ಕನ್ನಡ ಬರಹಗಳಲ್ಲಿ ‘ಕರಣ’ದ ಹಾವಳಿ

ನುಡಿಯರಿಮೆಯ ಇಣುಕುನೋಟ – 32

ಕನ್ನಡ ಬರಹಗಳಲ್ಲಿ ಇತ್ತೀಚೆಗೆ ಸಂಸ್ಕ್ರುತದ ‘ಕರಣ’ ಎಂಬ ಪದದ ಬಳಕೆ ತುಂಬಾ ಹೆಚ್ಚಾಗುತ್ತಿದೆ; ಅದನ್ನು ಬಳಸುವವರು ನಿಜಕ್ಕೂ ಅದು ಬೇಕೇ ಇಲ್ಲವೇ ಬೇಡವೇ ಎಂಬುದನ್ನು ಗಮನಿಸುವುದೇ ಇಲ್ಲ. ಹಲವೆಡೆಗಳಲ್ಲಿ ಅದಕ್ಕೆ ಬದಲು ಕನ್ನಡದ್ದೇ ಆದ ‘ಇಸು’ ಒಟ್ಟನ್ನು ಬಳಸುವುದೇ ಕನ್ನಡದ ಮಟ್ಟಿಗೆ ಒಳ್ಳೆಯದು. ಯಾಕೆಂದರೆ, ‘ಕರಣ’ ಪದದ ಬಳಕೆಯಿಂದಾಗಿ ಮೂಡುವ ಹಲವು ಬಗೆಯ ಗೊಂದಲಗಳು ‘ಇಸು’ ಒಟ್ಟಿನ ಬಳಕೆಯಲ್ಲಿ ಕಾಣಿಸುವುದಿಲ್ಲ. ಇದಲ್ಲದೆ, ಕನ್ನಡದ್ದೇ ಆದ ‘ಇಸು’ ಒಟ್ಟಿನ ಬಳಕೆಯ ಹಿಂದಿರುವ ಕಟ್ಟಲೆಗಳು ಎಲ್ಲಾ ಕನ್ನಡಿಗರಿಗೂ ತಿಳಿದಿರುತ್ತವೆ; ಹಾಗಾಗಿ, ‘ಕರಣ’ ಪದದ ಬಳಕೆಯ ಹಾಗೆ ಹೊಸ ಕಟ್ಟಲೆಗಳನ್ನು ಅವರು ಕಲಿಯಬೇಕಾಗುವುದಿಲ್ಲ.

ಸಂಸ್ಕ್ರುತದ ಎರವಲುಗಳೊಂದಿಗೆ ಮಾತ್ರವಲ್ಲದೆ ಇಂಗ್ಲಿಶ್, ಪರ್ಶಿಯನ್ ಮೊದಲಾದ ಬೇರೆ ಎರವಲು ಪದಗಳೊಂದಿಗೆ, ಮತ್ತು ಕನ್ನಡದವೇ ಆದ ಪದಗಳೊಂದಿಗೂ ಈ ‘ಕರಣ’ ಎಂಬುದನ್ನು ಬಳಸಲಾಗುತ್ತದೆ; ಸಬಲೀಕರಣ, ಉದಾರೀಕರಣ, ಪ್ರಮಾಣೀಕರಣ ಎಂಬ ಪದಗಳ ಹಾಗೆ, ಡಿಜಿಟಲೀಕರಣ, ಅಯಾನೀಕರಣ, ಕಾಸಗೀಕರಣ, ದಾಕಲೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ.

ಕನ್ನಡದ ಹಸಿರು ಪದದಿಂದ ಹಸಿರೀಕರಣ, ಅಗಲ ಪದದಿಂದ ಅಗಲೀಕರಣ, ಮತ್ತು ಕಯ್ಗಾರಿಕೆ ಪದದಿಂದ ಕಯ್ಗಾರಿಕೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ. ಇಂತಹ ಹಲವು ಕಡೆಗಳಲ್ಲಿ ಸಬಲಿಸು, ಪ್ರಮಾಣಿಸು, ಡಿಜಿಟಲಿಸು, ಅಯಾನಿಸು, ದಾಕಲಿಸು, ಹಸಿರಿಸು, ಅಗಲಿಸು ಎಂಬಂತಹ ಪದಗಳನ್ನು ಮತ್ತು ಅವುಗಳ ಹೆಸರುರೂಪಗಳಾದ ಪ್ರಮಾಣಿಸುವಿಕೆ, ದಾಕಲಿಸುವಿಕೆ, ಅಯಾನಿಸುವಿಕೆ, ಹಸಿರಿಸುವಿಕೆ ಎಂಬಂತಹ ಪದಗಳನ್ನೂ ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ.

‘ಕರಣ’ ಎಂಬುದನ್ನು ಬಳಸುವವರಲ್ಲಿ ಹಲವರಿಗೆ ಅದರೊಂದಿಗೆ ಬರುವ ಹೆಸರುಪದದಲ್ಲಿ ಎಂತಹ ಮಾರ್ಪಾಡುಗಳನ್ನೆಲ್ಲ ಮಾಡಬೇಕು ಎಂಬ ವಿಶಯದಲ್ಲೂ ಗೊಂದಲಗಳಿವೆ; ಕೆಲವರು ಆದುನಿಕೀಕರಣ, ಜಾಗತಿಕೀಕರಣ, ಯಾಂತ್ರಿಕೀಕರಣ ಎಂದು ಬರೆದರೆ, ಇನ್ನು ಕೆಲವರು ಆದುನೀಕರಣ, ಜಗತೀಕರಣ, ಯಾಂತ್ರೀಕರಣ ಎಂಬುದಾಗಿ ಬರೆಯುತ್ತಾರೆ. ಸಾಮಾಜೀಕರಣವೂ ಇದೆ, ಸಮಾಜೀಕರಣವೂ ಇದೆ; ಸಾದ್ರುಶೀಕರಣವೂ ಇದೆ, ತುರ್ತುಕರಣವೂ ಇದೆ. ಮೇಲಿನ ಪದಗಳಲ್ಲಿ ಬಳಕೆಯಾಗಿರುವ ಮಹಾಪ್ರಾಣಾಕ್ಶರಗಳನ್ನು ಈ ಅಂಕಣದಲ್ಲಿ ಕಯ್ಬಿಡಲಾಗಿದೆ; ಆದರೆ, ಅದರ ಬಳಕೆಯಲ್ಲೂ ಸಾಕಶ್ಟು ಗೊಂದಲಗಳಿವೆ.

‘ಕರಣ’ ಪದವನ್ನು ಬಳಸುವವರೂ ಆ ಪದಗಳಿಂದ ಎಸಕ(ಕ್ರಿಯಾ)ಪದಗಳನ್ನು ಉಂಟುಮಾಡಬೇಕಿದ್ದಲ್ಲಿ ಕನ್ನಡದ ‘ಇಸು’ ಒಟ್ಟನ್ನು ಬಳಸಲೇಬೇಕಾಗುತ್ತದೆ; ಸಬಲೀಕರಣ, ದಾಕಲೀಕರಣ, ಡಿಜಿಟಲೀಕರಣ ಎಂಬಂತಹ ಪದಗಳನ್ನು ಬಳಸುವವರು ಅವುಗಳಿಂದ ಎಸಕಪದವನ್ನು ಪಡೆಯಬೇಕಿದ್ದಲ್ಲಿ ಸಬಲೀಕರಿಸು, ದಾಕಲೀಕರಿಸು, ಡಿಜಿಟಲೀಕರಿಸು ಎಂಬುದಾಗಿ ಇಸು ಒಟ್ಟನ್ನು ಸೇರಿಸಿಯೇ ಹೇಳಬೇಕಾಗುತ್ತದೆ; ಇದಕ್ಕೆ ಬದಲು ಸಬಲಿಸು, ದಾಕಲಿಸು, ಡಿಜಿಟಲಿಸು ಎಂದಶ್ಟೇ ಹೇಳಿದರೆ ಸಾಕಾಗುವುದಿಲ್ಲವೇ? ಅವುಗಳ ನಡುವೆ ಕರಣವನ್ನು ಯಾಕೆ ತಂದುಹಾಕಬೇಕು? ಸ್ತಿರೀಕರಣಗೊಳ್ಳು ಎಂಬುದೂ ಇಂತಹದೇ ಇನ್ನೊಂದು ಅನವಶ್ಯಕವಾದ ಕರಣ ಪದವನ್ನು ಸೇರಿಸಿರುವ ಪದರೂಪ; ಸ್ತಿರಗೊಳ್ಳು ಎಂಬುದು ಹೆಚ್ಚು ಅಡಕವಾಗಿ ಅದೇ ಹುರುಳನ್ನು ಕೊಡಬಲ್ಲುದು.

ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡುವಲ್ಲೂ ಕನ್ನಡದ ಅರಿವಿಗರು ಈ ‘ಕರಣ’ ಪದವನ್ನು ಹಲವೆಡೆಗಳಲ್ಲಿ ಬಳಸಿದ್ದಾರೆ; ಕಾರ್ಬನೀಕರಣ, ನಯ್ಟ್ರೀಕರಣ, ಪಾಲಿಮರೀಕರಣ ಎಂಬಂತಹ ಈ ಪದಗಳನ್ನು ಬಳಸಿದಲ್ಲಿ, ಅವಕ್ಕೆ ಸಂಬಂದಿಸಿದಂತೆ ಕರಿಸು (ಅಯಾನೀಕರಿಸು), ಕ್ರುತ (ಅಯಾನೀಕ್ರುತ), ಕಾರಕ (ಅಯಾನೀಕಾರಕ), ಕಾರಿ (ಅಯಾನೀಕಾರಿ) ಎಂಬಂತಹ ಕರಣ ಪದಕ್ಕೆ ಸಂಬಂದಿಸಿದಂತಹ ಬೇರೆ ಕೆಲವು ಪದಗಳನ್ನೂ ಬಳಸಬೇಕಾಗುತ್ತದೆ, ಮತ್ತು ಅವು ಕನ್ನಡದ್ದಲ್ಲವಾದ ಕಾರಣ, ಅವನ್ನು ಬಳಸುವಲ್ಲಿ ಹಲವಾರು ತಪ್ಪುಗಳೂ ಕಾಣಿಸಿಕೊಳ್ಳುತ್ತವೆ; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದಲ್ಲಿ ಕನ್ನಡದಲ್ಲಿ ಈಗಾಗಲೇ ಬಳಕೆಯಲ್ಲಿರುವ ಮತ್ತು ಎಲ್ಲಾ ಕನ್ನಡಿಗರಿಗೂ ತಿಳಿದಿರುವ ಇಸುವಿಕೆ (ಅಯಾನಿಸುವಿಕೆ), ಇಸಿದ (ಅಯಾನಿಸಿದ), ಇಸುವ (ಅಯಾನಿಸುವ) ಎಂಬಂತಹ ರೂಪಗಳನ್ನು ಬಳಸಲು ಬರುತ್ತದೆ.

ಇಂತಹ ಕಡೆಗಳಲ್ಲಿ ಅರಿವಿಗರು ಇನ್ನೂ ಒಂದು ತೊಡಕನ್ನು ಎದುರಿಸಬೇಕಾಗುತ್ತದೆ: ಇಂಗ್ಲಿಶ್ನ ಅಯ್ಸ್ ಎಂಬ ಒಟ್ಟು ಬಂದಿರುವಲ್ಲಿ ಕರಿಸು ಎಂಬುದನ್ನು ಬಳಸುವ (ಪೋಲರಯ್ಸ್ – ದ್ರುವೀಕರಿಸು, ಅನೊಡಯ್ಸ್ – ಅನೊಡೀಕರಿಸು) ಈ ಅರಿವಿಗರು ಇಂಗ್ಲಿಶ್ನ ಅಯ್ಸ್ ಎಂಬುದಕ್ಕಿರುವ ಮಾಡುವಿಕೆ ಮತ್ತು ಆಗುವಿಕೆ ಎಂಬ ಎರಡು ಹುರುಳುಗಳಲ್ಲಿ ಒಂದನ್ನು ಮಾತ್ರ ತಿಳಿಸಬಲ್ಲರು; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದರೆ ಆ ಎರಡು ಹುರುಳುಗಳನ್ನೂ ತಿಳಿಸಬಲ್ಲರು. ಯಾಕೆಂದರೆ, ಕರಣ ಎಂಬುದಕ್ಕೆ ಆಗುವಿಕೆ ಎಂಬ ಹುರುಳು ಸಿಗಲಾರದು; ಆದರೆ, ಇಸು ಎಂಬುದನ್ನು ಬಳಸಿರುವ ಅನೋಡಿಸು, ಅಲ್ಯೂಮಿನಿಸು ಎಂಬುವಕ್ಕೆ ಆಗುವಿಕೆಯ ಹುರುಳೂ ಸಿಗಬಲ್ಲುದು.

ಅರಿಮೆಯ (ಪಾರಿಬಾಶಿಕ)ಪದಗಳನ್ನು ಉಂಟುಮಾಡುವಲ್ಲಿ ಆತ್ಮಕ ಎಂಬುದನ್ನು ಬಳಸುವುದೂ ಇಂತಹದೇ ಒಂದು ಬೇಕಿಲ್ಲದ ಚಾಳಿ. ನುಡಿಯರಿಮೆಯ ಒಂದು ಪದನೆರಕೆಯಲ್ಲಿ ಈ ರೀತಿ ಆತ್ಮಕ ಎಂಬುದನ್ನು ಬಳಸಿರುವ ಇನ್ನೂರಯ್ವತ್ತಕ್ಕಿಂತಲೂ ಹೆಚ್ಚು (ಎಂದರೆ, ಸುಮಾರು ನೂರಕ್ಕೆ ಹದಿಮೂರರಶ್ಟು) ಪದಗಳಿವೆ! ಇವುಗಳಲ್ಲಿ ಹೆಚ್ಚಿನವುಗಳಲ್ಲಿಯೂ ಆತ್ಮಕ ಎಂಬುದನ್ನು ಬಳಸಬೇಕಾಗಿಯೇ ಇಲ್ಲ (ವ್ಯಾಕರಣಾತ್ಮಕ ನಿಯಮ – ವ್ಯಾಕರಣ ನಿಯಮ, ದ್ವನ್ಯಾತ್ಮಕ ರಚನೆ – ದ್ವನಿರಚನೆ, ಪ್ರೇರಣಾತ್ಮಕ ವಾಕ್ಯ – ಪ್ರೇರಣ ವಾಕ್ಯ). ಅರಿಮೆಯ ಪದಗಳು ಸಿಕ್ಕಲಾಗಿದ್ದಶ್ಟೂ ಒಳ್ಳೆಯದು ಎಂಬ ಅನಿಸಿಕೆ ಈ ಪದಗಳನ್ನು ಉಂಟುಮಾಡಿರುವ ಅರಿವಿಗರಲ್ಲಿರುವ ಹಾಗೆ ಕಾಣಿಸುತ್ತದೆ.

ಇದಲ್ಲದೆ, ತಮ್ಮ ಬರಹಗಳಲ್ಲಿ ಎಲ್ಲರಿಗೂ ಗೊತ್ತಾಗುವ ಕನ್ನಡದವೇ ಆದ ಪದಗಳನ್ನು ಬಳಸುವ ಬದಲು ಸಂಸ್ಕ್ರುತದ ಎರವಲುಗಳನ್ನು ತಂದು ತುಂಬಿಸಿದರೆ ಅವುಗಳ ಮಟ್ಟ ಮೇಲೇರುತ್ತದೆಯೆಂದು ಕೆಲವರು ತಿಳಿದ ಹಾಗಿದೆ. ಆದರೆ, ಹಲವು ಮಂದಿ ಹೀಗೆ ಮಾಡುವಲ್ಲಿ ಹಲವು ಬಗೆಯ ತಪ್ಪುಗಳನ್ನೂ ಮಾಡಿ ನಗುವಿಗೆ ಎಡೆಮಾಡಿಕೊಡುತ್ತಾರೆ. ‘ಕಾರಣ’ ಎಂಬ ಪದದ ಬದಲು ಹಲವು ಮಂದಿ ‘ಸಕಾರಣ’ ಎಂಬ ಪದವನ್ನು ಬಳಸುತ್ತಾರೆ; ಆದರೆ, ಇವೆರಡರ ನಡುವೆ ಹುರುಳಿನಲ್ಲಿ ವ್ಯತ್ಯಾಸವಿದೆ ಎಂಬುದನ್ನು ಅವರು ಗಮನಿಸುವುದಿಲ್ಲ. ಸಕಾರಣ ಎಂಬುದಕ್ಕೆ ‘ಕಾರಣವಿರುವ’ ಎಂಬ ಹುರುಳಿದೆ. ಇದನ್ನು ಗಮನಿಸದ ಕೆಲವರ ಬರಹಗಳಲ್ಲಿ ಸಕಾರಣವಿಲ್ಲದೆ, ಸಕಾರಣ ನೀಡದೆ, ಸಕಾರಣಗಳಿರಲಿಲ್ಲ ಎಂಬಂತಹ ಬಳಕೆಗಳನ್ನು ಕಾಣಬಹುದು! ಆದರೆ, ಇಂತಹದೇ ಬಳಕೆ ಮುಂದುವರಿದರೆ, ಸಕಾರಣ ಎಂಬುದಕ್ಕೆ ಕನ್ನಡದಲ್ಲಿ ಬರಿಯ ಕಾರಣ ಎಂಬುದರ ಹುರುಳೇ ಇರುವಂತಾದೀತು.

ಇಹಲೋಕ ಮತ್ತು ಪರಲೋಕ ಎಂಬ ಬೇರೆ ಎರಡು ಸಂಸ್ಕ್ರುತ ಎರವಲುಗಳ ಬಳಕೆಯೂ ಇಂತಹದೇ. ಅವುಗಳ ನಿಜವಾದ ಹುರುಳು ಏನೆಂದು ತಿಳಿಯದಿದ್ದರೂ ಬಳಸುವ ಆಸೆ. ಆತನನ್ನು ಕಚ್ಚಿದ ಹಾವೇ ಸತ್ತುಹೋಯಿತು ಎಂಬುದನ್ನು ಹೇಳಬೇಕಿರುವಲ್ಲಿ ಕಚ್ಚಿದ ಹಾವೇ ಇಹಲೋಕಕ್ಕೆ ಹೋಯಿತು ಎಂಬುದಾಗಿ ಬರೆದಿರುವುದನ್ನು ಕಾಣಬಹುದು! ಇಹಲೋಕ ಮತ್ತು ಪರಲೋಕಗಳೆಂಬ ಈ ಪದಗಳ ಬದಲು ಈ ಲೋಕ ಮತ್ತು ಬೇರೆ ಲೋಕ ಎಂಬ ಎಲ್ಲರಿಗೂ ಗೊತ್ತಾಗುವ ಪದಕಂತೆಗಳನ್ನು ಬಳಸಿದ್ದರೆ, ಇಂತಹ ತಪ್ಪು ಮಾಡಿ ನಗೆಪಾಟಲಾಗುವ ಹಾಗಾಗುತ್ತಿರಲಿಲ್ಲ.

ದಿನಪತ್ರಿಕೆಗಳಲ್ಲಿ ತಲೆಬರಹವನ್ನು ಬರೆಯುವವರೂ ಇಂತಹದೇ ಕೀಳರಿಮೆಯಿಂದ ಬಳಲುತ್ತಿರುವ ಹಾಗೆ ಕಾಣಿಸುತ್ತದೆ. ಒಂದು ಬರಹದಲ್ಲಿ ಉದ್ದಕ್ಕೂ ನಾಯಿ, ಬೆಕ್ಕು, ಕೋಳಿ, ಮೀನು ಎಂಬಂತಹ ಕನ್ನಡದವೇ ಆದ ಪದಗಳನ್ನು ಬರುತ್ತವೆ; ಆದರೆ, ತಲೆಬರಹದಲ್ಲಿ ಮಾತ್ರ ಶ್ವಾನ, ಮಾರ್ಜಾಲ, ಕುಕ್ಕುಟ, ಮತ್ಸ್ಯ ಎಂಬಂತಹ ಸಂಸ್ಕ್ರುತ ಎರವಲುಗಳು ಬರುತ್ತವೆ. ತಲೆಬರಹದಲ್ಲಿ ಎಲ್ಲರಿಗೂ ಗೊತ್ತಿರುವ ನಾಯಿ, ಬೆಕ್ಕು, ಮೀನು ಮೊದಲಾದ ಕನ್ನಡ ಪದಗಳು ಬಂದರೆ ದಿನಪತ್ರಿಕೆಯ ತಕ್ಕಮೆ ಇಲ್ಲವಾಗಬಹುದೆಂಬ ಹೆದರಿಕೆ ಅವರಿಗಿರುವಂತೆ ತೋರುತ್ತದೆ. ತನ್ನ ಮುದಿ ತಂದೆಯನ್ನು ಅಪ್ಪ ಎನ್ನಲು ಹಿಂಜರಿಯುವ ದೊಡ್ಡ ಅದಿಕಾರಿಯ ಕೀಳು ಸಂಸ್ಕ್ರುತಿಯಿದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter