Posts Tagged ‘ವಾಕ್ಯ’

ಮಕ್ಕಳಿಗೆ ವ್ಯಾಕರಣ ಕಲಿಸಬೇಕೇ?

ನುಡಿಯರಿಮೆಯ ಇಣುಕುನೋಟ – 15

ಬೇಕು ಎನ್ನುತ್ತಿದ್ದಾರೆ ಇತ್ತೀಚೆಗೆ ಹಲವು ಮಂದಿ ತಿಳಿವಿಗರು; ಆದರೆ, ವ್ಯಾಕರಣವನ್ನು ಹಿಂದಿನ ಹಾಗೆ ಒಂದು ವಿಶಯವಾಗಿ ಕಲಿಸುವ ಬದಲು, ಮಕ್ಕಳ ಓದು ಮತ್ತು ಬರಹಗಳ ಕಲಿಕೆಗೆ ನೆರವಾಗುವ ಹಾಗೆ ನೇರವಲ್ಲದ ಬಗೆಯಲ್ಲಿ ಅದನ್ನು ಕಲಿಸಬೇಕು ಎಂಬುದು ಹೆಚ್ಚಿನ ತಿಳಿವಿಗರ ತೀರ‍್ಮಾನವಾಗಿದೆ.

ನಿಜಕ್ಕೂ ವ್ಯಾಕರಣದ ಕಟ್ಟಲೆಗಳನ್ನು ಮಕ್ಕಳಿಗೆ ಕಲಿಸುವುದು ತುಂಬಾ ತೊಡಕಿನ ಕೆಲಸ. ಯಾಕೆಂದರೆ, ಮೊದಲನೆಯದಾಗಿ, ಈ ಕಟ್ಟಲೆಗಳೆಲ್ಲ ತೊಡಕು ತೊಡಕಾದವುಗಳು; ಅವನ್ನು ವಿವರಿಸಲು ಬೇರೆಯೇ ಆದ ಅರಿಮೆಯ ಪದಗಳು ಬೇಕಾಗುತ್ತವೆ. ಇದಲ್ಲದೆ, ಅವುಗಳಲ್ಲಿ ಯಾವ ಕಟ್ಟಲೆಯೂ ಬೇರೆಯಾಗಿ ನಿಲ್ಲುವುದಿಲ್ಲ; ಎಲ್ಲವೂ ಒಂದರೊಡನೊಂದು ಹೆಣೆದಿರುತ್ತವೆ. ಹಾಗಾಗಿ, ವ್ಯಾಕರಣದ ಯಾವ ಕಟ್ಟಲೆಯನ್ನು ಕಲಿಸಬೇಕಿದ್ದರೂ, ಅದಕ್ಕೆ ಬೇರೆ ಕಟ್ಟಲೆಗಳೊಂದಿಗಿರುವ ಕೊಂಡಿಗಳನ್ನೂ ಕಲಿಸಿಕೊಡಬೇಕಾಗುತ್ತದೆ.

ಎರಡನೆಯದಾಗಿ, ವ್ಯಾಕರಣದ ಕಟ್ಟಲೆಗಳು ಓದಿಗೆ ಇಲ್ಲವೇ ಬರಹಕ್ಕೆ ಯಾವ ರೀತಿಯಲ್ಲಿ ನೆರವಿಗೆ ಬರಬಲ್ಲುವು ಎಂಬುದು ಅವನ್ನು ಕಲಿಯುವವರಿಗೆ ಸುಲಬವಾಗಿ ಗೊತ್ತಾಗುವುದಿಲ್ಲ, ಮತ್ತು ಅವು ಯಾಕೆ ಬೇಕಾಗುತ್ತವೆ ಎಂಬುದನ್ನು ತಿಳಿಯದವರಿಗೆ ಅವನ್ನು ಕಲಿಯುವಲ್ಲಿ ಯಾವ ಹುರುಪೂ ಇರುವುದಿಲ್ಲ. ಅವುಗಳ ಕಲಿಕೆ ಬರಿಯ ಒಂದು ಯಾಂತ್ರಿಕ ಕೆಲಸವಾಗಿಬಿಡುತ್ತದೆ.

ಹಿಂದಿನ ಕಾಲದ ಶಾಲೆಗಳಲ್ಲಿ ವ್ಯಾಕರಣವನ್ನು ಬೇರೆಯೇ ಒಂದು ವಿಶಯವಾಗಿ ಕಲಿಸಲಾಗುತ್ತಿತ್ತು, ಮತ್ತು ಈ ಕಾರಣದಿಂದಾಗಿ, ಅದೊಂದು ತುಂಬಾ ತೊಡಕು ತೊಡಕಾದ, ಮತ್ತು ತೀರಾ ಅನವಶ್ಯಕವಾದ ವಿಶಯವೆಂಬುದಾಗಿ ಅದನ್ನು ಕಲಿಯುವವರಿಗೆ ಮಾತ್ರವಲ್ಲ, ಅದನ್ನು ಕಲಿಸುವವರಿಗೂ ಅನಿಸುತ್ತಿತ್ತು. ಅಯ್ದಾರು ವರ‍್ಶ ಅದನ್ನು ಕಲಿಸಿದರೂ ಮಕ್ಕಳ ಓದಿನಲ್ಲಿ ಇಲ್ಲವೇ ಬರವಣಿಗೆಯಲ್ಲಿ ಅದರಿಂದಾಗಿ ಯಾವ ಮಾರ‍್ಪಾಡೂ ಉಂಟಾಗುವುದಿಲ್ಲ ಎಂಬುದನ್ನು ಸಂಶೋದನೆಗಳು ತೋರಿಸಿಕೊಟ್ಟುವು. ಇದನ್ನು ಗಮನಿಸಿದ ಹಲವು ತಿಳಿವಿಗರು ನುಡಿಯ ಕಲಿಕೆಗೆ ವ್ಯಾಕರಣದ ತಿಳಿವು ಬೇಕಾಗಿಲ್ಲ, ಮತ್ತು ಅದನ್ನು ಶಾಲೆಗಳಲ್ಲಿ ಕಲಿಸಬೇಕಾಗಿಲ್ಲ ಎಂಬ ತೀರ‍್ಮಾನಕ್ಕೆ ಬಂದಿದ್ದರು.

ಆದರೆ, ನಿಜಕ್ಕೂ ಇದೊಂದು ತಪ್ಪಾದ ತೀರ‍್ಮಾನವಾಗಿತ್ತು; ಯಾಕೆಂದರೆ, ಯಾವ ಕೆಲಸವೇ ಆಗಲಿ, ಅದನ್ನು ಜಾಣ್ಮೆಯಿಂದ ನಡೆಸಬೇಕೆಂದಿರುವವರಿಗೆ ಅದರ ಒಳಗುಟ್ಟಿನ ತಿಳಿವು ನೆರವಿಗೆ ಬಂದೇ ಬರುತ್ತದೆ. ಎತ್ತುಗೆಗಾಗಿ, ಕಾರನ್ನು ಓಡಿಸುವವರು ಅದರ ಬೇರೆ ಬೇರೆ ಅಂಗಗಳ ಗುರಿ, ಅವುಗಳ ಅಳವು-ನಲುವುಗಳು, ಅವುಗಳ ಕೆಲಸದ ಮೇಲೆ ಗಾಳಿ, ಮಳೆ, ಬಿಸಿಲು, ಮತ್ತು ದಾರಿಂii ಗೊತ್ತುಪಾಡುಗಳಿಂದ ಉಂಟಾಗಬಹುದಾದ ಅಡಚಣೆಗಳು ಮೊದಲಾದುವನ್ನು ಸರಿಯಾಗಿ ತಿಳಿದುಕೊಂಡಿರುವರಾದರೆ, ಆ ಕೆಲಸವನ್ನು ಅವರು ಹೆಚ್ಚು ಜಾಣ್ಮೆಯಿಂದ ನಡೆಸಬಲ್ಲರು.

ಓದುವ ಮತ್ತು ಬರೆಯುವ ಕೆಲಸಗಳೂ ಹೀಗೆಯೇ. ಅವುಗಳ ಒಳಗುಟ್ಟನ್ನು ತಿಳಿದುಕೊಂಡವರಿಗೆ ಅವನ್ನು ಹೆಚ್ಚು ಸುಳುವಾಗಿ ಮತ್ತು ಹೆಚ್ಚು ಚನ್ನಾಗಿ ನಡೆಸಲು ಬರುತ್ತದೆ. ಬರಹಗಳಲ್ಲಿ ಹಲವು ಬಗೆಗಳಿದ್ದು, ಅವನ್ನು ಓದಿ ತಿಳಿದುಕೊಳ್ಳುವಲ್ಲಿ ಇಲ್ಲವೇ ಅಂತಹವೇ ಬರಹಗಳನ್ನು ಹೊಸದಾಗಿ ಬರೆಯುವಲ್ಲಿ ಹಲವಾರು ಬಗೆಯ ವ್ಯಾಕರಣದ ಕಟ್ಟಲೆಗಳನ್ನು ಬಳಸಬೇಕಾಗುತ್ತದೆ; ಹಾಗಾಗಿ, ಅಂತಹ ಕಟ್ಟಲೆಗಳ ತಿಳಿವು ಈ ಕೆಲಸಗಳನ್ನು ಜಾಣ್ಮೆಯಿಂದ ನಡೆಸುವಲ್ಲಿ ನೆರವಾಗದಿರದು.

ಆದರೆ, ಮೇಲೆ ಸೂಚಿಸಿದ ಹಾಗೆ, ವ್ಯಾಕರಣದ ಕಟ್ಟಲೆಗಳನ್ನು ನೇರವಾಗಿ ಕಲಿಸಹೋಗದೆ, ಓದುವ ಮತ್ತು ಬರೆಯುವ ಕೆಲಸಗಳಲ್ಲಿ ಅವು ಹೇಗೆ ನೆರವಾಗುತ್ತವೆ ಎಂಬುದನ್ನು ತೋರಿಸಿಕೊಡುವ ಮೂಲಕ ಕಲಿಸಿದಲ್ಲಿ ಮಾತ್ರ ಅವು ಮಕ್ಕಳ ಓದು-ಬರಹದ ಕಲಿಕೆಯ ಮೇಲೆ ಪರಿಣಾಮವನ್ನು ಬೀರಬಲ್ಲುವು.

ಎತ್ತುಗೆಗಾಗಿ, ಕೆಲವು ಸೊಲ್ಲು(ವಾಕ್ಯ)ಗಳ ಹುರುಳೇನೆಂಬುದನ್ನು ತಿಳಿದುಕೊಳ್ಳುವಲ್ಲಿ ಮಕ್ಕಳಿಗೆ ತೊಂದರೆಯಾಗುತ್ತಿರಬಹುದು; ಅಂತಹ ಸೊಲ್ಲುಗಳಲ್ಲಿ ಮುಕ್ಯ ಅಂಶಗಳನ್ನು ಮುಕ್ಯವಲ್ಲದ ಅಂಶಗಳಿಂದ ಬೇರ‍್ಪಡಿಸುವುದು ಹೇಗೆ ಎಂಬುದನ್ನು ಮಕ್ಕಳಿಗೆ ತೋರಿಸಿಕೊಟ್ಟಲ್ಲಿ, ಅವರು ಅವುಗಳ ಹುರುಳನ್ನು ಸುಲಬವಾಗಿ ತಿಳಿದುಕೊಳ್ಳಬಲ್ಲರು. ಆದರೆ, ಸೊಲ್ಲುಗಳಲ್ಲಿ ಮುಕ್ಯ ಅಂಶ ಯಾವುದು ಮತ್ತು ಮುಕ್ಯವಲ್ಲದ ಅಂಶ ಯಾವುದು ಎಂಬುದನ್ನು ತೋರಿಸಿಕೊಡಬೇಕಾದರೆ, ಅವನ್ನು ಹೇಗೆ ಕಟ್ಟಲಾಗಿದೆ, ಅವುಗಳ ಒಳರಚನೆಯೆಂತಹದು ಎಂಬಂತಹ ವ್ಯಾಕರಣಕ್ಕೆ ಸಂಬಂದಿಸಿರುವ ಕಟ್ಟಲೆಗಳನ್ನು ಕಲಿಸಬೇಕಾಗುತ್ತದೆ.

ಇತ್ತೀಚೆಗೆ ಹೆಚ್ಚು ಹೆಚ್ಚು ಮಂದಿ ತಿಳಿವಿಗರು ಓದು-ಬರಹದ ಕಲಿಕೆಯಲ್ಲಿ ವ್ಯಾಕರಣದ ಕೊಡುಗೆ ನಿಜಕ್ಕೂ ತುಂಬ ದೊಡ್ಡದು ಎಂಬುದನ್ನು ಕಂಡುಕೊಳ್ಳುತ್ತಿದ್ದಾರೆ. ಮಕ್ಕಳು ತಾವು ಓದಿ ತಿಳಿದುಕೊಳ್ಳಬೇಕಾಗಿರುವ ಇಲ್ಲವೇ ಬರೆಯಬೇಕಾಗಿರುವ ಸೊಲ್ಲುಗಳ ಒಳರಚನೆಯೆಂತಹದು ಎಂಬುದನ್ನು ಗಮನಿಸುವ ಹಾಗೆ ಮಾಡಿದಲ್ಲಿ ಅವರಿಗೆ ಆ ಕೆಲಸವನ್ನು ನಡೆಸಲು ಹೆಚ್ಚು ಸುಲಬವಾಗುತ್ತದೆ ಎಂಬುದನ್ನೂ ಅವರು ಕಂಡುಕೊಳ್ಳುತ್ತಿದ್ದಾರೆ.

ಇಂತಹ ತಿಳುವಳಿಕೆ ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗಿಂತಲೂ ಹಿಂದೆ ಬೀಳುವ ಮಕ್ಕಳಿಗೆ ಹೆಚ್ಚು ನೆರವಾಗುತ್ತದೆ ಎಂಬುದನ್ನೂ ಕಂಡುಕೊಳ್ಳಲಾಗಿದೆ. ಎತ್ತುಗೆಗಾಗಿ, ಮಾತಿನಲ್ಲಿ ಬರುವ ಹಾಗೆ ತುಂಡು ತುಂಡಾಗಿರುವ ಸೊಲ್ಲುಗಳು ಬರಹದಲ್ಲಿ ಬರಬಾರದು; ಅವೆಲ್ಲ ಇಡಿ ಇಡಿಯಾಗಿರಬೇಕು; ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳನ್ನಾಗಿ ಮಾತ್ರ ಬಳಸಬಹುದು ಎಂದು ಹೇಳಿಕೊಟ್ಟಾಗ, ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗೆ ತಾವೇನು ಮಾಡಬೇಕು ಎಂಬುದು ಒಡನೆಯೇ ಗೊತ್ತಾಗುತ್ತದೆ.

ಆದರೆ, ತರಗತಿಯಲ್ಲಿ ಹಿಂದೆ ಬೀಳುವ ಮಕ್ಕಳಿಗೆ ಅದು ಗೊತ್ತಾಗುವುದಿಲ್ಲ. ಅವರಿಗೆ ಅದು ಗೊತ್ತಾಗುವ ಹಾಗೆ ಮಾಡಬೇಕಿದ್ದಲ್ಲಿ, ತುಂಡು ಸೊಲ್ಲುಗಳಿಗೂ ಇಡೀ ಸೊಲ್ಲುಗಳಿಗೂ ನಡುವಿರುವ ವ್ಯತ್ಯಾಸ ಎಂತಹದು ಎಂಬುದನ್ನು, ಮತ್ತು ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳಾಗಿ ಮಾಡಿ ಬಳಸುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕಾಗುತ್ತದೆ. ಎಂದರೆ, ಇಡಿಯಾಗಿರುವ ಸೊಲ್ಲುಗಳ ಒಳರಚನೆಯ ಹಿಂದಿರುವ ವ್ಯಾಕರಣದ ಕಟ್ಟಲೆಗಳನ್ನು ಅವರಿಗೆ ವಿವರಿಸಬೇಕಾಗುತ್ತದೆ.

ಕನ್ನಡದ ಮಟ್ಟಿಗೆ ಹೇಳುವುದಾದರೆ, ಇನ್ನೊಂದು ಸಮಸ್ಯೆಯೂ ವ್ಯಾಕರಣದ ಕಲಿಕೆಯನ್ನು ಕಾಡುತ್ತಿದೆ; ಅದೇನೆಂದರೆ, ಇವತ್ತು ಕನ್ನಡ ವ್ಯಾಕರಣದ ಹೊತ್ತಗೆಗಳಲ್ಲಿ ಕಾಣಿಸಿಕೊಳ್ಳುವ ಕಟ್ಟಲೆಗಳಲ್ಲಿ ಹೆಚ್ಚಿನವನ್ನೂ ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಯಾರಿಗೂ ಸಾದ್ಯವಾಗಲಾರದು. ಯಾಕೆಂದರೆ, ಈ ವ್ಯಾಕರಣಗಳನ್ನು ಬರೆದವರು ಸಂಸ್ಕ್ರುತ ವ್ಯಾಕರಣದಲ್ಲಿದ್ದ ಕಟ್ಟಲೆಗಳನ್ನು ಹಾಗೆಯೇ ಕನ್ನಡಕ್ಕೆ ತಂದುಹಾಕಿದ್ದಾರಲ್ಲದೆ, ನಿಜಕ್ಕೂ ಕನ್ನಡ ಪದಗಳ ಇಲ್ಲವೇ ಸೊಲ್ಲುಗಳ ಬಳಕೆಯ ಹಿಂದೆ ಎಂತಹ ಕಟ್ಟಲೆಗಳು ಅಡಗಿವೆ ಎಂಬುದನ್ನು ಕಂಡುಹಿಡಿಯುವ ಮೂಲಕ ಅವನ್ನು ಬರೆದಿಲ್ಲ.

ಹಾಗಾಗಿ, ಈ ಕಟ್ಟಲೆಗಳನ್ನು ಸಂಸ್ಕ್ರುತ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಬಹುದಲ್ಲದೆ, ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಲಾರದು. ಕನ್ನಡ ಬರಹಗಳಲ್ಲಿ ಕನ್ನಡದವೇ ಆದ ಬೇರೆಯೇ ಕಟ್ಟಲೆಗಳು ಬಳಕೆಯಾಗುತ್ತವೆ; ಈ ಕಟ್ಟಲೆಗಳು ಎಂತಹವು ಎಂಬುದನ್ನು ಇವತ್ತು ಕಂಡುಹಿಡಿಯಬೇಕಾಗಿದೆ, ಮತ್ತು ಮಕ್ಕಳ ಓದು-ಬರಹದ ಕಲಿಕೆಗೆ ಅವು ಹೇಗೆ ನೆರವಾಗಬಲ್ಲುವು ಎಂಬುದನ್ನೂ ಕಂಡುಹಿಡಿಯಬೇಕಾಗಿದೆ. ಈ ಎರಡು ಕೆಲಸಗಳನ್ನು ನಡೆಸಿದ ಮೇಲಶ್ಟೇ ಮಕ್ಕಳಿಗೆ ಅವರ ಓದಿನ ಮತ್ತು ಬರಹದ ಕಲಿಕೆಯಲ್ಲಿ ನೆರವಾಗುವ ಹಾಗೆ ಕನ್ನಡ ವ್ಯಾಕರಣದ ಕಟ್ಟಲೆಗಳನ್ನು ಕಲಿಸಲು ಸಾದ್ಯವಾಗಬಲ್ಲುದು.

ಮಾತಿನ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಮತ್ತು ಅನುಬವಗಳನ್ನು ಇನ್ನೊಬ್ಬರಿಗೆ ಹೇಗೆ ತಿಳಿಸುತ್ತೇವೆ, ಮತ್ತು ಇನ್ನೊಬ್ಬರು ಬಳಸಿದ ಮಾತುಗಳಿಂದ ಅವರ ಅನಿಸಿಕೆ ಮತ್ತು ಅನುಬವಗಳು ಎಂತಹವು ಎಂಬುದು ನಮಗೆ ಹೇಗೆ ಗೊತ್ತಾಗುತ್ತದೆ ಎಂಬುದನ್ನು ವ್ಯಾಕರಣ ತಿಳಿಸುತ್ತದೆ. ಮನುಶ್ಯನಲ್ಲಿ ಮಾತ್ರವೇ ಕಾಣಿಸಿಕೊಳ್ಳುವ ಈ ಒಂದು ವಿಶಿಶ್ಟವಾದ ಅಳವಿನ ಕುರಿತಾಗಿ ಏನು ಹೇಳಬೇಕಿದ್ದರೂ ವ್ಯಾಕರಣದಲ್ಲಿ ಬಳಕೆಯಾಗುವ ಅರಿಮೆಯ ಪದಗಳನ್ನು ಬಳಸಲೇಬೇಕಾಗುತ್ತದೆ. ಹಾಗಾಗಿ, ಮಕ್ಕಳಿಗೆ ಈ ಅರಿಮೆಯ ತಿಳಿವು ದೊರಕುವಂತೆ ಮಾಡುವುದು ಬೇರೆಲ್ಲಾ ಬಗೆಯ ಅರಿಮೆ(ವಿಜ್ನಾನ)ಗಳ ತಿಳಿವು ದೊರಕುವಂತೆ ಮಾಡುವಶ್ಟೇ ಮುಕ್ಯವಾದುದು.

ಹಾಗಾಗಿ, ಅದರ ತಿಳಿವನ್ನು ಮಕ್ಕಳಿಗೆ ಯಾವಾಗ ಮತ್ತು ಹೇಗೆ ಕೊಡಿಸಬಹುದು ಎಂಬ ವಿಶಯದಲ್ಲಿ ಚರ‍್ಚೆ ನಡೆಸಬಹುದಲ್ಲದೆ, ಅದು ಬೇಕೇ ಬೇಡವೇ ಎಂಬ ವಿಶಯದಲ್ಲಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಯಾವುದು ಕನ್ನಡ ವ್ಯಾಕರಣ?

ನುಡಿಯರಿಮೆಯ ಇಣುಕುನೋಟ – 12

ಕೇಶಿರಾಜನ ಕಾಲದಿಂದಲೂ ಕನ್ನಡ ಪಂಡಿತರು ಯಾವುದನ್ನು‘ಕನ್ನಡ ವ್ಯಾಕರಣ’ ಎಂಬುದಾಗಿ ಕರೆಯುತ್ತ ಬಂದಿದ್ದಾರೋ ಅದು ನಿಜಕ್ಕೂ ಕನ್ನಡದ ವ್ಯಾಕರಣವೇ ಅಲ್ಲ; ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳು ಕನ್ನಡದಲ್ಲೂ ಇರಬಹುದು, ಇಲ್ಲವೇ ಇರಬೇಕು ಎಂಬ ತಪ್ಪು ಕಲ್ಪನೆಯಲ್ಲಿ ಆ ಕಟ್ಟಲೆಗಳನ್ನು ಕನ್ನಡದಲ್ಲಿ ಕಾಣಲು ನಡೆಸಿದ ಒಂದು ವ್ಯರ‍್ತ ಪ್ರಯತ್ನ ಮಾತ್ರ.

ನಮ್ಮ ಶಾಲೆಗಳಲ್ಲಿ ಮಕ್ಕಳಿಗೆ ಇದೇ ಕನ್ನಡದ್ದಲ್ಲದ ವ್ಯಾಕರಣವನ್ನು ಕಲಿಸಲಾಗುತ್ತಿದೆ. ಅದನ್ನು ಯಾಕೆ ‘ಕನ್ನಡ ವ್ಯಾಕರಣ’ವೆಂದು ಕರೆಯಬೇಕು ಎಂಬುದನ್ನು ಮಕ್ಕಳೂ ತಿಳಿಯಲಾರರು, ಅದನ್ನು ಕಲಿಸುವ ಮಾಸ್ತರರೂ ತಿಳಿಸಿಕೊಡಲಾರರು. ಇನ್ನು ಅದರಿಂದ ಪ್ರಯೋಜನವನ್ನೇನಾದರೂ ಪಡೆಯುವುದಂತೂ ದೂರವೇ ಉಳಿಯಿತು.

ನಿಜಕ್ಕೂ ಈ ‘ವ್ಯಾಕರಣ’ ಎಂಬುದು ಏನು ಮಾಡಬೇಕು? ಒಂದು ನುಡಿಯಲ್ಲಿ ಬರುವ ಪದಗಳ ಒಳರಚನೆ ಎಂತಹದು, ಪದಗಳನ್ನು ಬಳಸಿ ಆ ನುಡಿಯಲ್ಲಿ ಸೊಲ್ಲು(ವಾಕ್ಯ)ಗಳನ್ನು ಉಂಟುಮಾಡುವುದು ಹೇಗೆ, ಮತ್ತು ಸೊಲ್ಲುಗಳನ್ನು ಬಳಸಿ ಅದರಲ್ಲಿ ಬರಹಗಳನ್ನು ಬರೆಯುವುದು ಹೇಗೆ ಎಂಬಂತಹ ಸೊಲ್ಲುಗಳ ಕುರಿತಾಗಿರುವ ತಿಳಿವನ್ನು ಅದು ನಮಗೆ ಒದಗಿಸಬೇಕು.
ಕನ್ನಡದ ಕುರಿತಾಗಿರುವ ಇಂತಹ ತಿಳಿವನ್ನು ನಾವು ಇಲ್ಲಿ ‘ಕನ್ನಡದ ಸೊಲ್ಲರಿಮೆ’ ಎಂದು ಕರೆಯೋಣ; ಯಾಕೆಂದರೆ, ‘ಕನ್ನಡ ವ್ಯಾಕರಣ’ ಎಂಬುದಕ್ಕೆ ಇವತ್ತು ಮೇಲೆ ವಿವರಿಸಿದಂತಹ ಬೇರೆಯೇ ಹುರುಳಿದೆ.

ಪಾಣಿನಿಯೇ ಮೊದಲಾದ ಸಂಸ್ಕ್ರುತದ ಪಂಡಿತರು ಆ ನುಡಿಯಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ, ಅವುಗಳ ಹಿಂದಿರುವ ಕಟ್ಟಲೆಗಳು ಎಂತಹವು ಎಂಬುದನ್ನು ಕಂಡುಹಿಡಿದಿದ್ದರು, ಮತ್ತು ಅಂತಹ ಕಟ್ಟಲೆಗಳನ್ನು ಒಟ್ಟುಗೂಡಿಸಿ, ಅದನ್ನು ‘ಸಂಸ್ಕ್ರುತ ವ್ಯಾಕರಣ’ ಎಂಬುದಾಗಿ ಕರೆದಿದ್ದರು; ಅಂತಹದೇ ಕೆಲಸವನ್ನು ಇವತ್ತು ನಾವು ಕನ್ನಡದಲ್ಲಿ ನಡೆಸಬೇಕಾಗಿದೆ.
ಸೊಲ್ಲುಗಳನ್ನು ಕಟ್ಟುವ ಬಗೆ ಸಂಸ್ಕ್ರುತದಲ್ಲಿರುವುದಕ್ಕಿಂತ ಕನ್ನಡದಲ್ಲಿ ತೀರ ಬೇರಾಗಿದೆ; ಹಾಗಾಗಿ, ಸಂಸ್ಕ್ರುತ ವ್ಯಾಕರಣದಲ್ಲಿ ಬರುವ ಕಟ್ಟಲೆಗಳಿಗಿಂತ ತೀರ ಬೇರಾಗಿರುವ ಕಟ್ಟಲೆಗಳು ‘ಕನ್ನಡದ ಸೊಲ್ಲರಿಮೆ’ಯಲ್ಲಿ ಬರಬೇಕಾಗುತ್ತದೆ.

ಸಂಸ್ಕ್ರುತದಲ್ಲಿ ಎರಡು (ಇಲ್ಲವೇ ಹೆಚ್ಚು) ಪದಗಳನ್ನು ಒಟ್ಟುಸೇರಿಸಿ ಹೊಸಪದವನ್ನು ಉಂಟುಮಾಡುವ ಹೊಲಬನ್ನು ‘ಸಮಾಸ’ ಎಂಬುದಾಗಿ ಕರೆಯಲಾಗುತ್ತದೆ; ನಾಮಪದಗಳನ್ನು ಮಾತ್ರ ಈ ರೀತಿ ಸಂಸ್ಕ್ರುತದಲ್ಲಿ ಒಟ್ಟುಸೇರಿಸಲು ಬರುತ್ತದೆ. ಹಾಗಾಗಿ, ಒಟ್ಟುಸೇರಿಸಿದ ಪದಗಳಲ್ಲಿ ಯಾವುದು ಮುಕ್ಯ ಎಂಬುದರ ಮೇಲೆ ಈ ಸಮಾಸಗಳನ್ನು ತತ್ಪುರುಶ (ಎರಡನೆಯದು ಮುಕ್ಯ), ಅವ್ಯಯೀಬಾವ (ಮೊದಲನೆಯದು ಮುಕ್ಯ), ದ್ವಂದ್ವ (ಎರಡೂ ಮುಕ್ಯ) ಮತ್ತು ಬಹುವ್ರೀಹಿ (ಎರಡೂ ಮುಕ್ಯವಲ್ಲ, ಬೇರೊಂದು ಪದ ಮುಕ್ಯ) ಎಂಬ ನಾಲ್ಕು ಬಗೆಗಳಲ್ಲಿ ಗುಂಪಿಸಬಹುದೆಂದು ಸಂಸ್ಕ್ರುತ ವ್ಯಾಕರಣಗಳು ಹೇಳುತ್ತವೆ.

ಆದರೆ, ಕನ್ನಡದಲ್ಲಿ ಎರಡು ಪದಗಳನ್ನು ಒಟ್ಟುಸೇರಿಸಿ ಹೊಸದೊಂದು ಪದವನ್ನು ಉಂಟುಮಾಡುವ ಬಗೆ ಇದರಿಂದ ತೀರ ಬೇರಾದುದು. ನಾಮಪದ, ಕ್ರಿಯಾಪದ, ಮತ್ತು ಗುಣಪದಗಳೆಂಬ ಮೂರು ಬಗೆಯ ಪದಗಳನ್ನು ಇಂತಹ ಹೊಸಪದಗಳ ಮೊದಲನೆಯ ಪದವಾಗಿ ಬಳಸಲು ಬರುತ್ತದೆ; ಅವುಗಳ ಎರಡನೆಯ ಪದ ಮಾತ್ರ ಯಾವಾಗಲೂ ಹೆಸರುಪದವಾಗಿರುತ್ತದೆ.

ಕಯ್ಮಗ್ಗ, ಬಯಲಾಟ, ನೆಲಗಡಲೆ ಎಂಬಂತಹ ಪದಗಳಲ್ಲಿ ಎರಡು ನಾಮಪದಗಳು ಒಟ್ಟುಸೇರಿವೆ; ಕಡೆಗೋಲು, ಸಿಡಿಮದ್ದು, ಬಿಚ್ಚುಕತ್ತಿ ಎಂಬಂತಹ ಪದಗಳಲ್ಲಿ ಕ್ರಿಯಾಪದ ಮತ್ತು ನಾಮಪದಗಳು ಒಟ್ಟುಸೇರಿವೆ (ಕಡೆ, ಸಿಡಿ ಮತ್ತು ಬಿಚ್ಚು ಎಂಬವು ಕ್ರಿಯಾಪದಗಳು); ಬಿಸಿನೀರು, ದೊಡ್ಡಮ್ಮ, ಬೆಳ್ಳುಳ್ಳಿ ಎಂಬಂತಹ ಪದಗಳಲ್ಲಿ ಗುಣಪದ ಮತ್ತು ನಾಮಪದಗಳು ಒಟ್ಟುಸೇರಿವೆ.
ಹಾಗಾಗಿ, ಕನ್ನಡದಲ್ಲಿ ಬರುವ ‘ಸಮಾಸ’ ಯಾವ ಬಗೆಯದು ಎಂಬುದನ್ನು ತಿಳಿಯಬೇಕಿದ್ದಲ್ಲಿ ಅಂತಹ ಹೊಸಪದಗಳಲ್ಲಿ ಮೊದಲಿಗೆ ಯಾವ ಬಗೆಯ ಪದ ಬಂದಿದೆ ಎಂಬುದನ್ನು ತಿಳಿಯಬೇಕಲ್ಲದೆ, ಸಂಸ್ಕ್ರುತದ ಹಾಗೆ ಯಾವ ಪದ ಮುಕ್ಯ ಎಂಬುದನ್ನಲ್ಲ.

ಇಂಗ್ಲಿಶ್‌ನಂತಹ ಬೇರೆ ನುಡಿಗಳಿಂದ ಹೊಸ ಹೊಸ ವಿಶಯಗಳನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕಾಗಿ ಹಲವಾರು ಹೊಸ ಪದಗಳನ್ನು ಕನ್ನಡದಲ್ಲಿ ಉಂಟುಮಾಡಿಕೊಳ್ಳಬೇಕಾಗುತ್ತದೆ. ನಿಜಕ್ಕೂ ಕನ್ನಡ ಪದಗಳ ಒಳರಚನೆಯೆಂತಹದು ಎಂಬುದನ್ನು ತಿಳಿದವರು ಮಾತ್ರ ಈ ಕೆಲಸವನ್ನು ಸರಿಯಾಗಿ ನಡೆಸಬಲ್ಲರು.

ಸಂಸ್ಕ್ರುತ ಪದಗಳ ಒಳರಚನೆಯೇ ಕನ್ನಡ ಪದಗಳಿಗೂ ಇದೆ ಎಂಬ ತಪ್ಪು ತಿಳಿವನ್ನು ‘ಕನ್ನಡ ವ್ಯಾಕರಣ’ಗಳಿಂದ ಪಡೆದಿರುವ ಕನ್ನಡ ಪಂಡಿತರಿಗೆ ಇಂತಹ ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡುವುದು ಹೇಗೆ ಎಂಬುದು ಗೊತ್ತೇ ಇರುವುದಿಲ್ಲ. ಹಾಗಾಗಿ, ಹೊಸಪದಗಳು ಬೇಕಾದಾಗಲೆಲ್ಲ ಅವರು ಅವನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡದೊಳಗೆ ತುರುಕುತ್ತಾರೆ, ಮತ್ತು ಸಂಸ್ಕ್ರುತದ ನೆರವಿಲ್ಲದೆ ಕನ್ನಡದಲ್ಲಿ ಹೊಸಪದಗಳನ್ನು ಉಂಟುಮಾಡಲು ಸಾದ್ಯವೇ ಇಲ್ಲ ಎಂಬ ತಪ್ಪು ತೀರ‍್ಮಾನಕ್ಕೆ ಬರುತ್ತಾರೆ.

ಕ್ರಿಯಾಪದಗಳನ್ನು ನಾಮಪದಗಳೊಂದಿಗೆ ಸೇರಿಸಿ ಹೊಸಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಲು ಬರುವುದಿಲ್ಲವಾದರೂ ಕನ್ನಡದಲ್ಲಿ ಬರುತ್ತದೆ ಎಂಬ ಕನ್ನಡದ್ದೇ ಆದ ಸೊಲ್ಲರಿಮೆಯ ಕಟ್ಟಲೆಯನ್ನು ತಿಳಿದವರಿಗೆ ನೂರಾರು ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಇಂಗುಗುಂಡಿ, ಇಡುಗಂಟು, ಇಳಿನೀರು, ಉಜ್ಜುಗಾಯ, ಉಬ್ಬುಗನ್ನಡಿ, ಕಟ್ಟುಪಟ್ಟಿ, ಕರೆಸಾಲ, ತಡೆಯೋಟ, ತೇಲುಮನೆ, ತಳ್ಳುಗುಂಡಿ ಮೊದಲಾದ ಇಂತಹ ಪದಗಳು ಕನ್ನಡ ಬರಹದಲ್ಲೂ ತುಂಬಾ ಚನ್ನಾಗಿ ಹೊಂದಿಕೊಳ್ಳುತ್ತವೆ.

ಕನ್ನಡದ ಆಡುನುಡಿಗಳಲ್ಲಿಯೂ ಈ ಹೊಲಬನ್ನು ಬಳಸಿ ಉಂಟುಮಾಡಿರುವ ತುಂಬುಕಡಬು, ಬಿಚ್ಚೋಲೆ, ತೂಗುದೀಪ ಎಂಬಂತಹ ಹಲವಾರು ಪದಗಳು ಬಳಕೆಯಲ್ಲಿವೆ; ಆದರೆ, ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳೇ ಕನ್ನಡದಲ್ಲೂ ಇವೆಯೆಂಬುದಾಗಿ ಬ್ರಮಿಸುವ ‘ಕನ್ನಡ ವ್ಯಾಕರಣ’ಗಳಿಂದಾಗಿ ದಾರಿತಪ್ಪಿರುವ ಕನ್ನಡ ಪಂಡಿತರು ತಮ್ಮಲ್ಲಿ ಸ್ವಾಬಾವಿಕವಾಗಿ ಬೆಳೆದುಬಂದಿರಬಹುದಾದ ಈ ತಾಯ್ನುಡಿಯ ಅಳವನ್ನೇ ಕಳೆದುಕೊಂಡಿದ್ದಾರೆ.

ಸಂಸ್ಕ್ರುತದ ವಾಕ್ಯಗಳಲ್ಲಿ ಏಳು ವಿಬಕ್ತಿಗಳು ಬಳಕೆಯಾಗುತ್ತವೆ ಎಂಬುದನ್ನು ಸಂಸ್ಕ್ರುತದ ಪಂಡಿತರು ಕಂಡುಕೊಂಡಿದ್ದಾರೆ; ಕನ್ನಡದ ಸೊಲ್ಲುಗಳನ್ನು ಪರಿಶೀಲಿಸಿದೆವಾದರೆ, ಅವುಗಳಲ್ಲಿ ಬರುವ ಪದಗಳಿಗೆ ಒಟ್ಟು ನಾಲ್ಕು ವಿಬಕ್ತಿರೂಪಗಳು ಮಾತ್ರ ಕಾಣಿಸುತ್ತವಲ್ಲದೆ, ಏಳು ವಿಬಕ್ತಿ ರೂಪಗಳು ಕಾಣಿಸುವುದಿಲ್ಲ; ಹಾಗಿರುವಾಗ, ಸಂಸ್ಕ್ರುತದ ಹಾಗೆ ಕನ್ನಡದಲ್ಲೂ ಏಳು ವಿಬಕ್ತಿಗಳಿರಬೇಕು ಎಂದು ಬ್ರಮಿಸಿ, ಅವನ್ನು ಕಾಣಲು ಪ್ರಯತ್ನಿಸುವ ‘ಕನ್ನಡದ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕನ್ನಡದಲ್ಲಿ ಮೂರು ಕಾಲಗಳಿವೆಯೆಂದು ‘ಕನ್ನಡ ವ್ಯಾಕರಣ’ಗಳು ಹೇಳುತ್ತವೆ; ಇದರಂತೆ, ಮಾಡುತ್ತೇನೆ ಎಂಬ ರೂಪ ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಬೇಕು, ಮತ್ತು ಮಾಡುವೆನು ಎಂಬ ರೂಪ ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸಬೇಕು.

ಆದರೆ, ನಿಜಕ್ಕೂ ಕನ್ನಡದಲ್ಲಿ ನಾಳೆ ಮಾಡುತ್ತೇನೆ, ಬರುವ ವರ‍್ಶ ಮಾಡುತ್ತೇನೆ ಎಂಬಂತಹ ಸೊಲ್ಲುಗಳಲ್ಲಿ ಕಾಣಿಸುವ ಹಾಗೆ, ಮಾಡುತ್ತೇನೆ ಎಂಬುದು ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸುತ್ತದೆ; ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಲು ಮಾಡುತ್ತಿದ್ದೇನೆ ಎಂಬ ಮಾಡು ಪದಕ್ಕೆ ಇರು ಪದವನ್ನು ಸೇರಿಸಿರುವ ಬೇರೆಯೇ ಪದರೂಪವನ್ನು ಬಳಸಲಾಗುತ್ತದೆ. ಇಂತಹ ಕಣ್ಣಿಗೆ ಹೊಡೆದು ಕಾಣಿಸುವಂತಹ ತಪ್ಪುಗಳಿರುವ ‘ಕನ್ನಡ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕಂಪ್ಯೂಟರ್‌ಗಳನ್ನು ಬಳಸಿ ಒಂದು ನುಡಿಯ ಸೊಲ್ಲುಗಳನ್ನು ಇನ್ನೊಂದು ನುಡಿಗೆ ಅನುವಾದಿಸಲು ಬರುತ್ತದೆ; ಆದರೆ, ಹೀಗೆ ಮಾಡಬೇಕಿದ್ದಲ್ಲಿ, ಆ ಎರಡು ನುಡಿಗಳ ವಿವರವಾದ ಸೊಲ್ಲರಿಮೆಗಳನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಬೇಕಾಗುತ್ತದೆ. ಇಂಗ್ಲಿಶ್ ನುಡಿಗೆ ಈಗಾಗಲೇ ಸಾಕಶ್ಟು ವಿವರವಾದ ವ್ಯಾಕರಣವನ್ನು ಬರೆಯಲಾಗಿದ್ದು, ಅದನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಲಾಗಿದೆ; ಕನ್ನಡಕ್ಕೂ ಇಂತಹದೊಂದು ವಿವರವಾದ ಸೊಲ್ಲರಿಮೆಯನ್ನು ಬರೆದಲ್ಲಿ, ಇಂಗ್ಲಿಶ್ ಬರಹಗಳನ್ನು ಕನ್ನಡಕ್ಕೆ ಅನುವಾದಿಸುವಲ್ಲಿಯೂ ಕಂಪ್ಯೂಟರನ್ನು ಬಳಸಲು ಸಾದ್ಯವಾಗಬಹುದು.

ಆದರೆ, ಇಂತಹ ಕೆಲಸಕ್ಕೆ ಸಂಸ್ಕ್ರುತ ವ್ಯಾಕರಣವನ್ನೇ ‘ಕನ್ನಡ ವ್ಯಾಕರಣ’ವೆಂದು ಬ್ರಮಿಸುವ ಕೇಶಿರಾಜನ ಕನ್ನಡ ವ್ಯಾಕರಣವಾಗಲಿ, ಇವತ್ತು ಶಾಲೆಗಳಲ್ಲಿ ಕಲಿಸುವ ‘ಕನ್ನಡ ವ್ಯಾಕರಣ’ವಾಗಲಿ ಯಾವ ನೆರವನ್ನೂ ನೀಡಲಾರದು. ಕನ್ನಡದಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಬಲ್ಲ ‘ಕನ್ನಡದ ಸೊಲ್ಲರಿಮೆ’ಯೊಂದೇ ಈ ಕೆಲಸದಲ್ಲಿ ನೆರವನ್ನು ನೀಡಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter