Posts Tagged ‘ಪದಕೋಶ’
ನುಡಿಯರಿಮೆಯ ಇಣುಕುನೋಟ – 30
ಒಂದು ಪದವನ್ನು ಕೇಳಿದಾಗ ಅದರ ಅರ್ತವೇನೆಂದು ನಮಗೆ ಗೊತ್ತಾಗುತ್ತದೆ; ಆದರೆ, ನಿಜಕ್ಕೂ ಈ ‘ಅರ್ತ’ ಎಂದರೇನು? ಪದನೆರಕೆ(ಪದಕೋಶ)ಗಳಲ್ಲಿ ಪದಗಳ ಅರ್ತವೇನೆಂದು ಕೊಡಲಾಗುತ್ತದೆ; ಆದರೆ ಅವು ಇದಕ್ಕಾಗಿ ಒಂದು ಪದದ ಬದಲು ಅದೇ ಅರ್ತದ ಇಲ್ಲವೇ ಅದಕ್ಕೆ ಹತ್ತಿರದ ಅರ್ತದ ಬೇರೊಂದು ಪದವನ್ನು ಕೊಡುತ್ತವೆ. ‘ಎಲ್ಲೆ’ ಎಂಬ ಪದಕ್ಕೆ ಕನ್ನಡದ ಒಂದು ಪದಕೋಶ ‘ಗಡಿ’ ಎಂಬ ಇನ್ನೊಂದು ಪದವನ್ನು ಅದರ ಅರ್ತವೆಂದು ಕೊಡಬಹುದು.
ಆದರೆ ‘ಗಡಿ’ ಎಂಬುದೂ ಕನ್ನಡದಲ್ಲಿ ಬಳಕೆಯಾಗುವ ಒಂದು ಪದವಾದ ಕಾರಣ, ಅದಕ್ಕೂ ಅದರದೇ ಆದ ಅರ್ತ ಇದೆ. ಹಾಗಾಗಿ, ನಿಜಕ್ಕೂ ಅದು ‘ಎಲ್ಲೆ’ ಪದದ ಅರ್ತ ಏನು ಎಂಬುದನ್ನು ನಮಗೆ ತಿಳಿಸುವುದಿಲ್ಲ. ಆ ಎರಡು ಪದಗಳ ಅರ್ತ ಒಂದೇ ಎಂದಶ್ಟೇ ಅದು ತಿಳಿಸುತ್ತದೆ. ಹಾಗಾಗಿ, ‘ಎಲ್ಲೆ’ ಎಂಬುದಕ್ಕೆ ‘ಗಡಿ’ ಎಂಬ ಅರ್ತವನ್ನು ಕೊಡುವ ಪದನೆರಕೆ ‘ಗಡಿ’ ಎಂಬುದಕ್ಕೆ ‘ಎಲ್ಲೆ’ ಎಂಬ ಅರ್ತವನ್ನೂ ಕೊಟ್ಟಿರಬಹುದು!
ಕನ್ನಡ ಪದಕ್ಕೆ ಇಂಗ್ಲಿಶ್ ಪದ ಇಲ್ಲವೇ ಪದಕಂತೆಯ ಮೂಲಕವಾಗಲಿ ಇಲ್ಲವೇ ಬೇರೊಂದು ನುಡಿಯ ಪದದ ಮೂಲಕವಾಗಲಿ ಅರ್ತ ಹೇಳುವ ಪದನೆರಕೆಗಳೂ ಇವೆ. ಆದರೆ, ಇಂತಹ ಪದನೆರಕೆಗಳೂ ಎರಡು ಪದಗಳ ಅರ್ತ ಹೆಚ್ಚುಕಡಿಮೆ ಒಂದೇ ಎಂಬುದಾಗಿ ತಿಳಿಸುತ್ತವಲ್ಲದೆ ನಿಜಕ್ಕೂ ಆ ಅರ್ತ ಎಂತಹದು ಎಂಬುದನ್ನು ತಿಳಿಸುವುದಿಲ್ಲ. ನಾನು ಹೇಳಿದ್ದು ಅರ್ತವಾಯಿತೋ? ಎಂದು ಯಾರಾದರೂ ಕೇಳಿದರೆ ನಾವು ಅರ್ತವಾಯಿತು ಎಂದು ಹೇಳಬಹುದು. ಆದರೆ ಏನು ಅರ್ತವಾಯಿತು? ಎಂದು ಕೇಳಿದರೆ ಅಂತಹದೇ ಇನ್ನೊಂದು ಮಾತನ್ನು ಹೇಳಬಲ್ಲೆವಲ್ಲದೆ ಬೇರೇನೂ ಮಾಡಲಾರೆವು.
ಒಂದು ಮಾತನ್ನು ಕೇಳಿದ ಮೇಲೆ ನಾವು ಏನು ಮಾಡುತ್ತೇವೆ ಎಂಬುದರಿಂದ ನಮಗೆ ಆ ಮಾತು ಅರ್ತವಾಗಿದೆಯೋ ಇಲ್ಲವೋ ಎಂಬುದು ತಿಳಿದೀತು. ‘ಕುಳಿತುಕೊಳ್ಳಿ’ ಎಂದು ಹೇಳಿದಾಗ ಎದುರಿಗಿದ್ದವನು ಕುಳಿತುಕೊಂಡನಾದರೆ ಅವನಿಗೆ ಆ ಮಾತು ಅರ್ತವಾಗಿದೆಯೆಂದು ಹೇಳಬಹುದು. ಆದರೆ, ಆತ ಕುಳಿತುಕೊಳ್ಳದಿದ್ದರೂ ಆ ಮಾತು ಅವನಿಗೆ ಅರ್ತವಾಗಿಲ್ಲವೆಂದು ಹೇಳಲು ಬರುವುದಿಲ್ಲ. ಇದಲ್ಲದೆ ಹಾಗೆ ಮಾಡಬೇಕೆಂಬುದು ಆ ಮಾತಿನ ಅರ್ತವಲ್ಲದೆ ಹಾಗೆ ಮಾಡುವುದು ಅದರ ‘ಅರ್ತ’ವಲ್ಲ.
ಮೇಲಿನಿಂದ ಮೇಲೆ ನೋಡುವಾಗ ತೀರ ಸುಲಬವೆಂದು ಕಾಣಿಸಿದರೂ ವಿವರಿಸಹೊರಟಾಗ ತೀರ ತೊಡಕಿನದಾಗುವ ಈ ‘ಅರ್ತ’ ಎಂಬುದರ ಕುರಿತು ಹಲವಾರು ಮಂದಿ ತತ್ವಜ್ನಾನಿಗಳು ತಲೆಕೆಡಿಸಿಕೊಂಡಿದ್ದಾರೆ. ಇಲ್ಲಿ ನಮಗೆದುರಾಗುವ ಈ ತೊಡಕಿಗೆ ಮುಕ್ಯ ಕಾರಣವೇನೆಂದರೆ, ನಾವು ಬಳಸುವ ‘ಅರ್ತ’ ಇಲ್ಲವೇ ‘meaning’ ಎಂಬ ಪದ ಎರಡು ತೀರ ಬೇರಾಗಿರುವ ಪರಿಕಲ್ಪನೆಗಳನ್ನು ಸೂಚಿಸುತ್ತದೆ. ಒಂದು ಮಾತನ್ನು ಕೇಳಿದಾಗ ನಮಗೆ ಅದು ಅರ್ತವಾಗುತ್ತದೆ, ಮತ್ತು ಇದು ನಮ್ಮ ಅರಿವಿಗೆ ಎಟಕದ ರೂಪದಲ್ಲಿರುವ ಅರ್ತ.
ಈ ರೀತಿ ನಾವು ಮಾಡಿಕೊಂಡಿರುವ ಅರ್ತವನ್ನು ಇನ್ನೊಬ್ಬರಿಗೆ ತಿಳಿಸಬೇಕೆಂದಿದ್ದಲ್ಲಿ ಅದನ್ನು ಬೇರೊಂದು ರೀತಿಯ ಮಾತಿನ ಮೂಲಕವಾಗಲಿ ಇಲ್ಲವೇ ಸನ್ನೆ, ಚಿತ್ರ ಮೊದಲಾದವುಗಳ ಮೂಲಕವಾಗಲೀ ಸೂಚಿಸಬೇಕಾಗುತ್ತದೆ, ಮತ್ತು ಇದು ನಮ್ಮ ಅರಿವಿಗೆ ಎಟಕುವ ರೂಪದಲ್ಲಿರುವ ಅರ್ತ. ಈ ರೀತಿ ‘ಅರಿವಿಗೆ ಎಟಕದಿರುವ ಅರ್ತ’ ಮತ್ತು ‘ಅರಿವಿಗೆ ಎಟಕುವ ಅರ್ತ’ ಎಂಬುದಾಗಿ ಎರಡು ರೀತಿಯ ‘ಅರ್ತ’ಗಳು ಪದಗಳಿಗಿವೆ.
ಪದನೆರಕೆಗಳು ಕೊಡುವುದು ಅರಿವಿಗೆ ಎಟಕುವ ಅರ್ತಗಳನ್ನು ಮಾತ್ರ. ಅರಿವಿಗೆ ಎಟಕದ ಅರ್ತಗಳು ಅವಕ್ಕೂ ಎಟಕಲಾರವು. ಈ ಎರಡು ರೀತಿಯ ‘ಅರ್ತ’ಗಳ ನಡುವೆ ಹಲವು ರೀತಿಯ ವ್ಯತ್ಯಾಸಗಳಿದ್ದು ಅವನ್ನು ಸರಿಯಾಗಿ ತಿಳಿದುಕೊಳ್ಳದುದರಿಂದಾಗಿ ಅರಿವಿಗರು ಹಲವು ಬಗೆಯ ಗೊಂದಲಗಳಿಗೆ ಒಳಗಾಗಿದ್ದಾರೆ. ಅರಿವಿಗೆ ಎಟಕದ ಅರ್ತವನ್ನು ‘ತಿಳಿವು’ ಎಂಬುದಾಗಿ, ಮತ್ತು ಅರಿವಿಗೆ ಎಟಕುವ ಅರ್ತವನ್ನು ‘ಹುರುಳು’ ಎಂಬುದಾಗಿ ಹೆಸರಿಸಿದಲ್ಲಿ ಈ ಗೊಂದಲ ತಾನಾಗಿಯೇ ಇಲ್ಲವಾಗುತ್ತದೆ.
ಪದಗಳ ‘ತಿಳಿವು’ ಎನ್ನುವುದು ಅವನ್ನು ತಿಳಿದಿರುವವರ ಮಿದುಳಿನಲ್ಲಿ ಕೆಲವು ವಿಶಿಶ್ಟವಾದ ನರಗಳ ವಿನ್ಯಾಸಗಳಾಗಿ ಉಂಟಾಗಿರುತ್ತವೆ. ಯಾರಾದರೊಬ್ಬ ಆಡುಗನು ಒಂದು ಪದವನ್ನು ಬಳಸಿದಾಗ ಕೇಳುಗನ ಮಿದುಳಿನಲ್ಲಿ ಆ ಪದಕ್ಕಿರುವ ನರಗಳ ವಿನ್ಯಾಸ ಜೀವಂತವಾಗುತ್ತದೆ; ಎಂದರೆ ಅದು ಮಿಂಚುತ್ತದೆ. ನರಗಳ ವಿನ್ಯಾಸವೊಂದು ಈ ರೀತಿ ಮಿಂಚಿದಾಗ ಆತನಿಗೆ ತನಗೆ ತಿಳಿದಿರುವ ಪದವೊಂದನ್ನು ಕೇಳಿದಹಾಗಾಗುತ್ತದೆ.
ಒಂದು ನುಡಿಯನ್ನು ಕಲಿಯುವುದೆಂದರೆ ಮಿದುಳಿನಲ್ಲಿ ಇಂತಹ ಹಲವಾರು ನರಗಳ ವಿನ್ಯಾಸಗಳನ್ನು ಹೊಸದಾಗಿ ಉಂಟುಮಾಡಿಕೊಳ್ಳುವುದಲ್ಲದೆ ಬೇರೇನಲ್ಲ. ಒಬ್ಬ ವ್ಯಕ್ತಿ ಕಲಿಯದಿರುವ ನುಡಿಯ ಪದಗಳನ್ನು ಕೇಳಿದಾಗ ಅವನ ಮಿದುಳಿನಲ್ಲಿರುವ ನರಗಳ ವಿನ್ಯಾಸಗಳಲ್ಲಿ ಯಾವುದೂ ಮಿಂಚುವುದಿಲ್ಲ. ಅಂತಹ ಪದಗಳಿಗೆ ಮಿಂಚಬಲ್ಲ ನರಗಳ ವಿನ್ಯಾಸಗಳು ಆತನ ಮಿದುಳಿನಲ್ಲಿ ಉಂಟಾಗಿಲ್ಲವೆಂಬುದೇ ಇದಕ್ಕೆ ಕಾರಣ.
ಒಂದು ಪದದ ಹುರುಳು ಇದಕ್ಕಿಂತ ತೀರ ಬೇರಾದುದು. ‘ಎಲ್ಲೆ’ ಎಂಬ ಪದದ ಹುರುಳನ್ನು ‘ಗಡಿ’ ಎಂಬುದಾಗಿ ಕೊಡಬಹುದು. ಇಲ್ಲಿ ಎರಡು ಪದಗಳಿವೆ; ಅವುಗಳಲ್ಲಿ ಒಂದು ಇನ್ನೊಂದರ ಹುರುಳು. ಎರಡೂ ಪದಗಳೇ. ಆದರೆ ಅವುಗಳಲ್ಲಿ ಒಂದು ಪದದ (‘ಗಡಿ’ ಎಂಬುದರ) ತಿಳಿವು ಕೇಳುಗನಲ್ಲಿದೆ ಮತ್ತು ಇನ್ನೊಂದರ (‘ಎಲ್ಲೆ’ ಎಂಬುದರ) ತಿಳಿವು ಆತನಲ್ಲಿಲ್ಲ ಎಂಬ ಕಾರಣಕ್ಕಾಗಿ ಒಂದನ್ನು ಇನ್ನೊಂದರ ಹುರುಳು ಎಂಬುದಾಗಿ ಪರಿಗಣಿಸಲಾಗಿದೆ.
ಕೇಳುಗನಲ್ಲಿ ತಿಳಿವಿಲ್ಲದಿರುವ ಪದಕ್ಕೆ ಆತನಲ್ಲಿ ತಿಳಿವಿರುವ ಪದದ ಮೂಲಕ ಪದನೆರಕೆಗಳು ತಿಳಿವನ್ನು ಕೊಡಲು ಪ್ರಯತ್ನಿಸುತ್ತವೆ. ‘ಎಲ್ಲೆ’ ಪದದ ತಿಳಿವಿಲ್ಲದವರು ಮಾತ್ರವೇ ಪದನೆರಕೆಗಳಲ್ಲಿ ಅದರ ಅರ್ತವನ್ನು ಹುಡುಕಲು ಹೋಗುತ್ತಾರೆ. ಹಾಗೆ ಹುಡುಕುವವರಿಗೆ ‘ಗಡಿ’ ಎಂಬುದರ ತಿಳಿವು ಇರಬಹುದು ಎಂಬುದಾಗಿ ಪದನೆರಕೆಯನ್ನು ರಚಿಸುವವರು ಕಲ್ಪಿಸಿಕೊಂಡು ಆ ಪದವನ್ನು ಅದರ ಹುರುಳಾಗಿ ಕೊಡುತ್ತಾರೆ. ಇದಕ್ಕೆ ಬದಲು, ‘ಗಡಿ’ ಪದದ ತಿಳಿವಿಲ್ಲದವರು ಆ ಪದದ ಅರ್ತವನ್ನು ಪದನೆರಕೆಗಳಲ್ಲಿ ಹುಡುಕುತ್ತಾರೆ ಮತ್ತು ಅವರಿಗೆ ‘ಎಲ್ಲೆ’ ಎಂಬ ಪದದ ತಿಳಿವಿರಬಹುದೆಂದು ಪದನೆರಕೆಗಳನ್ನು ರಚಿಸುವವರು ಕಲ್ಪಿಸಿಕೊಂಡು ಆ ಪದವನ್ನು ಅದರ ಹುರುಳಾಗಿ ಕೊಡುತ್ತಾರೆ. ಎರಡರ ತಿಳಿವೂ ಇಲ್ಲದವರಿಗೆ ಅಂತಹ ಪದನೆರಕೆ ಯಾವ ನೆರವನ್ನೂ ನೀಡಲಾರದು.
ತಿಳಿವು ಮತ್ತು ಹುರುಳುಗಳ ನಡುವಿರುವ ಈ ವ್ಯತ್ಯಾಸ ಹುರುಳುಗಳ ನಡುವಿನ ಸಂಬಂದವೆಂತಹದು ಎಂಬುದನ್ನು ತಿಳಿಯುವಲ್ಲಿ ಬಹಳ ಪ್ರಯೋಜನಕ್ಕೆ ಬರುತ್ತದೆ. ಎರಡು ಪದಗಳಿಗೆ (‘ಎಲ್ಲೆ’ ಮತ್ತು ‘ಗಡಿ’ ಎಂಬವುಗಳಿಗೆ) ಒಂದೇ ಅರ್ತವಿದೆ ಎಂದು ಹೇಳುವಾಗ ನಾವು ಅವುಗಳಲ್ಲಿ ಒಂದನ್ನು ಇನ್ನೊಂದರ ಹುರುಳಾಗಿ ಬಳಸಬಲ್ಲೆವು ಎಂದಶ್ಟೇ ಹೇಳುತ್ತೇವಲ್ಲದೆ ನಿಜಕ್ಕೂ ಆ ಎರಡು ಪದಗಳಿಗೆ ನಮ್ಮಲ್ಲಿ ಒಂದೇ ರೀತಿಯ ತಿಳಿವಿದೆ ಎಂದೇನೂ ಹೇಳುವುದಿಲ್ಲ. ಯಾಕೆಂದರೆ, ಒಂದು ಪದದ ತಿಳಿವಿಗೆ ಹಲವು ಆಯಾಮಗಳಿದ್ದು ಅವೆಲ್ಲವುಗಳಲ್ಲೂ ಅದು ಇನ್ನೊಂದು ಪದದ ಹಾಗೆಯೇ ಇರಲು ಸಾದ್ಯವೇ ಇಲ್ಲ. ಎತ್ತುಗೆಗಾಗಿ, ‘ಗಡಿ’ ಪದವನ್ನು ಹೊತ್ತಿಗೆ ಸಂಬಂದಿಸಿದಂತೆಯೂ ‘ಗಡಿ’ ಇಲ್ಲವೇ ‘ಗಡುವು’ ಎಂಬ ರೂಪದಲ್ಲಿ ಬಳಸಲು ಬರುತ್ತದೆ; ಆದರೆ, ‘ಎಲ್ಲೆ’ ಎಂಬ ಪದಕ್ಕೆ ಅಂತಹ ಹೊತ್ತಿಗೆ ಸಂಬಂದಿಸಿದ ಬಳಕೆಯಿಲ್ಲ. ಇವೆರಡರೊಳಗೆ ಇಂತಹ ಇನ್ನೂ ಹಲವು ವ್ಯತ್ಯಾಸಗಳಿವೆಯಾದ ಕಾರಣ, ಅವೆರಡರ ಅರ್ತ ಒಂದೇ ಎನ್ನುವುದು ಹುರುಳಿಗೆ ಸಂಬಂದಿಸಿದ ಪರಿಕಲ್ಪನೆಯಲ್ಲದೆ ತಿಳಿವಿಗೆ ಸಂಬಂದಿಸಿದ ಪರಿಕಲ್ಪನೆಯಲ್ಲ.
ಒಂದು ಪದದ ಹುರುಳನ್ನು ಪದಕಂತೆ ಇಲ್ಲವೇ ಸೊಲ್ಲಿನ ಮೂಲಕ ವಿವರಿಸುವಲ್ಲೂ ಇಂತಹದೇ ಸಮಸ್ಯೆ ನಮ್ಮೆದುರಿಗಿದೆ. ನಾವು ಕೊಡುವ ಪದಕಂತೆ ಇಲ್ಲವೇ ಸೊಲ್ಲು ಆ ಪದದ ತಿಳಿವಿನ ಕೆಲವು ಅಂಶಗಳನ್ನು ಮಾತ್ರವೇ ಸೂಚಿಸಬಲ್ಲುದಲ್ಲದೆ ಎಲ್ಲಾ ಅಂಶಗಳನ್ನೂ ಸೂಚಿಸಲಾರದು. ಕೆಲವು ಪದಗಳ ಹಿಂದಿರುವ ತಿಳಿವನ್ನು ಸರಿಯಾಗಿ ತಿಳಿಸಬೇಕಿದ್ದಲ್ಲಿ ಒಂದು ದೊಡ್ಡ ಪ್ರಬಂದವನ್ನೇ ಬರೆಯಬೇಕಾದೀತು. ಹಾಗಾಗಿ, ಇಲ್ಲೂ ನಮ್ಮೆದುರಿಗಿರುವುದು ಹುರುಳಿಗೆ ಸಂಬಂದಿಸಿದ ಪರಿಕಲ್ಪನೆಯೇ.
(ಈ ಬರಹ ವಿಜಯ ಕರ್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)
ನುಡಿಯರಿಮೆಯ ಇಣುಕುನೋಟ – 16
ಎಲ್ಲಾ ಮಕ್ಕಳೂ ತಮ್ಮ ತಾಯ್ನುಡಿಯಲ್ಲಿ ಮಾತನಾಡಲು ತಾವಾಗಿಯೇ ಕಲಿತುಕೊಳ್ಳುತ್ತಾರೆ; ಕೆಲವರು ಈ ಕಲಿಕೆಯನ್ನು ಬೇಗನೆ ನಡೆಸಬಹುದು, ಮತ್ತು ಕೆಲವರು ಅದಕ್ಕಾಗಿ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಆದರೆ ಮಿದುಳಿನ ತೊಂದರೆಯಿಲ್ಲದ ಯಾವ ಮಗುವೂ ತನ್ನ ತಾಯ್ನುಡಿಯಲ್ಲಿ ಮಾತನಾಡಲು ಕಲಿಯದಿರುವುದಿಲ್ಲ.
ಹಾಗಾಗಿ, ಮಾತಿನ ಕಲಿಕೆಯನ್ನು ಮಕ್ಕಳು ಹುಟ್ಟಿನಿಂದಲೇ ಪಡೆದುಕೊಂಡು ಬಂದ ಅಳವೆಂದು ಹೇಳಲಾಗುತ್ತದೆ. ಆದರೆ, ಓದಿನ ಕಲಿಕೆ ಆ ರೀತಿಯದಲ್ಲ; ಹೆಚ್ಚಿನ ಮಕ್ಕಳಿಗೂ ಓದುವ ಬಗೆಯನ್ನು ಯಾರಾದರೂ ಕಲಿಸಿಕೊಟ್ಟಲ್ಲಿ ಮಾತ್ರ ಅವರು ಅದನ್ನು ಕಲಿಯುತ್ತಾರೆ. ಸಯ್ಕಲ್ ತುಳಿಯುವುದು, ಈಜುವುದು ಮೊದಲಾದವುಗಳ ಹಾಗೆ, ಓದು ಹುಟ್ಟಿನಿಂದ ಬರುವ ಅಳವಲ್ಲ; ಕಲಿತು ಪಡೆಯುವ ಅಳವು.
ಬರಹಗಳನ್ನು ಸಲೀಸಾಗಿ ಓದಲು ಕಲಿಯಬೇಕಾದರೆ, ಮಕ್ಕಳು ಕೆಲವು ಚಳಕ(ಕವ್ಶಲ್ಯ)ಗಳನ್ನು ತಮ್ಮದಾಗಿಸಿಕೊಳ್ಳಬೇಕಾಗುತ್ತದೆ: ಮಾತಿನಲ್ಲಿ ಬರುವ ಪದಗಳನ್ನೆಲ್ಲ ಉಲಿಗಳ ಸೇರಿಕೆಯಿಂದ ಉಂಟುಮಾಡಲಾಗಿದೆ ಎಂಬುದನ್ನು ಅವರು ಗಮನಿಸಬೇಕು, ಮತ್ತು ಪುಟಗಳಲ್ಲಿ ಬರುವ ಗುರುತುಗಳಿಗೂ ಈ ಮಾತಿನ ಉಲಿಗಳಿಗೂ ನಡುವೆ ಎಂತಹ ಸಂಬಂದವಿದೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.
ಇದಲ್ಲದೆ, ಪುಟಗಳಲ್ಲಿ ಬರುವ ಈ ಗುರುತುಗಳ ಜೋಡಣೆಗಳಲ್ಲಿ ಪದ, ಪದಕಂತೆ ಮತ್ತು ಸೊಲ್ಲುಗಳನ್ನು ಕಾಣಲು, ಮತ್ತು ಅವುಗಳಿಂದ ಬರಹಗಾರನು ಏನು ಹೇಳುತ್ತಿದ್ದಾನೆ ಎಂಬುದನ್ನು (ಎಂದರೆ ಬರಹದ ಹುರುಳನ್ನು) ತಿಳಿಯಲು ಅವರು ಕಲಿಯಬೇಕು.
ಮಾತಿನಲ್ಲಿ ಬರುವ ಪದಗಳು ಉಲಿಗಳ ಸೇರಿಕೆಯಿಂದ ಉಂಟಾಗುತ್ತವೆ ಎಂಬುದನ್ನು ಗಮನಿಸುವಂತೆ ಮಾಡಲು ಮಕ್ಕಳಿಗೆ ಕೆಲವು ಆಟಗಳನ್ನು ಕಲಿಸಬಹುದು: ಮನೆ, ಮಾತು, ಮೋಡ, ಮುಗಿಲು ಎಂಬಂತಹ ಪದಗಳಲ್ಲೆಲ್ಲ ಮೊದಲಿಗೆ ಮಕಾರ ಬಂದಿದೆ, ಕೆಲವು ಪದಗಳಿಂದ ಈ ಮಕಾರವನ್ನು ತೆಗೆದು ಹಾಕಿದರೆ ಬೇರೊಂದು ಪದ ಸಿಗುತ್ತದೆ (ಮತ್ತೆ-ಅತ್ತೆ, ಮಾಡು-ಆಡು, ಮಿಡಿ-ಇಡಿ), ಕೆಲವು ಪದಗಳಲ್ಲಿ ಮಕಾರದ ಬದಲು ಕಕಾರವನ್ನು ಬಳಸಿದರೆ ಬೇರೆ ಪದ ಸಿಗುತ್ತದೆ (ಮತ್ತೆ-ಕತ್ತೆ, ಮಾಡು-ಕಾಡು, ಮಿಡಿ-ಕಿಡಿ) ಎಂಬಂತಹ ವಿಶಯಗಳನ್ನು ಅವರು ಗಮನಿಸುವ ಹಾಗೆ ಮಾಡಬಹುದು, ಮತ್ತು ಪದಗಳನ್ನು ಉಲಿಗಳಾಗಿ ಒಡೆಯುವ ಬಗೆಯನ್ನು ಕಲಿಸಬಹುದು. ಇದರಿಂದ, ಪದಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ಅವರು ತಿಳಿಯುವ ಹಾಗೆ ಮಾಡಬಹುದು.
ಕನ್ನಡ ಬರಹದ ಪುಟಗಳಲ್ಲಿ ಕಾಣಿಸುವ ಗುರುತು(ಬರಿಗೆ)ಗಳಿಗೂ ಅವನ್ನು ಓದುವಲ್ಲಿ ಬಳಕೆಯಾಗುವ ಉಲಿಗಳಿಗೂ ನಡುವೆ ನೇರವಾದ ಸಂಬಂದವಿದೆ; ಇಂಗ್ಲಿಶ್ ಬರಹದಲ್ಲಿರುವ ಹಾಗೆ ಅದು ತೊಡಕು ತೊಡಕಾಗಿಲ್ಲ. ಹಾಗಾಗಿ, ಕನ್ನಡ ಬರಹಗಳನ್ನು ಓದಲು ಕಲಿಯುವ ಮಕ್ಕಳು ಬರಿಗೆಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ಗಮನಿಸುವಂತೆ ಮಾಡುವುದು ಹೆಚ್ಚು ತೊಡಕಿನ ಕೆಲಸವಲ್ಲ. ಆದರೆ, ಸಂಸ್ಕ್ರುತದ ಎರವಲು ಪದಗಳಲ್ಲಿ ಬಳಕೆಯಾಗುತ್ತಿರುವ ಅಲ್ಪಪ್ರಾಣ-ಮಹಾಪ್ರಾಣ, ರು-ಋ, ಶ-ಷ ಮೊದಲಾದ ಹಲವು ವ್ಯತ್ಯಾಸಗಳು ಓದಿನಲ್ಲಿ ಕಾಣಿಸುವುದಿಲ್ಲ, ಮತ್ತು ಇವುಗಳಿಂದಾಗಿ ಉಲಿಗಳಿಗೂ ಬರಿಗೆಗಳಿಗೂ ನಡುವಿರುವ ಸಂಬಂದವನ್ನು ಗಮನಿಸುವಲ್ಲಿ ಹೆಚ್ಚಿನ ಮಕ್ಕಳೂ ಗೊಂದಲದಲ್ಲಿ ಬೀಳುತ್ತಾರೆ. ಹಾಗಾಗಿ, ಕನ್ನಡದ ಮಟ್ಟಿಗೆ ಅನವಶ್ಯಕವಾಗಿರುವ ಈ ವ್ಯತ್ಯಾಸಗಳನ್ನು ಮಕ್ಕಳ ಓದಿನಿಂದ ದೂರ ಇರಿಸುವುದು ಒಳ್ಳೆಯದು.
ಬರಿಗೆಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ತಿಳಿಯುವುದು ಬರಹವನ್ನು ಓದಲು ಕಲಿಯುವಲ್ಲಿ ತುಂಬಾ ಮುಕ್ಯವಾದ ಕೆಲಸ. ಈ ನಂಟನ್ನು ತಿಳಿದುಕೊಂಡವರಿಗೆ ತಮಗೆ ಗೊತ್ತಿರುವ ಪದಗಳನ್ನು ಮಾತ್ರವಲ್ಲದೆ ಗೊತ್ತಿಲ್ಲದ ಪದಗಳನ್ನೂ ಓದಲು ಬರುತ್ತದೆ. ಈ ನಂಟನ್ನು ತಿಳಿಯದ ಮಕ್ಕಳು ಪದಗಳನ್ನು ಚಿತ್ರಗಳ ಹಾಗೆ ಇಡಿ ಇಡಿಯಾಗಿ ಓದಲು ಹೋಗುತ್ತಾರೆ, ಮತ್ತು ಇದರಿಂದಾಗಿ ಬರಹದಲ್ಲಿ ಹೊಸ ಪದಗಳು ಕಾಣಿಸಿಕೊಂಡಾಗ ಅವರ ಓದು ಮುಂದೆ ಸಾಗುವುದಿಲ್ಲ.
ಇತ್ತೀಚೆಗೆ ನಡೆಸಿದ ಹಲವು ಮಿದುಳಿನ ಅರಕೆಗಳು ಓದಿನಲ್ಲಿ ಬೇಗನೆ ಮುಂದೆ ಹೋಗುವ ಮಕ್ಕಳಿಗೂ ಹಿಂದೆ ಬೀಳುವ ಮಕ್ಕಳಿಗೂ ನಡುವೆ ಅವರು ಪದಗಳನ್ನು ಓದುವ ಬಗೆಯಲ್ಲೇ ಇಂತಹ ವ್ಯತ್ಯಾಸವಿದೆಯೆಂಬುದನ್ನು ಸ್ಪಶ್ಟವಾಗಿ ತೋರಿಸಿಕೊಟ್ಟಿವೆ. ಓದಿನಲ್ಲಿ ಬೇಗನೆ ಮುಂದೆ ಹೋಗುವ ಮಕ್ಕಳು ಓದುತ್ತಿರುವಾಗ, ಅವರ ಮಿದುಳಿನಲ್ಲಿ ಮೂರು ಜಾಗಗಳು ಮಿಂಚುತ್ತಿರುತ್ತವೆ: ಬರಿಗೆಗಳನ್ನು ಗುರುತಿಸುವ ಕಣ್ಣಿಗೆ ಸಂಬಂದಿಸಿದ ಜಾಗ, ಅವನ್ನು ಉಲಿಗಳೊಂದಿಗೆ ಜೋಡಿಸುವ ಕಿವಿಗೆ ಸಂಬಂದಿಸಿದ ಜಾಗ, ಮತ್ತು ಅವನ್ನು ಹುರುಳಿನೊಂದಿಗೆ ಸಂಬಂದಿಸುವ ಮಿದುಳಿನ ಹಿಂಬಾಗದಲ್ಲಿರುವ ಜಾಗ. ಓದಿನಲ್ಲಿ ಹಿಂದೆ ಬೀಳುವ ಮಕ್ಕಳು ಓದುತ್ತಿರುವಾಗ, ಅವರ ಮಿದುಳಿನಲ್ಲಿ ಕಣ್ಣಿಗೆ ಮತ್ತು ಹುರುಳಿಗೆ ಸಂಬಂದಿಸಿದ ಜಾಗಗಳು ಮಾತ್ರ ಮಿಂಚುತ್ತಿರುತ್ತವಲ್ಲದೆ, ಕಿವಿಗೆ ಸಂಬಂದಿಸಿದ ಜಾಗ ಮಿಂಚುತ್ತಿರುವುದಿಲ್ಲ. ಎಂದರೆ, ಪದಗಳನ್ನು ಬರಿಗೆಗಳಾಗಿ ಒಡೆದು, ಅವನ್ನು ಉಲಿಗಳೊಂದಿಗೆ ಸಂಬಂದಿಸಿ ಓದುವುದು ಹೇಗೆ ಎಂಬುದನ್ನು ಅವರು ಕಲಿತಿಲ್ಲ.
ಒಮ್ಮೆ ಪದಗಳನ್ನು ಬರಿಗೆಗಳಾಗಿ ಬಿಡಿಸಿ, ಅವನ್ನು ಉಲಿಗಳೊಂದಿಗೆ ಸಂಬಂದಿಸಲು ಕಲಿತಮೇಲೆ, ಆಗಾಗ ಬರುವ ಪದಗಳನ್ನು ಇಡಿ ಇಡಿಯಾಗಿ ಗುರುತಿಸಿ ಓದುವ ಬಗೆಯನ್ನೂ ಮಕ್ಕಳು ಕಲಿತುಕೊಳ್ಳಬೇಕಾಗುತ್ತದೆ; ಯಾಕೆಂದರೆ, ಬರಹಗಳನ್ನು ಬೇಗನೆ ಮತ್ತು ಸಲೀಸಾಗಿ ಓದಲು ಇಂತಹ ಕಲಿಕೆಯೂ ಬೇಕಾಗುತ್ತದೆ. ಆದರೆ, ಆಮೇಲೆಯೂ, ಅಪರೂಪಕ್ಕೆ ಬರುವ ಪದಗಳನ್ನು ಮತ್ತು ಹೊಸ ಪದಗಳನ್ನು ಓದಲು ಅವನ್ನು ಬರಿಗೆಗಳಾಗಿ ಒಡೆದು ಉಲಿಗಳೊಂದಿಗೆ ಸಂಬಂದಿಸುವ ಬಗೆ ಅವರಿಗೆ ಬೇಕಾಗುತ್ತದೆ.
ಬರಹಗಳಲ್ಲಿ ಬರುವ ಪದಗಳನ್ನು ಓದುವ ಬಗೆ ಹೇಗೆ ಎಂಬುದನ್ನು ಕಲಿತರೆ ಸಾಲದು, ಅವನ್ನು ಪದಕಂತೆಗಳಾಗಿ ಮತ್ತು ಸೊಲ್ಲುಗಳಾಗಿ ಜೋಡಿಸಿ, ಅವುಗಳಿಂದ ಹುರುಳನ್ನು ಪಡೆಯುವುದು ಹೇಗೆ ಎಂಬುದನ್ನೂ ಮಕ್ಕಳು ಕಲಿಯಬೇಕಾಗುತ್ತದೆ. ಅವರ ಓದು ಬೇಗನೆ ಮತ್ತು ಸಲೀಸಾಗಿ ನಡೆಯುತ್ತಿದೆಯಾದರೆ ಮಾತ್ರ ಅವರಿಗೆ ಈ ರೀತಿ ತಮ್ಮ ಓದಿನಿಂದ ಹುರುಳನ್ನು ಪಡೆಯಲು ಬರುತ್ತದೆ. ತುಂಬಾ ಮೆಲ್ಲಗೆ ಓದುವ ಮಕ್ಕಳಿಗೆ ಪದಗಳು ಮಾತ್ರ ಕಾಣಿಸುತ್ತವಲ್ಲದೆ ಪದಕಂತೆಗಳು ಇಲ್ಲವೇ ಸೊಲ್ಲುಗಳು ಕಾಣಿಸುವುದಿಲ್ಲ.
ಓದಲು ಕಲಿಯುತ್ತಿರುವ ಮಕ್ಕಳ ಮಿದುಳಿನಲ್ಲಿ ಮಾತಿನ ಪದನೆರಕೆ (ಪದಕೋಶ) ಮತ್ತು ಓದಿನ ಪದನೆರಕೆ ಎಂಬುದಾಗಿ ಎರಡು ಬಗೆಯ ಪದನೆರಕೆಗಳು ನೆಲೆಗೊಳ್ಳುತ್ತವೆ; ಇವುಗಳಲ್ಲಿ ಓದಿನ ಪದನೆರಕೆಯನ್ನು ಹಿಗ್ಗಿಸುವ ಮೂಲಕ ಮಕ್ಕಳು ಓದಿನಲ್ಲಿ ಮುಂದೆ ಬರುವಂತೆ ಮಾಡಬಹುದು. ಬಗೆ ಬಗೆಯ ಬರಹಗಳನ್ನು, ಮತ್ತು ಹೆಚ್ಚು ಹೆಚ್ಚು ಬರಹಗಳನ್ನು ಅವರು ಓದುವ ಹಾಗೆ ಮಾಡುವ ಮೂಲಕ ಅವರ ಈ ಓದಿನ ಪದನೆರಕೆಯನ್ನು ಹಿಗ್ಗಿಸಲು ಬರುತ್ತದೆ.
ಕೆಲವು ಮಂದಿ ತಾಯ್ತಂದೆಯರು ಪಟ್ಯಪುಸ್ತಕಗಳನ್ನು ಹೊರತುಪಡಿಸಿ ಬೇರೆ ಯಾವುದನ್ನೂ ಮಕ್ಕಳು ಓದಬಾರದೆಂದು ಕಟ್ಟಲೆ ಮಾಡುತ್ತಾರೆ; ಕತೆ ಕಾದಂಬರಿಗಳನ್ನು ಓದಿ ಸಮಯ ಹಾಳುಮಾಡಬಾರದೆಂದು ಆಗಾಗ ಮಕ್ಕಳಿಗೆ ಹೇಳುತ್ತಿರುತ್ತಾರೆ. ಆದರೆ, ಬರೇ ಪಟ್ಯಪುಸ್ತಕಗಳನ್ನು ಮಾತ್ರವೇ ಓದುತ್ತಿದ್ದರೆ ಮಕ್ಕಳ ಓದಿನ ಪದನೆರಕೆ ತುಂಬಾ ಚಿಕ್ಕದಾಗಿಯೇ ಉಳಿಯುತ್ತದೆ. ಅದನ್ನು ಹಿಗ್ಗಿಸಬೇಕಿದ್ದಲ್ಲಿ ಅವರು ಎಲ್ಲಾ ಬಗೆಯ ಬರಹಗಳನ್ನೂ ಓದುತ್ತಿರಬೇಕು. ಹಾಗಾಗಿ, ಹೆಚ್ಚು ಹೆಚ್ಚು ಪುಸ್ತಕಗಳನ್ನು ಮತ್ತು ಬೇರೆ ಬಗೆಯ ಬರಹಗಳನ್ನು ಅವರು ಓದುವಂತೆ ಮಾಡಬೇಕು.
ಓದಿನಲ್ಲಿ ತಮಗೆ ತಿಳಿಯದ ಪದ ಬಂದಾಗ, ಅದರ ಹುರುಳನ್ನು ಪದನೆರಕೆಯ ನೆರವಿನಿಂದ ಕಂಡುಹಿಡಿಯುವುದು ಹೇಗೆ ಎಂಬುದನ್ನೂ ಅವರಿಗೆ ತೋರಿಸಿಕೊಡಬೇಕು. ಪದನೆರಕೆಗಳಲ್ಲಿ ಪದಗಳಿಗೆ ಹಲವು ಹುರುಳುಗಳನ್ನು ಕೊಟ್ಟಿರುತ್ತಾರೆ. ಇವುಗಳಲ್ಲಿ ತಮ್ಮ ಓದಿಗೆ ಹೊಂದಿಕೆಯಾಗುವಂತಹದನ್ನು ಆರಿಸಿಕೊಳ್ಳುವುದು ಹೇಗೆ ಎಂಬುದನ್ನೂ ಅವರಿಗೆ ತೋರಿಸಿಕೊಡಬೇಕು. ಈ ರೀತಿ ತಮ್ಮ ಓದಿಗೆ ಪದನೆರಕೆಯ ನೆರವನ್ನು ಪಡೆಯಲು ಕಲಿತ ಮಕ್ಕಳ ಓದಿನ ಪದನೆರಕೆಯೂ ಬೇಗನೆ ಹಿಗ್ಗುತ್ತದೆ.
ಓದಿನಲ್ಲಿ ಹಿಂದೆ ಬೀಳುವ ಮಕ್ಕಳು ಬೇರೆ ವಿಶಯಗಳಲ್ಲೂ ಹಿಂದೆ ಬೀಳುತ್ತಾರೆ; ಯಾಕೆಂದರೆ, ಈ ಎಲ್ಲಾ ವಿಶಯಗಳ ಕಲಿಕೆಯನ್ನೂ ಅವರು ಓದಿನ ಮೂಲಕವೇ ನಡೆಸಬೇಕಾಗುತ್ತದೆ. ಹಾಗಾಗಿ, ಮಕ್ಕಳು ಬೇಗನೆ ಮತ್ತು ಸಲೀಸಾಗಿ ಓದಲು ಕಲಿಯುವಂತೆ ಮಾಡುವುದು, ಮತ್ತು ಇದಕ್ಕಾಗಿ ಅವರ ಓದು ಸರಿಯಾದ ಕ್ರಮದಲ್ಲಿ ಮುಂದುವರಿಯುವಂತೆ ಮಾಡುವುದು ತುಂಬಾ ಮುಕ್ಯವಾದ ಕೆಲಸವಾಗಿದೆ.
(ಈ ಬರಹ ವಿಜಯ ಕರ್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)
ನುಡಿಯರಿಮೆಯ ಇಣುಕುನೋಟ – 11
ಕನ್ನಡದಲ್ಲಿ ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡಬೇಕಾದಾಗಲೆಲ್ಲ ಹೆಚ್ಚಿನ ಅರಿವಿಗರೂ ಸಂಸ್ಕ್ರುತ ಪದಗಳನ್ನೇ ಆರಿಸಿಕೊಳ್ಳುತ್ತಾರೆ; ಇದಕ್ಕಾಗಿ ಕನ್ನಡದವೇ ಆದ ಪದಗಳನ್ನು ಬಳಸುವುದು ತುಂಬಾ ಅಪರೂಪ.
ಈ ಕಾರಣಕ್ಕಾಗಿ, ಕನ್ನಡದವೆಂದು ಹೇಳಲಾಗುವ ಹೆಚ್ಚಿನ ಅರಿಮೆಯ ಪದಕೋಶಗಳಲ್ಲೂ ಇವತ್ತು ನೂರಕ್ಕೆ ಎಂಬತ್ತರಶ್ಟು ಇಲ್ಲವೇ ಅದಕ್ಕಿಂತಲೂ ಹೆಚ್ಚು ಸಂಸ್ಕ್ರುತ ಪದಗಳನ್ನು ಕಾಣಬಹುದು. ಕನ್ನಡ ಅರಿವಿಗರ ಈ ನಿಲುವಿನಿಂದಾಗಿ, ಇವತ್ತು ಕನ್ನಡದ ಅರಿಮೆಯ ಬರಹಗಳು ಸಂಸ್ಕ್ರುತ ಪದಗಳಿಂದ ತುಂಬಿ ತುಳುಕುತ್ತಿವೆ.
ಹಿಂದಿನ ಕಾಲದಲ್ಲಿ ಕನ್ನಡದಲ್ಲಿ ಬರೆಯುವವರಿಗೆ ಬೇಕಾಗಿರುವ ಹೆಚ್ಚಿನ ತಿಳಿವುಗಳೂ ಸಂಸ್ಕ್ರುತದಲ್ಲಿದ್ದುವು; ಹಾಗಾಗಿ, ಅವನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕೆ ಬೇಕಾಗುವ ಅರಿಮೆಯ ಪದಗಳಲ್ಲಿ ಹೆಚ್ಚಿನವನ್ನೂ ಸಂಸ್ಕ್ರುತದಿಂದಲೇನೇ ಎರವಲು ಪಡೆಯಲಾಗುತ್ತಿತ್ತು, ಮತ್ತು ಆವತ್ತಿಗೆ ಅದು ಸರಿಯಾದ ದಾರಿಯಾಗಿತ್ತು.
ಆದರೆ, ಇವತ್ತು ಅರಿಮೆಯ (ವಿಜ್ನಾನದ) ಬರಹಗಾರರಿಗೆ ಬೇಕಾಗುವ ಹೆಚ್ಚಿನ ತಿಳಿವುಗಳೂ ಇಂಗ್ಲಿಶ್ನಲ್ಲಿವೆ; ಹಾಗಾಗಿ, ಅವನ್ನು ಇಂಗ್ಲಿಶ್ನಿಂದ ಕನ್ನಡಕ್ಕೆ ತರಬೇಕಾದಾಗ, ಅದಕ್ಕೆ ಬೇಕಾಗುವ ಪದಗಳನ್ನು ಇಂಗ್ಲಿಶ್ನಿಂದ ಎರವಲು ಪಡೆಯುವುದು, ಇಲ್ಲವೇ ಕನ್ನಡದಲ್ಲೇನೇ ಹೊಸದಾಗಿ ಉಂಟುಮಾಡಿಕೊಳ್ಳುವುದು ಎಂಬ ಎರಡು ದಾರಿಗಳು ಇವತ್ತಿನ ಮಟ್ಟಿಗೆ ಸರಿಯಾದುವು.
ಹೀಗಿದ್ದರೂ, ಕನ್ನಡದ ಬರಹಗಾರರು ಇವತ್ತಿಗೂ ಅರಿಮೆಯ ಪದಗಳಾಗಿ ಸಂಸ್ಕ್ರುತ ಪದಗಳನ್ನು ಬಳಸುವ ಹಳೆಯ ಸಂಪ್ರದಾಯವನ್ನೇ ಮುಂದುವರಿಸುತ್ತಿದ್ದಾರೆ; ತಮಗೆ ಬೇಕಾಗಿರುವ ಪದಗಳು ಸಂಸ್ಕ್ರುತದಲ್ಲಿಲ್ಲವಾದರೆ, ಹೊಸ ಪದಗಳನ್ನು ಸಂಸ್ಕ್ರುತದಲ್ಲೇನೇ ಉಂಟುಮಾಡಿ ಕನ್ನಡಕ್ಕೆ ತರುವಂತಹ ಇನ್ನೊಂದು ವಿಚಿತ್ರವಾದ ಸಂಪ್ರದಾಯವನ್ನೂ ಅವರು ಹುಟ್ಟುಹಾಕಿಕೊಂಡಿದ್ದಾರೆ.
ಹೀಗೆ ಮಾಡುತ್ತಿರುವುದಕ್ಕಾಗಿ, ಅವರು ಕೆಲವು ನೆವಗಳನ್ನೂ ಕೊಡುತ್ತಿದ್ದಾರೆ: ಇಂಗ್ಲಿಶ್ನಲ್ಲಿ ಅರಿಮೆಯ ಪದಗಳಾಗಿ ಲ್ಯಾಟಿನ್ ಇಲ್ಲವೇ ಗ್ರೀಕ್ ಪದಗಳನ್ನು ಬಳಸುವ ಹಾಗೆ ಕನ್ನಡದಲ್ಲಿ ಸಂಸ್ಕ್ರುತ ಪದಗಳನ್ನು ಬಳಸಲಾಗುತ್ತದೆಯೆಂಬುದು ಇವುಗಳಲ್ಲೊಂದು.
ಆದರೆ, ಇಂಗ್ಲಿಶ್ಗೆ ಲ್ಯಾಟಿನ್ ಇರುವ ಹಾಗೆ ಕನ್ನಡಕ್ಕೆ ಸಂಸ್ಕ್ರುತ ಅಲ್ಲ; ಯಾಕೆಂದರೆ, ಇಂಗ್ಲಿಶ್ ಮತ್ತು ಲ್ಯಾಟಿನ್ಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆ, ಮತ್ತು ಕನ್ನಡ ಮತ್ತು ಸಂಸ್ಕ್ರುತಗಳು ಬೇರೆ ಬೇರೆ ನುಡಿಕುಟುಂಬಗಳಿಗೆ ಸೇರಿವೆ. ಇಂಗ್ಲಿಶ್ಗೆ ಬೇಕಾಗುವ ಪದಗಳನ್ನು ಲ್ಯಾಟಿನ್ನಲ್ಲಿ ಉಂಟುಮಾಡಿದಾಗ ಹೆಚ್ಚಿನ ತೊಂದರೆಗಳೇನೂ ಎದುರಾಗುವುದಿಲ್ಲ; ಆದರೆ, ಕನ್ನಡಕ್ಕೆ ಬೇಕಾಗುವ ಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಿದಾಗ ಹಲವು ತೊಂದರೆಗಳು ಎದುರಾಗುತ್ತವೆ:
ಇಂಗ್ಲಿಶ್ನಲ್ಲಿ ಮುಕ್ಯವಾಗಿ ನವ್ನ್, ವರ್ಬ್, ಮತ್ತು ಎಜಕ್ಟಿವ್ ಎಂಬುದಾಗಿ ಮೂರು ಬಗೆಯ ಪದಗಳಿವೆ; ಕನ್ನಡದಲ್ಲೂ ಇಂತಹವೇ ಮೂರು ಬಗೆಯ ಪದಗಳಿವೆ. ಆದರೆ, ಸಂಸ್ಕ್ರುತದಲ್ಲಿ ಮುಕ್ಯವಾಗಿ ನಾಮಪದ ಮತ್ತು ಕ್ರಿಯಾಪದ ಎಂಬ ಎರಡು ಬಗೆಯ ಪದಗಳು ಮಾತ್ರ ಇವೆ.
ಹಾಗಾಗಿ, ಇಂಗ್ಲಿಶ್ನ ಅರಿಮೆಯ ಪದಗಳಿಗೆ ಸಮನಾದ ಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡಕ್ಕೆ ತರಹೋದರೆ, ನವ್ನ್ ಮತ್ತು ಎಜಕ್ಟಿವ್ಗಳ ನಡುವಿನ ವ್ಯತ್ಯಾಸವನ್ನು ಅವುಗಳಲ್ಲಿ ಸರಿಯಾಗಿ ತೋರಿಸಲು ಬರುವುದಿಲ್ಲ. ಈ ತೊಂದರೆಯಿಂದಾಗಿ, ಇವತ್ತು ಬಳಕೆಯಲ್ಲಿರುವ ಅರಿಮೆಯ ಪದಕೋಶಗಳಲ್ಲಿ ತುಂಬಾ ಗೊಂದಲವುಂಟಾಗಿರುವುದನ್ನು ಕಾಣಬಹುದು.
ಅರಿಮೆಯ ಬರಹಗಳಲ್ಲಿ ಕನ್ನಡ ಪದಗಳನ್ನು ಬಳಸಿದರೆ, ಅವು ಸಂಸ್ಕ್ರುತ ಪದಗಳ ಹಾಗೆ ಕಚಿತವಾದ ಹುರುಳನ್ನು ಕೊಡಲಾರವು ಎಂಬುದು ಇನ್ನೊಂದು ನೆವ; ಆದರೆ, ಸಂಸ್ಕ್ರುತ ಪದಗಳು ಕನ್ನಡದಲ್ಲಿ ಉಂಟುಮಾಡುತ್ತಿರುವ ಮೇಲಿನ ಗೊಂದಲವೇ ಇದನ್ನು ತಳ್ಳಿಹಾಕುತ್ತದೆ.
ಇವತ್ತು ಇಂಗ್ಲಿಶ್ನಲ್ಲಿ ಕಂಪ್ಯೂಟರ್ಗೆ ಸಂಬಂದಿಸಿದ ಹಲವು ಅರಿಮೆಯ ಪದಗಳನ್ನು ದಿನಬಳಕೆಯ ಪದಗಳನ್ನು ಬಳಸಿಯೇ ಉಂಟುಮಾಡಲಾಗುತ್ತಿದೆ; ಮವ್ಸ್ ‘ಇಲಿ’, ವಿಂಡೋಸ್ ‘ಕಿಟಿಕಿ’, ಟ್ರೀ ‘ಮರ’, ವೆಬ್ ‘ಬಲೆ’ ಎಂಬಂತಹ ಈ ಪದಗಳಿಂದಾಗಿ ಗೊಂದಲವೇನೂ ಉಂಟಾದ ಹಾಗೆ ಕಾಣಿಸುವುದಿಲ್ಲ.
ಹಾಗಾಗಿ, ಕನ್ನಡದ ಅರಿಮೆಯ ಪದಗಳಿಗಾಗಿ ಸಂಸ್ಕ್ರುತದ ಮೊರೆಹೊಗುವ ಇವತ್ತಿನ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಒಳ್ಳೆಯದು. ಇಂಗ್ಲಿಶ್ನಿಂದ ಅರಿಮೆಯ ಬರಹಗಳನ್ನು ಕನ್ನಡಕ್ಕೆ ತರುವಾಗ, ಕನ್ನಡ ಪದಗಳ ಸೊಗಡನ್ನು ಕೆಡಿಸದಂತಹ ಇಂಗ್ಲಿಶ್ ಪದಗಳನ್ನು ಉಳಿಸಿಕೊಳ್ಳಬಹುದು, ಮತ್ತು ಅದನ್ನು ಕೆಡಿಸುವಂತಹ ಪದಗಳ ಬದಲು ಕನ್ನಡದವೇ ಆದ ಪದಗಳನ್ನು ಬಳಸಿ ಹೊಸ ಪದಗಳನ್ನು ಉಂಟುಮಾಡಿಕೊಳ್ಳಬಹುದು; ಇದೇ ಕನ್ನಡಕ್ಕೆ ಸರಿಯಾದ ದಾರಿ.
ಇಲ್ಲಿ ಇನ್ನೊಂದು ವಿಶಯವನ್ನೂ ಒತ್ತಿ ಹೇಳಬೇಕಾಗಿದೆ: ಇಂಗ್ಲಿಶ್ನಿಂದ ಅರಿಮೆಯ ಬರಹಗಳನ್ನು ಕನ್ನಡಕ್ಕೆ ತರುವಾಗ, ಎರಡು ಮುಕ್ಯ ಗುರಿಗಳಿಗಾಗಿ ನಾವು ಅವುಗಳಲ್ಲಿರುವ ಇಂಗ್ಲಿಶ್ ಪದಗಳಿಗೆ ಬದಲಾಗಿ ಕನ್ನಡದವೇ ಆದ ಪದಗಳನ್ನು ಬಳಸಲು ಹೋಗುತ್ತೇವೆ: ಹಾಗೆ ಮಾಡುವ ಮೂಲಕ ಬರಹ ಏನನ್ನು ತಿಳಿಸುತ್ತದೆ ಎಂಬುದು ಕನ್ನಡಿಗರಿಗೆ ಸುಲಬವಾಗಿ ತಿಳಿಯುವಂತಾಗಬೇಕು ಎಂಬುದೊಂದು, ಮತ್ತು ಕನ್ನಡದ ಸೊಗಡು ಕೆಡದಂತೆ ಉಳಿಯಬೇಕು ಎಂಬುದಿನ್ನೊಂದು.
ಇತ್ತೀಚೆಗೆ ಕಂಪ್ಯೂಟರ್ಗಳಿಗೆ ಸಂಬಂದಿಸಿದ ಕೆಲವು ಕಯ್ಪಿಡಿಗಳಲ್ಲಿ ಹೆಚ್ಚಿನ ಇಂಗ್ಲಿಶ್ ಪದಗಳನ್ನೂ ಹಾಗೆಯೇ ಉಳಿಸಿರುವುದನ್ನು ಕಾಣಬಹುದು. ಇಂಗ್ಲಿಶ್ ಪದಗಳ ಹುರುಳು ಗೊತ್ತಿರುವವರು ಮಾತ್ರ ಅವನ್ನು ಓದಿ ತಿಳಿದುಕೊಳ್ಳಬಲ್ಲರು, ಮತ್ತು ಅವುಗಳಲ್ಲಿ ಕನ್ನಡದ ಸೊಗಡು ಪೂರ್ತಿ ಕೆಟ್ಟುಹೋಗಿರುತ್ತದೆ; ಎಂದರೆ, ಮೇಲಿನ ಎರಡು ಗುರಿಗಳನ್ನೂ ಅವು ತಲಪುವುದೇ ಇಲ್ಲ.
ಇಂತಹ ಕಯ್ಪಿಡಿಗಳಲ್ಲಿ ಬರುವ ಇಂಗ್ಲಿಶ್ ಪದಗಳಿಗೆ ಬದಲಾಗಿ ಸಂಸ್ಕ್ರುತ ಪದಗಳನ್ನು ಬಳಸಿದರೂ ಪರಿಣಾಮ ಒಂದೇ: ಅವನ್ನು ಓದಿ ತಿಳಿಯಲು ಇಂಗ್ಲಿಶ್ ಪದಗಳ ಬದಲು ಸಂಸ್ಕ್ರುತ ಪದಗಳ ಹುರುಳು ಗೊತ್ತಿರಬೇಕು, ಮತ್ತು ಅವು ಕನ್ನಡದ ಸೊಗಡನ್ನು ಕೆಡಿಸದಿರುವುದಿಲ್ಲ. ಎಂದರೆ, ಇಂತಹ ಬರಹಗಳೂ ಮೇಲಿನ ಎರಡು ಗುರಿಗಳನ್ನು ತಲಪುವುದೇ ಇಲ್ಲ.
ಹಲವು ಹೆಚ್ಚಿನ ಸಂಸ್ಕ್ರುತ ಪದಗಳ ಹುರುಳುಗಳನ್ನು ಕಲಿಯುವುದಕ್ಕಿಂತಲೂ ಮೂಲ ಬರಹದಲ್ಲಿದ್ದ ಇಂಗ್ಲಿಶ್ ಪದಗಳ ಹುರುಳುಗಳನ್ನು ಕಲಿಯುವುದೇ ಕನ್ನಡಿಗರ ಮಟ್ಟಿಗೆ ಒಳ್ಳೆಯದಲ್ಲವೇ? ಯಾಕೆಂದರೆ, ಮುಂದೆ ಹೆಚ್ಚಿನ ತಿಳಿವನ್ನು ಪಡೆಯಬೇಕೆಂದಿರುವವರಿಗೆ ಇಂಗ್ಲಿಶ್ ಪದಗಳ ತಿಳಿವು ನೆರವಾಗಬಲ್ಲುದು; ಆದರೆ, ಸಂಸ್ಕ್ರುತ ಪದಗಳ ತಿಳಿವು ಯಾವ ನೆರವನ್ನೂ ನೀಡಲಾರವು.
ಅರಿಮೆಯ ಬರಹಗಳಿಂದ ತಿಳಿವನ್ನು ಪಡೆಯುವುದು ಮಾತ್ರವಲ್ಲದೆ, ಅದನ್ನು ಒರೆಗೆ ಹಚ್ಚುವ ಮತ್ತು ಅವುಗಳಲ್ಲಿಲ್ಲದ ಹೊಸ ತಿಳಿವನ್ನು ಕಂಡುಹಿಡಿಯುವ ಕೆಲಸವನ್ನೂ ನಾವಿಂದು ನಡೆಸಬೇಕಾಗಿದೆ. ಹೆಚ್ಚು ಹೆಚ್ಚು ಸಂಸ್ಕ್ರುತ ಇಲ್ಲವೇ ಇಂಗ್ಲಿಶ್ ಪದಗಳನ್ನು ಬಳಸಿರುವ ಬರಹಗಳನ್ನು ಕಶ್ಟಪಟ್ಟು ಅರಿಯುವುದರಲ್ಲಿಯೇ ನಮ್ಮ ಸಮಯವೆಲ್ಲ ಕಳೆದುಹೋಗುತ್ತದೆ. ಅವನ್ನು ಒರೆಗೆ ಹಚ್ಚುವ ಮತ್ತು ಹೊಸ ತಿಳಿವನ್ನು ಕಂಡುಹಿಡಿಯುವ ಕೆಲಸದಲ್ಲೂ ನಮ್ಮ ಕಲಿವಿಗರು ತೊಡಗಬೇಕಿದ್ದಲ್ಲಿ, ಅರಿಮೆಯ ಪದಗಳಲ್ಲಿ ಹೆಚ್ಚಿನವೂ ಕನ್ನಡದವೇ ಆಗಿರಬೇಕು.
(ಈ ಬರಹ ವಿಜಯ ಕರ್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)