Posts Tagged ‘ತೆಲುಗು’

ದ್ರಾವಿಡ ನುಡಿಗಳು ಅಯ್ದಲ್ಲ, ಇಪ್ಪತ್ತಾರು!

ನುಡಿಯರಿಮೆಯ ಇಣುಕುನೋಟ – 35

ಕನ್ನಡ, ತಮಿಳು, ಮಲಯಾಳ, ತೆಲುಗು ಮತ್ತು ತುಳು ಎಂಬುದಾಗಿ ಒಟ್ಟು ದ್ರಾವಿಡ ನುಡಿಗಳ ಎಣಿಕೆ ಅಯ್ದು ಮಾತ್ರ (ಪಂಚದ್ರಾವಿಡ) ಎಂಬ ಅನಿಸಿಕೆ ಇವತ್ತಿಗೂ ಹಲವು ಜನರಲ್ಲಿದೆ. ಕೆಲವರು ಈ ಪಟ್ಟಿಯಲ್ಲಿ ತುಳುವಿನ ಬದಲು ಮರಾಟಿಯನ್ನು ಸೇರಿಸುತ್ತಾರೆ; ಆದರೆ, ಮರಾಟಿ ದ್ರಾವಿಡ ನುಡಿಯಲ್ಲ, ಇಂಡೋ-ಆರ‍್ಯನ್ ನುಡಿ.

ಕರ‍್ನಾಟಕದಲ್ಲೇನೇ ಕೊಡಗು ಎಂಬ ಇನ್ನೊಂದು ದ್ರಾವಿಡ ನುಡಿ ಇರುವುದನ್ನು ಈ ದ್ರಾವಿಡ ನುಡಿಗಳ ಪಟ್ಟಿಯನ್ನು ಕೊಡುವವರು ಮರೆತಂತಿದೆ. ದಕ್ಶಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೊರಗ ಎಂಬ ಮತ್ತೊಂದು ದ್ರಾವಿಡ ನುಡಿಯೂ ಬಳಕೆಯಲ್ಲಿದೆ. ಇದಲ್ಲದೆ, ನೀಲಗಿರಿಯ ಗುಡ್ಡಕಾಡುಗಳಲ್ಲಿ ತೊದ, ಕೋತ, ಕುರುಂಬ, ಮತ್ತು ಇರುಳ ಎಂಬ ಬೇರೆಯೂ ನಾಲ್ಕು ದ್ರಾವಿಡ ನುಡಿಗಳು ಬಳಕೆಯಲ್ಲಿವೆ.

ಮೇಲಿನ ಈ ಹನ್ನೊಂದು ನುಡಿಗಳಲ್ಲಿ ತೆಲುಗು ನುಡಿಯೊಂದನ್ನು ಬಿಟ್ಟು ಉಳಿದ ಹತ್ತು ನುಡಿಗಳನ್ನು ತೆಂಕುದ್ರಾವಿಡ ಎಂಬ ನುಡಿಗುಂಪಿನಲ್ಲಿ ಸೇರಿಸಿ ಹೇಳಲಾಗುತ್ತದೆ, ಮತ್ತು ತೆಲುಗು ನುಡಿಯನ್ನು ಬೇರೆ ಏಳು ನುಡಿಗಳೊಂದಿಗೆ ಸೇರಿಸಿ ತೆಂಕು-ನಡುದ್ರಾವಿಡವೆಂಬ ಬೇರೊಂದು ನುಡಿಗುಂಪನ್ನು ಮಾಡಲಾಗುತ್ತದೆ. ಈ ತೆಂಕು-ನಡುದ್ರಾವಿಡ ಗುಂಪಿನಲ್ಲಿ ತೆಲುಗು ನುಡಿಯಲ್ಲದೆ ಸುಮಾರು 24 ಲಕ್ಶ ಜನರ ಮಾತಾಗಿರುವ ಗೋಂಡಿ ಮತ್ತು ಆರೂವರೆ ಲಕ್ಶ ಜನರ ಮಾತಾಗಿರುವ ಕೂಯಿ ನುಡಿಗಳು ಬರುತ್ತವೆ. ಉಳಿದಂತೆ, ಕುವಿ, ಕೊಂಡ, ಪೆಂಗೊ, ಮತ್ತು ಮಂಡ ಎಂಬ ನುಡಿಗಳೂ ಈ ಗುಂಪಿನಲ್ಲಿ ಸೇರುತ್ತವೆ.

ಕೋಲಾಮಿ, ನಾಯ್ಕಿ, ಪಾರ‍್ಜಿ, ಒಲ್ಲಾರಿ, ಮತ್ತು ಗದಬ ಎಂಬ ಅಯ್ದು ನುಡಿಗಳನ್ನು ನಡುದ್ರಾವಿಡವೆಂಬ ಬೇರೆಯೇ ಒಂದು ನುಡಿಗುಂಪಿನಲ್ಲಿ ಸೇರಿಸಲಾಗುತ್ತದೆ. ಈ ನುಡಿಗಳನ್ನಾಡುವವರು ಮುಕ್ಯವಾಗಿ ಆಂದ್ರಪ್ರದೇಶ, ಮದ್ಯಪ್ರದೇಶ ಮತ್ತು ಒರಿಸ್ಸಾಗಳಲ್ಲಿ ನೆಲೆಸಿದ್ದಾರೆ. ಇದಲ್ಲದೆ, ಕುಡುಕ್, ಮಾಲ್ಟೋ, ಮತ್ತು ಬ್ರಾಹುಯೀ ಎಂಬ ಬೇರೆ ಮೂರು ನುಡಿಗಳನ್ನು ಬಡಗುದ್ರಾವಿಡವೆಂಬ ಇನ್ನೊಂದು ನುಡಿಗುಂಪಿನಲ್ಲಿ ಸೇರಿಸಲಾಗುತ್ತದೆ. ಈ ಮೂರು ನುಡಿಗಳಲ್ಲಿ ಕುಡುಕ್ ನುಡಿಯನ್ನು ಸುಮಾರು 20 ಲಕ್ಶ ಮಂದಿ ಆಡುತ್ತಿದ್ದು, ಇವರು ಮುಕ್ಯವಾಗಿ ಒರಿಸ್ಸಾದಲ್ಲಿ ನೆಲೆಸಿದ್ದಾರೆ; ನೇಪಾಳದ ದನಗರ‍್ ಜನಾಂಗದವರೂ ಇದೇ ನುಡಿಯನ್ನಾಡುತ್ತಾರೆ. ಮಾಲ್ಟೋ ನುಡಿಯನ್ನಾಡುವ ಒಂದು ಲಕ್ಶ ಮಂದಿ ಬಿಹಾರದ ರಾಜಮಹಲ್ ಗುಡ್ಡಗಳಲ್ಲಿ ನೆಲೆಸಿದ್ದಾರೆ, ಮತ್ತು ಬ್ರಾಹುಯೀ ನುಡಿಯನ್ನಾಡುವ 20 ಲಕ್ಶ ಮಂದಿ ಮುಕ್ಯವಾಗಿ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನೆಲೆಸಿದ್ದಾರೆ; ಅಪ್ಗಾನಿಸ್ತಾನ ಮತ್ತು ಇರಾನ್ನಲ್ಲೂ ಬ್ರಾಹುಯೀ ನುಡಿಯನ್ನಾಡುವವರು ಹಲವರಿದ್ದಾರೆ.

ಈ ರೀತಿ, ನಾಲ್ಕು ಮುಕ್ಯ ಗುಂಪುಗಳಲ್ಲಿ ಸೇರುವ ದ್ರಾವಿಡ ನುಡಿಗಳ ಒಟ್ಟು ಎಣಿಕೆ ಇಪ್ಪತ್ತಾರು ಎಂದು ಹೇಳಬಹುದು. ಆದರೆ, ಹಲವೆಡೆಗಳಲ್ಲಿ ಯಾವುದನ್ನು ಒಂದು ನುಡಿ ಎಂದು ಕರೆಯಬೇಕು, ಮತ್ತು ಯಾವುದನ್ನು ಬರಿಯ ಒಳನುಡಿ ಎಂದು ತಿಳಿಯಬೇಕು ಎಂಬುದನ್ನು ಕಚಿತವಾಗಿ ತೀರ‍್ಮಾನಿಸಲು ಬರುವುದಿಲ್ಲ. ಎತ್ತುಗೆಗಾಗಿ, ನೀಲಗಿರಿಯಲ್ಲಿ ಬಳಕೆಯಲ್ಲಿರುವ ಬಡಗ ಜನರ ಮಾತನ್ನು ಕೆಲವರು ಕನ್ನಡದ ಒಳನುಡಿಯೆಂದು ಕರೆಯುತ್ತಾರೆ, ಮತ್ತು ಬೇರೆ ಕೆಲವರು ಅದೊಂದು ಬೇರೆಯೇ ನುಡಿಯೆಂದೂ ಹೇಳುತ್ತಾರೆ. ಹಾಗಾಗಿ, ಒಟ್ಟು ದ್ರಾವಿಡ ನುಡಿಗಳು ಎಶ್ಟಿವೆ ಎಂಬುದನ್ನು ಕಚಿತವಾಗಿ ಹೇಳಲು ಬರುವುದಿಲ್ಲ; ಹಾಗಿದ್ದರೂ, ಅದು ಅಯ್ದಕ್ಕಿಂತ ಹೆಚ್ಚು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ.

ಹಿಂದಿನ ಒಂದು ಕಾಲದಲ್ಲಿ ದ್ರಾವಿಡರು ಬಾರತದಲ್ಲಿ ಎಲ್ಲೆಡೆಗಳಲ್ಲೂ ನೆಲೆಸಿದ್ದಿರಬೇಕು, ಮತ್ತು ಇಂಡೋ-ಆರ‍್ಯನ್ ನುಡಿಗಳನ್ನಾಡುವ ಜನರು ಬಡಗು ನಾಡುಗಳಿಂದ ಬಾರತಕ್ಕೆ ವಲಸೆ ಬಂದ ಮೇಲೆ, ಹಲವಾರು ಮಂದಿ ದ್ರಾವಿಡ ನುಡಿಗಳನ್ನಾಡುವ ಜನರು ತಮ್ಮ ನುಡಿಗಳನ್ನು ಕಳೆದುಕೊಂಡು ಮರಾಟಿ, ಗುಜರಾತಿ, ಒಡಿಯಾ, ಹಿಂದಿ ಮೊದಲಾದ ಇಂಡೋ-ಆರ‍್ಯನ್ ನುಡಿಗಳನ್ನಾಡುವಂತಾಗಿರಬೇಕೆಂದು ಹಲವು ಮಂದಿ ಅರಿವಿಗರು ತೀರ‍್ಮಾನಕ್ಕೆ ಬಂದಿದ್ದಾರೆ. ಬಾರತದಲ್ಲಿ ಬಳಕೆಯಲ್ಲಿರುವ ಈ ಇಂಡೋ-ಆರ‍್ಯನ್ ನುಡಿಗಳು ಹಲವು ವಿಶಯಗಳಲ್ಲಿ ದ್ರಾವಿಡ ನುಡಿಗಳನ್ನು ಹೋಲುತ್ತಿರುವುದಕ್ಕೆ ಅವುಗಳ ಆಡುಗರು ಮೊದಲಿಗೆ ದ್ರಾವಿಡ ನುಡಿಗಳನ್ನಾಡುತ್ತಿದ್ದುದೇ ಕಾರಣವಿರಬೇಕೆಂದೂ ತಿಳಿಯಲಾಗುತ್ತಿದೆ.

ಬಾರತದಲ್ಲಿ ಬಳಕೆಯಲ್ಲಿರುವ ಹಿಂದಿ, ಮರಾಟಿ, ಗುಜರಾತಿ ಮೊದಲಾದ ಇಂಡೋ-ಆರ‍್ಯನ್ ನುಡಿಗಳನ್ನು ಯುರೋಪಿನ ಇಂಗ್ಲಿಶ್, ಜರ‍್ಮನ್, ಸ್ಪೇನಿಶ್, ಇಟೇಲಿಯನ್ ಮೊದಲಾದ ನುಡಿಗಳೊಂದಿಗೆ ಸಂಬಂದಿಸಲು ಸಾದ್ಯವಾಗಿದೆ; ಆದರೆ, ದ್ರಾವಿಡ ನುಡಿಗಳನ್ನು ಆ ರೀತಿ ಬೇರೆ ಯಾವ ನುಡಿಗಳೊಂದಿಗೂ ಎಲ್ಲರಿಗೂ ಒಪ್ಪಿಗೆಯಾಗುವಂತೆ ಇದುವರೆಗೆ ಸಂಬಂದಿಸಲು ಸಾದ್ಯವಾಗಿಲ್ಲ. ಹಾಗಾಗಿ, ಇಂಡೋ-ಆರ‍್ಯನ್ ನುಡಿಗಳು ಬಾರತಕ್ಕೆ ಹೊರಗಿನಿಂದ ಬಂದುವೆಂದು ಹೇಳಲು ಸಾದ್ಯವಾಗುವಂತೆ ದ್ರಾವಿಡ ನುಡಿಗಳು ಹೊರಗಿನಿಂದ ಬಂದುವೆಂದು ಹೇಳಲು ಸಾದ್ಯವಾಗುವುದಿಲ್ಲ.

ನುಡಿಗಳ ಎಣಿಕೆಯ ಕುರಿತು ಮಾತನಾಡುವಾಗ ಇನ್ನೊಂದು ಸಂಶಯವೂ ಹಲವರನ್ನು ಕಾಡುತ್ತದೆ; ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳ ಎಂಬ ನಾಲ್ಕು ನುಡಿಗಳಿಗೆ ಅವುಗಳದೇ ಆದ ಲಿಪಿಯಿದೆ; ಆದರೆ, ಉಳಿದವುಗಳಲ್ಲಿ ಯಾವುದಕ್ಕೂ ಅದರದೇ ಆದ ಲಿಪಿಯಿಲ್ಲ (ಇತ್ತೀಚೆಗೆ ಅವುಗಳಲ್ಲಿ ಕೆಲವಕ್ಕೆ ಲಿಪಿಗಳನ್ನು ಅಳವಡಿಸಲಾಗಿದೆ). ಲಿಪಿಯಿಲ್ಲದ ನುಡಿಗಳನ್ನು ಲಿಪಿಯಿರುವವುಗಳೊಂದಿಗೆ ಸರಿದೂಗಿಸಬಹುದೇ ಎಂಬುದೇ ಈ ಸಂಶಯ. ಅಯ್ದನೆಯ ದ್ರಾವಿಡ ನುಡಿಯಾಗಿ ಕೆಲವರು ತುಳುವಿನ ಬದಲು ಮರಾಟಿಯನ್ನು ಹೆಸರಿಸುತ್ತಿರುವುದಕ್ಕೆ ಇದೇ ಕಾರಣವಿರಬಹುದು.

ಆದರೆ, ನುಡಿಗಳ ಎಣಿಕೆಗೂ ಅವಕ್ಕೆ ಲಿಪಿಯಿದೆಯೇ, ಎಂದರೆ ಅವನ್ನು ಬರಹಕ್ಕೆ ಇಳಿಸಲಾಗಿದೆಯೇ ಎಂಬುದಕ್ಕೂ ನಡುವೆ ಯಾವ ಸಂಬಂದವೂ ಇಲ್ಲ. ಮುಕ್ಯವಾಗಿ, ಎರಡು ನುಡಿಗಳ ನಡುವೆ ವ್ಯತ್ಯಾಸ ಎಶ್ಟಿದೆ ಎಂಬುದರ ಮೇಲೆ ಅವೆರಡು ಒಂದೇ ನುಡಿಯ ಒಳನುಡಿಗಳೇ ಇಲ್ಲವೇ ಬೇರೆ ಬೇರೆ ನುಡಿಗಳೇ ಎಂಬುದನ್ನು ತೀರ‍್ಮಾನಿಸಲಾಗುತ್ತದೆ. ಇದಲ್ಲದೆ, ಇಂಡೋ-ಆರ‍್ಯನ್, ದ್ರಾವಿಡ ಎಂಬಂತಹ ನುಡಿಗಳ ಗುಂಪಿಸುವಿಕೆಗೂ ಅವು ಬಳಸುವ ಲಿಪಿಗಳಿಗೂ ನಡುವೆ ಯಾವ ಸಂಬಂದವೂ ಇಲ್ಲ. ನಿಜಕ್ಕೂ ಬಾರತದ ನುಡಿಗಳು ಬಳಸುವ ಲಿಪಿಗಳಲ್ಲಿ ಹೆಚ್ಚಿನವೂ ಬ್ರಾಹ್ಮೀ ಲಿಪಿ ಎಂಬ ಒಂದೇ ಮೂಲದಿಂದ ಬಂದಿವೆ.

ಹಲವು ನುಡಿಗಳು ಒಂದೇ ಲಿಪಿಯನ್ನು ಬಳಸುತ್ತಿರಬಲ್ಲುವು, ಮತ್ತು ಒಂದೇ ನುಡಿ ಹಲವು ಲಿಪಿಗಳನ್ನು ಬಳಸುತ್ತಿರಬಲ್ಲುದು: ಮರಾಟಿ, ಹಿಂದಿ, ಮತ್ತು ನೇಪಾಲಿ ನುಡಿಗಳು ಬಳಸುವ ಲಿಪಿಗಳ ನಡುವೆ ಹೆಚ್ಚಿನ ವ್ಯತ್ಯಾಸವೇನಿಲ್ಲ, ಮತ್ತು ತೆಲುಗು ಹಾಗೂ ಕನ್ನಡ ಲಿಪಿಗಳು ಹದಿನೆಂಟನೇ ಶತಮಾನದ ವರೆಗೆ ಒಂದೇ ಲಿಪಿಯಾಗಿದ್ದುವು. ಕೊಂಕಣಿ ನುಡಿ ರೋಮನ್, ನಾಗರಿ, ಮತ್ತು ಕನ್ನಡ ಲಿಪಿಗಳನ್ನು ಬಳಸುತ್ತಿದೆ, ಮತ್ತು ಸಿಂದಿ ನುಡಿ ನಾಗರಿ ಮತ್ತು ಪರ‍್ಸೋ-ಅರೇಬಿಕ್ ಲಿಪಿಗಳನ್ನು ಬಳಸುತ್ತಿದೆ. ಇದಲ್ಲದೆ, ಮಣಿಪುರಿ, ಮಲಯಾಳ ಮೊದಲಾದ ಬೇರೆ ಕೆಲವು ನುಡಿಗಳು ತಮ್ಮಲ್ಲಿ ಬಳಕೆಯಲ್ಲಿದ್ದ ಲಿಪಿಯನ್ನು ಬಿಟ್ಟುಕೊಟ್ಟು ಬೇರೆ ಲಿಪಿಯನ್ನು ಬಳಸತೊಡಗಿವೆ. ಹಾಗಾಗಿ, ನುಡಿಗಳು ಲಿಪಿಯನ್ನು ಬಳಸುವುದು ಒಂದು ಮಟ್ಟಿಗೆ ಜನರು ಉಡುಪನ್ನು ಬಳಸುವ ಹಾಗೆ ಎನ್ನಬಹುದು.

ಆದರೆ, ದ್ರಾವಿಡ ಮತ್ತು ಇಂಡೋ-ಆರ‍್ಯನ್ ಎಂಬ ನುಡಿಗಳ ವಿಂಗಡನೆಗೆ ಅವುಗಳ ನಡುವಿನ ವ್ಯತ್ಯಾಸವೇ ಮುಕ್ಯ ಆದಾರವಾಗಿದೆ: ಎರಡು ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ಹೇಳಬೇಕಿದ್ದಲ್ಲಿ, ಅವೆರಡರ ನಡುವೆ ಕಾಣಿಸುವ ವ್ಯತ್ಯಾಸಗಳಲ್ಲಿ ಹೆಚ್ಚಿನವೂ ಅವುಗಳ ಹಿನ್ನಡವಳಿಯಲ್ಲಿ ನಡೆದ ಮಾರ‍್ಪಾಡುಗಳಿಂದಾಗಿ ಮೂಡಿಬಂದಿವೆಯೆಂಬುದನ್ನು ತೋರಿಸಿಕೊಡಲು ಸಾದ್ಯವಾಗಬೇಕು. ಮೇಲೆ ಪಟ್ಟಿಮಾಡಿದ ಇಪ್ಪತ್ತಾರು ದ್ರಾವಿಡ ನುಡಿಗಳ ನಡುವೆ ಕಾಣಿಸುವ ವ್ಯತ್ಯಾಸಗಳಲ್ಲಿ ಹೆಚ್ಚಿನವನ್ನೂ ಈ ರೀತಿ ಅವುಗಳ ಹಿನ್ನಡವಳಿಯಲ್ಲಿ ನಡೆದಿವೆಯೆಂದು ಹೇಳಹುದಾದ ಮಾರ‍್ಪಾಡುಗಳ ಮೂಲಕ ವಿವರಿಸಲು ಸಾದ್ಯವಾಗಿದೆ. ಹಾಗಾಗಿ, ಅವನ್ನೆಲ್ಲ ಒಟ್ಟಿಗೆ ಒಂದೇ ನುಡಿಕುಟುಂಬದಲ್ಲಿ ಗುಂಪಿಸಲಾಗಿದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಎಣಿಕೆಯಲ್ಲೂ ಹಲವು ಬಗೆಗಳಿವೆ

ನುಡಿಯರಿಮೆಯ ಇಣುಕುನೋಟ – 28

ಕನ್ನಡದಲ್ಲಿ ಎಣಿಸುವುದಕ್ಕೂ ಬೇರೆ ನುಡಿಗಳಲ್ಲಿ ಎಣಿಸುವುದಕ್ಕೂ ನಡುವೆ ಹಲವು ಬಗೆಯ ವ್ಯತ್ಯಾಸಗಳಿವೆ; ಕನ್ನಡದಲ್ಲಿ ಎಣಿಕೆಪದಗಳನ್ನು ಉಂಟುಮಾಡಲು ಮುಕ್ಯವಾಗಿ ಎರಡು ಬಗೆಯ ಹೊಲಬುಗಳನ್ನು ಬಳಸಲಾಗುತ್ತದೆ: ಒಂದು ಎಣಿಕೆಪದವನ್ನು ನೇರವಾಗಿ ಇನ್ನೊಂದು ಎಣಿಕೆಪದದೊಂದಿಗೆ ಸೇರಿಸಿ ಹೇಳುವುದು ಒಂದು ಹೊಲಬು; ಇದನ್ನು ಇಪ್ಪತ್ತು (ಎರಡು+ಹತ್ತು), ಇನ್ನೂರು (ಎರಡು+ನೂರು) ಎಂಬಂತಹ ಎಣಿಕೆಪದಗಳಲ್ಲಿ ಕಾಣಬಹುದು. ಒಂದು ಎಣಿಕೆಪದದ ಪತ್ತುಗೆ(ಸಂಬಂದ)ರೂಪವನ್ನು ಇನ್ನೊಂದು ಎಣಿಕೆಪದಕ್ಕೆ ಸೇರಿಸಿ ಹೇಳುವುದು ಇನ್ನೊಂದು ಹೊಲಬು; ಇದನ್ನು ಇಪ್ಪತ್ತಾರು (ಇಪ್ಪತ್ತರ+ಆರು), ನೂರ ಹತ್ತು (ನೂರರ+ಹತ್ತು) ಎಂಬಂತಹ ಎಣಿಕೆಪದಗಳಲ್ಲಿ ಕಾಣಬಹುದು.

ಇವುಗಳಲ್ಲಿ ಮೊದಲನೆಯದನ್ನು ಪೆಚ್ಚಿಸುವ (ಗುಣಿಸುವ) ಹುರುಳಿನಲ್ಲೂ, ಎರಡನೆಯದನ್ನು ಕೂಡಿಸುವ ಹುರುಳಿನಲ್ಲೂ ಬಳಸಲಾಗುತ್ತದೆ. ಆದರೆ, ಈ ಕಟ್ಟಲೆಗೆ ಒಂದು ಹೊರಪಡಿಕೆಯೂ ಇದೆ: ಒಂಬತ್ತು (ಒಂದು+ಹತ್ತು) ಎಂಬುದರಲ್ಲಿ ಮೊದಲನೆಯ ಹೊಲಬು ಬಳಕೆಯಾಗಿದೆಯಾದರೂ ಅದಕ್ಕೆ ‘ಹತ್ತರಿಂದ ಒಂದು ಕಡಿಮೆ’ ಎಂಬ ಕಳೆತದ ಹುರುಳಿದೆ.

ಒಂದರಿಂದ ಎಂಟರ ವರೆಗಿನ ಎಣಿಕೆಪದಗಳು, ಮತ್ತು ಹತ್ತು, ನೂರು ಎಂಬ ಪದಗಳು ಒತ್ತೆ ಪದಗಳು; ಹನ್ನೊಂದರಿಂದ ಹತ್ತೊಂಬತ್ತರ ವರೆಗಿನ ಪದಗಳಲ್ಲಿ ಹತ್ತು ಪದದ ಪತ್ತುಗೆರೂಪಕ್ಕೆ ಒಂದರಿಂದ ಒಂಬತ್ತರವರೆಗಿನ ಪದಗಳನ್ನು ಸೇರಿಸಲಾಗಿದೆ. ಅದಕ್ಕೆ ಮೇಲೆ, ಇಪ್ಪತ್ತು ಎಂಬುದರಲ್ಲಿ ಎರಡು (ಇಪ್) ಪದಕ್ಕೆ ಹತ್ತು (ಪತ್ತು) ಪದವನ್ನು ನೇರವಾಗಿ ಸೇರಿಸಲಾಗಿದೆ. ಇದೇ ರೀತಿಯಲ್ಲಿ, ಮುಂದೆಯೂ ಇಪ್ಪತ್ತರಿಂದ ಇಪ್ಪತ್ತೊಂಬತ್ತರ ವರೆಗಿನ ಪದಗಳಲ್ಲಿ ಇಪ್ಪತ್ತು ಪದದ ಪತ್ತುಗೆರೂಪಕ್ಕೆ ಒಂದರಿಂದ ಒಂಬತ್ತರ ವರೆಗಿನ ಪದಗಳನ್ನು ಸೇರಿಸಲಾಗಿದೆ (ಇಪ್ಪತ್ತೊಂದು, ಇಪ್ಪತ್ತೆರಡು), ಮತ್ತು ಮೂವತ್ತು ಪದದಲ್ಲಿ ಮೂರು ಪದಕ್ಕೆ ಹತ್ತು (ವತ್ತು) ಪದವನ್ನು ನೇರವಾಗಿ ಸೇರಿಸಲಾಗಿದೆ.

ಮುಂದೆ ತೊಂಬತ್ತೊಂಬತ್ತರ ವರೆಗೂ ಇದೇ ರೀತಿಯಲ್ಲಿ ಈ ಎರಡು ಹೊಲಬುಗಳ ಬಳಕೆಯಾಗಿದೆ: ಮೊದಲ ಒಂಬತ್ತು ಎಣಿಕೆಪದಗಳನ್ನು ಪತ್ತುಗೆರೂಪದ ಮೂಲಕ ಉಂಟುಮಾಡಲಾಗಿದೆ, ಮತ್ತು ಹತ್ತನೆಯ ಪದವನ್ನು ನಾಲ್ಕು, ಅಯ್ದು, ಆರು ಮೊದಲಾದ ಪದಗಳಿಗೆ ನೇರವಾಗಿ ಹತ್ತು ಪದವನ್ನು ಸೇರಿಸಿ ಉಂಟುಮಾಡಲಾಗಿದೆ. ನೂರು ಎಂಬುದನ್ನು ತಿಳಿಸಲು ಮಾತ್ರ ಒತ್ತೆ ಪದದ ಬಳಕೆಯಾಗಿದೆ.

ನೂರರ ಬಳಿಕವೂ ಇವೇ ಎರಡು ಹೊಲಬುಗಳನ್ನು ಬಳಸಲಾಗಿದೆ: ನೂರ ಒಂದು, ನೂರ ಎರಡು, … ನೂರ ಹತ್ತು, … ನೂರ ಮೂವತ್ತೆಂಟು … ಎಂಬುದಾಗಿ ಒಟ್ಟು ನೂರು ಎಣಿಕೆಗಳನ್ನು ನೂರು ಎಂಬ ಪದದ ಪತ್ತುಗೆ ರೂಪಕ್ಕೆ ಒಂದರಿಂದ ತೊಂಬತ್ತೊಂಬತ್ತರ ವರೆಗಿನ ಪದಗಳನ್ನು ಸೇರಿಸಿ ಹೇಳಲಾಗಿದೆ, ಮತ್ತು ಮುಂದಿನ ಎಣಿಕೆಪದಗಳನ್ನು ಎರಡು, ಮೂರು ಮೊದಲಾದ ಒಂಬತ್ತು ಪದಗಳಿಗೆ ನೇರವಾಗಿ ನೂರು ಪದವನ್ನು ಸೇರಿಸಿ ಇನ್ನೂರು, ಮುನ್ನೂರು ಮೊದಲಾದ ಪದಗಳನ್ನು ಉಂಟುಮಾಡಲಾಗಿದೆ. ಇದು ಕನ್ನಡತಮಿಳುತೆಲುಗು ಮೊದಲಾದ ದ್ರಾವಿಡ ನುಡಿಗಳಲ್ಲಿ ಬಳಕೆಯಾಗುವ ಎಣಿಕೆಯ ಹೊಲಬಾಗಿದೆ.

ಈ ಎಣಿಕೆಪದಗಳಲ್ಲಿ ಬರುವ ಪದಗಳ ಓರಣ ಅಂಕೆಗಳಲ್ಲಿ ಕಾಣಿಸುವ ಓರಣವನ್ನೇ ಹೋಲುತ್ತದೆ; ಎತ್ತುಗೆಗಾಗಿ, ‘ಮೂವತ್ತೆಂಟು’ ಎಂಬುದರಲ್ಲಿ ‘3(ಹತ್ತು)8’ ಎಂಬ ಓರಣವಿದೆ, ಮತ್ತು ಅದನ್ನು 38 ಎಂಬುದಾಗಿ ಅಂಕೆಯಲ್ಲಿ ಬರೆಯುವಾಗಲೂ 3 ಮೊದಲು ಬರುತ್ತದೆ, ಮತ್ತು 8 ಬಳಿಕ ಬರುತ್ತದೆ. ಇದೇ ರೀತಿಯಲ್ಲಿ, ‘ಎರಡು ಸಾವಿರದ ಮುನ್ನೂರ ನಲುವತ್ತಾರು’ ಎಂಬುದರಲ್ಲಿ ಕಾಣಿಸುವ ‘2(ಸಾವಿರ)3(ನೂರು)4(ಹತ್ತು)6’ ಎಂಬ ಓರಣವೇ 2346 ಎಂಬ ಅಂಕೆಯಲ್ಲೂ ಕಾಣಿಸುತ್ತದೆ.

ಆದರೆ, ಸಂಸ್ಕ್ರುತದಲ್ಲಿ ಮತ್ತು ಅದರಿಂದ ಬೆಳೆದು ಬಂದಿರುವ ಹಿಂದಿಮರಾಟಿ ಮೊದಲಾದ ಇಂಡೋ-ಆರ‍್ಯನ್ ನುಡಿಗಳಲ್ಲಿ ಎಣಿಕೆಯ ಪದಗಳನ್ನು ಬೇರೆಯೇ ಬಗೆಯಲ್ಲಿ ಕಟ್ಟಲಾಗಿದ್ದು, ಅವಕ್ಕೂ ಅಂಕೆಗಳಿಗೂ ನಡುವೆ ಇಂತಹ ಹೊಂದಾಣಿಕೆ ಕಾಣಿಸುವುದಿಲ್ಲ. ಎತ್ತುಗೆಗಾಗಿ, ಹಿಂದಿಯಲ್ಲಿ ‘ಅಡ್ತೀಸ್’ ಎಂಬ ಎಣಿಕೆಪದದಲ್ಲಿ ‘8-3(ಹತ್ತು)’ ಎಂಬ ಓರಣವಿದೆ; ಈ ಓರಣ 38 ಎಂಬ ಅಂಕೆಯಲ್ಲಿರುವ ಓರಣಕ್ಕಿಂತ ಬೇರಾಗಿದೆ; ಸಂಸ್ಕ್ರುತದಲ್ಲೂ ಎಪ್ಪತ್ತಯ್ದು ಎಂಬ ಹುರುಳನ್ನು ಕೊಡುವ ‘ಪಂಚಸಪ್ತತಿ’ ಎಂಬ ಎಣಿಕೆಪದದಲ್ಲಿ 5-7(ಹತ್ತು) ಎಂಬ ಓರಣವಿದ್ದು, ಅದು 75 ಎಂಬ ಅಂಕೆಯಲ್ಲಿರುವ ಓರಣಕ್ಕಿಂತ ಬೇರಾಗಿದೆ.

ಕನ್ನಡ ಮತ್ತು ಸಂಸ್ಕ್ರುತಗಳೆರಡರಲ್ಲೂ ಹತ್ತರ ಹೊಲಬು ಬಳಕೆಯಲ್ಲಿದೆ. ಆದರೆ, ಬೇರೆ ಕೆಲವು ನುಡಿಗಳಲ್ಲಿ ಬೇರೆಯೇ ಬಗೆಯ ಹೊಲಬುಗಳು ಬಳಕೆಯಾಗುತ್ತವೆ. ಅಸ್ಸಾಮಿನಲ್ಲಿ ವಾಸಿಸುವ ಕಸಾರಿ ಜನಾಂಗದವರ ಬೋಡೊ (ಇಲ್ಲವೇ ಬೋರೊ) ಎಂಬ ನುಡಿಯಲ್ಲಿ ಎಣಿಕೆಯನ್ನು ನಾಲ್ಕರ ಗುಂಪುಗಳಲ್ಲಿ ಮಾಡಲಾಗುತ್ತದೆ. ಈ ನುಡಿಯಲ್ಲಿ ಒಂದರಿಂದ ನಾಲ್ಕರ ವರೆಗೆ ಎಣಿಸಿ, ಮುಂದಕ್ಕೆ ಒಂದ್ನಾಲ್ಕು ಒಂದು (ಎಂದರೆ ಐದು), ಒಂದ್ನಾಲ್ಕು ಎರಡು (ಎಂದರೆ ಆರು), ಒಂದ್ನಾಲ್ಕು ಮೂರು (ಎಂದರೆ ಏಳು), ಎರಡ್ನಾಲ್ಕು (ಎಂದರೆ ಎಂಟು) ಎಂಬುದಾಗಿ ಎಣಿಕೆ ಸಾಗುತ್ತದೆ. ಹನ್ನೊಂದು ಎನ್ನಲು ಈ ನುಡಿಯಲ್ಲಿ ಎರಡ್ನಾಲ್ಕು ಮೂರು ಎನ್ನಬೇಕು, ಮತ್ತು ಹದಿನಾಲ್ಕು ಎನ್ನಲು ಮೂರ್ನಾಲ್ಕು ಎರಡು ಎನ್ನಬೇಕು.

ಬೋಡೊ ನುಡಿಯಲ್ಲಿ ಐದಕ್ಕೂ ಒಂದು ಪದ ಇದೆಯಾದ ಕಾರಣ, ಈ ನಾಲ್ಕರ ಹೊಲಬಿನಲ್ಲಿ ಇಪ್ಪತ್ತರವರೆಗೆ ಲೆಕ್ಕ ಹಾಕಲು ಬರುತ್ತದೆ; ಅದಕ್ಕಿಂತ ಹೆಚ್ಚಿನ ಎಣಿಕೆಯನ್ನು ನಡೆಸಲು, ಅದಕ್ಕೆ ಹೊಸದೊಂದು ಹೊಲಬು ಬೇಕಾಗುತ್ತದೆ. ಇದಕ್ಕಾಗಿ ನಮ್ಮಲ್ಲಿ ನೂರರ ಹೊಲಬಿರುವಂತೆ, ಬೋಡೊ ನುಡಿಯಲ್ಲಿ ಇಪ್ಪತ್ತರ ಹೊಲಬಿದೆ. ಈ ಹೊಲಬಿನಂತೆ, ಇಪ್ಪತ್ತಾರು ಎನ್ನಲು ‘ಒಂದಿಪ್ಪತ್ತು ಒಂದ್ನಾಲ್ಕು ಎರಡು’ ಎನ್ನಬೇಕು, ಮತ್ತು ಎಪ್ಪತ್ತಮೂರು ಎನ್ನಲು ‘ಮೂರಿಪ್ಪತ್ತು ಮೂರ್ನಾಲ್ಕು ಒಂದು’ (3 x 20) + (3 x 4) + 1 ಎನ್ನಬೇಕು. ಇಂತಹ ಎಣಿಕೆ ನಮ್ಮದರಿಂದ ತೊಡಕಾದುದೆಂದು ನಮಗೆ ತೋರಬಹುದು, ಆದರೆ ಬೋಡೊ ನುಡಿಯಲ್ಲಿ ಮಾತನಾಡುವವರಿಗೆ ನಮ್ಮಲ್ಲಿರುವ ಹತ್ತರ ಹೊಲಬಿಗಿಂತ ಅವರ ನಾಲ್ಕರ ಹೊಲಬೇ ಒಳ್ಳೆಯದೆಂದು ಅನಿಸದಿರದು.

ನಮ್ಮಲ್ಲಿ ಎಣಿಕೆಯ ಪದಗಳನ್ನು ಉಂಟುಮಾಡುವಲ್ಲಿ ಹತ್ತರ ಹೊಲಬು ಬಳಕೆಯಲ್ಲಿದೆಯಾದ ಕಾರಣ, ಅದೇ ಹತ್ತರ ಹೊಲಬಿನಲ್ಲಿ ಉಂಟುಮಾಡಿರುವ ಲೀಟರ್, ರುಪಾಯಿ, ಗ್ರಾಮ್ ಮೊದಲಾದ ಅಳತೆಪದಗಳ ಬಳಕೆ ಮೊದಲಿಗಿದ್ದ ರಾತಲು, ಸೇರು, ಅಡಿ ಮೊದಲಾದವುಗಳಿಗಿಂತ ಒಳ್ಳೆಯವೆಂದು ಅನಿಸುತ್ತದೆ; ಆದರೆ, ನಾಲ್ಕರ ಹೊಲಬನ್ನು ಬಳಸುವವರಿಗೆ ಅವು ಹಿಂದಿನವಕ್ಕಿಂತ ಒಳ್ಳೆಯವೆಂದೇನೂ ಅನಿಸಬೇಕಾಗಿಲ್ಲ.

ಎಣಿಕೆಪದಗಳ ಬಳಕೆಯಲ್ಲೂ ನುಡಿಗಳ ನಡುವೆ ಹಲವು ಬಗೆಯ ವ್ಯತ್ಯಾಸಗಳನ್ನು ಕಾಣಬಹುದು: ಕನ್ನಡದಲ್ಲಿ ಎಣಿಕೆಪದಗಳನ್ನು ಮರ, ಮನೆ, ಹುಡುಗ, ಚೆಂಡು ಮೊದಲಾದ ಪದಗಳಿಗೆ ನೇರವಾಗಿ ಸೇರಿಸಲು ಬರುತ್ತದೆ (ಮೂರು ಮನೆಗಳು, ಇಪ್ಪತ್ತೊಂದು ಚೆಂಡುಗಳು); ಆದರೆ, ನೀರು, ಅಕ್ಕಿ, ಎಣ್ಣೆ, ಹಾಲು ಮೊದಲಾದ ಪದಗಳಿಗೆ ಎಣಿಕೆಪದಗಳನ್ನು ಸೇರಿಸಬೇಕಿದ್ದಲ್ಲಿ, ಮೊದಲಿಗೆ ಅವಕ್ಕೆ ಅಳತೆಯನ್ನು ತಿಳಿಸುವ ಪದಗಳನ್ನು ಸೇರಿಸಬೇಕಾಗುತ್ತದೆ (ಮೂರು ಕಿಲೋ ಅಕ್ಕಿ, ಎರಡು ಲೀಟರ್ ಹಾಲು). ಇದಕ್ಕೆ ಬದಲು, ಬೋಡೊ ನುಡಿಯಲ್ಲಿ ಯಾವ ಪದಕ್ಕೂ ಎಣಿಕೆಪದಗಳನ್ನು ನೇರವಾಗಿ ಸೇರಿಸಲು ಬರುವುದಿಲ್ಲ; ಒಂದು ಪದ ತಿಳಿಸುವ ವ್ಯಕ್ತಿ ಇಲ್ಲವೇ ವಸ್ತು ಎಂತಹದು ಎಂಬುದನ್ನು ಅಡಕವಾಗಿ ತಿಳಿಸುವ ಪದವನ್ನು ಅದಕ್ಕೆ ಮೊದಲು ಸೇರಿಸಿ, ಆಮೇಲೆ ಎಣಿಕೆ ಪದಗಳನ್ನು ಸೇರಿಸಬೇಕಾಗುತ್ತದೆ.

ಇಂತಹ ಬೇರೆಯೂ ಹಲವು ವ್ಯತ್ಯಾಸಗಳು ನುಡಿಗಳಲ್ಲಿ ಬಳಕೆಯಾಗುವ ಎಣಿಕೆಯ ಹೊಲಬುಗಳ ನಡುವೆ ಕಾಣಿಸಿಕೊಳ್ಳುತ್ತವೆ. ಇವೆಲ್ಲವೂ ಎಣಿಕೆಯನ್ನು ಬಳಸುವಲ್ಲಿ ಮಾನವನು ಕಂಡುಕೊಂಡಿರುವ ಜಾಣ್ಮೆಯ ಹೊಲಬುಗಳೆಂದು ಹೇಳಬಹುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಕನ್ನಡ ನುಡಿ ಎಶ್ಟು ಹಳೆಯದು?

ನುಡಿಯರಿಮೆಯ ಇಣುಕುನೋಟ – 23

ಕನ್ನಡ ನುಡಿ ಎಶ್ಟು ಹಳೆಯದು ಎಂಬುದನ್ನು ತಿಳಿಯಲು ಹೆಚ್ಚಿನ ಅರಿವಿಗರೂ ಕನ್ನಡದ ಶಾಸನಗಳು ಇಲ್ಲವೇ ಕನ್ನಡ ಪದಗಳನ್ನು ಬಳಸಿರುವ ಪಳೆಯುಳಿಕೆಗಳು ಎಶ್ಟು ಹಳೆಯವು ಎಂಬುದನ್ನು ತಿಳಿಯಲು ಹೊರಡುತ್ತಾರೆ. ಆದರೆ, ಇಂತಹ ಪುರಾವೆಗಳು ಕನ್ನಡ ಬರಹ ಎಶ್ಟು ಹಳೆಯದು ಎಂಬುದನ್ನು ತಿಳಿಸಬಲ್ಲುವಲ್ಲದೆ ಕನ್ನಡ ನುಡಿ ಎಶ್ಟು ಹಳೆಯದು ಎಂಬುದನ್ನು ತಿಳಿಸಲಾರವು. ಯಾಕೆಂದರೆ, ಕನ್ನಡ ನುಡಿ ಎಂಬುದು ಮುಕ್ಯವಾಗಿ ಕನ್ನಡಿಗರ ಮಾತಲ್ಲದೆ ಬರಹವಲ್ಲ. ಎಲ್ಲಾ ನುಡಿಗಳಲ್ಲೂ ಮಾತು ಬರಹದಿಂದ ತುಂಬಾ ಹಿಂದೆಯೇ ಬಳಕೆಗೆ ಬಂದಿರುತ್ತದೆ. ಹಾಗಾಗಿ, ನಾವಿಲ್ಲಿ ಬರಹಕ್ಕಿಂತ ಬೇರಾಗಿರುವ ಪುರಾವೆಗಳನ್ನು ಹುಡುಕಿಹಿಡಿಯಬೇಕಾಗುತ್ತದೆ.

ನುಡಿಗಳ ಹುಟ್ಟು ಮನುಶ್ಯರ ಇಲ್ಲವೇ ಬೇರೆ ಉಸಿರಿಗಳ ಹುಟ್ಟಿಗಿಂತ ತೀರ ಬೇರಾದುದು: ಒಂದು ನುಡಿಯನ್ನಾಡುವ ಮಂದಿ ದೂರದ ಎರಡು ಊರುಗಳಲ್ಲಿ ನೆಲೆಸಿದಾಗ, ಅವರ ನಡುವೆ ಮೊದಲಿಗಿದ್ದ ಸಂಪರ‍್ಕ ಇಲ್ಲವಾಗುತ್ತದೆ, ಮತ್ತು ಇದರಿಂದಾಗಿ ಅವರಾಡುವ ನುಡಿಯಲ್ಲಿ ನಡೆಯುವ ಮಾರ‍್ಪಾಡುಗಳು ಒಂದೇ ಬಗೆಯವಾಗಿರುವುದಿಲ್ಲ. ಹಾಗಾಗಿ, ಸಮಯ ಕಳೆದಂತೆ ಅವರಾಡುವ ನುಡಿಗಳು ಬೇರಾಗುತ್ತಾ ಹೋಗುತ್ತವೆ, ಮತ್ತು ಕೊನೆಗೆ ಅವು ಎರಡು ಬೇರೆಯೇ ನುಡಿಗಳೆಂಬ ಅನಿಸಿಕೆಯನ್ನು ಕೊಡಲು ತೊಡಗುತ್ತವೆ.

ಒಂದು ನುಡಿ ಈ ರೀತಿ ಎರಡು ನುಡಿಗಳಾಗಿ ಕವಲೊಡೆದಾಗ, ಅವುಗಳಲ್ಲಿ ಯಾವುದು ಮೂಲ ನುಡಿ ಮತ್ತು ಯಾವುದು ಹೊಸದಾಗಿ ಹುಟ್ಟಿಕೊಂಡಿರುವ ನುಡಿ ಎಂದು ಬೇರ‍್ಪಡಿಸಿ ಹೇಳಲು ಬರುವುದಿಲ್ಲ. ಯಾಕೆಂದರೆ, ಮಾರ‍್ಪಾಡುಗಳು ಅವೆರಡರಲ್ಲೂ ನಡೆದಿರುತ್ತವೆ; ಒಂದರಲ್ಲಿ ನಡೆದ ಮಾರ‍್ಪಾಡುಗಳು ಇನ್ನೊಂದರಲ್ಲಿ ನಡೆದಿಲ್ಲವೆಂಬುದೇ ಅವೆರಡು ಬೇರೆ ಬೇರಾಗಿ ಕಾಣಿಸಿಕೊಳ್ಳಲು ಕಾರಣ. ಆದರೆ, ಇಂತಹ ಕಡೆಗಳಲ್ಲಿ ಒಂದು ಮೂಲ ನುಡಿ ಎರಡು ಹೊಸ ನುಡಿಗಳಾಗಿ ಕವಲೊಡೆದಿದೆಯೆಂದು ಹೇಳಲು ಬರುತ್ತದೆ, ಮತ್ತು ಎಶ್ಟು ಸಮಯಕ್ಕೆ ಹಿಂದೆ ಅವು ಆ ರೀತಿ ಕವಲೊಡೆದುವೋ ಅಶ್ಟು ಹಳೆಯವು ಆ ನುಡಿಗಳು ಎಂದು ತಿಳಿಯಲು ಬರುತ್ತದೆ.

ಕನ್ನಡ, ತಮಿಳು, ತೆಲುಗು, ಮಲಯಾಳ ಮೊದಲಾದ ಒಟ್ಟು ಸುಮಾರು ಇಪ್ಪತ್ತಯ್ದು ನುಡಿಗಳು ಮೂಲದ್ರಾವಿಡವೆಂಬ ಒಂದು ನುಡಿಯಿಂದ ಯಾವ ರೀತಿಯಲ್ಲಿ ಕವಲೊಡೆದು ಬೇರೆ ಬೇರೆ ನುಡಿಗಳಾಗಿ ಮಾರ‍್ಪಟ್ಟಿರಬೇಕು ಎಂಬುದನ್ನು ತಿಳಿದುಕೊಂಡಲ್ಲಿ, ಅವುಗಳಲ್ಲಿ ಕನ್ನಡ ಎಶ್ಟು ಹಿಂದೆ ಕವಲೊಡೆದಿದೆ ಎಂಬುದನ್ನು ತಿಳಿಯಲು ಬರುತ್ತದೆ.

ಮೂಲದ್ರಾವಿಡ ನುಡಿ ಮೊದಲಿಗೆ ತೆಂಕುದ್ರಾವಿಡ, ಬಡಗುದ್ರಾವಿಡ, ಮತ್ತು ನಡುದ್ರಾವಿಡ ಎಂಬ ಮೂರು ನುಡಿಗಳಾಗಿ ಕವಲೊಡೆದಿರಬೇಕು, ಮತ್ತು ಈ ಮೂರು ನುಡಿಗಳು ಆಮೇಲೆ ಬೇರೆ ಹಲವು ನುಡಿಗಳಾಗಿ ಕವಲೊಡೆಯುತ್ತಾ ಹೋಗಿ ಇವತ್ತಿನ ಇಪ್ಪತ್ತಯ್ದು ನುಡಿಗಳು ಬಳಕೆಗೆ ಬಂದಿರಬೇಕು ಎಂಬುದಾಗಿ ಕಲ್ಪಿಸಲಾಗಿದೆ. ಈ ಕಲ್ಪನೆಗೆ ಇವತ್ತಿನ ದ್ರಾವಿಡ ನುಡಿಗಳ ನಡುವೆ ಎಂತಹ ವ್ಯತ್ಯಾಸಗಳಿವೆ ಮತ್ತು ಎಶ್ಟು ವ್ಯತ್ಯಾಸಗಳಿವೆ ಎಂಬುದೇ ಆದಾರವಾಗಿರುತ್ತದೆ. ಎರಡು ನುಡಿಗಳ ನಡುವೆ ವ್ಯತ್ಯಾಸಗಳು ಹೆಚ್ಚಿದ್ದಶ್ಟೂ ಅವು ಕವಲೊಡೆದಿರುವ ಸಮಯ ಹೆಚ್ಚು ಹಿಂದಕ್ಕೆ ಹೋಗುತ್ತದೆ.

ದ್ರಾವಿಡ ನುಡಿಯ ಮೂರು ಕವಲುಗಳಲ್ಲಿ ಒಂದಾದ ತೆಂಕುದ್ರಾವಿಡ ನುಡಿ ಇವತ್ತು ಕನ್ನಡ, ತಮಿಳು, ಮಲಯಾಳ, ತುಳು, ಕೊಡಗು, ತೊದ, ಕೋತ ಮತ್ತು ಕೊರಗ ಎಂಬ ಒಟ್ಟು ಎಂಟು ಸ್ವತಂತ್ರ ನುಡಿಗಳಾಗಿ ಕವಲೊಡೆದಿದೆಯೆಂದು ಹೇಳಲಾಗುತ್ತದೆ; ಈ ಎಂಟು ನುಡಿಗಳಲ್ಲಿ, ಕೊರಗ ನುಡಿಯನ್ನು ಸದ್ಯಕ್ಕೆ ತೆಂಕುದ್ರಾವಿಡದಲ್ಲಿ ಗುಂಪಿಸಲಾಗಿದೆಯಾದರೂ, ನಿಜಕ್ಕೂ ಅದು ಯಾವ ರೀತಿಯಲ್ಲಿ ಉಳಿದ ನುಡಿಗಳೊಂದಿಗೆ ಸಂಬಂದಿಸಿದೆ ಎಂಬುದನ್ನು ಹೇಳಲು ಇನ್ನೂ ಸಾದ್ಯವಾಗಿಲ್ಲ. ಕೆಲವು ವಿಶಯಗಳಲ್ಲಿ ಅದು ಬಡಗುದ್ರಾವಿಡ ನುಡಿಗಳನ್ನು ಹೋಲುತ್ತಿರುವುದೇ ಇದಕ್ಕೆ ಕಾರಣ.

ಉಳಿದ ಏಳು ತೆಂಕುದ್ರಾವಿಡ ನುಡಿಗಳಲ್ಲಿ, ತುಳು ನುಡಿ ಮೊದಲಿಗೆ ಬೇರ‍್ಪಟ್ಟಿರಬೇಕು; ಯಾಕೆಂದರೆ, ಉಳಿದ ಎಲ್ಲಾ ತೆಂಕುದ್ರಾವಿಡ ನುಡಿಗಳಲ್ಲೂ ನಡೆದಿರುವ ಹಲವು ಮಾರ‍್ಪಾಡುಗಳು ತುಳುವಿನಲ್ಲಿ ನಡೆದಿಲ್ಲ. ಉಳಿದ ಆರು ತೆಂಕುದ್ರಾವಿಡ ನುಡಿಗಳಲ್ಲಿ ಮೊದಲಿಗೆ ಕವಲೊಡೆದು ಸ್ವತಂತ್ರ ನುಡಿಯೆನಿಸಿದುದು ಕನ್ನಡ ನುಡಿ. ಇದನ್ನೂ ಉಳಿದ ತೆಂಕುದ್ರಾವಿಡ ನುಡಿಗಳಲ್ಲಿ ನಡೆದಿರುವ, ಮತ್ತು ಕನ್ನಡದಲ್ಲಿ ನಡೆಯದಿರುವ (ಇಲ್ಲವೇ ಬೇರೆ ಬಗೆಯಲ್ಲಿ ನಡೆದಿರುವ) ಹಲವು ಮಾರ‍್ಪಾಡುಗಳ ಆದಾರದ ಮೇಲೆ ಹೇಳಲು ಬರುತ್ತದೆ.

ಇಂತಹ ಮಾರ‍್ಪಾಡುಗಳಲ್ಲಿ ಒಂದನ್ನು ಹಳೆಗನ್ನಡದ ಬೇಂಟೆ, ತೋಂಟ, ಎಂಟು, ತೆಂಕು ಮೊದಲಾದ ಪದಗಳನ್ನು ತಮಿಳಿನ ವೇಟ್ಟಯ್, ತೋಟ್ಟಮ್, ಎಟ್ಟು, ತೆಕ್ಕು ಮೊದಲಾದ ಪದಗಳೊಂದಿಗೆ ಹೋಲಿಸುವ ಮೂಲಕ ತಿಳಿಯಬಹುದು; ಇವುಗಳಲ್ಲಿ ಮೊದಲಿಗಿದ್ದ ಮೂಗುಲಿ(ಅನುನಾಸಿಕ)ಯನ್ನು ಕನ್ನಡ ಉಳಿಸಿಕೊಂಡಿದೆ; ಆದರೆ, ತಮಿಳು, ಕೊಡಗು (ಎಟ್ಟ್, ತೆಕ್ಕ್), ತೊದ ಮೊದಲಾದ ಉಳಿದ ನುಡಿಗಳು ಕಳೆದುಕೊಂಡಿವೆ. ಇನ್ನೊಂದು ವ್ಯತ್ಯಾಸವನ್ನು ಕನ್ನಡದ ಆಡಿದೆ, ನಂಬಿದೆ, ಕಟ್ಟಿದೆ, ಅಮುಕಿದೆ ಎಂಬ ಎಸಕ(ಕ್ರಿಯಾ)ರೂಪಗಳನ್ನು ತಮಿಳಿನ ಆಟಿನೇನ್, ನಂಪಿನೇನ್, ಕಟ್ಟಿನೇನ್, ಅಮುಕ್ಕಿನೇನ್ ಎಂಬವುಗಳೊಂದಿಗೆ ಹೋಲಿಸುವ ಮೂಲಕ ತಿಳಿಯಬಹುದು.

ಈ ರೂಪಗಳಲ್ಲಿ ಬಂದಿರುವ ಹಿಂಬೊತ್ತಿನ ಒಟ್ಟು (ಪ್ರತ್ಯಯ) ಕನ್ನಡದಲ್ಲಿ ನಕಾರವನ್ನು ಕಳೆದುಕೊಂಡಿದೆ; ಆದರೆ, ತಮಿಳು, ಕೊಡಗು, ತೊದ ಮೊದಲಾದ ಉಳಿದ ನುಡಿಗಳಲ್ಲಿ ಅದನ್ನು ಉಳಿಸಿಕೊಂಡಿದೆ. ಮತ್ತೊಂದು ವ್ಯತ್ಯಾಸವೆಂದರೆ, ತೆಂಕುದ್ರಾವಿಡದಲ್ಲಿದ್ದ ಅ ಮತ್ತು ಅಯ್‌ಗಳಲ್ಲಿ ಕೊನೆಗೊಳ್ಳುವ ಎರಡು ಬಗೆಯ ಎಸಕಪದಗಳು ಕನ್ನಡದಲ್ಲಿ ಒಂದೇ ಬಗೆಯವಾಗಿವೆ; ಕನ್ನಡದ ನಡೆದೆ ಮತ್ತು ತಡೆದೆ ಎಂಬ ರೂಪಗಳನ್ನು ತಮಿಳಿನ ನಟನ್ತೇನ್ ಮತ್ತು ತಟಯ್‌ನ್ತೇನ್ ಎಂಬ ರೂಪಗಳೊಂದಿಗೆ ಹೋಲಿಸಿನೋಡಿದಾಗ ಈ ವ್ಯತ್ಯಾಸ ಕಾಣಿಸುತ್ತದೆ. ಕೊಡಗು, ತೊದ ಮೊದಲಾದ ಉಳಿದ ನುಡಿಗಳೂ ಈ ವ್ಯತ್ಯಾಸವನ್ನು ತಮಿಳಿನ ಹಾಗೆ ಉಳಿಸಿಕೊಂಡಿವೆ.

ಉಳಿದ ಅಯ್ದು ತೆಂಕುದ್ರಾವಿಡ ನುಡಿಗಳಲ್ಲಿ ಮೊದಲಿಗೆ ಕೊಡಗು ನುಡಿ ಬೇರಾಗಿರಬೇಕು, ಮತ್ತು ಆಮೇಲೆ ತೊದ ಮತ್ತು ಕೋತ ನುಡಿಗಳು ಬೇರಾಗಿರಬೇಕು. ತಮಿಳು ಮತ್ತು ಮಲಯಾಳ ನುಡಿಗಳು ಮೂಲನುಡಿಯಿಂದ ಬೇರ‍್ಪಟ್ಟು ಸ್ವತಂತ್ರ ನುಡಿಗಳಾಗುವ ಮೊದಲೇ ಈ ಮೂರು ನುಡಿಗಳೂ ಬೇರ‍್ಪಟ್ಟಿರಬೇಕೆಂದು ಹೇಳುವುದಕ್ಕೆ ತಮಿಳು ಮತ್ತು ಮಲಯಾಳಗಳಲ್ಲಿ ನಡೆದ, ಮತ್ತು ಈ ಮೂರು ನುಡಿಗಳಲ್ಲಿ ನಡೆಯದಿದ್ದ (ಇಲ್ಲವೇ ಬೇರೆ ಬಗೆಯಲ್ಲಿ ನಡೆದ) ಹಲವು ಮಾರ‍್ಪಾಡುಗಳನ್ನು ಎತ್ತುಗೆಯಾಗಿ ಕೊಡಬಹುದು.

ಮೇಲೆ ಕೊಟ್ಟಿರುವ ವಿಶಯಗಳ ಮೇಲೆ, ತಮಿಳು ಬರಹ ಕನ್ನಡ ಬರಹದಿಂದ ಹಳೆಯದಾಗಿದೆಯಾದರೂ ತಮಿಳು ನುಡಿ ಕನ್ನಡ ನುಡಿಗಿಂತ ಹಳೆಯದಲ್ಲ; ಅದು ಸ್ವತಂತ್ರ ನುಡಿಯಾಗುವುದಕ್ಕಿಂತ (ಎಂದರೆ ಅದು ತನ್ನದೇ ಆದ ಪರಿಚೆಗಳನ್ನು ಪಡೆದುಕೊಳ್ಳುವುದಕ್ಕಿಂತ) ಎಶ್ಟೋ ಮೊದಲೇ ಕನ್ನಡ ನುಡಿ ಒಂದು ಸ್ವತಂತ್ರ ನುಡಿಯಾಗಿ ಬೇರ‍್ಪಟ್ಟಿತ್ತೆಂದು ಹೇಳಲು ಬರುತ್ತದೆ. ಆದರೆ, ಇದರಿಂದಾಗಿ ಕನ್ನಡಕ್ಕೊಂದು ‘ಮೇಲ್ತನ’ ದೊರೆತಿದೆಯೆಂದೇನೂ ನನಗೆ ಅನಿಸುವುದಿಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter