Posts Tagged ‘ಹಳೆಗನ್ನಡ’

ಪದಗಳ ಹಿನ್ನಡವಳಿಯನ್ನು ಅರಿಯುವ ಬಗೆ

ನುಡಿಯರಿಮೆಯ ಇಣುಕುನೋಟ – 29

ಕನ್ನಡದ ಯಾವ ಪದವನ್ನು ಬೇಕಿದ್ದರೂ ಸಂಸ್ಕ್ರುತದ ಪದಗಳಿಂದ ಬಂದುವೆಂಬುದಾಗಿ ತೋರಿಸಿಕೊಡಬಲ್ಲೆವು ಎಂಬ ನಂಬಿಕೆ ಕೆಲವರಲ್ಲಿದೆ; ಹೀಗೆ ತೋರಿಸಿಕೊಡುವುದಕ್ಕಾಗಿ ಅವರು ಪದಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಕಾಣಿಸುವ ಹೋಲಿಕೆಗಳನ್ನು ಮಾತ್ರವಲ್ಲದೆ ಹಲವಾರು ಬಗೆಯ ಕಯ್ಚಳಕಗಳನ್ನೂ ಬಳಸುತ್ತಾರೆ.

ಈ ಕಯ್ಚಳಕಗಳ ಮೂಲಕ ಅವರು ಉಲಿ ಇಲ್ಲವೇ ಹುರುಳುಗಳಲ್ಲಿ ಹೋಲಿಕೆಗಳು ಕಾಣಿಸದಿದ್ದರೂ ಸಂಬಂದವನ್ನು ಕಾಣಬಲ್ಲರು; ಎತ್ತುಗೆಗಾಗಿ, ಕನ್ನಡದ ‘ನೆತ್ತರು’ ಪದವನ್ನು ಸಂಸ್ಕ್ರುತದ ‘ರುಧಿರ’ ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯಿದ್ದರೂ ಉಲಿಯ ಹೋಲಿಕೆ ತುಂಬಾ ಕಡಿಮೆ; ಕನ್ನಡದ ‘ಕಟ್ಟೆ’ ಪದವನ್ನು ಸಂಸ್ಕ್ರುತದ ‘ಕಕ್ಷಾ’ (ಕಂಕುಳು) ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯೂ ತುಂಬಾ ಕಡಿಮೆ. ಹೀಗಿದ್ದರೂ, ಕಯ್ಚಳಕಗಳ ಮೂಲಕ ಅವರು ಇವನ್ನು ಒಂದಕ್ಕೊಂದು ಜೋಡಿಸಿ ಬಿಡುತ್ತಾರೆ. ಇಂತಹ ಕಯ್ಚಳಕಗಳು ಅವರಿಗೆ ತಮ್ಮ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನೆರವಾಗುತ್ತವೆಯಾದರೂ, ನಿಜಕ್ಕೂ ಆ ಪದಗಳ ಹಿನ್ನಡವಳಿ (ಚರಿತ್ರೆ) ಎಂತಹದು ಎಂಬುದನ್ನು ತಿಳಿದುಕೊಳ್ಳುವಲ್ಲಿ ಅವು ಯಾವ ನೆರವನ್ನೂ ನೀಡುವುದಿಲ್ಲ.

ಕನ್ನಡದ ಪದಗಳು ಎರಡು ಬಗೆಗಳಲ್ಲಿ ಸಂಸ್ಕ್ರುತ ಪದಗಳೊಂದಿಗೆ ಸಂಬಂದಿಸಿರಬಲ್ಲುವು: ಅವೆರಡೂ ಒಂದೇ ನುಡಿಕುಟುಂಬದ ನುಡಿಗಳೆಂಬುದೊಂದು ಬಗೆ, ಮತ್ತು ಅವುಗಳಲ್ಲಿ ಒಂದು ಇನ್ನೊಂದರಿಂದ ಪದಗಳನ್ನು ಎರವಲು ಪಡೆದಿದೆಯೆಂಬುದಿನ್ನೊಂದು ಬಗೆ. ಹಾಗಾಗಿ, ಯಾವ ಬಗೆಯ ಸಂಬಂದವನ್ನು ಅವುಗಳ ಪದಗಳ ನಡುವೆ ಕಾಣಲಾಗುತ್ತದೆ ಎಂಬುದನ್ನು ಮೊದಲು ತಿಳಿಸಬೇಕಾಗುತ್ತದೆ.

ನುಡಿಗಳಲ್ಲಿ ಕಾಲದಿಂದ ಕಾಲಕ್ಕೆ ಹಲವು ಬಗೆಯ ಮಾರ್‍ಪಾಡುಗಳು ನಡೆಯುತ್ತಲೇ ಇರುತ್ತವೆ; ಇವು ಉಲಿಗಳನ್ನು ಮಾರ್‍ಪಡಿಸಬಹುದು, ಪದಗಳನ್ನು ಇಲ್ಲವೇ ಅವುಗಳ ಹುರುಳುಗಳನ್ನು ಮಾರ್‍ಪಡಿಸಬಹುದು, ಮತ್ತು ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳನ್ನು ಮಾರ್‍ಪಡಿಸಬಹುದು. ಇಂತಹ ಹಲವು ಬಗೆಯ ಮಾರ್‍ಪಾಡುಗಳು ನಡೆದುದರಿಂದಾಗಿ ಹಳೆಗನ್ನಡವಿದ್ದುದು ನಡುಗನ್ನಡವಾಗಿ ಇವತ್ತು ಹೊಸಗನ್ನಡವಾಗಿದೆ, ಮತ್ತು ಹೊಸಗನ್ನಡವೂ ಹಲವು ಬಗೆಯ ಆಡುನುಡಿಗಳಾಗಿ ಒಡೆದುಕೊಂಡಿದೆ.

ಕಾಲದಿಂದ ಕಾಲಕ್ಕೆ ನಡೆಯುವ ಇಂತಹ ಮಾರ್‍ಪಾಡುಗಳಲ್ಲಿ ನುಡಿಯ ಉಲಿಗಳಲ್ಲಿ ನಡೆಯುವ ಮಾರ್‍ಪಾಡುಗಳೇ ತುಂಬಾ ಮುಕ್ಯವಾದವುಗಳು; ಯಾಕೆಂದರೆ, ಅವುಗಳಿಂದಾಗಿ ಪದಗಳ ಮತ್ತು ಒಟ್ಟು(ಪ್ರತ್ಯಯ)ಗಳ ರೂಪದಲ್ಲಿ ಮಾತ್ರವಲ್ಲದೆ, ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲೂ ಮಾರ್‍ಪಾಡುಗಳು ನಡೆಯುತ್ತವೆ. ಕನ್ನಡದ ಹಿನ್ನಡವಳಿಯಲ್ಲಿ ಇಂತಹ ಹಲವು ಬಗೆಯ ಉಲಿಗಳ ಮಾರ್‍ಪಾಡುಗಳು ನಡೆದಿವೆ.

ಹಳೆಗನ್ನಡದ ಪಕಾರ ಹಕಾರವಾಗಿರುವುದು (ಪಾಲು>ಹಾಲು, ಪಳೆ>ಹಳೆ, ಪೋಗು>ಹೋಗು); ರ-ಱ, ಳ-ೞಗಳ ನಡುವಿನ ವ್ಯತ್ಯಾಸ ಇಲ್ಲವಾಗಿರುವುದು, ಉದ್ದ ತೆರೆಯುಲಿ (ಸ್ವರ) ಮತ್ತು ತಡೆಯುಲಿ(ಸ್ಪರ‍್ಶ)ಗಳ ನಡುವಿನ ಮೂಗುಲಿ (ಅನುನಾಸಿಕ) ಬಿದ್ದುಹೋಗಿರುವುದು (ನೂಂಕು>ನೂಕು, ದಾಂಟು>ದಾಟು) ಮೊದಲಾದುವು ಇಂತಹ ಉಲಿಗಳ ಮಾರ್‍ಪಾಡುಗಳು.

ಇವು ಉಲಿಗಳ ಮಾರ್‍ಪಾಡುಗಳಲ್ಲದೆ ಪದಗಳ ಮಾರ್‍ಪಾಡುಗಳಲ್ಲ ಎಂಬುದನ್ನು ಗಮನಿಸುವುದು ಅವಶ್ಯ; ಪಕಾರ ಹಕಾರವಾಗುವಂತಹ ಒಂದು ಮಾರ್‍ಪಾಡು ನಡೆದಾಗ, ಪಕಾರವಿದ್ದ ಎಲ್ಲಾ (ಸಾವಿರಕ್ಕಿಂತಲೂ ಹೆಚ್ಚು) ಪದಗಳೂ ಅದಕ್ಕೆ ಒಳಗಾಗಿರುತ್ತವೆ. ಇಂತಹ ಮಾರ್‍ಪಾಡುಗಳು ಒಂದು ಉಲಿಯನ್ನು ಎಲ್ಲೆಡೆಗಳಲ್ಲೂ ತಾಗಬಹುದು, ಇಲ್ಲವೇ ಕೆಲವೆಡೆಗಳಲ್ಲಿ ಮಾತ್ರ ತಾಗಬಹುದು; ಪಕಾರ ಹಕಾರವಾಗುವ ಮಾರ್‍ಪಾಡು ಪಕಾರವನ್ನು ಎಲ್ಲೆಡೆಗಳಲ್ಲೂ ತಾಗಿದೆ; ಆದರೆ, ಎಕಾರ ಇಕಾರವಾಗುವ ಇನ್ನೊಂದು ಮಾರ್‍ಪಾಡು ಎಕಾರದ ಬಳಿಕ ಒತ್ತೆ ಮುಚ್ಚುಲಿ (ವ್ಯಂಜನ) ಮತ್ತು ಇಕಾರ ಇಲ್ಲವೇ ಉಕಾರ ಬಂದಿರುವಲ್ಲಿ ಮಾತ್ರ ನಡೆದಿದೆ, ಬೇರೆಡೆಗಳಲ್ಲಿ ಎಕಾರ ಮಾರ್‍ಪಡದೆ ಉಳಿದಿದೆ (ಬಿಳಿ, ಬಿಸಿ, ನಿಡು ಎಂಬಂತಹ ಪದಗಳಲ್ಲಿ ಈ ಮಾರ್‍ಪಾಡು ನಡೆದಿದೆ. ಆದರೆ ಬೆಳ್ಳಗೆ, ಬೆಚ್ಚಗೆ, ನೆಟ್ಟಗೆ ಎಂಬಂತಹ ಪದಗಳಲ್ಲಿ ನಡೆದಿಲ್ಲ). ಇದಲ್ಲದೆ, ಇಂತಹ ಮಾರ್‍ಪಾಡುಗಳಿಗೆಲ್ಲ ಒಂದು ಗಡುವಿರುತ್ತದೆ; ಈ ಗಡುವು ಮುಗಿದ ಮೇಲೆ ಹಿಂದಿನ ಬರಹಗಳಿಂದ (ಪಾಲು, ಪುಟ್ಟ, ಪೆಟ್ಟು) ಇಲ್ಲವೇ ಬೇರೆ ನುಡಿಗಳಿಂದ (ಪಾಪ, ಪುಣ್ಯ, ಪೂಜೆ) ಪದಗಳು ಎರವಲಾಗಿ ಬಂದು ಈ ಮಾರ್‍ಪಾಡಿಗೆ ಹೊರಪಡಿಕೆಗಳಾಗಿ ಕಾಣಿಸಬಲ್ಲುವು.

ಎರಡು ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ತೀರ‍್ಮಾನಿಸುವಲ್ಲೆಲ್ಲ ಇಂತಹ ಉಲಿಗಳ ಮಾರ್‍ಪಾಡುಗಳನ್ನೇ ಮುಕ್ಯವಾದ ನೆಲೆಯಾಗಿ ಬಳಸಿಕೊಳ್ಳಲಾಗುತ್ತದೆ. ಯಾಕೆಂದರೆ, ನುಡಿಗಳಲ್ಲಿ ನಡೆಯುವ ಹಲವು ಬಗೆಯ ಮಾರ್‍ಪಾಡುಗಳಲ್ಲಿ ಉಲಿಗಳ ಮಾರ್‍ಪಾಡುಗಳ ಮೇಲೆ ಮಾತ್ರ ಪದಗಳ ಹುರುಳುಗಳು ಯಾವ ಪ್ರಬಾವವನ್ನೂ ಬೀರುವುದಿಲ್ಲ; ನೇರವಾಗಿ ಪದಗಳಲ್ಲಿ ಇಲ್ಲವೇ ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲಿ ನಡೆಯುವ ಮಾರ್‍ಪಾಡುಗಳ ಮೇಲೆ ಅವು ಹಲವು ಬಗೆಗಳಲ್ಲಿ ಪ್ರಬಾವವನ್ನು ಬೀರುತ್ತವೆ, ಮತ್ತು ಈ ರೀತಿ ಹುರುಳುಗಳಿಂದ ಪ್ರಬಾವಿತವಾಗಿರುವ ಮಾರ್‍ಪಾಡುಗಳನ್ನು ಕಚಿತವಾದ ಕಟ್ಟಲೆಗಳಲ್ಲಿ ಸೆರೆಹಿಡಿಯಲು ಬರುವುದಿಲ್ಲ; ಯಾಕೆಂದರೆ, ಹುರುಳುಗಳಿಂದ ಪ್ರಬಾವಿತವಾದ ಮಾರ್‍ಪಾಡುಗಳಿಗೆ ಹಲವಾರು ಬಗೆಯ ಹೊರಪಡಿಕೆಗಳಿರುತ್ತವೆ.

ಹಾಗಾಗಿ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂಬ ತೀರ್‍ಮಾನಕ್ಕೆ ಬರಬೇಕಿದ್ದಲ್ಲಿ ಕನ್ನಡದ ಹಿನ್ನಡವಳಿಯಲ್ಲಿ ನಡೆದ ಉಲಿಗಳ ಮಾರ್‍ಪಾಡುಗಳನ್ನೇ ಮುಕ್ಯ ನೆಲೆಯಾಗಿ ಬಳಸಿಕೊಳ್ಳಬೇಕಾಗುತ್ತದೆ. ಎಂದರೆ, ಕನ್ನಡ ಮತ್ತು ಸಂಸ್ಕ್ರುತ ಪದಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಕನ್ನಡದ ಹಿನ್ನಡವಳಿಯಲ್ಲಿ ನಡೆದಿದ್ದ ಹಲವು ಬಗೆಯ ಉಲಿಗಳ ಮಾರ್‍ಪಾಡುಗಳಿಂದಾಗಿ ಮೂಡಿಬಂದಿವೆ ಎಂಬುದಾಗಿ ತೋರಿಸಿಕೊಡಲು ಸಾದ್ಯವಾದಾಗ ಮಾತ್ರ ಕನ್ನಡ ಸಂಸ್ಕ್ರುತದಿಂದ ಬೆಳೆದುಬಂದಿದೆ ಎಂಬುದನ್ನು ಒಪ್ಪಿಕೊಳ್ಳಲು ಬರುತ್ತದೆ. ಆದರೆ, ಇದುವರೆಗೆ ಯಾರಿಗೂ ಆ ರೀತಿ ತೋರಿಸಿಕೊಡಲು ಸಾದ್ಯವಾಗಿಲ್ಲ.

ಹಾಗಾಗಿ, ಸದ್ಯಕ್ಕಂತೂ ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿಲ್ಲವೆಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ, ಮತ್ತು ಕನ್ನಡದಲ್ಲಿ ಮೂಲದ್ರಾವಿಡ ನುಡಿಯಿಂದ ಬಂದ ಕನ್ನಡದವೇ ಆದ ಪದಗಳು, ಮತ್ತು ಸಂಸ್ಕ್ರುತವೇ ಮೊದಲಾದ ಬೇರೆ ನುಡಿಗಳಿಂದ ಎರವಲಾಗಿ ಬಂದ ಪದಗಳು ಎಂಬುದಾಗಿ ಎರಡು ಬಗೆಯ ಪದಗಳು ಇವೆಯೆಂಬುದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ.

ಕನ್ನಡದ ಪದಗಳಿಗೂ ಸಂಸ್ಕ್ರುತದ ಪದಗಳಿಗೂ ನಡುವೆ ಅವುಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಹೋಲಿಕೆಯಿದೆಯಾದರೆ, ಅದಕ್ಕೆ ಹಲವು ಕಾರಣಗಳಿರಬಲ್ಲುವು. ಎತ್ತುಗೆಗಾಗಿ, ಈ ಎಲ್ಲಾ ಪದಗಳನ್ನೂ ಉಂಟುಮಾಡಿದವರು ಮಾನವರೇ ಎಂಬುದೊಂದು ಕಾರಣ; ಹೋಲಿಕೆ ಬರಿಯ ಆಕಸ್ಮಿಕವಾಗಿರಬಹುದೆಂಬುದಿನ್ನೊಂದು ಕಾರಣ. ಹಾಗಾಗಿ, ಒಂದು ನುಡಿ ಇನ್ನೊಂದರಿಂದ ಎರವಲು ಪಡೆದಿದೆಯೆಂಬುದು ಪದಗಳ ನಡುವಿರುವ ಹೋಲಿಕೆಗಳಿಗಿರುವ ಹಲವು ಕಾರಣಗಳಲ್ಲಿ ಒಂದು ಮಾತ್ರ. ಇದಲ್ಲದೆ, ಇಲ್ಲಿಯೂ ಒಂದು ಪದವನ್ನು ಯಾವ ನುಡಿ ಯಾವ ನುಡಿಯಿಂದ ಎರವಲಾಗಿ ಪಡೆದಿದೆ ಎಂಬುದನ್ನು ತೀರ್‍ಮಾನಿಸುವಲ್ಲಿ ಅರಕೆಗೆ ನೆಲೆಯಿದೆ.

ಸಾಮಾನ್ಯವಾಗಿ, ಒಂದು ಪದದ ಹರಹು ಎಂತಹದು ಎಂಬುದರ ಮೇಲೆ ಅದರ ಹಿನ್ನಡವಳಿಯೆಂತಹದು ಎಂಬುದನ್ನು ತೀರ್‍ಮಾನಿಸಲಾಗುತ್ತದೆ; ಎತ್ತುಗೆಗಾಗಿ, ಕನ್ನಡದ ಒಂದು ಪದಕ್ಕೆ ಸಮಾನವಾದ ಪದಗಳು ತಮಿಳು, ತೆಲುಗು, ಗೋಂಡಿ, ಕುಡುಕ್ ಮೊದಲಾದ ಬೇರೆ ಹಲವು ದ್ರಾವಿಡ ನುಡಿಗಳಲ್ಲೂ ಕಾಣಿಸಿಕೊಳ್ಳುತ್ತಿವೆಯಾದರೆ, ಮತ್ತು ಸಂಸ್ಕ್ರುತವನ್ನು ಹೊರತುಪಡಿಸಿ ಉಳಿದ ಲ್ಯಾಟಿನ್, ಗ್ರೀಕ್, ಪರ್‍ಶಿಯನ್ ಮೊದಲಾದ ಇಂಡೋ-ಯುರೋಪಿಯನ್ ನುಡಿಗಳಲ್ಲಿ ಕಾಣಿಸುವುದಿಲ್ಲವಾದರೆ, ಅದು ಕನ್ನಡದ್ದೇ ಆದ ಪದ, ಮತ್ತು ಸಂಸ್ಕ್ರುತಕ್ಕೇನೇ ಅದು ದ್ರಾವಿಡ ನುಡಿಗಳಿಂದ ಎರವಲಾಗಿ ಬಂದಿದೆ ಎಂದು ಹೇಳಬೇಕಾಗುತ್ತದೆ.

ಇಂತಹ ಅರಕೆಗಳನ್ನು ನಡೆಸದೆ ಬರಿಯ ಹೋಲಿಕೆಯ ಮೇಲೆ ಎಲ್ಲವೂ ಸಂಸ್ಕ್ರುತದಿಂದ ಬಂದಿವೆಯೆಂದು ಹೇಳುವುದನ್ನು ಒಂದು ಅರಿಮೆಯ ಹೇಳಿಕೆಯೆಂದು ತಿಳಿಯಲು ಬರುವುದಿಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಪದ ಮತ್ತು ಅದರ ಹುರುಳು

ನುಡಿಯರಿಮೆಯ ಇಣುಕುನೋಟ – 27

ನುಡಿಗಳಲ್ಲಿ ಬಳಕೆಯಾಗುವ ಪದಗಳನ್ನು ಉಲಿಗಳ ಸೇರಿಕೆಯಿಂದ ಉಂಟುಮಾಡಲಾಗುತ್ತದೆ; ಮ್, ಅ, ನ್ ಮತ್ತು ಎ ಎಂಬ ನಾಲ್ಕು ಉಲಿಗಳ ಸೇರಿಕೆಯಿಂದ ‘ಮನೆ’ ಎಂಬ ಪದವನ್ನು ಉಂಟುಮಾಡಲಾಗಿದೆ; ಆದರೆ, ಈ ಉಲಿಗಳಲ್ಲಿ ಯಾವುದಕ್ಕೂ ಅದರದೇ ಆದ ಹುರುಳಿಲ್ಲ; ಅವುಗಳ ಸೇರಿಕೆಯಿಂದ ಉಂಟಾದ ‘ಮನೆ’ ಎಂಬ ಪದಕ್ಕೆ ಮಾತ್ರ ಹುರುಳಿದೆ. ಯಾಕೆಂದರೆ, ‘ಮ್’ ಎಂಬುದು ಮನೆ ಎಂಬ ಪದದಲ್ಲಿ ಮಾತ್ರವಲ್ಲದೆ, ಮಂಗ, ಮಜ್ಜಿಗೆ, ಕಡಿಮೆ, ಮಿಂಚು, ಕಮಟು, ಅಮ್ಮ ಮೊದಲಾದ ಬೇರೆಯೂ ಹಲವು ಪದಗಳಲ್ಲಿ ಬರುತ್ತದೆ, ಮತ್ತು ಈ ಎಲ್ಲಾ ಪದಗಳಿಗೂ ಸಮಾನವಾಗಿರುವ ಹುರುಳೊಂದನ್ನು ಕಂಡುಹಿಡಿದು, ಅದು ‘ಮ್’ ಎಂಬ ಉಲಿಯ ಹುರುಳು ಎಂಬುದಾಗಿ ತೋರಿಸಿಕೊಡಲು ಸಾದ್ಯವೇ ಇಲ್ಲ.

ಇದಲ್ಲದೆ, ಪದಗಳ ಅಂಗಗಳಾಗಿರುವ ಉಲಿಗಳು ಮಾರ‍್ಪಟ್ಟಾಗಲೂ ಅವುಗಳ ಹುರುಳು ಮಾರ‍್ಪಡದೆ ಉಳಿಯುತ್ತದೆ; ಈ ವಿಶಯವೂ ಹುರುಳೆಂಬುದು ಪದಗಳಿಗಿದೆಯಲ್ಲದೆ ಉಲಿಗಳಿಗಿಲ್ಲ ಎಂಬುದನ್ನು ಬೆಂಬಲಿಸುತ್ತದೆ. ಹಳೆಗನ್ನಡದ ಪಾಲ್ ಎಂಬುದು ಹಾಲು ಎಂಬುದಾಗಿ, ಬೞ್ದುಂಕು ಎಂಬುದು ಬದುಕು ಎಂಬುದಾಗಿ, ಬೆರಲ್ ಎಂಬುದು ಬೆರಳ್ ಎಂಬುದಾಗಿ ಹೊಸಗನ್ನಡದಲ್ಲಿ ಮಾರ‍್ಪಟ್ಟಾಗ, ಅದರಿಂದಾಗಿ ಆ ಪದಗಳಿಗೆ ಮೊದಲಿಗಿದ್ದ ಹುರುಳುಗಳಲ್ಲಿ ಮಾರ‍್ಪಾಡುಗಳೇನೂ ಆಗಿರಲಿಲ್ಲ.

ಉಲಿಗಳಿಗೆ ಅವುಗಳದೇ ಆದ ಹುರುಳಿಲ್ಲದಿದ್ದರೂ ಪದಗಳಿಗೆ ಅವುಗಳದೇ ಆದ ಹುರುಳಿದೆಯೆಂದು ಸಾಮಾನ್ಯವಾಗಿ ಹೇಳಲಾಗುತ್ತದೆ; ಅದರೆ, ಇಲ್ಲೂ ಕೆಲವು ಸಮಸ್ಯೆಗಳಿವೆ; ಪದನೆರಕೆ(ಡಿಕ್ಶನರಿ)ಗಳಲ್ಲಿ ಹೆಚ್ಚಿನ ಪದಗಳಿಗೂ ಎರಡು ಇಲ್ಲವೇ ಹೆಚ್ಚು ಹುರುಳುಗಳನ್ನು ಕೊಡಲಾಗುತ್ತದೆಯೆಂಬುದನ್ನು ಗಮನಿಸಬಹುದು; ಆದರೆ, ಈ ಪದಗಳನ್ನು ಸೊಲ್ಲುಗಳಲ್ಲಿ ಬಳಸಿದಾಗ, ಅವುಗಳ ಈ ಹಲವು ಹುರುಳುಗಳಲ್ಲಿ ಒಂದು ಮಾತ್ರ ನಮ್ಮ ಗಮನಕ್ಕೆ ಬರುತ್ತದೆ. ಎತ್ತುಗೆಗಾಗಿ, ಕಾಯು ಎಂಬ ಪದಕ್ಕೆ ಕಾಪಾಡು ಎಂಬ ಹುರುಳೂ ಇದೆ, ಬಿಸಿಮಾಡು ಎಂಬ ಹುರುಳೂ ಇದೆ; ಆದರೆ, ‘ನಾಯಿ ಮನೆಯನ್ನು ಕಾಯುತ್ತಿದೆ’ ಎಂಬ ಸೊಲ್ಲನ್ನು ಬಳಸಿದಾಗ ಕಾಯು ಪದದ ಮೊದಲನೆಯ ಹುರುಳು ಮಾತ್ರ ನಮ್ಮ ಗಮನಕ್ಕೆ ಬರುತ್ತದಲ್ಲದೆ, ಎರಡನೆಯ ಹುರುಳು ಗಮನಕ್ಕೆ ಬರುವುದಿಲ್ಲ.

ಇದೇ ರೀತಿಯಲ್ಲಿ ‘ಹಂಡೆಯಲ್ಲಿ ನೀರು ಕಾಯುತ್ತಿದೆ’ ಎಂಬ ಬೇರೊಂದು ಸೊಲ್ಲನ್ನು ಬಳಸಿದಾಗ ಅದರ ಎರಡನೆಯ ಹುರುಳು ಮಾತ್ರ ನಮ್ಮ ಗಮನಕ್ಕೆ ಬರುತ್ತದೆ. ಎಂದರೆ, ಒಂದು ಪದ ನಮಗೆ ಎಂತಹ ಹುರುಳನ್ನು ಕೊಡುತ್ತದೆ ಎಂಬುದು ಅದನ್ನು ಎಂತಹ ಸೊಲ್ಲಿನಲ್ಲಿ ಬಳಸಲಾಗಿದೆ ಎಂಬುದರ ಮೇಲೂ ಅವಲಂಬಿಸಿರುತ್ತದೆ. ಕೆಲವೊಮ್ಮೆ ಈ ರೀತಿ ಒಂದು ಪದಕ್ಕೆ ಒಂದಕ್ಕಿಂತ ಹೆಚ್ಚು ಹುರುಳುಗಳಿರುವುದು ತೊಂದರೆಯನ್ನೂ ಕೊಡಬಲ್ಲುದು. ಎತ್ತುಗೆಗಾಗಿ, ‘ಅವನು ಕರೆಯಲು ಬಂದಿದ್ದಾನೆ’ ಎಂದಿಶ್ಟೇ ಹೇಳಿದಲ್ಲಿ ಅವನು ಎಲ್ಲಿಗಾದರೂ ಬರಬೇಕೆಂದು ಹೇಳಲು ಬಂದಿದ್ದಾನೋ ಇಲ್ಲವೇ ದನವನ್ನು ಕರೆಯಲು ಬಂದಿದ್ದಾನೋ ಎಂಬ ವಿಶಯದಲ್ಲಿ ಗೊಂದಲವುಂಟಾಗಬಲ್ಲುದು. ಆದರೆ, ಸಾಮಾನ್ಯವಾಗಿ ನಾವು ಮಾತನ್ನು ಬಳಸುವಾಗ ಆ ರೀತಿ ಗೊಂದಲವುಂಟಾಗದಂತೆ ನೋಡಿಕೊಳ್ಳುತ್ತೇವೆ.

ಮಾತಿನಲ್ಲಿ ಬಳಕೆಯಾಗುವ ಪದಗಳಲ್ಲಿ ಹಲವಕ್ಕೆ (ಹೆಸರುಪದಗಳಿಗೆ) ವ್ಯಕ್ತಿ, ವಸ್ತು ಇಲ್ಲವೇ ಸಂಗತಿಯನ್ನು ಗುರುತಿಸುವ ಕಸುವಿರುತ್ತದೆ. ‘ಸುರೇಶ ಒಂದು ಹಣ್ಣು ತಿಂದ’ ಎಂಬ ಸೊಲ್ಲಿನಲ್ಲಿ ಎರಡು ಹೆಸರುಪದಗಳು ಬಂದಿದ್ದು, ಅವುಗಳಲ್ಲಿ ‘ಹಣ್ಣು’ ಎಂಬ ಪದ ಒಂದು ವಸ್ತುವನ್ನು ಗುರುತಿಸುತ್ತದೆ ಮತ್ತು ‘ಸುರೇಶ’ ಎಂಬ ಪದ ಒಬ್ಬ ವ್ಯಕ್ತಿಯನ್ನು ಗುರುತಿಸುತ್ತದೆ. ಪದಗಳ ಮೂಲಕ ಮಾತ್ರವಲ್ಲದೆ ಪದಕಂತೆಗಳ ಮೂಲಕವೂ ವ್ಯಕ್ತಿ, ವಸ್ತು ಮೊದಲಾದುವನ್ನು ಗುರುತಿಸಲು ಬರುತ್ತದೆ. ‘ಕುರ‍್ಚಿಯಲ್ಲಿ ಕುಳಿತಿರುವ ಮುದುಕ’ ಎಂಬ ಪದಕಂತೆ ಒಬ್ಬ ವ್ಯಕ್ತಿಯನ್ನು ಗುರುತಿಸುತ್ತದೆ, ಮತ್ತು ‘ರಾಜು ಕೊಟ್ಟ ಪುಸ್ತಕ’ ಎಂಬ ಇನ್ನೊಂದು ಪದಕಂತೆ ಒಂದು ವಸ್ತುವನ್ನು ಗುರುತಿಸುತ್ತದೆ.

ಈ ರೀತಿ ವ್ಯಕ್ತಿ, ವಸ್ತು ಮೊದಲಾದುವನ್ನು ಪದಗಳ ಮೂಲಕ ಗುರುತಿಸುವುದಕ್ಕೂ ಪದಕಂತೆಗಳ ಮೂಲಕ ಗುರುತಿಸುವುದಕ್ಕೂ ನಡುವೆ ಒಂದು ಮುಕ್ಯವಾದ ವ್ಯತ್ಯಾಸವಿದೆ. ಪದಕಂತೆಗಳ ಮೂಲಕ ಗುರುತಿಸುವಾಗ ಅವುಗಳ ಹುರುಳು ಬಳಕೆಯಾಗುತ್ತದೆ, ಆದರೆ ಪದಗಳ ಮೂಲಕ ಗುರುತಿಸುವಾಗ ಆ ರೀತಿ ಅವುಗಳ ಹುರುಳು ಬಳಕೆಯಾಗುವುದಿಲ್ಲ. ಅದಕ್ಕೆ ಬದಲು, ಪದಗಳಿಗೂ ಅವು ತಿಳಿಸಬಲ್ಲ ವ್ಯಕ್ತಿ, ವಸ್ತು ಮೊದಲಾದವುಗಳಿಗೂ ನಡುವಿರುವ ಸಂಬಂದ ಬಳಕೆಯಾಗುತ್ತದೆ.

ನಿಜಕ್ಕೂ ಒಂದು ಹೆಸರುಪದದ ಹುರುಳೇನು ಎಂಬುದನ್ನು ತಿಳಿಯಬೇಕಿದ್ದಲ್ಲಿ ಮೊದಲಿಗೆ ಅದು ಎಂತಹ ವ್ಯಕ್ತಿ, ವಸ್ತು ಇಲ್ಲವೇ ಸಂಗತಿಯನ್ನು ಗುರುತಿಸುತ್ತದೆ ಎಂಬುದನ್ನು ತಿಳಿಯಬೇಕಾಗುತ್ತದೆ. ಎತ್ತುಗೆಗಾಗಿ, ‘ನಾಯಿ’ ಎಂಬ ಪದ ಎಂತಹ ಪ್ರಾಣಿಯನ್ನು ಗುರುತಿಸಲು ಬಳಕೆಯಾಗುತ್ತದೆ, ಮತ್ತು ಆ ಪ್ರಾಣಿಯ ಪರಿಚೆ(ಗುಣ)ಗಳು ಎಂತಹವು ಎಂಬುದನ್ನು ತಿಳಿದಾಗ ಮಾತ್ರ ನಮಗೆ ಆ ಪದದ ಹುರುಳೇನು ಎಂಬುದು ಗೊತ್ತಾಗುತ್ತದೆ; ಹಾಗಾಗಿ, ಆ ಪ್ರಾಣಿಯ ಪರಿಚೆಗಳನ್ನೇ ಒಟ್ಟಾಗಿ ‘ನಾಯಿ’ ಎಂಬ ಪದದ ಹುರುಳು ಎಂದು ಹೇಳಬೇಕಾಗುತ್ತದೆ.

ಒಳರಚನೆಯಿರುವ ಪದಗಳ ಹುರುಳನ್ನೂ ಇದೇ ರೀತಿಯಲ್ಲಿ ಅವು ತಿಳಿಸುವ ವಸ್ತು, ವ್ಯಕ್ತಿ ಮೊದಲಾದವುಗಳ ಪರಿಚೆಗಳು ಎಂತಹವು ಎಂಬುದರಿಂದ ತಿಳಿಯಬೇಕಾಗುತ್ತದಲ್ಲದೆ ಅವುಗಳ ಒಳರಚನೆ ಎಂತಹದು ಎಂಬುದರಿಂದ ತಿಳಿಯಲು ಬರುವುದಿಲ್ಲ. ‘ಹೊಸಮನೆ’ ಎಂಬ ಪದದಲ್ಲಿ ‘ಹೊಸ’ ಮತ್ತು ‘ಮನೆ’ ಎಂಬ ಎರಡು ಪದಗಳು ಸೇರಿಕೊಂಡಿವೆ; ಆದರೆ, ಅದು ಗುರುತಿಸುವ ಮನೆ ಹೊಸದಾಗಿರಬಲ್ಲುದು, ಇಲ್ಲವೇ ತುಂಬಾ ಹಳೆಯದಾಗಿರಬಲ್ಲುದು; ಯಾಕೆಂದರೆ, ಒಮ್ಮೆ ಒಂದು ಮನೆಯನ್ನು ಆ ಹೆಸರಿನಿಂದ ಕರೆಯತೊಡಗಿದ ಮೇಲೆ, ಅದು ತುಂಬಾ ಹಳೆಯದಾದಾಗಲೂ ಆ ಹೆಸರನ್ನು ನಾವು ಬದಲಾಯಿಸಹೋಗುವುದಿಲ್ಲ; ಎಂದರೆ, ‘ಹೊಸಮನೆ’ ಎಂಬ ಪದದ ಹುರುಳು ಅದು ಗುರುತಿಸುವ ಮನೆಯ ಪರಿಚೆಗಳು ಬದಲಾದ ಹಾಗೆಲ್ಲ ಬದಲಾಗುತ್ತಾ ಹೋಗುತ್ತದೆ. ‘ಹಳೆಮನೆ’ ಎಂಬ ಹೆಸರಿರುವ ಇನ್ನೊಂದು ಮನೆಯನ್ನು ಕೆಡವಿ ಅಲ್ಲೊಂದು ಹೊಸಮನೆಯನ್ನು ಕಟ್ಟಿದಾಗಲೂ ಅದಕ್ಕೆ ಮೊದಲು ಬಳಕೆಯಲ್ಲಿದ್ದ ‘ಹಳೆಮನೆ’ ಎಂಬ ಹೆಸರು ಹಾಗೆಯೇ ಉಳಿದಿರುತ್ತದೆ; ಆ ಪದದ ಹುರುಳು ಮಾತ್ರ ಮಾರ‍್ಪಟ್ಟಿರುತ್ತದೆ.

ಹೆಸರುಪದಗಳಿಗೆ ಅವುಗಳ ಹುರುಳಿನೊಂದಿಗಿರುವ ಸಂಬಂದಕ್ಕಿಂತಲೂ ಅವು ಸೂಚಿಸುವ ವ್ಯಕ್ತಿ, ವಸ್ತು, ಸಂಗತಿ ಮೊದಲಾದವುಗಳೊಂದಿಗಿರುವ ಸಂಬಂದವೇ ಹೆಚ್ಚು ಮುಕ್ಯವಾದುದು ಎಂಬ ವಿಶಯ ಇದರಿಂದ ಸ್ಪಶ್ಟವಾಗುತ್ತದೆ. ಕೆಲವೆಡೆಗಳಲ್ಲಿ ಪದಗಳ ಒಳರಚನೆಯನ್ನು ಬಳಸಿ ಅವುಗಳ ಹುರುಳನ್ನು ಊಹಿಸಿಕೊಳ್ಳಬಲ್ಲೆವಾದರೂ ಈ ವಿಶಯದಲ್ಲಿ ಕೊನೆಯ ತೀರ‍್ಮಾನಕ್ಕೆ ಬರಲು ಇಂತಹ ಸಂಬಂದದ ನೆರವು ಬೇಕೇ ಬೇಕು.

ಸೊಲ್ಲುಗಳಲ್ಲಿ ಬರುವ ಎಸಕ(ಕ್ರಿಯಾ)ಪದ, ಪರಿಚೆ(ಗುಣ)ಪದ ಮೊದಲಾದವುಗಳ ಹುರುಳೇನೆಂಬುದನ್ನು ತೀರ‍್ಮಾನಿಸುವುದು ಇದಕ್ಕಿಂತಲೂ ಹೆಚ್ಚು ತೊಡಕಿನ ಕೆಲಸ. ಯಾಕೆಂದರೆ, ಅದಕ್ಕಾಗಿ ಅವು ಬರುವ ಪದಕಂತೆಗಳ ಇಲ್ಲವೇ ಸೊಲ್ಲುಗಳ ಹುರುಳೇನೆಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗುತ್ತದೆ, ಮತ್ತು ಆ ಹುರುಳಿನಲ್ಲಿ ಯಾವುದೇ ಒಂದು ಎಸಕಪದದ ಇಲ್ಲವೇ ಪರಿಚೆಪದದ ಕೊಡುಗೆ ಎಂತಹದು ಎಂಬುದನ್ನು ಕಂಡುಹಿಡಿಯಬೇಕಾಗುತ್ತದೆ. ಪದಗಳೊಂದಿಗೆ ಬರುವ ಒಟ್ಟು(ಪ್ರತ್ಯಯ)ಗಳ ಹುರುಳನ್ನೂ ಇದೇ ರೀತಿಯಲ್ಲಿ ಆ ಪದಗಳ ಬಳಕೆಯಲ್ಲಿ ಅವುಗಳ ಕೊಡುಗೆ ಎಂತಹದು ಎಂಬುದನ್ನು ಪರಿಶೀಲಿಸುವ ಮೂಲಕ ತಿಳಿಯಬೇಕಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಹೆಚ್ಚು ಬರಿಗೆಗಳಿರುವುದು ಸಿರಿತನವಲ್ಲ

ನುಡಿಯರಿಮೆಯ ಇಣುಕುನೋಟ – 13

ಕನ್ನಡ ಪದಗಳನ್ನು ಹೆಚ್ಚಿನವರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ನಮಗೆ ಬೇಕಾಗುವುದು ಒಟ್ಟು 31 ಬರಿಗೆಗಳು ಮಾತ್ರ. ಆದರೆ, ಇವತ್ತು ನಾವು ಕನ್ನಡ ಬರಹಗಳಲ್ಲಿ 48 (ಇಲ್ಲವೇ ಅದಕ್ಕಿಂತಲೂ ಹೆಚ್ಚು) ಬರಿಗೆಗಳನ್ನು ಬಳಸುತ್ತಿದ್ದೇವೆ. ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಟ್ಟಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ಸುಲಬವಾಗಬಲ್ಲುದು.

ಇದನ್ನು ವಿರೋದಿಸುವವರಲ್ಲಿ ಕೆಲವರ ವಾದ ಹೀಗಿರುತ್ತದೆ: ಕನ್ನಡ ಬರಹದಲ್ಲಿ ಈ ರೀತಿ ಹೆಚ್ಚು ಬರಿಗೆಗಳಿರುವುದು ಅದರ ಶ್ರೀಮಂತಿಕೆ; ಅವನ್ನು ಕಳೆದುಕೊಳ್ಳುವುದೆಂದರೆ, ಕನ್ನಡ ಬರಹವನ್ನು ಬಡತನಕ್ಕೆ ನೂಕಿದ ಹಾಗೆ, ಮತ್ತು ಅದರ ಸಂಸ್ಕ್ರುತಿಯನ್ನು ನಾಶಮಾಡಿದ ಹಾಗೆ.

ಆದರೆ, ಈ ವಾದ ನಿಜಕ್ಕೂ ಸರಿಯಲ್ಲ; ಪದಗಳನ್ನು ಓದುವ ಹಾಗೆಯೇ ಬರೆಯಲು ಎಶ್ಟು ಬರಿಗೆಗಳು ಬೇಕಾಗುತ್ತವೆಯೋ ಅಶ್ಟನ್ನು ಮಾತ್ರ ಉಳಿಸಿಕೊಂಡಿರುವ ಬರಹವೇ ತುಂಬಾ ಒಳ್ಳೆಯ ಬರಹವೆಂದೆನಿಸುತ್ತದೆ. ಬೇಕಾದುದಕ್ಕಿಂತ ಹೆಚ್ಚು ಬರಿಗೆಗಳನ್ನು ಬಳಸುವ ಬರಹವನ್ನು ಕಲಿಯುವುದೂ ಕಶ್ಟ, ಬಳಸುವುದೂ ಕಶ್ಟ.

ಹಳೆಗನ್ನಡದಲ್ಲಿ ಱ ಮತ್ತು ೞಗಳೆಂಬ ಎರಡು ಹೆಚ್ಚಿನ ಬರಿಗೆಗಳಿದ್ದುವು; ಆ ಕಾಲದಲ್ಲಿ ರ-ಱ ಮತ್ತು ಳ-ೞಗಳ ನಡುವೆ ಓದಿನಲ್ಲಿ ವ್ಯತ್ಯಾಸವಿದ್ದ ಕಾರಣ, ಅವನ್ನು ಬರಹದಲ್ಲಿ ಬಳಸುತ್ತಿದ್ದುದು ಹಳೆಗನ್ನಡದ ಮಟ್ಟಿಗೆ ಸಿರಿತನವಾಗಿತ್ತು; ಆದರೆ, ಇವತ್ತು ನಾವು ಅವೆರಡು ಬರಿಗೆಗಳನ್ನೂ ಬಿಟ್ಟುಕೊಟ್ಟಿದ್ದೇವೆ; ಯಾಕೆಂದರೆ, ನಮ್ಮ ಓದಿನಲ್ಲಿ ಅವುಗಳ ನಡುವಿನ ವ್ಯತ್ಯಾಸ ಇಲ್ಲವಾಗಿದೆ.

ಈ ಹೆಚ್ಚಿನ ಬರಿಗೆಗಳಿರುವುದು ಸಿರಿತನವೆಂದು, ಇಲ್ಲವೇ ಕನ್ನಡ ಬರಹದ ಸಂಸ್ಕ್ರುತಿಯೆಂದು ಅವನ್ನು ಇವತ್ತಿಗೂ ಉಳಿಸಿಕೊಂಡಿದ್ದಲ್ಲಿ, ನಮ್ಮ ಓದಿನಲ್ಲಿಲ್ಲದ ಈ ಎರಡು ಬಗೆಯ ವ್ಯತ್ಯಾಸಗಳನ್ನು ಬರಹದಲ್ಲಿ ಕಾಣಿಸುವ ಒಂದು ದೊಡ್ಡ ತೊಡಕು ನಮ್ಮದಾಗುತ್ತಿತ್ತು. ಕರೆ ‘ಬರಹೇಳು’, ಕರೆ ‘ಹಾಲು ಕರೆ’, ಊರು ‘ಹಳ್ಳಿ’, ಊರು ‘ನಿಲ್ಲಿಸು’, ತೆರೆ ‘ಕಡಲಿನ ತೆರೆ’, ತೆರೆ ‘ಬಾಗಿಲು ತೆರೆ’ ಎಂಬಂತಹ ಹಲವಾರು ಪದಗಳನ್ನು ಬರೆಯುವಾಗ, ಯಾವ ಪದದಲ್ಲಿ ರಕಾರವನ್ನು ಬಳಸಬೇಕು, ಮತ್ತು ಯಾವುದರಲ್ಲಿ ಱಕಾರವನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು. ಯಾಕೆಂದರೆ, ಮೇಲಿನ ಪದಜೋಡಿಗಳಲ್ಲಿ ರಕಾರವನ್ನು ಮೊದಲನೆಯದರಲ್ಲೂ ಱಕಾರವನ್ನು ಎರಡನೆಯದರಲ್ಲೂ ಬಳಸಬೇಕಾಗುತ್ತಿತ್ತು.

ಇದೇ ರೀತಿಯಲ್ಲಿ, ಉಳಿ ‘ಕೆತ್ತುವ ಉಳಿ’, ಉಳಿ ‘ ಮನೆಯಲ್ಲಿ ಉಳಿ’, ಎಳೆ ‘ಎಳತು’, ಎಳೆ ‘ಎಳೆದಾಡು’, ಬಳಸು ‘ನೇರವಲ್ಲದ’, ಬಳಸು ‘ಉಪಯೋಗಿಸು’ ಎಂಬಂತಹ ಬೇರೆ ಹಲವಾರು ಪದಜೋಡಿಗಳಲ್ಲಿ ಳಕಾರವನ್ನು ಯಾವ ಪದದಲ್ಲಿ ಬಳಸಬೇಕು ಮತ್ತು ೞಕಾರವನ್ನು ಯಾವ ಪದದಲ್ಲಿ ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿತ್ತು (ಎರಡನೆಯ ಪದದಲ್ಲಿ ೞಕಾರವಿತ್ತು).

ಹೊಸಗನ್ನಡವನ್ನು ಬಳಕೆಗೆ ತಂದವರು ಈ ಸಿರಿತನದ ಇಲ್ಲವೇ ಸಂಸ್ಕ್ರುತಿಯ ಹೊರೆಯನ್ನು ನಮ್ಮ ಮೇಲೆ ಹೊರಿಸ ಹೋಗದೆ ಒಂದು ದೊಡ್ಡ ಉಪಕಾರವನ್ನೇ ಮಾಡಿದ್ದಾರೆ. ಆದರೆ, ಸಂಸ್ಕ್ರುತದಿಂದ ಬಂದ ಎರವಲು ಪದಗಳ ಮಟ್ಟಿಗೆ ಮಾತ್ರ, ಅವರು ಇಂತಹದೇ ಇನ್ನೊಂದು ಬಗೆಯ ತೊಡಕನ್ನು ಇಲ್ಲವಾಗಿಸದೆ ಹಾಗೆಯೇ ಉಳಿಸಿದ್ದಾರೆ. ಸಂಸ್ಕ್ರುತದ ವಿಶಯವಾಗಿ ಅವರಿಗಿದ್ದ ಮೇಲರಿಮೆಯೇ ಇದಕ್ಕೆ ಕಾರಣ.

ಈ ಎರವಲು ಪದಗಳಲ್ಲಿ ಬರುವ ರು-ಋ, ಶ-ಷ, ಅಲ್ಪಪ್ರಾಣ-ಮಹಾಪ್ರಾಣ ಮೊದಲಾದವುಗಳ ನಡುವಿನ ವ್ಯತ್ಯಾಸ ಹೆಚ್ಚಿನ ಕನ್ನಡಿಗರ ಓದಿನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಹಾಗಾಗಿ, ಅವನ್ನು ಬರಹದಲ್ಲಿ ಕಾಣಿಸಬೇಕಿದ್ದರೆ, ಯಾವ ಪದದಲ್ಲಿ ಯಾವುದನ್ನು ಬಳಸಬೇಕು ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ. ಹಳೆಗನ್ನಡದ ರ-ಱ ಮತ್ತು ಳ-ೞ ವ್ಯತ್ಯಾಸಗಳ ಹಾಗೆಯೇ ಇವೂ ಕೂಡ ಕನ್ನಡ ಬರಹವನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ಹೆಚ್ಚಿನ ಕನ್ನಡಿಗರಿಗೂ ಅನವಶ್ಯಕವಾಗಿ ತೊಡಕನ್ನು ಉಂಟುಮಾಡುತ್ತವೆ.

ಸಂಸ್ಕ್ರುತ ಎರವಲುಗಳಾದ ಅವಶ್ಯ-ಮನುಷ್ಯ, ವಿಶಾಲ-ಕಷಾಯ, ಕೃಶ-ಕೃಷಿ, ಶಿಶು-ವಿಷು, ನಶಿಸು-ದೂಷಿಸು, ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಶ-ಷ ವ್ಯತ್ಯಾಸ ಕಾಣಿಸುತ್ತದೆ, ಆದರೆ ಅವುಗಳ ಓದಿನಲ್ಲಿ ಕಾಣಿಸುವುದಿಲ್ಲ; ಇದೇ ರೀತಿಯಲ್ಲಿ ಬೋಧಿಸು-ಭೇದಿಸು, ವರ್ಧಿಸು-ಮರ್ದಿಸು, ವಿಧಾನ-ವಿದಾಯ, ಸಂಪಾದಿಸು-ಸಂಬಂಧಿಸು ಮೊದಲಾದ ಪದಜೋಡಿಗಳ ಬರವಣಿಗೆಯಲ್ಲಿ ಕಾಣಿಸುವ ಅಲ್ಪಪ್ರಾಣ-ಮಹಾಪ್ರಾಣ ವ್ಯತ್ಯಾಸವೂ ಓದಿನಲ್ಲಿಲ್ಲ.

ಹಳೆಗನ್ನಡದ ವ್ಯತ್ಯಾಸಗಳ ಹಾಗೆ, ಓದಿನಲ್ಲಿಲ್ಲದ ಈ ಸಂಸ್ಕ್ರುತ ಎರವಲುಗಳ ನಡುವಿನ ವ್ಯತ್ಯಾಸವನ್ನೂ ಬಿಟ್ಟುಕೊಡುವ ಮೂಲಕ ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗುವ ಹಾಗೆ ಮಾಡಬೇಕಾಗಿದೆ, ಮತ್ತು ಅದು ಎಲ್ಲಾ ಕನ್ನಡಿಗರನ್ನೂ ತಲಪುವ ಹಾಗೆ ಮಾಡಬೇಕಾಗಿದೆ. ಓದಿನಲ್ಲಿ ಕಾಣಿಸಿಕೊಳ್ಳದ ಈ ಹೆಚ್ಚಿನ ಬರಿಗೆಗಳು ಕನ್ನಡ ಬರಹದ ಸಿರಿವಂತಿಕೆಯೂ ಅಲ್ಲ, ಸಂಸ್ಕ್ರುತಿಯೂ ಅಲ್ಲ. ಕನ್ನಡ ಬರಹವನ್ನು ಬಳಸುವಲ್ಲಿ ಅವು ಒಂದು ಅವಶ್ಯವಿಲ್ಲದ ಹೊರೆ ಮಾತ್ರ.

ಓದಿನಲ್ಲಿಲ್ಲದ ಬರಿಗೆ ಒಂದು ಬರಹಕ್ಕೆ ಬೇಕಾಗುವುದಿಲ್ಲವೆಂಬುದಕ್ಕೆ ಸಂಸ್ಕ್ರುತದಿಂದಲೇ ಒಂದು ಎತ್ತುಗೆಯನ್ನು ಕೊಡಬಹುದು: ಕನ್ನಡ ಬರಹದಲ್ಲಿ ಎ-ಏ ಮತ್ತು ಒ-ಓ ಎಂಬ ವ್ಯತ್ಯಾಸ ಇದೆ; ಆದರೆ, ಸಂಸ್ಕ್ರುತ ಬರಹದಲ್ಲಿ ಈ ವ್ಯತ್ಯಾಸವಿಲ್ಲ. ಆದರೆ ಈ ಕಾರಣಕ್ಕಾಗಿ, ಕನ್ನಡ ಬರಹ ಸಂಸ್ಕ್ರುತ ಬರಹಕ್ಕಿಂತ ಹೆಚ್ಚು ಶ್ರೀಮಂತವಾದುದೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಸಂಸ್ಕ್ರುತ ಪದಗಳ ಓದಿನಲ್ಲಿ ಕಾಣಿಸದಿರುವ ಈ ವ್ಯತ್ಯಾಸ ಸಂಸ್ಕ್ರುತ ಬರಹದಲ್ಲಿ ಇಲ್ಲದಿರುವುದು ಸಂಸ್ಕ್ರುತ ಬರಹದ ಸಿರಿತನವಲ್ಲದೆ ಬಡತನವಲ್ಲ.

ಪದಗಳಲ್ಲಿ ಎಶ್ಟು ಉಲಿಗಳು ಬಳಕೆಯಾಗುತ್ತವೆ, ಮತ್ತು ಯಾವ ಉಲಿಗಳು ಬಳಕೆಯಾಗುತ್ತವೆ ಎಂಬ ವಿಶಯದಲ್ಲಿ ನುಡಿಗಳು ಒಂದರಿಂದೊಂದು ತೀರಾ ಬೇರಾಗಿರಬಲ್ಲುವು. ಆಪ್ರಿಕಾದ ಬೊತ್ಸ್‌ವಾನಾದಲ್ಲಿ ಬಳಕೆಯಲ್ಲಿರುವ ಕೆಲವು ನುಡಿಗಳಲ್ಲಿ ನೂರಕ್ಕಿಂತಲೂ ಹೆಚ್ಚು ಉಲಿಗಳು ಬಳಕೆಯಲ್ಲಿದ್ದು, ಅವನ್ನು ಓದುವಂತೆ ಬರೆಯಲು ನೂರಕ್ಕಿಂತಲೂ ಹೆಚ್ಚು ಬರಿಗೆಗಳು ಬೇಕಾಗುತ್ತವೆ. ಇದಕ್ಕೆ ಬದಲು, ಪಾಪುವಾ ನ್ಯೂಗಿನಿಯ ರೋತೋಕಸ್ ಎಂಬ ನುಡಿಯಲ್ಲಿ ಹತ್ತು-ಹನ್ನೆರಡು ಉಲಿಗಳು ಮಾತ್ರ ಬಳಕೆಯಲ್ಲಿದ್ದು, ಅವನ್ನು ಓದುವ ಹಾಗೆ ಬರೆಯಲು ಹತ್ತು-ಹನ್ನೆರಡು ಬರಿಗೆಗಳು ಮಾತ್ರ ಸಾಕಾಗುತ್ತವೆ.

ಜಗತ್ತಿನಲ್ಲಿರುವ ಎಲ್ಲಾ ನುಡಿಗಳಲ್ಲೂ ಬಳಕೆಯಲ್ಲಿರುವ ಉಲಿಗಳನ್ನು ಬರೆಯಬೇಕಿದ್ದಲ್ಲಿ ನೂರಾರು ಬರಿಗೆಗಳು ಮತ್ತು ಇನ್ನೂ ಹಲವಾರು ಬಗೆಯ ಗುರುತುಗಳು ಬೇಕಾಗುತ್ತವೆ. ಹಾಗಾಗಿ, ಯಾವುದೇ ಒಂದು ನುಡಿಯಲ್ಲೂ ಬೇಕಾದುದಕ್ಕಿಂತ ಹತ್ತೋ ಇಪ್ಪತ್ತೋ ಹೆಚ್ಚು ಬರಿಗೆಗಳಿದ್ದಲ್ಲಿ, ಅವುಗಳ ನೆರವಿನಿಂದ ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವಂತೆಯೇ ಬರೆಯಲು ಬರುತ್ತದೆಯೆಂಬುದು ಪೊಳ್ಳು ವಾದ.

ನಿಜಕ್ಕೂ ಕನ್ನಡ ಬರಹದಲ್ಲಿರುವ ಈ ಹೆಚ್ಚಿನ ಬರಿಗೆಗಳು ಸಂಸ್ಕ್ರುತ ಎರವಲುಗಳನ್ನು ಮಾತ್ರ ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯಲು ನೆರವಾಗುತ್ತವೆ; ಬೇರೆ ನುಡಿಗಳ ಪದಗಳನ್ನು ಅವುಗಳಲ್ಲಿರುವ ಹಾಗೆ ಬರೆಯಬೇಕಿದ್ದಲ್ಲಿ, ಅದಕ್ಕಾಗಿ ಬೇರೆಯೇ ಹೆಚ್ಚಿನ ಬರಿಗೆಗಳನ್ನು ಉಂಟುಮಾಡಿಕೊಳ್ಳಬೇಕಾಗುತ್ತದೆ. ತುಳು ನುಡಿಯ ಪದಗಳನ್ನು ಅದರಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗಿರುವ ಬರಿಗೆಗಳು ಸಾಕಾಗುವುದಿಲ್ಲ; ಇನ್ನೊಂದು ಹೆಚ್ಚಿನ ಉಕಾರ ಮತ್ತು ಇನ್ನೆರಡು ಹೆಚ್ಚಿನ ಎಕಾರಗಳು ಬೇಕಾಗುತ್ತವೆ.

ನಿಜಕ್ಕೂ ಕನ್ನಡದವೇ ಆದ ಆಡುನುಡಿಗಳನ್ನೂ ಅವುಗಳಲ್ಲಿರುವ ಹಾಗೆ ಬರೆಯಲು ಕನ್ನಡ ಬರಹದಲ್ಲಿ ಈಗ ಬಳಕೆಯಾಗುತ್ತಿರುವ ಬರಿಗೆಗಳು ಸಾಕಾಗುವುದಿಲ್ಲ; ಗುಲ್ಬರ‍್ಗ ಕನ್ನಡದಲ್ಲಿ ಬರುವ ಎರಡು ಬಗೆಯ ಅಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ, ಸುಳ್ಯದ ಗವ್ಡ ಕನ್ನಡದಲ್ಲಿ ಬರುವ ಎರಡು ಬಗೆಯ ಉಕಾರಗಳ ನಡುವಿನ ವ್ಯತ್ಯಾಸವನ್ನಾಗಲಿ ಬರೆದು ತೋರಿಸಲು ಕನ್ನಡ ಬರಹದಲ್ಲಿ ಬರಿಗೆಗಳಿಲ್ಲ.

ಹಾಗಾಗಿ, ಕನ್ನಡ ಬರಹದಲ್ಲಿ ಬರುವ ಪದಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಲು ಬೇಕಾಗುವ 31 ಬರಿಗೆಗಳನ್ನು ಮಾತ್ರ ಉಳಿಸಿಕೊಳ್ಳುವುದೇ ಜಾಣತನ; ಉಳಿದುವನ್ನೆಲ್ಲ ಹೆಚ್ಚಿನ ಕನ್ನಡಿಗರೂ ಓದಬೇಕಾಗಿರುವ ಬರಹಗಳಿಂದ ತೆಗೆದುಹಾಕಬೇಕಾಗಿದೆ, ಮತ್ತು ಹಾಗೆ ಮಾಡುವ ಮೂಲಕ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಬಳಸುವಂತೆ ಮಾಡಬೇಕಾಗಿದೆ. ಸಂಸ್ಕ್ರುತಿ, ಶ್ರೀಮಂತಿಕೆ ಎಂಬಂತಹ ದೊಡ್ಡ ದೊಡ್ಡ ಪದಗಳನ್ನು ಬಳಸಿ ಓದುಗರು ಗೊಂದಲದಲ್ಲಿ ಬೀಳುವ ಹಾಗೆ ಮಾಡುವುದರಿಂದ ಕನ್ನಡಿಗರಿಗೇನೇ ಅನ್ಯಾಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಓದುವ ಹಾಗೆಯೇ ಬರೆಯುವುದು

ನುಡಿಯರಿಮೆಯ ಇಣುಕುನೋಟ – 10

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡ ಬರಹಗಳಲ್ಲಿ ಓದುವ ಹಾಗೆಯೇ ಬರೆಯಬೇಕು ಎಂದು ಹೇಳಿದರೆ, ಎಲ್ಲರೂ ಅವರವರು ಹೇಗೆ ಓದುತ್ತಾರೋ ಹಾಗೆ ಬರೆಯಬಹುದು, ಇಲ್ಲವೇ ಎಲ್ಲರೂ ತಮಗೆ ಕುಶಿಬಂದ ಹಾಗೆ ಬರೆಯಬಹುದು ಎಂದು ಹೇಳಿದ ಹಾಗಾಗುವುದಿಲ್ಲ; ಅಂತಹ ಪ್ರತಿಕ್ರಿಯೆ ಬಾರದಂತೆ ನಾನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಬೇಕು ಎಂಬುದಾಗಿ ಬರೆದಿದ್ದೆ. ಈ ಪದಗಳನ್ನು ಇವತ್ತು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಿದ್ದಾರೆ ಎಂಬುದನ್ನು ತಿಳಿವಿಗರು ಕಂಡುಹಿಡಿಯಬೇಕು, ಮತ್ತು ಅದಕ್ಕೆ ಅನುಸಾರವಾಗಿ, ಅವನ್ನು ಹೇಗೆ ಬರೆಯಬೇಕು ಎಂಬುದನ್ನು ತೀರ‍್ಮಾನಿಸಬೇಕು.

ಬರಹದ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಇನ್ನೊಬ್ಬರಿಗೆ ತಿಳಿಸುತ್ತೇವೆ, ಮತ್ತು ಬರಹ ರೂಪದಲ್ಲಿರುವ ಇನ್ನೊಬ್ಬರ ಅನಿಸಿಕೆಗಳನ್ನು ಓದಿನ ಮೂಲಕ ತಿಳಿದುಕೊಳ್ಳುತ್ತೇವೆ. ಈ ಎರಡು ಕೆಲಸಗಳೂ ಸರಿಯಾಗಿ ನಡೆಯಬೇಕಿದ್ದಲ್ಲಿ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವ ಮತ್ತು ಓದುವ ಕೆಲಸಗಳನ್ನು ನಡೆಸಬೇಕಾಗುತ್ತದೆ. ಈ ಕೆಲಸಗಳನ್ನು ಇವತ್ತು ಶಾಲೆಗಳಲ್ಲಿ ಕಲಿಸಲಾಗುತ್ತದೆಯಾದ ಕಾರಣ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವಂತೆ ಮತ್ತು ಓದುವಂತೆ ಮಾಡುವುದು ತೊಡಕಿನ ಕೆಲಸವೇನಲ್ಲ.

ಶಕಾರವನ್ನು ಹೆಚ್ಚಿನ ಕನ್ನಡಿಗರೂ ಶಕಾರವಾಗಿಯೇ ಓದುತ್ತಾರಲ್ಲದೆ ಸಕಾರವಾಗಿ ಬದಲಾಯಿಸಿ ಓದುವುದಿಲ್ಲ. ಆದರೆ, ಷಕಾರವನ್ನು ಹೆಚ್ಚಿನವರೂ ಶಕಾರವಾಗಿ ಬದಲಾಯಿಸಿ ಓದುತ್ತಾರೆ. ಹಾಗಾಗಿ, ಸಂಸ್ಕ್ರುತ ಎರವಲುಗಳಲ್ಲಿ ಬರುವ ಷಕಾರವನ್ನು ಶಕಾರವಾಗಿ ಬದಲಾಯಿಸಿ ಬರೆಯಬೇಕು, ಮತ್ತು ಶಕಾರವನ್ನು ಹಾಗೆಯೇ ಉಳಿಸಬೇಕು ಎಂಬ ತೀರ‍್ಮಾನಕ್ಕೆ ಬರಬೇಕಾಗುತ್ತದೆ.

ಇದೇ ರೀತಿಯಲ್ಲಿ, ಋಕಾರ, ಮಹಾಪ್ರಾಣ, ವಿಸರ‍್ಗ ಮೊದಲಾದ ಬೇರೆ ಕೆಲವು ಬರಿಗೆಗಳ ವಿಶಯದಲ್ಲೂ ಹೆಚ್ಚಿನ ಕನ್ನಡಿಗರ ಓದು ಹೇಗಿದೆಯೆಂಬುದನ್ನು ಕಂಡುಹಿಡಿದು, ಅದಕ್ಕನುಸಾರವಾಗಿ ಬರವಣಿಗೆಯನ್ನು ಬದಲಾಯಿಸಬೇಕು. ಹೀಗೆ ಮಾಡಿದಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗಬಲ್ಲುದು, ಮತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗುವಂತೆ ಮಾಡುವ ಕೆಲಸವೂ ಸುಲಬವಾಗಬಲ್ಲುದು.

ಹಳೆಗನ್ನಡದ ಱಕಾರ ಮತ್ತು ೞಕಾರಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೆ ಎಂಬುದನ್ನು ಗಮನಿಸಿ, ಹೊಸಗನ್ನಡವನ್ನು ಬರಹದಲ್ಲಿ ಬಳಸಲು ತೊಡಗಿದ ಕಾಲದಲ್ಲಿ ಅವನ್ನು ರಕಾರ ಮತ್ತು ಳಕಾರಗಳಾಗಿ ಬದಲಾಯಿಸಿ ಬರೆಯಲು ತೊಡಗಲಾಯಿತು. ಈ ಮಾರ‍್ಪಾಡನ್ನು ಮಾಡಿರದಿದ್ದರೆ, ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಇನ್ನಶ್ಟು ತೊಡಕಿನದಾಗುತ್ತಿತ್ತು. ಸಂಸ್ಕ್ರುತ ಎರವಲುಗಳಲ್ಲಿ ಬರುವ ಬರಿಗೆಗಳನ್ನು ಓದುವ ಹಾಗೆ ಬರೆಯುವಂತೆ ಮಾರ‍್ಪಡಿಸುವುದೂ ಇಂತಹದೇ ಒಂದು ಕೆಲಸ ಎಂಬುದನ್ನು ಇಲ್ಲಿ ಗಮನಿಸಬೇಕು.

ಇಶ್ಟರ ವರೆಗೆ ಈ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯುತ್ತಿದ್ದುದಕ್ಕೆ ಎರಡು ಮುಕ್ಯ ಕಾರಣಗಳಿದ್ದುವು: ಹಿಂದಿನ ಕಾಲದಲ್ಲಿ ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದವರೆಲ್ಲ ಅದನ್ನು ಸಂಸ್ಕ್ರುತದಲ್ಲಿ ಬರೆದಿರಿಸುತ್ತಿದ್ದರು; ಹಾಗಾಗಿ, ಯಾವುದೇ ಒಂದು ವಿಶಯದಲ್ಲಿ ಹೊಸ ತಿಳಿವನ್ನು ಪಡೆಯಬೇಕಿದ್ದರೂ ಸಂಸ್ಕ್ರುತದ ಮೊರೆಹೊಗಬೇಕಾಗಿತ್ತು.

ಇದರಿಂದಾಗಿ ಸಂಸ್ಕ್ರುತ ಬರಹಕ್ಕೆ ಒಂದು ಬಗೆಯ ಮೇಲ್ಮೆ ಬಂದಿತ್ತು; ಅದರ ಪದಗಳನ್ನು ಕನ್ನಡದಲ್ಲಿಯೂ ಸಂಸ್ಕ್ರುತದಲ್ಲಿರುವ ಹಾಗೆಯೇ ಉಳಿಸಿಕೊಳ್ಳುವುದರಿಂದ, ಮುಂದೆ ಸಂಸ್ಕ್ರುತ ಬರಹಗಳನ್ನು ಓದಲು ಕಲಿಯುವ ಕೆಲಸ ಕನ್ನಡಿಗರಿಗೆ ಸುಲಬವಾಗಬಹುದಾಗಿತ್ತು. ಕನ್ನಡ ಓದಿನ ಕಲಿಕೆ ಮುಂದೆ ನಡೆಸಲೇಬೇಕಾಗಿದ್ದ ಸಂಸ್ಕ್ರುತ ಓದಿಗೆ ಒಂದು ಮೆಟ್ಟಲಾಗಬಹುದಾಗಿತ್ತು. ಇದು ಒಂದು ಕಾರಣ.

ಆದರೆ, ಇವತ್ತು ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದಿರುವವರು ಯಾರೂ ಅದನ್ನು ಸಂಸ್ಕ್ರುತದಲ್ಲಿ ಬರೆಯಲು ಹೋಗುವುದಿಲ್ಲ; ಹಾಗಾಗಿ, ಹಿಂದಿನ ಕಾಲದಲ್ಲಿ ಅದಕ್ಕಿದ್ದ ಮೇಲ್ಮೆ ಇಂದು ಉಳಿದಿಲ್ಲ, ಮತ್ತು ಅದರ ಪದಗಳನ್ನು ಅದರ ಬರಹಗಳಲ್ಲಿರುವ ಹಾಗೆ ಬರೆಯಲು ಕಲಿಯುವ ಅವಶ್ಯಕತೆಯೂ ಇವತ್ತು ಕನ್ನಡಿಗರಿಗಿಲ್ಲ.

ಹಿಂದಿನ ಕಾಲದಲ್ಲಿ ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸವನ್ನು ಮುಕ್ಯವಾಗಿ ಉತ್ತರದಿಂದ ವಲಸೆಬಂದ ಮೇಲ್ವರ‍್ಗದ ಜನರು ನಡೆಸುತ್ತಿದ್ದರು; ಆರ‍್ಯರಾಗಿದ್ದ ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಆದರ ಮತ್ತು ಪೂಜ್ಯಬಾವಗಳಿದ್ದುವು. ಹಾಗಾಗಿ, ಅದರ ಪದಗಳನ್ನು ಮಾರ‍್ಪಡಿಸದೆ ಉಳಿಸುವುದು ಅವರ ಮಟ್ಟಿಗೆ ಅವಶ್ಯವಾಗಿತ್ತು. ಇದು ಇನ್ನೊಂದು ಕಾರಣ.

ಆದರೆ, ಇವತ್ತು ಎಲ್ಲಾ ವರ‍್ಗಗಳಿಗೆ ಸೇರಿದ ಕನ್ನಡಿಗರೂ ಕನ್ನಡ ಬರಹವನ್ನು ಬಳಸಲು ಕಲಿಯಬೇಕಾಗಿದೆ. ಇವರಲ್ಲಿ ಹೆಚ್ಚಿನವರೂ ದ್ರಾವಿಡ ಮೂಲದವರಾಗಿದ್ದು, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಮಾರ‍್ಪಡಿಸದೆ ಉಳಿಸಿಕೊಳ್ಳುವುದು ಅಂತಹ ಒಂದು ಪೂಜ್ಯವಾದ ವಿಶಯವೇ ಅಲ್ಲ; ಅದರಿಂದ ಅವರಿಗೆ ಬೇರೆ ಪ್ರಯೋಜನಗಳೂ ದೊರಕುವುದಿಲ್ಲ. ಹಾಗಾಗಿ, ಸಂಸ್ಕ್ರುತ ಎರವಲುಗಳನ್ನು ಕನ್ನಡದ ಸೊಗಡನ್ನು ಕೆಡಿಸದಂತೆ ಮಾರ‍್ಪಡಿಸುವುದಕ್ಕೆ ಹೆಚ್ಚಿನ ಕನ್ನಡಿಗರಿಂದಲೂ ವಿರೋದ ಬರಲಾರದು.

ಬೇರೆ ನುಡಿಗಳಿಂದ ಎರವಲಾಗಿ ಪಡೆದ ಪದಗಳನ್ನು ಯಾವ ನುಡಿಯಲ್ಲೂ ಆ ನುಡಿಯಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ; ಇದಕ್ಕೆ ಕೆಲವೇ ಕೆಲವು ಹೊರಪಡಿಕೆಗಳು ಮಾತ್ರ ಇವೆ. ಎತ್ತುಗೆಗಾಗಿ, ಸಂಸ್ಕ್ರುತ ಇಲ್ಲವೇ ಪ್ರಾಕ್ರುತ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಬ್ರಾಹ್ಮೀ ಲಿಪಿಯನ್ನು ಕನ್ನಡದಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಸಂಸ್ಕ್ರುತದ ಎರವಲುಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಸಂಸ್ಕ್ರುತ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಇದೇ ರೀತಿಯಲ್ಲಿ, ಅರೇಬಿಕ್ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಲಿಪಿಯನ್ನು ಟರ‍್ಕಿಶ್‌ನಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಅರೇಬಿಕ್ ಎರವಲುಗಳನ್ನು ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಅರೇಬಿಕ್ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಆದರೆ, ಎಲ್ಲಾ ನುಡಿಗಳೂ ಈ ರೀತಿ ಬೇರೊಂದು ನುಡಿಯ ಲಿಪಿಯನ್ನು ತಮ್ಮ ನುಡಿಗೆ ಅಳವಡಿಸಿಕೊಳ್ಳುವಾಗ ಆ ನುಡಿಯ ಪದಗಳನ್ನು ಅದರಲ್ಲಿರುವಂತೆ ಬರೆಯಲು ಬೇಕಾಗುವ ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಿಲ್ಲ; ಎತ್ತುಗೆಗಾಗಿ, ನಾಗರಿ ಲಿಪಿಯನ್ನು ಪಂಜಾಬಿ ನುಡಿಗೆ ಅಳವಡಿಸುವಾಗ, ಷಕಾರ, ಋಕಾರ, ಹಲವು ಬಗೆಯ ಒತ್ತುಬರಿಗೆಗಳು ಮೊದಲಾದುವನ್ನು ಉಳಿಸಿಕೊಂಡಿಲ್ಲ; ಈ ಕಾರಣಕ್ಕಾಗಿ, ಸಂಸ್ಕ್ರುತ ಎರವಲು ಪದಗಳನ್ನು ಇವತ್ತು ಪಂಜಾಬಿ ಬರಹದಲ್ಲಿ ಓದುವ ಹಾಗೆ ಬರೆಯಲಾಗುತ್ತದೆಯಲ್ಲದೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯುವುದಿಲ್ಲ.

ಮಲಯಾಳ ಬರಹದಲ್ಲೂ ಮೊದಲಿಗೆ ಮಹಾಪ್ರಾಣಾಕ್ಶರಗಳು, ಗಜಡದಬ ಮೊದಲಾದ ಆ ನುಡಿಗೆ ಬೇಡದಿರುವ ಹಲವು ಬರಿಗೆಗಳು ಇರಲಿಲ್ಲ; ಸಂಸ್ಕ್ರುತ ಬರಹಗಳನ್ನು ಬರೆಯಲು, ಮತ್ತು ಕೆಲವೊಮ್ಮೆ ಸಂಸ್ಕ್ರುತ ಪದಗಳನ್ನು ಮಲಯಾಳ ಬರಹಗಳಲ್ಲಿ ಬರೆಯಲು ಆ ಸಮಯದಲ್ಲಿ ಗ್ರಂತಲಿಪಿಯೆಂಬ ಬೇರೆಯೇ ಒಂದು ಲಿಪಿಯನ್ನು ಬಳಸಲಾಗುತ್ತಿತ್ತು.

ಆದರೆ, ಹದಿನೇಳನೇ ಶತಮಾನಕ್ಕಾಗುವಾಗ, ಮಲಯಾಳ ಸಾಹಿತ್ಯದಲ್ಲಿ ಬ್ರಾಹ್ಮಣರ ಪ್ರಾಬಲ್ಯ ಹೆಚ್ಚಾಯಿತು; ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಒಲವಿದ್ದುದರಿಂದ, ಮತ್ತು ಇವರ ಬರಹಗಳಲ್ಲಿ ತುಂಬಾ ಸಂಸ್ಕ್ರುತ ಪದಗಳು ಬಳಕೆಯಾಗುತ್ತಿದ್ದುದರಿಂದ, ಇವರು ತಮ್ಮ ಮಲಯಾಳ ಬರಹಗಳಲ್ಲೂ ಗ್ರಂತ ಲಿಪಿಯನ್ನೇ ಬಳಸಲು ತೊಡಗಿದರು. ಇದರಿಂದಾಗಿ, ಇವತ್ತಿನ ಮಲಯಾಳ ಬರಹ ಕನ್ನಡ ಬರಹದ ಹಾಗೆಯೇ ಅನವಶ್ಯಕವಾಗಿ ತೊಡಕಿನದಾಗಿದೆ.

ಎಲ್ಲಾ ಜನರೂ ಬರಹಬಲ್ಲವರಾಗಬೇಕಿರುವ ಇವತ್ತಿನ ದಿನಗಳಲ್ಲಿ ಈ ರೀತಿ ಒಂದು ನುಡಿಯ ಬರವಣಿಗೆಗೆ ಅವಶ್ಯವಿಲ್ಲದ ಬರಿಗೆಗಳನ್ನು ಎರವಲು ಪದಗಳ ಬರವಣಿಗೆಗಾಗಿ ಉಳಿಸಿಕೊಳ್ಳುವುದು ಜಾಣತನವಲ್ಲ; ಇದನ್ನು ಮನಗಂಡ ತಿಳಿವಿಗರು ಟರ‍್ಕಿ, ಇಂಡೊನೇಶಿಯಾ, ಮಲಯೇಶಿಯಾ ಮೊದಲಾದ ನಾಡುಗಳಲ್ಲಿ ಅರೇಬಿಕ್ ಮೂಲದ ಲಿಪಿಯನ್ನೇ ಬಿಟ್ಟುಕೊಟ್ಟು ರೋಮನ್ ಮೂಲದ ಲಿಪಿಯನ್ನು ತಮ್ಮ ಬರಹಕ್ಕೆ ಅಳವಡಿಸಿಕೊಂಡಿದ್ದಾರೆ.

ಕೊರಿಯಾದಂತಹ ಬೇರೆ ಕೆಲವು ನಾಡುಗಳಲ್ಲಿ ಎರವಲು ಪದಗಳನ್ನು ಓದುವ ಹಾಗೆಯೇ ಬರೆಯಲು ತೊಡಗುವ ಮೂಲಕ ಈ ತೊಡಕನ್ನು ನಿವಾರಿಸಿಕೊಳ್ಳಲಾಗಿದೆ. ಕನ್ನಡದಲ್ಲಿಯೂ ಇಂತಹದೇ ಮಾರ‍್ಪಾಡನ್ನು ನಾವು ಇವತ್ತು ನಡೆಸಬೇಕಾಗಿದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹ ಕನ್ನಡ ಮತ್ತು ಆಡುಗನ್ನಡ

ನುಡಿಯರಿಮೆಯ ಇಣುಕುನೋಟ – 1

ಆಡುನುಡಿಯೆಂಬುದು ಜಾಗದಿಂದ ಜಾಗಕ್ಕೆ ಬದಲಾಗುವುದು ಸಹಜ. ನಮ್ಮ ನಲ್ಮೆಯ ಕನ್ನಡ ನುಡಿಗೂ ಈ ಮಾತು ಒಪ್ಪುತ್ತದೆ. ಬೇರೆ ಬೇರೆ ಊರುಗಳಲ್ಲಿರುವ ಕನ್ನಡಿಗರು ಬೇರೆ ಬೇರೆ ಆಡುಗನ್ನಡಗಳನ್ನು ಬಳಸುವುದು ನಮ್ಮೆಲ್ಲರ ಗಮನಕ್ಕೆ ಬಂದಿರುತ್ತದೆ. ಹಾಗೆಯೇ ಜಾತಿಯಿಂದ ಜಾತಿಗೂ ಆಡುಗನ್ನಡ ಬದಲಾಗುವುದನ್ನೂ ನಾವೆಲ್ಲರೂ ಕಂಡಿರುತ್ತೇವೆ. ಎತ್ತುಗೆಗಾಗಿ, ಮಯ್ಸೂರಿನ ಆಡುಗನ್ನಡಕ್ಕೂ ಹುಬ್ಬಳ್ಳಿಯ ಆಡುಗನ್ನಡಕ್ಕೂ ನಡುವೆ, ಮತ್ತು ಮಯ್ಸೂರಿನಲ್ಲೇನೇ ಬ್ರಾಹ್ಮಣರ ಆಡುಗನ್ನಡಕ್ಕೂ ಒಕ್ಕಲಿಗರ ಆಡುಗನ್ನಡಕ್ಕೂ ನಡುವೆ ವ್ಯತ್ಯಾಸವಿದೆ.

ಆದರೆ, ಬರಹ ಕನ್ನಡ ಹೀಗೆ ಬೇರೆ ಬೇರೆಯಾಗಿ ಇರುವಂತಿಲ್ಲ. ಅದು ಎಲ್ಲರಿಗೂ ಸಮನಾಗಿದ್ದು, ‘ಎಲ್ಲರ ಕನ್ನಡ’ವಾಗಿರಬೇಕಾಗುತ್ತದೆ; ಯಾಕೆಂದರೆ, ಜಾಗ ಮತ್ತು ಜಾತಿಗಳ ಎಲ್ಲೆಗಳನ್ನು ಮೀರಿ ಜನರನ್ನು ಬೆಸೆಯುವ ಒಂದು ವಿಶೇಶವಾದ ಕೆಲಸ ಅದರದು. ಹಲವು ಬಗೆಯ ಆಡುಗನ್ನಡಗಳನ್ನು ಬಳಸುವ ಎಲ್ಲಾ ಕನ್ನಡಿಗರಿಗೂ ಸಮಾನವಾಗಿರಬೇಕಾದಂತಹ ಬರಹ ಕನ್ನಡ ಅವರೆಲ್ಲರ ಆಡುಗನ್ನಡಕ್ಕಿಂತಲೂ ಬೇರಾಗಿಯೇ ಇರಬೇಕಾಗುತ್ತದೆ ಎಂದು ಸುಲಬವಾಗಿ ಕಾಣಬಹುದು.

ಬರಹ ಕನ್ನಡ ಬೇರೆ ಬೇರೆ ಆಡುಗನ್ನಡಗಳಿಗಿಂತ ಬೇರಾಗಿರಬೇಕಾದುದು ಅನಿವಾರ‍್ಯ ಎಂದ ಮಾತ್ರಕ್ಕೆ ಅದು ಅವುಗಳಿಗಿಂತ ತುಂಬಾ ದೂರದಲ್ಲಿರುವುದೂ ಅನಿವಾರ‍್ಯ ಎಂದೇನಿಲ್ಲ; ಆದಶ್ಟು ಹತ್ತಿರವೂ ಇರಬಹುದು. ಅದು ನಮ್ಮೆಲ್ಲರಿಗಿಂತ ದೂರದಲ್ಲಿರಬೇಕೋ ಹತ್ತಿರದಲ್ಲಿರಬೇಕೋ ಎಂಬ ಪ್ರಶ್ನೆಯನ್ನು ಹಾಕಿಕೊಂಡರೆ, ಯಾರೂ ‘ದೂರದಲ್ಲಿರಬೇಕು’ ಎಂಬ ಉತ್ತರವನ್ನು ಕೊಡಲಾರರು. ಬರಹ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೂ ಆದಶ್ಟು ಹತ್ತಿರವಿರುವಂತೆ ಮಾಡಿದಲ್ಲಿ, ಕನ್ನಡವನ್ನು ಓದಲು ಮತ್ತು ಬರೆಯಲು ಕಲಿಯುವ ಕೆಲಸ ಎಲ್ಲಾ ಕನ್ನಡಿಗರಿಗೂ ಸುಲಬವಾಗುತ್ತದೆ ಎಂದು ಯಾರಾದರೂ ಕಾಣಬಹುದು. ಆದುದರಿಂದ ಹಾಗೆ ಮಾಡಬೇಕಾಗಿರುವುದು ಕನ್ನಡದ ಮತ್ತು ಅದರ ಮೂಲಕ ಕನ್ನಡಿಗರ ಏಳಿಗೆಗೆ ಬಹಳ ಮುಕ್ಯವಾದ ಕೆಲಸ.

ಎಲ್ಲರಿಗೂ ಆದಶ್ಟು ಹತ್ತಿರವಿರುವ ಬರಹ ಕನ್ನಡದಲ್ಲಿ ಸಂಸ್ಕ್ರುತ, ಇಂಗ್ಲಿಶ್, ಹಿಂದಿ ಮೊದಲಾದ ಬೇರೆ ನುಡಿಗಳಿಂದ ಪಡೆಯುವ ಎರವಲು ಪದಗಳನ್ನು ಒಂದು ಮಿತಿಯಲ್ಲಿರಿಸಿಕೊಳ್ಳುವುದು ಅನಿವಾರ‍್ಯವೆಂದು ಹೇಳಬೇಕಾಗಿಯೇ ಇಲ್ಲ. ಜಾಗ ಮತ್ತು ಜಾತಿಯ ತಾರತಮ್ಯವಿಲ್ಲದೆ ಎಲ್ಲರೂ ಬರಹವನ್ನು ಬಳಸತೊಡಗಿದಾಗ, ಅಂತಹ ಎರವಲು ಪದಗಳು ಒಂದು ಮಿತಿಯಲ್ಲಿ ಇದ್ದೇ ಇರುತ್ತವೆ; ಬಹುಶಹ ನೂರಕ್ಕೆ ಅಯ್ದು ಇಲ್ಲವೇ ಹತ್ತಕ್ಕಿಂತ ಹೆಚ್ಚು ಇರಲಾರವು. ತನ್ನ ಸೊಗಡನ್ನು ಉಳಿಸಿಕೊಂಡಿರುವ ಅಂತಹ ಬರಹಗಳನ್ನು ಓದುವ ಮತ್ತು ಬರೆಯುವ ಕೆಲಸ ಕೆಲವರಿಗಶ್ಟೇ ಅಲ್ಲ, ಎಲ್ಲರಿಗೂ ಸುಲಬದ್ದಾಗುತ್ತದೆ.

ಹಲವು ಕಡೆ ಕನ್ನಡದ್ದೇ ಆದ ಪದಗಳನ್ನು ಬರಹ ಕನ್ನಡದಲ್ಲಿ ಬಳಸುವುದು ಒಳ್ಳೆಯ ಬರವಣಿಗೆಯ ಗುರುತಲ್ಲ ಎಂಬ ಒಂದು ವಿಚಿತ್ರವಾದ ಅನಿಸಿಕೆ ಕೆಲವರಲ್ಲಿದೆ; ಕನ್ನಡದ್ದೇ ಆದ ಪದಗಳ ಬದಲು ಸಂಸ್ಕ್ರುತದ ಎರವಲುಗಳನ್ನು ಬಳಸುವುದರಿಂದ ಬರಹ ಮೇಲ್ಮಟ್ಟದ್ದಾಗುತ್ತದೆಯೆಂಬ ಬ್ರಮೆ ಅದೇಕೋ ಅವರಲ್ಲಿದೆ. ‘ನಾಯಿ’ ಎಂದು ಬರೆಯುವ ಬದಲು ‘ಶ್ವಾನ’ ಎಂದು ಬರೆಯುವುದು, ‘ಕೂದಲು’ ಎಂಬುದರ ಬದಲು ‘ಕೇಶ’ ಎನ್ನುವುದು, ‘ಹಲ್ಲು’ ಎನ್ನುವ ಬದಲು ‘ದಂತ’ ಎನ್ನುವುದು, ‘ಕೂಡಿಸುವುದು’ ಎನ್ನುವ ಬದಲು ‘ಸಂಕಲನ’ ಎನ್ನುವುದು, ಇವೆಲ್ಲ ಮೇಲ್ಮಟ್ಟದ ಕನ್ನಡ ಬರವಣಿಗೆಯ ಗುರುತುಗಳು ಎಂದು ಹಲವರು ತಿಳಿದಿದ್ದಾರೆ. ಆದರೆ ಈ ರೀತಿಯ ಬಳಕೆಗಳು ಬರಹ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸುವಂತವಲ್ಲ, ದೂರವಾಗಿಸುವಂತವು ಎಂದು ತಿಳಿದುಕೊಳ್ಳಲು ಕಶ್ಟವಿಲ್ಲ.

ಹೊಸ ಹೊಸ ಪದಗಳನ್ನು ಉಂಟುಮಾಡಬೇಕಾದಾಗಲಂತೂ ಸಂಸ್ಕ್ರುತವನ್ನು ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂದು ಹೆಚ್ಚಿನ ಕನ್ನಡದ ಬರಹಗಾರರೂ ತಿಳಿದಿದ್ದಾರೆ. ಆದರೆ ಅಂತಹ ಪದಗಳನ್ನು ಬಳಸಿರುವ ಕನ್ನಡ ಬರಹ ಎಲ್ಲರಿಗೂ ಹತ್ತಿರವಾಗುವ ಬದಲು ದೂರ ಉಳಿಯುತ್ತದೆ, ಮತ್ತು ಅದನ್ನು ಕಲಿಯುವ ಮತ್ತು ಬಳಸುವ ಕೆಲಸ ಹೆಚ್ಚಿನ ಕನ್ನಡಿಗರಿಗೂ ತೊಡಕಿನದಾಗುತ್ತದೆ. ಹೊಸ ಪದಗಳನ್ನು ಉಂಟುಮಾಡುವುದರ ಗುರಿ ಕನ್ನಡಿಗರಿಗೆಲ್ಲ ಆ ಪದಗಳು ಸೂಚಿಸುವ ವಿಶಯ ಇಲ್ಲವೇ ವಸ್ತುವಿನ ಪರಿಚಯ ಮಾಡಿಸುವುದು ಎಂಬುದನ್ನು ನೆನಪಿನಲ್ಲಿಟ್ಟರೆ ಹೆಜ್ಜೆಹೆಜ್ಜೆಗೂ ಸಂಸ್ಕ್ರುತವನ್ನು ಮೊರೆಹೊಗುವುದು ತಾನೇ ನಿಲ್ಲುತ್ತದೆ.

ಹೊಸ ಪದಗಳನ್ನು ಉಂಟುಮಾಡಲು ಕನ್ನಡದ್ದೇ ಆದ ಪದಗಳನ್ನು ಮತ್ತು ಬೇರುಗಳನ್ನು ಬಳಸಬಹುದು; ಇವು ಹೊಸಗನ್ನಡದಲ್ಲಿ ಸಿಗದಿದ್ದರೆ ಹಳೆಗನ್ನಡದಿಂದ, ಇಲ್ಲವೇ ಆಡುಗನ್ನಡಗಳಿಂದ ಪಡೆದುಕೊಳ್ಳಬಹುದು. ಹೆಚ್ಚಿನವರೂ ಕೇಳಿಲ್ಲದ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಸಂಸ್ಕ್ರುತದವು ಎಂಬ ಒಂದೇ ಕಾರಣಕ್ಕಾಗಿ ಬಳಸಿ ಹೊಸ ಪದಗಳನ್ನು ಉಂಟುಮಾಡುವುದಕ್ಕಿಂತಲೂ, ಹೆಚ್ಚಿನವರೂ ಕೇಳಿರುವ ಪದಗಳನ್ನು ಇಲ್ಲವೇ ಬೇರುಗಳನ್ನು ಅವು ಯಾವ ನುಡಿಯವಾಗಿದ್ದರೂ (ಎತ್ತುಗೆಗೆ ಇಂಗ್ಲೀಶಿನವಾಗಿದ್ದರೂ) ಎರವಲಾಗಿ ಪಡೆದು ಬಳಸಿಕೊಳ್ಳಬಹುದು.

ಇವತ್ತು ಕನ್ನಡ ಬರಹದಲ್ಲಿ ಕನ್ನಡಕ್ಕೆ ನಿಜಕ್ಕೂ ಬೇಡದಿರುವ ಹಲವು ಬರಿಗೆಗಳನ್ನು (ಅಕ್ಶರಗಳನ್ನು) ಬಳಸಲಾಗುತ್ತದೆ; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಸಂಸ್ಕ್ರುತದಲ್ಲಿ ಇರುವ ಹಾಗೆಯೇ ಬರೆಯಬೇಕು (ಕೆಲವು ಅಪವಾದಗಳನ್ನು ಹೊರತುಪಡಿಸಿ) ಎಂಬ ಕಟ್ಟಲೆಯೊಂದನ್ನು ಉಳಿಸಿಕೊಳ್ಳುವುದಕ್ಕಾಗಿ ಹತ್ತು ಮಹಾಪ್ರಾಣ ಬರಿಗೆಗಳು, ಋಕಾರ, ಷಕಾರ, ಐ, ಔ, ಙ, ಞ, ವಿಸರ‍್ಗ ಎಂಬಂತಹ ಒಟ್ಟು ಹದಿನೇಳು ಹೆಚ್ಚಿನ ಬರಿಗೆಗಳನ್ನು ಕನ್ನಡ ಬರಹದಲ್ಲಿ ಬಳಸಲಾಗುತ್ತಿದೆ. (ಇದಲ್ಲದೆ ರಕಾರಕ್ಕೆ ಎಂಬ ಒಂದು ಹೆಚ್ಚಿನ ರೂಪವನ್ನೂ ಬಳಸಲಾಗುತ್ತಿದೆ.)

ಇವುಗಳಲ್ಲಿ ಹೆಚ್ಚಿನವೂ ಕನ್ನಡ ಬರಹದ ಓದಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಓದಿನಲ್ಲಿಲ್ಲದ ಬರಿಗೆಗಳನ್ನು ಬರಹದಲ್ಲಿ ಕಾಣಿಸುವುದು ತುಂಬಾ ತೊಡಕಿನ ಕೆಲಸ; ಎಶ್ಟು ತೊಡಕಿನ ಕೆಲಸವೆಂಬುದು ಇವತ್ತಿನ ಕನ್ನಡ ಬರಹಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗುತ್ತದೆ: ಅವುಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸಿಕೊಳ್ಳುವುದು ಮಹಾಪ್ರಾಣದಂತಹ ಈ ಹೆಚ್ಚಿನ ಬರಿಗೆಗಳನ್ನು ಬಳಸುವುದರಲ್ಲೇ ಆಗಿದೆ.

ಬರಹದ ಕನ್ನಡವನ್ನು ಎಲ್ಲಾ ಆಡುಗನ್ನಡಗಳಿಗೆ ಹತ್ತಿರ ತರಲು ಬೇಡದ ಈ ಹದಿನೇಳು ಬರಿಗೆಗಳನ್ನು ಬಿಟ್ಟುಬಿಡುವುದೇ ಒಳಿತು. ಹಾಗೆಯೇ ಇಂಗ್ಲಿಶ್, ಹಿಂದಿ, ಮರಾಟಿ, ಉರ‍್ದು, ಮೊದಲಾದ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳ ಹಾಗೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನೂ ಹೆಚ್ಚಿನ ಕನ್ನಡಿಗರೂ ಓದುವ ಹಾಗೆಯೇ ಬರೆಯುವುದು ಒಳಿತು. ಅವನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬೇಕೆಂಬ ಕಟ್ಟಳೆಯನ್ನು ಉಳಿಸಿಕೊಳ್ಳಬೇಕಾಗಿಲ್ಲ.

ಹಳೆಗನ್ನಡದ ಸಮಯದಲ್ಲಿ ಕನ್ನಡಿಗರಿಗೆ ಇಂತಹದೊಂದು ಸ್ವಾತಂತ್ರ್ಯವಿತ್ತು; ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಅವರು ಸಂಸ್ಕ್ರುತದಲ್ಲಿರುವ ಹಾಗೆಯೇ ಬೇಕಿದ್ದರೂ ಬರೆಯಬಲ್ಲವರಾಗಿದ್ದರು; ಇಲ್ಲವೇ ಕನ್ನಡದ ಸ್ವರೂಪಕ್ಕೆ ಹೊಂದಿಕೆಯಾಗುವ ಹಾಗೆ ಅದರಲ್ಲಿ ಮಾರ‍್ಪಾಡುಗಳನ್ನು ಮಾಡಿಯೂ ಬಳಸಬಲ್ಲವರಾಗಿದ್ದರು.
ಬರಹದ ಕನ್ನಡವನ್ನು ಎಲ್ಲರಿಗೂ ಆದಶ್ಟು ಹತ್ತಿರವಾಗಿಸಲು ಈಗ ಕನ್ನಡಿಗರು ಮಾಡಬೇಕಿರುವ ಮಾರ‍್ಪಾಡು ಇದಕ್ಕಿಂತ ಬೇರಾದುದೇನಲ್ಲ. ಮಿತಿಯಿಲ್ಲದೆ ಸಂಸ್ಕ್ರುತದಿಂದ ಎರವಲಾಗಿ ಪಡೆಯುವುದನ್ನು ಕಡಿಮೆ ಮಾಡುವುದು, ಮತ್ತು ಸಂಸ್ಕ್ರುತ ಬಲ್ಲವರು ಮಾತ್ರವಲ್ಲದೆ ಎಲ್ಲರೂ ಬರಹ ಕನ್ನಡದಿಂದ ಪಡೆಯುವುದನ್ನು ಪಡೆಯುವುದಶ್ಟೇ ಅಲ್ಲದೆ, ಬರಹ ಕನ್ನಡದ ಮೂಲಕ ಕೊಡುವುದನ್ನು ಎಲ್ಲರೂ ಕೊಡುವಂತೆಯೂ ಮಾಡುವುದು ಕನ್ನಡದ ಏಳಿಗೆಗೆ ಇಂದು ಅನಿವಾರ‍್ಯವಾಗಿದೆ.

ಈ ಇಪ್ಪತ್ತೊಂದನೆಯ ಶತಮಾನದಲ್ಲೂ ಹಲವು ಮಂದಿ ಕನ್ನಡಿಗರು ಬರವಣಿಗೆಯ ಪ್ರಪಂಚದಲ್ಲಿ ಆಟಕ್ಕಶ್ಟೇ ಅಲ್ಲ, ಲೆಕ್ಕಕ್ಕೆ ಬರುವಂತೆಯೂ ಪಾಲ್ಗೊಳ್ಳಲು ಆಗದಿರಲು ಹಲವು ಬಗೆಯ ತೊಡಕುಗಳು ಕಾರಣವಾಗಿವೆ. ಎತ್ತುಗೆಗಾಗಿ, ಕೆಳವರ‍್ಗದ ಜನರ ಬಡತನ ಮತ್ತು ಅರಿಯಮೆಗಳು ಅವರ ಮಕ್ಕಳನ್ನು ಶಾಲೆಗಳಿಂದ ದೂರ ಇರಿಸುತ್ತವೆ. ಹಲವರಾದ ಅವರ ಕನ್ನಡಕ್ಕಿಂತ ಕೆಲವರಾದ ತಮ್ಮ ಕನ್ನಡಕ್ಕೆ ಹತ್ತಿರವಿರುವಂತೆಯೇ ಬರಹದ ಕನ್ನಡವನ್ನು ಇಟ್ಟುಕೊಳ್ಳಲು ಮೇಲ್ವರ‍್ಗದವರು ಬಯಸುವುದು ಇದಕ್ಕೆ ಒತ್ತಾಸೆಯಾಗಿರುತ್ತದೆ. ಕೆಳವರ‍್ಗದವರನ್ನು ಅವರಿರುವಲ್ಲಿಯೇ ಇರಲು ಬಿಡುವುದು ಮೇಲ್ವರ‍್ಗದವರ ಮನದಾಳದ ಬಯಕೆಯಾಗಿರಲಿಕ್ಕಿಲ್ಲ; ಕನ್ನಡಿಗರ ನೆತ್ತರಿನಲ್ಲಿ ಇಂತಹ ನಂಜಿಲ್ಲ. ಆದರೂ ಅವರು ಇರುವಲ್ಲೇ ಇರುವಂತೆ ಮಾಡುತ್ತಿರುವ ಕೆಲವು ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿಕೊಳ್ಳುವುದು ಹಿರಿಮೆಯಾದೀತು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter