Posts Tagged ‘Kannada grammar’

ಪದ ಮತ್ತು ಅದರ ಹುರುಳು

ನುಡಿಯರಿಮೆಯ ಇಣುಕುನೋಟ – 27

ನುಡಿಗಳಲ್ಲಿ ಬಳಕೆಯಾಗುವ ಪದಗಳನ್ನು ಉಲಿಗಳ ಸೇರಿಕೆಯಿಂದ ಉಂಟುಮಾಡಲಾಗುತ್ತದೆ; ಮ್, ಅ, ನ್ ಮತ್ತು ಎ ಎಂಬ ನಾಲ್ಕು ಉಲಿಗಳ ಸೇರಿಕೆಯಿಂದ ‘ಮನೆ’ ಎಂಬ ಪದವನ್ನು ಉಂಟುಮಾಡಲಾಗಿದೆ; ಆದರೆ, ಈ ಉಲಿಗಳಲ್ಲಿ ಯಾವುದಕ್ಕೂ ಅದರದೇ ಆದ ಹುರುಳಿಲ್ಲ; ಅವುಗಳ ಸೇರಿಕೆಯಿಂದ ಉಂಟಾದ ‘ಮನೆ’ ಎಂಬ ಪದಕ್ಕೆ ಮಾತ್ರ ಹುರುಳಿದೆ. ಯಾಕೆಂದರೆ, ‘ಮ್’ ಎಂಬುದು ಮನೆ ಎಂಬ ಪದದಲ್ಲಿ ಮಾತ್ರವಲ್ಲದೆ, ಮಂಗ, ಮಜ್ಜಿಗೆ, ಕಡಿಮೆ, ಮಿಂಚು, ಕಮಟು, ಅಮ್ಮ ಮೊದಲಾದ ಬೇರೆಯೂ ಹಲವು ಪದಗಳಲ್ಲಿ ಬರುತ್ತದೆ, ಮತ್ತು ಈ ಎಲ್ಲಾ ಪದಗಳಿಗೂ ಸಮಾನವಾಗಿರುವ ಹುರುಳೊಂದನ್ನು ಕಂಡುಹಿಡಿದು, ಅದು ‘ಮ್’ ಎಂಬ ಉಲಿಯ ಹುರುಳು ಎಂಬುದಾಗಿ ತೋರಿಸಿಕೊಡಲು ಸಾದ್ಯವೇ ಇಲ್ಲ.

ಇದಲ್ಲದೆ, ಪದಗಳ ಅಂಗಗಳಾಗಿರುವ ಉಲಿಗಳು ಮಾರ‍್ಪಟ್ಟಾಗಲೂ ಅವುಗಳ ಹುರುಳು ಮಾರ‍್ಪಡದೆ ಉಳಿಯುತ್ತದೆ; ಈ ವಿಶಯವೂ ಹುರುಳೆಂಬುದು ಪದಗಳಿಗಿದೆಯಲ್ಲದೆ ಉಲಿಗಳಿಗಿಲ್ಲ ಎಂಬುದನ್ನು ಬೆಂಬಲಿಸುತ್ತದೆ. ಹಳೆಗನ್ನಡದ ಪಾಲ್ ಎಂಬುದು ಹಾಲು ಎಂಬುದಾಗಿ, ಬೞ್ದುಂಕು ಎಂಬುದು ಬದುಕು ಎಂಬುದಾಗಿ, ಬೆರಲ್ ಎಂಬುದು ಬೆರಳ್ ಎಂಬುದಾಗಿ ಹೊಸಗನ್ನಡದಲ್ಲಿ ಮಾರ‍್ಪಟ್ಟಾಗ, ಅದರಿಂದಾಗಿ ಆ ಪದಗಳಿಗೆ ಮೊದಲಿಗಿದ್ದ ಹುರುಳುಗಳಲ್ಲಿ ಮಾರ‍್ಪಾಡುಗಳೇನೂ ಆಗಿರಲಿಲ್ಲ.

ಉಲಿಗಳಿಗೆ ಅವುಗಳದೇ ಆದ ಹುರುಳಿಲ್ಲದಿದ್ದರೂ ಪದಗಳಿಗೆ ಅವುಗಳದೇ ಆದ ಹುರುಳಿದೆಯೆಂದು ಸಾಮಾನ್ಯವಾಗಿ ಹೇಳಲಾಗುತ್ತದೆ; ಅದರೆ, ಇಲ್ಲೂ ಕೆಲವು ಸಮಸ್ಯೆಗಳಿವೆ; ಪದನೆರಕೆ(ಡಿಕ್ಶನರಿ)ಗಳಲ್ಲಿ ಹೆಚ್ಚಿನ ಪದಗಳಿಗೂ ಎರಡು ಇಲ್ಲವೇ ಹೆಚ್ಚು ಹುರುಳುಗಳನ್ನು ಕೊಡಲಾಗುತ್ತದೆಯೆಂಬುದನ್ನು ಗಮನಿಸಬಹುದು; ಆದರೆ, ಈ ಪದಗಳನ್ನು ಸೊಲ್ಲುಗಳಲ್ಲಿ ಬಳಸಿದಾಗ, ಅವುಗಳ ಈ ಹಲವು ಹುರುಳುಗಳಲ್ಲಿ ಒಂದು ಮಾತ್ರ ನಮ್ಮ ಗಮನಕ್ಕೆ ಬರುತ್ತದೆ. ಎತ್ತುಗೆಗಾಗಿ, ಕಾಯು ಎಂಬ ಪದಕ್ಕೆ ಕಾಪಾಡು ಎಂಬ ಹುರುಳೂ ಇದೆ, ಬಿಸಿಮಾಡು ಎಂಬ ಹುರುಳೂ ಇದೆ; ಆದರೆ, ‘ನಾಯಿ ಮನೆಯನ್ನು ಕಾಯುತ್ತಿದೆ’ ಎಂಬ ಸೊಲ್ಲನ್ನು ಬಳಸಿದಾಗ ಕಾಯು ಪದದ ಮೊದಲನೆಯ ಹುರುಳು ಮಾತ್ರ ನಮ್ಮ ಗಮನಕ್ಕೆ ಬರುತ್ತದಲ್ಲದೆ, ಎರಡನೆಯ ಹುರುಳು ಗಮನಕ್ಕೆ ಬರುವುದಿಲ್ಲ.

ಇದೇ ರೀತಿಯಲ್ಲಿ ‘ಹಂಡೆಯಲ್ಲಿ ನೀರು ಕಾಯುತ್ತಿದೆ’ ಎಂಬ ಬೇರೊಂದು ಸೊಲ್ಲನ್ನು ಬಳಸಿದಾಗ ಅದರ ಎರಡನೆಯ ಹುರುಳು ಮಾತ್ರ ನಮ್ಮ ಗಮನಕ್ಕೆ ಬರುತ್ತದೆ. ಎಂದರೆ, ಒಂದು ಪದ ನಮಗೆ ಎಂತಹ ಹುರುಳನ್ನು ಕೊಡುತ್ತದೆ ಎಂಬುದು ಅದನ್ನು ಎಂತಹ ಸೊಲ್ಲಿನಲ್ಲಿ ಬಳಸಲಾಗಿದೆ ಎಂಬುದರ ಮೇಲೂ ಅವಲಂಬಿಸಿರುತ್ತದೆ. ಕೆಲವೊಮ್ಮೆ ಈ ರೀತಿ ಒಂದು ಪದಕ್ಕೆ ಒಂದಕ್ಕಿಂತ ಹೆಚ್ಚು ಹುರುಳುಗಳಿರುವುದು ತೊಂದರೆಯನ್ನೂ ಕೊಡಬಲ್ಲುದು. ಎತ್ತುಗೆಗಾಗಿ, ‘ಅವನು ಕರೆಯಲು ಬಂದಿದ್ದಾನೆ’ ಎಂದಿಶ್ಟೇ ಹೇಳಿದಲ್ಲಿ ಅವನು ಎಲ್ಲಿಗಾದರೂ ಬರಬೇಕೆಂದು ಹೇಳಲು ಬಂದಿದ್ದಾನೋ ಇಲ್ಲವೇ ದನವನ್ನು ಕರೆಯಲು ಬಂದಿದ್ದಾನೋ ಎಂಬ ವಿಶಯದಲ್ಲಿ ಗೊಂದಲವುಂಟಾಗಬಲ್ಲುದು. ಆದರೆ, ಸಾಮಾನ್ಯವಾಗಿ ನಾವು ಮಾತನ್ನು ಬಳಸುವಾಗ ಆ ರೀತಿ ಗೊಂದಲವುಂಟಾಗದಂತೆ ನೋಡಿಕೊಳ್ಳುತ್ತೇವೆ.

ಮಾತಿನಲ್ಲಿ ಬಳಕೆಯಾಗುವ ಪದಗಳಲ್ಲಿ ಹಲವಕ್ಕೆ (ಹೆಸರುಪದಗಳಿಗೆ) ವ್ಯಕ್ತಿ, ವಸ್ತು ಇಲ್ಲವೇ ಸಂಗತಿಯನ್ನು ಗುರುತಿಸುವ ಕಸುವಿರುತ್ತದೆ. ‘ಸುರೇಶ ಒಂದು ಹಣ್ಣು ತಿಂದ’ ಎಂಬ ಸೊಲ್ಲಿನಲ್ಲಿ ಎರಡು ಹೆಸರುಪದಗಳು ಬಂದಿದ್ದು, ಅವುಗಳಲ್ಲಿ ‘ಹಣ್ಣು’ ಎಂಬ ಪದ ಒಂದು ವಸ್ತುವನ್ನು ಗುರುತಿಸುತ್ತದೆ ಮತ್ತು ‘ಸುರೇಶ’ ಎಂಬ ಪದ ಒಬ್ಬ ವ್ಯಕ್ತಿಯನ್ನು ಗುರುತಿಸುತ್ತದೆ. ಪದಗಳ ಮೂಲಕ ಮಾತ್ರವಲ್ಲದೆ ಪದಕಂತೆಗಳ ಮೂಲಕವೂ ವ್ಯಕ್ತಿ, ವಸ್ತು ಮೊದಲಾದುವನ್ನು ಗುರುತಿಸಲು ಬರುತ್ತದೆ. ‘ಕುರ‍್ಚಿಯಲ್ಲಿ ಕುಳಿತಿರುವ ಮುದುಕ’ ಎಂಬ ಪದಕಂತೆ ಒಬ್ಬ ವ್ಯಕ್ತಿಯನ್ನು ಗುರುತಿಸುತ್ತದೆ, ಮತ್ತು ‘ರಾಜು ಕೊಟ್ಟ ಪುಸ್ತಕ’ ಎಂಬ ಇನ್ನೊಂದು ಪದಕಂತೆ ಒಂದು ವಸ್ತುವನ್ನು ಗುರುತಿಸುತ್ತದೆ.

ಈ ರೀತಿ ವ್ಯಕ್ತಿ, ವಸ್ತು ಮೊದಲಾದುವನ್ನು ಪದಗಳ ಮೂಲಕ ಗುರುತಿಸುವುದಕ್ಕೂ ಪದಕಂತೆಗಳ ಮೂಲಕ ಗುರುತಿಸುವುದಕ್ಕೂ ನಡುವೆ ಒಂದು ಮುಕ್ಯವಾದ ವ್ಯತ್ಯಾಸವಿದೆ. ಪದಕಂತೆಗಳ ಮೂಲಕ ಗುರುತಿಸುವಾಗ ಅವುಗಳ ಹುರುಳು ಬಳಕೆಯಾಗುತ್ತದೆ, ಆದರೆ ಪದಗಳ ಮೂಲಕ ಗುರುತಿಸುವಾಗ ಆ ರೀತಿ ಅವುಗಳ ಹುರುಳು ಬಳಕೆಯಾಗುವುದಿಲ್ಲ. ಅದಕ್ಕೆ ಬದಲು, ಪದಗಳಿಗೂ ಅವು ತಿಳಿಸಬಲ್ಲ ವ್ಯಕ್ತಿ, ವಸ್ತು ಮೊದಲಾದವುಗಳಿಗೂ ನಡುವಿರುವ ಸಂಬಂದ ಬಳಕೆಯಾಗುತ್ತದೆ.

ನಿಜಕ್ಕೂ ಒಂದು ಹೆಸರುಪದದ ಹುರುಳೇನು ಎಂಬುದನ್ನು ತಿಳಿಯಬೇಕಿದ್ದಲ್ಲಿ ಮೊದಲಿಗೆ ಅದು ಎಂತಹ ವ್ಯಕ್ತಿ, ವಸ್ತು ಇಲ್ಲವೇ ಸಂಗತಿಯನ್ನು ಗುರುತಿಸುತ್ತದೆ ಎಂಬುದನ್ನು ತಿಳಿಯಬೇಕಾಗುತ್ತದೆ. ಎತ್ತುಗೆಗಾಗಿ, ‘ನಾಯಿ’ ಎಂಬ ಪದ ಎಂತಹ ಪ್ರಾಣಿಯನ್ನು ಗುರುತಿಸಲು ಬಳಕೆಯಾಗುತ್ತದೆ, ಮತ್ತು ಆ ಪ್ರಾಣಿಯ ಪರಿಚೆ(ಗುಣ)ಗಳು ಎಂತಹವು ಎಂಬುದನ್ನು ತಿಳಿದಾಗ ಮಾತ್ರ ನಮಗೆ ಆ ಪದದ ಹುರುಳೇನು ಎಂಬುದು ಗೊತ್ತಾಗುತ್ತದೆ; ಹಾಗಾಗಿ, ಆ ಪ್ರಾಣಿಯ ಪರಿಚೆಗಳನ್ನೇ ಒಟ್ಟಾಗಿ ‘ನಾಯಿ’ ಎಂಬ ಪದದ ಹುರುಳು ಎಂದು ಹೇಳಬೇಕಾಗುತ್ತದೆ.

ಒಳರಚನೆಯಿರುವ ಪದಗಳ ಹುರುಳನ್ನೂ ಇದೇ ರೀತಿಯಲ್ಲಿ ಅವು ತಿಳಿಸುವ ವಸ್ತು, ವ್ಯಕ್ತಿ ಮೊದಲಾದವುಗಳ ಪರಿಚೆಗಳು ಎಂತಹವು ಎಂಬುದರಿಂದ ತಿಳಿಯಬೇಕಾಗುತ್ತದಲ್ಲದೆ ಅವುಗಳ ಒಳರಚನೆ ಎಂತಹದು ಎಂಬುದರಿಂದ ತಿಳಿಯಲು ಬರುವುದಿಲ್ಲ. ‘ಹೊಸಮನೆ’ ಎಂಬ ಪದದಲ್ಲಿ ‘ಹೊಸ’ ಮತ್ತು ‘ಮನೆ’ ಎಂಬ ಎರಡು ಪದಗಳು ಸೇರಿಕೊಂಡಿವೆ; ಆದರೆ, ಅದು ಗುರುತಿಸುವ ಮನೆ ಹೊಸದಾಗಿರಬಲ್ಲುದು, ಇಲ್ಲವೇ ತುಂಬಾ ಹಳೆಯದಾಗಿರಬಲ್ಲುದು; ಯಾಕೆಂದರೆ, ಒಮ್ಮೆ ಒಂದು ಮನೆಯನ್ನು ಆ ಹೆಸರಿನಿಂದ ಕರೆಯತೊಡಗಿದ ಮೇಲೆ, ಅದು ತುಂಬಾ ಹಳೆಯದಾದಾಗಲೂ ಆ ಹೆಸರನ್ನು ನಾವು ಬದಲಾಯಿಸಹೋಗುವುದಿಲ್ಲ; ಎಂದರೆ, ‘ಹೊಸಮನೆ’ ಎಂಬ ಪದದ ಹುರುಳು ಅದು ಗುರುತಿಸುವ ಮನೆಯ ಪರಿಚೆಗಳು ಬದಲಾದ ಹಾಗೆಲ್ಲ ಬದಲಾಗುತ್ತಾ ಹೋಗುತ್ತದೆ. ‘ಹಳೆಮನೆ’ ಎಂಬ ಹೆಸರಿರುವ ಇನ್ನೊಂದು ಮನೆಯನ್ನು ಕೆಡವಿ ಅಲ್ಲೊಂದು ಹೊಸಮನೆಯನ್ನು ಕಟ್ಟಿದಾಗಲೂ ಅದಕ್ಕೆ ಮೊದಲು ಬಳಕೆಯಲ್ಲಿದ್ದ ‘ಹಳೆಮನೆ’ ಎಂಬ ಹೆಸರು ಹಾಗೆಯೇ ಉಳಿದಿರುತ್ತದೆ; ಆ ಪದದ ಹುರುಳು ಮಾತ್ರ ಮಾರ‍್ಪಟ್ಟಿರುತ್ತದೆ.

ಹೆಸರುಪದಗಳಿಗೆ ಅವುಗಳ ಹುರುಳಿನೊಂದಿಗಿರುವ ಸಂಬಂದಕ್ಕಿಂತಲೂ ಅವು ಸೂಚಿಸುವ ವ್ಯಕ್ತಿ, ವಸ್ತು, ಸಂಗತಿ ಮೊದಲಾದವುಗಳೊಂದಿಗಿರುವ ಸಂಬಂದವೇ ಹೆಚ್ಚು ಮುಕ್ಯವಾದುದು ಎಂಬ ವಿಶಯ ಇದರಿಂದ ಸ್ಪಶ್ಟವಾಗುತ್ತದೆ. ಕೆಲವೆಡೆಗಳಲ್ಲಿ ಪದಗಳ ಒಳರಚನೆಯನ್ನು ಬಳಸಿ ಅವುಗಳ ಹುರುಳನ್ನು ಊಹಿಸಿಕೊಳ್ಳಬಲ್ಲೆವಾದರೂ ಈ ವಿಶಯದಲ್ಲಿ ಕೊನೆಯ ತೀರ‍್ಮಾನಕ್ಕೆ ಬರಲು ಇಂತಹ ಸಂಬಂದದ ನೆರವು ಬೇಕೇ ಬೇಕು.

ಸೊಲ್ಲುಗಳಲ್ಲಿ ಬರುವ ಎಸಕ(ಕ್ರಿಯಾ)ಪದ, ಪರಿಚೆ(ಗುಣ)ಪದ ಮೊದಲಾದವುಗಳ ಹುರುಳೇನೆಂಬುದನ್ನು ತೀರ‍್ಮಾನಿಸುವುದು ಇದಕ್ಕಿಂತಲೂ ಹೆಚ್ಚು ತೊಡಕಿನ ಕೆಲಸ. ಯಾಕೆಂದರೆ, ಅದಕ್ಕಾಗಿ ಅವು ಬರುವ ಪದಕಂತೆಗಳ ಇಲ್ಲವೇ ಸೊಲ್ಲುಗಳ ಹುರುಳೇನೆಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗುತ್ತದೆ, ಮತ್ತು ಆ ಹುರುಳಿನಲ್ಲಿ ಯಾವುದೇ ಒಂದು ಎಸಕಪದದ ಇಲ್ಲವೇ ಪರಿಚೆಪದದ ಕೊಡುಗೆ ಎಂತಹದು ಎಂಬುದನ್ನು ಕಂಡುಹಿಡಿಯಬೇಕಾಗುತ್ತದೆ. ಪದಗಳೊಂದಿಗೆ ಬರುವ ಒಟ್ಟು(ಪ್ರತ್ಯಯ)ಗಳ ಹುರುಳನ್ನೂ ಇದೇ ರೀತಿಯಲ್ಲಿ ಆ ಪದಗಳ ಬಳಕೆಯಲ್ಲಿ ಅವುಗಳ ಕೊಡುಗೆ ಎಂತಹದು ಎಂಬುದನ್ನು ಪರಿಶೀಲಿಸುವ ಮೂಲಕ ತಿಳಿಯಬೇಕಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಮಕ್ಕಳಿಗೆ ಬರೆಯಲು ಕಲಿಸುವ ಬಗೆ

ನುಡಿಯರಿಮೆಯ ಇಣುಕುನೋಟ – 17

ಓದಲು ಕಲಿಯುವುದಕ್ಕಿಂತಲೂ ಬರೆಯಲು ಕಲಿಯುವುದು ಮಕ್ಕಳ ಮಟ್ಟಿಗೆ ಹೆಚ್ಚು ತೊಡಕಿನ ಕೆಲಸ. ಇದಕ್ಕೆ ಕಾರಣವೇನೆಂದರೆ, ಬರೆಯಬೇಕಿದ್ದಲ್ಲಿ ಅವರು ಒಂದೇ ಬಾರಿಗೆ ಹಲವಾರು ತೀರ‍್ಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ: ಯಾವ ವಿಶಯಗಳ ಕುರಿತು ಬರೆಯಬೇಕು, ಆ ವಿಶಯಗಳನ್ನು ಯಾವ ರೀತಿಯಲ್ಲಿ ಜೋಡಿಸಿಕೊಳ್ಳಬೇಕು, ಎಂತಹ ಪದಗಳನ್ನು ಬಳಸಬೇಕು, ಅವನ್ನು ಒಟ್ಟುಗೂಡಿಸಿ ಸೊಲ್ಲುಗಳನ್ನು ಹೇಗೆ ಕಟ್ಟಬೇಕು, ಅವನ್ನು ಬರೆಯುವಲ್ಲಿ ಯಾವ ಬರಿಗೆಗಳನ್ನು ಬಳಸಬೇಕು ಎಂಬುದನ್ನೆಲ್ಲ ಅವರು ಒಂದೇ ಬಾರಿಗೆ ತೀರ‍್ಮಾನಿಸಿಕೊಳ್ಳಬೇಕಾಗುತ್ತದೆ. ಹೀಗೆ ಮಾಡಲು ಬರುವುದಿಲ್ಲವಾದಲ್ಲಿ, ಅವರ ಬರೆಯುವ ಕೆಲಸ ಮುಂದಕ್ಕೆ ಹೋಗುವುದೇ ಇಲ್ಲ.

ಹೆಚ್ಚಿನ ಮಕ್ಕಳಿಗೂ ಈ ತೊಡಕು ತೊಡಕಾದ ಕೆಲಸವನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ. ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಕಲಿಯುವಂತೆ ಯಾರಾದರೂ ಅವರಿಗೆ ನೆರವನ್ನಿತ್ತರೆ ಮಾತ್ರ, ಅವರು ಅದನ್ನು ಕಲಿಯಬಲ್ಲರು. ಇಲ್ಲವಾದರೆ, ಬರೆಯುವ ಕೆಲಸ ತಮಗೆ ಹೇಳಿದ್ದಲ್ಲ ಎಂಬುದಾಗಿ ಅವರು ಅದರಿಂದ ದೂರವೇ ಉಳಿಯುತ್ತಾರೆ. ಪರೀಕ್ಶೆಗಳಲ್ಲಿ ಬರೆಯಬೇಕಾದುದನ್ನೆಲ್ಲ ಉರುಹೊಡೆದು ಬರೆಯುವುದನ್ನಶ್ಟೇ ಅವರು ಮಾಡಬಲ್ಲರು.

ಹಾಗಾಗಿ, ಮಕ್ಕಳಿಗೆ ಬರೆಯಲು ಕಲಿಸುವವರು ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಹತೋಟಿಗೆ ತಂದುಕೊಳ್ಳುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕು. ಬರಿಗೆ(ಅಕ್ಶರ)ಗಳನ್ನು ಬರೆಯಲು ಕಲಿಯುವ ಸಮಯದಲ್ಲಿ ಅವರು ಈ ಕಲಿಕೆಯನ್ನು ಸರಿಯಾದ ಓರಣ(ಕ್ರಮ)ದಲ್ಲಿ ನಡೆಸುವ ಹಾಗೆ ನೋಡಿಕೊಳ್ಳಬೇಕು.

ಮಕ್ಕಳ ಕಯ್ಬರಹ ಓದಬಲ್ಲುದಾಗಿರಬೇಕು, ಮತ್ತು ಬರವಣಿಗೆ ಸಲೀಸಾಗಿರಬೇಕು. ಸಲೀಸಾಗಿ ಬರೆಯಲು ಬಾರದವರಿಗೆ ಬೇರೆ ವಿಶಯಗಳ ಕುರಿತು ಆಲೋಚಿಸಲು ಸಮಯವೇ ಸಿಗುವುದಿಲ್ಲ. ಸಲೀಸಾಗಿ ಬರೆಯಬೇಕಿದ್ದಲ್ಲಿ, ಮಕ್ಕಳು ಬರಿಗೆಗಳನ್ನು ಬರೆಯುವ ಬಗೆ, ಬಳಪವನ್ನು ಹಿಡಿಯುವ ಬಗೆ, ಮತ್ತು ಕಾಗದವನ್ನು ಎದುರು ಇರಿಸಿಕೊಳ್ಳುವ ಬಗೆ ಸರಿಯಾಗಿರಬೇಕು.

ಕೆಲವು ಮಕ್ಕಳು ಬರೆಯುವಾಗ ಬಲಗಯ್ಯನ್ನು ಬಳಸುವ ಬದಲು ಎಡಗಯ್ಯನ್ನು ಬಳಸುತ್ತಾರೆ. ಆದರೆ, ಇಂತಹ ಮಕ್ಕಳು ಬಲಗಯ್ಯಲ್ಲಿ ಬರೆಯುವವರನ್ನು ನೋಡಿ, ಅವರು ಬರೆಯುವ ಹಾಗೆಯೇ ಬರೆಯತೊಡಗುತ್ತಾರೆ. ಇದರಿಂದಾಗಿ ಅವರು ತೊಂದರೆಗೊಳಗಾಗುತ್ತಾರೆ. ಯಾಕೆಂದರೆ, ಹಾಗೆ ಬರೆಯುವಾಗ ಅವರಿಗೆ ತಮ್ಮ ಕಯ್ಬೆರಳು ಅಡ್ಡ ಬರುತ್ತದೆ, ಮತ್ತು ತಾವು ಬರೆದುದೇನೆಂಬುದು ಕಾಣಿಸುವುದಿಲ್ಲ. ಅದು ಕಾಣಿಸುವಂತೆ ಮಾಡಲು, ಅವರು ತಮ್ಮ ಮಣಿಗಂಟನ್ನು ಬಗ್ಗಿಸಿ ಬರೆಯಹೊರಡುತ್ತಾರೆ. ಆದರೆ ಹೀಗೆ ಮಾಡುವುದರಿಂದ ಅವರ ಬರವಣಿಗೆ ತುಂಬಾ ತೊಡಕಿನದಾಗಿಬಿಡುತ್ತದೆ.

ಎಡಗಯ್ಯಲ್ಲಿ ಬರೆಯುವ ಮಕ್ಕಳಿಗೆ ಅವರು ಬರೆಯಬೇಕಾಗಿರುವ ಬಗೆ ಹೇಗೆ ಎಂಬುದನ್ನು ಕಲಿಸಿಕೊಡಬೇಕು. ಬರೆಯುವ ಕಾಗದವನ್ನು ಇಲ್ಲವೇ ಪುಸ್ತಕವನ್ನು ಅವರು ಬಲಗಯ್ಯವರ ಹಾಗೆ ಎಡಕ್ಕೆ ತಿರುಗಿಸಿ ಇರಿಸಿಕೊಳ್ಳುವ ಬದಲು, ಬಲಕ್ಕೆ ತಿರುಗಿಸಿ ಇರಿಸಿಕೊಳ್ಳುವ ಹಾಗೆ ಮಾಡಬೇಕು, ಮತ್ತು ಪೆನ್ನನ್ನು ತುದಿಯಿಂದ ತುಸು ಮೇಲೆ ಹಿಡಿದುಕೊಳ್ಳಲು ಹೇಳಬೇಕು. ಬರೆಯುವಾಗ ಅವರು ಮಣಿಗಂಟನ್ನು ಬಗ್ಗಿಸಬಾರದು. ಎಡಗಯ್ಯವರಿಗೆ ತಕ್ಕುದಾಗಿರುವಂತಹ ಈ ಬರೆಯುವ ಬಗೆಯನ್ನು ಕಲಿತುಕೊಂಡಲ್ಲಿ ಮಾತ್ರ, ಅವರಿಗೆ ಸಲೀಸಾಗಿ ಬರೆಯಲು ಬರುತ್ತದೆ.

ಮಾತಿಗೂ ಬರಹಕ್ಕೂ ನಡುವೆ ಸೊಲ್ಲುಗಳ ರಚನೆಯಲ್ಲಿ ವ್ಯತ್ಯಾಸಗಳಿವೆಯಾದ ಕಾರಣ, ಬರೆಯಲು ಕಲಿಯುವ ಮಕ್ಕಳಿಗೆ ಬರಹಗಳಲ್ಲಿ ಎಂತಹ ಸೊಲ್ಲುಗಳನ್ನು ಬಳಸಬೇಕು ಎಂಬುದನ್ನೂ ಕಲಿಸಬೇಕಾಗುತ್ತದೆ. ಇಡೀ ಸೊಲ್ಲುಗಳನ್ನು ಬರೆಯುವುದು ಹೇಗೆ, ಚಿಕ್ಕ ಚಿಕ್ಕ ಸೊಲ್ಲುಗಳನ್ನು ಜೋಡಿಸಿ ಉದ್ದ ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ, ಒಂದು ಚಿಕ್ಕ ಸೊಲ್ಲಿನ ಒಳಗೆ ಬೇರೆ ಚಿಕ್ಕ ಸೊಲ್ಲುಗಳನ್ನು ಇರಿಸಿ ಸಿಕ್ಕಲು ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕಾಗುತ್ತದೆ. ಎಲ್ಲಾ ಮಕ್ಕಳಿಗೂ ಇದನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ.

ಸೊಲ್ಲುಗಳನ್ನು ಸೇರಿಸಿ ಕುರಳು(ಪಾರಾ)ಗಳನ್ನು ರಚಿಸುವ ಬಗೆಯನ್ನೂ ಅವರಿಗೆ ಕಲಿಸಿಕೊಡಬೇಕಾಗುತ್ತದೆ. ಒಳ್ಳೇ ಮಾದರಿ ಕುರಳುಗಳಲ್ಲಿ ಮೊದಲಿಗೆ ಮುಕ್ಯ ವಿಶಯವನ್ನು ಮುಂದಿಡುವ ಚಿಕ್ಕ ಸೊಲ್ಲಿರುತ್ತದೆ; ಆಮೇಲೆ, ಅದನ್ನು ಹೆಚ್ಚು ವಿವರವಾಗಿ ತಿಳಿಸುವ, ಮತ್ತು ಅದಕ್ಕೆ ಬೆಂಬಲ ನೀಡುವ ವಿಶಯಗಳು ಬರುತ್ತವೆ; ಮತ್ತು ಕೊನೆಯಲ್ಲಿ, ಮುಕ್ತಾಯಗೊಳಿಸುವ ಸೊಲ್ಲು ಬರುತ್ತದೆ. ಸೊಲ್ಲುಗಳನ್ನು ಈ ರೀತಿ ಒಂದಕ್ಕೊಂದು ಹೊಂದಿಕೊಳ್ಳುವ ಹಾಗೆ ಬರೆಯುವುದು ಹೇಗೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.

ಬರಹದಲ್ಲಿ ಬರುವ ಕುರಳುಗಳನ್ನು ಹೇಗೆ ಅಣಿಗೊಳಿಸುವುದು ಎಂಬುದನ್ನೂ ಅವರು ಕಲಿಯಬೇಕಾಗುತ್ತದೆ. ಇದು ಬೇರೆ ಬೇರೆ ಗುರಿಗಳಿಗಾಗಿ ಬಳಕೆಯಾಗುವ ಬರಹಗಳಲ್ಲಿ ಬೇರೆ ಬೇರಾಗಿರುತ್ತದೆ. ಒಂದು ಕತೆಯನ್ನು ಬರೆಯುವವರು ಅದರ ನೆಗಳ್ತೆ ಮುಂದೆ ಹೋಗುವುದಕ್ಕೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ಇದಕ್ಕೆ ಬದಲು, ಒಂದು ವಿಶಯದ ಮಟ್ಟಿಗೆ ಇನ್ನೊಬ್ಬರ ಒಪ್ಪಿಗೆ ಇಲ್ಲವೇ ಒಲವನ್ನು ಪಡೆಯಬೇಕೆಂದಿರುವವರು ಆ ವಿಶಯವನ್ನು ಓದುಗರ ಮುಂದಿರಿಸುವ ಮತ್ತು ಅದನ್ನು ಬೆಂಬಲಿಸುವ ವಿಚಾರಗಳನ್ನು ಕೊಡುವ ಬಗೆ ಹೇಗೆ ಎಂಬುದಕ್ಕೆ ಗಮನ ಕೊಡಬೇಕಾಗುತ್ತದೆ.

ಒಮ್ಮೆ ಬರೆದುದನ್ನು ಓದಿ ನೋಡಿ, ಅದು ಸರಿಯಿಲ್ಲವೆಂದು ಅನಿಸಿದಲ್ಲಿ ಅದನ್ನು ತಿದ್ದಿ ಸರಿಪಡಿಸುವುದು ಹೇಗೆ ಎಂಬುದನ್ನೂ ಮಕ್ಕಳು ತಿಳಿದಿರಬೇಕು. ಇದಕ್ಕಾಗಿ ಅವರು ತಾವು ಬರೆದಿರುವ ಸೊಲ್ಲನ್ನು ಬೇರೆ ಬೇರೆ ಬಗೆಗಳಲ್ಲಿ ಮಾರ‍್ಪಡಿಸುವುದು ಹೇಗೆ ಎಂಬುದನ್ನು ಕಲಿತಿರಬೇಕಾಗುತ್ತದೆ. ತಾವು ಬರೆದಿರುವ ಸೊಲ್ಲಿನ ಇಟ್ಟಳ (ಒಳರಚನೆ) ಎಂತಹದು, ಆ ಸೊಲ್ಲನ್ನು ಬೇರೆ ಯಾವ ಇಟ್ಟಳಗಳಿಗೆ ಮಾರ‍್ಪಡಿಸಬಹುದು ಎಂಬಂತಹ ಸೊಲ್ಲರಿಮೆಯ (ವ್ಯಾಕರಣದ) ತಿಳಿವು ಅವರಿಗಿದ್ದಲ್ಲಿ, ತಾವು ಬರೆದಿರುವ ಬರಹವನ್ನು ತಿದ್ದಿ ಸರಿಪಡಿಸುವ ಕೆಲಸವನ್ನು ಅವರು ಹೆಚ್ಚು ಚನ್ನಾಗಿ ನಡೆಸಬಲ್ಲರು.

ಬರವಣಿಗೆಯಲ್ಲಿ ಮಾಡಿರುವ ತಪ್ಪನ್ನು ಬರೆದವರೇ ಓದಿ ನೋಡಿ ಕಂಡುಕೊಳ್ಳುವಂತೆ ಮಾಡಿದಲ್ಲಿ, ಮತ್ತು ಅವು ಯಾಕೆ ತಪ್ಪಾಗಿವೆ ಎಂಬುದನ್ನೂ ತಿಳಿಯುವಂತೆ ಮಾಡಿದಲ್ಲಿ ಅವರ ಬರವಣಿಗೆ ಬೇಗನೆ ಮುಂದೆ ಸಾಗುತ್ತದೆ. ಬರೆದಶ್ಟೂ ಬರವಣಿಗೆ ಚನ್ನಾಗುತ್ತಾ ಹೋಗುತ್ತದೆ. ಹಾಗಾಗಿ, ಬರೆಯುವ ಸಂದರ‍್ಬಗಳು ಮಕ್ಕಳಿಗೆ ಹೆಚ್ಚು ಹೆಚ್ಚು ದೊರಕುವಂತೆ ಮಾಡಬೇಕು.

ಮಕ್ಕಳಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟಬೇಕೆಂಬುದು ಎಲ್ಲಕ್ಕಿಂತಲೂ ಮುಕ್ಯವಾದ ವಿಶಯ. ಏನನ್ನೇ ಬರೆಯಲಿ, ಅದು ಅವರಿಗೆ ನಲಿವನ್ನು ಮತ್ತು ಮೆಚ್ಚುಗೆಯನ್ನು ಕೊಡುವಂತಿರಬೇಕು. ಬೇರೆಯವರ ಒತ್ತಾಯಕ್ಕೆ ಬರೆಯುವ ಬರಹದಿಂದ ಅವರ ಬರವಣಿಗೆ ಒಳ್ಳೆಯದಾಗಲಾರದು.

ಏನಾದರೂ ಒಂದು ವಿಶಯವನ್ನು ಇನ್ನೊಬ್ಬರಿಗೆ ತಿಳಿಸಬೇಕೆಂಬ ತುಡಿತ ಮಕ್ಕಳಲ್ಲಿರುತ್ತದೆ. ಶಾಲೆಯಿಂದ ಮನೆಗೆ ಬಂದೊಡನೆ, ಶಾಲೆಯಲ್ಲಿ ಇಲ್ಲವೇ ಅಲ್ಲಿಂದ ಬರುವಾಗ ದಾರಿಯಲ್ಲಿ ಏನಾಯಿತು ಎಂಬುದನ್ನು ತಾಯಿಗೆ ಆದಶ್ಟು ಬೇಗನೆ ತಿಳಿಸಿಬಿಡಬೇಕೆಂಬ ಆತುರದಲ್ಲಿ ಮಕ್ಕಳಿರುತ್ತಾರೆ. ಗೆಳೆಯರನ್ನು ಕಂಡೊಡನೆ ತಮಗೆ ತಿಳಿದಿರುವ ಹೊಸ ವಿಶಯವೊಂದನ್ನು ಅವರಿಗೆ ತಿಳಿಸುವ ಆತುರವೂ ಅವರಿಗಿರುತ್ತದೆ.

ತಮ್ಮ ಮನಸ್ಸಿನಲ್ಲಿರುವ ಇಂತಹ ವಿಶಯಗಳನ್ನು ಮಾತಿನ ಮೂಲಕ ಇನ್ನೊಬ್ಬರಿಗೆ ತಿಳಿಸುವ ಹಾಗೆ ಬರಹದ ಮೂಲಕವೂ ತಿಳಿಸಲು ಬರುತ್ತದೆ ಎಂಬುದನ್ನು ಅವರಿಗೆ ತೋರಿಸಿಕೊಟ್ಟಲ್ಲಿ, ಅವರು ಬಹಳ ಬೇಗನೆ ಬರವಣಿಗೆಯಲ್ಲಿ ಮುಂದೆ ಹೋಗುತ್ತಾರೆ. ಮೊದಲಿಗೆ ಅವರ ಹತ್ತಿರ ಮಾತಿನ ಮೂಲಕ ಒಂದು ವಿಶಯವನ್ನು ತಿಳಿಸಲು ಹೇಳಿ, ಅದನ್ನು ಕಲಿಸುವವರೇ ಬರೆದು ತೋರಿಸಬಹುದು, ಮತ್ತು ಹಾಗೆ ಬರೆದುದನ್ನು ಅವರಿಗೆ ಓದಲು ಕೊಡಬಹುದು. ಹೀಗೆ ಮಾಡುವುದರಿಂದ ಅವರಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟುತ್ತದೆ.

ಬರೆಯಲು ಕಲಿಯಬೇಕೆಂದಿರುವವರಿಗೆ ಎರಡು ಬಗೆಯ ಕಲಿಕೆಗಳು ನೆರವು ನೀಡಬಲ್ಲುವು: ಮೊದಲನೆಯದಾಗಿ, ಬರೆಯಲಿರುವ ವಿಶಯದ ಕುರಿತು ಅವರು ಏನೆಲ್ಲಾ ಹೇಳಬಲ್ಲರೋ ಅದನ್ನೆಲ್ಲ ಹೇಳಲು ಬಿಡಬೇಕು. ಇದರಿಂದ ಅವರಲ್ಲಿ ಆಲೋಚಿಸುವ ಕಸುವು ಬೆಳೆಯುತ್ತದೆ. ಎರಡನೆಯದಾಗಿ, ಅವರಿಗೆ ಬೇರೆ ಯಾವುದಾದರೂ ಬರಹವನ್ನು ಎತ್ತಿಬರೆಯಲು ಕಲಿಸಬೇಕು. ಹೀಗೆ ಬರೆಯುವಾಗ, ಅಂತಹ ಬರಹಗಳಲ್ಲಿ ಸೊಲ್ಲುಗಳನ್ನು ಮತ್ತು ಕುರಲುಗಳನ್ನು ಯಾವ ರೀತಿಯಲ್ಲಿ ಅಳವಡಿಸಲಾಗಿದೆ ಎಂಬುದನ್ನು ಅವರು ಗಮನಿಸುವ ಹಾಗೆಯೂ ಮಾಡಬೇಕು.

ಓದುವ ಮತ್ತು ಬರೆಯುವ ಕೆಲಸಗಳೆರಡೂ ಬಹಳ ಮಟ್ಟಿಗೆ ಒಂದನ್ನೊಂದು ಅವಲಂಬಿಸಿವೆ. ಹಾಗಾಗಿ, ಅವೆರಡನ್ನೂ ಮಕ್ಕಳು ಒಟ್ಟೊಟ್ಟಾಗಿ ಕಲಿತುಕೊಳ್ಳುವಂತೆ ಮಾಡಬೇಕು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಮಕ್ಕಳಿಗೆ ವ್ಯಾಕರಣ ಕಲಿಸಬೇಕೇ?

ನುಡಿಯರಿಮೆಯ ಇಣುಕುನೋಟ – 15

ಬೇಕು ಎನ್ನುತ್ತಿದ್ದಾರೆ ಇತ್ತೀಚೆಗೆ ಹಲವು ಮಂದಿ ತಿಳಿವಿಗರು; ಆದರೆ, ವ್ಯಾಕರಣವನ್ನು ಹಿಂದಿನ ಹಾಗೆ ಒಂದು ವಿಶಯವಾಗಿ ಕಲಿಸುವ ಬದಲು, ಮಕ್ಕಳ ಓದು ಮತ್ತು ಬರಹಗಳ ಕಲಿಕೆಗೆ ನೆರವಾಗುವ ಹಾಗೆ ನೇರವಲ್ಲದ ಬಗೆಯಲ್ಲಿ ಅದನ್ನು ಕಲಿಸಬೇಕು ಎಂಬುದು ಹೆಚ್ಚಿನ ತಿಳಿವಿಗರ ತೀರ‍್ಮಾನವಾಗಿದೆ.

ನಿಜಕ್ಕೂ ವ್ಯಾಕರಣದ ಕಟ್ಟಲೆಗಳನ್ನು ಮಕ್ಕಳಿಗೆ ಕಲಿಸುವುದು ತುಂಬಾ ತೊಡಕಿನ ಕೆಲಸ. ಯಾಕೆಂದರೆ, ಮೊದಲನೆಯದಾಗಿ, ಈ ಕಟ್ಟಲೆಗಳೆಲ್ಲ ತೊಡಕು ತೊಡಕಾದವುಗಳು; ಅವನ್ನು ವಿವರಿಸಲು ಬೇರೆಯೇ ಆದ ಅರಿಮೆಯ ಪದಗಳು ಬೇಕಾಗುತ್ತವೆ. ಇದಲ್ಲದೆ, ಅವುಗಳಲ್ಲಿ ಯಾವ ಕಟ್ಟಲೆಯೂ ಬೇರೆಯಾಗಿ ನಿಲ್ಲುವುದಿಲ್ಲ; ಎಲ್ಲವೂ ಒಂದರೊಡನೊಂದು ಹೆಣೆದಿರುತ್ತವೆ. ಹಾಗಾಗಿ, ವ್ಯಾಕರಣದ ಯಾವ ಕಟ್ಟಲೆಯನ್ನು ಕಲಿಸಬೇಕಿದ್ದರೂ, ಅದಕ್ಕೆ ಬೇರೆ ಕಟ್ಟಲೆಗಳೊಂದಿಗಿರುವ ಕೊಂಡಿಗಳನ್ನೂ ಕಲಿಸಿಕೊಡಬೇಕಾಗುತ್ತದೆ.

ಎರಡನೆಯದಾಗಿ, ವ್ಯಾಕರಣದ ಕಟ್ಟಲೆಗಳು ಓದಿಗೆ ಇಲ್ಲವೇ ಬರಹಕ್ಕೆ ಯಾವ ರೀತಿಯಲ್ಲಿ ನೆರವಿಗೆ ಬರಬಲ್ಲುವು ಎಂಬುದು ಅವನ್ನು ಕಲಿಯುವವರಿಗೆ ಸುಲಬವಾಗಿ ಗೊತ್ತಾಗುವುದಿಲ್ಲ, ಮತ್ತು ಅವು ಯಾಕೆ ಬೇಕಾಗುತ್ತವೆ ಎಂಬುದನ್ನು ತಿಳಿಯದವರಿಗೆ ಅವನ್ನು ಕಲಿಯುವಲ್ಲಿ ಯಾವ ಹುರುಪೂ ಇರುವುದಿಲ್ಲ. ಅವುಗಳ ಕಲಿಕೆ ಬರಿಯ ಒಂದು ಯಾಂತ್ರಿಕ ಕೆಲಸವಾಗಿಬಿಡುತ್ತದೆ.

ಹಿಂದಿನ ಕಾಲದ ಶಾಲೆಗಳಲ್ಲಿ ವ್ಯಾಕರಣವನ್ನು ಬೇರೆಯೇ ಒಂದು ವಿಶಯವಾಗಿ ಕಲಿಸಲಾಗುತ್ತಿತ್ತು, ಮತ್ತು ಈ ಕಾರಣದಿಂದಾಗಿ, ಅದೊಂದು ತುಂಬಾ ತೊಡಕು ತೊಡಕಾದ, ಮತ್ತು ತೀರಾ ಅನವಶ್ಯಕವಾದ ವಿಶಯವೆಂಬುದಾಗಿ ಅದನ್ನು ಕಲಿಯುವವರಿಗೆ ಮಾತ್ರವಲ್ಲ, ಅದನ್ನು ಕಲಿಸುವವರಿಗೂ ಅನಿಸುತ್ತಿತ್ತು. ಅಯ್ದಾರು ವರ‍್ಶ ಅದನ್ನು ಕಲಿಸಿದರೂ ಮಕ್ಕಳ ಓದಿನಲ್ಲಿ ಇಲ್ಲವೇ ಬರವಣಿಗೆಯಲ್ಲಿ ಅದರಿಂದಾಗಿ ಯಾವ ಮಾರ‍್ಪಾಡೂ ಉಂಟಾಗುವುದಿಲ್ಲ ಎಂಬುದನ್ನು ಸಂಶೋದನೆಗಳು ತೋರಿಸಿಕೊಟ್ಟುವು. ಇದನ್ನು ಗಮನಿಸಿದ ಹಲವು ತಿಳಿವಿಗರು ನುಡಿಯ ಕಲಿಕೆಗೆ ವ್ಯಾಕರಣದ ತಿಳಿವು ಬೇಕಾಗಿಲ್ಲ, ಮತ್ತು ಅದನ್ನು ಶಾಲೆಗಳಲ್ಲಿ ಕಲಿಸಬೇಕಾಗಿಲ್ಲ ಎಂಬ ತೀರ‍್ಮಾನಕ್ಕೆ ಬಂದಿದ್ದರು.

ಆದರೆ, ನಿಜಕ್ಕೂ ಇದೊಂದು ತಪ್ಪಾದ ತೀರ‍್ಮಾನವಾಗಿತ್ತು; ಯಾಕೆಂದರೆ, ಯಾವ ಕೆಲಸವೇ ಆಗಲಿ, ಅದನ್ನು ಜಾಣ್ಮೆಯಿಂದ ನಡೆಸಬೇಕೆಂದಿರುವವರಿಗೆ ಅದರ ಒಳಗುಟ್ಟಿನ ತಿಳಿವು ನೆರವಿಗೆ ಬಂದೇ ಬರುತ್ತದೆ. ಎತ್ತುಗೆಗಾಗಿ, ಕಾರನ್ನು ಓಡಿಸುವವರು ಅದರ ಬೇರೆ ಬೇರೆ ಅಂಗಗಳ ಗುರಿ, ಅವುಗಳ ಅಳವು-ನಲುವುಗಳು, ಅವುಗಳ ಕೆಲಸದ ಮೇಲೆ ಗಾಳಿ, ಮಳೆ, ಬಿಸಿಲು, ಮತ್ತು ದಾರಿಂii ಗೊತ್ತುಪಾಡುಗಳಿಂದ ಉಂಟಾಗಬಹುದಾದ ಅಡಚಣೆಗಳು ಮೊದಲಾದುವನ್ನು ಸರಿಯಾಗಿ ತಿಳಿದುಕೊಂಡಿರುವರಾದರೆ, ಆ ಕೆಲಸವನ್ನು ಅವರು ಹೆಚ್ಚು ಜಾಣ್ಮೆಯಿಂದ ನಡೆಸಬಲ್ಲರು.

ಓದುವ ಮತ್ತು ಬರೆಯುವ ಕೆಲಸಗಳೂ ಹೀಗೆಯೇ. ಅವುಗಳ ಒಳಗುಟ್ಟನ್ನು ತಿಳಿದುಕೊಂಡವರಿಗೆ ಅವನ್ನು ಹೆಚ್ಚು ಸುಳುವಾಗಿ ಮತ್ತು ಹೆಚ್ಚು ಚನ್ನಾಗಿ ನಡೆಸಲು ಬರುತ್ತದೆ. ಬರಹಗಳಲ್ಲಿ ಹಲವು ಬಗೆಗಳಿದ್ದು, ಅವನ್ನು ಓದಿ ತಿಳಿದುಕೊಳ್ಳುವಲ್ಲಿ ಇಲ್ಲವೇ ಅಂತಹವೇ ಬರಹಗಳನ್ನು ಹೊಸದಾಗಿ ಬರೆಯುವಲ್ಲಿ ಹಲವಾರು ಬಗೆಯ ವ್ಯಾಕರಣದ ಕಟ್ಟಲೆಗಳನ್ನು ಬಳಸಬೇಕಾಗುತ್ತದೆ; ಹಾಗಾಗಿ, ಅಂತಹ ಕಟ್ಟಲೆಗಳ ತಿಳಿವು ಈ ಕೆಲಸಗಳನ್ನು ಜಾಣ್ಮೆಯಿಂದ ನಡೆಸುವಲ್ಲಿ ನೆರವಾಗದಿರದು.

ಆದರೆ, ಮೇಲೆ ಸೂಚಿಸಿದ ಹಾಗೆ, ವ್ಯಾಕರಣದ ಕಟ್ಟಲೆಗಳನ್ನು ನೇರವಾಗಿ ಕಲಿಸಹೋಗದೆ, ಓದುವ ಮತ್ತು ಬರೆಯುವ ಕೆಲಸಗಳಲ್ಲಿ ಅವು ಹೇಗೆ ನೆರವಾಗುತ್ತವೆ ಎಂಬುದನ್ನು ತೋರಿಸಿಕೊಡುವ ಮೂಲಕ ಕಲಿಸಿದಲ್ಲಿ ಮಾತ್ರ ಅವು ಮಕ್ಕಳ ಓದು-ಬರಹದ ಕಲಿಕೆಯ ಮೇಲೆ ಪರಿಣಾಮವನ್ನು ಬೀರಬಲ್ಲುವು.

ಎತ್ತುಗೆಗಾಗಿ, ಕೆಲವು ಸೊಲ್ಲು(ವಾಕ್ಯ)ಗಳ ಹುರುಳೇನೆಂಬುದನ್ನು ತಿಳಿದುಕೊಳ್ಳುವಲ್ಲಿ ಮಕ್ಕಳಿಗೆ ತೊಂದರೆಯಾಗುತ್ತಿರಬಹುದು; ಅಂತಹ ಸೊಲ್ಲುಗಳಲ್ಲಿ ಮುಕ್ಯ ಅಂಶಗಳನ್ನು ಮುಕ್ಯವಲ್ಲದ ಅಂಶಗಳಿಂದ ಬೇರ‍್ಪಡಿಸುವುದು ಹೇಗೆ ಎಂಬುದನ್ನು ಮಕ್ಕಳಿಗೆ ತೋರಿಸಿಕೊಟ್ಟಲ್ಲಿ, ಅವರು ಅವುಗಳ ಹುರುಳನ್ನು ಸುಲಬವಾಗಿ ತಿಳಿದುಕೊಳ್ಳಬಲ್ಲರು. ಆದರೆ, ಸೊಲ್ಲುಗಳಲ್ಲಿ ಮುಕ್ಯ ಅಂಶ ಯಾವುದು ಮತ್ತು ಮುಕ್ಯವಲ್ಲದ ಅಂಶ ಯಾವುದು ಎಂಬುದನ್ನು ತೋರಿಸಿಕೊಡಬೇಕಾದರೆ, ಅವನ್ನು ಹೇಗೆ ಕಟ್ಟಲಾಗಿದೆ, ಅವುಗಳ ಒಳರಚನೆಯೆಂತಹದು ಎಂಬಂತಹ ವ್ಯಾಕರಣಕ್ಕೆ ಸಂಬಂದಿಸಿರುವ ಕಟ್ಟಲೆಗಳನ್ನು ಕಲಿಸಬೇಕಾಗುತ್ತದೆ.

ಇತ್ತೀಚೆಗೆ ಹೆಚ್ಚು ಹೆಚ್ಚು ಮಂದಿ ತಿಳಿವಿಗರು ಓದು-ಬರಹದ ಕಲಿಕೆಯಲ್ಲಿ ವ್ಯಾಕರಣದ ಕೊಡುಗೆ ನಿಜಕ್ಕೂ ತುಂಬ ದೊಡ್ಡದು ಎಂಬುದನ್ನು ಕಂಡುಕೊಳ್ಳುತ್ತಿದ್ದಾರೆ. ಮಕ್ಕಳು ತಾವು ಓದಿ ತಿಳಿದುಕೊಳ್ಳಬೇಕಾಗಿರುವ ಇಲ್ಲವೇ ಬರೆಯಬೇಕಾಗಿರುವ ಸೊಲ್ಲುಗಳ ಒಳರಚನೆಯೆಂತಹದು ಎಂಬುದನ್ನು ಗಮನಿಸುವ ಹಾಗೆ ಮಾಡಿದಲ್ಲಿ ಅವರಿಗೆ ಆ ಕೆಲಸವನ್ನು ನಡೆಸಲು ಹೆಚ್ಚು ಸುಲಬವಾಗುತ್ತದೆ ಎಂಬುದನ್ನೂ ಅವರು ಕಂಡುಕೊಳ್ಳುತ್ತಿದ್ದಾರೆ.

ಇಂತಹ ತಿಳುವಳಿಕೆ ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗಿಂತಲೂ ಹಿಂದೆ ಬೀಳುವ ಮಕ್ಕಳಿಗೆ ಹೆಚ್ಚು ನೆರವಾಗುತ್ತದೆ ಎಂಬುದನ್ನೂ ಕಂಡುಕೊಳ್ಳಲಾಗಿದೆ. ಎತ್ತುಗೆಗಾಗಿ, ಮಾತಿನಲ್ಲಿ ಬರುವ ಹಾಗೆ ತುಂಡು ತುಂಡಾಗಿರುವ ಸೊಲ್ಲುಗಳು ಬರಹದಲ್ಲಿ ಬರಬಾರದು; ಅವೆಲ್ಲ ಇಡಿ ಇಡಿಯಾಗಿರಬೇಕು; ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳನ್ನಾಗಿ ಮಾತ್ರ ಬಳಸಬಹುದು ಎಂದು ಹೇಳಿಕೊಟ್ಟಾಗ, ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗೆ ತಾವೇನು ಮಾಡಬೇಕು ಎಂಬುದು ಒಡನೆಯೇ ಗೊತ್ತಾಗುತ್ತದೆ.

ಆದರೆ, ತರಗತಿಯಲ್ಲಿ ಹಿಂದೆ ಬೀಳುವ ಮಕ್ಕಳಿಗೆ ಅದು ಗೊತ್ತಾಗುವುದಿಲ್ಲ. ಅವರಿಗೆ ಅದು ಗೊತ್ತಾಗುವ ಹಾಗೆ ಮಾಡಬೇಕಿದ್ದಲ್ಲಿ, ತುಂಡು ಸೊಲ್ಲುಗಳಿಗೂ ಇಡೀ ಸೊಲ್ಲುಗಳಿಗೂ ನಡುವಿರುವ ವ್ಯತ್ಯಾಸ ಎಂತಹದು ಎಂಬುದನ್ನು, ಮತ್ತು ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳಾಗಿ ಮಾಡಿ ಬಳಸುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕಾಗುತ್ತದೆ. ಎಂದರೆ, ಇಡಿಯಾಗಿರುವ ಸೊಲ್ಲುಗಳ ಒಳರಚನೆಯ ಹಿಂದಿರುವ ವ್ಯಾಕರಣದ ಕಟ್ಟಲೆಗಳನ್ನು ಅವರಿಗೆ ವಿವರಿಸಬೇಕಾಗುತ್ತದೆ.

ಕನ್ನಡದ ಮಟ್ಟಿಗೆ ಹೇಳುವುದಾದರೆ, ಇನ್ನೊಂದು ಸಮಸ್ಯೆಯೂ ವ್ಯಾಕರಣದ ಕಲಿಕೆಯನ್ನು ಕಾಡುತ್ತಿದೆ; ಅದೇನೆಂದರೆ, ಇವತ್ತು ಕನ್ನಡ ವ್ಯಾಕರಣದ ಹೊತ್ತಗೆಗಳಲ್ಲಿ ಕಾಣಿಸಿಕೊಳ್ಳುವ ಕಟ್ಟಲೆಗಳಲ್ಲಿ ಹೆಚ್ಚಿನವನ್ನೂ ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಯಾರಿಗೂ ಸಾದ್ಯವಾಗಲಾರದು. ಯಾಕೆಂದರೆ, ಈ ವ್ಯಾಕರಣಗಳನ್ನು ಬರೆದವರು ಸಂಸ್ಕ್ರುತ ವ್ಯಾಕರಣದಲ್ಲಿದ್ದ ಕಟ್ಟಲೆಗಳನ್ನು ಹಾಗೆಯೇ ಕನ್ನಡಕ್ಕೆ ತಂದುಹಾಕಿದ್ದಾರಲ್ಲದೆ, ನಿಜಕ್ಕೂ ಕನ್ನಡ ಪದಗಳ ಇಲ್ಲವೇ ಸೊಲ್ಲುಗಳ ಬಳಕೆಯ ಹಿಂದೆ ಎಂತಹ ಕಟ್ಟಲೆಗಳು ಅಡಗಿವೆ ಎಂಬುದನ್ನು ಕಂಡುಹಿಡಿಯುವ ಮೂಲಕ ಅವನ್ನು ಬರೆದಿಲ್ಲ.

ಹಾಗಾಗಿ, ಈ ಕಟ್ಟಲೆಗಳನ್ನು ಸಂಸ್ಕ್ರುತ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಬಹುದಲ್ಲದೆ, ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಲಾರದು. ಕನ್ನಡ ಬರಹಗಳಲ್ಲಿ ಕನ್ನಡದವೇ ಆದ ಬೇರೆಯೇ ಕಟ್ಟಲೆಗಳು ಬಳಕೆಯಾಗುತ್ತವೆ; ಈ ಕಟ್ಟಲೆಗಳು ಎಂತಹವು ಎಂಬುದನ್ನು ಇವತ್ತು ಕಂಡುಹಿಡಿಯಬೇಕಾಗಿದೆ, ಮತ್ತು ಮಕ್ಕಳ ಓದು-ಬರಹದ ಕಲಿಕೆಗೆ ಅವು ಹೇಗೆ ನೆರವಾಗಬಲ್ಲುವು ಎಂಬುದನ್ನೂ ಕಂಡುಹಿಡಿಯಬೇಕಾಗಿದೆ. ಈ ಎರಡು ಕೆಲಸಗಳನ್ನು ನಡೆಸಿದ ಮೇಲಶ್ಟೇ ಮಕ್ಕಳಿಗೆ ಅವರ ಓದಿನ ಮತ್ತು ಬರಹದ ಕಲಿಕೆಯಲ್ಲಿ ನೆರವಾಗುವ ಹಾಗೆ ಕನ್ನಡ ವ್ಯಾಕರಣದ ಕಟ್ಟಲೆಗಳನ್ನು ಕಲಿಸಲು ಸಾದ್ಯವಾಗಬಲ್ಲುದು.

ಮಾತಿನ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಮತ್ತು ಅನುಬವಗಳನ್ನು ಇನ್ನೊಬ್ಬರಿಗೆ ಹೇಗೆ ತಿಳಿಸುತ್ತೇವೆ, ಮತ್ತು ಇನ್ನೊಬ್ಬರು ಬಳಸಿದ ಮಾತುಗಳಿಂದ ಅವರ ಅನಿಸಿಕೆ ಮತ್ತು ಅನುಬವಗಳು ಎಂತಹವು ಎಂಬುದು ನಮಗೆ ಹೇಗೆ ಗೊತ್ತಾಗುತ್ತದೆ ಎಂಬುದನ್ನು ವ್ಯಾಕರಣ ತಿಳಿಸುತ್ತದೆ. ಮನುಶ್ಯನಲ್ಲಿ ಮಾತ್ರವೇ ಕಾಣಿಸಿಕೊಳ್ಳುವ ಈ ಒಂದು ವಿಶಿಶ್ಟವಾದ ಅಳವಿನ ಕುರಿತಾಗಿ ಏನು ಹೇಳಬೇಕಿದ್ದರೂ ವ್ಯಾಕರಣದಲ್ಲಿ ಬಳಕೆಯಾಗುವ ಅರಿಮೆಯ ಪದಗಳನ್ನು ಬಳಸಲೇಬೇಕಾಗುತ್ತದೆ. ಹಾಗಾಗಿ, ಮಕ್ಕಳಿಗೆ ಈ ಅರಿಮೆಯ ತಿಳಿವು ದೊರಕುವಂತೆ ಮಾಡುವುದು ಬೇರೆಲ್ಲಾ ಬಗೆಯ ಅರಿಮೆ(ವಿಜ್ನಾನ)ಗಳ ತಿಳಿವು ದೊರಕುವಂತೆ ಮಾಡುವಶ್ಟೇ ಮುಕ್ಯವಾದುದು.

ಹಾಗಾಗಿ, ಅದರ ತಿಳಿವನ್ನು ಮಕ್ಕಳಿಗೆ ಯಾವಾಗ ಮತ್ತು ಹೇಗೆ ಕೊಡಿಸಬಹುದು ಎಂಬ ವಿಶಯದಲ್ಲಿ ಚರ‍್ಚೆ ನಡೆಸಬಹುದಲ್ಲದೆ, ಅದು ಬೇಕೇ ಬೇಡವೇ ಎಂಬ ವಿಶಯದಲ್ಲಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಯಾವುದು ಕನ್ನಡ ವ್ಯಾಕರಣ?

ನುಡಿಯರಿಮೆಯ ಇಣುಕುನೋಟ – 12

ಕೇಶಿರಾಜನ ಕಾಲದಿಂದಲೂ ಕನ್ನಡ ಪಂಡಿತರು ಯಾವುದನ್ನು‘ಕನ್ನಡ ವ್ಯಾಕರಣ’ ಎಂಬುದಾಗಿ ಕರೆಯುತ್ತ ಬಂದಿದ್ದಾರೋ ಅದು ನಿಜಕ್ಕೂ ಕನ್ನಡದ ವ್ಯಾಕರಣವೇ ಅಲ್ಲ; ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳು ಕನ್ನಡದಲ್ಲೂ ಇರಬಹುದು, ಇಲ್ಲವೇ ಇರಬೇಕು ಎಂಬ ತಪ್ಪು ಕಲ್ಪನೆಯಲ್ಲಿ ಆ ಕಟ್ಟಲೆಗಳನ್ನು ಕನ್ನಡದಲ್ಲಿ ಕಾಣಲು ನಡೆಸಿದ ಒಂದು ವ್ಯರ‍್ತ ಪ್ರಯತ್ನ ಮಾತ್ರ.

ನಮ್ಮ ಶಾಲೆಗಳಲ್ಲಿ ಮಕ್ಕಳಿಗೆ ಇದೇ ಕನ್ನಡದ್ದಲ್ಲದ ವ್ಯಾಕರಣವನ್ನು ಕಲಿಸಲಾಗುತ್ತಿದೆ. ಅದನ್ನು ಯಾಕೆ ‘ಕನ್ನಡ ವ್ಯಾಕರಣ’ವೆಂದು ಕರೆಯಬೇಕು ಎಂಬುದನ್ನು ಮಕ್ಕಳೂ ತಿಳಿಯಲಾರರು, ಅದನ್ನು ಕಲಿಸುವ ಮಾಸ್ತರರೂ ತಿಳಿಸಿಕೊಡಲಾರರು. ಇನ್ನು ಅದರಿಂದ ಪ್ರಯೋಜನವನ್ನೇನಾದರೂ ಪಡೆಯುವುದಂತೂ ದೂರವೇ ಉಳಿಯಿತು.

ನಿಜಕ್ಕೂ ಈ ‘ವ್ಯಾಕರಣ’ ಎಂಬುದು ಏನು ಮಾಡಬೇಕು? ಒಂದು ನುಡಿಯಲ್ಲಿ ಬರುವ ಪದಗಳ ಒಳರಚನೆ ಎಂತಹದು, ಪದಗಳನ್ನು ಬಳಸಿ ಆ ನುಡಿಯಲ್ಲಿ ಸೊಲ್ಲು(ವಾಕ್ಯ)ಗಳನ್ನು ಉಂಟುಮಾಡುವುದು ಹೇಗೆ, ಮತ್ತು ಸೊಲ್ಲುಗಳನ್ನು ಬಳಸಿ ಅದರಲ್ಲಿ ಬರಹಗಳನ್ನು ಬರೆಯುವುದು ಹೇಗೆ ಎಂಬಂತಹ ಸೊಲ್ಲುಗಳ ಕುರಿತಾಗಿರುವ ತಿಳಿವನ್ನು ಅದು ನಮಗೆ ಒದಗಿಸಬೇಕು.
ಕನ್ನಡದ ಕುರಿತಾಗಿರುವ ಇಂತಹ ತಿಳಿವನ್ನು ನಾವು ಇಲ್ಲಿ ‘ಕನ್ನಡದ ಸೊಲ್ಲರಿಮೆ’ ಎಂದು ಕರೆಯೋಣ; ಯಾಕೆಂದರೆ, ‘ಕನ್ನಡ ವ್ಯಾಕರಣ’ ಎಂಬುದಕ್ಕೆ ಇವತ್ತು ಮೇಲೆ ವಿವರಿಸಿದಂತಹ ಬೇರೆಯೇ ಹುರುಳಿದೆ.

ಪಾಣಿನಿಯೇ ಮೊದಲಾದ ಸಂಸ್ಕ್ರುತದ ಪಂಡಿತರು ಆ ನುಡಿಯಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ, ಅವುಗಳ ಹಿಂದಿರುವ ಕಟ್ಟಲೆಗಳು ಎಂತಹವು ಎಂಬುದನ್ನು ಕಂಡುಹಿಡಿದಿದ್ದರು, ಮತ್ತು ಅಂತಹ ಕಟ್ಟಲೆಗಳನ್ನು ಒಟ್ಟುಗೂಡಿಸಿ, ಅದನ್ನು ‘ಸಂಸ್ಕ್ರುತ ವ್ಯಾಕರಣ’ ಎಂಬುದಾಗಿ ಕರೆದಿದ್ದರು; ಅಂತಹದೇ ಕೆಲಸವನ್ನು ಇವತ್ತು ನಾವು ಕನ್ನಡದಲ್ಲಿ ನಡೆಸಬೇಕಾಗಿದೆ.
ಸೊಲ್ಲುಗಳನ್ನು ಕಟ್ಟುವ ಬಗೆ ಸಂಸ್ಕ್ರುತದಲ್ಲಿರುವುದಕ್ಕಿಂತ ಕನ್ನಡದಲ್ಲಿ ತೀರ ಬೇರಾಗಿದೆ; ಹಾಗಾಗಿ, ಸಂಸ್ಕ್ರುತ ವ್ಯಾಕರಣದಲ್ಲಿ ಬರುವ ಕಟ್ಟಲೆಗಳಿಗಿಂತ ತೀರ ಬೇರಾಗಿರುವ ಕಟ್ಟಲೆಗಳು ‘ಕನ್ನಡದ ಸೊಲ್ಲರಿಮೆ’ಯಲ್ಲಿ ಬರಬೇಕಾಗುತ್ತದೆ.

ಸಂಸ್ಕ್ರುತದಲ್ಲಿ ಎರಡು (ಇಲ್ಲವೇ ಹೆಚ್ಚು) ಪದಗಳನ್ನು ಒಟ್ಟುಸೇರಿಸಿ ಹೊಸಪದವನ್ನು ಉಂಟುಮಾಡುವ ಹೊಲಬನ್ನು ‘ಸಮಾಸ’ ಎಂಬುದಾಗಿ ಕರೆಯಲಾಗುತ್ತದೆ; ನಾಮಪದಗಳನ್ನು ಮಾತ್ರ ಈ ರೀತಿ ಸಂಸ್ಕ್ರುತದಲ್ಲಿ ಒಟ್ಟುಸೇರಿಸಲು ಬರುತ್ತದೆ. ಹಾಗಾಗಿ, ಒಟ್ಟುಸೇರಿಸಿದ ಪದಗಳಲ್ಲಿ ಯಾವುದು ಮುಕ್ಯ ಎಂಬುದರ ಮೇಲೆ ಈ ಸಮಾಸಗಳನ್ನು ತತ್ಪುರುಶ (ಎರಡನೆಯದು ಮುಕ್ಯ), ಅವ್ಯಯೀಬಾವ (ಮೊದಲನೆಯದು ಮುಕ್ಯ), ದ್ವಂದ್ವ (ಎರಡೂ ಮುಕ್ಯ) ಮತ್ತು ಬಹುವ್ರೀಹಿ (ಎರಡೂ ಮುಕ್ಯವಲ್ಲ, ಬೇರೊಂದು ಪದ ಮುಕ್ಯ) ಎಂಬ ನಾಲ್ಕು ಬಗೆಗಳಲ್ಲಿ ಗುಂಪಿಸಬಹುದೆಂದು ಸಂಸ್ಕ್ರುತ ವ್ಯಾಕರಣಗಳು ಹೇಳುತ್ತವೆ.

ಆದರೆ, ಕನ್ನಡದಲ್ಲಿ ಎರಡು ಪದಗಳನ್ನು ಒಟ್ಟುಸೇರಿಸಿ ಹೊಸದೊಂದು ಪದವನ್ನು ಉಂಟುಮಾಡುವ ಬಗೆ ಇದರಿಂದ ತೀರ ಬೇರಾದುದು. ನಾಮಪದ, ಕ್ರಿಯಾಪದ, ಮತ್ತು ಗುಣಪದಗಳೆಂಬ ಮೂರು ಬಗೆಯ ಪದಗಳನ್ನು ಇಂತಹ ಹೊಸಪದಗಳ ಮೊದಲನೆಯ ಪದವಾಗಿ ಬಳಸಲು ಬರುತ್ತದೆ; ಅವುಗಳ ಎರಡನೆಯ ಪದ ಮಾತ್ರ ಯಾವಾಗಲೂ ಹೆಸರುಪದವಾಗಿರುತ್ತದೆ.

ಕಯ್ಮಗ್ಗ, ಬಯಲಾಟ, ನೆಲಗಡಲೆ ಎಂಬಂತಹ ಪದಗಳಲ್ಲಿ ಎರಡು ನಾಮಪದಗಳು ಒಟ್ಟುಸೇರಿವೆ; ಕಡೆಗೋಲು, ಸಿಡಿಮದ್ದು, ಬಿಚ್ಚುಕತ್ತಿ ಎಂಬಂತಹ ಪದಗಳಲ್ಲಿ ಕ್ರಿಯಾಪದ ಮತ್ತು ನಾಮಪದಗಳು ಒಟ್ಟುಸೇರಿವೆ (ಕಡೆ, ಸಿಡಿ ಮತ್ತು ಬಿಚ್ಚು ಎಂಬವು ಕ್ರಿಯಾಪದಗಳು); ಬಿಸಿನೀರು, ದೊಡ್ಡಮ್ಮ, ಬೆಳ್ಳುಳ್ಳಿ ಎಂಬಂತಹ ಪದಗಳಲ್ಲಿ ಗುಣಪದ ಮತ್ತು ನಾಮಪದಗಳು ಒಟ್ಟುಸೇರಿವೆ.
ಹಾಗಾಗಿ, ಕನ್ನಡದಲ್ಲಿ ಬರುವ ‘ಸಮಾಸ’ ಯಾವ ಬಗೆಯದು ಎಂಬುದನ್ನು ತಿಳಿಯಬೇಕಿದ್ದಲ್ಲಿ ಅಂತಹ ಹೊಸಪದಗಳಲ್ಲಿ ಮೊದಲಿಗೆ ಯಾವ ಬಗೆಯ ಪದ ಬಂದಿದೆ ಎಂಬುದನ್ನು ತಿಳಿಯಬೇಕಲ್ಲದೆ, ಸಂಸ್ಕ್ರುತದ ಹಾಗೆ ಯಾವ ಪದ ಮುಕ್ಯ ಎಂಬುದನ್ನಲ್ಲ.

ಇಂಗ್ಲಿಶ್‌ನಂತಹ ಬೇರೆ ನುಡಿಗಳಿಂದ ಹೊಸ ಹೊಸ ವಿಶಯಗಳನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕಾಗಿ ಹಲವಾರು ಹೊಸ ಪದಗಳನ್ನು ಕನ್ನಡದಲ್ಲಿ ಉಂಟುಮಾಡಿಕೊಳ್ಳಬೇಕಾಗುತ್ತದೆ. ನಿಜಕ್ಕೂ ಕನ್ನಡ ಪದಗಳ ಒಳರಚನೆಯೆಂತಹದು ಎಂಬುದನ್ನು ತಿಳಿದವರು ಮಾತ್ರ ಈ ಕೆಲಸವನ್ನು ಸರಿಯಾಗಿ ನಡೆಸಬಲ್ಲರು.

ಸಂಸ್ಕ್ರುತ ಪದಗಳ ಒಳರಚನೆಯೇ ಕನ್ನಡ ಪದಗಳಿಗೂ ಇದೆ ಎಂಬ ತಪ್ಪು ತಿಳಿವನ್ನು ‘ಕನ್ನಡ ವ್ಯಾಕರಣ’ಗಳಿಂದ ಪಡೆದಿರುವ ಕನ್ನಡ ಪಂಡಿತರಿಗೆ ಇಂತಹ ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡುವುದು ಹೇಗೆ ಎಂಬುದು ಗೊತ್ತೇ ಇರುವುದಿಲ್ಲ. ಹಾಗಾಗಿ, ಹೊಸಪದಗಳು ಬೇಕಾದಾಗಲೆಲ್ಲ ಅವರು ಅವನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡದೊಳಗೆ ತುರುಕುತ್ತಾರೆ, ಮತ್ತು ಸಂಸ್ಕ್ರುತದ ನೆರವಿಲ್ಲದೆ ಕನ್ನಡದಲ್ಲಿ ಹೊಸಪದಗಳನ್ನು ಉಂಟುಮಾಡಲು ಸಾದ್ಯವೇ ಇಲ್ಲ ಎಂಬ ತಪ್ಪು ತೀರ‍್ಮಾನಕ್ಕೆ ಬರುತ್ತಾರೆ.

ಕ್ರಿಯಾಪದಗಳನ್ನು ನಾಮಪದಗಳೊಂದಿಗೆ ಸೇರಿಸಿ ಹೊಸಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಲು ಬರುವುದಿಲ್ಲವಾದರೂ ಕನ್ನಡದಲ್ಲಿ ಬರುತ್ತದೆ ಎಂಬ ಕನ್ನಡದ್ದೇ ಆದ ಸೊಲ್ಲರಿಮೆಯ ಕಟ್ಟಲೆಯನ್ನು ತಿಳಿದವರಿಗೆ ನೂರಾರು ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಇಂಗುಗುಂಡಿ, ಇಡುಗಂಟು, ಇಳಿನೀರು, ಉಜ್ಜುಗಾಯ, ಉಬ್ಬುಗನ್ನಡಿ, ಕಟ್ಟುಪಟ್ಟಿ, ಕರೆಸಾಲ, ತಡೆಯೋಟ, ತೇಲುಮನೆ, ತಳ್ಳುಗುಂಡಿ ಮೊದಲಾದ ಇಂತಹ ಪದಗಳು ಕನ್ನಡ ಬರಹದಲ್ಲೂ ತುಂಬಾ ಚನ್ನಾಗಿ ಹೊಂದಿಕೊಳ್ಳುತ್ತವೆ.

ಕನ್ನಡದ ಆಡುನುಡಿಗಳಲ್ಲಿಯೂ ಈ ಹೊಲಬನ್ನು ಬಳಸಿ ಉಂಟುಮಾಡಿರುವ ತುಂಬುಕಡಬು, ಬಿಚ್ಚೋಲೆ, ತೂಗುದೀಪ ಎಂಬಂತಹ ಹಲವಾರು ಪದಗಳು ಬಳಕೆಯಲ್ಲಿವೆ; ಆದರೆ, ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳೇ ಕನ್ನಡದಲ್ಲೂ ಇವೆಯೆಂಬುದಾಗಿ ಬ್ರಮಿಸುವ ‘ಕನ್ನಡ ವ್ಯಾಕರಣ’ಗಳಿಂದಾಗಿ ದಾರಿತಪ್ಪಿರುವ ಕನ್ನಡ ಪಂಡಿತರು ತಮ್ಮಲ್ಲಿ ಸ್ವಾಬಾವಿಕವಾಗಿ ಬೆಳೆದುಬಂದಿರಬಹುದಾದ ಈ ತಾಯ್ನುಡಿಯ ಅಳವನ್ನೇ ಕಳೆದುಕೊಂಡಿದ್ದಾರೆ.

ಸಂಸ್ಕ್ರುತದ ವಾಕ್ಯಗಳಲ್ಲಿ ಏಳು ವಿಬಕ್ತಿಗಳು ಬಳಕೆಯಾಗುತ್ತವೆ ಎಂಬುದನ್ನು ಸಂಸ್ಕ್ರುತದ ಪಂಡಿತರು ಕಂಡುಕೊಂಡಿದ್ದಾರೆ; ಕನ್ನಡದ ಸೊಲ್ಲುಗಳನ್ನು ಪರಿಶೀಲಿಸಿದೆವಾದರೆ, ಅವುಗಳಲ್ಲಿ ಬರುವ ಪದಗಳಿಗೆ ಒಟ್ಟು ನಾಲ್ಕು ವಿಬಕ್ತಿರೂಪಗಳು ಮಾತ್ರ ಕಾಣಿಸುತ್ತವಲ್ಲದೆ, ಏಳು ವಿಬಕ್ತಿ ರೂಪಗಳು ಕಾಣಿಸುವುದಿಲ್ಲ; ಹಾಗಿರುವಾಗ, ಸಂಸ್ಕ್ರುತದ ಹಾಗೆ ಕನ್ನಡದಲ್ಲೂ ಏಳು ವಿಬಕ್ತಿಗಳಿರಬೇಕು ಎಂದು ಬ್ರಮಿಸಿ, ಅವನ್ನು ಕಾಣಲು ಪ್ರಯತ್ನಿಸುವ ‘ಕನ್ನಡದ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕನ್ನಡದಲ್ಲಿ ಮೂರು ಕಾಲಗಳಿವೆಯೆಂದು ‘ಕನ್ನಡ ವ್ಯಾಕರಣ’ಗಳು ಹೇಳುತ್ತವೆ; ಇದರಂತೆ, ಮಾಡುತ್ತೇನೆ ಎಂಬ ರೂಪ ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಬೇಕು, ಮತ್ತು ಮಾಡುವೆನು ಎಂಬ ರೂಪ ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸಬೇಕು.

ಆದರೆ, ನಿಜಕ್ಕೂ ಕನ್ನಡದಲ್ಲಿ ನಾಳೆ ಮಾಡುತ್ತೇನೆ, ಬರುವ ವರ‍್ಶ ಮಾಡುತ್ತೇನೆ ಎಂಬಂತಹ ಸೊಲ್ಲುಗಳಲ್ಲಿ ಕಾಣಿಸುವ ಹಾಗೆ, ಮಾಡುತ್ತೇನೆ ಎಂಬುದು ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸುತ್ತದೆ; ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಲು ಮಾಡುತ್ತಿದ್ದೇನೆ ಎಂಬ ಮಾಡು ಪದಕ್ಕೆ ಇರು ಪದವನ್ನು ಸೇರಿಸಿರುವ ಬೇರೆಯೇ ಪದರೂಪವನ್ನು ಬಳಸಲಾಗುತ್ತದೆ. ಇಂತಹ ಕಣ್ಣಿಗೆ ಹೊಡೆದು ಕಾಣಿಸುವಂತಹ ತಪ್ಪುಗಳಿರುವ ‘ಕನ್ನಡ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?

ಕಂಪ್ಯೂಟರ್‌ಗಳನ್ನು ಬಳಸಿ ಒಂದು ನುಡಿಯ ಸೊಲ್ಲುಗಳನ್ನು ಇನ್ನೊಂದು ನುಡಿಗೆ ಅನುವಾದಿಸಲು ಬರುತ್ತದೆ; ಆದರೆ, ಹೀಗೆ ಮಾಡಬೇಕಿದ್ದಲ್ಲಿ, ಆ ಎರಡು ನುಡಿಗಳ ವಿವರವಾದ ಸೊಲ್ಲರಿಮೆಗಳನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಬೇಕಾಗುತ್ತದೆ. ಇಂಗ್ಲಿಶ್ ನುಡಿಗೆ ಈಗಾಗಲೇ ಸಾಕಶ್ಟು ವಿವರವಾದ ವ್ಯಾಕರಣವನ್ನು ಬರೆಯಲಾಗಿದ್ದು, ಅದನ್ನು ಕಂಪ್ಯೂಟರ್‌ಗಳಿಗೆ ಒದಗಿಸಿಕೊಡಲಾಗಿದೆ; ಕನ್ನಡಕ್ಕೂ ಇಂತಹದೊಂದು ವಿವರವಾದ ಸೊಲ್ಲರಿಮೆಯನ್ನು ಬರೆದಲ್ಲಿ, ಇಂಗ್ಲಿಶ್ ಬರಹಗಳನ್ನು ಕನ್ನಡಕ್ಕೆ ಅನುವಾದಿಸುವಲ್ಲಿಯೂ ಕಂಪ್ಯೂಟರನ್ನು ಬಳಸಲು ಸಾದ್ಯವಾಗಬಹುದು.

ಆದರೆ, ಇಂತಹ ಕೆಲಸಕ್ಕೆ ಸಂಸ್ಕ್ರುತ ವ್ಯಾಕರಣವನ್ನೇ ‘ಕನ್ನಡ ವ್ಯಾಕರಣ’ವೆಂದು ಬ್ರಮಿಸುವ ಕೇಶಿರಾಜನ ಕನ್ನಡ ವ್ಯಾಕರಣವಾಗಲಿ, ಇವತ್ತು ಶಾಲೆಗಳಲ್ಲಿ ಕಲಿಸುವ ‘ಕನ್ನಡ ವ್ಯಾಕರಣ’ವಾಗಲಿ ಯಾವ ನೆರವನ್ನೂ ನೀಡಲಾರದು. ಕನ್ನಡದಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಬಲ್ಲ ‘ಕನ್ನಡದ ಸೊಲ್ಲರಿಮೆ’ಯೊಂದೇ ಈ ಕೆಲಸದಲ್ಲಿ ನೆರವನ್ನು ನೀಡಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter