Posts Tagged ‘Tamil’

ನುಡಿಗಳ ನಡುವಿನ ನಂಟಸ್ತಿಕೆ

ನುಡಿಯರಿಮೆಯ ಇಣುಕುನೋಟ – 18

ಜನರ ನಡುವೆ ಕಾಣಿಸುವ ಹಾಗೆ, ಅವರಾಡುವ ನುಡಿಗಳನಡುವೆಯೂ ‘ನಂಟಸ್ತಿಕೆ’ಯನ್ನು ಕಾಣಲು ಸಾದ್ಯವಿದೆ. ಕೆಲವು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆಯೆಂದು ಹೇಳಬಹುದು, ಮತ್ತು ಬೇರೆ ಕೆಲವು ನುಡಿಗಳ ನಡುವೆ ದೂರದ ನಂಟಸ್ತಿಕೆ ಮಾತ್ರ ಇದೆಯೆಂದು ಹೇಳಬಹುದು. ಆದರೆ, ಇನ್ನು ಕೆಲವು ನುಡಿಗಳ ನಡುವೆ ಯಾವ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳಲು ಬರುವುದಿಲ್ಲ. ಹಾಗೆ ಹೇಳಲು ಯಾವ ಆದಾರವೂ ದೊರಕದಿರುವುದೇ ಇದಕ್ಕೆ ಕಾರಣ.

ಎತ್ತುಗೆಗಾಗಿ, ಕನ್ನಡ ಮತ್ತು ತಮಿಳು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಕನ್ನಡ ಮತ್ತು ತುಳು ನುಡಿಗಳ ನಡುವೆ ಇದಕ್ಕಿಂತ ಸ್ವಲ್ಪ ದೂರದ ನಂಟಸ್ತಿಕೆಯಿದೆ. ಇದೇ ರೀತಿಯಲ್ಲಿ, ಹಿಂದಿ ಮತ್ತು ಮರಾಟಿ ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಹಿಂದಿ ಮತ್ತು ಇಂಗ್ಲಿಶ್ ನುಡಿಗಳ ನಡುವೆ ದೂರದ ನಂಟಸ್ತಿಕೆಯಿದೆ. ಆದರೆ ಕನ್ನಡ ಮತ್ತು ಹಿಂದಿ ನುಡಿಗಳ ನಡುವೆ, ಇಲ್ಲವೇ ಕನ್ನಡ ಮತ್ತು ಇಂಗ್ಲಿಶ್ ನುಡಿಗಳ ನಡುವೆ, ಹತ್ತಿರದ್ದಾಗಲಿ ದೂರದ್ದಾಗಲಿ ಯಾವುದೇ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳುವುದಕ್ಕೆ ಯಾವ ಆದಾರವೂ ದೊರಕುವುದಿಲ್ಲ.

ನುಡಿಗಳ ನಡುವಿನ ನಂಟಸ್ತಿಕೆಯನ್ನು ಜನರ ನಡುವಿನ ನಂಟಸ್ತಿಕೆಯ ಹಾಗೆ ಅವುಗಳ ಹುಟ್ಟು ಮತ್ತು ಬೆಳವಣಿಗೆಗಳ ಆದಾರದ ಮೇಲೆ ಕಲ್ಪಿಸಿಕೊಳ್ಳಲಾಗಿದೆ. ಆದರೆ, ಜನರ ಹುಟ್ಟಿಗೂ ನುಡಿಗಳ ಹುಟ್ಟಿಗೂ ನಡುವೆ ಹಲವು ವ್ಯತ್ಯಾಸಗಳಿವೆ. ಎತ್ತುಗೆಗಾಗಿ, ಜನರಲ್ಲಿ ಹೆಣ್ಣು-ಗಂಡುಗಳ ಕೂಡಿಕೆಯಿಂದ ಮಗು ಹುಟ್ಟುತ್ತದೆ; ಆದರೆ ನುಡಿಗಳಲ್ಲಿ ಆ ರೀತಿ ಎರಡು ನುಡಿಗಳ ಕೂಡಿಕೆಯಿಂದ ಮೂರನೆಯ ನುಡಿ ಹುಟ್ಟಿಕೊಳ್ಳುವುದಿಲ್ಲ; ಒಂದು ನುಡಿಯಿದ್ದದ್ದು ಇನ್ನೊಂದು ನುಡಿಯಾಗಿ ಬದಲಾಗುತ್ತದೆ, ಇಲ್ಲವೇ ಎರಡು ನುಡಿಗಳಾಗಿ ಒಡೆದುಕೊಳ್ಳುತ್ತದೆ.

ಎತ್ತುಗೆಗಾಗಿ, ಸಂಸ್ಕ್ರುತ ನುಡಿ ಇವತ್ತಿನ ಮರಾಟಿ ನುಡಿಯಾಗಿ ಬದಲಾಗಿದೆಯೆಂದು ಹೇಳಬಹುದು; ಇಲ್ಲವೇ ಅದೇ ನುಡಿ ಮರಾಟಿ, ಕೊಂಕಣಿ, ಹಿಂದಿ, ಗುಜರಾತಿ, ಪಂಜಾಬಿ, ಬಂಗಾಲಿ ಮೊದಲಾದ ಇವತ್ತಿನ ಹಲವು ನುಡಿಗಳಾಗಿ ಒಡೆದುಕೊಂಡಿದೆಯೆಂದೂ ಹೇಳಬಹುದು. ಆದರೆ, ಇದೇ ರೀತಿಯಲ್ಲಿ ಸಂಸ್ಕ್ರುತ ನುಡಿ ಕನ್ನಡ ನುಡಿಯಾಗಿ ಬದಲಾಗಿದೆಯೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳ ನಡುವೆ ಅವುಗಳ ಪದಗಳಲ್ಲಿ ಮತ್ತು ವ್ಯಾಕರಣ ನಿಯಮಗಳಲ್ಲಿ ಹಲವು ಬುಡಕಟ್ಟಿನ ವ್ಯತ್ಯಾಸಗಳಿವೆ. ಈ ಎಲ್ಲಾ ವ್ಯತ್ಯಾಸಗಳೂ ಹೇಗೆ ಉಂಟಾಗಿವೆ ಎಂಬುದನ್ನು ವಿವರಿಸಲು ಇದುವರೆಗೆ ಯಾರಿಗೂ ಸಾದ್ಯವಾಗಿಲ್ಲ.

ಇಂತಹ ವಿವರಿಸಲು ಸಾದ್ಯವಾಗದ ವ್ಯತ್ಯಾಸಗಳಿರುವ ಕಾರಣ, ಸಂಸ್ಕ್ರುತ ಮತ್ತು ಕನ್ನಡ ನುಡಿಗಳನ್ನು ಎರಡು ತೀರ ಬೇರಾಗಿರುವ ಮೂಲನುಡಿಗಳಿಂದ ಬೆಳೆದು ಬಂದಿರುವವುಗಳೆಂಬುದಾಗಿ ಪರಿಗಣಿಸಬೇಕಾಗಿದೆ. ಸಂಸ್ಕ್ರುತ ‘ಇಂಡೋ-ಆರ‍್ಯನ್’ ಎಂಬ ಹೆಸರಿನ ಮೂಲ ನುಡಿಯಿಂದ, ಮತ್ತು ಕನ್ನಡ ಅದಕ್ಕಿಂತ ತೀರ ಬೇರಾಗಿರುವ ‘ದ್ರಾವಿಡ’ ಎಂಬ ಹೆಸರಿನ ಮೂಲ ನುಡಿಯಿಂದ ಬೆಳೆದು ಬಂದಿದೆಯೆಂಬುದಾಗಿ ಇವತ್ತು ಕಲ್ಪಿಸಿಕೊಳ್ಳಬೇಕಾಗಿದೆ.

ನುಡಿಗಳನ್ನು ಈ ರೀತಿ ಬೇರೆ ಬೇರೆ ನುಡಿಕುಟುಂಬಗಳಲ್ಲಿ ಇರಿಸಿ ಹೇಳಲು ಮುಕ್ಯವಾಗಿ ಅವುಗಳ ಚರಿತ್ರೆ ಆದಾರವಾಗಿರುತ್ತದೆ. ಒಂದು ನುಡಿಯನ್ನಾಡುವ ಜನ ದೂರ ದೂರದಲ್ಲಿರುವ ಊರುಗಳಿಗೆ ಹೋಗಿ ನೆಲೆಸಿದಾಗ, ಅವರೊಳಗಿನ ಸಂಪರ‍್ಕ ಕಡಿಮೆಯಾಗುತ್ತಾ ಹೋಗುತ್ತದೆ, ಮತ್ತು ಇದರಿಂದಾಗಿ, ಅವರು ಬಳಸುವ ನುಡಿಯಲ್ಲಿ ಬದಲಾವಣೆಗಳು ಒಂದೇ ದಿಕ್ಕಿನಲ್ಲಿ ನಡೆಯದೆ ಬೇರೆ ಬೇರೆ ದಿಕ್ಕುಗಳಲ್ಲಿ ನಡೆಯತೊಡಗುತ್ತವೆ.

ಎತ್ತುಗೆಗಾಗಿ, ಕನ್ನಡ ನುಡಿಯನ್ನಾಡುವ ಜನ ಬಡಗು ಕರ‍್ನಾಟಕ, ತೆಂಕು ಕರ‍್ನಾಟಕ ಮತ್ತು ಕರಾವಳಿ ಎಂಬ ಮೂರು ಮುಕ್ಯ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರಾಡುವ ನುಡಿಯೂ ಬಡಗು, ತೆಂಕು ಮತ್ತು ಕರಾವಳಿ ಎಂಬ ಮೂರು ಮುಕ್ಯ ಒಳನುಡಿಗಳಾಗಿ ವ್ಯತ್ಯಾಸಗಳನ್ನು ತೋರಿಸುತ್ತದೆ. ಈ ಒಳನುಡಿಗಳ ನಡುವೆ ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ ಎಂಬುದು ಈ ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ ಇವರ ನಡುವೆ ಎಂತಹ ಸಂಪರ‍್ಕ ಸಾದ್ಯವಿತ್ತು ಎಂಬುದರ ಮೇಲೆ ಅವಲಂಬಿಸಿದೆ.

ನುಡಿಗಳೆಲ್ಲ ಈ ರೀತಿ ಅವನ್ನಾಡುವ ಜನರ ನಡುವಿರುವ ಸಂಪರ‍್ಕ ಕಡಿಮೆಯಾದಾಗ ಬೇರೆ ಬೇರೆ ಒಳನುಡಿಗಳಾಗಿ ಒಡೆದುಕೊಳ್ಳುತ್ತವೆ, ಮತ್ತು ಆಮೇಲೆ ಅವೇ ಒಳನುಡಿಗಳು ಸ್ವತಂತ್ರ ನುಡಿಗಳಾಗಿ ಬೆಳೆಯುತ್ತವೆ ಎಂಬ ಈ ಅಬಿಪ್ರಾಯದ ಮೇಲೆ ನುಡಿಕುಟುಂಬಗಳ ಕಲ್ಪನೆಯನ್ನು ನಿಲ್ಲಿಸಲಾಗಿದೆ. ಹಿಂದೆ ಒಂದು ಕಾಲದಲ್ಲಿ ಕೆಲವೇ ಕೆಲವು ಮೂಲ ನುಡಿಗಳಿದ್ದಿರಬೇಕು, ಮತ್ತು ಈ ಮೂಲ ನುಡಿಗಳು ಮೇಲೆ ಸೂಚಿಸಿದ ಹಾಗೆ ಕವಲೊಡೆದು ಬೇರೆ ಬೇರೆ ನುಡಿಗಳಾದುದರಿಂದಾಗಿ, ಇವತ್ತು ಸಾವಿರಾರು ನುಡಿಗಳು ಬಳಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ ಎಂಬುದೇ ಈ ಕಲ್ಪನೆ.

ಈ ಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ಇವತ್ತು ಬಳಕೆಯಲ್ಲಿರುವ ಸಾವಿರಾರು ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಪ್ರಯತ್ನ ನಡೆಯುತ್ತಿದೆ. ಎಂದರೆ, ಈ ಸಾವಿರಾರು ನುಡಿಗಳು ಹದಿನಯ್ದಿಪ್ಪತ್ತು ಮೂಲ ನುಡಿಗಳಿಂದ ಅವುಗಳಲ್ಲಿ ಬೇರೆ ಬೇರೆ ರೀತಿಯ ಬದಲಾವಣೆಗಳಾಗುವುದರ ಮೂಲಕ ಹೇಗೆ ಬೆಳೆದು ಬಂದಿರಬೇಕು ಎಂಬುದನ್ನು ತೋರಿಸಿ ಕೊಡುವ ಪ್ರಯತ್ನ ನಡೆಯುತ್ತಿದೆ.

ಇವತ್ತು ಬೇರೆ ಬೇರಾಗಿ ಕಾಣಿಸುವ ಎರಡು ನುಡಿಗಳು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ನಾವು ತೋರಿಸಿಕೊಡಬೇಕಿದ್ದಲ್ಲಿ, (ಎಂದರೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ವಾದಿಸಬೇಕಿದ್ದಲ್ಲಿ) ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳೆಲ್ಲ ಮೂಲ ನುಡಿಯೊಂದರಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಬೇಕು. ಎಂದರೆ, ಆ ಮೂಲ ನುಡಿಯನ್ನಾಡುವ ಜನರು ದೂರದ ಎರಡು ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ, ಅವರ ಮಾತಿನಲ್ಲಿ ಬದಲಾವಣೆಗಳು ಎರಡು ಬೇರೆ ಬೇರೆ ದಿಕ್ಕುಗಳಲ್ಲಿ ನಡೆದಿರಬೇಕು, ಮತ್ತು ಒಂದು ಪ್ರದೇಶದಲ್ಲಿ ನಡೆದ ಬದಲಾವಣೆಗಳು ಇನ್ನೊಂದು ಪ್ರದೇಶದಲ್ಲಿ ನಡೆಯದಿದ್ದುದೇ ಆ ಎರಡು ಪ್ರದೇಶಗಳ ಜನರ ಮಾತುಗಳ (ಎಂದರೆ ನುಡಿಗಳ) ನಡುವೆ ಇವತ್ತು ಕಾಣಿಸುವ ವ್ಯತ್ಯಾಸಗಳಿಗೆ ಮೂಲ ಕಾರಣ ಎಂಬುದನ್ನು ತೋರಿಸಿಕೊಡಬೇಕು.

ಹಾಗಾಗಿ, ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಕೆಲಸದಲ್ಲಿ ಅವುಗಳ ನಡುವೆ ಕಾಣಿಸುವ ಹೋಲಿಕೆಗಳಿಗಿಂತಲೂ ವ್ಯತ್ಯಾಸಗಳಿಗೇನೇ ಹೆಚ್ಚಿನ ಮಹತ್ವವಿದೆ. ಎರಡು ನುಡಿಗಳ ನಡುವೆ ಸ್ವಲ್ಪವೂ ಹೋಲಿಕೆ ಕಾಣಿಸದಿದ್ದರೂ, ಅವುಗಳ ನಡುವಿರುವ ವ್ಯತ್ಯಾಸಗಳೆಲ್ಲ ಆ ಎರಡು ನುಡಿಗಳ ಚರಿತ್ರೆಯಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ಮೇಲೆ ಸೂಚಿಸಿದ ಹಾಗೆ ತೋರಿಸಿಕೊಟ್ಟಲ್ಲಿ, ಅವನ್ನು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ಹೇಳಲು ಬರುತ್ತದೆ. ಇದಕ್ಕೆ ಬದಲು, ಎರಡು ನುಡಿಗಳ ನಡುವೆ ಎಶ್ಟೇ ಹೋಲಿಕೆಯಿರಲಿ, ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳನ್ನು ಒಂದು ಮೂಲ ನುಡಿಯಲ್ಲಿ ಬೇರೆ ಬೇರೆ ದಿಕ್ಕುಗಳಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಲು ಬರುವುದಿಲ್ಲವಾದಲ್ಲಿ, ಅವು ಒಂದೇ ನುಡಿ ಕುಟುಂಬಕ್ಕೆ ಸೇರಿದವುಗಳೆಂದು ವಾದಿಸಲು ಬರುವುದಿಲ್ಲ.

ಎರಡು ನುಡಿಗಳ ನಡುವೆ ಹೋಲಿಕೆಗಳು ಕಾಣಿಸಿಕೊಳ್ಳಲು ಬೇರೆ ಕಾರಣಗಳೂ ಇರಬಲ್ಲುವು: ಎತ್ತುಗೆಗಾಗಿ, ಅವುಗಳಲ್ಲಿ ಒಂದು ಇನ್ನೊಂದರಿಂದ ಹಲವಾರು ಪದಗಳನ್ನು ಎರವಲಾಗಿ ಪಡೆದಿದೆಯಾದರೆ, ಅವೆರಡರ ನಡುವೆ ತುಂಬಾ ಹೋಲಿಕೆಯಿದೆಯೆಂದು ಅನಿಸಬಹುದು. ಇದಲ್ಲದೆ, ಆಕಸ್ಮಿಕವಾಗಿಯೂ ಎರಡು ನುಡಿಗಳಲ್ಲಿ ಬಳಕೆಯಾಗುವ ಪದಗಳ ನಡುವೆ ಹೋಲಿಕೆಗಳು ಕಾಣಿಸಬಹುದು. ನುಡಿಗಳನ್ನು ಬಳಸುವ, ಬೆಳೆಸುವ ಮತ್ತು ಬದಲಾಯಿಸುವವರೆಲ್ಲರೂ ಮನುಶ್ಯರೇ ಆಗಿರುವುದರಿಂದ, ಇಂತಹ ಆಕಸ್ಮಿಕ ಹೋಲಿಕೆಗಳು ಕಾಣಿಸಿಕೊಳ್ಳುವುದರಲ್ಲಿ ಅಚ್ಚರಿಯೇನಿಲ್ಲ.

ಹಾಗಾಗಿ, ಎರಡು ನುಡಿಗಳ ನಡುವೆ ಕಾಣಿಸುವ ಹೋಲಿಕೆಗಳ ಆದಾರದ ಮೇಲೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ಹೇಳಲು ಬರುವುದಿಲ್ಲ. ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಯಾವ ರೀತಿಯಲ್ಲಿ ಮೂಡಿಬಂದಿವೆ ಎಂಬುದನ್ನು ಮೇಲೆ ಸೂಚಿಸಿದ ಹಾಗೆ ವಿವರಿಸಲು ಸಾದ್ಯವಾಗುವುದಿದ್ದಲ್ಲಿ ಮಾತ್ರ ಅವನ್ನು ಒಂದೇ ಕುಟುಂಬದ ನುಡಿಗಳೆಂದು, ಎಂದರೆ ಚಾರಿತ್ರಿಕವಾಗಿ ಅವು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ಪರಿಗಣಿಸಲು ಸಾದ್ಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಬರಹವನ್ನು ಮಾರ‍್ಪಡಿಸಿ ಗೆದ್ದವರು

ನುಡಿಯರಿಮೆಯ ಇಣುಕುನೋಟ – 8

ಜಗತ್ತಿನ ಹಲವು ನುಡಿಗಳಲ್ಲಿ ಇತ್ತೀಚೆಗೆ, ಎಂದರೆ ಕಳೆದ ನೂರು-ನೂರಯ್ವತ್ತು ವರ‍್ಶಗಳಲ್ಲಿ, ನೂರಾರು ವರ‍್ಶಗಳಿಂದ ಬಳಕೆಯಲ್ಲಿದ್ದ ಬರಹಗಳನ್ನು ಮಾರ‍್ಪಡಿಸಿ, ಅವುಗಳಲ್ಲಿ ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲಾಗಿದೆ, ಮತ್ತು ಇದರಿಂದಾಗಿ ಆ ನುಡಿಗಳನ್ನಾಡುವ ಜನರಲ್ಲಿ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆ.

ಜನರ ಜೀವನದಲ್ಲಿ ಇತ್ತೀಚೆಗೆ ಬರಹ ಹೆಚ್ಚು ಹೆಚ್ಚು ಮುಕ್ಯವಾಗುತ್ತಿರುವುದು, ಮತ್ತು ಒಂದು ನಾಡಿನಲ್ಲಿರುವ ಎಲ್ಲಾ ಜನರೂ ಬರಹಬಲ್ಲವರಾಗದೆ ಆ ನಾಡಿನ ಏಳಿಗೆಯಾಗಲಾರದೆಂಬ ಪರಿಸ್ತಿತಿ ಉಂಟಾಗಿರುವುದು ಅವರು ಇಂತಹ ಮಾರ‍್ಪಾಡುಗಳನ್ನು ನಡೆಸಲು ಮುಕ್ಯ ಕಾರಣ.

ಬರಹಗಳನ್ನು ಎರಡು ಬಗೆಗಳಲ್ಲಿ ಈ ಕಾರಣಕ್ಕಾಗಿ ಮಾರ‍್ಪಡಿಸಲಾಗಿದೆ: ಅವುಗಳ ಬರಿಗೆ(ಅಕ್ಶರ)ಗಳಲ್ಲಿ ಬೇಕಾದವುಗಳನ್ನು ಮಾತ್ರ ಉಳಿಸಿಕೊಂಡು ಬೇಡದವುಗಳನ್ನು ತೆಗೆದುಹಾಕಿರುವುದು ಒಂದು ಬಗೆಯ ಮಾರ‍್ಪಾಡು, ಮತ್ತು ಬಳಕೆಯಲ್ಲಿರುವ ಬರಿಗೆಗಳನ್ನೇ ಬಿಟ್ಟುಕೊಟ್ಟು, ಅವುಗಳ ಬದಲಿಗೆ ಬೇರೆ ಬಗೆಯ ಬರಿಗೆಗಳನ್ನು ಬಳಸತೊಡಗಿರುವುದು ಇನ್ನೊಂದು ಬಗೆಯ ಮಾರ‍್ಪಾಡು.

ಗ್ರೀಕ್ ಬರಹದಲ್ಲಿ ಪದಗಳನ್ನು ಹಿಂದಿನ ಕಾಲದಲ್ಲಿದ್ದಂತೆ ಬರೆಯಲು ಹಲವು ಹೆಚ್ಚಿನ ಬರಿಗೆಗಳನ್ನು ಬಳಸಲಾಗುತ್ತಿತ್ತು; ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡಲು, 1982ರಲ್ಲಿ ಬೇಡದಿರುವ ಬರಿಗೆಗಳನ್ನೆಲ್ಲ ಬಿಟ್ಟುಕೊಡಲಾಯಿತು. ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಬರಿಗೆಗಳ ಬಳಕೆಯಿಲ್ಲ; ಕೆಲವರು ಗ್ರೀಕ್ ಪಂಡಿತರು ಮಾತ್ರ ಅವನ್ನು ಬಳಸುತ್ತಿದ್ದಾರೆ.

ಜಪಾನೀಸ್ ಬರಹದ ಕನ ಬರಿಗೆಗಳು ಒಂಬತ್ತನೇ ಶತಮಾನದಲ್ಲಿ ಸರಿಯಾಗಿದ್ದುವು; ಆದರೆ, ಆಮೇಲೆ ಮಾತಿನಲ್ಲಿ ನಡೆದ ಮಾರ‍್ಪಾಡುಗಳಿಂದಾಗಿ ಅವಕ್ಕೂ ಅವುಗಳ ಓದಿಗೂ ನಡುವೆ ಹಲವು ವ್ಯತ್ಯಾಸಗಳು ಮೂಡಿಬಂದುವು. 1946ರಲ್ಲಿ ಇವನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾರ‍್ಪಡಿಸಲಾಯಿತು, ಮತ್ತು ಓದಿನಲ್ಲಿಲ್ಲದ ಕೆಲವು ಬರಿಗೆಗಳನ್ನು ಬಿಟ್ಟುಕೊಡಲಾಯಿತು.

ಕೊರಿಯನ್ ಬರಹದಲ್ಲಿ ಅವರವೇ ಆದ ಪದಗಳನ್ನು ಬರೆಯಲು ಹಂಗುಲ್ ಎಂಬ ತುಂಬಾ ಚನ್ನಾಗಿರುವ ಬರಿಗೆಗಳನ್ನು ಬಳಸಲಾಗುತ್ತಿದೆ; ಆದರೆ, ಚಯ್ನೀಸ್‌ನಿಂದ ಎರವಲು ಪಡೆದ ಪದಗಳನ್ನು ಬರೆಯಲು ತೊಡಕು ತೊಡಕಾಗಿರುವ ಚಯ್ನೀಸ್ ಮೂಲದ ಹಂಜ ಎಂಬ ಬರಿಗೆಗಳನ್ನು ಬಳಸಲಾಗುತ್ತಿದೆ. 1949ರಲ್ಲಿ ಈ ಚಯ್ನೀಸ್ ಎರವಲು ಪದಗಳನ್ನೂ ಹಂಗುಲ್‌ನಲ್ಲಿಯೇ ಬರೆಯುವ ನಿರ‍್ದಾರವನ್ನು ಉತ್ತರ ಕೊರಿಯಾದಲ್ಲಿ ಮಾಡಲಾಯಿತು, ಮತ್ತು ಇದರಿಂದಾಗಿ ಆ ನಾಡಿನಲ್ಲಿ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಯಿತು.

ದಕ್ಶಿಣ ಕೊರಿಯಾದಲ್ಲೂ ಹಂಜ ಬರಿಗೆಗಳ ಎಣಿಕೆಯನ್ನು ಸಾಕಶ್ಟು ಕಡಿಮೆ ಮಾಡಲಾಗಿದೆ, ಮತ್ತು ಅವನ್ನು ಎಲಿಮೆಂಟರಿ ಶಾಲೆಗಳಲ್ಲಿ ಕಲಿಸದಿರುವಂತೆ, ಮತ್ತು ಮಕ್ಕಳ ಪುಸ್ತಕಗಳಲ್ಲಿ, ಮತ್ತು ಎಲ್ಲಾ ಜನರೂ ಓದಬೇಕಾಗಿರುವ ಬರಹಗಳಲ್ಲಿ ಬಳಸದಿರುವಂತೆ ನೋಡಿಕೊಳ್ಳಲಾಗುತ್ತಿದೆ.

ಬರಹಗಳಲ್ಲಿ ಬರುವ ಪದಗಳನ್ನು ಓದುವ ಹಾಗೆಯೇ ಬರೆಯುವಂತೆ ಮಾಡುವುದಕ್ಕಾಗಿ ಟರ‍್ಕಿ, ಇಂಡೊನೇಶ್ಯಾ, ಮಲಯೇಶ್ಯಾ, ಸೋಮಾಲಿಯಾ ಮೊದಲಾದೆಡೆಗಳಲ್ಲಿ, ಮತ್ತು ಸೋವಿಯಟ್ ಯೂನಿಯನ್‌ನ ಹಲವು ನಾಡುಗಳಲ್ಲಿ ಅರೇಬಿಕ್ ಮೂಲದ ಬರಿಗೆಗಳನ್ನು ಬಿಟ್ಟುಕೊಟ್ಟು ರೋಮನ್ ಮೂಲದ ಬರಿಗೆಗಳನ್ನು ಬಳಕೆಗೆ ತರಲಾಗಿದೆ. ಇದರಿಂದಾಗಿ ಈ ನಾಡುಗಳಲ್ಲಿಯೂ ಬರಹಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತಿದೆ.

ಇದಕ್ಕೆ ಬದಲು, ಅರೇಬಿಕ್ ಬರಿಗೆಗಳನ್ನು ಬಳಸುತ್ತಿರುವ ಇರಾನ್, ಇರಾಕ್ ಮೊದಲಾದ ಹಲವು ನಾಡುಗಳಲ್ಲಿ ಇವತ್ತಿಗೂ ಬರಹ ಬಲ್ಲವರ ಎಣಿಕೆ ತುಂಬಾ ಕಡಿಮೆಯಿದೆ. ಇದಕ್ಕೆ ಕೆಲವು ಸಾಮಾಜಿಕ ತೊಡಕುಗಳೂ ಕಾರಣವಿರಬಹುದು; ಆದರೆ, ಬರಹಗಳಲ್ಲಿ ಪದಗಳನ್ನು ಓದುವ ಹಾಗೆ ಬರೆಯದಿರುವುದು, ಮತ್ತು ಇದರಿಂದಾಗಿ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ತುಂಬಾ ತೊಡಕಿನದಾಗಿರುವುದೂ ಒಂದು ಕಾರಣವೆಂಬುದರಲ್ಲಿ ಸಂಶಯವಿಲ್ಲ.

ಪದಗಳನ್ನು ಹೆಚ್ಚು ಕಡಿಮೆ ಓದುವ ಹಾಗೆಯೇ ಬರೆಯುವಂತೆ ಮಾಡಲು ಇತ್ತೀಚೆಗೆ ಬೇರೆ ಹಲವಾರು ನುಡಿಗಳ ಬರಹಗಳಲ್ಲೂ ಮಾರ‍್ಪಾಡುಗಳನ್ನು ನಡೆಸಲಾಗಿದೆ. ವಿಯೆಟ್ನಾಮ್‌ನಲ್ಲಿ ಚಯ್ನೀಸ್ ಬರಿಗೆಗಳ ಬದಲು ರೋಮನ್ ಮೂಲದ ಬರಿಗೆಗಳನ್ನು ಬಳಸಲು ತೊಡಗಿದುದರಿಂದಾಗಿ ಇವತ್ತು ವಿಯೆಟ್ನಮೀಸ್ ಬರಹಗಳಲ್ಲಿ ಚಯ್ನೀಸ್ ಎರವಲುಗಳನ್ನೂ ಓದುವ ಹಾಗೆಯೇ ಬರೆಯಲು ಸಾದ್ಯವಾಗಿದೆ; ಈ ಮಾರ‍್ಪಾಡನ್ನು ನಡೆಸಿದ ಬಳಿಕ ಅಲ್ಲಿಯೂ ಓದುಬಲ್ಲವರ ಎಣಿಕೆ ತುಂಬಾ ಹೆಚ್ಚಾಗಿದೆಯೆಂದು ಹೇಳಲಾಗುತ್ತದೆ.

ಯುರೋಪಿನ ಹಲವಾರು ನುಡಿಗಳಲ್ಲೂ ಇತ್ತೀಚೆಗೆ ಬರಹಗಳಲ್ಲಿ ಮಾರ‍್ಪಾಡುಗಳನ್ನು ನಡೆಸುವ ಮೂಲಕ ಓದಿಗೂ ಬರಹಕ್ಕೂ ನಡುವಿರುವ ಅಂತರವನ್ನು ಕಡಿಮೆ ಮಾಡಲಾಗಿದೆ. ಹೆಸರು(ನಾಮ)ಪದಗಳನ್ನು ಬರೆಯುವಾಗ ಅವುಗಳ ಮೊದಲಿಗೆ ದೊಡ್ಡ ಬರಿಗೆಯನ್ನು ಬಳಸಬೇಕೆಂಬ ಕಟ್ಟಲೆಯನ್ನು ಡೇನಿಶ್‌ನಲ್ಲಿ ಬಿಟ್ಟುಕೊಡಲಾಗಿದೆ; ಕೊಟ್ಟಹೆಸರುಗಳಲ್ಲಿ ಮಾತ್ರ ಈ ಕಟ್ಟಲೆಯನ್ನು ಉಳಿಸಿಕೊಳ್ಳಲಾಗಿದೆ.

ಜರ‍್ಮನಿ, ಆಸ್ಟ್ರಿಯಾ, ಮತ್ತು ಸ್ವಿಜರ್‌ಲೇಂಡ್‌ಗಳಲ್ಲಿಯೂ ಜರ‍್ಮನ್ ಬರಹಗಳಲ್ಲಿರುವ ಬರಿಗೆಗಳ ಬಳಕೆಯಲ್ಲಿ ಹಲವು ಮಾರ‍್ಪಾಡುಗಳನ್ನು ನಡೆಸಬೇಕೆಂಬ ತೀರ‍್ಮಾನಕ್ಕೆ ಇತ್ತೀಚೆಗೆ ಬರಲಾಗಿತ್ತು; ಪದಗಳನ್ನು ಹೆಚ್ಚುಕಡಿಮೆ ಓದುವ ಹಾಗೆಯೇ ಬರೆಯಬೇಕೆಂಬುದೇ ಈ ಮಾರ‍್ಪಾಡುಗಳ ಮುಕ್ಯ ಉದ್ದೇಶವಾಗಿತ್ತು. ಈ ತೀರ‍್ಮಾನವನ್ನು 1996ರಲ್ಲಿ ಬಳಕೆಗೆ ತರಲಾಯಿತು.
ಆದರೆ, ಇದನ್ನು ವಿರೋದಿಸುವವರೂ ಕೆಲವರಿದ್ದು, ಜರ‍್ಮನಿಯಲ್ಲಿ ಈ ಮಾರ‍್ಪಾಡುಗಳನ್ನು ಬಳಸುವುದು ಶಾಲೆಗಳಲ್ಲಿ ಮಾತ್ರ ಕಡ್ಡಾಯವಾಗಿದೆ. ಹೀಗಿದ್ದರೂ, ಇವತ್ತು ಹೆಚ್ಚಿನ ಬರಹಗಳಲ್ಲೂ ಈ ಮಾರ‍್ಪಡಿಸಿದ ಬರಿಗೆಗಳೇ ಬಳಕೆಯಾಗುತ್ತಿವೆ; ಕೆಲವು ಪತ್ರಿಕೆಗಳು ಮತ್ತು ಪುಸ್ತಕಗಳು ಮಾತ್ರ ಹಳೇ ಬರಹಕ್ಕೆ ಜೋತುಬಿದ್ದಿವೆ.

ಪೋರ‍್ಚುಗೀಸ್ ಬರಹದಲ್ಲೂ ಅದನ್ನು ಬಳಸುವ ಹಲವು ನಾಡುಗಳು ಒಟ್ಟುಸೇರಿ ಇಂತಹದೇ ಮಾರ‍್ಪಾಡನ್ನು ಬಳಕೆಗೆ ತಂದಿವೆ; ಇದಕ್ಕೆ ಮೊದಲು, ಪದಗಳನ್ನು ಅವುಗಳ ಮೂಲರೂಪ ಎಂತಹದು ಎಂಬುದನ್ನು ಸೂಚಿಸುವಂತೆ ಬರೆಯಲಾಗುತ್ತಿತ್ತು; ಆದರೆ, ಈ ರೂಪಗಳಿಗೂ ಅವನ್ನು ಓದುವ ಬಗೆಗೂ ನಡುವೆ ಯಾವ ಹೊಂದಾಣಿಕೆಯೂ ಇರಲಿಲ್ಲ; ಹಾಗಾಗಿ, ಅವುಗಳ ಈ ಹಳೆಯ ರೂಪಗಳನ್ನು ಬಿಟ್ಟುಕೊಟ್ಟು, ಆದಶ್ಟು ಮಟ್ಟಿಗೆ ಇವತ್ತು ಅವನ್ನು ಹೇಗೆ ಓದಲಾಗುತ್ತದೆಯೋ ಹಾಗೆಯೇ ಬರೆಯುವಂತೆ ಅವುಗಳಲ್ಲಿ ಮಾರ‍್ಪಾಡುಗಳನ್ನು ಮಾಡಲಾಗಿದೆ.

ಒಂದು ನಾಡಿನಲ್ಲಿ ಓದು-ಬರಹ ಬಲ್ಲವರ ಎಣಿಕೆ ಎಶ್ಟಿದೆ ಎಂಬುದು ಆ ನಾಡಿನ ಬರಹಗಳಲ್ಲಿ ಬಳಕೆಯಾಗುತ್ತಿರುವ ಬರಿಗೆಗಳನ್ನು ಕಲಿಯಲು ಮತ್ತು ಬಳಸಲು ಎಶ್ಟು ಸುಲಬ ಎಂಬುದರ ಮೇಲೆ ಮಾತ್ರವಲ್ಲದೆ, ಅಲ್ಲಿನ ಜನರ ಮೇಲೆ ಓದಿನ ಕುರಿತಾಗಿ ಎಂತಹ ಆಳ್ವಿಕೆಯ ಒತ್ತಡ, ನೆರೆಹೊರೆಯ ಒತ್ತಡ, ಮತ್ತು ಮನೆಯವರ ಒತ್ತಡವಿದೆ ಎಂಬುದರ ಮೇಲೂ ಅವಲಂಬಿಸಿರುತ್ತದೆ; ಹಾಗಾಗಿ, ಕನ್ನಡದ ಬರಿಗೆಗಳಲ್ಲಿ ಮಾರ‍್ಪಾಡುಗಳನ್ನು ಮಾಡದಿದ್ದರೂ ಬರಹ ಬಲ್ಲವರ ಎಣಿಕೆ ಹೆಚ್ಚಬಲ್ಲುದು ಎಂಬುದಾಗಿ ಕೆಲವರಿಗೆ ಅನಿಸಬಹುದು.

ಆದರೆ, ಬರಿಗೆಗಳ ತೊಡಕೂ ಬರಹ ಬಲ್ಲವರ ಎಣಿಕೆ ಕಡಿಮೆಯಿರಲು ಒಂದು ಕಾರಣ ಎಂಬುದನ್ನು ಕಂಡುಕೊಂಡು, ಮೇಲೆ ಕೊಟ್ಟಿರುವಂತಹ ಹಲವಾರು ನುಡಿಗಳ ಬರಹಗಳಲ್ಲಿ ಬರಿಗೆಗಳನ್ನು ಮಾರ‍್ಪಡಿಸಲಾಗಿದೆ, ಮತ್ತು ಹಾಗೆ ಮಾಡುವ ಮೂಲಕ ಬರಹ ಬಲ್ಲವರ ಎಣಿಕೆಯನ್ನು ಹೆಚ್ಚಿಸಿಕೊಳ್ಳಲಾಗಿದೆ ಎಂಬುದನ್ನು ಮರೆಯಬಾರದು.

ಇಂಗ್ಲಿಶ್‌ನಲ್ಲಿ ಉಲಿಕೆಗೂ ಬರಿಗೆಗೂ ನಡುವೆ ಹೊಂದಾಣಿಕೆ ತುಂಬಾ ಕಡಿಮೆಯಿದೆಯಾದರೂ ಅದನ್ನು ಕಲಿಯುವವರ ಎಣಿಕೆ ತುಂಬಾ ಹೆಚ್ಚಿದೆಯಲ್ಲ ಎಂದು ಕೆಲವರು ಹೇಳಬಹುದು. ಆದರೆ, ಇಂಗ್ಲಿಶ್ ಬರಹದ ಈ ಸ್ಪೆಲ್ಲಿಂಗ್ ತೊಡಕಿನಿಂದಾಗಿ, ಅದನ್ನು ಕಲಿಯುವ ಮಕ್ಕಳಿಗೆ ಬೇರೆ ಬರಹಗಳನ್ನು ಕಲಿಯಲು ಬೇಕಾಗುವ ಸಮಯದ ಮೂರು ಪಾಲಶ್ಟು ಸಮಯ ಬೇಕಾಗುತ್ತದೆ.

ಇದಲ್ಲದೆ, ಹಾಗೆ ಕಶ್ಟಪಟ್ಟು ಕಲಿತವರಲ್ಲಿಯೂ ಹಲವರಿಗೆ ಸರಿಯಾಗಿ ಓದುವುದು ಹೇಗೆ ಎಂಬುದೇ ಗೊತ್ತಾಗಿರುವುದಿಲ್ಲ, ಮತ್ತು ಇದರಿಂದಾಗಿ ಅವರು ಆದಶ್ಟು ಮಟ್ಟಿಗೆ ಓದಿನಿಂದ ದೂರವೇ ಉಳಿಯಲು ಬಯಸುತ್ತಾರೆ. ಅಮೆರಿಕಾದಂತಹ ಮುಂದುವರಿದ ನಾಡುಗಳಲ್ಲೂ ಈ ತೊಂದರೆಯಿದೆ.

ಕನ್ನಡದ ಮಕ್ಕಳು ಈ ರೀತಿ ಕನ್ನಡ ಬರಹಗಳನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ತೊಂದರೆಗೊಳಗಾಗದಂತೆ ಮಾಡಲು, ಮತ್ತು ಅವನ್ನು ಎಲ್ಲಾ ಮಕ್ಕಳೂ ಸುಲಬವಾಗಿ ಮತ್ತು ಸರಿಯಾಗಿ ಓದಲು ಸಾದ್ಯವಾಗುವಂತೆ ಮಾಡಲು ಋ, ಷ, ಮಹಾಪ್ರಾಣ ಮೊದಲಾದ ಕನ್ನಡದ ಮಟ್ಟಿಗೆ ಬೇಡದಿರುವ ಕೆಲವು ಬರಿಗೆಗಳನ್ನು ಇವತ್ತು ಬಿಟ್ಟುಕೊಡಬೇಕಾಗಿದೆ. ಕನ್ನಡಿಗರಿಗೆ ತಮ್ಮ ನುಡಿಯ ಮೇಲಿರುವ ಕೀಳರಿಮೆಯನ್ನು ಇಲ್ಲವಾಗಿಸುವಲ್ಲಿಯೂ ಇದು ನೆರವಾಗಬಲ್ಲುದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter