ್ನು ಒಟ್ಟು ಸೇರಿಸಿ ಅದನ್ನು ಬಗೆಹರಿಸುವುದು ಹೇಗೆ ಎಂಬುದನ್ನು ಕಂಡುಕೊಳ್ಳುವುದು ಒಂದೆಡೆ ಸೇರಿಸುವ ಬಗೆತ. ಈ ಎರಡು ಬಗೆಯ ಬಗೆತಗಳನ್ನೂ ಎರಡು ನುಡಿಗಳನ್ನು ತಿಳಿದಿರುವ ಮಕ್ಕಳು ಒಂದೇ ನುಡಿಯನ್ನು ತಿಳಿದಿರುವ ಮಕ್ಕಳಿಗಿಂತ ಹೆಚ್ಚು ಚನ್ನಾಗಿ ನಡೆಸಬಲ್ಲರು.

ಒಂದೇ ನುಡಿಯನ್ನು ತಿಳಿದಿರುವ ಮಕ್ಕಳು ಓದುತ್ತಿರುವಾಗ, ಅವರ ಗಮನ ಪದಗಳ ಉಲಿಗಳ ಮೇಲಿರುತ್ತದೆ;  ಇದಕ್ಕೆ ಬದಲು, ಎರಡು ನುಡಿಗಳನ್ನು ಚನ್ನಾಗಿ ತಿಳಿದಿರುವ ಮಕ್ಕಳ ಗಮನ ಪದಗಳ ಹುರುಳಿನ ಮೇಲಿರುತ್ತದೆ. ಹಾಗಾಗಿ, ಈ ಮಕ್ಕಳು ಬರಹಗಳ ಹುರುಳನ್ನು ತಿಳಿದುಕೊಳ್ಳುವಲ್ಲಿ ಒಂದೇ ನುಡಿಯನ್ನು ತಿಳಿದಿರುವ ಮಕ್ಕಳಿಗಿಂತ ಎರಡು-ಮೂರು ತರಗತಿಗಳಶ್ಟು ಮುಂದಿರುತ್ತಾರೆ.

ಎರಡು ನುಡಿಗಳ ತಿಳಿವು ಮಕ್ಕಳ ಮುಂದೆ ಎರಡು ಸಂಸ್ಕ್ರುತಿಗಳನ್ನು ತೆರೆದಿಡುತ್ತದೆ; ಆ ಎರಡು ನುಡಿಗಳ ಬರಹಗಳನ್ನೂ ಓದಲು ಕಲಿತಲ್ಲಿ, ಎರಡು ಬಗೆಯ ಬರಹ ಸಂಸ್ಕ್ರುತಿಗಳೂ ಅವರದಾಗುತ್ತವೆ. ಈ ತಿಳಿವು ಮುಂದೆ ಜೀವನದುದ್ದಕ್ಕೂ ಅವರ ನೆರವಿಗೆ ಬರುತ್ತದೆ.

ತಮಗೆ ತಿಳಿದಿರುವ ನುಡಿಯಲ್ಲಿ ಮಕ್ಕಳು ಹೆಚ್ಚು ಸುಲಬವಾಗಿ ಓದಲು ಮತ್ತು ಬರೆಯಲು ಕಲಿಯಬಲ್ಲರು. ಹಾಗಾಗಿ, ಮಕ್ಕಳಿಗೆ ಮೊದಲು ಅವರಿಗೆ ತಿಳಿದಿರುವ ನುಡಿಯಲ್ಲಿ ಓದಲು ಮತ್ತು ಬರೆಯಲು ಕಲಿಸಿ, ಆಮೇಲೆ ಇಂಗ್ಲಿಶ್‌ನಲ್ಲಿ ಕಲಿಸುವುದೇ ಸರಿಯಾದ ದಾರಿ. ಯಾಕೆಂದರೆ, ಮೊದಲನೇ ನುಡಿಯಲ್ಲಿ ಓದಲು ಮತ್ತು ಬರೆಯಲು ಕಲಿಯುವಾಗ ಪಡೆದ ಚಳಕಗಳನ್ನು ಅವರು ಸುಲಬವಾಗಿ ತಮ್ಮ ಎರಡನೇ ನುಡಿಯ ಕಲಿಕೆಯಲ್ಲೂ ಬಳಸಿಕೊಳ್ಳಬಲ್ಲರು.

ಇಂಗ್ಲಿಶ್‌ನಲ್ಲಿರುವ ಸ್ಪೆಲ್ಲಿಂಗ್ ಸಮಸ್ಯೆಯಿಂದಾಗಿ, ಅದರ ಪದಗಳ ಬರವಣಿಗೆಯಲ್ಲಿ ಬರುವ ಬರಿಗೆಗಳಿಗೂ ಅವುಗಳ ಓದಿನಲ್ಲಿ ಬರುವ ಉಲಿಗಳಿಗೂ ನಡುವೆ ಸಂಬಂದವಿದೆಯೆಂಬುದು ಅದನ್ನು ಓದಲು ಕಲಿಯುವವರಲ್ಲಿ ಹೆಚ್ಚಿನವರ ಗಮನಕ್ಕೂ ಬರುವುದೇ ಇಲ್ಲ. ಆದರೆ, ಇದನ್ನು ಗಮನಿಸಲು ಬಾರದಿರುವ ಮಕ್ಕಳಿಗೆ ಬರಹಗಳನ್ನು ಸಲೀಸಾಗಿ ಓದಲು ಬರುವುದಿಲ್ಲ.

ಕನ್ನಡ ಬರಹದಲ್ಲಿ ಬರಿಗೆಗಳಿಗೂ ಉಲಿಗಳಿಗೂ ನಡುವೆ ನೇರವಾದ ಸಂಬಂದವಿದೆ. ಸಂಸ್ಕ್ರುತದ ಎರವಲು ಪದಗಳು ಮಾತ್ರ ಇದಕ್ಕೆ ಹೊರಪಡಿಕೆಗಳಾಗಿವೆ. ಹಾಗಾಗಿ, ಮಕ್ಕಳಿಗೆ ಮೊದಲು ಕನ್ನಡದವೇ ಆದ ಪದಗಳು ಮಾತ್ರ ಇರುವ ಬರಹಗಳನ್ನು ಓದಲು ಕಲಿಸಿದಲ್ಲಿ, ಅವರು ಬಹಳ ಬೇಗನೆ ಅವನ್ನು ಸಲೀಸಾಗಿ ಓದುವುದು ಹೇಗೆಂಬುದನ್ನು ತಿಳಿದುಕೊಳ್ಳಬಲ್ಲರು.

ಅವರಿಗೆ ಇಂಗ್ಲಿಶ್ ಬರಹಗಳನ್ನು ಓದಲು ಆಮೇಲೆ ಕಲಿಸಿದಲ್ಲಿ, ಕನ್ನಡದ ಓದಿನಲ್ಲಿ ತಾವು ಪಡೆದ ಚಳಕವನ್ನು ಅವರು ಅಲ್ಲಿಯೂ ಬಳಸಿ ಹೆಚ್ಚು ಬೇಗನೆ ಅವನ್ನು ಸರಿಯಾಗಿ ಓದಲು ಕಲಿಯಬಲ್ಲರು.

ಬರೆಯುವ ಕೆಲಸವನ್ನೂ ಮಕ್ಕಳು ತಮಗೆ ಚನ್ನಾಗಿ ತಿಳಿದಿರುವ ಕನ್ನಡದಲ್ಲಿ ಹೆಚ್ಚು ಬೇಗನೆ ನಡೆಸಲು ಕಲಿಯಬಲ್ಲರು, ಮತ್ತು ಆಮೇಲೆ ಇಂಗ್ಲಿಶ್‌ನಲ್ಲಿ ಬರೆಯಬೇಕಾದಾಗ, ಆ ಚಳಕವನ್ನೇ ಅಲ್ಲಿಯೂ ಬಳಸಿಕೊಳ್ಳಬಲ್ಲರು.

ಇಂಗ್ಲಿಶ್ ನುಡಿಯ ಮೇಲಿರುವ ವ್ಯಾಮೋಹದಿಂದಾಗಿ, ಕನ್ನಡ ನುಡಿ ಕೊಡಬಲ್ಲ ಈ ಎಲ್ಲಾ ಪ್ರಯೋಜನಗಳನ್ನೂ ಮಕ್ಕಳು ಕಳೆದುಕೊಳ್ಳುವಂತೆ ಮಾಡುವುದು ಹೆಡ್ಡತನವಲ್ಲವೇ?

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter