Posts Tagged ‘Sanskrit’

ನುಡಿಗಳ ನಡುವಿನ ನಂಟಸ್ತಿಕೆ

ನುಡಿಯರಿಮೆಯ ಇಣುಕುನೋಟ – 18

ಜನರ ನಡುವೆ ಕಾಣಿಸುವ ಹಾಗೆ, ಅವರಾಡುವ ನುಡಿಗಳನಡುವೆಯೂ ‘ನಂಟಸ್ತಿಕೆ’ಯನ್ನು ಕಾಣಲು ಸಾದ್ಯವಿದೆ. ಕೆಲವು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆಯೆಂದು ಹೇಳಬಹುದು, ಮತ್ತು ಬೇರೆ ಕೆಲವು ನುಡಿಗಳ ನಡುವೆ ದೂರದ ನಂಟಸ್ತಿಕೆ ಮಾತ್ರ ಇದೆಯೆಂದು ಹೇಳಬಹುದು. ಆದರೆ, ಇನ್ನು ಕೆಲವು ನುಡಿಗಳ ನಡುವೆ ಯಾವ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳಲು ಬರುವುದಿಲ್ಲ. ಹಾಗೆ ಹೇಳಲು ಯಾವ ಆದಾರವೂ ದೊರಕದಿರುವುದೇ ಇದಕ್ಕೆ ಕಾರಣ.

ಎತ್ತುಗೆಗಾಗಿ, ಕನ್ನಡ ಮತ್ತು ತಮಿಳು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಕನ್ನಡ ಮತ್ತು ತುಳು ನುಡಿಗಳ ನಡುವೆ ಇದಕ್ಕಿಂತ ಸ್ವಲ್ಪ ದೂರದ ನಂಟಸ್ತಿಕೆಯಿದೆ. ಇದೇ ರೀತಿಯಲ್ಲಿ, ಹಿಂದಿ ಮತ್ತು ಮರಾಟಿ ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಹಿಂದಿ ಮತ್ತು ಇಂಗ್ಲಿಶ್ ನುಡಿಗಳ ನಡುವೆ ದೂರದ ನಂಟಸ್ತಿಕೆಯಿದೆ. ಆದರೆ ಕನ್ನಡ ಮತ್ತು ಹಿಂದಿ ನುಡಿಗಳ ನಡುವೆ, ಇಲ್ಲವೇ ಕನ್ನಡ ಮತ್ತು ಇಂಗ್ಲಿಶ್ ನುಡಿಗಳ ನಡುವೆ, ಹತ್ತಿರದ್ದಾಗಲಿ ದೂರದ್ದಾಗಲಿ ಯಾವುದೇ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳುವುದಕ್ಕೆ ಯಾವ ಆದಾರವೂ ದೊರಕುವುದಿಲ್ಲ.

ನುಡಿಗಳ ನಡುವಿನ ನಂಟಸ್ತಿಕೆಯನ್ನು ಜನರ ನಡುವಿನ ನಂಟಸ್ತಿಕೆಯ ಹಾಗೆ ಅವುಗಳ ಹುಟ್ಟು ಮತ್ತು ಬೆಳವಣಿಗೆಗಳ ಆದಾರದ ಮೇಲೆ ಕಲ್ಪಿಸಿಕೊಳ್ಳಲಾಗಿದೆ. ಆದರೆ, ಜನರ ಹುಟ್ಟಿಗೂ ನುಡಿಗಳ ಹುಟ್ಟಿಗೂ ನಡುವೆ ಹಲವು ವ್ಯತ್ಯಾಸಗಳಿವೆ. ಎತ್ತುಗೆಗಾಗಿ, ಜನರಲ್ಲಿ ಹೆಣ್ಣು-ಗಂಡುಗಳ ಕೂಡಿಕೆಯಿಂದ ಮಗು ಹುಟ್ಟುತ್ತದೆ; ಆದರೆ ನುಡಿಗಳಲ್ಲಿ ಆ ರೀತಿ ಎರಡು ನುಡಿಗಳ ಕೂಡಿಕೆಯಿಂದ ಮೂರನೆಯ ನುಡಿ ಹುಟ್ಟಿಕೊಳ್ಳುವುದಿಲ್ಲ; ಒಂದು ನುಡಿಯಿದ್ದದ್ದು ಇನ್ನೊಂದು ನುಡಿಯಾಗಿ ಬದಲಾಗುತ್ತದೆ, ಇಲ್ಲವೇ ಎರಡು ನುಡಿಗಳಾಗಿ ಒಡೆದುಕೊಳ್ಳುತ್ತದೆ.

ಎತ್ತುಗೆಗಾಗಿ, ಸಂಸ್ಕ್ರುತ ನುಡಿ ಇವತ್ತಿನ ಮರಾಟಿ ನುಡಿಯಾಗಿ ಬದಲಾಗಿದೆಯೆಂದು ಹೇಳಬಹುದು; ಇಲ್ಲವೇ ಅದೇ ನುಡಿ ಮರಾಟಿ, ಕೊಂಕಣಿ, ಹಿಂದಿ, ಗುಜರಾತಿ, ಪಂಜಾಬಿ, ಬಂಗಾಲಿ ಮೊದಲಾದ ಇವತ್ತಿನ ಹಲವು ನುಡಿಗಳಾಗಿ ಒಡೆದುಕೊಂಡಿದೆಯೆಂದೂ ಹೇಳಬಹುದು. ಆದರೆ, ಇದೇ ರೀತಿಯಲ್ಲಿ ಸಂಸ್ಕ್ರುತ ನುಡಿ ಕನ್ನಡ ನುಡಿಯಾಗಿ ಬದಲಾಗಿದೆಯೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳ ನಡುವೆ ಅವುಗಳ ಪದಗಳಲ್ಲಿ ಮತ್ತು ವ್ಯಾಕರಣ ನಿಯಮಗಳಲ್ಲಿ ಹಲವು ಬುಡಕಟ್ಟಿನ ವ್ಯತ್ಯಾಸಗಳಿವೆ. ಈ ಎಲ್ಲಾ ವ್ಯತ್ಯಾಸಗಳೂ ಹೇಗೆ ಉಂಟಾಗಿವೆ ಎಂಬುದನ್ನು ವಿವರಿಸಲು ಇದುವರೆಗೆ ಯಾರಿಗೂ ಸಾದ್ಯವಾಗಿಲ್ಲ.

ಇಂತಹ ವಿವರಿಸಲು ಸಾದ್ಯವಾಗದ ವ್ಯತ್ಯಾಸಗಳಿರುವ ಕಾರಣ, ಸಂಸ್ಕ್ರುತ ಮತ್ತು ಕನ್ನಡ ನುಡಿಗಳನ್ನು ಎರಡು ತೀರ ಬೇರಾಗಿರುವ ಮೂಲನುಡಿಗಳಿಂದ ಬೆಳೆದು ಬಂದಿರುವವುಗಳೆಂಬುದಾಗಿ ಪರಿಗಣಿಸಬೇಕಾಗಿದೆ. ಸಂಸ್ಕ್ರುತ ‘ಇಂಡೋ-ಆರ‍್ಯನ್’ ಎಂಬ ಹೆಸರಿನ ಮೂಲ ನುಡಿಯಿಂದ, ಮತ್ತು ಕನ್ನಡ ಅದಕ್ಕಿಂತ ತೀರ ಬೇರಾಗಿರುವ ‘ದ್ರಾವಿಡ’ ಎಂಬ ಹೆಸರಿನ ಮೂಲ ನುಡಿಯಿಂದ ಬೆಳೆದು ಬಂದಿದೆಯೆಂಬುದಾಗಿ ಇವತ್ತು ಕಲ್ಪಿಸಿಕೊಳ್ಳಬೇಕಾಗಿದೆ.

ನುಡಿಗಳನ್ನು ಈ ರೀತಿ ಬೇರೆ ಬೇರೆ ನುಡಿಕುಟುಂಬಗಳಲ್ಲಿ ಇರಿಸಿ ಹೇಳಲು ಮುಕ್ಯವಾಗಿ ಅವುಗಳ ಚರಿತ್ರೆ ಆದಾರವಾಗಿರುತ್ತದೆ. ಒಂದು ನುಡಿಯನ್ನಾಡುವ ಜನ ದೂರ ದೂರದಲ್ಲಿರುವ ಊರುಗಳಿಗೆ ಹೋಗಿ ನೆಲೆಸಿದಾಗ, ಅವರೊಳಗಿನ ಸಂಪರ‍್ಕ ಕಡಿಮೆಯಾಗುತ್ತಾ ಹೋಗುತ್ತದೆ, ಮತ್ತು ಇದರಿಂದಾಗಿ, ಅವರು ಬಳಸುವ ನುಡಿಯಲ್ಲಿ ಬದಲಾವಣೆಗಳು ಒಂದೇ ದಿಕ್ಕಿನಲ್ಲಿ ನಡೆಯದೆ ಬೇರೆ ಬೇರೆ ದಿಕ್ಕುಗಳಲ್ಲಿ ನಡೆಯತೊಡಗುತ್ತವೆ.

ಎತ್ತುಗೆಗಾಗಿ, ಕನ್ನಡ ನುಡಿಯನ್ನಾಡುವ ಜನ ಬಡಗು ಕರ‍್ನಾಟಕ, ತೆಂಕು ಕರ‍್ನಾಟಕ ಮತ್ತು ಕರಾವಳಿ ಎಂಬ ಮೂರು ಮುಕ್ಯ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರಾಡುವ ನುಡಿಯೂ ಬಡಗು, ತೆಂಕು ಮತ್ತು ಕರಾವಳಿ ಎಂಬ ಮೂರು ಮುಕ್ಯ ಒಳನುಡಿಗಳಾಗಿ ವ್ಯತ್ಯಾಸಗಳನ್ನು ತೋರಿಸುತ್ತದೆ. ಈ ಒಳನುಡಿಗಳ ನಡುವೆ ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ ಎಂಬುದು ಈ ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ ಇವರ ನಡುವೆ ಎಂತಹ ಸಂಪರ‍್ಕ ಸಾದ್ಯವಿತ್ತು ಎಂಬುದರ ಮೇಲೆ ಅವಲಂಬಿಸಿದೆ.

ನುಡಿಗಳೆಲ್ಲ ಈ ರೀತಿ ಅವನ್ನಾಡುವ ಜನರ ನಡುವಿರುವ ಸಂಪರ‍್ಕ ಕಡಿಮೆಯಾದಾಗ ಬೇರೆ ಬೇರೆ ಒಳನುಡಿಗಳಾಗಿ ಒಡೆದುಕೊಳ್ಳುತ್ತವೆ, ಮತ್ತು ಆಮೇಲೆ ಅವೇ ಒಳನುಡಿಗಳು ಸ್ವತಂತ್ರ ನುಡಿಗಳಾಗಿ ಬೆಳೆಯುತ್ತವೆ ಎಂಬ ಈ ಅಬಿಪ್ರಾಯದ ಮೇಲೆ ನುಡಿಕುಟುಂಬಗಳ ಕಲ್ಪನೆಯನ್ನು ನಿಲ್ಲಿಸಲಾಗಿದೆ. ಹಿಂದೆ ಒಂದು ಕಾಲದಲ್ಲಿ ಕೆಲವೇ ಕೆಲವು ಮೂಲ ನುಡಿಗಳಿದ್ದಿರಬೇಕು, ಮತ್ತು ಈ ಮೂಲ ನುಡಿಗಳು ಮೇಲೆ ಸೂಚಿಸಿದ ಹಾಗೆ ಕವಲೊಡೆದು ಬೇರೆ ಬೇರೆ ನುಡಿಗಳಾದುದರಿಂದಾಗಿ, ಇವತ್ತು ಸಾವಿರಾರು ನುಡಿಗಳು ಬಳಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ ಎಂಬುದೇ ಈ ಕಲ್ಪನೆ.

ಈ ಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ಇವತ್ತು ಬಳಕೆಯಲ್ಲಿರುವ ಸಾವಿರಾರು ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಪ್ರಯತ್ನ ನಡೆಯುತ್ತಿದೆ. ಎಂದರೆ, ಈ ಸಾವಿರಾರು ನುಡಿಗಳು ಹದಿನಯ್ದಿಪ್ಪತ್ತು ಮೂಲ ನುಡಿಗಳಿಂದ ಅವುಗಳಲ್ಲಿ ಬೇರೆ ಬೇರೆ ರೀತಿಯ ಬದಲಾವಣೆಗಳಾಗುವುದರ ಮೂಲಕ ಹೇಗೆ ಬೆಳೆದು ಬಂದಿರಬೇಕು ಎಂಬುದನ್ನು ತೋರಿಸಿ ಕೊಡುವ ಪ್ರಯತ್ನ ನಡೆಯುತ್ತಿದೆ.

ಇವತ್ತು ಬೇರೆ ಬೇರಾಗಿ ಕಾಣಿಸುವ ಎರಡು ನುಡಿಗಳು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ನಾವು ತೋರಿಸಿಕೊಡಬೇಕಿದ್ದಲ್ಲಿ, (ಎಂದರೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ವಾದಿಸಬೇಕಿದ್ದಲ್ಲಿ) ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳೆಲ್ಲ ಮೂಲ ನುಡಿಯೊಂದರಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಬೇಕು. ಎಂದರೆ, ಆ ಮೂಲ ನುಡಿಯನ್ನಾಡುವ ಜನರು ದೂರದ ಎರಡು ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ, ಅವರ ಮಾತಿನಲ್ಲಿ ಬದಲಾವಣೆಗಳು ಎರಡು ಬೇರೆ ಬೇರೆ ದಿಕ್ಕುಗಳಲ್ಲಿ ನಡೆದಿರಬೇಕು, ಮತ್ತು ಒಂದು ಪ್ರದೇಶದಲ್ಲಿ ನಡೆದ ಬದಲಾವಣೆಗಳು ಇನ್ನೊಂದು ಪ್ರದೇಶದಲ್ಲಿ ನಡೆಯದಿದ್ದುದೇ ಆ ಎರಡು ಪ್ರದೇಶಗಳ ಜನರ ಮಾತುಗಳ (ಎಂದರೆ ನುಡಿಗಳ) ನಡುವೆ ಇವತ್ತು ಕಾಣಿಸುವ ವ್ಯತ್ಯಾಸಗಳಿಗೆ ಮೂಲ ಕಾರಣ ಎಂಬುದನ್ನು ತೋರಿಸಿಕೊಡಬೇಕು.

ಹಾಗಾಗಿ, ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಕೆಲಸದಲ್ಲಿ ಅವುಗಳ ನಡುವೆ ಕಾಣಿಸುವ ಹೋಲಿಕೆಗಳಿಗಿಂತಲೂ ವ್ಯತ್ಯಾಸಗಳಿಗೇನೇ ಹೆಚ್ಚಿನ ಮಹತ್ವವಿದೆ. ಎರಡು ನುಡಿಗಳ ನಡುವೆ ಸ್ವಲ್ಪವೂ ಹೋಲಿಕೆ ಕಾಣಿಸದಿದ್ದರೂ, ಅವುಗಳ ನಡುವಿರುವ ವ್ಯತ್ಯಾಸಗಳೆಲ್ಲ ಆ ಎರಡು ನುಡಿಗಳ ಚರಿತ್ರೆಯಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ಮೇಲೆ ಸೂಚಿಸಿದ ಹಾಗೆ ತೋರಿಸಿಕೊಟ್ಟಲ್ಲಿ, ಅವನ್ನು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ಹೇಳಲು ಬರುತ್ತದೆ. ಇದಕ್ಕೆ ಬದಲು, ಎರಡು ನುಡಿಗಳ ನಡುವೆ ಎಶ್ಟೇ ಹೋಲಿಕೆಯಿರಲಿ, ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳನ್ನು ಒಂದು ಮೂಲ ನುಡಿಯಲ್ಲಿ ಬೇರೆ ಬೇರೆ ದಿಕ್ಕುಗಳಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಲು ಬರುವುದಿಲ್ಲವಾದಲ್ಲಿ, ಅವು ಒಂದೇ ನುಡಿ ಕುಟುಂಬಕ್ಕೆ ಸೇರಿದವುಗಳೆಂದು ವಾದಿಸಲು ಬರುವುದಿಲ್ಲ.

ಎರಡು ನುಡಿಗಳ ನಡುವೆ ಹೋಲಿಕೆಗಳು ಕಾಣಿಸಿಕೊಳ್ಳಲು ಬೇರೆ ಕಾರಣಗಳೂ ಇರಬಲ್ಲುವು: ಎತ್ತುಗೆಗಾಗಿ, ಅವುಗಳಲ್ಲಿ ಒಂದು ಇನ್ನೊಂದರಿಂದ ಹಲವಾರು ಪದಗಳನ್ನು ಎರವಲಾಗಿ ಪಡೆದಿದೆಯಾದರೆ, ಅವೆರಡರ ನಡುವೆ ತುಂಬಾ ಹೋಲಿಕೆಯಿದೆಯೆಂದು ಅನಿಸಬಹುದು. ಇದಲ್ಲದೆ, ಆಕಸ್ಮಿಕವಾಗಿಯೂ ಎರಡು ನುಡಿಗಳಲ್ಲಿ ಬಳಕೆಯಾಗುವ ಪದಗಳ ನಡುವೆ ಹೋಲಿಕೆಗಳು ಕಾಣಿಸಬಹುದು. ನುಡಿಗಳನ್ನು ಬಳಸುವ, ಬೆಳೆಸುವ ಮತ್ತು ಬದಲಾಯಿಸುವವರೆಲ್ಲರೂ ಮನುಶ್ಯರೇ ಆಗಿರುವುದರಿಂದ, ಇಂತಹ ಆಕಸ್ಮಿಕ ಹೋಲಿಕೆಗಳು ಕಾಣಿಸಿಕೊಳ್ಳುವುದರಲ್ಲಿ ಅಚ್ಚರಿಯೇನಿಲ್ಲ.

ಹಾಗಾಗಿ, ಎರಡು ನುಡಿಗಳ ನಡುವೆ ಕಾಣಿಸುವ ಹೋಲಿಕೆಗಳ ಆದಾರದ ಮೇಲೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ಹೇಳಲು ಬರುವುದಿಲ್ಲ. ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಯಾವ ರೀತಿಯಲ್ಲಿ ಮೂಡಿಬಂದಿವೆ ಎಂಬುದನ್ನು ಮೇಲೆ ಸೂಚಿಸಿದ ಹಾಗೆ ವಿವರಿಸಲು ಸಾದ್ಯವಾಗುವುದಿದ್ದಲ್ಲಿ ಮಾತ್ರ ಅವನ್ನು ಒಂದೇ ಕುಟುಂಬದ ನುಡಿಗಳೆಂದು, ಎಂದರೆ ಚಾರಿತ್ರಿಕವಾಗಿ ಅವು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ಪರಿಗಣಿಸಲು ಸಾದ್ಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಓದುವ ಹಾಗೆಯೇ ಬರೆಯುವುದು

ನುಡಿಯರಿಮೆಯ ಇಣುಕುನೋಟ – 10

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡ ಬರಹಗಳಲ್ಲಿ ಓದುವ ಹಾಗೆಯೇ ಬರೆಯಬೇಕು ಎಂದು ಹೇಳಿದರೆ, ಎಲ್ಲರೂ ಅವರವರು ಹೇಗೆ ಓದುತ್ತಾರೋ ಹಾಗೆ ಬರೆಯಬಹುದು, ಇಲ್ಲವೇ ಎಲ್ಲರೂ ತಮಗೆ ಕುಶಿಬಂದ ಹಾಗೆ ಬರೆಯಬಹುದು ಎಂದು ಹೇಳಿದ ಹಾಗಾಗುವುದಿಲ್ಲ; ಅಂತಹ ಪ್ರತಿಕ್ರಿಯೆ ಬಾರದಂತೆ ನಾನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಬೇಕು ಎಂಬುದಾಗಿ ಬರೆದಿದ್ದೆ. ಈ ಪದಗಳನ್ನು ಇವತ್ತು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಿದ್ದಾರೆ ಎಂಬುದನ್ನು ತಿಳಿವಿಗರು ಕಂಡುಹಿಡಿಯಬೇಕು, ಮತ್ತು ಅದಕ್ಕೆ ಅನುಸಾರವಾಗಿ, ಅವನ್ನು ಹೇಗೆ ಬರೆಯಬೇಕು ಎಂಬುದನ್ನು ತೀರ‍್ಮಾನಿಸಬೇಕು.

ಬರಹದ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಇನ್ನೊಬ್ಬರಿಗೆ ತಿಳಿಸುತ್ತೇವೆ, ಮತ್ತು ಬರಹ ರೂಪದಲ್ಲಿರುವ ಇನ್ನೊಬ್ಬರ ಅನಿಸಿಕೆಗಳನ್ನು ಓದಿನ ಮೂಲಕ ತಿಳಿದುಕೊಳ್ಳುತ್ತೇವೆ. ಈ ಎರಡು ಕೆಲಸಗಳೂ ಸರಿಯಾಗಿ ನಡೆಯಬೇಕಿದ್ದಲ್ಲಿ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವ ಮತ್ತು ಓದುವ ಕೆಲಸಗಳನ್ನು ನಡೆಸಬೇಕಾಗುತ್ತದೆ. ಈ ಕೆಲಸಗಳನ್ನು ಇವತ್ತು ಶಾಲೆಗಳಲ್ಲಿ ಕಲಿಸಲಾಗುತ್ತದೆಯಾದ ಕಾರಣ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವಂತೆ ಮತ್ತು ಓದುವಂತೆ ಮಾಡುವುದು ತೊಡಕಿನ ಕೆಲಸವೇನಲ್ಲ.

ಶಕಾರವನ್ನು ಹೆಚ್ಚಿನ ಕನ್ನಡಿಗರೂ ಶಕಾರವಾಗಿಯೇ ಓದುತ್ತಾರಲ್ಲದೆ ಸಕಾರವಾಗಿ ಬದಲಾಯಿಸಿ ಓದುವುದಿಲ್ಲ. ಆದರೆ, ಷಕಾರವನ್ನು ಹೆಚ್ಚಿನವರೂ ಶಕಾರವಾಗಿ ಬದಲಾಯಿಸಿ ಓದುತ್ತಾರೆ. ಹಾಗಾಗಿ, ಸಂಸ್ಕ್ರುತ ಎರವಲುಗಳಲ್ಲಿ ಬರುವ ಷಕಾರವನ್ನು ಶಕಾರವಾಗಿ ಬದಲಾಯಿಸಿ ಬರೆಯಬೇಕು, ಮತ್ತು ಶಕಾರವನ್ನು ಹಾಗೆಯೇ ಉಳಿಸಬೇಕು ಎಂಬ ತೀರ‍್ಮಾನಕ್ಕೆ ಬರಬೇಕಾಗುತ್ತದೆ.

ಇದೇ ರೀತಿಯಲ್ಲಿ, ಋಕಾರ, ಮಹಾಪ್ರಾಣ, ವಿಸರ‍್ಗ ಮೊದಲಾದ ಬೇರೆ ಕೆಲವು ಬರಿಗೆಗಳ ವಿಶಯದಲ್ಲೂ ಹೆಚ್ಚಿನ ಕನ್ನಡಿಗರ ಓದು ಹೇಗಿದೆಯೆಂಬುದನ್ನು ಕಂಡುಹಿಡಿದು, ಅದಕ್ಕನುಸಾರವಾಗಿ ಬರವಣಿಗೆಯನ್ನು ಬದಲಾಯಿಸಬೇಕು. ಹೀಗೆ ಮಾಡಿದಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗಬಲ್ಲುದು, ಮತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗುವಂತೆ ಮಾಡುವ ಕೆಲಸವೂ ಸುಲಬವಾಗಬಲ್ಲುದು.

ಹಳೆಗನ್ನಡದ ಱಕಾರ ಮತ್ತು ೞಕಾರಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೆ ಎಂಬುದನ್ನು ಗಮನಿಸಿ, ಹೊಸಗನ್ನಡವನ್ನು ಬರಹದಲ್ಲಿ ಬಳಸಲು ತೊಡಗಿದ ಕಾಲದಲ್ಲಿ ಅವನ್ನು ರಕಾರ ಮತ್ತು ಳಕಾರಗಳಾಗಿ ಬದಲಾಯಿಸಿ ಬರೆಯಲು ತೊಡಗಲಾಯಿತು. ಈ ಮಾರ‍್ಪಾಡನ್ನು ಮಾಡಿರದಿದ್ದರೆ, ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಇನ್ನಶ್ಟು ತೊಡಕಿನದಾಗುತ್ತಿತ್ತು. ಸಂಸ್ಕ್ರುತ ಎರವಲುಗಳಲ್ಲಿ ಬರುವ ಬರಿಗೆಗಳನ್ನು ಓದುವ ಹಾಗೆ ಬರೆಯುವಂತೆ ಮಾರ‍್ಪಡಿಸುವುದೂ ಇಂತಹದೇ ಒಂದು ಕೆಲಸ ಎಂಬುದನ್ನು ಇಲ್ಲಿ ಗಮನಿಸಬೇಕು.

ಇಶ್ಟರ ವರೆಗೆ ಈ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯುತ್ತಿದ್ದುದಕ್ಕೆ ಎರಡು ಮುಕ್ಯ ಕಾರಣಗಳಿದ್ದುವು: ಹಿಂದಿನ ಕಾಲದಲ್ಲಿ ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದವರೆಲ್ಲ ಅದನ್ನು ಸಂಸ್ಕ್ರುತದಲ್ಲಿ ಬರೆದಿರಿಸುತ್ತಿದ್ದರು; ಹಾಗಾಗಿ, ಯಾವುದೇ ಒಂದು ವಿಶಯದಲ್ಲಿ ಹೊಸ ತಿಳಿವನ್ನು ಪಡೆಯಬೇಕಿದ್ದರೂ ಸಂಸ್ಕ್ರುತದ ಮೊರೆಹೊಗಬೇಕಾಗಿತ್ತು.

ಇದರಿಂದಾಗಿ ಸಂಸ್ಕ್ರುತ ಬರಹಕ್ಕೆ ಒಂದು ಬಗೆಯ ಮೇಲ್ಮೆ ಬಂದಿತ್ತು; ಅದರ ಪದಗಳನ್ನು ಕನ್ನಡದಲ್ಲಿಯೂ ಸಂಸ್ಕ್ರುತದಲ್ಲಿರುವ ಹಾಗೆಯೇ ಉಳಿಸಿಕೊಳ್ಳುವುದರಿಂದ, ಮುಂದೆ ಸಂಸ್ಕ್ರುತ ಬರಹಗಳನ್ನು ಓದಲು ಕಲಿಯುವ ಕೆಲಸ ಕನ್ನಡಿಗರಿಗೆ ಸುಲಬವಾಗಬಹುದಾಗಿತ್ತು. ಕನ್ನಡ ಓದಿನ ಕಲಿಕೆ ಮುಂದೆ ನಡೆಸಲೇಬೇಕಾಗಿದ್ದ ಸಂಸ್ಕ್ರುತ ಓದಿಗೆ ಒಂದು ಮೆಟ್ಟಲಾಗಬಹುದಾಗಿತ್ತು. ಇದು ಒಂದು ಕಾರಣ.

ಆದರೆ, ಇವತ್ತು ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದಿರುವವರು ಯಾರೂ ಅದನ್ನು ಸಂಸ್ಕ್ರುತದಲ್ಲಿ ಬರೆಯಲು ಹೋಗುವುದಿಲ್ಲ; ಹಾಗಾಗಿ, ಹಿಂದಿನ ಕಾಲದಲ್ಲಿ ಅದಕ್ಕಿದ್ದ ಮೇಲ್ಮೆ ಇಂದು ಉಳಿದಿಲ್ಲ, ಮತ್ತು ಅದರ ಪದಗಳನ್ನು ಅದರ ಬರಹಗಳಲ್ಲಿರುವ ಹಾಗೆ ಬರೆಯಲು ಕಲಿಯುವ ಅವಶ್ಯಕತೆಯೂ ಇವತ್ತು ಕನ್ನಡಿಗರಿಗಿಲ್ಲ.

ಹಿಂದಿನ ಕಾಲದಲ್ಲಿ ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸವನ್ನು ಮುಕ್ಯವಾಗಿ ಉತ್ತರದಿಂದ ವಲಸೆಬಂದ ಮೇಲ್ವರ‍್ಗದ ಜನರು ನಡೆಸುತ್ತಿದ್ದರು; ಆರ‍್ಯರಾಗಿದ್ದ ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಆದರ ಮತ್ತು ಪೂಜ್ಯಬಾವಗಳಿದ್ದುವು. ಹಾಗಾಗಿ, ಅದರ ಪದಗಳನ್ನು ಮಾರ‍್ಪಡಿಸದೆ ಉಳಿಸುವುದು ಅವರ ಮಟ್ಟಿಗೆ ಅವಶ್ಯವಾಗಿತ್ತು. ಇದು ಇನ್ನೊಂದು ಕಾರಣ.

ಆದರೆ, ಇವತ್ತು ಎಲ್ಲಾ ವರ‍್ಗಗಳಿಗೆ ಸೇರಿದ ಕನ್ನಡಿಗರೂ ಕನ್ನಡ ಬರಹವನ್ನು ಬಳಸಲು ಕಲಿಯಬೇಕಾಗಿದೆ. ಇವರಲ್ಲಿ ಹೆಚ್ಚಿನವರೂ ದ್ರಾವಿಡ ಮೂಲದವರಾಗಿದ್ದು, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಮಾರ‍್ಪಡಿಸದೆ ಉಳಿಸಿಕೊಳ್ಳುವುದು ಅಂತಹ ಒಂದು ಪೂಜ್ಯವಾದ ವಿಶಯವೇ ಅಲ್ಲ; ಅದರಿಂದ ಅವರಿಗೆ ಬೇರೆ ಪ್ರಯೋಜನಗಳೂ ದೊರಕುವುದಿಲ್ಲ. ಹಾಗಾಗಿ, ಸಂಸ್ಕ್ರುತ ಎರವಲುಗಳನ್ನು ಕನ್ನಡದ ಸೊಗಡನ್ನು ಕೆಡಿಸದಂತೆ ಮಾರ‍್ಪಡಿಸುವುದಕ್ಕೆ ಹೆಚ್ಚಿನ ಕನ್ನಡಿಗರಿಂದಲೂ ವಿರೋದ ಬರಲಾರದು.

ಬೇರೆ ನುಡಿಗಳಿಂದ ಎರವಲಾಗಿ ಪಡೆದ ಪದಗಳನ್ನು ಯಾವ ನುಡಿಯಲ್ಲೂ ಆ ನುಡಿಯಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ; ಇದಕ್ಕೆ ಕೆಲವೇ ಕೆಲವು ಹೊರಪಡಿಕೆಗಳು ಮಾತ್ರ ಇವೆ. ಎತ್ತುಗೆಗಾಗಿ, ಸಂಸ್ಕ್ರುತ ಇಲ್ಲವೇ ಪ್ರಾಕ್ರುತ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಬ್ರಾಹ್ಮೀ ಲಿಪಿಯನ್ನು ಕನ್ನಡದಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಸಂಸ್ಕ್ರುತದ ಎರವಲುಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಸಂಸ್ಕ್ರುತ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಇದೇ ರೀತಿಯಲ್ಲಿ, ಅರೇಬಿಕ್ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಲಿಪಿಯನ್ನು ಟರ‍್ಕಿಶ್‌ನಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಅರೇಬಿಕ್ ಎರವಲುಗಳನ್ನು ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಅರೇಬಿಕ್ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಆದರೆ, ಎಲ್ಲಾ ನುಡಿಗಳೂ ಈ ರೀತಿ ಬೇರೊಂದು ನುಡಿಯ ಲಿಪಿಯನ್ನು ತಮ್ಮ ನುಡಿಗೆ ಅಳವಡಿಸಿಕೊಳ್ಳುವಾಗ ಆ ನುಡಿಯ ಪದಗಳನ್ನು ಅದರಲ್ಲಿರುವಂತೆ ಬರೆಯಲು ಬೇಕಾಗುವ ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಿಲ್ಲ; ಎತ್ತುಗೆಗಾಗಿ, ನಾಗರಿ ಲಿಪಿಯನ್ನು ಪಂಜಾಬಿ ನುಡಿಗೆ ಅಳವಡಿಸುವಾಗ, ಷಕಾರ, ಋಕಾರ, ಹಲವು ಬಗೆಯ ಒತ್ತುಬರಿಗೆಗಳು ಮೊದಲಾದುವನ್ನು ಉಳಿಸಿಕೊಂಡಿಲ್ಲ; ಈ ಕಾರಣಕ್ಕಾಗಿ, ಸಂಸ್ಕ್ರುತ ಎರವಲು ಪದಗಳನ್ನು ಇವತ್ತು ಪಂಜಾಬಿ ಬರಹದಲ್ಲಿ ಓದುವ ಹಾಗೆ ಬರೆಯಲಾಗುತ್ತದೆಯಲ್ಲದೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯುವುದಿಲ್ಲ.

ಮಲಯಾಳ ಬರಹದಲ್ಲೂ ಮೊದಲಿಗೆ ಮಹಾಪ್ರಾಣಾಕ್ಶರಗಳು, ಗಜಡದಬ ಮೊದಲಾದ ಆ ನುಡಿಗೆ ಬೇಡದಿರುವ ಹಲವು ಬರಿಗೆಗಳು ಇರಲಿಲ್ಲ; ಸಂಸ್ಕ್ರುತ ಬರಹಗಳನ್ನು ಬರೆಯಲು, ಮತ್ತು ಕೆಲವೊಮ್ಮೆ ಸಂಸ್ಕ್ರುತ ಪದಗಳನ್ನು ಮಲಯಾಳ ಬರಹಗಳಲ್ಲಿ ಬರೆಯಲು ಆ ಸಮಯದಲ್ಲಿ ಗ್ರಂತಲಿಪಿಯೆಂಬ ಬೇರೆಯೇ ಒಂದು ಲಿಪಿಯನ್ನು ಬಳಸಲಾಗುತ್ತಿತ್ತು.

ಆದರೆ, ಹದಿನೇಳನೇ ಶತಮಾನಕ್ಕಾಗುವಾಗ, ಮಲಯಾಳ ಸಾಹಿತ್ಯದಲ್ಲಿ ಬ್ರಾಹ್ಮಣರ ಪ್ರಾಬಲ್ಯ ಹೆಚ್ಚಾಯಿತು; ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಒಲವಿದ್ದುದರಿಂದ, ಮತ್ತು ಇವರ ಬರಹಗಳಲ್ಲಿ ತುಂಬಾ ಸಂಸ್ಕ್ರುತ ಪದಗಳು ಬಳಕೆಯಾಗುತ್ತಿದ್ದುದರಿಂದ, ಇವರು ತಮ್ಮ ಮಲಯಾಳ ಬರಹಗಳಲ್ಲೂ ಗ್ರಂತ ಲಿಪಿಯನ್ನೇ ಬಳಸಲು ತೊಡಗಿದರು. ಇದರಿಂದಾಗಿ, ಇವತ್ತಿನ ಮಲಯಾಳ ಬರಹ ಕನ್ನಡ ಬರಹದ ಹಾಗೆಯೇ ಅನವಶ್ಯಕವಾಗಿ ತೊಡಕಿನದಾಗಿದೆ.

ಎಲ್ಲಾ ಜನರೂ ಬರಹಬಲ್ಲವರಾಗಬೇಕಿರುವ ಇವತ್ತಿನ ದಿನಗಳಲ್ಲಿ ಈ ರೀತಿ ಒಂದು ನುಡಿಯ ಬರವಣಿಗೆಗೆ ಅವಶ್ಯವಿಲ್ಲದ ಬರಿಗೆಗಳನ್ನು ಎರವಲು ಪದಗಳ ಬರವಣಿಗೆಗಾಗಿ ಉಳಿಸಿಕೊಳ್ಳುವುದು ಜಾಣತನವಲ್ಲ; ಇದನ್ನು ಮನಗಂಡ ತಿಳಿವಿಗರು ಟರ‍್ಕಿ, ಇಂಡೊನೇಶಿಯಾ, ಮಲಯೇಶಿಯಾ ಮೊದಲಾದ ನಾಡುಗಳಲ್ಲಿ ಅರೇಬಿಕ್ ಮೂಲದ ಲಿಪಿಯನ್ನೇ ಬಿಟ್ಟುಕೊಟ್ಟು ರೋಮನ್ ಮೂಲದ ಲಿಪಿಯನ್ನು ತಮ್ಮ ಬರಹಕ್ಕೆ ಅಳವಡಿಸಿಕೊಂಡಿದ್ದಾರೆ.

ಕೊರಿಯಾದಂತಹ ಬೇರೆ ಕೆಲವು ನಾಡುಗಳಲ್ಲಿ ಎರವಲು ಪದಗಳನ್ನು ಓದುವ ಹಾಗೆಯೇ ಬರೆಯಲು ತೊಡಗುವ ಮೂಲಕ ಈ ತೊಡಕನ್ನು ನಿವಾರಿಸಿಕೊಳ್ಳಲಾಗಿದೆ. ಕನ್ನಡದಲ್ಲಿಯೂ ಇಂತಹದೇ ಮಾರ‍್ಪಾಡನ್ನು ನಾವು ಇವತ್ತು ನಡೆಸಬೇಕಾಗಿದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter