ನುಡಿಯರಿಮೆಯ ಇಣುಕುನೋಟ – 29
ಕನ್ನಡದ ಯಾವ ಪದವನ್ನು ಬೇಕಿದ್ದರೂ ಸಂಸ್ಕ್ರುತದ ಪದಗಳಿಂದ ಬಂದುವೆಂಬುದಾಗಿ ತೋರಿಸಿಕೊಡಬಲ್ಲೆವು ಎಂಬ ನಂಬಿಕೆ ಕೆಲವರಲ್ಲಿದೆ; ಹೀಗೆ ತೋರಿಸಿಕೊಡುವುದಕ್ಕಾಗಿ ಅವರು ಪದಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಕಾಣಿಸುವ ಹೋಲಿಕೆಗಳನ್ನು ಮಾತ್ರವಲ್ಲದೆ ಹಲವಾರು ಬಗೆಯ ಕಯ್ಚಳಕಗಳನ್ನೂ ಬಳಸುತ್ತಾರೆ.
ಈ ಕಯ್ಚಳಕಗಳ ಮೂಲಕ ಅವರು ಉಲಿ ಇಲ್ಲವೇ ಹುರುಳುಗಳಲ್ಲಿ ಹೋಲಿಕೆಗಳು ಕಾಣಿಸದಿದ್ದರೂ ಸಂಬಂದವನ್ನು ಕಾಣಬಲ್ಲರು; ಎತ್ತುಗೆಗಾಗಿ, ಕನ್ನಡದ ‘ನೆತ್ತರು’ ಪದವನ್ನು ಸಂಸ್ಕ್ರುತದ ‘ರುಧಿರ’ ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯಿದ್ದರೂ ಉಲಿಯ ಹೋಲಿಕೆ ತುಂಬಾ ಕಡಿಮೆ; ಕನ್ನಡದ ‘ಕಟ್ಟೆ’ ಪದವನ್ನು ಸಂಸ್ಕ್ರುತದ ‘ಕಕ್ಷಾ’ (ಕಂಕುಳು) ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯೂ ತುಂಬಾ ಕಡಿಮೆ. ಹೀಗಿದ್ದರೂ, ಕಯ್ಚಳಕಗಳ ಮೂಲಕ ಅವರು ಇವನ್ನು ಒಂದಕ್ಕೊಂದು ಜೋಡಿಸಿ ಬಿಡುತ್ತಾರೆ. ಇಂತಹ ಕಯ್ಚಳಕಗಳು ಅವರಿಗೆ ತಮ್ಮ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನೆರವಾಗುತ್ತವೆಯಾದರೂ, ನಿಜಕ್ಕೂ ಆ ಪದಗಳ ಹಿನ್ನಡವಳಿ (ಚರಿತ್ರೆ) ಎಂತಹದು ಎಂಬುದನ್ನು ತಿಳಿದುಕೊಳ್ಳುವಲ್ಲಿ ಅವು ಯಾವ ನೆರವನ್ನೂ ನೀಡುವುದಿಲ್ಲ.
ಕನ್ನಡದ ಪದಗಳು ಎರಡು ಬಗೆಗಳಲ್ಲಿ ಸಂಸ್ಕ್ರುತ ಪದಗಳೊಂದಿಗೆ ಸಂಬಂದಿಸಿರಬಲ್ಲುವು: ಅವೆರಡೂ ಒಂದೇ ನುಡಿಕುಟುಂಬದ ನುಡಿಗಳೆಂಬುದೊಂದು ಬಗೆ, ಮತ್ತು ಅವುಗಳಲ್ಲಿ ಒಂದು ಇನ್ನೊಂದರಿಂದ ಪದಗಳನ್ನು ಎರವಲು ಪಡೆದಿದೆಯೆಂಬುದಿನ್ನೊಂದು ಬಗೆ. ಹಾಗಾಗಿ, ಯಾವ ಬಗೆಯ ಸಂಬಂದವನ್ನು ಅವುಗಳ ಪದಗಳ ನಡುವೆ ಕಾಣಲಾಗುತ್ತದೆ ಎಂಬುದನ್ನು ಮೊದಲು ತಿಳಿಸಬೇಕಾಗುತ್ತದೆ.
ನುಡಿಗಳಲ್ಲಿ ಕಾಲದಿಂದ ಕಾಲಕ್ಕೆ ಹಲವು ಬಗೆಯ ಮಾರ್ಪಾಡುಗಳು ನಡೆಯುತ್ತಲೇ ಇರುತ್ತವೆ; ಇವು ಉಲಿಗಳನ್ನು ಮಾರ್ಪಡಿಸಬಹುದು, ಪದಗಳನ್ನು ಇಲ್ಲವೇ ಅವುಗಳ ಹುರುಳುಗಳನ್ನು ಮಾರ್ಪಡಿಸಬಹುದು, ಮತ್ತು ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳನ್ನು ಮಾರ್ಪಡಿಸಬಹುದು. ಇಂತಹ ಹಲವು ಬಗೆಯ ಮಾರ್ಪಾಡುಗಳು ನಡೆದುದರಿಂದಾಗಿ ಹಳೆಗನ್ನಡವಿದ್ದುದು ನಡುಗನ್ನಡವಾಗಿ ಇವತ್ತು ಹೊಸಗನ್ನಡವಾಗಿದೆ, ಮತ್ತು ಹೊಸಗನ್ನಡವೂ ಹಲವು ಬಗೆಯ ಆಡುನುಡಿಗಳಾಗಿ ಒಡೆದುಕೊಂಡಿದೆ.
ಕಾಲದಿಂದ ಕಾಲಕ್ಕೆ ನಡೆಯುವ ಇಂತಹ ಮಾರ್ಪಾಡುಗಳಲ್ಲಿ ನುಡಿಯ ಉಲಿಗಳಲ್ಲಿ ನಡೆಯುವ ಮಾರ್ಪಾಡುಗಳೇ ತುಂಬಾ ಮುಕ್ಯವಾದವುಗಳು; ಯಾಕೆಂದರೆ, ಅವುಗಳಿಂದಾಗಿ ಪದಗಳ ಮತ್ತು ಒಟ್ಟು(ಪ್ರತ್ಯಯ)ಗಳ ರೂಪದಲ್ಲಿ ಮಾತ್ರವಲ್ಲದೆ, ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲೂ ಮಾರ್ಪಾಡುಗಳು ನಡೆಯುತ್ತವೆ. ಕನ್ನಡದ ಹಿನ್ನಡವಳಿಯಲ್ಲಿ ಇಂತಹ ಹಲವು ಬಗೆಯ ಉಲಿಗಳ ಮಾರ್ಪಾಡುಗಳು ನಡೆದಿವೆ.
ಹಳೆಗನ್ನಡದ ಪಕಾರ ಹಕಾರವಾಗಿರುವುದು (ಪಾಲು>ಹಾಲು, ಪಳೆ>ಹಳೆ, ಪೋಗು>ಹೋಗು); ರ-ಱ, ಳ-ೞಗಳ ನಡುವಿನ ವ್ಯತ್ಯಾಸ ಇಲ್ಲವಾಗಿರುವುದು, ಉದ್ದ ತೆರೆಯುಲಿ (ಸ್ವರ) ಮತ್ತು ತಡೆಯುಲಿ(ಸ್ಪರ್ಶ)ಗಳ ನಡುವಿನ ಮೂಗುಲಿ (ಅನುನಾಸಿಕ) ಬಿದ್ದುಹೋಗಿರುವುದು (ನೂಂಕು>ನೂಕು, ದಾಂಟು>ದಾಟು) ಮೊದಲಾದುವು ಇಂತಹ ಉಲಿಗಳ ಮಾರ್ಪಾಡುಗಳು.
ಇವು ಉಲಿಗಳ ಮಾರ್ಪಾಡುಗಳಲ್ಲದೆ ಪದಗಳ ಮಾರ್ಪಾಡುಗಳಲ್ಲ ಎಂಬುದನ್ನು ಗಮನಿಸುವುದು ಅವಶ್ಯ; ಪಕಾರ ಹಕಾರವಾಗುವಂತಹ ಒಂದು ಮಾರ್ಪಾಡು ನಡೆದಾಗ, ಪಕಾರವಿದ್ದ ಎಲ್ಲಾ (ಸಾವಿರಕ್ಕಿಂತಲೂ ಹೆಚ್ಚು) ಪದಗಳೂ ಅದಕ್ಕೆ ಒಳಗಾಗಿರುತ್ತವೆ. ಇಂತಹ ಮಾರ್ಪಾಡುಗಳು ಒಂದು ಉಲಿಯನ್ನು ಎಲ್ಲೆಡೆಗಳಲ್ಲೂ ತಾಗಬಹುದು, ಇಲ್ಲವೇ ಕೆಲವೆಡೆಗಳಲ್ಲಿ ಮಾತ್ರ ತಾಗಬಹುದು; ಪಕಾರ ಹಕಾರವಾಗುವ ಮಾರ್ಪಾಡು ಪಕಾರವನ್ನು ಎಲ್ಲೆಡೆಗಳಲ್ಲೂ ತಾಗಿದೆ; ಆದರೆ, ಎಕಾರ ಇಕಾರವಾಗುವ ಇನ್ನೊಂದು ಮಾರ್ಪಾಡು ಎಕಾರದ ಬಳಿಕ ಒತ್ತೆ ಮುಚ್ಚುಲಿ (ವ್ಯಂಜನ) ಮತ್ತು ಇಕಾರ ಇಲ್ಲವೇ ಉಕಾರ ಬಂದಿರುವಲ್ಲಿ ಮಾತ್ರ ನಡೆದಿದೆ, ಬೇರೆಡೆಗಳಲ್ಲಿ ಎಕಾರ ಮಾರ್ಪಡದೆ ಉಳಿದಿದೆ (ಬಿಳಿ, ಬಿಸಿ, ನಿಡು ಎಂಬಂತಹ ಪದಗಳಲ್ಲಿ ಈ ಮಾರ್ಪಾಡು ನಡೆದಿದೆ. ಆದರೆ ಬೆಳ್ಳಗೆ, ಬೆಚ್ಚಗೆ, ನೆಟ್ಟಗೆ ಎಂಬಂತಹ ಪದಗಳಲ್ಲಿ ನಡೆದಿಲ್ಲ). ಇದಲ್ಲದೆ, ಇಂತಹ ಮಾರ್ಪಾಡುಗಳಿಗೆಲ್ಲ ಒಂದು ಗಡುವಿರುತ್ತದೆ; ಈ ಗಡುವು ಮುಗಿದ ಮೇಲೆ ಹಿಂದಿನ ಬರಹಗಳಿಂದ (ಪಾಲು, ಪುಟ್ಟ, ಪೆಟ್ಟು) ಇಲ್ಲವೇ ಬೇರೆ ನುಡಿಗಳಿಂದ (ಪಾಪ, ಪುಣ್ಯ, ಪೂಜೆ) ಪದಗಳು ಎರವಲಾಗಿ ಬಂದು ಈ ಮಾರ್ಪಾಡಿಗೆ ಹೊರಪಡಿಕೆಗಳಾಗಿ ಕಾಣಿಸಬಲ್ಲುವು.
ಎರಡು ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ತೀರ್ಮಾನಿಸುವಲ್ಲೆಲ್ಲ ಇಂತಹ ಉಲಿಗಳ ಮಾರ್ಪಾಡುಗಳನ್ನೇ ಮುಕ್ಯವಾದ ನೆಲೆಯಾಗಿ ಬಳಸಿಕೊಳ್ಳಲಾಗುತ್ತದೆ. ಯಾಕೆಂದರೆ, ನುಡಿಗಳಲ್ಲಿ ನಡೆಯುವ ಹಲವು ಬಗೆಯ ಮಾರ್ಪಾಡುಗಳಲ್ಲಿ ಉಲಿಗಳ ಮಾರ್ಪಾಡುಗಳ ಮೇಲೆ ಮಾತ್ರ ಪದಗಳ ಹುರುಳುಗಳು ಯಾವ ಪ್ರಬಾವವನ್ನೂ ಬೀರುವುದಿಲ್ಲ; ನೇರವಾಗಿ ಪದಗಳಲ್ಲಿ ಇಲ್ಲವೇ ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲಿ ನಡೆಯುವ ಮಾರ್ಪಾಡುಗಳ ಮೇಲೆ ಅವು ಹಲವು ಬಗೆಗಳಲ್ಲಿ ಪ್ರಬಾವವನ್ನು ಬೀರುತ್ತವೆ, ಮತ್ತು ಈ ರೀತಿ ಹುರುಳುಗಳಿಂದ ಪ್ರಬಾವಿತವಾಗಿರುವ ಮಾರ್ಪಾಡುಗಳನ್ನು ಕಚಿತವಾದ ಕಟ್ಟಲೆಗಳಲ್ಲಿ ಸೆರೆಹಿಡಿಯಲು ಬರುವುದಿಲ್ಲ; ಯಾಕೆಂದರೆ, ಹುರುಳುಗಳಿಂದ ಪ್ರಬಾವಿತವಾದ ಮಾರ್ಪಾಡುಗಳಿಗೆ ಹಲವಾರು ಬಗೆಯ ಹೊರಪಡಿಕೆಗಳಿರುತ್ತವೆ.
ಹಾಗಾಗಿ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂಬ ತೀರ್ಮಾನಕ್ಕೆ ಬರಬೇಕಿದ್ದಲ್ಲಿ ಕನ್ನಡದ ಹಿನ್ನಡವಳಿಯಲ್ಲಿ ನಡೆದ ಉಲಿಗಳ ಮಾರ್ಪಾಡುಗಳನ್ನೇ ಮುಕ್ಯ ನೆಲೆಯಾಗಿ ಬಳಸಿಕೊಳ್ಳಬೇಕಾಗುತ್ತದೆ. ಎಂದರೆ, ಕನ್ನಡ ಮತ್ತು ಸಂಸ್ಕ್ರುತ ಪದಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಕನ್ನಡದ ಹಿನ್ನಡವಳಿಯಲ್ಲಿ ನಡೆದಿದ್ದ ಹಲವು ಬಗೆಯ ಉಲಿಗಳ ಮಾರ್ಪಾಡುಗಳಿಂದಾಗಿ ಮೂಡಿಬಂದಿವೆ ಎಂಬುದಾಗಿ ತೋರಿಸಿಕೊಡಲು ಸಾದ್ಯವಾದಾಗ ಮಾತ್ರ ಕನ್ನಡ ಸಂಸ್ಕ್ರುತದಿಂದ ಬೆಳೆದುಬಂದಿದೆ ಎಂಬುದನ್ನು ಒಪ್ಪಿಕೊಳ್ಳಲು ಬರುತ್ತದೆ. ಆದರೆ, ಇದುವರೆಗೆ ಯಾರಿಗೂ ಆ ರೀತಿ ತೋರಿಸಿಕೊಡಲು ಸಾದ್ಯವಾಗಿಲ್ಲ.
ಹಾಗಾಗಿ, ಸದ್ಯಕ್ಕಂತೂ ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿಲ್ಲವೆಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ, ಮತ್ತು ಕನ್ನಡದಲ್ಲಿ ಮೂಲದ್ರಾವಿಡ ನುಡಿಯಿಂದ ಬಂದ ಕನ್ನಡದವೇ ಆದ ಪದಗಳು, ಮತ್ತು ಸಂಸ್ಕ್ರುತವೇ ಮೊದಲಾದ ಬೇರೆ ನುಡಿಗಳಿಂದ ಎರವಲಾಗಿ ಬಂದ ಪದಗಳು ಎಂಬುದಾಗಿ ಎರಡು ಬಗೆಯ ಪದಗಳು ಇವೆಯೆಂಬುದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ.
ಕನ್ನಡದ ಪದಗಳಿಗೂ ಸಂಸ್ಕ್ರುತದ ಪದಗಳಿಗೂ ನಡುವೆ ಅವುಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಹೋಲಿಕೆಯಿದೆಯಾದರೆ, ಅದಕ್ಕೆ ಹಲವು ಕಾರಣಗಳಿರಬಲ್ಲುವು. ಎತ್ತುಗೆಗಾಗಿ, ಈ ಎಲ್ಲಾ ಪದಗಳನ್ನೂ ಉಂಟುಮಾಡಿದವರು ಮಾನವರೇ ಎಂಬುದೊಂದು ಕಾರಣ; ಹೋಲಿಕೆ ಬರಿಯ ಆಕಸ್ಮಿಕವಾಗಿರಬಹುದೆಂಬುದಿನ್ನೊಂದು ಕಾರಣ. ಹಾಗಾಗಿ, ಒಂದು ನುಡಿ ಇನ್ನೊಂದರಿಂದ ಎರವಲು ಪಡೆದಿದೆಯೆಂಬುದು ಪದಗಳ ನಡುವಿರುವ ಹೋಲಿಕೆಗಳಿಗಿರುವ ಹಲವು ಕಾರಣಗಳಲ್ಲಿ ಒಂದು ಮಾತ್ರ. ಇದಲ್ಲದೆ, ಇಲ್ಲಿಯೂ ಒಂದು ಪದವನ್ನು ಯಾವ ನುಡಿ ಯಾವ ನುಡಿಯಿಂದ ಎರವಲಾಗಿ ಪಡೆದಿದೆ ಎಂಬುದನ್ನು ತೀರ್ಮಾನಿಸುವಲ್ಲಿ ಅರಕೆಗೆ ನೆಲೆಯಿದೆ.
ಸಾಮಾನ್ಯವಾಗಿ, ಒಂದು ಪದದ ಹರಹು ಎಂತಹದು ಎಂಬುದರ ಮೇಲೆ ಅದರ ಹಿನ್ನಡವಳಿಯೆಂತಹದು ಎಂಬುದನ್ನು ತೀರ್ಮಾನಿಸಲಾಗುತ್ತದೆ; ಎತ್ತುಗೆಗಾಗಿ, ಕನ್ನಡದ ಒಂದು ಪದಕ್ಕೆ ಸಮಾನವಾದ ಪದಗಳು ತಮಿಳು, ತೆಲುಗು, ಗೋಂಡಿ, ಕುಡುಕ್ ಮೊದಲಾದ ಬೇರೆ ಹಲವು ದ್ರಾವಿಡ ನುಡಿಗಳಲ್ಲೂ ಕಾಣಿಸಿಕೊಳ್ಳುತ್ತಿವೆಯಾದರೆ, ಮತ್ತು ಸಂಸ್ಕ್ರುತವನ್ನು ಹೊರತುಪಡಿಸಿ ಉಳಿದ ಲ್ಯಾಟಿನ್, ಗ್ರೀಕ್, ಪರ್ಶಿಯನ್ ಮೊದಲಾದ ಇಂಡೋ-ಯುರೋಪಿಯನ್ ನುಡಿಗಳಲ್ಲಿ ಕಾಣಿಸುವುದಿಲ್ಲವಾದರೆ, ಅದು ಕನ್ನಡದ್ದೇ ಆದ ಪದ, ಮತ್ತು ಸಂಸ್ಕ್ರುತಕ್ಕೇನೇ ಅದು ದ್ರಾವಿಡ ನುಡಿಗಳಿಂದ ಎರವಲಾಗಿ ಬಂದಿದೆ ಎಂದು ಹೇಳಬೇಕಾಗುತ್ತದೆ.
ಇಂತಹ ಅರಕೆಗಳನ್ನು ನಡೆಸದೆ ಬರಿಯ ಹೋಲಿಕೆಯ ಮೇಲೆ ಎಲ್ಲವೂ ಸಂಸ್ಕ್ರುತದಿಂದ ಬಂದಿವೆಯೆಂದು ಹೇಳುವುದನ್ನು ಒಂದು ಅರಿಮೆಯ ಹೇಳಿಕೆಯೆಂದು ತಿಳಿಯಲು ಬರುವುದಿಲ್ಲ.
(ಈ ಬರಹ ವಿಜಯ ಕರ್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)
ನುಡಿಯರಿಮೆಯ ಇಣುಕುನೋಟ – 12
ಕೇಶಿರಾಜನ ಕಾಲದಿಂದಲೂ ಕನ್ನಡ ಪಂಡಿತರು ಯಾವುದನ್ನು‘ಕನ್ನಡ ವ್ಯಾಕರಣ’ ಎಂಬುದಾಗಿ ಕರೆಯುತ್ತ ಬಂದಿದ್ದಾರೋ ಅದು ನಿಜಕ್ಕೂ ಕನ್ನಡದ ವ್ಯಾಕರಣವೇ ಅಲ್ಲ; ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳು ಕನ್ನಡದಲ್ಲೂ ಇರಬಹುದು, ಇಲ್ಲವೇ ಇರಬೇಕು ಎಂಬ ತಪ್ಪು ಕಲ್ಪನೆಯಲ್ಲಿ ಆ ಕಟ್ಟಲೆಗಳನ್ನು ಕನ್ನಡದಲ್ಲಿ ಕಾಣಲು ನಡೆಸಿದ ಒಂದು ವ್ಯರ್ತ ಪ್ರಯತ್ನ ಮಾತ್ರ.
ನಮ್ಮ ಶಾಲೆಗಳಲ್ಲಿ ಮಕ್ಕಳಿಗೆ ಇದೇ ಕನ್ನಡದ್ದಲ್ಲದ ವ್ಯಾಕರಣವನ್ನು ಕಲಿಸಲಾಗುತ್ತಿದೆ. ಅದನ್ನು ಯಾಕೆ ‘ಕನ್ನಡ ವ್ಯಾಕರಣ’ವೆಂದು ಕರೆಯಬೇಕು ಎಂಬುದನ್ನು ಮಕ್ಕಳೂ ತಿಳಿಯಲಾರರು, ಅದನ್ನು ಕಲಿಸುವ ಮಾಸ್ತರರೂ ತಿಳಿಸಿಕೊಡಲಾರರು. ಇನ್ನು ಅದರಿಂದ ಪ್ರಯೋಜನವನ್ನೇನಾದರೂ ಪಡೆಯುವುದಂತೂ ದೂರವೇ ಉಳಿಯಿತು.
ನಿಜಕ್ಕೂ ಈ ‘ವ್ಯಾಕರಣ’ ಎಂಬುದು ಏನು ಮಾಡಬೇಕು? ಒಂದು ನುಡಿಯಲ್ಲಿ ಬರುವ ಪದಗಳ ಒಳರಚನೆ ಎಂತಹದು, ಪದಗಳನ್ನು ಬಳಸಿ ಆ ನುಡಿಯಲ್ಲಿ ಸೊಲ್ಲು(ವಾಕ್ಯ)ಗಳನ್ನು ಉಂಟುಮಾಡುವುದು ಹೇಗೆ, ಮತ್ತು ಸೊಲ್ಲುಗಳನ್ನು ಬಳಸಿ ಅದರಲ್ಲಿ ಬರಹಗಳನ್ನು ಬರೆಯುವುದು ಹೇಗೆ ಎಂಬಂತಹ ಸೊಲ್ಲುಗಳ ಕುರಿತಾಗಿರುವ ತಿಳಿವನ್ನು ಅದು ನಮಗೆ ಒದಗಿಸಬೇಕು.
ಕನ್ನಡದ ಕುರಿತಾಗಿರುವ ಇಂತಹ ತಿಳಿವನ್ನು ನಾವು ಇಲ್ಲಿ ‘ಕನ್ನಡದ ಸೊಲ್ಲರಿಮೆ’ ಎಂದು ಕರೆಯೋಣ; ಯಾಕೆಂದರೆ, ‘ಕನ್ನಡ ವ್ಯಾಕರಣ’ ಎಂಬುದಕ್ಕೆ ಇವತ್ತು ಮೇಲೆ ವಿವರಿಸಿದಂತಹ ಬೇರೆಯೇ ಹುರುಳಿದೆ.
ಪಾಣಿನಿಯೇ ಮೊದಲಾದ ಸಂಸ್ಕ್ರುತದ ಪಂಡಿತರು ಆ ನುಡಿಯಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ, ಅವುಗಳ ಹಿಂದಿರುವ ಕಟ್ಟಲೆಗಳು ಎಂತಹವು ಎಂಬುದನ್ನು ಕಂಡುಹಿಡಿದಿದ್ದರು, ಮತ್ತು ಅಂತಹ ಕಟ್ಟಲೆಗಳನ್ನು ಒಟ್ಟುಗೂಡಿಸಿ, ಅದನ್ನು ‘ಸಂಸ್ಕ್ರುತ ವ್ಯಾಕರಣ’ ಎಂಬುದಾಗಿ ಕರೆದಿದ್ದರು; ಅಂತಹದೇ ಕೆಲಸವನ್ನು ಇವತ್ತು ನಾವು ಕನ್ನಡದಲ್ಲಿ ನಡೆಸಬೇಕಾಗಿದೆ.
ಸೊಲ್ಲುಗಳನ್ನು ಕಟ್ಟುವ ಬಗೆ ಸಂಸ್ಕ್ರುತದಲ್ಲಿರುವುದಕ್ಕಿಂತ ಕನ್ನಡದಲ್ಲಿ ತೀರ ಬೇರಾಗಿದೆ; ಹಾಗಾಗಿ, ಸಂಸ್ಕ್ರುತ ವ್ಯಾಕರಣದಲ್ಲಿ ಬರುವ ಕಟ್ಟಲೆಗಳಿಗಿಂತ ತೀರ ಬೇರಾಗಿರುವ ಕಟ್ಟಲೆಗಳು ‘ಕನ್ನಡದ ಸೊಲ್ಲರಿಮೆ’ಯಲ್ಲಿ ಬರಬೇಕಾಗುತ್ತದೆ.
ಸಂಸ್ಕ್ರುತದಲ್ಲಿ ಎರಡು (ಇಲ್ಲವೇ ಹೆಚ್ಚು) ಪದಗಳನ್ನು ಒಟ್ಟುಸೇರಿಸಿ ಹೊಸಪದವನ್ನು ಉಂಟುಮಾಡುವ ಹೊಲಬನ್ನು ‘ಸಮಾಸ’ ಎಂಬುದಾಗಿ ಕರೆಯಲಾಗುತ್ತದೆ; ನಾಮಪದಗಳನ್ನು ಮಾತ್ರ ಈ ರೀತಿ ಸಂಸ್ಕ್ರುತದಲ್ಲಿ ಒಟ್ಟುಸೇರಿಸಲು ಬರುತ್ತದೆ. ಹಾಗಾಗಿ, ಒಟ್ಟುಸೇರಿಸಿದ ಪದಗಳಲ್ಲಿ ಯಾವುದು ಮುಕ್ಯ ಎಂಬುದರ ಮೇಲೆ ಈ ಸಮಾಸಗಳನ್ನು ತತ್ಪುರುಶ (ಎರಡನೆಯದು ಮುಕ್ಯ), ಅವ್ಯಯೀಬಾವ (ಮೊದಲನೆಯದು ಮುಕ್ಯ), ದ್ವಂದ್ವ (ಎರಡೂ ಮುಕ್ಯ) ಮತ್ತು ಬಹುವ್ರೀಹಿ (ಎರಡೂ ಮುಕ್ಯವಲ್ಲ, ಬೇರೊಂದು ಪದ ಮುಕ್ಯ) ಎಂಬ ನಾಲ್ಕು ಬಗೆಗಳಲ್ಲಿ ಗುಂಪಿಸಬಹುದೆಂದು ಸಂಸ್ಕ್ರುತ ವ್ಯಾಕರಣಗಳು ಹೇಳುತ್ತವೆ.
ಆದರೆ, ಕನ್ನಡದಲ್ಲಿ ಎರಡು ಪದಗಳನ್ನು ಒಟ್ಟುಸೇರಿಸಿ ಹೊಸದೊಂದು ಪದವನ್ನು ಉಂಟುಮಾಡುವ ಬಗೆ ಇದರಿಂದ ತೀರ ಬೇರಾದುದು. ನಾಮಪದ, ಕ್ರಿಯಾಪದ, ಮತ್ತು ಗುಣಪದಗಳೆಂಬ ಮೂರು ಬಗೆಯ ಪದಗಳನ್ನು ಇಂತಹ ಹೊಸಪದಗಳ ಮೊದಲನೆಯ ಪದವಾಗಿ ಬಳಸಲು ಬರುತ್ತದೆ; ಅವುಗಳ ಎರಡನೆಯ ಪದ ಮಾತ್ರ ಯಾವಾಗಲೂ ಹೆಸರುಪದವಾಗಿರುತ್ತದೆ.
ಕಯ್ಮಗ್ಗ, ಬಯಲಾಟ, ನೆಲಗಡಲೆ ಎಂಬಂತಹ ಪದಗಳಲ್ಲಿ ಎರಡು ನಾಮಪದಗಳು ಒಟ್ಟುಸೇರಿವೆ; ಕಡೆಗೋಲು, ಸಿಡಿಮದ್ದು, ಬಿಚ್ಚುಕತ್ತಿ ಎಂಬಂತಹ ಪದಗಳಲ್ಲಿ ಕ್ರಿಯಾಪದ ಮತ್ತು ನಾಮಪದಗಳು ಒಟ್ಟುಸೇರಿವೆ (ಕಡೆ, ಸಿಡಿ ಮತ್ತು ಬಿಚ್ಚು ಎಂಬವು ಕ್ರಿಯಾಪದಗಳು); ಬಿಸಿನೀರು, ದೊಡ್ಡಮ್ಮ, ಬೆಳ್ಳುಳ್ಳಿ ಎಂಬಂತಹ ಪದಗಳಲ್ಲಿ ಗುಣಪದ ಮತ್ತು ನಾಮಪದಗಳು ಒಟ್ಟುಸೇರಿವೆ.
ಹಾಗಾಗಿ, ಕನ್ನಡದಲ್ಲಿ ಬರುವ ‘ಸಮಾಸ’ ಯಾವ ಬಗೆಯದು ಎಂಬುದನ್ನು ತಿಳಿಯಬೇಕಿದ್ದಲ್ಲಿ ಅಂತಹ ಹೊಸಪದಗಳಲ್ಲಿ ಮೊದಲಿಗೆ ಯಾವ ಬಗೆಯ ಪದ ಬಂದಿದೆ ಎಂಬುದನ್ನು ತಿಳಿಯಬೇಕಲ್ಲದೆ, ಸಂಸ್ಕ್ರುತದ ಹಾಗೆ ಯಾವ ಪದ ಮುಕ್ಯ ಎಂಬುದನ್ನಲ್ಲ.
ಇಂಗ್ಲಿಶ್ನಂತಹ ಬೇರೆ ನುಡಿಗಳಿಂದ ಹೊಸ ಹೊಸ ವಿಶಯಗಳನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕಾಗಿ ಹಲವಾರು ಹೊಸ ಪದಗಳನ್ನು ಕನ್ನಡದಲ್ಲಿ ಉಂಟುಮಾಡಿಕೊಳ್ಳಬೇಕಾಗುತ್ತದೆ. ನಿಜಕ್ಕೂ ಕನ್ನಡ ಪದಗಳ ಒಳರಚನೆಯೆಂತಹದು ಎಂಬುದನ್ನು ತಿಳಿದವರು ಮಾತ್ರ ಈ ಕೆಲಸವನ್ನು ಸರಿಯಾಗಿ ನಡೆಸಬಲ್ಲರು.
ಸಂಸ್ಕ್ರುತ ಪದಗಳ ಒಳರಚನೆಯೇ ಕನ್ನಡ ಪದಗಳಿಗೂ ಇದೆ ಎಂಬ ತಪ್ಪು ತಿಳಿವನ್ನು ‘ಕನ್ನಡ ವ್ಯಾಕರಣ’ಗಳಿಂದ ಪಡೆದಿರುವ ಕನ್ನಡ ಪಂಡಿತರಿಗೆ ಇಂತಹ ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡುವುದು ಹೇಗೆ ಎಂಬುದು ಗೊತ್ತೇ ಇರುವುದಿಲ್ಲ. ಹಾಗಾಗಿ, ಹೊಸಪದಗಳು ಬೇಕಾದಾಗಲೆಲ್ಲ ಅವರು ಅವನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡದೊಳಗೆ ತುರುಕುತ್ತಾರೆ, ಮತ್ತು ಸಂಸ್ಕ್ರುತದ ನೆರವಿಲ್ಲದೆ ಕನ್ನಡದಲ್ಲಿ ಹೊಸಪದಗಳನ್ನು ಉಂಟುಮಾಡಲು ಸಾದ್ಯವೇ ಇಲ್ಲ ಎಂಬ ತಪ್ಪು ತೀರ್ಮಾನಕ್ಕೆ ಬರುತ್ತಾರೆ.
ಕ್ರಿಯಾಪದಗಳನ್ನು ನಾಮಪದಗಳೊಂದಿಗೆ ಸೇರಿಸಿ ಹೊಸಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಲು ಬರುವುದಿಲ್ಲವಾದರೂ ಕನ್ನಡದಲ್ಲಿ ಬರುತ್ತದೆ ಎಂಬ ಕನ್ನಡದ್ದೇ ಆದ ಸೊಲ್ಲರಿಮೆಯ ಕಟ್ಟಲೆಯನ್ನು ತಿಳಿದವರಿಗೆ ನೂರಾರು ಹೊಸಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಇಂಗುಗುಂಡಿ, ಇಡುಗಂಟು, ಇಳಿನೀರು, ಉಜ್ಜುಗಾಯ, ಉಬ್ಬುಗನ್ನಡಿ, ಕಟ್ಟುಪಟ್ಟಿ, ಕರೆಸಾಲ, ತಡೆಯೋಟ, ತೇಲುಮನೆ, ತಳ್ಳುಗುಂಡಿ ಮೊದಲಾದ ಇಂತಹ ಪದಗಳು ಕನ್ನಡ ಬರಹದಲ್ಲೂ ತುಂಬಾ ಚನ್ನಾಗಿ ಹೊಂದಿಕೊಳ್ಳುತ್ತವೆ.
ಕನ್ನಡದ ಆಡುನುಡಿಗಳಲ್ಲಿಯೂ ಈ ಹೊಲಬನ್ನು ಬಳಸಿ ಉಂಟುಮಾಡಿರುವ ತುಂಬುಕಡಬು, ಬಿಚ್ಚೋಲೆ, ತೂಗುದೀಪ ಎಂಬಂತಹ ಹಲವಾರು ಪದಗಳು ಬಳಕೆಯಲ್ಲಿವೆ; ಆದರೆ, ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳೇ ಕನ್ನಡದಲ್ಲೂ ಇವೆಯೆಂಬುದಾಗಿ ಬ್ರಮಿಸುವ ‘ಕನ್ನಡ ವ್ಯಾಕರಣ’ಗಳಿಂದಾಗಿ ದಾರಿತಪ್ಪಿರುವ ಕನ್ನಡ ಪಂಡಿತರು ತಮ್ಮಲ್ಲಿ ಸ್ವಾಬಾವಿಕವಾಗಿ ಬೆಳೆದುಬಂದಿರಬಹುದಾದ ಈ ತಾಯ್ನುಡಿಯ ಅಳವನ್ನೇ ಕಳೆದುಕೊಂಡಿದ್ದಾರೆ.
ಸಂಸ್ಕ್ರುತದ ವಾಕ್ಯಗಳಲ್ಲಿ ಏಳು ವಿಬಕ್ತಿಗಳು ಬಳಕೆಯಾಗುತ್ತವೆ ಎಂಬುದನ್ನು ಸಂಸ್ಕ್ರುತದ ಪಂಡಿತರು ಕಂಡುಕೊಂಡಿದ್ದಾರೆ; ಕನ್ನಡದ ಸೊಲ್ಲುಗಳನ್ನು ಪರಿಶೀಲಿಸಿದೆವಾದರೆ, ಅವುಗಳಲ್ಲಿ ಬರುವ ಪದಗಳಿಗೆ ಒಟ್ಟು ನಾಲ್ಕು ವಿಬಕ್ತಿರೂಪಗಳು ಮಾತ್ರ ಕಾಣಿಸುತ್ತವಲ್ಲದೆ, ಏಳು ವಿಬಕ್ತಿ ರೂಪಗಳು ಕಾಣಿಸುವುದಿಲ್ಲ; ಹಾಗಿರುವಾಗ, ಸಂಸ್ಕ್ರುತದ ಹಾಗೆ ಕನ್ನಡದಲ್ಲೂ ಏಳು ವಿಬಕ್ತಿಗಳಿರಬೇಕು ಎಂದು ಬ್ರಮಿಸಿ, ಅವನ್ನು ಕಾಣಲು ಪ್ರಯತ್ನಿಸುವ ‘ಕನ್ನಡದ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?
ಕನ್ನಡದಲ್ಲಿ ಮೂರು ಕಾಲಗಳಿವೆಯೆಂದು ‘ಕನ್ನಡ ವ್ಯಾಕರಣ’ಗಳು ಹೇಳುತ್ತವೆ; ಇದರಂತೆ, ಮಾಡುತ್ತೇನೆ ಎಂಬ ರೂಪ ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಬೇಕು, ಮತ್ತು ಮಾಡುವೆನು ಎಂಬ ರೂಪ ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸಬೇಕು.
ಆದರೆ, ನಿಜಕ್ಕೂ ಕನ್ನಡದಲ್ಲಿ ನಾಳೆ ಮಾಡುತ್ತೇನೆ, ಬರುವ ವರ್ಶ ಮಾಡುತ್ತೇನೆ ಎಂಬಂತಹ ಸೊಲ್ಲುಗಳಲ್ಲಿ ಕಾಣಿಸುವ ಹಾಗೆ, ಮಾಡುತ್ತೇನೆ ಎಂಬುದು ಮುಂದೆ ನಡೆಯಲಿರುವ ಕೆಲಸವನ್ನು ತಿಳಿಸುತ್ತದೆ; ಈಗ ನಡೆಯುತ್ತಿರುವ ಕೆಲಸವನ್ನು ತಿಳಿಸಲು ಮಾಡುತ್ತಿದ್ದೇನೆ ಎಂಬ ಮಾಡು ಪದಕ್ಕೆ ಇರು ಪದವನ್ನು ಸೇರಿಸಿರುವ ಬೇರೆಯೇ ಪದರೂಪವನ್ನು ಬಳಸಲಾಗುತ್ತದೆ. ಇಂತಹ ಕಣ್ಣಿಗೆ ಹೊಡೆದು ಕಾಣಿಸುವಂತಹ ತಪ್ಪುಗಳಿರುವ ‘ಕನ್ನಡ ವ್ಯಾಕರಣ’ ಕನ್ನಡದ್ದಾಗುವುದು ಹೇಗೆ?
ಕಂಪ್ಯೂಟರ್ಗಳನ್ನು ಬಳಸಿ ಒಂದು ನುಡಿಯ ಸೊಲ್ಲುಗಳನ್ನು ಇನ್ನೊಂದು ನುಡಿಗೆ ಅನುವಾದಿಸಲು ಬರುತ್ತದೆ; ಆದರೆ, ಹೀಗೆ ಮಾಡಬೇಕಿದ್ದಲ್ಲಿ, ಆ ಎರಡು ನುಡಿಗಳ ವಿವರವಾದ ಸೊಲ್ಲರಿಮೆಗಳನ್ನು ಕಂಪ್ಯೂಟರ್ಗಳಿಗೆ ಒದಗಿಸಿಕೊಡಬೇಕಾಗುತ್ತದೆ. ಇಂಗ್ಲಿಶ್ ನುಡಿಗೆ ಈಗಾಗಲೇ ಸಾಕಶ್ಟು ವಿವರವಾದ ವ್ಯಾಕರಣವನ್ನು ಬರೆಯಲಾಗಿದ್ದು, ಅದನ್ನು ಕಂಪ್ಯೂಟರ್ಗಳಿಗೆ ಒದಗಿಸಿಕೊಡಲಾಗಿದೆ; ಕನ್ನಡಕ್ಕೂ ಇಂತಹದೊಂದು ವಿವರವಾದ ಸೊಲ್ಲರಿಮೆಯನ್ನು ಬರೆದಲ್ಲಿ, ಇಂಗ್ಲಿಶ್ ಬರಹಗಳನ್ನು ಕನ್ನಡಕ್ಕೆ ಅನುವಾದಿಸುವಲ್ಲಿಯೂ ಕಂಪ್ಯೂಟರನ್ನು ಬಳಸಲು ಸಾದ್ಯವಾಗಬಹುದು.
ಆದರೆ, ಇಂತಹ ಕೆಲಸಕ್ಕೆ ಸಂಸ್ಕ್ರುತ ವ್ಯಾಕರಣವನ್ನೇ ‘ಕನ್ನಡ ವ್ಯಾಕರಣ’ವೆಂದು ಬ್ರಮಿಸುವ ಕೇಶಿರಾಜನ ಕನ್ನಡ ವ್ಯಾಕರಣವಾಗಲಿ, ಇವತ್ತು ಶಾಲೆಗಳಲ್ಲಿ ಕಲಿಸುವ ‘ಕನ್ನಡ ವ್ಯಾಕರಣ’ವಾಗಲಿ ಯಾವ ನೆರವನ್ನೂ ನೀಡಲಾರದು. ಕನ್ನಡದಲ್ಲಿ ಸೊಲ್ಲುಗಳನ್ನು ಹೇಗೆ ಉಂಟುಮಾಡಲಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಬಲ್ಲ ‘ಕನ್ನಡದ ಸೊಲ್ಲರಿಮೆ’ಯೊಂದೇ ಈ ಕೆಲಸದಲ್ಲಿ ನೆರವನ್ನು ನೀಡಬಲ್ಲುದು.
(ಈ ಬರಹ ವಿಜಯ ಕರ್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)