Posts Tagged ‘ಎಸಕ’

ಕನ್ನಡ ಬರಹಗಳಲ್ಲಿ ‘ಕರಣ’ದ ಹಾವಳಿ

ನುಡಿಯರಿಮೆಯ ಇಣುಕುನೋಟ – 32

ಕನ್ನಡ ಬರಹಗಳಲ್ಲಿ ಇತ್ತೀಚೆಗೆ ಸಂಸ್ಕ್ರುತದ ‘ಕರಣ’ ಎಂಬ ಪದದ ಬಳಕೆ ತುಂಬಾ ಹೆಚ್ಚಾಗುತ್ತಿದೆ; ಅದನ್ನು ಬಳಸುವವರು ನಿಜಕ್ಕೂ ಅದು ಬೇಕೇ ಇಲ್ಲವೇ ಬೇಡವೇ ಎಂಬುದನ್ನು ಗಮನಿಸುವುದೇ ಇಲ್ಲ. ಹಲವೆಡೆಗಳಲ್ಲಿ ಅದಕ್ಕೆ ಬದಲು ಕನ್ನಡದ್ದೇ ಆದ ‘ಇಸು’ ಒಟ್ಟನ್ನು ಬಳಸುವುದೇ ಕನ್ನಡದ ಮಟ್ಟಿಗೆ ಒಳ್ಳೆಯದು. ಯಾಕೆಂದರೆ, ‘ಕರಣ’ ಪದದ ಬಳಕೆಯಿಂದಾಗಿ ಮೂಡುವ ಹಲವು ಬಗೆಯ ಗೊಂದಲಗಳು ‘ಇಸು’ ಒಟ್ಟಿನ ಬಳಕೆಯಲ್ಲಿ ಕಾಣಿಸುವುದಿಲ್ಲ. ಇದಲ್ಲದೆ, ಕನ್ನಡದ್ದೇ ಆದ ‘ಇಸು’ ಒಟ್ಟಿನ ಬಳಕೆಯ ಹಿಂದಿರುವ ಕಟ್ಟಲೆಗಳು ಎಲ್ಲಾ ಕನ್ನಡಿಗರಿಗೂ ತಿಳಿದಿರುತ್ತವೆ; ಹಾಗಾಗಿ, ‘ಕರಣ’ ಪದದ ಬಳಕೆಯ ಹಾಗೆ ಹೊಸ ಕಟ್ಟಲೆಗಳನ್ನು ಅವರು ಕಲಿಯಬೇಕಾಗುವುದಿಲ್ಲ.

ಸಂಸ್ಕ್ರುತದ ಎರವಲುಗಳೊಂದಿಗೆ ಮಾತ್ರವಲ್ಲದೆ ಇಂಗ್ಲಿಶ್, ಪರ್ಶಿಯನ್ ಮೊದಲಾದ ಬೇರೆ ಎರವಲು ಪದಗಳೊಂದಿಗೆ, ಮತ್ತು ಕನ್ನಡದವೇ ಆದ ಪದಗಳೊಂದಿಗೂ ಈ ‘ಕರಣ’ ಎಂಬುದನ್ನು ಬಳಸಲಾಗುತ್ತದೆ; ಸಬಲೀಕರಣ, ಉದಾರೀಕರಣ, ಪ್ರಮಾಣೀಕರಣ ಎಂಬ ಪದಗಳ ಹಾಗೆ, ಡಿಜಿಟಲೀಕರಣ, ಅಯಾನೀಕರಣ, ಕಾಸಗೀಕರಣ, ದಾಕಲೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ.

ಕನ್ನಡದ ಹಸಿರು ಪದದಿಂದ ಹಸಿರೀಕರಣ, ಅಗಲ ಪದದಿಂದ ಅಗಲೀಕರಣ, ಮತ್ತು ಕಯ್ಗಾರಿಕೆ ಪದದಿಂದ ಕಯ್ಗಾರಿಕೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ. ಇಂತಹ ಹಲವು ಕಡೆಗಳಲ್ಲಿ ಸಬಲಿಸು, ಪ್ರಮಾಣಿಸು, ಡಿಜಿಟಲಿಸು, ಅಯಾನಿಸು, ದಾಕಲಿಸು, ಹಸಿರಿಸು, ಅಗಲಿಸು ಎಂಬಂತಹ ಪದಗಳನ್ನು ಮತ್ತು ಅವುಗಳ ಹೆಸರುರೂಪಗಳಾದ ಪ್ರಮಾಣಿಸುವಿಕೆ, ದಾಕಲಿಸುವಿಕೆ, ಅಯಾನಿಸುವಿಕೆ, ಹಸಿರಿಸುವಿಕೆ ಎಂಬಂತಹ ಪದಗಳನ್ನೂ ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ.

‘ಕರಣ’ ಎಂಬುದನ್ನು ಬಳಸುವವರಲ್ಲಿ ಹಲವರಿಗೆ ಅದರೊಂದಿಗೆ ಬರುವ ಹೆಸರುಪದದಲ್ಲಿ ಎಂತಹ ಮಾರ್ಪಾಡುಗಳನ್ನೆಲ್ಲ ಮಾಡಬೇಕು ಎಂಬ ವಿಶಯದಲ್ಲೂ ಗೊಂದಲಗಳಿವೆ; ಕೆಲವರು ಆದುನಿಕೀಕರಣ, ಜಾಗತಿಕೀಕರಣ, ಯಾಂತ್ರಿಕೀಕರಣ ಎಂದು ಬರೆದರೆ, ಇನ್ನು ಕೆಲವರು ಆದುನೀಕರಣ, ಜಗತೀಕರಣ, ಯಾಂತ್ರೀಕರಣ ಎಂಬುದಾಗಿ ಬರೆಯುತ್ತಾರೆ. ಸಾಮಾಜೀಕರಣವೂ ಇದೆ, ಸಮಾಜೀಕರಣವೂ ಇದೆ; ಸಾದ್ರುಶೀಕರಣವೂ ಇದೆ, ತುರ್ತುಕರಣವೂ ಇದೆ. ಮೇಲಿನ ಪದಗಳಲ್ಲಿ ಬಳಕೆಯಾಗಿರುವ ಮಹಾಪ್ರಾಣಾಕ್ಶರಗಳನ್ನು ಈ ಅಂಕಣದಲ್ಲಿ ಕಯ್ಬಿಡಲಾಗಿದೆ; ಆದರೆ, ಅದರ ಬಳಕೆಯಲ್ಲೂ ಸಾಕಶ್ಟು ಗೊಂದಲಗಳಿವೆ.

‘ಕರಣ’ ಪದವನ್ನು ಬಳಸುವವರೂ ಆ ಪದಗಳಿಂದ ಎಸಕ(ಕ್ರಿಯಾ)ಪದಗಳನ್ನು ಉಂಟುಮಾಡಬೇಕಿದ್ದಲ್ಲಿ ಕನ್ನಡದ ‘ಇಸು’ ಒಟ್ಟನ್ನು ಬಳಸಲೇಬೇಕಾಗುತ್ತದೆ; ಸಬಲೀಕರಣ, ದಾಕಲೀಕರಣ, ಡಿಜಿಟಲೀಕರಣ ಎಂಬಂತಹ ಪದಗಳನ್ನು ಬಳಸುವವರು ಅವುಗಳಿಂದ ಎಸಕಪದವನ್ನು ಪಡೆಯಬೇಕಿದ್ದಲ್ಲಿ ಸಬಲೀಕರಿಸು, ದಾಕಲೀಕರಿಸು, ಡಿಜಿಟಲೀಕರಿಸು ಎಂಬುದಾಗಿ ಇಸು ಒಟ್ಟನ್ನು ಸೇರಿಸಿಯೇ ಹೇಳಬೇಕಾಗುತ್ತದೆ; ಇದಕ್ಕೆ ಬದಲು ಸಬಲಿಸು, ದಾಕಲಿಸು, ಡಿಜಿಟಲಿಸು ಎಂದಶ್ಟೇ ಹೇಳಿದರೆ ಸಾಕಾಗುವುದಿಲ್ಲವೇ? ಅವುಗಳ ನಡುವೆ ಕರಣವನ್ನು ಯಾಕೆ ತಂದುಹಾಕಬೇಕು? ಸ್ತಿರೀಕರಣಗೊಳ್ಳು ಎಂಬುದೂ ಇಂತಹದೇ ಇನ್ನೊಂದು ಅನವಶ್ಯಕವಾದ ಕರಣ ಪದವನ್ನು ಸೇರಿಸಿರುವ ಪದರೂಪ; ಸ್ತಿರಗೊಳ್ಳು ಎಂಬುದು ಹೆಚ್ಚು ಅಡಕವಾಗಿ ಅದೇ ಹುರುಳನ್ನು ಕೊಡಬಲ್ಲುದು.

ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡುವಲ್ಲೂ ಕನ್ನಡದ ಅರಿವಿಗರು ಈ ‘ಕರಣ’ ಪದವನ್ನು ಹಲವೆಡೆಗಳಲ್ಲಿ ಬಳಸಿದ್ದಾರೆ; ಕಾರ್ಬನೀಕರಣ, ನಯ್ಟ್ರೀಕರಣ, ಪಾಲಿಮರೀಕರಣ ಎಂಬಂತಹ ಈ ಪದಗಳನ್ನು ಬಳಸಿದಲ್ಲಿ, ಅವಕ್ಕೆ ಸಂಬಂದಿಸಿದಂತೆ ಕರಿಸು (ಅಯಾನೀಕರಿಸು), ಕ್ರುತ (ಅಯಾನೀಕ್ರುತ), ಕಾರಕ (ಅಯಾನೀಕಾರಕ), ಕಾರಿ (ಅಯಾನೀಕಾರಿ) ಎಂಬಂತಹ ಕರಣ ಪದಕ್ಕೆ ಸಂಬಂದಿಸಿದಂತಹ ಬೇರೆ ಕೆಲವು ಪದಗಳನ್ನೂ ಬಳಸಬೇಕಾಗುತ್ತದೆ, ಮತ್ತು ಅವು ಕನ್ನಡದ್ದಲ್ಲವಾದ ಕಾರಣ, ಅವನ್ನು ಬಳಸುವಲ್ಲಿ ಹಲವಾರು ತಪ್ಪುಗಳೂ ಕಾಣಿಸಿಕೊಳ್ಳುತ್ತವೆ; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದಲ್ಲಿ ಕನ್ನಡದಲ್ಲಿ ಈಗಾಗಲೇ ಬಳಕೆಯಲ್ಲಿರುವ ಮತ್ತು ಎಲ್ಲಾ ಕನ್ನಡಿಗರಿಗೂ ತಿಳಿದಿರುವ ಇಸುವಿಕೆ (ಅಯಾನಿಸುವಿಕೆ), ಇಸಿದ (ಅಯಾನಿಸಿದ), ಇಸುವ (ಅಯಾನಿಸುವ) ಎಂಬಂತಹ ರೂಪಗಳನ್ನು ಬಳಸಲು ಬರುತ್ತದೆ.

ಇಂತಹ ಕಡೆಗಳಲ್ಲಿ ಅರಿವಿಗರು ಇನ್ನೂ ಒಂದು ತೊಡಕನ್ನು ಎದುರಿಸಬೇಕಾಗುತ್ತದೆ: ಇಂಗ್ಲಿಶ್ನ ಅಯ್ಸ್ ಎಂಬ ಒಟ್ಟು ಬಂದಿರುವಲ್ಲಿ ಕರಿಸು ಎಂಬುದನ್ನು ಬಳಸುವ (ಪೋಲರಯ್ಸ್ – ದ್ರುವೀಕರಿಸು, ಅನೊಡಯ್ಸ್ – ಅನೊಡೀಕರಿಸು) ಈ ಅರಿವಿಗರು ಇಂಗ್ಲಿಶ್ನ ಅಯ್ಸ್ ಎಂಬುದಕ್ಕಿರುವ ಮಾಡುವಿಕೆ ಮತ್ತು ಆಗುವಿಕೆ ಎಂಬ ಎರಡು ಹುರುಳುಗಳಲ್ಲಿ ಒಂದನ್ನು ಮಾತ್ರ ತಿಳಿಸಬಲ್ಲರು; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದರೆ ಆ ಎರಡು ಹುರುಳುಗಳನ್ನೂ ತಿಳಿಸಬಲ್ಲರು. ಯಾಕೆಂದರೆ, ಕರಣ ಎಂಬುದಕ್ಕೆ ಆಗುವಿಕೆ ಎಂಬ ಹುರುಳು ಸಿಗಲಾರದು; ಆದರೆ, ಇಸು ಎಂಬುದನ್ನು ಬಳಸಿರುವ ಅನೋಡಿಸು, ಅಲ್ಯೂಮಿನಿಸು ಎಂಬುವಕ್ಕೆ ಆಗುವಿಕೆಯ ಹುರುಳೂ ಸಿಗಬಲ್ಲುದು.

ಅರಿಮೆಯ (ಪಾರಿಬಾಶಿಕ)ಪದಗಳನ್ನು ಉಂಟುಮಾಡುವಲ್ಲಿ ಆತ್ಮಕ ಎಂಬುದನ್ನು ಬಳಸುವುದೂ ಇಂತಹದೇ ಒಂದು ಬೇಕಿಲ್ಲದ ಚಾಳಿ. ನುಡಿಯರಿಮೆಯ ಒಂದು ಪದನೆರಕೆಯಲ್ಲಿ ಈ ರೀತಿ ಆತ್ಮಕ ಎಂಬುದನ್ನು ಬಳಸಿರುವ ಇನ್ನೂರಯ್ವತ್ತಕ್ಕಿಂತಲೂ ಹೆಚ್ಚು (ಎಂದರೆ, ಸುಮಾರು ನೂರಕ್ಕೆ ಹದಿಮೂರರಶ್ಟು) ಪದಗಳಿವೆ! ಇವುಗಳಲ್ಲಿ ಹೆಚ್ಚಿನವುಗಳಲ್ಲಿಯೂ ಆತ್ಮಕ ಎಂಬುದನ್ನು ಬಳಸಬೇಕಾಗಿಯೇ ಇಲ್ಲ (ವ್ಯಾಕರಣಾತ್ಮಕ ನಿಯಮ – ವ್ಯಾಕರಣ ನಿಯಮ, ದ್ವನ್ಯಾತ್ಮಕ ರಚನೆ – ದ್ವನಿರಚನೆ, ಪ್ರೇರಣಾತ್ಮಕ ವಾಕ್ಯ – ಪ್ರೇರಣ ವಾಕ್ಯ). ಅರಿಮೆಯ ಪದಗಳು ಸಿಕ್ಕಲಾಗಿದ್ದಶ್ಟೂ ಒಳ್ಳೆಯದು ಎಂಬ ಅನಿಸಿಕೆ ಈ ಪದಗಳನ್ನು ಉಂಟುಮಾಡಿರುವ ಅರಿವಿಗರಲ್ಲಿರುವ ಹಾಗೆ ಕಾಣಿಸುತ್ತದೆ.

ಇದಲ್ಲದೆ, ತಮ್ಮ ಬರಹಗಳಲ್ಲಿ ಎಲ್ಲರಿಗೂ ಗೊತ್ತಾಗುವ ಕನ್ನಡದವೇ ಆದ ಪದಗಳನ್ನು ಬಳಸುವ ಬದಲು ಸಂಸ್ಕ್ರುತದ ಎರವಲುಗಳನ್ನು ತಂದು ತುಂಬಿಸಿದರೆ ಅವುಗಳ ಮಟ್ಟ ಮೇಲೇರುತ್ತದೆಯೆಂದು ಕೆಲವರು ತಿಳಿದ ಹಾಗಿದೆ. ಆದರೆ, ಹಲವು ಮಂದಿ ಹೀಗೆ ಮಾಡುವಲ್ಲಿ ಹಲವು ಬಗೆಯ ತಪ್ಪುಗಳನ್ನೂ ಮಾಡಿ ನಗುವಿಗೆ ಎಡೆಮಾಡಿಕೊಡುತ್ತಾರೆ. ‘ಕಾರಣ’ ಎಂಬ ಪದದ ಬದಲು ಹಲವು ಮಂದಿ ‘ಸಕಾರಣ’ ಎಂಬ ಪದವನ್ನು ಬಳಸುತ್ತಾರೆ; ಆದರೆ, ಇವೆರಡರ ನಡುವೆ ಹುರುಳಿನಲ್ಲಿ ವ್ಯತ್ಯಾಸವಿದೆ ಎಂಬುದನ್ನು ಅವರು ಗಮನಿಸುವುದಿಲ್ಲ. ಸಕಾರಣ ಎಂಬುದಕ್ಕೆ ‘ಕಾರಣವಿರುವ’ ಎಂಬ ಹುರುಳಿದೆ. ಇದನ್ನು ಗಮನಿಸದ ಕೆಲವರ ಬರಹಗಳಲ್ಲಿ ಸಕಾರಣವಿಲ್ಲದೆ, ಸಕಾರಣ ನೀಡದೆ, ಸಕಾರಣಗಳಿರಲಿಲ್ಲ ಎಂಬಂತಹ ಬಳಕೆಗಳನ್ನು ಕಾಣಬಹುದು! ಆದರೆ, ಇಂತಹದೇ ಬಳಕೆ ಮುಂದುವರಿದರೆ, ಸಕಾರಣ ಎಂಬುದಕ್ಕೆ ಕನ್ನಡದಲ್ಲಿ ಬರಿಯ ಕಾರಣ ಎಂಬುದರ ಹುರುಳೇ ಇರುವಂತಾದೀತು.

ಇಹಲೋಕ ಮತ್ತು ಪರಲೋಕ ಎಂಬ ಬೇರೆ ಎರಡು ಸಂಸ್ಕ್ರುತ ಎರವಲುಗಳ ಬಳಕೆಯೂ ಇಂತಹದೇ. ಅವುಗಳ ನಿಜವಾದ ಹುರುಳು ಏನೆಂದು ತಿಳಿಯದಿದ್ದರೂ ಬಳಸುವ ಆಸೆ. ಆತನನ್ನು ಕಚ್ಚಿದ ಹಾವೇ ಸತ್ತುಹೋಯಿತು ಎಂಬುದನ್ನು ಹೇಳಬೇಕಿರುವಲ್ಲಿ ಕಚ್ಚಿದ ಹಾವೇ ಇಹಲೋಕಕ್ಕೆ ಹೋಯಿತು ಎಂಬುದಾಗಿ ಬರೆದಿರುವುದನ್ನು ಕಾಣಬಹುದು! ಇಹಲೋಕ ಮತ್ತು ಪರಲೋಕಗಳೆಂಬ ಈ ಪದಗಳ ಬದಲು ಈ ಲೋಕ ಮತ್ತು ಬೇರೆ ಲೋಕ ಎಂಬ ಎಲ್ಲರಿಗೂ ಗೊತ್ತಾಗುವ ಪದಕಂತೆಗಳನ್ನು ಬಳಸಿದ್ದರೆ, ಇಂತಹ ತಪ್ಪು ಮಾಡಿ ನಗೆಪಾಟಲಾಗುವ ಹಾಗಾಗುತ್ತಿರಲಿಲ್ಲ.

ದಿನಪತ್ರಿಕೆಗಳಲ್ಲಿ ತಲೆಬರಹವನ್ನು ಬರೆಯುವವರೂ ಇಂತಹದೇ ಕೀಳರಿಮೆಯಿಂದ ಬಳಲುತ್ತಿರುವ ಹಾಗೆ ಕಾಣಿಸುತ್ತದೆ. ಒಂದು ಬರಹದಲ್ಲಿ ಉದ್ದಕ್ಕೂ ನಾಯಿ, ಬೆಕ್ಕು, ಕೋಳಿ, ಮೀನು ಎಂಬಂತಹ ಕನ್ನಡದವೇ ಆದ ಪದಗಳನ್ನು ಬರುತ್ತವೆ; ಆದರೆ, ತಲೆಬರಹದಲ್ಲಿ ಮಾತ್ರ ಶ್ವಾನ, ಮಾರ್ಜಾಲ, ಕುಕ್ಕುಟ, ಮತ್ಸ್ಯ ಎಂಬಂತಹ ಸಂಸ್ಕ್ರುತ ಎರವಲುಗಳು ಬರುತ್ತವೆ. ತಲೆಬರಹದಲ್ಲಿ ಎಲ್ಲರಿಗೂ ಗೊತ್ತಿರುವ ನಾಯಿ, ಬೆಕ್ಕು, ಮೀನು ಮೊದಲಾದ ಕನ್ನಡ ಪದಗಳು ಬಂದರೆ ದಿನಪತ್ರಿಕೆಯ ತಕ್ಕಮೆ ಇಲ್ಲವಾಗಬಹುದೆಂಬ ಹೆದರಿಕೆ ಅವರಿಗಿರುವಂತೆ ತೋರುತ್ತದೆ. ತನ್ನ ಮುದಿ ತಂದೆಯನ್ನು ಅಪ್ಪ ಎನ್ನಲು ಹಿಂಜರಿಯುವ ದೊಡ್ಡ ಅದಿಕಾರಿಯ ಕೀಳು ಸಂಸ್ಕ್ರುತಿಯಿದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಸೊಲ್ಲರಿಮೆಯಲ್ಲಿ ತರ‍್ಕಕ್ಕೆ ನೆಲೆಯಿಲ್ಲ

ನುಡಿಯರಿಮೆಯ ಇಣುಕುನೋಟ – 31

ಕೆಲಸ ಮಾಡಿದ ಹೊರತು ಹಣ ಸಿಗುವುದಿಲ್ಲ’ ಎಂಬ ಸೊಲ್ಲು ಸರಿಯೋ, ಇಲ್ಲವೇ ‘ಕೆಲಸ ಮಾಡದ ಹೊರತು ಹಣ ಸಿಗುವುದಿಲ್ಲ’ ಎಂಬ ಸೊಲ್ಲು ಸರಿಯೋ? ಕೆಲವರು ಮೊದಲನೆಯ ಸೊಲ್ಲು ಸರಿಯೆಂದು ಹೇಳುತ್ತಾರೆ, ಮತ್ತು ಬೇರೆ ಕೆಲವರು ಎರಡನೆಯ ಸೊಲ್ಲು ಸರಿಯೆಂದು ಹೇಳುತ್ತಾರೆ. ಇಲ್ಲಿ ‘ಹಣ ಕೊಡುವುದು’ ಎಂಬ ಒಂದು ಎಸಕಕ್ಕೆ (ಕ್ರಿಯೆಗೆ) ‘ಕೆಲಸ ಮಾಡುವುದು’ ಎಂಬ ಇನ್ನೊಂದು ಎಸಕವನ್ನು ಬೇಡಿಕೆಯಾಗಿ ಮಾಡಲಾಗಿದೆ. ಇದನ್ನೇ ‘ಕೆಲಸ ಮಾಡದಿದ್ದರೆ ಹಣ ಸಿಗುವುದಿಲ್ಲ’ ಎಂಬುದಾಗಿ ಇನ್ನೊಂದು ಬಗೆಯಲ್ಲೂ ಹೇಳಲು ಬರುತ್ತದೆ.

ಈ ಎರಡನೇ ಬಗೆಯ ಸೊಲ್ಲಿನಲ್ಲಿ ಅಲ್ಲಗಳೆಯುವ ಹುರುಳಿರುವ ‘ಮಾಡದೆ (ಇದ್ದರೆ)’ ಎಂಬ ಪದವನ್ನೇ ಬಳಸಬೇಕಾಗುತ್ತದೆ; ಆದರೆ, ಅದರೊಂದಿಗೆ ‘ಹೊರತು’ ಎಂಬುದನ್ನು ಬಳಸಿರುವ ಮೊದಲನೇ ಬಗೆಯ ಸೊಲ್ಲಿನಲ್ಲಿ ಅಲ್ಲಗಳೆಯುವ ಹುರುಳಿರುವ ‘ಮಾಡದ’ ಎಂಬುದನ್ನು ಬಳಸಬೇಕೇ, ಇಲ್ಲವೇ ‘ಮಾಡಿದ’ ಎಂಬುದನ್ನು ಬಳಸಬೇಕೇ ಎಂಬುದೇ ಇಲ್ಲಿ ನಮ್ಮ ಮುಂದಿರುವ ಕೇಳ್ವಿ.

‘ಹೊರತು’ ಎಂಬ ಪದಕ್ಕೆ ಅಲ್ಲಗಳೆಯುವ ಹುರುಳಿದೆ; ಹಾಗಾಗಿ, ಅದರೊಂದಿಗೆ ‘ಮಾಡದ’ ಎಂಬ ಇನ್ನೊಂದು ಅಲ್ಲಗಳೆಯುವ ಹುರುಳಿರುವ ಪದವನ್ನು ಬಳಸಿದಲ್ಲಿ, ಒಂದು ಅಲ್ಲಗಳೆತ ಇನ್ನೊಂದು ಅಲ್ಲಗಳೆತವನ್ನು ಹೊಡೆದು ಹಾಕುವುದರಿಂದ, ಒಟ್ಟಾರೆಯಾಗಿ ಅಲ್ಲಗಳೆಯುವ ಹುರುಳು ಇಲ್ಲವಾಗುತ್ತದೆ, ಮತ್ತು ಈ ಕಾರಣಕ್ಕಾಗಿ ‘ಮಾಡದ ಹೊರತು’ ಎಂಬುದರ ಬಳಕೆ ಸರಿಯಲ್ಲ ಎಂಬುದಾಗಿ ಮೊದಲನೆಯ ಸೊಲ್ಲೇ ಸರಿ ಎಂದು ಹೇಳುವವರು ಅದಕ್ಕೆ ಉನ್ನೋಜೆಯ (ತರ‍್ಕದ) ಬೆಂಬಲವನ್ನು ಕೊಡಬಹುದು.

ಆದರೆ, ಇಲ್ಲಿ ತೊಡಕೇನೆಂದರೆ, ಸೊಲ್ಲರಿಮೆಯ ಕಟ್ಟಲೆಗಳು ಉನ್ನೋಜೆಯ ಕಟ್ಟಲೆಗಳಿಗೆ ಬೆಲೆ ಕೊಡಲೇ ಬೇಕೆಂದೇನೂ ಇಲ್ಲ. ಒಂದು ನುಡಿಯಲ್ಲಿ ಎಂತಹ ಸೊಲ್ಲು ಸರಿ ಎಂಬುದು ಎಂತಹದು ಬಳಕೆಯಲ್ಲಿದೆ ಎಂಬುದರ ಮೇಲೆ ಮಾತ್ರ ಅವಲಂಬಿಸಿರುತ್ತದೆ. ಕಿಟ್ಟೆಲ್ ಡಿಕ್ಶನರಿಯಲ್ಲಿ ಈ ಎರಡು ಬಗೆಯ ಸೊಲ್ಲುಗಳನ್ನೂ ಕೊಡಲಾಗಿದೆ; ಎಂದರೆ, ಈ ಎರಡು ಬಗೆಯ ಸೊಲ್ಲುಗಳೂ ಕನ್ನಡದಲ್ಲಿ ಬಳಕೆಯಲ್ಲಿವೆ. ಹಾಗಾಗಿ, ಎರಡೂ ಸರಿಯೆಂದೇ ಹೇಳಬೇಕಾಗುತ್ತದೆ.

ಉನ್ನೋಜೆಯ ಕಟ್ಟಲೆಗಳಿಗೂ ಸೊಲ್ಲರಿಮೆಯ ಕಟ್ಟಲೆಗಳಿಗೂ ನಡುವೆ ಹೊಂದಾಣಿಕೆಯಿಲ್ಲದಿರುವುದನ್ನು ಹಲವಾರು ಕಡೆಗಳಲ್ಲಿ ಕಾಣಬಹುದು. ‘ನಾನು ಅವನಿಗೆ ಹೊಡೆದಿದ್ದೇನೆ’ ಎಂಬುದೂ ‘ನಾನು ಅವನಿಗೆ ಹೊಡೆಯಲಿಲ್ಲವೆಂದಿಲ್ಲ’ ಎಂಬುದೂ ಉನ್ನೋಜೆಯ ಮಟ್ಟಿಗೆ ಒಂದೇ; ಆದರೆ, ಮಾತಿನಲ್ಲಿ ಅವು ಒಂದೇ ಅಲ್ಲ; ಯಾಕೆಂದರೆ, ಆ ಎರಡು ಸೊಲ್ಲುಗಳ ಹುರುಳಿನಲ್ಲಿ ವ್ಯತ್ಯಾಸವಿದೆ: ಅವುಗಳಲ್ಲಿ ಎರಡನೆಯ ಸೊಲ್ಲಿಗೆ ಮೊದಲನೆಯದು ತಿಳಿಸದಂತಹ ಕೆಲವು ಹೆಚ್ಚಿನ ಹುರುಳುಗಳಿವೆ; ‘ಹೊಡೆದಿದ್ದೇನೆ; ಆದರೆ, ಅದು ಅವನ ಒಳ್ಳೆಯದಕ್ಕೆ’ ಎಂಬುದು ಇಂತಹ ಒಂದು ಹೆಚ್ಚಿನ ಹುರುಳು.

ಅಲ್ಲಗಳೆತವನ್ನು ಒತ್ತಿಹೇಳುವುದಕ್ಕಾಗಿಯೂ ಎರಡು ಅಲ್ಲಗಳೆತಗಳನ್ನು ಒಟ್ಟಿಗೆ ಬಳಸಲಾಗುತ್ತದೆ; ‘ಬೇಡ ಬೇಡ’ ಇಲ್ಲವೇ ‘ಬೇಡವೇ ಬೇಡ’ ಎನ್ನುವುದಕ್ಕೆ ‘ಬೇಕು’ ಎಂಬ ಹುರುಳಿಲ್ಲ; ‘ಬೇಡ’ ಎಂಬುದನ್ನೇ ಒತ್ತಿಹೇಳುವ ಹುರುಳಿದೆ. ‘ಮಾಡದ ಹೊರತು’ ಎಂಬುದರ ಬಳಕೆಯಲ್ಲಿಯೂ ಇಂತಹದೇ ಎರಡು ಅಲ್ಲಗಳೆತಗಳ ಕೂಡಿಕೆ ನಡೆದಿರಬಹುದಲ್ಲವೇ?

ಹಿಂದೆ, ಈಗ, ಮತ್ತು ಮುಂದೆ ಎಂಬುದಾಗಿ ಮೂರು ಹೊತ್ತುಗಳನ್ನು ತಿಳಿಸುವ ಎಸಕ(ಕ್ರಿಯಾ)ರೂಪಗಳು ನುಡಿಗಳಲ್ಲಿರಬೇಕು ಎಂಬುದಾಗಿ ಹಿಂದಿನ ಸೊಲ್ಲರಿಗರು ಒಂದು ಉನ್ನೋಜೆಯ ಕಟ್ಟಲೆಯನ್ನು ತಮ್ಮ ಮುಂದಿರಿಸಿಕೊಂಡಿರುವ ಹಾಗೆ ಕಾಣಿಸುತ್ತದೆ; ಆದರೆ, ಕನ್ನಡದಲ್ಲಿ ‘ಇರು’ ಎಂಬ ಒಂದು ಎಸಕಪದಕ್ಕೆ ಮಾತ್ರ ‘ಇದ್ದ’, ‘ಇದ್ದಾನೆ’, ಮತ್ತು ‘ಇರುತ್ತಾನೆ’ ಎಂಬುದಾಗಿ ಮೂರು ಬಗೆಯ ಹೊತ್ತುಗಳನ್ನು ತಿಳಿಸುವ ರೂಪಗಳಿವೆ.

ಉಳಿದ ಎಸಕಪದಗಳಿಗೆಲ್ಲ ಹಿಂದಿನ ಮತ್ತು ಮುಂದಿನ ಎಸಕಗಳನ್ನು ತಿಳಿಸಬಲ್ಲ ‘ಬಂದ’ ಮತ್ತು ‘ಬರುತ್ತಾನೆ’ ಇಲ್ಲವೇ ‘ಹೋದ’ ಮತ್ತು ‘ಹೋಗುತ್ತಾನೆ’ ಎಂಬಂತಹ ಎರಡೆರಡು ಹೊತ್ತಿನ ರೂಪಗಳು ಮಾತ್ರ ಇವೆ. ಇವುಗಳಲ್ಲಿ ಎರಡನೆಯ ರೂಪಕ್ಕೆ ಈಗಿನ ಎಸಕವನ್ನು ಮಾತ್ರವಲ್ಲದೆ ಮುಂದಿನ ಎಸಕವನ್ನು ತಿಳಿಸುವ ಹುರುಳೂ ಇದೆ; ‘ನನಗೆ ಆ ರೀತಿ ಅನಿಸುತ್ತದೆ’ ಎಂಬ ಸೊಲ್ಲಿನಲ್ಲಿ ಅದು ನನ್ನಲ್ಲಿ ಈಗ ಇರುವ ಅನಿಸಿಕೆಯನ್ನು ತಿಳಿಸುತ್ತದೆ, ಮತ್ತು ‘ಅವನು ನಾಳೆ ಬರುತ್ತಾನೆ’ ಎಂಬ ಸೊಲ್ಲಿನಲ್ಲಿ ಅದು ಮುಂದೆ ನಡೆಯಲಿರುವ ಎಸಕವನ್ನು ತಿಳಿಸುತ್ತದೆ.

ನುಡಿಯಲ್ಲಿಲ್ಲದಿರುವ ಮೂರು ಹೊತ್ತುಗಳನ್ನು ಕನ್ನಡದ ಎಸಕಪದಗಳಲ್ಲಿ ಕಾಣಿಸುವುದಕ್ಕಾಗಿ ಸೊಲ್ಲರಿಗರು ‘ಬರುತ್ತಾನೆ’ ಎಂಬುದು ಈಗ ನಡೆಯುವ ಎಸಕವನ್ನು ತಿಳಿಸುತ್ತದೆ, ಮತ್ತು ‘ಬರುವನು’ ಎಂಬುದು ಮುಂದೆ ನಡೆಯಲಿರುವ ಎಸಕವನ್ನು ತಿಳಿಸುತ್ತದೆ ಎಂಬಂತಹ ಕಲ್ಪನೆಗೆ ಮೊರೆಹೋಗಿದ್ದಾರೆ. ಆದರೆ, ಉನ್ನೋಜೆಯ ಕಟ್ಟಲೆಯನ್ನು ನುಡಿಯ ಮೇಲೆ ಹೊರಿಸಲು ಹೊರಟಿರುವ ಈ ಪ್ರಯತ್ನ ನಿಜಕ್ಕೂ ತಪ್ಪಾಗಿದೆ. ಯಾಕೆಂದರೆ, ‘ಬರುತ್ತಾನೆ’ ಎಂಬುದು ಮುಂದೆ ನಡೆಯಲಿರುವ ಎಸಕವನ್ನು ತಿಳಿಸಬಲ್ಲುದು, ಮತ್ತು ‘ಬರುವನು’ ಎಂಬುದನ್ನು ಕನ್ನಡ ಬರಹಗಳಲ್ಲಿ ತುಂಬಾ ಅಪರೂಪವಾಗಿ ಬಳಸಲಾಗುತ್ತಿದ್ದು, ಅದರ ಹುರುಳಿಗೂ ‘ಬರುತ್ತಾನೆ’ ಎಂಬುದರ ಹುರುಳಿಗೂ ನಡುವಿರುವ ವ್ಯತ್ಯಾಸ ಹೊತ್ತಿನ ವ್ಯತ್ಯಾಸವೇ ಅಲ್ಲ. ಕೆಲವೆಡೆಗಳಲ್ಲಿ ಬರುವನು ಎಂಬುದಕ್ಕೆ ಬಳಕೆಯ ಹುರುಳಿದೆ.

‘ಅಕ್ಕ’ ಎಂಬ ಪದವನ್ನು ಬರಹದಲ್ಲಿ ಬಳಸುವಾಗ ‘ಅಕ್ಕಳನ್ನು’, ‘ಅಕ್ಕಳಿಗೆ’ ಎಂಬಂತಹ ರೂಪಗಳನ್ನು ಬಳಸಬೇಕೇ ಇಲ್ಲವೇ ‘ಅಕ್ಕನನ್ನು’, ‘ಅಕ್ಕನಿಗೆ’ ಎಂಬಂತಹ ರೂಪಗಳನ್ನು ಬಳಸಬೇಕೇ ಎಂಬ ವಿಶಯದಲ್ಲಿಯೂ ಹಲವರಿಗೆ ಗೊಂದಲವಿರುವ ಹಾಗೆ ಕಾಣಿಸುತ್ತದೆ; ‘ಅಕ್ಕ’ ಎಂಬ ಪದ ಒಬ್ಬ ಹೆಂಗುಸನ್ನು ಗುರುತಿಸುವ ಕಾರಣ, ಅದರ ಬಳಿಕ ನಕಾರದ ಬದಲು ಳಕಾರವನ್ನು ಬಳಸಬೇಕೆಂಬ ಅನಿಸಿಕೆಯೇ ಈ ಗೊಂದಲಕ್ಕೆ ಕಾರಣ. ಅಕಾರದಲ್ಲಿ ಕೊನೆಗೊಳ್ಳುವ ‘ಕಿರಣ’, ‘ರಮ್ಯ’ ಮೊದಲಾದ ಹೆಣ್ಣುಗುರ‍್ತಿನ ಇಂತಹ ಬೇರೆ ಪದಗಳನ್ನು ಬಳಸುವಲ್ಲೂ ಇಂತಹದೇ ಗೊಂದಲ ಕಾಣಿಸುತ್ತದೆ. ಆದರೆ, ‘ಅಮ್ಮ’ ಎಂಬ ಇನ್ನೊಂದು ಪದವನ್ನು ಬಳಸುವಲ್ಲಿ ಗೊಂದಲವಿರುವ ಹಾಗೆ ಕಾಣಿಸುವುದಿಲ್ಲ; ಯಾಕೆಂದರೆ, ಯಾರೂ ‘ಅಮ್ಮಳನ್ನು’ ಇಲ್ಲವೇ ‘ಅಮ್ಮಳಿಗೆ’ ಎಂಬಂತಹ ರೂಪಗಳನ್ನು ಬಳಸಿದ ಹಾಗೆ ಕಾಣಿಸುವುದಿಲ್ಲ.

ಅಕಾರದಲ್ಲಿ ಕೊನೆಗೊಳ್ಳುವ ಕೊಟ್ಟಹೆಸರುಗಳ ಬಳಕೆಯಲ್ಲಿ ಇಂತಹ ಗೊಂದಲ ಕಾಣಿಸಿಕೊಳ್ಳಲು ಬೇರೊಂದು ಕಾರಣವೂ ಇದೆ: ಇಂತಹ ಕೆಲವು ಹೆಸರುಗಳು ಹುಡುಗಿಯರನ್ನು ಮಾತ್ರವಲ್ಲದೆ ಹುಡುಗರನ್ನು ಗುರುತಿಸುವಲ್ಲೂ ಬಳಕೆಯಾಗುತ್ತಿದ್ದು, ‘ಕಿರಣನನ್ನು’ ಎಂಬುದು ಹುಡುಗರನ್ನು ಗುರುತಿಸಬಲ್ಲುದಾಗಿದ್ದು, ಹುಡುಗಿಯರನ್ನು ಗುರುತಿಸುವಲ್ಲಿ ಅದಕ್ಕಿಂತ ಬೇರಾಗಿರುವ ‘ಕಿರಣಳನ್ನು’ ಎಂಬುದನ್ನು ಬಳಸುವುದೇ ಸರಿಯೆಂದು ಕೆಲವರಿಗೆ ಅನಿಸಬಹುದು.

‘ಅವನನ್ನು’ ಮತ್ತು ‘ಅವಳನ್ನು’ ಎಂಬ ಪದಗಳ ನಡುವಿರುವ ವ್ಯತ್ಯಾಸವೇ ಇಂತಹ ಪದಗಳ ನಡುವೆಯೂ ಇರಬೇಕೆಂಬ ಅನಿಸಿಕೆಯೂ ಈ ರೀತಿ ‘ಅಕ್ಕಳನ್ನು’, ‘ರಮ್ಯಳನ್ನು’ ಎಂಬಂತಹ ರೂಪಗಳನ್ನು ಬಳಸುವುದಕ್ಕೆ ಕಾರಣವಿರಬಹುದು. ಆದರೆ, ಕನ್ನಡದಲ್ಲಿ ‘ಅನ್ನು’ ಎಂಬ ಪತ್ತುಗೆ (ವಿಬಕ್ತಿ) ಒಟ್ಟಿನ ಬಳಕೆಯ ಹಿಂದಿರುವ ಕಟ್ಟಲೆ ಬೇರೆಯೇ ಇದೆ: ಅಕಾರದಲ್ಲಿ ಕೊನೆಗೊಳ್ಳುವ ಪದಗಳು ಗಂಡುಗುರ‍್ತ(ಪುಲ್ಲಿಂಗ)ದವಾಗಲಿ, ಹೆಣ್ಣುಗುರ‍್ತ(ಸ್ತ್ರೀಲಿಂಗ)ದವಾಗಲಿ ಅವುಗಳ ಬಳಿಕ ‘ಅನ್ನು’ ಒಟ್ಟು ಸೇರುವ ಮೊದಲು ನಕಾರವೇ ಬರುತ್ತದಲ್ಲದೆ ಳಕಾರ ಬರುವುದಿಲ್ಲ.

ಹಲವೆಣಿಕೆಯ (ಬಹುವಚನದ) ‘ರು’ ಒಟ್ಟು ಮನುಶ್ಯರನ್ನು ಗುರುತಿಸುವ ಹುಡುಗ, ಹುಡುಗಿ, ಕುರುಡ, ಕುರುಡಿ, ಮುದುಕ ಮೊದಲಾದ ಪದಗಳೊಂದಿಗೆ ಬರುತ್ತದೆ, ಮತ್ತು ‘ಗಳು’ ಒಟ್ಟು ಮನುಶ್ಯರಿಗಿಂತ ಬೇರಾಗಿರುವ ಮರ, ಕಲ್ಲು, ಮನೆ, ಎಮ್ಮೆ, ಹಕ್ಕಿ ಮೊದಲಾದವುಗಳೊಂದಿಗೆ ಬರುತ್ತದೆ; ಆದರೆ, ಇಂತಹದೊಂದು ಕಟ್ಟಲೆಗೂ ಹೊರಪಡಿಕೆಗಳಿವೆ: ಇಕಾರ ಇಲ್ಲವೇ ಉಕಾರದಲ್ಲಿ ಕೊನೆಗೊಳ್ಳುವ ಗಂಡುಗುರ‍್ತದ ಪದಗಳ ಬಳಿಕ, ಮತ್ತು ಉಕಾರದಲ್ಲಿ ಕೊನೆಗೊಳ್ಳುವ ಹೆಣ್ಣುಗುರ‍್ತದ ಪದಗಳ ಬಳಿಕ ‘ಗಳು’ ಎಂಬುದೇ ಬರುತ್ತದೆ (ಕಿಡಿಗೇಡಿಗಳು, ಎದುರಾಳಿಗಳು, ಗುರುಗಳು, ಮುಂದಾಳುಗಳು; ಹೆಣ್ಣಾಳುಗಳು, ಹೆಣ್ಣುಗಳು). ಇಲ್ಲಿಯೂ ಕೂಡ, ಉನ್ನೋಜೆಯ ಕಟ್ಟಲೆಗಳಿಗೆ ಎಡೆಯಿಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter