Posts Tagged ‘ಋಕಾರ’

ಬರಹದಲ್ಲಿ ಯಾವುದು ಸರಿ, ಯಾವುದು ತಪ್ಪು?

ನುಡಿಯರಿಮೆಯ ಇಣುಕುನೋಟ – 20

ಕನ್ನಡದಲ್ಲಿ ಬಳಕೆಯಾಗುವ ಪದಗಳು ಮತ್ತು ಪದರೂಪಗಳುಸರಿಯೋ ತಪ್ಪೋ ಎಂಬುದನ್ನು ತೀರ‍್ಮಾನಿಸುವಲ್ಲಿ ನಾವು ಯಾವ ಕಟ್ಟಲೆಗಳನ್ನು ಬಳಸಬೇಕು? ಕನ್ನಡದ ಕಟ್ಟಲೆಗಳನ್ನೇ ಬಳಸಬೇಕೆಂದು ಯಾರೂ ಹೇಳಬಹುದು. ಆದರೆ, ಇವತ್ತು ಹಲವು ಮಂದಿ ಕನ್ನಡದ ವಿದ್ವಾಂಸರಿಗೆ ಇದು ಒಪ್ಪಿಗೆಯಾಗುವುದಿಲ್ಲ. ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡದಲ್ಲಿ ಬಳಸುವಾಗ ಸಂಸ್ಕ್ರುತದ ಕಟ್ಟಲೆಗಳನ್ನೇ ತಪ್ಪದೆ ಬಳಸಬೇಕೆಂಬುದಾಗಿ ಅವರು ಹೇಳುತ್ತಾರೆ. ಕನ್ನಡದ ವಿದ್ವಾಂಸರಲ್ಲಿ ಹಿಂದಿನ ಕಾಲದಿಂದಲೂ ಬೆಳೆದುಬಂದಿರುವ ಕನ್ನಡದ ಕುರಿತಾಗಿರುವ ಕೀಳರಿಮೆ ಮತ್ತು ಸಂಸ್ಕ್ರುತದ ಕುರಿತಾಗಿರುವ ಅತಿಯಾದ ಆದರ ಮತ್ತು ಅಬಿಮಾನಗಳೇ ಇದಕ್ಕೆ ಕಾರಣ.

ಎತ್ತುಗೆಗಾಗಿ, ಸೊಲ್ಲರಿಗರನ್ನು ಸೂಚಿಸಲು ಸಂಸ್ಕ್ರುತದಲ್ಲಿ ಎರಡು ಪದಗಳಿವೆ. ಇವುಗಳಲ್ಲಿ ‘ವಯ್ಯಾಕರಣಃ’ ಎಂಬುದು ಗಂಡಸರನ್ನು ಸೂಚಿಸುತ್ತದೆ ಮತ್ತು ‘ವಯ್ಯಾಕರಣೀ’ ಎಂಬುದು ಹೆಂಗಸರನ್ನು ಸೂಚಿಸುತ್ತದೆ. ಆದರೆ, ಕನ್ನಡದಲ್ಲಿ ಗಂಡಸರನ್ನು ಸೂಚಿಸುವುದಕ್ಕಾಗಿಯೂ ‘ವಯ್ಯಾಕರಣಿ’ ಎಂಬ ಪದವೇ ಬಳಕೆಗೆ ಬಂದಿದೆ. ಇದನ್ನು ಕಿಟ್ಟೆಲ್ ಅವರ ಡಿಕ್ಶನರಿಯಲ್ಲಿ ನೋಡಬಹುದು. ಆದರೆ ಇದು ತಪ್ಪು, ಗಂಡಸರನ್ನು ಸೂಚಿಸಲು ‘ವಯ್ಯಾಕರಣ’ ಎಂಬುದನ್ನೇ ಬಳಸಬೇಕು ಎಂಬುದಾಗಿ ಕೆಲವರು ಕನ್ನಡದ ವಿದ್ವಾಂಸರು ವಾದಿಸುತ್ತಾರೆ.

ಇದಕ್ಕೆ ಅವರಿಗೆ ಸಂಸ್ಕ್ರುತ ವ್ಯಾಕರಣದ ಕಟ್ಟಲೆಯೇ ಆದಾರ. ಆದರೆ ನಿಜಕ್ಕೂ ಇದು ಸರಿಯಲ್ಲ. ಯಾಕೆಂದರೆ, ಯಾವ ನುಡಿಯಿಂದಲೇ ಆಗಲಿ ಒಂದು ಪದವನ್ನು ಎರವಲಾಗಿ ಪಡೆದ ಮೇಲೆ, ಅದನ್ನು ಯಾವ ರೀತಿಯಲ್ಲಿ ಮತ್ತು ಯಾವ ರೂಪದಲ್ಲಿ ಬಳಸಬೇಕು ಎಂಬುದಕ್ಕೆ ಎರವಲಾಗಿ ಪಡೆದ ನುಡಿಯಲ್ಲಿರುವ ಬಳಕೆಯ ಕಟ್ಟಲೆಗಳೇ ಆದಾರವಾಗಬೇಕಲ್ಲದೆ ಎರವಲು ಕೊಟ್ಟ ನುಡಿಯ ಕಟ್ಟಲೆಗಳಲ್ಲ.

ಎತ್ತುಗೆಗಾಗಿ, ಸಂಸ್ಕ್ರುತದಿಂದ ಹಲವು ನಾಮಪದಗಳನ್ನು ನಾವು ಕನ್ನಡಕ್ಕೆ ಎರವಲಾಗಿ ಪಡೆದು ಬಳಸುತ್ತೇವೆ. ಇವುಗಳಲ್ಲಿ ಕೆಲವಕ್ಕೆ ಇಸು ಒಟ್ಟನ್ನು ಸೇರಿಸಿ ಕ್ರಿಯಾಪದಗಳಾಗಿ ಮಾಡಿಯೂ ಬಳಸುತ್ತೇವೆ (ಜಪ-ಜಪಿಸು, ಕೋಪ-ಕೋಪಿಸು, ರುಚಿ-ರುಚಿಸು). ಆದರೆ, ಈ ಬಳಕೆಗೆ ಕನ್ನಡದ ಕಟ್ಟಲೆಗಳು ಆದಾರವಲ್ಲದೆ ಸಂಸ್ಕ್ರುತದ ಕಟ್ಟಲೆಗಳಲ್ಲ.

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳ ಲಿಂಗವನ್ನು ನಿರ‍್ದರಿಸುವಲ್ಲೂ ನಾವು ಕನ್ನಡದ ಕಟ್ಟಲೆಗಳನ್ನು ಬಳಸುತ್ತೇವಲ್ಲದೆ ಸಂಸ್ಕ್ರುತದ ಕಟ್ಟಲೆಗಳನ್ನಲ್ಲ. ಎತ್ತುಗೆಗಾಗಿ, ಸಂಸ್ಕ್ರುತದಲ್ಲಿ ಪುಲ್ಲಿಂಗದಲ್ಲಿರುವ ದೇಶ, ಮಾರ‍್ಗ, ದೀಪ ಮೊದಲಾದ ಪದಗಳನ್ನು, ಮತ್ತು ಸ್ತ್ರೀಲಿಂಗದಲ್ಲಿರುವ ನದಿ, ಲಿಪಿ, ಚರ‍್ಚೆ ಮೊದಲಾದ ಪದಗಳನ್ನು ನಾವು ನಪುಂಸಕ ಲಿಂಗದಲ್ಲಿ ಬಳಸುತ್ತೇವಲ್ಲದೆ ಪುಲ್ಲಿಂಗ ಇಲ್ಲವೇ ಸ್ತ್ರೀಲಿಂಗದಲ್ಲಲ್ಲ. ಸಂಸ್ಕ್ರುತದಲ್ಲಿ ನಾಮಪದಗಳಿಂದ ಬೇರಾದ ಗುಣಪದಗಳೆಂಬ ಪದಗಳಿಲ್ಲ.

ಹೀಗಿದ್ದರೂ, ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ವ್ಯಾವಹಾರಿಕ, ಸಾಮಾಜಿಕ, ಯಾಂತ್ರಿಕ ಮೊದಲಾದ ಹಲವು ಪದಗಳನ್ನು ನಾವು ನಾಮಪದಗಳಿಂದ ಬೇರಾಗಿರುವ ಗುಣಪದಗಳಾಗಿ ಬಳಸುತ್ತೇವೆ. ಹಾಗಾಗಿ, ವಯ್ಯಾಕರಣಿಯಂತಹ ಪದಗಳ ಮಟ್ಟಿಗೂ ನಾವು ಇದೇ ಕ್ರಮವನ್ನು ಅನುಸರಿಸುವುದು ಸರಿಯಾದ ದಾರಿ. ಕನ್ನಡದಲ್ಲಿ ಅವು ಯಾವ ರೀತಿಯಲ್ಲಿ ಬಳಕೆಗೆ ಬಂದಿವೆ ಎಂಬುದು ನಮಗೆ ಮುಕ್ಯವಲ್ಲದೆ ಆ ಬಳಕೆ ಸಂಸ್ಕ್ರುತದ ನಿಯಮಗಳಿಗೆ ಅನುಸಾರವಾಗಿದೆಯೇ ಇಲ್ಲವೇ ಎಂಬುದು ಮುಕ್ಯವಲ್ಲ.

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ಬರುವ ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳು ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಕಾಣಿಸುವುದಿಲ್ಲ; ಹಾಗಿದ್ದರೂ ‘ಅವನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು; ಇಲ್ಲವಾದರೆ ಅದು ತಪ್ಪಾಗುತ್ತದೆ’ ಎಂದು ಹೇಳುವುದೂ ಸಂಸ್ಕ್ರುತದ ಕಟ್ಟಲೆಗಳನ್ನು ಕನ್ನಡದ ಮೇಲೆ ಹೊರಿಸುವ ತಪ್ಪು ದಾರಿಯಾಗಿದೆ. ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಈ ಎರವಲು ಪದಗಳು ಹೇಗೆ ಕಾಣಿಸುತ್ತವೆಯೋ ಹಾಗೆ ಬರೆಯುವುದೇ ಕನ್ನಡದ ಮಟ್ಟಿಗೆ ಸರಿಯಾದ ದಾರಿ.

ಇನ್ನೊಂದು ಬಗೆಯ ‘ತಪ್ಪು’ಗಳು ಆಡುನುಡಿಯಿಂದ ಪದಗಳನ್ನು ಇಲ್ಲವೇ ಪದರೂಪಗಳನ್ನು ಬರಹಕ್ಕೆ ತಂದು ಬಳಸುವಲ್ಲಿ ಕಾಣಿಸಿಕೊಳ್ಳುತ್ತವೆ. ಆಡುನುಡಿಯೆಂಬುದು ಊರಿನಿಂದ ಊರಿಗೆ ಮತ್ತು ಜಾತಿಯಿಂದ ಜಾತಿಗೆ ಬೇರೆ ಬೇರಾಗಿರುತ್ತದೆ. ಆದರೆ, ಬರಹದ ನುಡಿ ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕೆಂದು ನಾವು ಬಯಸುತ್ತೇವೆ. ಯಾಕೆಂದರೆ, ಹಾಗಿಲ್ಲವಾದರೆ ಒಂದು ಊರಿನ ಮತ್ತು ಜಾತಿಯ ಬರಹಗಾರರು ಬರೆದುದನ್ನು ಇನ್ನೊಂದು ಊರಿನ ಮತ್ತು ಜಾತಿಯ ಜನರಿಗೆ ಓದಿ ಅರ‍್ತಮಾಡಿಕೊಳ್ಳಲು ಕಶ್ಟವಾಗುತ್ತದೆ.

ಈ ಸಮಾನತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಬರಹದ ನುಡಿಯಲ್ಲಿ ಎಂತಹ ಮಾರ‍್ಪಾಡನ್ನು ನಡೆಸುವುದಿದ್ದರೂ ಅದು ಎಲ್ಲಾ ಊರು ಮತ್ತು ಜಾತಿಗಳಿಗೆ ಸೇರಿದ ಜನರಿಗೂ ಒಪ್ಪಿಗೆಯಾಗುವಂತಹದಾಗಿರಬೇಕು. ಎಲ್ಲಾ ಬರಹಗಾರರೂ ತಮಗೆ ಅನಿಸಿದ ಹಾಗೆ ತಮ್ಮ ಬರಹದ ನುಡಿಯಲ್ಲಿ ಮಾರ‍್ಪಾಡುಗಳನ್ನು ಮಾಡಹೊರಟರೆ ಈ ಸಮಾನತೆ ಪೂರ‍್ತಿ ಅಳಿದು ಹೋದೀತು.

ಬರಹದಲ್ಲಿ ತಪ್ಪು-ಸರಿ ಎಂಬ ಪರಿಕಲ್ಪನೆಯನ್ನು ಈ ಅರ‍್ತದಲ್ಲಿ ಬಳಸಲು ಸಾದ್ಯವಿದೆ. ಕನ್ನಡದ ಕೆಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಬಿದ್ದುಹೋಗಿದೆ; ಹಾಲು ಎಂಬುದು ಆಲು ಎಂದಾಗಿದೆ, ಹಣ್ಣು ಎಂಬುದು ಅಣ್ಣು ಎಂದಾಗಿದೆ, ಹುಳ ಎಂಬುದು ಉಳ ಎಂದಾಗಿದೆ. ಈ ರೀತಿ ಕೆಲವರು ಕನ್ನಡಿಗರು ತಮ್ಮ ಆಡುನುಡಿಯ ಪದಗಳಲ್ಲಿದ್ದ ಹಕಾರವನ್ನು ಕಳೆದುಕೊಂಡುದರಲ್ಲಿ ತಪ್ಪಾಗಿರುವಂತಹದು ಏನೂ ಇಲ್ಲ. ಅದು ಅವರ ಆಡುನುಡಿಯಲ್ಲಿ ಸ್ವಾಬಾವಿಕವಾಗಿ ನಡೆದಿರುವ ಒಂದು ಮಾರ‍್ಪಾಡು ಮಾತ್ರ. ಇದಲ್ಲದೆ, ಅದು ಅವರ ಆಡುನುಡಿಯನ್ನು ಕೆಡಿಸಿಲ್ಲ; ಅದರ ಜೀವಂತಿಕೆಯನ್ನು ಉಳಿಸಿದೆ.

ಆದರೆ, ಕನ್ನಡದ ಬೇರೆ ಹಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಈ ರೀತಿ ಬಿದ್ದುಹೋಗಿಲ್ಲ; ಹಾಗಾಗಿ, ಇವತ್ತು ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕಾದ ಬರಹದ ಕನ್ನಡದಲ್ಲಿ ಹಕಾರವನ್ನು ಉಳಿಸಿಕೊಳ್ಳಬೇಕೇ ಇಲ್ಲವೇ ಬಿದ್ದುಹೋಗಲು ಬಿಡಬೇಕೇ ಎಂಬುದನ್ನು ನಿರ‍್ದರಿಸಬೇಕಾಗುತ್ತದೆ. ಉಳಿಸಬೇಕೆಂದು ಹೆಚ್ಚಿನ ಕನ್ನಡಿಗರೂ ಬಯಸುವುದಾದರೆ, ಬರಹದಲ್ಲಿ ಹಕಾರವನ್ನು ಬಳಸದಿರುವುದು (ಇಲ್ಲವೇ ಬೇಡದಲ್ಲಿ ಬಳಸುವುದು) ‘ತಪ್ಪಾ’ಗುತ್ತದೆ.

ಇದೇ ರೀತಿಯಲ್ಲಿ, ಇವತ್ತು ಬಡಗ ಕರ‍್ನಾಟಕದ ಕೆಲವು ಆಡುನುಡಿಗಳಲ್ಲಿ ನಾಮಪದಗಳ ಕೊನೆಯಲ್ಲಿದ್ದ ಎಕಾರ ಇಕಾರವಾಗಿದೆ. ಮನೆ ಎಂಬುದು ಮನಿ ಎಂದಾಗಿದೆ, ಕಾಗೆ ಎಂಬುದು ಕಾಗಿ ಎಂದಾಗಿದೆ, ಕುದುರೆ ಎಂಬುದು ಕುದ್ರಿ ಎಂದಾಗಿದೆ. ಆದರೆ ಕನ್ನಡದ ಬೇರೆ ಆಡುನುಡಿಗಳಲ್ಲಿ ಈ ಮಾರ‍್ಪಾಡು ನಡೆದಿಲ್ಲ. ಇಲ್ಲೂ ಕೂಡ, ಎಲ್ಲರಿಗೂ ಸಮಾನವಾಗಿರಬೇಕಾದ ಬರಹದ ಕನ್ನಡಕ್ಕೆ ಈ ಮಾರ‍್ಪಾಡನ್ನು ತರಬೇಕೇ ಬೇಡವೇ ಎಂಬುದನ್ನು ತೀರ‍್ಮಾನಿಸಬೇಕಾಗುತ್ತದೆ, ಮತ್ತು ಬೇಡವೆಂದು ತೀರ‍್ಮಾನಿಸಿದಲ್ಲಿ ಹಾಗೆ ತರುವುದು ಬರಹದ ಮಟ್ಟಿಗೆ ‘ತಪ್ಪು’ ಎಂಬುದಾಗಿ ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಬೇಕಾಗುತ್ತದೆ.

ಆದರೆ, ಇಂತಹ ಯಾವ ಮಾರ‍್ಪಾಡೂ ಬರಹದ ಕನ್ನಡವನ್ನು ಕೆಡಿಸುವುದಿಲ್ಲ ಎಂಬುದನ್ನು ಇಲ್ಲಿ ಗಮನಿಸುವುದು ಅವಶ್ಯ. ಆಲು ಇಲ್ಲವೇ ಮನಿ ಎಂಬ ಪದರೂಪದಲ್ಲಿಲ್ಲದಂತಹ ನುಡಿಯ ಬಳಕೆಗೆ ಅವಶ್ಯವಾಗಿರುವ ಯಾವ ಅಂಶವೂ ಹಾಲು ಇಲ್ಲವೇ ಮನೆ ಎಂಬ ಪದರೂಪದಲ್ಲಿಲ್ಲ. ಇಲ್ಲಿ ತಪ್ಪು ಮತ್ತು ಸರಿ ಎಂಬವುಗಳು ಎಂತಹ ಬರಹ ನಮ್ಮೊಳಗೆ ಸಮಾನವಾಗಿ ಉಳಿಯಬೇಕು ಎಂಬ ತೀರ‍್ಮಾನವನ್ನಶ್ಟೇ ಅವಲಂಬಿಸಿದೆ. ಇವತ್ತು ಬಳಕೆಯಲ್ಲಿರುವ ತೀರ‍್ಮಾನವನ್ನು ನಾವು ಅವಶ್ಯವೆಂದೆನಿಸಿದಲ್ಲಿ ಮಾರ‍್ಪಡಿಸಬಲ್ಲೆವು, ಮತ್ತು ಹಾಗೆ ಮಾರ‍್ಪಡಿಸಿದಾಗ ಇವತ್ತು ತಪ್ಪು ಎಂದು ತಿಳಿದಿರುವ ಪದರೂಪಗಳು ಸರಿಯೆಂದೆನಿಸಬಲ್ಲುವು.

ಸಂಸ್ಕ್ರುತ ಎರವಲುಗಳನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು ಎಂಬ ಕಟ್ಟಲೆ ಕನ್ನಡದ ಮಟ್ಟಿಗೆ ತೀರ ಅನವಶ್ಯಕವಾದುದು ಮಾತ್ರವಲ್ಲ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಸುಲಬವಾಗಿ ಕಲಿತು ತಮ್ಮದಾಗಿಸಿಕೊಳ್ಳುವಲ್ಲಿ ಒಂದು ದೊಡ್ಡ ತೊಡಕಾಗಿದೆ; ಕೆಲವೇ ಕೆಲವು ಜನರಶ್ಟೇ ಬರಹವನ್ನು ಬಳಸುತ್ತಿದ್ದ ಹಿಂದಿನ ಕಾಲದಲ್ಲಿ ಈ ಕಟ್ಟಲೆ ಹೆಚ್ಚು ತೊಡಕಿನದೆಂದು ಅನಿಸುತ್ತಿರಲಿಲ್ಲ. ಆದರೆ, ಇವತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗಬೇಕಾಗಿದೆ; ಹಾಗಾಗಿ, ಕನ್ನಡಕ್ಕೆ ಬೇಡದ ಈ ಸಂಸ್ಕ್ರುತದ ಹೊರೆಯನ್ನು ತೆಗೆದುಹಾಕುವುದೇ ಒಳ್ಳೆಯದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹ ಕನ್ನಡ ಮತ್ತು ಆಡುಗನ್ನಡ

ನುಡಿಯರಿಮೆಯ ಇಣುಕುನೋಟ – 1

ಆಡುನುಡಿಯೆಂಬುದು ಜಾಗದಿಂದ ಜಾಗಕ್ಕೆ ಬದಲಾಗುವುದು ಸಹಜ. ನಮ್ಮ ನಲ್ಮೆಯ ಕನ್ನಡ ನುಡಿಗೂ ಈ ಮಾತು ಒಪ್ಪುತ್ತದೆ. ಬೇರೆ ಬೇರೆ ಊರುಗಳಲ್ಲಿರುವ ಕನ್ನಡಿಗರು ಬೇರೆ ಬೇರೆ ಆಡುಗನ್ನಡಗಳನ್ನು ಬಳಸುವುದು ನಮ್ಮೆಲ್ಲರ ಗಮನಕ್ಕೆ ಬಂದಿರುತ್ತದೆ. ಹಾಗೆಯೇ ಜಾತಿಯಿಂದ ಜಾತಿಗೂ ಆಡುಗನ್ನಡ ಬದಲಾಗುವುದನ್ನೂ ನಾವೆಲ್ಲರೂ ಕಂಡಿರುತ್ತೇವೆ. ಎತ್ತುಗೆಗಾಗಿ, ಮಯ್ಸೂರಿನ ಆಡುಗನ್ನಡಕ್ಕೂ ಹುಬ್ಬಳ್ಳಿಯ ಆಡುಗನ್ನಡಕ್ಕೂ ನಡುವೆ, ಮತ್ತು ಮಯ್ಸೂರಿನಲ್ಲೇನೇ ಬ್ರಾಹ್ಮಣರ ಆಡುಗನ್ನಡಕ್ಕೂ ಒಕ್ಕಲಿಗರ ಆಡುಗನ್ನಡಕ್ಕೂ ನಡುವೆ ವ್ಯತ್ಯಾಸವಿದೆ.

ಆದರೆ, ಬರಹ ಕನ್ನಡ ಹೀಗೆ ಬೇರೆ ಬೇರೆಯಾಗಿ ಇರುವಂತಿಲ್ಲ. ಅದು ಎಲ್ಲರಿಗೂ ಸಮನಾಗಿದ್ದು, ‘ಎಲ್ಲರ ಕನ್ನಡ’ವಾಗಿರಬೇಕಾಗುತ್ತದೆ; ಯಾಕೆಂದರೆ, ಜಾಗ ಮತ್ತು ಜಾತಿಗಳ ಎಲ್ಲೆಗಳನ್ನು ಮೀರಿ ಜನರನ್ನು ಬೆಸೆಯುವ ಒಂದು ವಿಶೇಶವಾದ ಕೆಲಸ ಅದರದು. ಹಲವು ಬಗೆಯ ಆಡುಗನ್ನಡಗಳನ್ನು ಬಳಸುವ ಎಲ್ಲಾ ಕನ್ನಡಿಗರಿಗೂ ಸಮಾನವಾಗಿರಬೇಕಾದಂತಹ ಬರಹ ಕನ್ನಡ ಅವರೆಲ್ಲರ ಆಡುಗನ್ನಡಕ್ಕಿಂತಲೂ ಬೇರಾಗಿಯೇ ಇರಬೇಕಾಗುತ್ತದೆ ಎಂದು ಸುಲಬವಾಗಿ ಕಾಣಬಹುದು.

ಬರಹ ಕನ್ನಡ ಬೇರೆ ಬೇರೆ ಆಡುಗನ್ನಡಗಳಿಗಿಂತ ಬೇರಾಗಿರಬೇಕಾದುದು ಅನಿವಾರ‍್ಯ ಎಂದ ಮಾತ್ರಕ್ಕೆ ಅದು ಅವುಗಳಿಗಿಂತ ತುಂಬಾ ದೂರದಲ್ಲಿರುವುದೂ ಅನಿವಾರ‍್ಯ ಎಂದೇನಿಲ್ಲ; ಆದಶ್ಟು ಹತ್ತಿರವೂ ಇರಬಹುದು. ಅದು ನಮ್ಮೆಲ್ಲರಿಗಿಂತ ದೂರದಲ್ಲಿರಬೇಕೋ ಹತ್ತಿರದಲ್ಲಿರಬೇಕೋ ಎಂಬ ಪ್ರಶ್ನೆಯನ್ನು ಹಾಕಿಕೊಂಡರೆ, ಯಾರೂ ‘ದೂರದಲ್ಲಿರಬೇಕು’ ಎಂಬ ಉತ್ತರವನ್ನು ಕೊಡಲಾರರು. ಬರಹ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೂ ಆದಶ್ಟು ಹತ್ತಿರವಿರುವಂತೆ ಮಾಡಿದಲ್ಲಿ, ಕನ್ನಡವನ್ನು ಓದಲು ಮತ್ತು ಬರೆಯಲು ಕಲಿಯುವ ಕೆಲಸ ಎಲ್ಲಾ ಕನ್ನಡಿಗರಿಗೂ ಸುಲಬವಾಗುತ್ತದೆ ಎಂದು ಯಾರಾದರೂ ಕಾಣಬಹುದು. ಆದುದರಿಂದ ಹಾಗೆ ಮಾಡಬೇಕಾಗಿರುವುದು ಕನ್ನಡದ ಮತ್ತು ಅದರ ಮೂಲಕ ಕನ್ನಡಿಗರ ಏಳಿಗೆಗೆ ಬಹಳ ಮುಕ್ಯವಾದ ಕೆಲಸ.

ಎಲ್ಲರಿಗೂ ಆದಶ್ಟು ಹತ್ತಿರವಿರುವ ಬರಹ ಕನ್ನಡದಲ್ಲಿ ಸಂಸ್ಕ್ರುತ, ಇಂಗ್ಲಿಶ್, ಹಿಂದಿ ಮೊದಲಾದ ಬೇರೆ ನುಡಿಗಳಿಂದ ಪಡೆಯುವ ಎರವಲು ಪದಗಳನ್ನು ಒಂದು ಮಿತಿಯಲ್ಲಿರಿಸಿಕೊಳ್ಳುವುದು ಅನಿವಾರ‍್ಯವೆಂದು ಹೇಳಬೇಕಾಗಿಯೇ ಇಲ್ಲ. ಜಾಗ ಮತ್ತು ಜಾತಿಯ ತಾರತಮ್ಯವಿಲ್ಲದೆ ಎಲ್ಲರೂ ಬರಹವನ್ನು ಬಳಸತೊಡಗಿದಾಗ, ಅಂತಹ ಎರವಲು ಪದಗಳು ಒಂದು ಮಿತಿಯಲ್ಲಿ ಇದ್ದೇ ಇರುತ್ತವೆ; ಬಹುಶಹ ನೂರಕ್ಕೆ ಅಯ್ದು ಇಲ್ಲವೇ ಹತ್ತಕ್ಕಿಂತ ಹೆಚ್ಚು ಇರಲಾರವು. ತನ್ನ ಸೊಗಡನ್ನು ಉಳಿಸಿಕೊಂಡಿರುವ ಅಂತಹ ಬರಹಗಳನ್ನು ಓದುವ ಮತ್ತು ಬರೆಯುವ ಕೆಲಸ ಕೆಲವರಿಗಶ್ಟೇ ಅಲ್ಲ, ಎಲ್ಲರಿಗೂ ಸುಲಬದ್ದಾಗುತ್ತದೆ.

ಹಲವು ಕಡೆ ಕನ್ನಡದ್ದೇ ಆದ ಪದಗಳನ್ನು ಬರಹ ಕನ್ನಡದಲ್ಲಿ ಬಳಸುವುದು ಒಳ್ಳೆಯ ಬರವಣಿಗೆಯ ಗುರುತಲ್ಲ ಎಂಬ ಒಂದು ವಿಚಿತ್ರವಾದ ಅನಿಸಿಕೆ ಕೆಲವರಲ್ಲಿದೆ; ಕನ್ನಡದ್ದೇ ಆದ ಪದಗಳ ಬದಲು ಸಂಸ್ಕ್ರುತದ ಎರವಲುಗಳನ್ನು ಬಳಸುವುದರಿಂದ ಬರಹ ಮೇಲ್ಮಟ್ಟದ್ದಾಗುತ್ತದೆಯೆಂಬ ಬ್ರಮೆ ಅದೇಕೋ ಅವರಲ್ಲಿದೆ. ‘ನಾಯಿ’ ಎಂದು ಬರೆಯುವ ಬದಲು ‘ಶ್ವಾನ’ ಎಂದು ಬರೆಯುವುದು, ‘ಕೂದಲು’ ಎಂಬುದರ ಬದಲು ‘ಕೇಶ’ ಎನ್ನುವುದು, ‘ಹಲ್ಲು’ ಎನ್ನುವ ಬದಲು ‘ದಂತ’ ಎನ್ನುವುದು, ‘ಕೂಡಿಸುವುದು’ ಎನ್ನುವ ಬದಲು ‘ಸಂಕಲನ’ ಎನ್ನುವುದು, ಇವೆಲ್ಲ ಮೇಲ್ಮಟ್ಟದ ಕನ್ನಡ ಬರವಣಿಗೆಯ ಗುರುತುಗಳು ಎಂದು ಹಲವರು ತಿಳಿದಿದ್ದಾರೆ. ಆದರೆ ಈ ರೀತಿಯ ಬಳಕೆಗಳು ಬರಹ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸುವಂತವಲ್ಲ, ದೂರವಾಗಿಸುವಂತವು ಎಂದು ತಿಳಿದುಕೊಳ್ಳಲು ಕಶ್ಟವಿಲ್ಲ.

ಹೊಸ ಹೊಸ ಪದಗಳನ್ನು ಉಂಟುಮಾಡಬೇಕಾದಾಗಲಂತೂ ಸಂಸ್ಕ್ರುತವನ್ನು ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂದು ಹೆಚ್ಚಿನ ಕನ್ನಡದ ಬರಹಗಾರರೂ ತಿಳಿದಿದ್ದಾರೆ. ಆದರೆ ಅಂತಹ ಪದಗಳನ್ನು ಬಳಸಿರುವ ಕನ್ನಡ ಬರಹ ಎಲ್ಲರಿಗೂ ಹತ್ತಿರವಾಗುವ ಬದಲು ದೂರ ಉಳಿಯುತ್ತದೆ, ಮತ್ತು ಅದನ್ನು ಕಲಿಯುವ ಮತ್ತು ಬಳಸುವ ಕೆಲಸ ಹೆಚ್ಚಿನ ಕನ್ನಡಿಗರಿಗೂ ತೊಡಕಿನದಾಗುತ್ತದೆ. ಹೊಸ ಪದಗಳನ್ನು ಉಂಟುಮಾಡುವುದರ ಗುರಿ ಕನ್ನಡಿಗರಿಗೆಲ್ಲ ಆ ಪದಗಳು ಸೂಚಿಸುವ ವಿಶಯ ಇಲ್ಲವೇ ವಸ್ತುವಿನ ಪರಿಚಯ ಮಾಡಿಸುವುದು ಎಂಬುದನ್ನು ನೆನಪಿನಲ್ಲಿಟ್ಟರೆ ಹೆಜ್ಜೆಹೆಜ್ಜೆಗೂ ಸಂಸ್ಕ್ರುತವನ್ನು ಮೊರೆಹೊಗುವುದು ತಾನೇ ನಿಲ್ಲುತ್ತದೆ.

ಹೊಸ ಪದಗಳನ್ನು ಉಂಟುಮಾಡಲು ಕನ್ನಡದ್ದೇ ಆದ ಪದಗಳನ್ನು ಮತ್ತು ಬೇರುಗಳನ್ನು ಬಳಸಬಹುದು; ಇವು ಹೊಸಗನ್ನಡದಲ್ಲಿ ಸಿಗದಿದ್ದರೆ ಹಳೆಗನ್ನಡದಿಂದ, ಇಲ್ಲವೇ ಆಡುಗನ್ನಡಗಳಿಂದ ಪಡೆದುಕೊಳ್ಳಬಹುದು. ಹೆಚ್ಚಿನವರೂ ಕೇಳಿಲ್ಲದ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಸಂಸ್ಕ್ರುತದವು ಎಂಬ ಒಂದೇ ಕಾರಣಕ್ಕಾಗಿ ಬಳಸಿ ಹೊಸ ಪದಗಳನ್ನು ಉಂಟುಮಾಡುವುದಕ್ಕಿಂತಲೂ, ಹೆಚ್ಚಿನವರೂ ಕೇಳಿರುವ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಯಾವ ನುಡಿಯವಾಗಿದ್ದರೂ (ಎತ್ತುಗೆಗೆ ಇಂಗ್ಲೀಶಿನವಾಗಿದ್ದರೂ) ಎರವಲಾಗಿ ಪಡೆದು ಬಳಸಿಕೊಳ್ಳಬಹುದು.

ಇವತ್ತು ಕನ್ನಡ ಬರಹದಲ್ಲಿ ಕನ್ನಡಕ್ಕೆ ನಿಜಕ್ಕೂ ಬೇಡದಿರುವ ಹಲವು ಬರಿಗೆಗಳನ್ನು (ಅಕ್ಶರಗಳನ್ನು) ಬಳಸಲಾಗುತ್ತದೆ; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಸಂಸ್ಕ್ರುತದಲ್ಲಿ ಇರುವ ಹಾಗೆಯೇ ಬರೆಯಬೇಕು (ಕೆಲವು ಅಪವಾದಗಳನ್ನು ಹೊರತುಪಡಿಸಿ) ಎಂಬ ಕಟ್ಟಲೆಯೊಂದನ್ನು ಉಳಿಸಿಕೊಳ್ಳುವುದಕ್ಕಾಗಿ ಹತ್ತು ಮಹಾಪ್ರಾಣ ಬರಿಗೆಗಳು, ಋಕಾರ, ಷಕಾರ, ಐ, ಔ, ಙ, ಞ, ವಿಸರ‍್ಗ ಎಂಬಂತಹ ಒಟ್ಟು ಹದಿನೇಳು ಹೆಚ್ಚಿನ ಬರಿಗೆಗಳನ್ನು ಕನ್ನಡ ಬರಹದಲ್ಲಿ ಬಳಸಲಾಗುತ್ತಿದೆ. (ಇದಲ್ಲದೆ ರಕಾರಕ್ಕೆ ಎಂಬ ಒಂದು ಹೆಚ್ಚಿನ ರೂಪವನ್ನೂ ಬಳಸಲಾಗುತ್ತಿದೆ.)

ಇವುಗಳಲ್ಲಿ ಹೆಚ್ಚಿನವೂ ಕನ್ನಡ ಬರಹದ ಓದಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಓದಿನಲ್ಲಿಲ್ಲದ ಬರಿಗೆಗಳನ್ನು ಬರಹದಲ್ಲಿ ಕಾಣಿಸುವುದು ತುಂಬಾ ತೊಡಕಿನ ಕೆಲಸ; ಎಶ್ಟು ತೊಡಕಿನ ಕೆಲಸವೆಂಬುದು ಇವತ್ತಿನ ಕನ್ನಡ ಬರಹಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗುತ್ತದೆ: ಅವುಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸಿಕೊಳ್ಳುವುದು ಮಹಾಪ್ರಾಣದಂತಹ ಈ ಹೆಚ್ಚಿನ ಬರಿಗೆಗಳನ್ನು ಬಳಸುವುದರಲ್ಲೇ ಆಗಿದೆ.

ಬರಹದ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೆ ಹತ್ತಿರ ತರಲು ಬೇಡದ ಈ ಹದಿನೇಳು ಬರಿಗೆಗಳನ್ನು ಬಿಟ್ಟುಬಿಡುವುದೇ ಒಳಿತು. ಹಾಗೆಯೇ ಇಂಗ್ಲಿಶ್, ಹಿಂದಿ, ಮರಾಟಿ, ಉರ‍್ದು, ಮೊದಲಾದ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳ ಹಾಗೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನೂ ಹೆಚ್ಚಿನ ಕನ್ನಡಿಗರೂ ಓದುವ ಹಾಗೆಯೇ ಬರೆಯುವುದು ಒಳಿತು. ಅವನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬೇಕೆಂಬ ಕಟ್ಟಳೆಯನ್ನು ಉಳಿಸಿಕೊಳ್ಳಬೇಕಾಗಿಲ್ಲ.

ಹಳೆಗನ್ನಡದ ಸಮಯದಲ್ಲಿ ಕನ್ನಡಿಗರಿಗೆ ಇಂತಹದೊಂದು ಸ್ವಾತಂತ್ರ್ಯವಿತ್ತು; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಅವರು ಸಂಸ್ಕ್ರುತದಲ್ಲಿರುವ ಹಾಗೆಯೇ ಬೇಕಿದ್ದರೂ ಬರೆಯಬಲ್ಲವರಾಗಿದ್ದರು; ಇಲ್ಲವೇ ಕನ್ನಡದ ಸ್ವರೂಪಕ್ಕೆ ಹೊಂದಿಕೆಯಾಗುವ ಹಾಗೆ ಅದರಲ್ಲಿ ಮಾರ‍್ಪಾಡುಗಳನ್ನು ಮಾಡಿಯೂ ಬಳಸಬಲ್ಲವರಾಗಿದ್ದರು.
ಬರಹದ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸಲು ಈಗ ಕನ್ನಡಿಗರು ಮಾಡಬೇಕಿರುವ ಮಾರ‍್ಪಾಡು ಇದಕ್ಕಿಂತ ಬೇರಾದುದೇನಲ್ಲ. ಮಿತಿಯಿಲ್ಲದೆ ಸಂಸ್ಕ್ರುತದಿಂದ ಎರವಲಾಗಿ ಪಡೆಯುವುದನ್ನು ಕಡಿಮೆ ಮಾಡುವುದು, ಮತ್ತು ಸಂಸ್ಕ್ರುತ ಬಲ್ಲವರು ಮಾತ್ರವಲ್ಲದೆ ಎಲ್ಲರೂ ಬರಹ ಕನ್ನಡದಿಂದ ಪಡೆಯುವುದನ್ನು ಪಡೆಯುವುದಶ್ಟೇ ಅಲ್ಲದೆ, ಬರಹ ಕನ್ನಡದ ಮೂಲಕ ಕೊಡುವುದನ್ನು ಎಲ್ಲರೂ ಕೊಡುವಂತೆಯೂ ಮಾಡುವುದು ಕನ್ನಡದ ಏಳಿಗೆಗೆ ಇಂದು ಅನಿವಾರ‍್ಯವಾಗಿದೆ.

ಈ ಇಪ್ಪತ್ತೊಂದನೆಯ ಶತಮಾನದಲ್ಲೂ ಹಲವು ಮಂದಿ ಕನ್ನಡಿಗರು ಬರವಣಿಗೆಯ ಪ್ರಪಂಚದಲ್ಲಿ ಆಟಕ್ಕಶ್ಟೇ ಅಲ್ಲ, ಲೆಕ್ಕಕ್ಕೆ ಬರುವಂತೆಯೂ ಪಾಲ್ಗೊಳ್ಳಲು ಆಗದಿರಲು ಹಲವು ಬಗೆಯ ತೊಡಕುಗಳು ಕಾರಣವಾಗಿವೆ. ಎತ್ತುಗೆಗಾಗಿ, ಕೆಳವರ‍್ಗದ ಜನರ ಬಡತನ ಮತ್ತು ಅರಿಯಮೆಗಳು ಅವರ ಮಕ್ಕಳನ್ನು ಶಾಲೆಗಳಿಂದ ದೂರ ಇರಿಸುತ್ತವೆ. ಹಲವರಾದ ಅವರ ಕನ್ನಡಕ್ಕಿಂತ ಕೆಲವರಾದ ತಮ್ಮ ಕನ್ನಡಕ್ಕೆ ಹತ್ತಿರವಿರುವಂತೆಯೇ ಬರಹದ ಕನ್ನಡವನ್ನು ಇಟ್ಟುಕೊಳ್ಳಲು ಮೇಲ್ವರ‍್ಗದವರು ಬಯಸುವುದು ಇದಕ್ಕೆ ಒತ್ತಾಸೆಯಾಗಿರುತ್ತದೆ. ಕೆಳವರ‍್ಗದವರನ್ನು ಅವರಿರುವಲ್ಲಿಯೇ ಇರಲು ಬಿಡುವುದು ಮೇಲ್ವರ‍್ಗದವರ ಮನದಾಳದ ಬಯಕೆಯಾಗಿರಲಿಕ್ಕಿಲ್ಲ; ಕನ್ನಡಿಗರ ನೆತ್ತರಿನಲ್ಲಿ ಇಂತಹ ನಂಜಿಲ್ಲ. ಆದರೂ ಅವರು ಇರುವಲ್ಲೇ ಇರುವಂತೆ ಮಾಡುತ್ತಿರುವ ಕೆಲವು ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿಕೊಳ್ಳುವುದು ಹಿರಿಮೆಯಾದೀತು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter