Posts Tagged ‘ಮಹಾಪ್ರಾಣ’

ಹೆಚ್ಚು ಬರಿಗೆಗಳಿರುವುದು ಸಿರಿತನವಲ್ಲ

ನುಡಿಯರಿಮೆಯ ಇಣುಕುನೋಟ – 13

ಕನ್ನಡ ಪದಗಳನ್ನು ಹೆಚ್ಚಿನವರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ನಮಗೆ ಬೇಕಾಗುವುದು ಒಟ್ಟು 31 ಬರಿಗೆಗಳು ಮಾತ್ರ. ಆದರೆ, ಇವತ್ತು ನಾವು ಕನ್ನಡ ಬರಹಗಳಲ್ಲಿ 48 (ಇಲ್ಲವೇ ಅದಕ್ಕಿಂತಲೂ ಹೆಚ್ಚು) ಬರಿಗೆಗಳನ್ನು ಬಳಸುತ್ತಿದ್ದೇವೆ. ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಟ್ಟಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ಸುಲಬವಾಗಬಲ್ಲುದು.

ಇದನ್ನು ವಿರೋದಿಸುವವರಲ್ಲಿ ಕೆಲವರ ವಾದ ಹೀಗಿರುತ್ತದೆ: ಕನ್ನಡ ಬರಹದಲ್ಲಿ ಈ ರೀತಿ ಹೆಚ್ಚು ಬರಿಗೆಗಳಿರುವುದು ಅದರ ಶ್ರೀಮಂತಿಕೆ; ಅವನ್ನು ಕಳೆದುಕೊಳ್ಳುವುದೆಂದರೆ, ಕನ್ನಡ ಬರಹವನ್ನು ಬಡತನಕ್ಕೆ ನೂಕಿದ ಹಾಗೆ, ಮತ್ತು ಅದರ ಸಂಸ್ಕ್ರುತಿಯನ್ನು ನಾಶಮಾಡಿದ ಹಾಗೆ.

ಆದರೆ, ಈ ವಾದ ನಿಜಕ್ಕೂ ಸರಿಯಲ್ಲ; ಪದಗಳನ್ನು ಓದುವ ಹಾಗೆಯೇ ಬರೆಯಲು ಎಶ್ಟು ಬರಿಗೆಗಳು ಬೇಕಾಗುತ್ತವೆಯೋ ಅಶ್ಟನ್ನು ಮಾತ್ರ ಉಳಿಸಿಕೊಂಡಿರುವ ಬರಹವೇ ತುಂಬಾ ಒಳ್ಳೆಯ ಬರಹವೆಂದೆನಿಸುತ್ತದೆ. ಬೇಕಾದುದಕ್ಕಿಂತ ಹೆಚ್ಚು ಬರಿಗೆಗಳನ್ನು ಬಳಸುವ ಬರಹವನ್ನು ಕಲಿಯುವುದೂ ಕಶ್ಟ, ಬಳಸುವುದೂ ಕಶ್ಟ.

ಹಳೆಗನ್ನಡದಲ್ಲಿ ಱ ಮತ್ತು ೞಗಳೆಂಬ ಎರಡು ಹೆಚ್ಚಿನ ಬರಿಗೆಗಳಿದ್ದುವು; ಆ ಕಾಲದಲ್ಲಿ ರ-ಱ ಮತ್ತು ಳ-ೞಗಳ ನಡುವೆ ಓದಿನಲ್ಲಿ ವ್ಯತ್ಯಾಸವಿದ್ದ ಕಾರಣ, ಅವನ್ನು ಬರಹದಲ್ಲಿ ಬಳಸುತ್ತಿದ್ದುದು ಹಳೆಗನ್ನಡದ ಮಟ್ಟಿಗೆ ಸಿರಿತನವಾಗಿತ್ತು; ಆದರೆ, ಇವತ್ತು ನಾವು ಅವೆರಡು ಬರಿಗೆಗಳನ್ನೂ ಬಿಟ್ಟುಕೊಟ್ಟಿದ್ದೇವೆ; ಯಾಕೆಂದರೆ, ನಮ್ಮ ಓದಿನಲ್ಲಿ ಅವುಗಳ ನಡುವಿನ ವ್ಯತ್ಯಾಸ ಇಲ್ಲವಾಗಿದೆ.

ಈ ಹೆಚ್ಚಿನ ಬರಿಗೆಗಳಿರುವುದು ಸಿರಿತನವೆಂದು, ಇಲ್ಲವೇ ಕನ್ನಡ ಬರಹದ ಸಂಸ್ಕ್ರುತಿಯೆಂದು ಅವನ್ನು ಇವತ್ತಿಗೂ ಉಳಿಸಿಕೊಂಡಿದ್ದಲ್ಲಿ, ನಮ್ಮ ಓದಿನಲ್ಲಿಲ್ಲದ ಈ ಎರಡು ಬಗೆಯ ವ್ಯತ್ಯಾಸಗಳನ್ನು ಬರಹದಲ್ಲಿ ಕಾಣಿಸುವ ಒಂದು ದೊಡ್ಡ ತೊಡಕು ನಮ್ಮದಾಗುತ್ತಿತ್ತು. ಕರೆ ‘ಬರಹೇಳು’, ಕರೆ ‘ಹಾಲು ಕರೆ’, ಊರು ‘ಹಳ್ಳಿ’, ಊರು ‘ನಿಲ್ಲಿಸು’, ತೆರೆ ‘ಕಡಲಿನ ತೆರೆ’, ತೆರೆ ‘ಬಾಗಿಲು ತೆರೆ’ ಎಂಬಂತಹ ಹಲವಾರು ಪದಗಳನ್ನು ಬರೆಯುವಾಗ, ಯಾವ ಪದದಲ್ಲಿ ರಕಾರವನ್ನು ಬಳಸಬೇಕು, ಮತ್ತು ಯಾವುದರಲ್ಲಿ ಱಕಾರವನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು. ಯಾಕೆಂದರೆ, ಮೇಲಿನ ಪದಜೋಡಿಗಳಲ್ಲಿ ರಕಾರವನ್ನು ಮೊದಲನೆಯದರಲ್ಲೂ ಱಕಾರವನ್ನು ಎರಡನೆಯದರಲ್ಲೂ ಬಳಸಬೇಕಾಗುತ್ತಿತ್ತು.

ಇದೇ ರೀತಿಯಲ್ಲಿ, ಉಳಿ ‘ಕೆತ್ತುವ ಉಳಿ’, ಉಳಿ ‘ ಮನೆಯಲ್ಲಿ ಉಳಿ’, ಎಳೆ ‘ಎಳತು’, ಎಳೆ ‘ಎಳೆದಾಡು’, ಬಳಸು ‘ನೇರವಲ್ಲದ’, ಬಳಸು ‘ಉಪಯೋಗಿಸು’ ಎಂಬಂತಹ ಬೇರೆ ಹಲವಾರು ಪದಜೋಡಿಗಳಲ್ಲಿ ಳಕಾರವನ್ನು ಯಾವ ಪದದಲ್ಲಿ ಬಳಸಬೇಕು ಮತ್ತು ೞಕಾರವನ್ನು ಯಾವ ಪದದಲ್ಲಿ ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು (ಎರಡನೆಯ ಪದದಲ್ಲಿ ೞಕಾರವಿತ್ತು).

ಹೊಸಗನ್ನಡವನ್ನು ಬಳಕೆಗೆ ತಂದವರು ಈ ಸಿರಿತನದ ಇಲ್ಲವೇ ಸಂಸ್ಕ್ರುತಿಯ ಹೊರೆಯನ್ನು ನಮ್ಮ ಮೇಲೆ ಹೊರಿಸ ಹೋಗದೆ ಒಂದು ದೊಡ್ಡ ಉಪಕಾರವನ್ನೇ ಮಾಡಿದ್ದಾರೆ. ಆದರೆ, ಸಂಸ್ಕ್ರುತದಿಂದ ಬಂದ ಎರವಲು ಪದಗಳ ಮಟ್ಟಿಗೆ ಮಾತ್ರ, ಅವರು ಇಂತಹದೇ ಇನ್ನೊಂದು ಬಗೆಯ ತೊಡಕನ್ನು ಇಲ್ಲವಾಗಿಸದೆ ಹಾಗೆಯೇ ಉಳಿಸಿದ್ದಾರೆ. ಸಂಸ್ಕ್ರುತದ ವಿಶಯವಾಗಿ ಅವರಿಗಿದ್ದ ಮೇಲರಿಮೆಯೇ ಇದಕ್ಕೆ ಕಾರಣ.

ಈ ಎರವಲು ಪದಗಳಲ್ಲಿ ಬರುವ ರು-ಋ, ಶ-ಷ, ಅಲ್ಪಪ್ರಾಣ-ಮಹಾಪ್ರಾಣ ಮೊದಲಾದವುಗಳ ನಡುವಿನ ವ್ಯತ್ಯಾಸ ಹೆಚ್ಚಿನ ಕನ್ನಡಿಗರ ಓದಿನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಹಾಗಾಗಿ, ಅವನ್ನು ಬರಹದಲ್ಲಿ ಕಾಣಿಸಬೇಕಿದ್ದರೆ, ಯಾವ ಪದದಲ್ಲಿ ಯಾವುದನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ. ಹಳೆಗನ್ನಡದ ರ-ಱ ಮತ್ತು ಳ-ೞ ವ್ಯತ್ಯಾಸಗಳ ಹಾಗೆಯೇ ಇವೂ ಕೂಡ ಕನ್ನಡ ಬರಹವನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ಹೆಚ್ಚಿನ ಕನ್ನಡಿಗರಿಗೂ ಅನವಶ್ಯಕವಾಗಿ ತೊಡಕನ್ನು ಉಂಟುಮಾಡುತ್ತವೆ.

ಸಂಸ್ಕ್ರುತ ಎರವಲುಗಳಾದ ಅವಶ್ಯ-ಮನುಷ್ಯ, ವಿಶಾಲ-ಕಷಾಯ, ಕೃಶ-ಕೃಷಿ, ಶಿಶು-ವಿಷು, ನಶಿಸು-ದೂಷಿಸು, ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಶ-ಷ ವ್ಯತ್ಯಾಸ ಕಾಣಿಸುತ್ತದೆ, ಆದರೆ ಅವುಗಳ ಓದಿನಲ್ಲಿ ಕಾಣಿಸುವುದಿಲ್ಲ; ಇದೇ ರೀತಿಯಲ್ಲಿ ಬೋಧಿಸು-ಭೇದಿಸು, ವರ್ಧಿಸು-ಮರ್ದಿಸು, ವಿಧಾನ-ವಿದಾಯ, ಸಂಪಾದಿಸು-ಸಂಬಂಧಿಸು ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಕಾಣಿಸುವ ಅಲ್ಪಪ್ರಾಣ-ಮಹಾಪ್ರಾಣ ವ್ಯತ್ಯಾಸವೂ ಓದಿನಲ್ಲಿಲ್ಲ.

ಹಳೆಗನ್ನಡದ ವ್ಯತ್ಯಾಸಗಳ ಹಾಗೆ, ಓದಿನಲ್ಲಿಲ್ಲದ ಈ ಸಂಸ್ಕ್ರುತ ಎರವಲುಗಳ ನಡುವಿನ ವ್ಯತ್ಯಾಸವನ್ನೂ ಬಿಟ್ಟುಕೊಡುವ ಮೂಲಕ ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗುವ ಹಾಗೆ ಮಾಡಬೇಕಾಗಿದೆ, ಮತ್ತು ಅದು ಎಲ್ಲಾ ಕನ್ನಡಿಗರನ್ನೂ ತಲಪುವ ಹಾಗೆ ಮಾಡಬೇಕಾಗಿದೆ. ಓದಿನಲ್ಲಿ ಕಾಣಿಸಿಕೊಳ್ಳದ ಈ ಹೆಚ್ಚಿನ ಬರಿಗೆಗಳು ಕನ್ನಡ ಬರಹದ ಸಿರಿವಂತಿಕೆಯೂ ಅಲ್ಲ, ಸಂಸ್ಕ್ರುತಿಯೂ ಅಲ್ಲ. ಕನ್ನಡ ಬರಹವನ್ನು ಬಳಸುವಲ್ಲಿ ಅವು ಒಂದು ಅವಶ್ಯವಿಲ್ಲದ ಹೊರೆ ಮಾತ್ರ.

ಓದಿನಲ್ಲಿಲ್ಲದ ಬರಿಗೆ ಒಂದು ಬರಹಕ್ಕೆ ಬೇಕಾಗುವುದಿಲ್ಲವೆಂಬುದಕ್ಕೆ ಸಂಸ್ಕ್ರುತದಿಂದಲೇ ಒಂದು ಎತ್ತುಗೆಯನ್ನು ಕೊಡಬಹುದು: ಕನ್ನಡ ಬರಹದಲ್ಲಿ ಎ-ಏ ಮತ್ತು ಒ-ಓ ಎಂಬ ವ್ಯತ್ಯಾಸ ಇದೆ; ಆದರೆ, ಸಂಸ್ಕ್ರುತ ಬರಹದಲ್ಲಿ ಈ ವ್ಯತ್ಯಾಸವಿಲ್ಲ. ಆದರೆ ಈ ಕಾರಣಕ್ಕಾಗಿ, ಕನ್ನಡ ಬರಹ ಸಂಸ್ಕ್ರುತ ಬರಹಕ್ಕಿಂತ ಹೆಚ್ಚು ಶ್ರೀಮಂತವಾದುದೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಸಂಸ್ಕ್ರುತ ಪದಗಳ ಓದಿನಲ್ಲಿ ಕಾಣಿಸದಿರುವ ಈ ವ್ಯತ್ಯಾಸ ಸಂಸ್ಕ್ರುತ ಬರಹದಲ್ಲಿ ಇಲ್ಲದಿರುವುದು ಸಂಸ್ಕ್ರುತ ಬರಹದ ಸಿರಿತನವಲ್ಲದೆ ಬಡತನವಲ್ಲ.

ಪದಗಳಲ್ಲಿ ಎಶ್ಟು ಉಲಿಗಳು ಬಳಕೆಯಾಗುತ್ತವೆ, ಮತ್ತು ಯಾವ ಉಲಿಗಳು ಬಳಕೆಯಾಗುತ್ತವೆ ಎಂಬ ವಿಶಯದಲ್ಲಿ ನುಡಿಗಳು ಒಂದರಿಂದೊಂದು ತೀರಾ ಬೇರಾಗಿರಬಲ್ಲುವು. ಆಪ್ರಿಕಾದ ಬೊತ್ಸ್‌ವಾನಾದಲ್ಲಿ ಬಳಕೆಯಲ್ಲಿರುವ ಕೆಲವು ನುಡಿಗಳಲ್ಲಿ ನೂರಕ್ಕಿಂತಲೂ ಹೆಚ್ಚು ಉಲಿಗಳು ಬಳಕೆಯಲ್ಲಿದ್ದು, ಅವನ್ನು ಓದುವಂತೆ ಬರೆಯಲು ನೂರಕ್ಕಿಂತಲೂ ಹೆಚ್ಚು ಬರಿಗೆಗಳು ಬೇಕಾಗುತ್ತವೆ. ಇದಕ್ಕೆ ಬದಲು, ಪಾಪುವಾ ನ್ಯೂಗಿನಿಯ ರೋತೋಕಸ್ ಎಂಬ ನುಡಿಯಲ್ಲಿ ಹತ್ತು-ಹನ್ನೆರಡು ಉಲಿಗಳು ಮಾತ್ರ ಬಳಕೆಯಲ್ಲಿದ್ದು, ಅವನ್ನು ಓದುವ ಹಾಗೆ ಬರೆಯಲು ಹತ್ತು-ಹನ್ನೆರಡು ಬರಿಗೆಗಳು ಮಾತ್ರ ಸಾಕಾಗುತ್ತವೆ.

ಜಗತ್ತಿನಲ್ಲಿರುವ ಎಲ್ಲಾ ನುಡಿಗಳಲ್ಲೂ ಬಳಕೆಯಲ್ಲಿರುವ ಉಲಿಗಳನ್ನು ಬರೆಯಬೇಕಿದ್ದಲ್ಲಿ ನೂರಾರು ಬರಿಗೆಗಳು ಮತ್ತು ಇನ್ನೂ ಹಲವಾರು ಬಗೆಯ ಗುರುತುಗಳು ಬೇಕಾಗುತ್ತವೆ. ಹಾಗಾಗಿ, ಯಾವುದೇ ಒಂದು ನುಡಿಯಲ್ಲೂ ಬೇಕಾದುದಕ್ಕಿಂತ ಹತ್ತೋ ಇಪ್ಪತ್ತೋ ಹೆಚ್ಚು ಬರಿಗೆಗಳಿದ್ದಲ್ಲಿ, ಅವುಗಳ ನೆರವಿನಿಂದ ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವಂತೆಯೇ ಬರೆಯಲು ಬರುತ್ತದೆಯೆಂಬುದು ಪೊಳ್ಳು ವಾದ.

ನಿಜಕ್ಕೂ ಕನ್ನಡ ಬರಹದಲ್ಲಿರುವ ಈ ಹೆಚ್ಚಿನ ಬರಿಗೆಗಳು ಸಂಸ್ಕ್ರುತ ಎರವಲುಗಳನ್ನು ಮಾತ್ರ ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯಲು ನೆರವಾಗುತ್ತವೆ; ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವ ಹಾಗೆ ಬರೆಯಬೇಕಿದ್ದಲ್ಲಿ, ಅದಕ್ಕಾಗಿ ಬೇರೆಯೇ ಹೆಚ್ಚಿನ ಬರಿಗೆಗಳನ್ನು ಉಂಟುಮಾಡಿಕೊಳ್ಳಬೇಕಾಗುತ್ತದೆ. ತುಳು ನುಡಿಯ ಪದಗಳನ್ನು ಅದರಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗಿರುವ ಬರಿಗೆಗಳು ಸಾಕಾಗುವುದಿಲ್ಲ; ಇನ್ನೊಂದು ಹೆಚ್ಚಿನ ಉಕಾರ ಮತ್ತು ಇನ್ನೆರಡು ಹೆಚ್ಚಿನ ಎಕಾರಗಳು ಬೇಕಾಗುತ್ತವೆ.

ನಿಜಕ್ಕೂ ಕನ್ನಡದವೇ ಆದ ಆಡುನುಡಿಗಳನ್ನೂ ಅವುಗಳಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗ ಬಳಕೆಯಾಗುತ್ತಿರುವ ಬರಿಗೆಗಳು ಸಾಕಾಗುವುದಿಲ್ಲ; ಗುಲ್ಬರ‍್ಗ ಕನ್ನಡದಲ್ಲಿ ಬರುವ ಎರಡು ಬಗೆಯ ಅಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ, ಸುಳ್ಯದ ಗವ್ಡ ಕನ್ನಡದಲ್ಲಿ ಬರುವ ಎರಡು ಬಗೆಯ ಉಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ ಬರೆದು ತೋರಿಸಲು ಕನ್ನಡ ಬರಹದಲ್ಲಿ ಬರಿಗೆಗಳಿಲ್ಲ.

ಹಾಗಾಗಿ, ಕನ್ನಡ ಬರಹದಲ್ಲಿ ಬರುವ ಪದಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ಬೇಕಾಗುವ 31 ಬರಿಗೆಗಳನ್ನು ಮಾತ್ರ ಉಳಿಸಿಕೊಳ್ಳುವುದೇ ಜಾಣತನ; ಉಳಿದುವನ್ನೆಲ್ಲ ಹೆಚ್ಚಿನ ಕನ್ನಡಿಗರೂ ಓದಬೇಕಾಗಿರುವ ಬರಹಗಳಿಂದ ತೆಗೆದುಹಾಕಬೇಕಾಗಿದೆ, ಮತ್ತು ಹಾಗೆ ಮಾಡುವ ಮೂಲಕ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಬಳಸುವಂತೆ ಮಾಡಬೇಕಾಗಿದೆ. ಸಂಸ್ಕ್ರುತಿ, ಶ್ರೀಮಂತಿಕೆ ಎಂಬಂತಹ ದೊಡ್ಡ ದೊಡ್ಡ ಪದಗಳನ್ನು ಬಳಸಿ ಓದುಗರು ಗೊಂದಲದಲ್ಲಿ ಬೀಳುವ ಹಾಗೆ ಮಾಡುವುದರಿಂದ ಕನ್ನಡಿಗರಿಗೇನೇ ಅನ್ಯಾಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಓದುವ ಹಾಗೆಯೇ ಬರೆಯುವುದು

ನುಡಿಯರಿಮೆಯ ಇಣುಕುನೋಟ – 10

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡ ಬರಹಗಳಲ್ಲಿ ಓದುವ ಹಾಗೆಯೇ ಬರೆಯಬೇಕು ಎಂದು ಹೇಳಿದರೆ, ಎಲ್ಲರೂ ಅವರವರು ಹೇಗೆ ಓದುತ್ತಾರೋ ಹಾಗೆ ಬರೆಯಬಹುದು, ಇಲ್ಲವೇ ಎಲ್ಲರೂ ತಮಗೆ ಕುಶಿಬಂದ ಹಾಗೆ ಬರೆಯಬಹುದು ಎಂದು ಹೇಳಿದ ಹಾಗಾಗುವುದಿಲ್ಲ; ಅಂತಹ ಪ್ರತಿಕ್ರಿಯೆ ಬಾರದಂತೆ ನಾನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಬೇಕು ಎಂಬುದಾಗಿ ಬರೆದಿದ್ದೆ. ಈ ಪದಗಳನ್ನು ಇವತ್ತು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಿದ್ದಾರೆ ಎಂಬುದನ್ನು ತಿಳಿವಿಗರು ಕಂಡುಹಿಡಿಯಬೇಕು, ಮತ್ತು ಅದಕ್ಕೆ ಅನುಸಾರವಾಗಿ, ಅವನ್ನು ಹೇಗೆ ಬರೆಯಬೇಕು ಎಂಬುದನ್ನು ತೀರ‍್ಮಾನಿಸಬೇಕು.

ಬರಹದ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಇನ್ನೊಬ್ಬರಿಗೆ ತಿಳಿಸುತ್ತೇವೆ, ಮತ್ತು ಬರಹ ರೂಪದಲ್ಲಿರುವ ಇನ್ನೊಬ್ಬರ ಅನಿಸಿಕೆಗಳನ್ನು ಓದಿನ ಮೂಲಕ ತಿಳಿದುಕೊಳ್ಳುತ್ತೇವೆ. ಈ ಎರಡು ಕೆಲಸಗಳೂ ಸರಿಯಾಗಿ ನಡೆಯಬೇಕಿದ್ದಲ್ಲಿ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವ ಮತ್ತು ಓದುವ ಕೆಲಸಗಳನ್ನು ನಡೆಸಬೇಕಾಗುತ್ತದೆ. ಈ ಕೆಲಸಗಳನ್ನು ಇವತ್ತು ಶಾಲೆಗಳಲ್ಲಿ ಕಲಿಸಲಾಗುತ್ತದೆಯಾದ ಕಾರಣ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವಂತೆ ಮತ್ತು ಓದುವಂತೆ ಮಾಡುವುದು ತೊಡಕಿನ ಕೆಲಸವೇನಲ್ಲ.

ಶಕಾರವನ್ನು ಹೆಚ್ಚಿನ ಕನ್ನಡಿಗರೂ ಶಕಾರವಾಗಿಯೇ ಓದುತ್ತಾರಲ್ಲದೆ ಸಕಾರವಾಗಿ ಬದಲಾಯಿಸಿ ಓದುವುದಿಲ್ಲ. ಆದರೆ, ಷಕಾರವನ್ನು ಹೆಚ್ಚಿನವರೂ ಶಕಾರವಾಗಿ ಬದಲಾಯಿಸಿ ಓದುತ್ತಾರೆ. ಹಾಗಾಗಿ, ಸಂಸ್ಕ್ರುತ ಎರವಲುಗಳಲ್ಲಿ ಬರುವ ಷಕಾರವನ್ನು ಶಕಾರವಾಗಿ ಬದಲಾಯಿಸಿ ಬರೆಯಬೇಕು, ಮತ್ತು ಶಕಾರವನ್ನು ಹಾಗೆಯೇ ಉಳಿಸಬೇಕು ಎಂಬ ತೀರ‍್ಮಾನಕ್ಕೆ ಬರಬೇಕಾಗುತ್ತದೆ.

ಇದೇ ರೀತಿಯಲ್ಲಿ, ಋಕಾರ, ಮಹಾಪ್ರಾಣ, ವಿಸರ‍್ಗ ಮೊದಲಾದ ಬೇರೆ ಕೆಲವು ಬರಿಗೆಗಳ ವಿಶಯದಲ್ಲೂ ಹೆಚ್ಚಿನ ಕನ್ನಡಿಗರ ಓದು ಹೇಗಿದೆಯೆಂಬುದನ್ನು ಕಂಡುಹಿಡಿದು, ಅದಕ್ಕನುಸಾರವಾಗಿ ಬರವಣಿಗೆಯನ್ನು ಬದಲಾಯಿಸಬೇಕು. ಹೀಗೆ ಮಾಡಿದಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗಬಲ್ಲುದು, ಮತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗುವಂತೆ ಮಾಡುವ ಕೆಲಸವೂ ಸುಲಬವಾಗಬಲ್ಲುದು.

ಹಳೆಗನ್ನಡದ ಱಕಾರ ಮತ್ತು ೞಕಾರಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೆ ಎಂಬುದನ್ನು ಗಮನಿಸಿ, ಹೊಸಗನ್ನಡವನ್ನು ಬರಹದಲ್ಲಿ ಬಳಸಲು ತೊಡಗಿದ ಕಾಲದಲ್ಲಿ ಅವನ್ನು ರಕಾರ ಮತ್ತು ಳಕಾರಗಳಾಗಿ ಬದಲಾಯಿಸಿ ಬರೆಯಲು ತೊಡಗಲಾಯಿತು. ಈ ಮಾರ‍್ಪಾಡನ್ನು ಮಾಡಿರದಿದ್ದರೆ, ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಇನ್ನಶ್ಟು ತೊಡಕಿನದಾಗುತ್ತಿತ್ತು. ಸಂಸ್ಕ್ರುತ ಎರವಲುಗಳಲ್ಲಿ ಬರುವ ಬರಿಗೆಗಳನ್ನು ಓದುವ ಹಾಗೆ ಬರೆಯುವಂತೆ ಮಾರ‍್ಪಡಿಸುವುದೂ ಇಂತಹದೇ ಒಂದು ಕೆಲಸ ಎಂಬುದನ್ನು ಇಲ್ಲಿ ಗಮನಿಸಬೇಕು.

ಇಶ್ಟರ ವರೆಗೆ ಈ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯುತ್ತಿದ್ದುದಕ್ಕೆ ಎರಡು ಮುಕ್ಯ ಕಾರಣಗಳಿದ್ದುವು: ಹಿಂದಿನ ಕಾಲದಲ್ಲಿ ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದವರೆಲ್ಲ ಅದನ್ನು ಸಂಸ್ಕ್ರುತದಲ್ಲಿ ಬರೆದಿರಿಸುತ್ತಿದ್ದರು; ಹಾಗಾಗಿ, ಯಾವುದೇ ಒಂದು ವಿಶಯದಲ್ಲಿ ಹೊಸ ತಿಳಿವನ್ನು ಪಡೆಯಬೇಕಿದ್ದರೂ ಸಂಸ್ಕ್ರುತದ ಮೊರೆಹೊಗಬೇಕಾಗಿತ್ತು.

ಇದರಿಂದಾಗಿ ಸಂಸ್ಕ್ರುತ ಬರಹಕ್ಕೆ ಒಂದು ಬಗೆಯ ಮೇಲ್ಮೆ ಬಂದಿತ್ತು; ಅದರ ಪದಗಳನ್ನು ಕನ್ನಡದಲ್ಲಿಯೂ ಸಂಸ್ಕ್ರುತದಲ್ಲಿರುವ ಹಾಗೆಯೇ ಉಳಿಸಿಕೊಳ್ಳುವುದರಿಂದ, ಮುಂದೆ ಸಂಸ್ಕ್ರುತ ಬರಹಗಳನ್ನು ಓದಲು ಕಲಿಯುವ ಕೆಲಸ ಕನ್ನಡಿಗರಿಗೆ ಸುಲಬವಾಗಬಹುದಾಗಿತ್ತು. ಕನ್ನಡ ಓದಿನ ಕಲಿಕೆ ಮುಂದೆ ನಡೆಸಲೇಬೇಕಾಗಿದ್ದ ಸಂಸ್ಕ್ರುತ ಓದಿಗೆ ಒಂದು ಮೆಟ್ಟಲಾಗಬಹುದಾಗಿತ್ತು. ಇದು ಒಂದು ಕಾರಣ.

ಆದರೆ, ಇವತ್ತು ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದಿರುವವರು ಯಾರೂ ಅದನ್ನು ಸಂಸ್ಕ್ರುತದಲ್ಲಿ ಬರೆಯಲು ಹೋಗುವುದಿಲ್ಲ; ಹಾಗಾಗಿ, ಹಿಂದಿನ ಕಾಲದಲ್ಲಿ ಅದಕ್ಕಿದ್ದ ಮೇಲ್ಮೆ ಇಂದು ಉಳಿದಿಲ್ಲ, ಮತ್ತು ಅದರ ಪದಗಳನ್ನು ಅದರ ಬರಹಗಳಲ್ಲಿರುವ ಹಾಗೆ ಬರೆಯಲು ಕಲಿಯುವ ಅವಶ್ಯಕತೆಯೂ ಇವತ್ತು ಕನ್ನಡಿಗರಿಗಿಲ್ಲ.

ಹಿಂದಿನ ಕಾಲದಲ್ಲಿ ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸವನ್ನು ಮುಕ್ಯವಾಗಿ ಉತ್ತರದಿಂದ ವಲಸೆಬಂದ ಮೇಲ್ವರ‍್ಗದ ಜನರು ನಡೆಸುತ್ತಿದ್ದರು; ಆರ‍್ಯರಾಗಿದ್ದ ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಆದರ ಮತ್ತು ಪೂಜ್ಯಬಾವಗಳಿದ್ದುವು. ಹಾಗಾಗಿ, ಅದರ ಪದಗಳನ್ನು ಮಾರ‍್ಪಡಿಸದೆ ಉಳಿಸುವುದು ಅವರ ಮಟ್ಟಿಗೆ ಅವಶ್ಯವಾಗಿತ್ತು. ಇದು ಇನ್ನೊಂದು ಕಾರಣ.

ಆದರೆ, ಇವತ್ತು ಎಲ್ಲಾ ವರ‍್ಗಗಳಿಗೆ ಸೇರಿದ ಕನ್ನಡಿಗರೂ ಕನ್ನಡ ಬರಹವನ್ನು ಬಳಸಲು ಕಲಿಯಬೇಕಾಗಿದೆ. ಇವರಲ್ಲಿ ಹೆಚ್ಚಿನವರೂ ದ್ರಾವಿಡ ಮೂಲದವರಾಗಿದ್ದು, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಮಾರ‍್ಪಡಿಸದೆ ಉಳಿಸಿಕೊಳ್ಳುವುದು ಅಂತಹ ಒಂದು ಪೂಜ್ಯವಾದ ವಿಶಯವೇ ಅಲ್ಲ; ಅದರಿಂದ ಅವರಿಗೆ ಬೇರೆ ಪ್ರಯೋಜನಗಳೂ ದೊರಕುವುದಿಲ್ಲ. ಹಾಗಾಗಿ, ಸಂಸ್ಕ್ರುತ ಎರವಲುಗಳನ್ನು ಕನ್ನಡದ ಸೊಗಡನ್ನು ಕೆಡಿಸದಂತೆ ಮಾರ‍್ಪಡಿಸುವುದಕ್ಕೆ ಹೆಚ್ಚಿನ ಕನ್ನಡಿಗರಿಂದಲೂ ವಿರೋದ ಬರಲಾರದು.

ಬೇರೆ ನುಡಿಗಳಿಂದ ಎರವಲಾಗಿ ಪಡೆದ ಪದಗಳನ್ನು ಯಾವ ನುಡಿಯಲ್ಲೂ ಆ ನುಡಿಯಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ; ಇದಕ್ಕೆ ಕೆಲವೇ ಕೆಲವು ಹೊರಪಡಿಕೆಗಳು ಮಾತ್ರ ಇವೆ. ಎತ್ತುಗೆಗಾಗಿ, ಸಂಸ್ಕ್ರುತ ಇಲ್ಲವೇ ಪ್ರಾಕ್ರುತ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಬ್ರಾಹ್ಮೀ ಲಿಪಿಯನ್ನು ಕನ್ನಡದಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಸಂಸ್ಕ್ರುತದ ಎರವಲುಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಸಂಸ್ಕ್ರುತ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಇದೇ ರೀತಿಯಲ್ಲಿ, ಅರೇಬಿಕ್ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಲಿಪಿಯನ್ನು ಟರ‍್ಕಿಶ್‌ನಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಅರೇಬಿಕ್ ಎರವಲುಗಳನ್ನು ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಅರೇಬಿಕ್ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಆದರೆ, ಎಲ್ಲಾ ನುಡಿಗಳೂ ಈ ರೀತಿ ಬೇರೊಂದು ನುಡಿಯ ಲಿಪಿಯನ್ನು ತಮ್ಮ ನುಡಿಗೆ ಅಳವಡಿಸಿಕೊಳ್ಳುವಾಗ ಆ ನುಡಿಯ ಪದಗಳನ್ನು ಅದರಲ್ಲಿರುವಂತೆ ಬರೆಯಲು ಬೇಕಾಗುವ ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಿಲ್ಲ; ಎತ್ತುಗೆಗಾಗಿ, ನಾಗರಿ ಲಿಪಿಯನ್ನು ಪಂಜಾಬಿ ನುಡಿಗೆ ಅಳವಡಿಸುವಾಗ, ಷಕಾರ, ಋಕಾರ, ಹಲವು ಬಗೆಯ ಒತ್ತುಬರಿಗೆಗಳು ಮೊದಲಾದುವನ್ನು ಉಳಿಸಿಕೊಂಡಿಲ್ಲ; ಈ ಕಾರಣಕ್ಕಾಗಿ, ಸಂಸ್ಕ್ರುತ ಎರವಲು ಪದಗಳನ್ನು ಇವತ್ತು ಪಂಜಾಬಿ ಬರಹದಲ್ಲಿ ಓದುವ ಹಾಗೆ ಬರೆಯಲಾಗುತ್ತದೆಯಲ್ಲದೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯುವುದಿಲ್ಲ.

ಮಲಯಾಳ ಬರಹದಲ್ಲೂ ಮೊದಲಿಗೆ ಮಹಾಪ್ರಾಣಾಕ್ಶರಗಳು, ಗಜಡದಬ ಮೊದಲಾದ ಆ ನುಡಿಗೆ ಬೇಡದಿರುವ ಹಲವು ಬರಿಗೆಗಳು ಇರಲಿಲ್ಲ; ಸಂಸ್ಕ್ರುತ ಬರಹಗಳನ್ನು ಬರೆಯಲು, ಮತ್ತು ಕೆಲವೊಮ್ಮೆ ಸಂಸ್ಕ್ರುತ ಪದಗಳನ್ನು ಮಲಯಾಳ ಬರಹಗಳಲ್ಲಿ ಬರೆಯಲು ಆ ಸಮಯದಲ್ಲಿ ಗ್ರಂತಲಿಪಿಯೆಂಬ ಬೇರೆಯೇ ಒಂದು ಲಿಪಿಯನ್ನು ಬಳಸಲಾಗುತ್ತಿತ್ತು.

ಆದರೆ, ಹದಿನೇಳನೇ ಶತಮಾನಕ್ಕಾಗುವಾಗ, ಮಲಯಾಳ ಸಾಹಿತ್ಯದಲ್ಲಿ ಬ್ರಾಹ್ಮಣರ ಪ್ರಾಬಲ್ಯ ಹೆಚ್ಚಾಯಿತು; ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಒಲವಿದ್ದುದರಿಂದ, ಮತ್ತು ಇವರ ಬರಹಗಳಲ್ಲಿ ತುಂಬಾ ಸಂಸ್ಕ್ರುತ ಪದಗಳು ಬಳಕೆಯಾಗುತ್ತಿದ್ದುದರಿಂದ, ಇವರು ತಮ್ಮ ಮಲಯಾಳ ಬರಹಗಳಲ್ಲೂ ಗ್ರಂತ ಲಿಪಿಯನ್ನೇ ಬಳಸಲು ತೊಡಗಿದರು. ಇದರಿಂದಾಗಿ, ಇವತ್ತಿನ ಮಲಯಾಳ ಬರಹ ಕನ್ನಡ ಬರಹದ ಹಾಗೆಯೇ ಅನವಶ್ಯಕವಾಗಿ ತೊಡಕಿನದಾಗಿದೆ.

ಎಲ್ಲಾ ಜನರೂ ಬರಹಬಲ್ಲವರಾಗಬೇಕಿರುವ ಇವತ್ತಿನ ದಿನಗಳಲ್ಲಿ ಈ ರೀತಿ ಒಂದು ನುಡಿಯ ಬರವಣಿಗೆಗೆ ಅವಶ್ಯವಿಲ್ಲದ ಬರಿಗೆಗಳನ್ನು ಎರವಲು ಪದಗಳ ಬರವಣಿಗೆಗಾಗಿ ಉಳಿಸಿಕೊಳ್ಳುವುದು ಜಾಣತನವಲ್ಲ; ಇದನ್ನು ಮನಗಂಡ ತಿಳಿವಿಗರು ಟರ‍್ಕಿ, ಇಂಡೊನೇಶಿಯಾ, ಮಲಯೇಶಿಯಾ ಮೊದಲಾದ ನಾಡುಗಳಲ್ಲಿ ಅರೇಬಿಕ್ ಮೂಲದ ಲಿಪಿಯನ್ನೇ ಬಿಟ್ಟುಕೊಟ್ಟು ರೋಮನ್ ಮೂಲದ ಲಿಪಿಯನ್ನು ತಮ್ಮ ಬರಹಕ್ಕೆ ಅಳವಡಿಸಿಕೊಂಡಿದ್ದಾರೆ.

ಕೊರಿಯಾದಂತಹ ಬೇರೆ ಕೆಲವು ನಾಡುಗಳಲ್ಲಿ ಎರವಲು ಪದಗಳನ್ನು ಓದುವ ಹಾಗೆಯೇ ಬರೆಯಲು ತೊಡಗುವ ಮೂಲಕ ಈ ತೊಡಕನ್ನು ನಿವಾರಿಸಿಕೊಳ್ಳಲಾಗಿದೆ. ಕನ್ನಡದಲ್ಲಿಯೂ ಇಂತಹದೇ ಮಾರ‍್ಪಾಡನ್ನು ನಾವು ಇವತ್ತು ನಡೆಸಬೇಕಾಗಿದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹವನ್ನು ಮಾರ‍್ಪಡಿಸಿ ಗೆದ್ದವರು

ನುಡಿಯರಿಮೆಯ ಇಣುಕುನೋಟ – 8

ಜಗತ್ತಿನ ಹಲವು ನುಡಿಗಳಲ್ಲಿ ಇತ್ತೀಚೆಗೆ, ಎಂದರೆ ಕಳೆದ ನೂರು-ನೂರಯ್ವತ್ತು ವರ‍್ಶಗಳಲ್ಲಿ, ನೂರಾರು ವರ‍್ಶಗಳಿಂದ ಬಳಕೆಯಲ್ಲಿದ್ದ ಬರಹಗಳನ್ನು ಮಾರ‍್ಪಡಿಸಿ, ಅವುಗಳಲ್ಲಿ ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲಾಗಿದೆ, ಮತ್ತು ಇದರಿಂದಾಗಿ ಆ ನುಡಿಗಳನ್ನಾಡುವ ಜನರಲ್ಲಿ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆ.

ಜನರ ಜೀವನದಲ್ಲಿ ಇತ್ತೀಚೆಗೆ ಬರಹ ಹೆಚ್ಚು ಹೆಚ್ಚು ಮುಕ್ಯವಾಗುತ್ತಿರುವುದು, ಮತ್ತು ಒಂದು ನಾಡಿನಲ್ಲಿರುವ ಎಲ್ಲಾ ಜನರೂ ಬರಹಬಲ್ಲವರಾಗದೆ ಆ ನಾಡಿನ ಏಳಿಗೆಯಾಗಲಾರದೆಂಬ ಪರಿಸ್ತಿತಿ ಉಂಟಾಗಿರುವುದು ಅವರು ಇಂತಹ ಮಾರ‍್ಪಾಡುಗಳನ್ನು ನಡೆಸಲು ಮುಕ್ಯ ಕಾರಣ.

ಬರಹಗಳನ್ನು ಎರಡು ಬಗೆಗಳಲ್ಲಿ ಈ ಕಾರಣಕ್ಕಾಗಿ ಮಾರ‍್ಪಡಿಸಲಾಗಿದೆ: ಅವುಗಳ ಬರಿಗೆ(ಅಕ್ಶರ)ಗಳಲ್ಲಿ ಬೇಕಾದವುಗಳನ್ನು ಮಾತ್ರ ಉಳಿಸಿಕೊಂಡು ಬೇಡದವುಗಳನ್ನು ತೆಗೆದುಹಾಕಿರುವುದು ಒಂದು ಬಗೆಯ ಮಾರ‍್ಪಾಡು, ಮತ್ತು ಬಳಕೆಯಲ್ಲಿರುವ ಬರಿಗೆಗಳನ್ನೇ ಬಿಟ್ಟುಕೊಟ್ಟು, ಅವುಗಳ ಬದಲಿಗೆ ಬೇರೆ ಬಗೆಯ ಬರಿಗೆಗಳನ್ನು ಬಳಸತೊಡಗಿರುವುದು ಇನ್ನೊಂದು ಬಗೆಯ ಮಾರ‍್ಪಾಡು.

ಗ್ರೀಕ್ ಬರಹದಲ್ಲಿ ಪದಗಳನ್ನು ಹಿಂದಿನ ಕಾಲದಲ್ಲಿದ್ದಂತೆ ಬರೆಯಲು ಹಲವು ಹೆಚ್ಚಿನ ಬರಿಗೆಗಳನ್ನು ಬಳಸಲಾಗುತ್ತಿತ್ತು; ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡಲು, 1982ರಲ್ಲಿ ಬೇಡದಿರುವ ಬರಿಗೆಗಳನ್ನೆಲ್ಲ ಬಿಟ್ಟುಕೊಡಲಾಯಿತು. ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಬರಿಗೆಗಳ ಬಳಕೆಯಿಲ್ಲ; ಕೆಲವರು ಗ್ರೀಕ್ ಪಂಡಿತರು ಮಾತ್ರ ಅವನ್ನು ಬಳಸುತ್ತಿದ್ದಾರೆ.

ಜಪಾನೀಸ್ ಬರಹದ ಕನ ಬರಿಗೆಗಳು ಒಂಬತ್ತನೇ ಶತಮಾನದಲ್ಲಿ ಸರಿಯಾಗಿದ್ದುವು; ಆದರೆ, ಆಮೇಲೆ ಮಾತಿನಲ್ಲಿ ನಡೆದ ಮಾರ‍್ಪಾಡುಗಳಿಂದಾಗಿ ಅವಕ್ಕೂ ಅವುಗಳ ಓದಿಗೂ ನಡುವೆ ಹಲವು ವ್ಯತ್ಯಾಸಗಳು ಮೂಡಿಬಂದುವು. 1946ರಲ್ಲಿ ಇವನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾರ‍್ಪಡಿಸಲಾಯಿತು, ಮತ್ತು ಓದಿನಲ್ಲಿಲ್ಲದ ಕೆಲವು ಬರಿಗೆಗಳನ್ನು ಬಿಟ್ಟುಕೊಡಲಾಯಿತು.

ಕೊರಿಯನ್ ಬರಹದಲ್ಲಿ ಅವರವೇ ಆದ ಪದಗಳನ್ನು ಬರೆಯಲು ಹಂಗುಲ್ ಎಂಬ ತುಂಬಾ ಚನ್ನಾಗಿರುವ ಬರಿಗೆಗಳನ್ನು ಬಳಸಲಾಗುತ್ತಿದೆ; ಆದರೆ, ಚಯ್ನೀಸ್‌ನಿಂದ ಎರವಲು ಪಡೆದ ಪದಗಳನ್ನು ಬರೆಯಲು ತೊಡಕು ತೊಡಕಾಗಿರುವ ಚಯ್ನೀಸ್ ಮೂಲದ ಹಂಜ ಎಂಬ ಬರಿಗೆಗಳನ್ನು ಬಳಸಲಾಗುತ್ತಿದೆ. 1949ರಲ್ಲಿ ಈ ಚಯ್ನೀಸ್ ಎರವಲು ಪದಗಳನ್ನೂ ಹಂಗುಲ್‌ನಲ್ಲಿಯೇ ಬರೆಯುವ ನಿರ‍್ದಾರವನ್ನು ಉತ್ತರ ಕೊರಿಯಾದಲ್ಲಿ ಮಾಡಲಾಯಿತು, ಮತ್ತು ಇದರಿಂದಾಗಿ ಆ ನಾಡಿನಲ್ಲಿ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಯಿತು.

ದಕ್ಶಿಣ ಕೊರಿಯಾದಲ್ಲೂ ಹಂಜ ಬರಿಗೆಗಳ ಎಣಿಕೆಯನ್ನು ಸಾಕಶ್ಟು ಕಡಿಮೆ ಮಾಡಲಾಗಿದೆ, ಮತ್ತು ಅವನ್ನು ಎಲಿಮೆಂಟರಿ ಶಾಲೆಗಳಲ್ಲಿ ಕಲಿಸದಿರುವಂತೆ, ಮತ್ತು ಮಕ್ಕಳ ಪುಸ್ತಕಗಳಲ್ಲಿ, ಮತ್ತು ಎಲ್ಲಾ ಜನರೂ ಓದಬೇಕಾಗಿರುವ ಬರಹಗಳಲ್ಲಿ ಬಳಸದಿರುವಂತೆ ನೋಡಿಕೊಳ್ಳಲಾಗುತ್ತಿದೆ.

ಬರಹಗಳಲ್ಲಿ ಬರುವ ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡುವುದಕ್ಕಾಗಿ ಟರ‍್ಕಿ, ಇಂಡೊನೇಶ್ಯಾ, ಮಲಯೇಶ್ಯಾ, ಸೋಮಾಲಿಯಾ ಮೊದಲಾದೆಡೆಗಳಲ್ಲಿ, ಮತ್ತು ಸೋವಿಯಟ್ ಯೂನಿಯನ್‌ನ ಹಲವು ನಾಡುಗಳಲ್ಲಿ ಅರೇಬಿಕ್ ಮೂಲದ ಬರಿಗೆಗಳನ್ನು ಬಿಟ್ಟುಕೊಟ್ಟು ರೋಮನ್ ಮೂಲದ ಬರಿಗೆಗಳನ್ನು ಬಳಕೆಗೆ ತರಲಾಗಿದೆ. ಇದರಿಂದಾಗಿ ಈ ನಾಡುಗಳಲ್ಲಿಯೂ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತಿದೆ.

ಇದಕ್ಕೆ ಬದಲು, ಅರೇಬಿಕ್ ಬರಿಗೆಗಳನ್ನು ಬಳಸುತ್ತಿರುವ ಇರಾನ್, ಇರಾಕ್ ಮೊದಲಾದ ಹಲವು ನಾಡುಗಳಲ್ಲಿ ಇವತ್ತಿಗೂ ಬರಹ ಬಲ್ಲವರ ಎಣಿಕೆ ತುಂಬಾ ಕಡಿಮೆಯಿದೆ. ಇದಕ್ಕೆ ಕೆಲವು ಸಾಮಾಜಿಕ ತೊಡಕುಗಳೂ ಕಾರಣವಿರಬಹುದು; ಆದರೆ, ಬರಹಗಳಲ್ಲಿ ಪದಗಳನ್ನು ಓದುವ ಹಾಗೆ ಬರೆಯದಿರುವುದು, ಮತ್ತು ಇದರಿಂದಾಗಿ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ತೊಡಕಿನದಾಗಿರುವುದೂ ಒಂದು ಕಾರಣವೆಂಬುದರಲ್ಲಿ ಸಂಶಯವಿಲ್ಲ.

ಪದಗಳನ್ನು ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲು ಇತ್ತೀಚೆಗೆ ಬೇರೆ ಹಲವಾರು ನುಡಿಗಳ ಬರಹಗಳಲ್ಲೂ ಮಾರ‍್ಪಾಡುಗಳನ್ನು ನಡೆಸಲಾಗಿದೆ. ವಿಯೆಟ್ನಾಮ್‌ನಲ್ಲಿ ಚಯ್ನೀಸ್ ಬರಿಗೆಗಳ ಬದಲು ರೋಮನ್ ಮೂಲದ ಬರಿಗೆಗಳನ್ನು ಬಳಸಲು ತೊಡಗಿದುದರಿಂದಾಗಿ ಇವತ್ತು ವಿಯೆಟ್ನಮೀಸ್ ಬರಹಗಳಲ್ಲಿ ಚಯ್ನೀಸ್ ಎರವಲುಗಳನ್ನೂ ಓದುವ ಹಾಗೆಯೇ ಬರೆಯಲು ಸಾದ್ಯವಾಗಿದೆ; ಈ ಮಾರ‍್ಪಾಡನ್ನು ನಡೆಸಿದ ಬಳಿಕ ಅಲ್ಲಿಯೂ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತದೆ.

ಯುರೋಪಿನ ಹಲವಾರು ನುಡಿಗಳಲ್ಲೂ ಇತ್ತೀಚೆಗೆ ಬರಹಗಳಲ್ಲಿ ಮಾರ‍್ಪಾಡುಗಳನ್ನು ನಡೆಸುವ ಮೂಲಕ ಓದಿಗೂ ಬರಹಕ್ಕೂ ನಡುವಿರುವ ಅಂತರವನ್ನು ಕಡಿಮೆ ಮಾಡಲಾಗಿದೆ. ಹೆಸರು(ನಾಮ)ಪದಗಳನ್ನು ಬರೆಯುವಾಗ ಅವುಗಳ ಮೊದಲಿಗೆ ದೊಡ್ಡ ಬರಿಗೆಯನ್ನು ಬಳಸಬೇಕೆಂಬ ಕಟ್ಟಲೆಯನ್ನು ಡೇನಿಶ್‌ನಲ್ಲಿ ಬಿಟ್ಟುಕೊಡಲಾಗಿದೆ; ಕೊಟ್ಟಹೆಸರುಗಳಲ್ಲಿ ಮಾತ್ರ ಈ ಕಟ್ಟಲೆಯನ್ನು ಉಳಿಸಿಕೊಳ್ಳಲಾಗಿದೆ.

ಜರ‍್ಮನಿ, ಆಸ್ಟ್ರಿಯಾ, ಮತ್ತು ಸ್ವಿಜರ್‌ಲೇಂಡ್‌ಗಳಲ್ಲಿಯೂ ಜರ‍್ಮನ್ ಬರಹಗಳಲ್ಲಿರುವ ಬರಿಗೆಗಳ ಬಳಕೆಯಲ್ಲಿ ಹಲವು ಮಾರ‍್ಪಾಡುಗಳನ್ನು ನಡೆಸಬೇಕೆಂಬ ತೀರ‍್ಮಾನಕ್ಕೆ ಇತ್ತೀಚೆಗೆ ಬರಲಾಗಿತ್ತು; ಪದಗಳನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯಬೇಕೆಂಬುದೇ ಈ ಮಾರ‍್ಪಾಡುಗಳ ಮುಕ್ಯ ಉದ್ದೇಶವಾಗಿತ್ತು. ಈ ತೀರ‍್ಮಾನವನ್ನು 1996ರಲ್ಲಿ ಬಳಕೆಗೆ ತರಲಾಯಿತು.
ಆದರೆ, ಇದನ್ನು ವಿರೋದಿಸುವವರೂ ಕೆಲವರಿದ್ದು, ಜರ‍್ಮನಿಯಲ್ಲಿ ಈ ಮಾರ‍್ಪಾಡುಗಳನ್ನು ಬಳಸುವುದು ಶಾಲೆಗಳಲ್ಲಿ ಮಾತ್ರ ಕಡ್ಡಾಯವಾಗಿದೆ. ಹೀಗಿದ್ದರೂ, ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಮಾರ‍್ಪಡಿಸಿದ ಬರಿಗೆಗಳೇ ಬಳಕೆಯಾಗುತ್ತಿವೆ; ಕೆಲವು ಪತ್ರಿಕೆಗಳು ಮತ್ತು ಪುಸ್ತಕಗಳು ಮಾತ್ರ ಹಳೇ ಬರಹಕ್ಕೆ ಜೋತುಬಿದ್ದಿವೆ.

ಪೋರ‍್ಚುಗೀಸ್ ಬರಹದಲ್ಲೂ ಅದನ್ನು ಬಳಸುವ ಹಲವು ನಾಡುಗಳು ಒಟ್ಟುಸೇರಿ ಇಂತಹದೇ ಮಾರ‍್ಪಾಡನ್ನು ಬಳಕೆಗೆ ತಂದಿವೆ; ಇದಕ್ಕೆ ಮೊದಲು, ಪದಗಳನ್ನು ಅವುಗಳ ಮೂಲರೂಪ ಎಂತಹದು ಎಂಬುದನ್ನು ಸೂಚಿಸುವಂತೆ ಬರೆಯಲಾಗುತ್ತಿತ್ತು; ಆದರೆ, ಈ ರೂಪಗಳಿಗೂ ಅವನ್ನು ಓದುವ ಬಗೆಗೂ ನಡುವೆ ಯಾವ ಹೊಂದಾಣಿಕೆಯೂ ಇರಲಿಲ್ಲ; ಹಾಗಾಗಿ, ಅವುಗಳ ಈ ಹಳೆಯ ರೂಪಗಳನ್ನು ಬಿಟ್ಟುಕೊಟ್ಟು, ಆದಶ್ಟು ಮಟ್ಟಿಗೆ ಇವತ್ತು ಅವನ್ನು ಹೇಗೆ ಓದಲಾಗುತ್ತದೆಯೋ ಹಾಗೆಯೇ ಬರೆಯುವಂತೆ ಅವುಗಳಲ್ಲಿ ಮಾರ‍್ಪಾಡುಗಳನ್ನು ಮಾಡಲಾಗಿದೆ.

ಒಂದು ನಾಡಿನಲ್ಲಿ ಓದು-ಬರಹ ಬಲ್ಲವರ ಎಣಿಕೆ ಎಶ್ಟಿದೆ ಎಂಬುದು ಆ ನಾಡಿನ ಬರಹಗಳಲ್ಲಿ ಬಳಕೆಯಾಗುತ್ತಿರುವ ಬರಿಗೆಗಳನ್ನು ಕಲಿಯಲು ಮತ್ತು ಬಳಸಲು ಎಶ್ಟು ಸುಲಬ ಎಂಬುದರ ಮೇಲೆ ಮಾತ್ರವಲ್ಲದೆ, ಅಲ್ಲಿನ ಜನರ ಮೇಲೆ ಓದಿನ ಕುರಿತಾಗಿ ಎಂತಹ ಆಳ್ವಿಕೆಯ ಒತ್ತಡ, ನೆರೆಹೊರೆಯ ಒತ್ತಡ, ಮತ್ತು ಮನೆಯವರ ಒತ್ತಡವಿದೆ ಎಂಬುದರ ಮೇಲೂ ಅವಲಂಬಿಸಿರುತ್ತದೆ; ಹಾಗಾಗಿ, ಕನ್ನಡದ ಬರಿಗೆಗಳಲ್ಲಿ ಮಾರ‍್ಪಾಡುಗಳನ್ನು ಮಾಡದಿದ್ದರೂ ಬರಹ ಬಲ್ಲವರ ಎಣಿಕೆ ಹೆಚ್ಚಬಲ್ಲುದು ಎಂಬುದಾಗಿ ಕೆಲವರಿಗೆ ಅನಿಸಬಹುದು.

ಆದರೆ, ಬರಿಗೆಗಳ ತೊಡಕೂ ಬರಹ ಬಲ್ಲವರ ಎಣಿಕೆ ಕಡಿಮೆಯಿರಲು ಒಂದು ಕಾರಣ ಎಂಬುದನ್ನು ಕಂಡುಕೊಂಡು, ಮೇಲೆ ಕೊಟ್ಟಿರುವಂತಹ ಹಲವಾರು ನುಡಿಗಳ ಬರಹಗಳಲ್ಲಿ ಬರಿಗೆಗಳನ್ನು ಮಾರ‍್ಪಡಿಸಲಾಗಿದೆ, ಮತ್ತು ಹಾಗೆ ಮಾಡುವ ಮೂಲಕ ಬರಹ ಬಲ್ಲವರ ಎಣಿಕೆಯನ್ನು ಹೆಚ್ಚಿಸಿಕೊಳ್ಳಲಾಗಿದೆ ಎಂಬುದನ್ನು ಮರೆಯಬಾರದು.

ಇಂಗ್ಲಿಶ್‌ನಲ್ಲಿ ಉಲಿಕೆಗೂ ಬರಿಗೆಗೂ ನಡುವೆ ಹೊಂದಾಣಿಕೆ ತುಂಬಾ ಕಡಿಮೆಯಿದೆಯಾದರೂ ಅದನ್ನು ಕಲಿಯುವವರ ಎಣಿಕೆ ತುಂಬಾ ಹೆಚ್ಚಿದೆಯಲ್ಲ ಎಂದು ಕೆಲವರು ಹೇಳಬಹುದು. ಆದರೆ, ಇಂಗ್ಲಿಶ್ ಬರಹದ ಈ ಸ್ಪೆಲ್ಲಿಂಗ್ ತೊಡಕಿನಿಂದಾಗಿ, ಅದನ್ನು ಕಲಿಯುವ ಮಕ್ಕಳಿಗೆ ಬೇರೆ ಬರಹಗಳನ್ನು ಕಲಿಯಲು ಬೇಕಾಗುವ ಸಮಯದ ಮೂರು ಪಾಲಶ್ಟು ಸಮಯ ಬೇಕಾಗುತ್ತದೆ.

ಇದಲ್ಲದೆ, ಹಾಗೆ ಕಶ್ಟಪಟ್ಟು ಕಲಿತವರಲ್ಲಿಯೂ ಹಲವರಿಗೆ ಸರಿಯಾಗಿ ಓದುವುದು ಹೇಗೆ ಎಂಬುದೇ ಗೊತ್ತಾಗಿರುವುದಿಲ್ಲ, ಮತ್ತು ಇದರಿಂದಾಗಿ ಅವರು ಆದಶ್ಟು ಮಟ್ಟಿಗೆ ಓದಿನಿಂದ ದೂರವೇ ಉಳಿಯಲು ಬಯಸುತ್ತಾರೆ. ಅಮೆರಿಕಾದಂತಹ ಮುಂದುವರಿದ ನಾಡುಗಳಲ್ಲೂ ಈ ತೊಂದರೆಯಿದೆ.

ಕನ್ನಡದ ಮಕ್ಕಳು ಈ ರೀತಿ ಕನ್ನಡ ಬರಹಗಳನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ತೊಂದರೆಗೊಳಗಾಗದಂತೆ ಮಾಡಲು, ಮತ್ತು ಅವನ್ನು ಎಲ್ಲಾ ಮಕ್ಕಳೂ ಸುಲಬವಾಗಿ ಮತ್ತು ಸರಿಯಾಗಿ ಓದಲು ಸಾದ್ಯವಾಗುವಂತೆ ಮಾಡಲು ಋ, ಷ, ಮಹಾಪ್ರಾಣ ಮೊದಲಾದ ಕನ್ನಡದ ಮಟ್ಟಿಗೆ ಬೇಡದಿರುವ ಕೆಲವು ಬರಿಗೆಗಳನ್ನು ಇವತ್ತು ಬಿಟ್ಟುಕೊಡಬೇಕಾಗಿದೆ. ಕನ್ನಡಿಗರಿಗೆ ತಮ್ಮ ನುಡಿಯ ಮೇಲಿರುವ ಕೀಳರಿಮೆಯನ್ನು ಇಲ್ಲವಾಗಿಸುವಲ್ಲಿಯೂ ಇದು ನೆರವಾಗಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ತಮಿಳರ ದಾರಿ ಮತ್ತು ನಮ್ಮ ದಾರಿ

ನುಡಿಯರಿಮೆಯ ಇಣುಕುನೋಟ – 7

ಎಲ್ಲರೂ ಬಳಸಬೇಕಿರುವ ಕನ್ನಡ ಬರಹದಲ್ಲಿ ಮಹಾಪ್ರಾಣ, ಋಕಾರ, ಷಕಾರ ಮೊದಲಾದ ಕೆಲವು ಕನ್ನಡಕ್ಕೆ ಬೇಡದ ಬರಿಗೆಗಳನ್ನು ಬಿಟ್ಟುಕೊಡುವುದು ಒಳ್ಳೆಯದು ಎಂಬುದಾಗಿ, ಇಲ್ಲವೇ ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳನ್ನು ಒಂದು ಮಿತಿಯಲ್ಲಿ ಇರಿಸಿಕೊಳ್ಳುವುದು ಒಳ್ಳೆಯದು ಎಂಬುದಾಗಿ ಹೇಳಿದಾಗ, ಇದು ತಮಿಳಿನ ದ್ರಾವಿಡ ಕಳಗಂ ಹಿಡಿದ ದಾರಿ ಎಂಬ ಮರುನುಡಿ ಕೇಳಿಬರುತ್ತದೆ.

ಆದರೆ, ಈ ಮರುನುಡಿ ಸರಿಯಲ್ಲ. ನಾವು ತಮಿಳರಿಂದಕಲಿಯಬಹುದಾದ ವಿಶಯಗಳೂ ಕೆಲವಿವೆ; ಆದರೆ ಹಾಗೆಂದು, ಎಲ್ಲಾ ವಿಶಯಗಳಲ್ಲೂ ಅವರನ್ನು ಕಣ್ಣುಮುಚ್ಚಿ ಹಿಂಬಾಲಿಸಬೇಕೆಂದೇನಿಲ್ಲ. ನಮಗೆ ಸರಿಯೆಂದು ಕಂಡುದನ್ನು ಅವರಿಂದ ಕಲಿಯೋಣ, ಮತ್ತು ಬೇರೆ ವಿಶಯಗಳಲ್ಲಿ ನಮ್ಮದೇ ಆದ ದಾರಿಯನ್ನೂ ಕಂಡುಕೊಳ್ಳೋಣ.

ತಮ್ಮ ನುಡಿಯ ಕುರಿತಾಗಿ ತಮಿಳರಿಗೆ ಎಲ್ಲೆಯಿಲ್ಲದ ಹೆಮ್ಮೆ ಮತ್ತು ಒಲುಮೆಗಳಿವೆ; ಆದರೆ, ಕನ್ನಡದ ತಿಳಿವಿಗರಿಗೆ ತಮ್ಮ ನುಡಿಯ ಕುರಿತು ಕೀಳರಿಮೆಯಿದೆ. ಎಂತಹ ಹೊಸ ಪದವನ್ನು ಬೇಕಿದ್ದರೂ ತಮ್ಮ ನುಡಿಯಲ್ಲಿ ಉಂಟುಮಾಡಲು ಬರುತ್ತದೆ ಎಂಬುದನ್ನು ತಮಿಳರು ಕಂಡುಕೊಂಡಿದ್ದಾರೆ, ಮತ್ತು ಅದನ್ನು ಬಳಕೆಗೂ ತಂದಿದ್ದಾರೆ; ಆದರೆ, ಕನ್ನಡದ ತಿಳಿವಿಗರು ಹೊಸ ಪದಗಳನ್ನುಂಟುಮಾಡಲು ಸಂಸ್ಕ್ರುತದ ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂಬುದಾಗಿ ಕಯ್ಚೆಲ್ಲಿ ಕುಳಿತಿದ್ದಾರೆ.

ತಮಿಳಿನ ಅರಿಮೆಯ ಪದನೆರಕೆಗಳಲ್ಲಿ ನೂರಕ್ಕೆ ತೊಂಬತ್ತಯ್ದರಶ್ಟು ತಮಿಳು ಪದಗಳಿವೆ; ಆದರೆ, ಕನ್ನಡದ ಅರಿಮೆಯ ಪದನೆರಕೆಗಳಲ್ಲಿ ನೂರಕ್ಕೆ ಹತ್ತರಶ್ಟೂ ಕನ್ನಡದ ಪದಗಳಿಲ್ಲ! ಇಂತಹ ಕೆಲವು ವಿಶಯಗಳಲ್ಲಿ ನಾವು ತಮಿಳರನ್ನು ಹಿಂಬಾಲಿಸಿದಲ್ಲಿ, ಅದು ನಮ್ಮ ನುಡಿಯ ಮತ್ತು ಸಮಾಜದ ಏಳಿಗೆಗೆ ನೆರವಾಗಬಲ್ಲುದು.

ಆದರೆ, ಬೇರೆ ಕೆಲವು ವಿಶಯಗಳಲ್ಲಿ ಅವರು ಹಿಡಿದ ದಾರಿ ನಮಗೆ ಬೇಕಿಲ್ಲ. ದ್ರಾವಿಡ ಕಳಗಗಳು ನಡೆಸಿದ ಚಳವಳಿಯಿಂದಾಗಿ, ತಮಿಳು ಬರಹದಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳು ತುಂಬಾ ಕಡಿಮೆಯಾದುವೇನೋ ನಿಜ; ಆದರೆ, ಇದರಿಂದ ಬರಹದ ತಮಿಳಿಗೂ ತಮಿಳಿನ ಆಡುನುಡಿಗಳಿಗೂ ನಡುವಿದ್ದ ಅಂತರ ಕಡಿಮೆಯಾಗುವ ಬದಲು ಹೆಚ್ಚಾಗಿದೆ.

ಯಾಕೆಂದರೆ, ಬರಹದಿಂದ ತೆಗೆದು ಹಾಕಿದ ಸಂಸ್ಕ್ರುತ ಪದಗಳಿಗೆ ಬದಲಾಗಿ ಇವರು ಹಳೆತಮಿಳಿನ ಪದಗಳನ್ನೇ ಬಳಕೆಗೆ ತಂದಿದ್ದಾರೆ; ಇವು ಹೊಸತಮಿಳಿನ ಪದಗಳಿಗಿಂತ ಹಲವು ವಿಶಯಗಳಲ್ಲಿ ಬೇರಾಗಿವೆ. ಇದಲ್ಲದೆ, ಹೆಚ್ಚುಕಡಿಮೆ ಹದಿಮೂರನೇ ಶತಮಾನದ ತಮಿಳನ್ನೇ ಬರಹಗಳಲ್ಲಿ ಬಳಸಲು ತೊಡಗಿದ್ದಾರೆ. ಇದು ಕನ್ನಡ ಬರಹಗಳಲ್ಲಿ ಇವತ್ತು ಹೊಸಗನ್ನಡದ ಬದಲು ಹಳೆಗನ್ನಡವನ್ನು ಬಳಸಲು ಹೊರಡುವ ಹಾಗೆ ಎನ್ನಬಹುದು.

ಇಂತಹ ತಮಿಳರ ದಾರಿ ನಮಗೆ ಬೇಕಾಗಿಲ್ಲ. ಕನ್ನಡ ಬರಹದಲ್ಲಿ ಯಾವ ಮಾರ‍್ಪಾಡನ್ನು ಮಾಡುವುದಿದ್ದರೂ ಅದಕ್ಕೆ ಕನ್ನಡ ಬರಹಕ್ಕೂ ಕನ್ನಡದ ಆಡುನುಡಿಗಳಿಗೂ ನಡುವಿರುವ ವ್ಯತ್ಯಾಸವನ್ನು ಕಡಿಮೆಮಾಡುವುದೇ ಮುಕ್ಯ ಗುರಿಯಾಗಿರಬೇಕು. ಕನ್ನಡಕ್ಕೆ ಬೇಕಿಲ್ಲದ ಮಹಾಪ್ರಾಣ, ಋಕಾರ, ಷಕಾರಗಳನ್ನು ಬರಹದಲ್ಲಿ ಬಳಸದಿರುವುದು, ಮತ್ತು ಹೆಚ್ಚು ಹೆಚ್ಚು ಕನ್ನಡದವೇ ಆದ ಪದಗಳನ್ನು ಬಳಸುವುದು ಎಂಬ ಈ ಎರಡು ಮಾರ‍್ಪಾಡುಗಳಿಗೂ ಇದೇ ಮುಕ್ಯ ಗುರಿಯಾಗಿದೆ.

ಇನ್ನು ತಮಿಳು ಬರಹದಲ್ಲಿ ಮಹಾಪ್ರಾಣ, ಋಕಾರ, ಗಜಡದಬ ಮೊದಲಾದ ಕೆಲವು ಬರಿಗೆಗಳು ಬಳಕೆಯಾಗದಿರುವುದಕ್ಕೆ ದ್ರಾವಿಡ ಕಳಗಗಳು ಕಾರಣವಲ್ಲ. ಇತ್ತೀಚೆಗೆ ನಡೆಸಿದ ಯಾವ ಮಾರ‍್ಪಾಡೂ ಅದಕ್ಕೆ ಕಾರಣವಲ್ಲ. ಬ್ರಾಹ್ಮೀಲಿಪಿಯನ್ನು ತಮಿಳಿಗೆ ಅಳವಡಿಸುವ ಸಮಯದಲ್ಲೇನೇ, ಎಂದರೆ ಸುಮಾರು ಎರಡು ಸಾವಿರ ವರ‍್ಶಗಳಶ್ಟು ಹಿಂದೆಯೇ ತಮಿಳು ಬರಹದಲ್ಲಿ ಈ ಬರಿಗೆಗಳನ್ನು ಬಳಸದಿರಲು ತೀರ‍್ಮಾನಿಸಲಾಗಿತ್ತು.

ಆವತ್ತಿನ ತಮಿಳು ಓದಿಗೆ ಈ ಬರವಣಿಗೆ ಸರಿಯಾಗಿಯೂ ಇದ್ದಿರಬೇಕು; ಆದರೆ, ಆಮೇಲೆ ತಮಿಳು ನುಡಿಯಲ್ಲಿ ಹಲವಾರು ಮಾರ‍್ಪಾಡುಗಳು ನಡೆದಿದ್ದು, ಇದರಿಂದಾಗಿ ಇವತ್ತಿನ ಓದಿಗೂ ಬರಹಕ್ಕೂ ನಡುವೆ ಹಲವು ವ್ಯತ್ಯಾಸಗಳು ಮೂಡಿಬಂದಿವೆ. ಈ ವ್ಯತ್ಯಾಸಗಳನ್ನನುಸರಿಸಿ ತಮಿಳು ಬರಹದಲ್ಲಿ ಹೆಚ್ಚಿನ ಮಾರ‍್ಪಾಡನ್ನೇನೂ ನಡೆಸಿಲ್ಲವಾದ ಕಾರಣ, ಅದರ ಬಳಕೆಯಲ್ಲಿ ಇವತ್ತು ಕೆಲವು ತೊಡಕುಗಳು ಕಾಣಿಸಿಕೊಳ್ಳುತ್ತಿವೆ.

ಸಂಸ್ಕ್ರುತ ಕಾವ್ಯಗಳನ್ನು ಇಲ್ಲವೇ ಬೇರೆ ಸಂಸ್ಕ್ರುತ ಬರಹಗಳನ್ನು ಬರೆಯಲು ಬೇಕಾಗುವ ಹಲವು ಹೆಚ್ಚಿನ ಬರಿಗೆಗಳನ್ನು ತಮಿಳು ಬರಹದಲ್ಲೇನೇ ಉಳಿಸಿಕೊಳ್ಳುವ ಬದಲು, ಅವರು ಗ್ರಂತ ಲಿಪಿಯೆಂಬ ಬೇರೆಯೇ ಒಂದು ಬಗೆಯ ಬರಹವನ್ನು ಬಳಕೆಗೆ ತಂದಿದ್ದರು. ಹಾಗಾಗಿ, ಈ ಬರಿಗೆಗಳ ತೊಡಕು ಅವರ ಬರಹವನ್ನು ತಟ್ಟಿಲ್ಲ.

ಕನ್ನಡ ಬರಹ ಉತ್ತರದಿಂದ ವಲಸೆಬಂದ ಬ್ರಾಹ್ಮಣರ ಕೊಡುಗೆಯಾಗಿದೆ; ಈ ಬ್ರಾಹ್ಮಣರು ಆರ‍್ಯರಾಗಿದ್ದು, ಸಂಸ್ಕ್ರುತದ ಮೇಲೆ ಅವರಿಗೆ ಹೆಚ್ಚಿನ ಮಮತೆ ಮತ್ತು ಪೂಜ್ಯಬಾವವಿತ್ತು. ಹಾಗಾಗಿ, ಅವರು ಕನ್ನಡದ ಬರಹದಲ್ಲಿ ಸಂಸ್ಕ್ರುತ ಬರಹಕ್ಕೆ ಬೇಕಾಗುವ ಎಲ್ಲಾ ಬರಿಗೆಗಳನ್ನೂ, ಅವು ಕನ್ನಡಕ್ಕೆ ಬೇಡವಾಗಿದ್ದರೂ, ಉಳಿಸಿಕೊಂಡಿದ್ದರು, ಮತ್ತು ಕನ್ನಡಕ್ಕೆ ಬೇಕಾಗುವ ಎ, ಒ, ಱ, ೞದಂತಹ ಕೆಲವು ಹೆಚ್ಚಿನ ಬರಿಗೆಗಳನ್ನೂ ಹೊಸದಾಗಿ ಸೇರಿಸಿಕೊಂಡಿದ್ದರು.

ಮೊನ್ನೆ ಮೊನ್ನೆವರೆಗೂ ಕನ್ನಡ ಬರಹ ಮುಕ್ಯವಾಗಿ ಬ್ರಾಹ್ಮಣರ ಬಳಕೆಯಲ್ಲೇ ಉಳಿದುಕೊಂಡಿತ್ತು; ಕೆಳವರ‍್ಗದ ಜನರು ಅದರಿಂದ ದೂರವೇ ಉಳಿದಿದ್ದರು. ತುಂಬಾ ಸಂಸ್ಕ್ರುತ ಪದಗಳನ್ನು ಬಳಸುವ, ಮತ್ತು ಕನ್ನಡಕ್ಕೆ ಬೇಕಿಲ್ಲದ ಹಲವು ಬರಿಗೆಗಳನ್ನು ಬಳಸುವ ಈ ಬರಹವೂ ಅವರು ಈ ರೀತಿ ಅದರಿಂದ ದೂರ ಉಳಿಯಲು ಒಂದು ಕಾರಣವಾಗಿತ್ತು.

ಆದರೆ, ಇವತ್ತು ಬರಹಕ್ಕೆ ಕಳೆದ ಎರಡು ಸಾವಿರ ವರ‍್ಶಗಳಲ್ಲೂ ಇಲ್ಲದಿದ್ದಂತಹ ಮೇಲ್ಮೆ ದೊರೆತಿದೆ; ಇವತ್ತಿನ ಸಮಾಜದಲ್ಲಿ ಬರಹದ ಅರಿವಿಲ್ಲದವರು ಯಾರೂ ಮುಂದೆ ಬರಲು ಸಾದ್ಯವೇ ಇಲ್ಲ ಎಂಬಂತಹ ಪರಿಸ್ತಿತಿಯುಂಟಾಗಿದೆ; ಇದಲ್ಲದೆ, ಎಲ್ಲಾ ಜನರೂ ಬರಹಬಲ್ಲವರಾಗದೆ ಇವತ್ತು ಯಾವ ಸಮಾಜವೂ ಏಳಿಗೆಹೊಂದಲಾರದು. ಹಾಗಾಗಿ, ಕನ್ನಡಿಗರ, ಅವರ ಸಮಾಜದ, ಮತ್ತು ಅವರ ಬರಹದ ಏಳಿಗೆಗಾಗಿ, ಇವತ್ತು ಕನ್ನಡ ಬರಹ ಎಲ್ಲರನ್ನೂ ತಲಪುವಂತೆ ಮಾಡಬೇಕಾಗಿದೆ, ಮತ್ತು ಇದಕ್ಕಾಗಿ ಕನ್ನಡಕ್ಕೆ ಬೇಕಿಲ್ಲದ ಹಲವು ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಡಬೇಕಾಗಿದೆ.

ಇಲ್ಲಿ ಇನ್ನೊಂದು ವಿಶಯವನ್ನೂ ಗಮನಿಸಬೇಕಾಗಿದೆ: ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳನ್ನು ಕಡಿಮೆಮಾಡಬೇಕು ಎಂದು ಹೇಳಿದರೆ, ದ್ರಾವಿಡ ಕಳಗಂನವರು ಹೇಳುತ್ತಿದ್ದ ಹಾಗೆ, ಸಂಸ್ಕ್ರುತ ಪದಗಳನ್ನು ಬರಹಗಳಲ್ಲಿ ಬಳಸಲೇ ಕೂಡದು ಎಂದು ಹೇಳಿದ ಹಾಗಾಗುವುದಿಲ್ಲ. ನಿಜಕ್ಕೂ ಹಾಗೆ ಹೇಳಲಾಗಿದೆಯಾದರೆ, ಸಂಸ್ಕ್ರುತ ಎರವಲುಗಳನ್ನು ಕನ್ನಡದಲ್ಲಿ ಬರೆಯುವಾಗ ಮಹಾಪ್ರಾಣ, ಋಕಾರ ಮೊದಲಾದವುಗಳನ್ನು ಬಳಸಬೇಕಾಗಿಲ್ಲ ಎಂಬ ಇನ್ನೊಂದು ಹೇಳಿಕೆ ಬೇಕಾಗುವುದೇ ಇಲ್ಲ!

ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳ ಎಣಿಕೆ ಹೆಚ್ಚಾದಾಗಲೆಲ್ಲ, ಅದನ್ನು ಕಡಿಮೆ ಮಾಡಬೇಕೆಂಬುದಾಗಿ ಹಿಂದಿನಿಂದಲೂ ಕನ್ನಡದ ಬರಹಗಾರರು ಹೇಳುತ್ತಾ ಬಂದಿದ್ದಾರೆ. ಕವಿರಾಜಮಾರ‍್ಗಕಾರನಿಂದ ಹಿಡಿದು ಬಿಎಂಶ್ರೀಯವರ ವರೆಗೂ ಹಲವು ಮಂದಿ ಈ ವಿಶಯದಲ್ಲಿ ತಮ್ಮ ಬೇಸರವನ್ನು ಹೊರಗೆಡಹಿದ್ದಾರೆ.

ಇವತ್ತು ಅರಿಮೆಯ (ವಿಜ್ನಾನದ) ಬರಹಗಳಿಗೆ ಬೇಕಾಗುವ ಹೊಸ ಪದಗಳನ್ನೆಲ್ಲ ಸಂಸ್ಕ್ರುತದ ಪದ ಮತ್ತು ಒಟ್ಟುಗಳನ್ನು ಬಳಸಿ ಹೊಸದಾಗಿ ಉಂಟುಮಾಡಿಕೊಳ್ಳಲಾಗುತ್ತಿದೆ; ಕನ್ನಡದ ಪದ ಮತ್ತು ಒಟ್ಟುಗಳನ್ನು ತುಂಬಾ ಅಪರೂಪವಾಗಿ ಮಾತ್ರವೇ ಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ, ಅರಿಮೆಯ ಪದನೆರಕೆಗಳಲ್ಲಿ ಕನ್ನಡದವೇ ಆದ ಪದಗಳಿರುವುದು ತೀರಾ ಕಡಿಮೆ.

ಇಂತಹ ಪದನೆರಕೆಗಳನ್ನು ‘ಕನ್ನಡ’ದವೆಂದು ಹೇಳುವುದೇ ವಿಚಿತ್ರವಾಗಿ ಕಾಣಿಸುತ್ತದೆ. ನಿಜಕ್ಕೂ ಈ ರೀತಿ ಇಂಗ್ಲಿಶ್ ಪದಗಳಿಗೆ ಬದಲಾಗಿ ಸಂಸ್ಕ್ರುತ ಪದಗಳನ್ನು ಬಳಸುವ ಬದಲು, ಇಂಗ್ಲಿಶ್ ಪದಗಳನ್ನು ಹಾಗೆಯೇ ಎರವಲು ಪಡೆಯುವುದೇ ಕನ್ನಡಿಗರ ಮಟ್ಟಿಗೆ ಹೆಚ್ಚು ನೆರವಾಗಬಲ್ಲುದು; ಯಾಕೆಂದರೆ, ಮುಂದೆ ಹೆಚ್ಚಿನ ತಿಳಿವನ್ನು ಪಡೆಯಲು ಅವರು ಇಂಗ್ಲಿಶ್ ಬರಹಗಳನ್ನು ಓದಬೇಕಾಗುತ್ತದೆಯಲ್ಲದೆ, ಸಂಸ್ಕ್ರುತದಲ್ಲಿ ಅವರಿಗೆ ಇವತ್ತಿನ ಅರಿಮೆಗಳ ಕುರಿತಾಗಿ ಎಂತಹ ಓದೂ ದೊರಕಲಾರದು.

ಆದರೆ, ಈ ವಿಶಯಗಳ ಕುರಿತಾಗಿ ಮಕ್ಕಳಿಗೆ ಅಡಿಕಲಿಕೆ ದೊರೆಯುವಂತೆ ಮಾಡಲು, ಮತ್ತು ಆಳವಾದ ತಿಳಿವು ದೊರೆಯುವಂತೆ ಮಾಡಲು, ಸಂಸ್ಕ್ರುತ ಇಲ್ಲವೇ ಇಂಗ್ಲಿಶ್ ಪದಗಳನ್ನು ಬಳಸುವ ಬದಲು ನಮ್ಮವೇ ಆದ ಕನ್ನಡ ಪದಗಳನ್ನು ಬಳಸುವುದೇ ಸರಿಯಾದ ದಾರಿ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಯಾವುದು ಕನ್ನಡದ ಸೊಗಡು?

ನುಡಿಯರಿಮೆಯ ಇಣುಕುನೋಟ – 5

ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳನ್ನು ಕನ್ನಡ ಬರಹದಿಂದ ತೆಗೆದುಹಾಕಿದರೆ ಕನ್ನಡದಸೊಗಡು (ಎಂದರೆ ಸಂಸ್ಕ್ರುತಿ) ಅಳಿದುಹೋಗುತ್ತದೆಯೆಂದು ಕೆಲವರಿಗೆ ಅನಿಸುತ್ತದೆ. ಆದರೆ, ನಿಜಕ್ಕೂ ಈ ಮಾರ‍್ಪಾಡು ಕನ್ನಡದ ಸೊಗಡನ್ನು ಉಳಿಸುತ್ತದೆಯಲ್ಲದೆ ಅಳಿಸುವುದಿಲ್ಲ.

ಕನ್ನಡ ಕಾವ್ಯಗಳಲ್ಲಿ ತುಂಬಾ ಸಂಸ್ಕ್ರುತ (ತತ್ಸಮ) ಪದಗಳನ್ನು ಬಳಸಿದೆವಾದರೆ ಅವು ಕಕ್ಕಸ(ಕರ‍್ಕಶ)ವಾಗುತ್ತವೆಯೆಂದು ಕವಿರಾಜಮಾರ‍್ಗದಲ್ಲಿ ಹೇಳಲಾಗಿದೆ; ಆ ರೀತಿ ಕಕ್ಕಸವಾಗದಂತೆ ತನ್ನ ಕಾವ್ಯಗಳಲ್ಲಿ ತದ್ಬವ ಪದಗಳನ್ನು ಮಾತ್ರವೇ ಬಳಸಿರುವ ಆಂಡಯ್ಯನಿಗೆ ‘ಕನ್ನಡದ ಕಾವ’ ಎಂದರೆ, ಕನ್ನಡದ ಸೊಗಡನ್ನು (ಸಂಸ್ಕ್ರುತಿಯನ್ನು) ಕಾಪಾಡಿದವನು ಎಂಬ ಬಿರುದನ್ನು ಕೊಡಲಾಗಿದೆ. ತತ್ಸಮ ಪದಗಳನ್ನು ಬಳಸದುದರಿಂದಾಗಿ ಆತನು ಕನ್ನಡದ ಸೊಗಡನ್ನು ಕಳೆದಿದ್ದಾನೆಂದು ಯಾರೂ ಆತನನ್ನು ದೂರಿಲ್ಲ.

ಸಂಸ್ಕ್ರುತ ಎರವಲುಗಳನ್ನು ಕನ್ನಡಿಗರು ಹೇಗೆ ಓದುತ್ತಾರೋ ಹಾಗೆಯೇ ಬರೆಯೋಣ ಎನ್ನುವುದೂ ಇದೇ ರೀತಿಯಲ್ಲಿ ಕನ್ನಡದ ಸೊಗಡನ್ನು ಉಳಿಸುವ ಪ್ರಯತ್ನವಲ್ಲದೆ ಅಳಿಸುವ ಪ್ರಯತ್ನವಲ್ಲ. ಯಾಕೆಂದರೆ, ಸಂಸ್ಕ್ರುತ ಎರವಲುಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆದಲ್ಲಿ, ಅವು ತದ್ಬವ ಪದಗಳ ಹಾಗೆ ಕನ್ನಡದ ಸೊಗಡನ್ನು ಕಾಪಾಡುತ್ತವೆ.

ಸಂಸ್ಕ್ರುತ ಎರವಲುಗಳನ್ನು ತದ್ಬವರೂಪದಲ್ಲಿ ಬರೆಯುವಾಗ, ಅವುಗಳಲ್ಲಿರುವ ಶ-ಷಗಳ ನಡುವಿನ ವ್ಯತ್ಯಾಸ, ರು-ಋಗಳ ನಡುವಿನ ವ್ಯತ್ಯಾಸ, ಮತ್ತು ಅಲ್ಪಪ್ರಾಣ-ಮಹಾಪ್ರಾಣಗಳ ನಡುವಿನ ವ್ಯತ್ಯಾಸಗಳು ಇಲ್ಲವಾಗುತ್ತವೆ; ಸಂಸ್ಕ್ರುತ ಎರವಲುಗಳನ್ನು ಹೆಚ್ಚಿನ ಕನ್ನಡಿಗರೂ ಓದುವ ಹಾಗೆ ಬರೆಯುವಾಗಲೂ ಇಂತಹವೇ ವ್ಯತ್ಯಾಸಗಳು ಇಲ್ಲವಾಗುತ್ತವೆ. ಹಾಗಾಗಿ, ತದ್ಬವ ಪದಗಳ ಬಳಕೆಯಿಂದ ಹೇಗೆ ಕನ್ನಡ ನುಡಿಯ ಸಂಸ್ಕ್ರುತಿ ನಾಶವಾಗುವುದಿಲ್ಲವೋ ಹಾಗೆಯೇ ಸಂಸ್ಕ್ರುತ ಎರವಲುಗಳನ್ನು ಓದುವ ಹಾಗೆ ಬರೆಯುವುದರಿಂದಲೂ ಕನ್ನಡ ನುಡಿಯ ಸಂಸ್ಕ್ರುತಿ ನಾಶವಾಗುವುದಿಲ್ಲ.

ಹೆಚ್ಚಿನ ಕನ್ನಡಿಗರೂ ಮಹಾಪ್ರಾಣ, ಷಕಾರ, ಋಕಾರ ಮೊದಲಾದುವನ್ನು ಮಾತನಾಡುವಾಗ ಇಲ್ಲವೇ ಓದುವಾಗ ಬಳಸುವುದಿಲ್ಲ ಎಂಬುದಾಗಿ ನಾನು ಹೇಳಿರುವುದು ಬರಿಯ ಊಹೆಯ ಮೇಲಲ್ಲ. ಅದಕ್ಕೆ ಸಾಕಶ್ಟು ಅರಕೆಯ ಆದಾರವಿದೆ: ಸುಮಾರು ಒಂದೂವರೆ ತಿಂಗಳು ಮಯ್ಸೂರು ಜಿಲ್ಲೆಯಲ್ಲೆಲ್ಲ ಸುತ್ತಾಡಿ, ಅಲ್ಲಿನ ಬೇರೆ ಬೇರೆ ಜಾತಿ ಮತ್ತು ಪಂಗಡಗಳ ಜನರ ಮಾತನ್ನು ಗಮನಿಸಿದ್ದೇನೆ. ಆಮೇಲೆ, ಅಂತಹದೇ ಅರಕೆಯನ್ನು ದಕ್ಶಿಣ ಕನ್ನಡ ಮತ್ತು ಗುಲ್ಬರ‍್ಗ ಜಿಲ್ಲೆಗಳಲ್ಲೂ ನಡೆಸಿದ್ದೇನೆ.

ಇದಲ್ಲದೆ, ಹಲವು ಮಂದಿ ಸಂಸ್ಕ್ರುತ ಪಂಡಿತರ ಕನ್ನಡ ಮಾತನ್ನೂ ನಾನು ಗಮನಿಸಿದ್ದೇನೆ. ಬರಿಯ ಪದಗಳನ್ನು ಉಲಿದು ತೋರಿಸುವಾಗ ಅವರು ಈ ವ್ಯತ್ಯಾಸಗಳನ್ನು ಹೆಚ್ಚುಕಡಿಮೆ ಸರಿಯಾಗಿಯೇ ಉಳಿಸಿಕೊಳ್ಳುತ್ತಾರೆ; ಆದರೆ, ಅವನ್ನೇ ಮಾತಿನಲ್ಲಿ ಬಳಸುವಾಗ ಈ ಎಲ್ಲಾ ವ್ಯತ್ಯಾಸಗಳೂ ಇಲ್ಲವಾಗುತ್ತವೆ.

ನಿಜಕ್ಕೂ ಶ-ಷಗಳ ನಡುವೆ, ಇಲ್ಲವೇ ಮಹಾಪ್ರಾಣ-ಅಲ್ಪಪ್ರಾಣಗಳ ನಡುವೆ ಕನ್ನಡಿಗರ ಮಾತಿನಲ್ಲಿ ಯಾವ ವ್ಯತ್ಯಾಸವೂ ಇಲ್ಲ; ಯಾರಾದರೂ ಈ ವ್ಯತ್ಯಾಸ ಕೇಳಿಸುವ ಹಾಗೆ ಮಾತನಾಡಿದರೆ, ಕೇಳುವವರಿಗೆ ಅದು ಅಸ್ವಾಬಾವಿಕವೆಂದು ಅನಿಸುತ್ತದೆ.

ಕನ್ನಡಿಗರ ಮಾತಿನಲ್ಲಿ ಇಲ್ಲವೇ ಓದಿನಲ್ಲಿಲ್ಲದ ಈ ಸಂಸ್ಕ್ರುತ ಪದಗಳ ವ್ಯತ್ಯಾಸವನ್ನು ಕನ್ನಡ ಬರಹದಲ್ಲಿ ಸುಮಾರು ಒಂದೂವರೆ ಸಾವಿರ ವರ‍್ಶಗಳಿಂದಲೂ ಉಳಿಸಿಕೊಂಡು ಬರಲಾಗಿದೆ. ಮೊನ್ನೆ ಮೊನ್ನೆಯ ವರೆಗೂ ಕನ್ನಡ ಬರಹವನ್ನು ಮೇಲ್ವರ‍್ಗದ ಕೆಲವೇ ಕೆಲವು ಮಂದಿ ಮಾತ್ರ ಬಳಸುತ್ತಿದ್ದರಾದ ಕಾರಣ, ಇದು ಅಂತಹ ತೊಡಕಿನ ಸಂಗತಿಯೆಂದು ಯಾರಿಗೂ ಅನಿಸಿರಲಿಲ್ಲ.

ಆದರೆ, ಇವತ್ತು ಎಲ್ಲಾ ವರ‍್ಗದ ಜನರೂ ಕನ್ನಡ ಬರಹವನ್ನು ಕಲಿತು ಬಳಸಲು ತೊಡಗಬೇಕಾಗಿದೆ; ಯಾಕೆಂದರೆ, ಬರಹವನ್ನು ಬಳಸಲಾರದವರು ತಮ್ಮ ಜೀವನದಲ್ಲಿ ಒಂದು ಅತ್ಯಮೂಲ್ಯವಾದ ಸಾದನದಿಂದ ವಂಚಿತರಾಗುತ್ತಾರೆ. ಒಂದು ನಾಡಿನಲ್ಲಿ ಅಂತಹ ಜನ ಹೆಚ್ಚು ಇದ್ದಶ್ಟೂ ಆ ನಾಡು ಹಿಂದೆಯೇ ಉಳಿದಿರುತ್ತದೆ. ಇವತ್ತು ಬರಹಕ್ಕೆ ಅಂತಹ ಪ್ರಾಮುಕ್ಯತೆ ಬಂದಿದೆ.

ಹಾಗಾಗಿ, ಕನ್ನಡ ಬರಹವನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ಒಂದು ದೊಡ್ಡ ತೊಡಕಾಗಿರುವ ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಡುವುದೇ ಇವತ್ತು ನಮ್ಮ ಮುಂದಿರುವ ಸರಿಯಾದ ದಾರಿ. ಹಾಗೆ ಮಾಡುವುದರಿಂದ ಕನ್ನಡ ಬರಹದ ಸೊಗಡು ಇಲ್ಲವೇ ಸಂಸ್ಕ್ರುತಿ ಉಳಿಯುತ್ತದೆಯಲ್ಲದೆ ಅಳಿಯುವುದಿಲ್ಲ; ಅದರ ಮೇಲೆ ಹೊರಿಸಲಾಗಿರುವ ಬೇರೊಂದು ಸಂಸ್ಕ್ರುತಿಯ ಹೊರೆ ಮಾತ್ರ ಇಲ್ಲವಾಗುತ್ತದೆ.

ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಟ್ಟಲ್ಲಿ ಮದ್ಯ-ಮಧ್ಯ, ದನ-ಧನ ಎಂಬಂತಹ ಹಲವು ಪದಗಳ ನಡುವಿನ ವ್ಯತ್ಯಾಸ ಇಲ್ಲವಾಗಿ, ಗೊಂದಲವುಂಟಾಗಬಲ್ಲುದು ಎಂಬುದಾಗಿ ಕೆಲವರು ವಾದಿಸುತ್ತಾರೆ; ಆದರೆ, ಈ ವಾದದಲ್ಲಿ ನಿಜಕ್ಕೂ ತಿರುಳಿಲ್ಲ. ಯಾಕೆಂದರೆ, ಕನ್ನಡಿಗರ ಮಾತಿನಲ್ಲಿ ಇಲ್ಲವೇ ಓದಿನಲ್ಲಿ, ಮೇಲೆ ವಿವರಿಸಿದ ಹಾಗೆ, ಈ ವ್ಯತ್ಯಾಸ ಹೇಗಿದ್ದರೂ ಇಲ್ಲ, ಮತ್ತು ಇದರಿಂದಾಗಿ ಯಾವ ಗೊಂದಲವೂ ಆಗುತ್ತಾ ಇಲ್ಲ.

ಇದಲ್ಲದೆ, ಯಾವುದೇ ಒಂದು ನುಡಿಯ ಪದನೆರಕೆಯನ್ನು ಬಿಡಿಸಿ ನೋಡಿದರೂ ಅದರಲ್ಲಿ ಒಂದಕ್ಕಿಂತ ಹೆಚ್ಚು ಹುರುಳಿರುವ ನೂರಾರು ಪದಗಳು ಕಾಣಲು ಸಿಗುತ್ತವೆ. ಸಂಸ್ಕ್ರುತದಲ್ಲಂತೂ ಇದು ಇನ್ನೂ ಹೆಚ್ಚು; ಅದರ ಹೆಚ್ಚಿನ ಪದಗಳಿಗೂ ಅಯ್ದು ಇಲ್ಲವೇ ಹೆಚ್ಚು ಹುರುಳುಗಳಿವೆಯೆಂದು ಹೇಳಲಾಗುತ್ತದೆ.

ಸಂಸ್ಕ್ರುತದ ಅರ್ಥ ಪದಕ್ಕೆ ‘ಹುರುಳು’ ಮತ್ತು ‘ಹಣ’ ಎಂಬವುಗಳು ಮಾತ್ರವಲ್ಲದೆ, ‘ಉದ್ದೇಶ’, ‘ಕಾರಣ’, ‘ವಸ್ತು’ ಮೊದಲಾದ ಬೇರೆಯೂ ಹಲವು ಹುರುಳುಗಳಿವೆ; ವಿಷ ಪದಕ್ಕೆ ‘ನಂಜು’ ಎಂಬ ಹುರುಳು ಮಾತ್ರವಲ್ಲದೆ, ‘ನೀರು’ ಮತ್ತು ‘ಸೇವಕ’ ಎಂಬ ಹುರುಳುಗಳೂ ಇವೆ (ಮೋನಿಯರ್ ವಿಲ್ಲಿಯಂಸ್ ಅವರ ಸಂಸ್ಕ್ರುತ-ಇಂಗ್ಲಿಶ್ ಡಿಕ್ಶ್‌ನರಿ ನೋಡಿ). ಆದರೆ, ಈ ರೀತಿ ಒಂದೇ ಪದಕ್ಕೆ ಹಲವು ಹುರುಳುಗಳಿರುವುದನ್ನು ಯಾರೂ ಸಂಸ್ಕ್ರುತದ ಕೊರತೆಯೆಂದು ಹೇಳುವುದಿಲ್ಲ; ಅದಕ್ಕೆ ಬದಲಾಗಿ, ಅದು ಸಂಸ್ಕ್ರುತದ ಶ್ರೀಮಂತಿಕೆಯೆಂದು ಹೇಳುತ್ತಾರೆ.

ಸಾಮಾನ್ಯವಾಗಿ ಪದಗಳನ್ನು ಬಳಸಿರುವ ಸಂದರ‍್ಬವೇ ಅವುಗಳನ್ನು ಯಾವ ಹುರುಳಿನಲ್ಲಿ ಬಳಸಲಾಗಿದೆ ಎಂಬುದನ್ನು ತಿಳಿಸುತ್ತದೆ; ‘ಹುಡುಗ ಮಾರ‍್ಗದ ಮದ್ಯದಲ್ಲಿ ನಿಂತಿದ್ದಾನೆ’ ಎಂದು ಬರೆದರೆ, ಅದರಲ್ಲಿ ಮದ್ಯದಲ್ಲಿ ಎಂಬುದನ್ನು ‘ನಡುವೆ’ ಎಂಬ ಹುರುಳಿನಲ್ಲಿ ಬಳಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ; ಇಲ್ಲಿ ಮದ್ಯ ಎಂಬುದಕ್ಕೆ ‘ಸಾರಾಯಿ’ ಎಂಬ ಹುರುಳಿರಬಹುದೆಂದು ಯಾರಿಗೂ ಅನಿಸುವುದಿಲ್ಲ. ಇದನ್ನು ಮಧ್ಯದಲ್ಲಿ ಎಂಬುದಾಗಿ ನೋಡಿ ಬಳಕೆಯಾದವರಿಗೆ ಮಾತ್ರ ಇದು ತಪ್ಪೆಂದು ಅನಿಸುತ್ತದೆ, ಅಶ್ಟೆ. ಹುರುಳಿನ ಗೊಂದಲವೇನೂ ಉಂಟಾಗುವುದಿಲ್ಲ.

ಎರಡು ಹುರುಳುಗಳಿರುವ ಪದಗಳನ್ನು ಅವುಗಳ ಎರಡು ಹುರುಳೂ ಒಟ್ಟಿಗೆ ಬರುವ ಹಾಗೆ ಬರೆಯುವುದು ಕವಿಗಳು, ಮತ್ತು ಬೇಕೆಂದೇ ತಮ್ಮ ಓದುಗರನ್ನು ಗೊಂದಲದಲ್ಲಿ ಸಿಲುಕಿಸಲು ಬಯಸುವವರು ಮಾತ್ರ. ಬಾಕಿ ಉಳಿದವರೆಲ್ಲ ಓದುಗರ ಗಮನಕ್ಕೆ ತಮ್ಮ ಮನಸ್ಸಿನಲ್ಲಿರುವ ಒಂದು ಹುರುಳು ಮಾತ್ರ ಬರುವ ಹಾಗೆ ಬರೆಯುತ್ತಾರೆ; ಈ ವಿಶಯದಲ್ಲಿ ಗೊಂದಲವೇನಾದರೂ ಉಂಟಾಗಬಹುದೆಂಬ ಸಂಶಯ ಅವರಿಗೆ ಇದೆಯಾದಲ್ಲಿ, ಅವರು ಬೇರೆಯೇ ಪದವನ್ನು ಬಳಸುತ್ತಾರೆ, ಇಲ್ಲವೇ ಗೊಂದಲವಾಗದಂತೆ ಸೊಲ್ಲನ್ನು ಮಾರ‍್ಪಡಿಸಿ ಬರೆಯುತ್ತಾರೆ.

ಇದಲ್ಲದೆ, ಸಾಮಾನ್ಯವಾಗಿ ಅಂತಹ ಪದಗಳಿಗಿರುವ ಎರಡು (ಇಲ್ಲವೇ ಹೆಚ್ಚು) ಹುರುಳುಗಳಲ್ಲಿ ಸಂದರ‍್ಬಕ್ಕೆ ಹೊಂದಿಕೆಯಾಗುವಂತಹ ಒಂದು ಹುರುಳು ಮಾತ್ರ ಓದುಗರ ಗಮನಕ್ಕೆ ಬರುತ್ತದೆ. ಅವಕ್ಕೆ ಇನ್ನೊಂದು ಹುರುಳೂ ಇದೆಯೆಂಬುದು ಅವರ ಗಮನಕ್ಕೆ ಬರುವುದೇ ಇಲ್ಲ. ಕೆಲವೊಮ್ಮೆ ಈ ವಿಶಯವನ್ನು ಅವರ ಗಮನಕ್ಕೆ ತರಬೇಕಿದ್ದಲ್ಲಿ, ಆ ಪದಗಳನ್ನು ಅವುಗಳ ಇನ್ನೊಂದು ಹುರುಳಿಗೆ ಹೊಂದಿಕೆಯಾಗುವಂತಹ ಬೇರೊಂದು ಸೊಲ್ಲಿನಲ್ಲಿ ಬಳಸಿ ತೋರಿಸಬೇಕಾಗುತ್ತದೆ.

ಮಹಾಪ್ರಾಣ, ಷಕಾರ, ಋಕಾರ ಮೊದಲಾದವುಗಳನ್ನು ಬಳಸದಿದ್ದರೆ ಹುರುಳಿನ ಮಟ್ಟಿಗೆ ಯಾವ ಗೊಂದಲವೂ ಉಂಟಾಗುವುದಿಲ್ಲ ಎಂಬ ಈ ಮಾತನ್ನು ಬೆಂಬಲಿಸುವ ಇನ್ನೊಂದು ವಿಶಯವೇನೆಂದರೆ, 2006 ರ ಬಳಿಕ ನಾನು ಬರೆದ ಎಲ್ಲಾ ಒಂಬತ್ತು ಪುಸ್ತಕಗಳಲ್ಲೂ (ಒಟ್ಟು 2600 ಪುಟಗಳು) ಈ ಬರಿಗೆಗಳನ್ನು ಬಳಸಿಲ್ಲ; ಹಾಗಿದ್ದರೂ, ಇದುವರೆಗೆ ಅವನ್ನು ಓದಿದವರಲ್ಲಿ ಯಾರೊಬ್ಬರೂ ಅದರಿಂದಾಗಿ ವಿಶಯವನ್ನು ತಿಳಿದುಕೊಳ್ಳುವಲ್ಲಿ ತಮಗೆ ತೊಂದರೆಯಾಗಿದೆಯೆಂದು ಹೇಳಿಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಪದಗಳನ್ನು ಓದುವ ಹಾಗೆಯೇ ಬರೆಯಬೇಕು

ನುಡಿಯರಿಮೆಯ ಇಣುಕುನೋಟ – 3

ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ.

ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು ವಯ್ರಸ್ ಪದಗಳ ಮೊದಲ ಬರೆಗೆಗಳು ಇಂಗ್ಲಿಶ್‌ನಲ್ಲಿ ಬೇರಾಗಿವೆ, ಆದರೆ ಕನ್ನಡದಲ್ಲಿ ವ ಎಂಬ ಒಂದೇ ಬರಿಗೆಯನ್ನು ಬಳಸಲಾಗುತ್ತದೆ. ಅವೆರಡನ್ನೂ ಒಂದೇ ರೀತಿ ಓದುತ್ತಿರುವುದೇ ಇದಕ್ಕೆ ಕಾರಣ.

ಒಂದು ಬರಹದಲ್ಲಿ ಪದಗಳನ್ನು ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಬರೆಯಬೇಕಾಗಿದೆಯಾದರೆ, ಅದು ಅಂತಹ ಬರಹವನ್ನು ಕಲಿಯುವವರಿಗೆ ಮತ್ತು ಬಳಸುವವರಿಗೆ ಹಲವು ಬಗೆಯ ತೊಡಕುಗಳನ್ನು ತಂದೊಡ್ಡುತ್ತದೆ; ಕನ್ನಡ ಬರಹದ ಈ ಸಂಪ್ರದಾಯ ಮುಕ್ಯವಾಗಿ ಕೆಳಗೆ ಕೊಟ್ಟಿರುವಂತಹ ತೊಡಕುಗಳನ್ನು ಕೊಡುತ್ತಿದೆ:

(೧) ಓದಲು ಮತ್ತು ಬರೆಯಲು ಕಲಿಯಹೊರಡುವ ಮಕ್ಕಳು ಅನವಶ್ಯಕವಾಗಿ ಹದಿನೇಳು ಹೆಚ್ಚಿನ ಬರಿಗೆ(ಅಕ್ಶರ)ಗಳನ್ನು ಕಲಿಯಬೇಕಾಗುತ್ತದೆ.

(೨) ಸರಿಯಾಗಿ ಮತ್ತು ಸಲೀಸಾಗಿ ಓದಲು ಕಲಿಯಬೇಕಿದ್ದಲ್ಲಿ, ಪದಗಳನ್ನು ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ (ಎತ್ತುಗೆಗೆ, ಮನೆ ಎಂಬುದನ್ನು ಮ್, ಅ, ನ್ ಮತ್ತು ಎ ಎಂಬ ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ) ಎಂಬುದನ್ನು ಗಮನಿಸಬೇಕು, ಮತ್ತು ಈ ಉಲಿಗಳನ್ನು ಸೂಚಿಸುವುದಕ್ಕಾಗಿ ಬರಹದಲ್ಲಿ ಬರಿಗೆಗಳನ್ನು ಬಳಸಲಾಗುತ್ತದೆ ಎಂಬುದನ್ನೂ ಗಮನಿಸಬೇಕು. ಇವೆರಡನ್ನು ಗಮನಿಸಿದವರು ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗಲೂ ಅವನ್ನು ಸುಲಬವಾಗಿ ಓದಬಲ್ಲವರಾಗುತ್ತಾರೆ.

ಪದಗಳನ್ನು ಓದುವ ಹಾಗೆಯೇ ಬರೆದಿದೆಯಾದರೆ ಮಾತ್ರ, ಈ ರೀತಿ ಓದುವಾಗ ಬಳಸುವ ಉಲಿಗೂ ಬರಹದಲ್ಲಿ ಕಾಣಿಸುವ ಬರಿಗೆಗಳಿಗೂ ನಡುವೆ ಸಂಬಂದವಿದೆ ಎಂಬುದು ಓದಲು ಕಲಿಯುವವರ ಗಮನಕ್ಕೆ ಸುಲಬವಾಗಿ ಬರುತ್ತದೆ.

ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಪದಗಳನ್ನು ಬರೆದಿದೆಯಾದರೆ, ಅವುಗಳಲ್ಲಿ ಬರುವ ಬರಿಗೆಗಳಿಗೂ ಉಲಿಗಳಿಗೂ ನಡುವೆ ಇಂತಹದೊಂದು ಸಂಬಂದವಿದೆಯೆಂಬುದು ಹೆಚ್ಚಿನವರ ಗಮನಕ್ಕೂ ಬರುವುದೇ ಇಲ್ಲ, ಮತ್ತು ಇದರಿಂದಾಗಿ ಎಶ್ಟು ಕಲಿತರೂ ಅವರಿಗೆ ಸಲೀಸಾಗಿ ಓದಲು ಬರುವುದೇ ಇಲ್ಲ. ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗ ಅವನ್ನು ಹೇಗೆ ಓದಬೇಕೆಂಬುದು ಅವರಿಗೆ ಗೊತ್ತಾಗುವುದೂ ಇಲ್ಲ.

(೩) ಓದುವ ಹಾಗೆ ಬರೆಯುವ ಪದಗಳನ್ನು ಬರಹಗಳಲ್ಲಿ ಬಳಸುವುದು ಸುಲಬ; ಬೇರೆ ಬಗೆಯಲ್ಲಿ ಬರೆಯುವ ಒಂದೊಂದು ಪದವನ್ನೂ ಅದನ್ನು ಬರೆಯುವುದು ಹೇಗೆ ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಮನೆ ಎಂಬ ಪದವನ್ನು ಓದುವ ಹಾಗೆಯೇ ಬರೆಯುವ ಕಾರಣ, ಅದನ್ನು ಹೇಗೆ ಬರೆಯುವುದೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿಲ್ಲ.
ಆದರೆ, ವಿಶೇಷ ಎಂಬ ಪದವನ್ನು ಬರೆಯುವಾಗ ಎರಡನೆಯ ಮುಚ್ಚುಲಿಯನ್ನು ಶ್ ಎಂಬುದಾಗಿ, ಮತ್ತು ಮೂರನೆಯ ಮುಚ್ಚುಲಿಯನ್ನು ಷ್ ಎಂಬುದಾಗಿ ಬರೆಯಬೇಕೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಯಾಕೆಂದರೆ, ಅವೆರಡನ್ನೂ ಒಂದೇ ರೀತಿಯಲ್ಲಿ ಓದಲಾಗುತ್ತದೆ.ಇದನ್ನು ನೆನಪಿನಲ್ಲಿಟ್ಟುಕೊಳ್ಳಲಾರದವರು ಬರವಣಿಗೆಯಲ್ಲಿ ತಪ್ಪು ಮಾಡುತ್ತಾರೆ.

ಇವತ್ತು ದಿನಪತ್ರಿಕೆಗಳಲ್ಲಿ, ಕತೆ-ಕಾದಂಬರಿಗಳಲ್ಲಿ, ಮತ್ತು ಬೇರೆ ಬಗೆಯ ಬರಹಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸುವುದು ಓದುವ ಹಾಗೆ ಬರೆಯದಿರುವ ಮಹಾಪ್ರಾಣಾಕ್ಶರ, ಷಕಾರ, ಋಕಾರ ಮೊದಲಾದ ಬರಿಗೆಗಳಿರುವ ಸಂಸ್ಕ್ರುತ ಪದಗಳ ಬಳಕೆಯಲ್ಲಿ ಎಂಬುದನ್ನು ಗಮನಿಸಬಹುದು.

(೪) ಸಾಮಾನ್ಯವಾಗಿ ಜನರು ಪದಕೋಶಗಳನ್ನು ನೋಡಲು ಹೋಗುವುದು ಹೊಸದಾಗಿ ಅವರ ಓದಿನಲ್ಲಿ ಕಾಣಿಸಿಕೊಳ್ಳುವ ಪದಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಾಗಿ; ಆದರೆ, ಓದುವ ಹಾಗೆ ಬರೆಯದಿರುವ ವಿಶೇಷ, ಅಧಿಕಾರಿ ಮೊದಲಾದ ಪದಗಳನ್ನು ಅವುಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಿಂತಲೂ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯುವುದಕ್ಕಾಗಿ ಪದಕೋಶಗಳನ್ನು ನೋಡಬೇಕಾಗುತ್ತದೆ. ಓದುವ ಹಾಗೆಯೇ ಬರೆಯುವ ಯಾವ ಪದವನ್ನೂ ಈ ರೀತಿ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯಲು ಪದಕೋಶವನ್ನು ನೋಡಬೇಕಾಗುವುದಿಲ್ಲ.

(೫) ಕೆಳವರ‍್ಗದ ಮಕ್ಕಳಲ್ಲಿ ಇಂತಹ ಪದಗಳ ಕಲಿಕೆ ಕೀಳರಿಮೆಯನ್ನು ಉಂಟುಮಾಡುತ್ತದೆ; ಅವು ಕೊಡುವ ತೊಂದರೆಯಿಂದಾಗಿ ಕೆಲವರು ಬರಹದ ಕಲಿಕೆಯನ್ನು ನಡುವಿನಲ್ಲೇ ನಿಲ್ಲಿಸಿಬಿಡುತ್ತಾರೆ. ಓದಲು ಕಲಿತವರೂ ಅದನ್ನು ತುಂಬಾ ಅಪರೂಪವಾಗಿ ಮಾತ್ರ ಬಳಸುತ್ತಾರೆ. ಯಾಕೆಂದರೆ, ಅವರಿಗೆ ಸಲೀಸಾಗಿ ಓದುವುದು ಹೇಗೆ ಎಂಬುದು ತಿಳಿದಿರುವುದಿಲ್ಲ.
ಸಮಾಜಗಳಲ್ಲಿ ಹಲವಾರು ಬಗೆಯ ಸಂಪ್ರದಾಯಗಳು ಬೇರೆ ಬೇರೆ ಕಾರಣಗಳಿಗಾಗಿ ಬಳಕೆಗೆ ಬರುತ್ತವೆ, ಮತ್ತು ಅವುಗಳಿಂದ ಸಮಾಜಕ್ಕೆ ಪ್ರಯೋಜನಗಳೇನೂ ಇಲ್ಲದಿದ್ದರೂ, ಹೆಚ್ಚಿನ ತೊಂದರೆಯಿಲ್ಲವಾದಲ್ಲಿ ಅವು ಹಾಗೆಯೇ ವರ‍್ಶಗಟ್ಟಲೆ ಸಮಯ ಮುಂದುವರಿಯುತ್ತಿರುತ್ತವೆ.

ಸಂಸ್ಕ್ರುತದ ಎರವಲು ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬುದೂ ಇಂತಹದೇ ಒಂದು ಸಂಪ್ರದಾಯ. ಅದರಿಂದ ಕನ್ನಡ ಬರಹದ ಮಟ್ಟಿಗೆ ಯಾವ ಪ್ರಯೋಜನವೂ ಇಲ್ಲ. ಹಳೆಗನ್ನಡದ ಸಮಯದಲ್ಲಿ ಇಂತಹ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬಹುದಿತ್ತು, ಇಲ್ಲವೇ ಕನ್ನಡದ ಸೊಗಡನ್ನು ಕೆಡಿಸದಂತೆ ಅವನ್ನು ಮಾರ‍್ಪಡಿಸಿ ತದ್ಬವಗಳನ್ನಾಗಿ ಮಾಡಿಯೂ ಬಳಸಬಹುದಿತ್ತು. ಆಂಡಯ್ಯನ ಕಬ್ಬಿಗರ ಕಾವದಲ್ಲಿ ಅಂತಹ ತದ್ಬವ ಪದಗಳನ್ನು ಮಾತ್ರ ಬಳಸಲಾಗಿದೆ.

ಆದರೆ, ಇವತ್ತು ಹೊಸಗನ್ನಡದಲ್ಲಿ ಬರಹಗಾರರು ಈ ಆಯ್ಕೆಯನ್ನು ಕಳೆದುಕೊಂಡಿದ್ದಾರೆ. ಬಳಕೆಯಲ್ಲಿರುವ ಕೆಲವೇ ಕೆಲವು ತದ್ಬವ ಪದಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಂಸ್ಕ್ರುತ ಪದಗಳನ್ನೂ ಇವತ್ತು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕಾಗಿದೆ. ಅವುಗಳಲ್ಲಿ ಯಾವುದೇ ಬಗೆಯ ಮಾರ‍್ಪಾಡನ್ನು ನಡೆಸಿದರೂ ಅದನ್ನು ತಪ್ಪೆಂದು ತಿಳಿಯಲಾಗುತ್ತದೆ.
ಮೊನ್ನೆ ಮೊನ್ನೆಯ ವರೆಗೂ ಈ ಸಂಪ್ರದಾಯ ಹೆಚ್ಚಿನ ತೊಂದರೆಯನ್ನೇನೂ ಕೊಡುತ್ತಿರಲಿಲ್ಲ. ಯಾಕೆಂದರೆ, ಸಮಾಜದಲ್ಲಿ ಮೇಲ್ವರ‍್ಗಕ್ಕೆ ಸೇರಿದ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಬಳಸಬೇಕಾಗಿತ್ತು, ಮತ್ತು ಅವರಲ್ಲಿ ಹೆಚ್ಚಿನವರೂ ಕನ್ನಡದೊಂದಿಗೆ ಸಂಸ್ಕ್ರುತವನ್ನೂ ಕಲಿಯುತ್ತಿದ್ದರು; ಹಾಗಾಗಿ, ಈ ಸಂಪ್ರದಾಯವನ್ನು ಮುಂದುವರಿಸಿಕೊಂಡುಹೋಗುವುದು ಅವರಿಗೆ ತೊಡಕಿನದಾಗಿರಲಿಲ್ಲ.

ಆದರೆ, ಇವತ್ತು ಎಲ್ಲಾ ವರ‍್ಗದ ಜನರು ಮತ್ತು ಎಲ್ಲರೂ ಬರಹವನ್ನು ಬಳಸಬೇಕಾಗಿದೆ. ಯಾಕೆಂದರೆ, ಇವತ್ತು ಸಮಾಜದಲ್ಲಿ ಬರಹಕ್ಕೆ ಅಂತಹದೊಂದು ಪ್ರಾಮುಕ್ಯತೆ ಬಂದಿದೆ. ಬರಹವನ್ನು ಬಳಸಲು ತಿಳಿಯದವರು ಮುಂದೆ ಬರಲು ಸಾದ್ಯವೇ ಇಲ್ಲ, ಮತ್ತು ಅಂತಹ ಹಲವು ಮಂದಿ ಜನರಿರುವ ಸಮಾಜ ಏಳಿಗೆಯಾಗಲೂ ಸಾದ್ಯವೇ ಇಲ್ಲ ಎಂಬ ಪರಿಸ್ತಿತಿ ಇವತ್ತಿನದಾಗಿದೆ.

ಈ ರೀತಿ ಕನ್ನಡ ಬರಹವನ್ನು ಬಳಸಲು ಕಲಿಯಲೇ ಬೇಕಾಗಿರುವ ಜನರಲ್ಲಿ ಹೆಚ್ಚಿನವರಿಗೂ ಸಂಸ್ಕ್ರುತದ ಅರಿವು ಬೇಕಾಗಿಲ್ಲ; ಅದಕ್ಕಿಂತಲೂ ಅವರಿಗೆ ಇಂಗ್ಲಿಶ್ ನುಡಿಯ ಅರಿವು ಹೆಚ್ಚಿನ ನೆರವು ನೀಡಬಲ್ಲುದು. ಹಾಗಾಗಿ, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬ ಮೇಲಿನ ಸಂಪ್ರದಾಯ ಒಂದು ಹೆಚ್ಚಿನ ತೊಡಕನ್ನು ಮಾತ್ರ ತಂದೊಡ್ಡುತ್ತದಲ್ಲದೆ, ಅದರಿಂದ ಅವರು ಪಡೆಯಬಹುದಾದ ಪ್ರಯೋಜನ ಯಾವುದೂ ಇಲ್ಲ.

ಈ ರೀತಿ ಕನ್ನಡದ ಮಟ್ಟಿಗೆ ಯಾವ ಪ್ರಯೋಜನವನ್ನೂ ನೀಡದ, ಹಲವು ಮಂದಿ ಕನ್ನಡಿಗರಿಗೆ ತೊಡಕನ್ನು ಮಾತ್ರವೇ ಕೊಡುವ, ಮತ್ತು ನಮ್ಮ ಸಮಾಜದ ಏಳಿಗೆಗೂ ತೊಡಕಾಗಿರುವ ಈ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಜಾಣತನ. ಇದು ಒಂದೂವರೆ-ಎರಡು ಸಾವಿರ ವರ‍್ಶದ ಹಿಂದಿನ ಸಮಾಜಕ್ಕಾಗಿ ಮಾಡಿಕೊಂಡಿದ್ದ ಸಂಪ್ರದಾಯ. ಇಂದಿನ ಸಮಾಜ ಆಗಿನದಕ್ಕಿಂತ ತೀರ ಬೇರೆಯಾಗಿದೆ. ಹೀಗಿರುವಾಗಲೂ ಆ ಹಳೆಯ ಸಂಪ್ರದಾಯವನ್ನು ತೊರೆಯಲು ಹಿಂಜರಿಯುವುದೆಂದರೆ, ಅಪ್ಪ ನೆಟ್ಟ ಆಲದ ಮರವೆಂದು ನೇಣು ಹಾಕಿಕೊಳ್ಳುವ ಹಾಗೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹ ಕನ್ನಡ ಮತ್ತು ಆಡುಗನ್ನಡ

ನುಡಿಯರಿಮೆಯ ಇಣುಕುನೋಟ – 1

ಆಡುನುಡಿಯೆಂಬುದು ಜಾಗದಿಂದ ಜಾಗಕ್ಕೆ ಬದಲಾಗುವುದು ಸಹಜ. ನಮ್ಮ ನಲ್ಮೆಯ ಕನ್ನಡ ನುಡಿಗೂ ಈ ಮಾತು ಒಪ್ಪುತ್ತದೆ. ಬೇರೆ ಬೇರೆ ಊರುಗಳಲ್ಲಿರುವ ಕನ್ನಡಿಗರು ಬೇರೆ ಬೇರೆ ಆಡುಗನ್ನಡಗಳನ್ನು ಬಳಸುವುದು ನಮ್ಮೆಲ್ಲರ ಗಮನಕ್ಕೆ ಬಂದಿರುತ್ತದೆ. ಹಾಗೆಯೇ ಜಾತಿಯಿಂದ ಜಾತಿಗೂ ಆಡುಗನ್ನಡ ಬದಲಾಗುವುದನ್ನೂ ನಾವೆಲ್ಲರೂ ಕಂಡಿರುತ್ತೇವೆ. ಎತ್ತುಗೆಗಾಗಿ, ಮಯ್ಸೂರಿನ ಆಡುಗನ್ನಡಕ್ಕೂ ಹುಬ್ಬಳ್ಳಿಯ ಆಡುಗನ್ನಡಕ್ಕೂ ನಡುವೆ, ಮತ್ತು ಮಯ್ಸೂರಿನಲ್ಲೇನೇ ಬ್ರಾಹ್ಮಣರ ಆಡುಗನ್ನಡಕ್ಕೂ ಒಕ್ಕಲಿಗರ ಆಡುಗನ್ನಡಕ್ಕೂ ನಡುವೆ ವ್ಯತ್ಯಾಸವಿದೆ.

ಆದರೆ, ಬರಹ ಕನ್ನಡ ಹೀಗೆ ಬೇರೆ ಬೇರೆಯಾಗಿ ಇರುವಂತಿಲ್ಲ. ಅದು ಎಲ್ಲರಿಗೂ ಸಮನಾಗಿದ್ದು, ‘ಎಲ್ಲರ ಕನ್ನಡ’ವಾಗಿರಬೇಕಾಗುತ್ತದೆ; ಯಾಕೆಂದರೆ, ಜಾಗ ಮತ್ತು ಜಾತಿಗಳ ಎಲ್ಲೆಗಳನ್ನು ಮೀರಿ ಜನರನ್ನು ಬೆಸೆಯುವ ಒಂದು ವಿಶೇಶವಾದ ಕೆಲಸ ಅದರದು. ಹಲವು ಬಗೆಯ ಆಡುಗನ್ನಡಗಳನ್ನು ಬಳಸುವ ಎಲ್ಲಾ ಕನ್ನಡಿಗರಿಗೂ ಸಮಾನವಾಗಿರಬೇಕಾದಂತಹ ಬರಹ ಕನ್ನಡ ಅವರೆಲ್ಲರ ಆಡುಗನ್ನಡಕ್ಕಿಂತಲೂ ಬೇರಾಗಿಯೇ ಇರಬೇಕಾಗುತ್ತದೆ ಎಂದು ಸುಲಬವಾಗಿ ಕಾಣಬಹುದು.

ಬರಹ ಕನ್ನಡ ಬೇರೆ ಬೇರೆ ಆಡುಗನ್ನಡಗಳಿಗಿಂತ ಬೇರಾಗಿರಬೇಕಾದುದು ಅನಿವಾರ‍್ಯ ಎಂದ ಮಾತ್ರಕ್ಕೆ ಅದು ಅವುಗಳಿಗಿಂತ ತುಂಬಾ ದೂರದಲ್ಲಿರುವುದೂ ಅನಿವಾರ‍್ಯ ಎಂದೇನಿಲ್ಲ; ಆದಶ್ಟು ಹತ್ತಿರವೂ ಇರಬಹುದು. ಅದು ನಮ್ಮೆಲ್ಲರಿಗಿಂತ ದೂರದಲ್ಲಿರಬೇಕೋ ಹತ್ತಿರದಲ್ಲಿರಬೇಕೋ ಎಂಬ ಪ್ರಶ್ನೆಯನ್ನು ಹಾಕಿಕೊಂಡರೆ, ಯಾರೂ ‘ದೂರದಲ್ಲಿರಬೇಕು’ ಎಂಬ ಉತ್ತರವನ್ನು ಕೊಡಲಾರರು. ಬರಹ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೂ ಆದಶ್ಟು ಹತ್ತಿರವಿರುವಂತೆ ಮಾಡಿದಲ್ಲಿ, ಕನ್ನಡವನ್ನು ಓದಲು ಮತ್ತು ಬರೆಯಲು ಕಲಿಯುವ ಕೆಲಸ ಎಲ್ಲಾ ಕನ್ನಡಿಗರಿಗೂ ಸುಲಬವಾಗುತ್ತದೆ ಎಂದು ಯಾರಾದರೂ ಕಾಣಬಹುದು. ಆದುದರಿಂದ ಹಾಗೆ ಮಾಡಬೇಕಾಗಿರುವುದು ಕನ್ನಡದ ಮತ್ತು ಅದರ ಮೂಲಕ ಕನ್ನಡಿಗರ ಏಳಿಗೆಗೆ ಬಹಳ ಮುಕ್ಯವಾದ ಕೆಲಸ.

ಎಲ್ಲರಿಗೂ ಆದಶ್ಟು ಹತ್ತಿರವಿರುವ ಬರಹ ಕನ್ನಡದಲ್ಲಿ ಸಂಸ್ಕ್ರುತ, ಇಂಗ್ಲಿಶ್, ಹಿಂದಿ ಮೊದಲಾದ ಬೇರೆ ನುಡಿಗಳಿಂದ ಪಡೆಯುವ ಎರವಲು ಪದಗಳನ್ನು ಒಂದು ಮಿತಿಯಲ್ಲಿರಿಸಿಕೊಳ್ಳುವುದು ಅನಿವಾರ‍್ಯವೆಂದು ಹೇಳಬೇಕಾಗಿಯೇ ಇಲ್ಲ. ಜಾಗ ಮತ್ತು ಜಾತಿಯ ತಾರತಮ್ಯವಿಲ್ಲದೆ ಎಲ್ಲರೂ ಬರಹವನ್ನು ಬಳಸತೊಡಗಿದಾಗ, ಅಂತಹ ಎರವಲು ಪದಗಳು ಒಂದು ಮಿತಿಯಲ್ಲಿ ಇದ್ದೇ ಇರುತ್ತವೆ; ಬಹುಶಹ ನೂರಕ್ಕೆ ಅಯ್ದು ಇಲ್ಲವೇ ಹತ್ತಕ್ಕಿಂತ ಹೆಚ್ಚು ಇರಲಾರವು. ತನ್ನ ಸೊಗಡನ್ನು ಉಳಿಸಿಕೊಂಡಿರುವ ಅಂತಹ ಬರಹಗಳನ್ನು ಓದುವ ಮತ್ತು ಬರೆಯುವ ಕೆಲಸ ಕೆಲವರಿಗಶ್ಟೇ ಅಲ್ಲ, ಎಲ್ಲರಿಗೂ ಸುಲಬದ್ದಾಗುತ್ತದೆ.

ಹಲವು ಕಡೆ ಕನ್ನಡದ್ದೇ ಆದ ಪದಗಳನ್ನು ಬರಹ ಕನ್ನಡದಲ್ಲಿ ಬಳಸುವುದು ಒಳ್ಳೆಯ ಬರವಣಿಗೆಯ ಗುರುತಲ್ಲ ಎಂಬ ಒಂದು ವಿಚಿತ್ರವಾದ ಅನಿಸಿಕೆ ಕೆಲವರಲ್ಲಿದೆ; ಕನ್ನಡದ್ದೇ ಆದ ಪದಗಳ ಬದಲು ಸಂಸ್ಕ್ರುತದ ಎರವಲುಗಳನ್ನು ಬಳಸುವುದರಿಂದ ಬರಹ ಮೇಲ್ಮಟ್ಟದ್ದಾಗುತ್ತದೆಯೆಂಬ ಬ್ರಮೆ ಅದೇಕೋ ಅವರಲ್ಲಿದೆ. ‘ನಾಯಿ’ ಎಂದು ಬರೆಯುವ ಬದಲು ‘ಶ್ವಾನ’ ಎಂದು ಬರೆಯುವುದು, ‘ಕೂದಲು’ ಎಂಬುದರ ಬದಲು ‘ಕೇಶ’ ಎನ್ನುವುದು, ‘ಹಲ್ಲು’ ಎನ್ನುವ ಬದಲು ‘ದಂತ’ ಎನ್ನುವುದು, ‘ಕೂಡಿಸುವುದು’ ಎನ್ನುವ ಬದಲು ‘ಸಂಕಲನ’ ಎನ್ನುವುದು, ಇವೆಲ್ಲ ಮೇಲ್ಮಟ್ಟದ ಕನ್ನಡ ಬರವಣಿಗೆಯ ಗುರುತುಗಳು ಎಂದು ಹಲವರು ತಿಳಿದಿದ್ದಾರೆ. ಆದರೆ ಈ ರೀತಿಯ ಬಳಕೆಗಳು ಬರಹ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸುವಂತವಲ್ಲ, ದೂರವಾಗಿಸುವಂತವು ಎಂದು ತಿಳಿದುಕೊಳ್ಳಲು ಕಶ್ಟವಿಲ್ಲ.

ಹೊಸ ಹೊಸ ಪದಗಳನ್ನು ಉಂಟುಮಾಡಬೇಕಾದಾಗಲಂತೂ ಸಂಸ್ಕ್ರುತವನ್ನು ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂದು ಹೆಚ್ಚಿನ ಕನ್ನಡದ ಬರಹಗಾರರೂ ತಿಳಿದಿದ್ದಾರೆ. ಆದರೆ ಅಂತಹ ಪದಗಳನ್ನು ಬಳಸಿರುವ ಕನ್ನಡ ಬರಹ ಎಲ್ಲರಿಗೂ ಹತ್ತಿರವಾಗುವ ಬದಲು ದೂರ ಉಳಿಯುತ್ತದೆ, ಮತ್ತು ಅದನ್ನು ಕಲಿಯುವ ಮತ್ತು ಬಳಸುವ ಕೆಲಸ ಹೆಚ್ಚಿನ ಕನ್ನಡಿಗರಿಗೂ ತೊಡಕಿನದಾಗುತ್ತದೆ. ಹೊಸ ಪದಗಳನ್ನು ಉಂಟುಮಾಡುವುದರ ಗುರಿ ಕನ್ನಡಿಗರಿಗೆಲ್ಲ ಆ ಪದಗಳು ಸೂಚಿಸುವ ವಿಶಯ ಇಲ್ಲವೇ ವಸ್ತುವಿನ ಪರಿಚಯ ಮಾಡಿಸುವುದು ಎಂಬುದನ್ನು ನೆನಪಿನಲ್ಲಿಟ್ಟರೆ ಹೆಜ್ಜೆಹೆಜ್ಜೆಗೂ ಸಂಸ್ಕ್ರುತವನ್ನು ಮೊರೆಹೊಗುವುದು ತಾನೇ ನಿಲ್ಲುತ್ತದೆ.

ಹೊಸ ಪದಗಳನ್ನು ಉಂಟುಮಾಡಲು ಕನ್ನಡದ್ದೇ ಆದ ಪದಗಳನ್ನು ಮತ್ತು ಬೇರುಗಳನ್ನು ಬಳಸಬಹುದು; ಇವು ಹೊಸಗನ್ನಡದಲ್ಲಿ ಸಿಗದಿದ್ದರೆ ಹಳೆಗನ್ನಡದಿಂದ, ಇಲ್ಲವೇ ಆಡುಗನ್ನಡಗಳಿಂದ ಪಡೆದುಕೊಳ್ಳಬಹುದು. ಹೆಚ್ಚಿನವರೂ ಕೇಳಿಲ್ಲದ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಸಂಸ್ಕ್ರುತದವು ಎಂಬ ಒಂದೇ ಕಾರಣಕ್ಕಾಗಿ ಬಳಸಿ ಹೊಸ ಪದಗಳನ್ನು ಉಂಟುಮಾಡುವುದಕ್ಕಿಂತಲೂ, ಹೆಚ್ಚಿನವರೂ ಕೇಳಿರುವ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಯಾವ ನುಡಿಯವಾಗಿದ್ದರೂ (ಎತ್ತುಗೆಗೆ ಇಂಗ್ಲೀಶಿನವಾಗಿದ್ದರೂ) ಎರವಲಾಗಿ ಪಡೆದು ಬಳಸಿಕೊಳ್ಳಬಹುದು.

ಇವತ್ತು ಕನ್ನಡ ಬರಹದಲ್ಲಿ ಕನ್ನಡಕ್ಕೆ ನಿಜಕ್ಕೂ ಬೇಡದಿರುವ ಹಲವು ಬರಿಗೆಗಳನ್ನು (ಅಕ್ಶರಗಳನ್ನು) ಬಳಸಲಾಗುತ್ತದೆ; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಸಂಸ್ಕ್ರುತದಲ್ಲಿ ಇರುವ ಹಾಗೆಯೇ ಬರೆಯಬೇಕು (ಕೆಲವು ಅಪವಾದಗಳನ್ನು ಹೊರತುಪಡಿಸಿ) ಎಂಬ ಕಟ್ಟಲೆಯೊಂದನ್ನು ಉಳಿಸಿಕೊಳ್ಳುವುದಕ್ಕಾಗಿ ಹತ್ತು ಮಹಾಪ್ರಾಣ ಬರಿಗೆಗಳು, ಋಕಾರ, ಷಕಾರ, ಐ, ಔ, ಙ, ಞ, ವಿಸರ‍್ಗ ಎಂಬಂತಹ ಒಟ್ಟು ಹದಿನೇಳು ಹೆಚ್ಚಿನ ಬರಿಗೆಗಳನ್ನು ಕನ್ನಡ ಬರಹದಲ್ಲಿ ಬಳಸಲಾಗುತ್ತಿದೆ. (ಇದಲ್ಲದೆ ರಕಾರಕ್ಕೆ ಎಂಬ ಒಂದು ಹೆಚ್ಚಿನ ರೂಪವನ್ನೂ ಬಳಸಲಾಗುತ್ತಿದೆ.)

ಇವುಗಳಲ್ಲಿ ಹೆಚ್ಚಿನವೂ ಕನ್ನಡ ಬರಹದ ಓದಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಓದಿನಲ್ಲಿಲ್ಲದ ಬರಿಗೆಗಳನ್ನು ಬರಹದಲ್ಲಿ ಕಾಣಿಸುವುದು ತುಂಬಾ ತೊಡಕಿನ ಕೆಲಸ; ಎಶ್ಟು ತೊಡಕಿನ ಕೆಲಸವೆಂಬುದು ಇವತ್ತಿನ ಕನ್ನಡ ಬರಹಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗುತ್ತದೆ: ಅವುಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸಿಕೊಳ್ಳುವುದು ಮಹಾಪ್ರಾಣದಂತಹ ಈ ಹೆಚ್ಚಿನ ಬರಿಗೆಗಳನ್ನು ಬಳಸುವುದರಲ್ಲೇ ಆಗಿದೆ.

ಬರಹದ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೆ ಹತ್ತಿರ ತರಲು ಬೇಡದ ಈ ಹದಿನೇಳು ಬರಿಗೆಗಳನ್ನು ಬಿಟ್ಟುಬಿಡುವುದೇ ಒಳಿತು. ಹಾಗೆಯೇ ಇಂಗ್ಲಿಶ್, ಹಿಂದಿ, ಮರಾಟಿ, ಉರ‍್ದು, ಮೊದಲಾದ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳ ಹಾಗೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನೂ ಹೆಚ್ಚಿನ ಕನ್ನಡಿಗರೂ ಓದುವ ಹಾಗೆಯೇ ಬರೆಯುವುದು ಒಳಿತು. ಅವನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬೇಕೆಂಬ ಕಟ್ಟಳೆಯನ್ನು ಉಳಿಸಿಕೊಳ್ಳಬೇಕಾಗಿಲ್ಲ.

ಹಳೆಗನ್ನಡದ ಸಮಯದಲ್ಲಿ ಕನ್ನಡಿಗರಿಗೆ ಇಂತಹದೊಂದು ಸ್ವಾತಂತ್ರ್ಯವಿತ್ತು; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಅವರು ಸಂಸ್ಕ್ರುತದಲ್ಲಿರುವ ಹಾಗೆಯೇ ಬೇಕಿದ್ದರೂ ಬರೆಯಬಲ್ಲವರಾಗಿದ್ದರು; ಇಲ್ಲವೇ ಕನ್ನಡದ ಸ್ವರೂಪಕ್ಕೆ ಹೊಂದಿಕೆಯಾಗುವ ಹಾಗೆ ಅದರಲ್ಲಿ ಮಾರ‍್ಪಾಡುಗಳನ್ನು ಮಾಡಿಯೂ ಬಳಸಬಲ್ಲವರಾಗಿದ್ದರು.
ಬರಹದ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸಲು ಈಗ ಕನ್ನಡಿಗರು ಮಾಡಬೇಕಿರುವ ಮಾರ‍್ಪಾಡು ಇದಕ್ಕಿಂತ ಬೇರಾದುದೇನಲ್ಲ. ಮಿತಿಯಿಲ್ಲದೆ ಸಂಸ್ಕ್ರುತದಿಂದ ಎರವಲಾಗಿ ಪಡೆಯುವುದನ್ನು ಕಡಿಮೆ ಮಾಡುವುದು, ಮತ್ತು ಸಂಸ್ಕ್ರುತ ಬಲ್ಲವರು ಮಾತ್ರವಲ್ಲದೆ ಎಲ್ಲರೂ ಬರಹ ಕನ್ನಡದಿಂದ ಪಡೆಯುವುದನ್ನು ಪಡೆಯುವುದಶ್ಟೇ ಅಲ್ಲದೆ, ಬರಹ ಕನ್ನಡದ ಮೂಲಕ ಕೊಡುವುದನ್ನು ಎಲ್ಲರೂ ಕೊಡುವಂತೆಯೂ ಮಾಡುವುದು ಕನ್ನಡದ ಏಳಿಗೆಗೆ ಇಂದು ಅನಿವಾರ‍್ಯವಾಗಿದೆ.

ಈ ಇಪ್ಪತ್ತೊಂದನೆಯ ಶತಮಾನದಲ್ಲೂ ಹಲವು ಮಂದಿ ಕನ್ನಡಿಗರು ಬರವಣಿಗೆಯ ಪ್ರಪಂಚದಲ್ಲಿ ಆಟಕ್ಕಶ್ಟೇ ಅಲ್ಲ, ಲೆಕ್ಕಕ್ಕೆ ಬರುವಂತೆಯೂ ಪಾಲ್ಗೊಳ್ಳಲು ಆಗದಿರಲು ಹಲವು ಬಗೆಯ ತೊಡಕುಗಳು ಕಾರಣವಾಗಿವೆ. ಎತ್ತುಗೆಗಾಗಿ, ಕೆಳವರ‍್ಗದ ಜನರ ಬಡತನ ಮತ್ತು ಅರಿಯಮೆಗಳು ಅವರ ಮಕ್ಕಳನ್ನು ಶಾಲೆಗಳಿಂದ ದೂರ ಇರಿಸುತ್ತವೆ. ಹಲವರಾದ ಅವರ ಕನ್ನಡಕ್ಕಿಂತ ಕೆಲವರಾದ ತಮ್ಮ ಕನ್ನಡಕ್ಕೆ ಹತ್ತಿರವಿರುವಂತೆಯೇ ಬರಹದ ಕನ್ನಡವನ್ನು ಇಟ್ಟುಕೊಳ್ಳಲು ಮೇಲ್ವರ‍್ಗದವರು ಬಯಸುವುದು ಇದಕ್ಕೆ ಒತ್ತಾಸೆಯಾಗಿರುತ್ತದೆ. ಕೆಳವರ‍್ಗದವರನ್ನು ಅವರಿರುವಲ್ಲಿಯೇ ಇರಲು ಬಿಡುವುದು ಮೇಲ್ವರ‍್ಗದವರ ಮನದಾಳದ ಬಯಕೆಯಾಗಿರಲಿಕ್ಕಿಲ್ಲ; ಕನ್ನಡಿಗರ ನೆತ್ತರಿನಲ್ಲಿ ಇಂತಹ ನಂಜಿಲ್ಲ. ಆದರೂ ಅವರು ಇರುವಲ್ಲೇ ಇರುವಂತೆ ಮಾಡುತ್ತಿರುವ ಕೆಲವು ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿಕೊಳ್ಳುವುದು ಹಿರಿಮೆಯಾದೀತು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter