Posts Tagged ‘ಪದಗಳು’

ಪದಗಳ ಹುರುಳು ಮತ್ತು ತಿಳಿವು

ನುಡಿಯರಿಮೆಯ ಇಣುಕುನೋಟ – 30

ಒಂದು ಪದವನ್ನು ಕೇಳಿದಾಗ ಅದರ ಅರ‍್ತವೇನೆಂದು ನಮಗೆ ಗೊತ್ತಾಗುತ್ತದೆ; ಆದರೆ, ನಿಜಕ್ಕೂ ಈ ‘ಅರ‍್ತ’ ಎಂದರೇನು? ಪದನೆರಕೆ(ಪದಕೋಶ)ಗಳಲ್ಲಿ ಪದಗಳ ಅರ‍್ತವೇನೆಂದು ಕೊಡಲಾಗುತ್ತದೆ; ಆದರೆ ಅವು ಇದಕ್ಕಾಗಿ ಒಂದು ಪದದ ಬದಲು ಅದೇ ಅರ‍್ತದ ಇಲ್ಲವೇ ಅದಕ್ಕೆ ಹತ್ತಿರದ ಅರ‍್ತದ ಬೇರೊಂದು ಪದವನ್ನು ಕೊಡುತ್ತವೆ. ‘ಎಲ್ಲೆ’ ಎಂಬ ಪದಕ್ಕೆ ಕನ್ನಡದ ಒಂದು ಪದಕೋಶ ‘ಗಡಿ’ ಎಂಬ ಇನ್ನೊಂದು ಪದವನ್ನು ಅದರ ಅರ‍್ತವೆಂದು ಕೊಡಬಹುದು.

ಆದರೆ ‘ಗಡಿ’ ಎಂಬುದೂ ಕನ್ನಡದಲ್ಲಿ ಬಳಕೆಯಾಗುವ ಒಂದು ಪದವಾದ ಕಾರಣ, ಅದಕ್ಕೂ ಅದರದೇ ಆದ ಅರ‍್ತ ಇದೆ. ಹಾಗಾಗಿ, ನಿಜಕ್ಕೂ ಅದು ‘ಎಲ್ಲೆ’ ಪದದ ಅರ‍್ತ ಏನು ಎಂಬುದನ್ನು ನಮಗೆ ತಿಳಿಸುವುದಿಲ್ಲ. ಆ ಎರಡು ಪದಗಳ ಅರ‍್ತ ಒಂದೇ ಎಂದಶ್ಟೇ ಅದು ತಿಳಿಸುತ್ತದೆ. ಹಾಗಾಗಿ, ‘ಎಲ್ಲೆ’ ಎಂಬುದಕ್ಕೆ ‘ಗಡಿ’ ಎಂಬ ಅರ‍್ತವನ್ನು ಕೊಡುವ ಪದನೆರಕೆ ‘ಗಡಿ’ ಎಂಬುದಕ್ಕೆ ‘ಎಲ್ಲೆ’ ಎಂಬ ಅರ‍್ತವನ್ನೂ ಕೊಟ್ಟಿರಬಹುದು!

ಕನ್ನಡ ಪದಕ್ಕೆ ಇಂಗ್ಲಿಶ್ ಪದ ಇಲ್ಲವೇ ಪದಕಂತೆಯ ಮೂಲಕವಾಗಲಿ ಇಲ್ಲವೇ ಬೇರೊಂದು ನುಡಿಯ ಪದದ ಮೂಲಕವಾಗಲಿ ಅರ‍್ತ ಹೇಳುವ ಪದನೆರಕೆಗಳೂ ಇವೆ. ಆದರೆ, ಇಂತಹ ಪದನೆರಕೆಗಳೂ ಎರಡು ಪದಗಳ ಅರ‍್ತ ಹೆಚ್ಚುಕಡಿಮೆ ಒಂದೇ ಎಂಬುದಾಗಿ ತಿಳಿಸುತ್ತವಲ್ಲದೆ ನಿಜಕ್ಕೂ ಆ ಅರ‍್ತ ಎಂತಹದು ಎಂಬುದನ್ನು ತಿಳಿಸುವುದಿಲ್ಲ. ನಾನು ಹೇಳಿದ್ದು ಅರ‍್ತವಾಯಿತೋ? ಎಂದು ಯಾರಾದರೂ ಕೇಳಿದರೆ ನಾವು ಅರ‍್ತವಾಯಿತು ಎಂದು ಹೇಳಬಹುದು. ಆದರೆ ಏನು ಅರ‍್ತವಾಯಿತು? ಎಂದು ಕೇಳಿದರೆ ಅಂತಹದೇ ಇನ್ನೊಂದು ಮಾತನ್ನು ಹೇಳಬಲ್ಲೆವಲ್ಲದೆ ಬೇರೇನೂ ಮಾಡಲಾರೆವು.

ಒಂದು ಮಾತನ್ನು ಕೇಳಿದ ಮೇಲೆ ನಾವು ಏನು ಮಾಡುತ್ತೇವೆ ಎಂಬುದರಿಂದ ನಮಗೆ ಆ ಮಾತು ಅರ‍್ತವಾಗಿದೆಯೋ ಇಲ್ಲವೋ ಎಂಬುದು ತಿಳಿದೀತು. ‘ಕುಳಿತುಕೊಳ್ಳಿ’ ಎಂದು ಹೇಳಿದಾಗ ಎದುರಿಗಿದ್ದವನು ಕುಳಿತುಕೊಂಡನಾದರೆ ಅವನಿಗೆ ಆ ಮಾತು ಅರ‍್ತವಾಗಿದೆಯೆಂದು ಹೇಳಬಹುದು. ಆದರೆ, ಆತ ಕುಳಿತುಕೊಳ್ಳದಿದ್ದರೂ ಆ ಮಾತು ಅವನಿಗೆ ಅರ‍್ತವಾಗಿಲ್ಲವೆಂದು ಹೇಳಲು ಬರುವುದಿಲ್ಲ. ಇದಲ್ಲದೆ ಹಾಗೆ ಮಾಡಬೇಕೆಂಬುದು ಆ ಮಾತಿನ ಅರ‍್ತವಲ್ಲದೆ ಹಾಗೆ ಮಾಡುವುದು ಅದರ ‘ಅರ‍್ತ’ವಲ್ಲ.

ಮೇಲಿನಿಂದ ಮೇಲೆ ನೋಡುವಾಗ ತೀರ ಸುಲಬವೆಂದು ಕಾಣಿಸಿದರೂ ವಿವರಿಸಹೊರಟಾಗ ತೀರ ತೊಡಕಿನದಾಗುವ ಈ ‘ಅರ‍್ತ’ ಎಂಬುದರ ಕುರಿತು ಹಲವಾರು ಮಂದಿ ತತ್ವಜ್ನಾನಿಗಳು ತಲೆಕೆಡಿಸಿಕೊಂಡಿದ್ದಾರೆ. ಇಲ್ಲಿ ನಮಗೆದುರಾಗುವ ಈ ತೊಡಕಿಗೆ ಮುಕ್ಯ ಕಾರಣವೇನೆಂದರೆ, ನಾವು ಬಳಸುವ ‘ಅರ‍್ತ’ ಇಲ್ಲವೇ ‘meaning’ ಎಂಬ ಪದ ಎರಡು ತೀರ ಬೇರಾಗಿರುವ ಪರಿಕಲ್ಪನೆಗಳನ್ನು ಸೂಚಿಸುತ್ತದೆ. ಒಂದು ಮಾತನ್ನು ಕೇಳಿದಾಗ ನಮಗೆ ಅದು ಅರ‍್ತವಾಗುತ್ತದೆ, ಮತ್ತು ಇದು ನಮ್ಮ ಅರಿವಿಗೆ ಎಟಕದ ರೂಪದಲ್ಲಿರುವ ಅರ‍್ತ.

ಈ ರೀತಿ ನಾವು ಮಾಡಿಕೊಂಡಿರುವ ಅರ‍್ತವನ್ನು ಇನ್ನೊಬ್ಬರಿಗೆ ತಿಳಿಸಬೇಕೆಂದಿದ್ದಲ್ಲಿ ಅದನ್ನು ಬೇರೊಂದು ರೀತಿಯ ಮಾತಿನ ಮೂಲಕವಾಗಲಿ ಇಲ್ಲವೇ ಸನ್ನೆ, ಚಿತ್ರ ಮೊದಲಾದವುಗಳ ಮೂಲಕವಾಗಲೀ ಸೂಚಿಸಬೇಕಾಗುತ್ತದೆ, ಮತ್ತು ಇದು ನಮ್ಮ ಅರಿವಿಗೆ ಎಟಕುವ ರೂಪದಲ್ಲಿರುವ ಅರ‍್ತ. ಈ ರೀತಿ ‘ಅರಿವಿಗೆ ಎಟಕದಿರುವ ಅರ‍್ತ’ ಮತ್ತು ‘ಅರಿವಿಗೆ ಎಟಕುವ ಅರ‍್ತ’ ಎಂಬುದಾಗಿ ಎರಡು ರೀತಿಯ ‘ಅರ‍್ತ’ಗಳು ಪದಗಳಿಗಿವೆ.

ಪದನೆರಕೆಗಳು ಕೊಡುವುದು ಅರಿವಿಗೆ ಎಟಕುವ ಅರ‍್ತಗಳನ್ನು ಮಾತ್ರ. ಅರಿವಿಗೆ ಎಟಕದ ಅರ‍್ತಗಳು ಅವಕ್ಕೂ ಎಟಕಲಾರವು. ಈ ಎರಡು ರೀತಿಯ ‘ಅರ‍್ತ’ಗಳ ನಡುವೆ ಹಲವು ರೀತಿಯ ವ್ಯತ್ಯಾಸಗಳಿದ್ದು ಅವನ್ನು ಸರಿಯಾಗಿ ತಿಳಿದುಕೊಳ್ಳದುದರಿಂದಾಗಿ ಅರಿವಿಗರು ಹಲವು ಬಗೆಯ ಗೊಂದಲಗಳಿಗೆ ಒಳಗಾಗಿದ್ದಾರೆ. ಅರಿವಿಗೆ ಎಟಕದ ಅರ‍್ತವನ್ನು ‘ತಿಳಿವು’ ಎಂಬುದಾಗಿ, ಮತ್ತು ಅರಿವಿಗೆ ಎಟಕುವ ಅರ‍್ತವನ್ನು ‘ಹುರುಳು’ ಎಂಬುದಾಗಿ ಹೆಸರಿಸಿದಲ್ಲಿ ಈ ಗೊಂದಲ ತಾನಾಗಿಯೇ ಇಲ್ಲವಾಗುತ್ತದೆ.

ಪದಗಳ ‘ತಿಳಿವು’ ಎನ್ನುವುದು ಅವನ್ನು ತಿಳಿದಿರುವವರ ಮಿದುಳಿನಲ್ಲಿ ಕೆಲವು ವಿಶಿಶ್ಟವಾದ ನರಗಳ ವಿನ್ಯಾಸಗಳಾಗಿ ಉಂಟಾಗಿರುತ್ತವೆ. ಯಾರಾದರೊಬ್ಬ ಆಡುಗನು ಒಂದು ಪದವನ್ನು ಬಳಸಿದಾಗ ಕೇಳುಗನ ಮಿದುಳಿನಲ್ಲಿ ಆ ಪದಕ್ಕಿರುವ ನರಗಳ ವಿನ್ಯಾಸ ಜೀವಂತವಾಗುತ್ತದೆ; ಎಂದರೆ ಅದು ಮಿಂಚುತ್ತದೆ. ನರಗಳ ವಿನ್ಯಾಸವೊಂದು ಈ ರೀತಿ ಮಿಂಚಿದಾಗ ಆತನಿಗೆ ತನಗೆ ತಿಳಿದಿರುವ ಪದವೊಂದನ್ನು ಕೇಳಿದಹಾಗಾಗುತ್ತದೆ.

ಒಂದು ನುಡಿಯನ್ನು ಕಲಿಯುವುದೆಂದರೆ ಮಿದುಳಿನಲ್ಲಿ ಇಂತಹ ಹಲವಾರು ನರಗಳ ವಿನ್ಯಾಸಗಳನ್ನು ಹೊಸದಾಗಿ ಉಂಟುಮಾಡಿಕೊಳ್ಳುವುದಲ್ಲದೆ ಬೇರೇನಲ್ಲ. ಒಬ್ಬ ವ್ಯಕ್ತಿ ಕಲಿಯದಿರುವ ನುಡಿಯ ಪದಗಳನ್ನು ಕೇಳಿದಾಗ ಅವನ ಮಿದುಳಿನಲ್ಲಿರುವ ನರಗಳ ವಿನ್ಯಾಸಗಳಲ್ಲಿ ಯಾವುದೂ ಮಿಂಚುವುದಿಲ್ಲ. ಅಂತಹ ಪದಗಳಿಗೆ ಮಿಂಚಬಲ್ಲ ನರಗಳ ವಿನ್ಯಾಸಗಳು ಆತನ ಮಿದುಳಿನಲ್ಲಿ ಉಂಟಾಗಿಲ್ಲವೆಂಬುದೇ ಇದಕ್ಕೆ ಕಾರಣ.

ಒಂದು ಪದದ ಹುರುಳು ಇದಕ್ಕಿಂತ ತೀರ ಬೇರಾದುದು. ‘ಎಲ್ಲೆ’ ಎಂಬ ಪದದ ಹುರುಳನ್ನು ‘ಗಡಿ’ ಎಂಬುದಾಗಿ ಕೊಡಬಹುದು. ಇಲ್ಲಿ ಎರಡು ಪದಗಳಿವೆ; ಅವುಗಳಲ್ಲಿ ಒಂದು ಇನ್ನೊಂದರ ಹುರುಳು. ಎರಡೂ ಪದಗಳೇ. ಆದರೆ ಅವುಗಳಲ್ಲಿ ಒಂದು ಪದದ (‘ಗಡಿ’ ಎಂಬುದರ) ತಿಳಿವು ಕೇಳುಗನಲ್ಲಿದೆ ಮತ್ತು ಇನ್ನೊಂದರ (‘ಎಲ್ಲೆ’ ಎಂಬುದರ) ತಿಳಿವು ಆತನಲ್ಲಿಲ್ಲ ಎಂಬ ಕಾರಣಕ್ಕಾಗಿ ಒಂದನ್ನು ಇನ್ನೊಂದರ ಹುರುಳು ಎಂಬುದಾಗಿ ಪರಿಗಣಿಸಲಾಗಿದೆ.

ಕೇಳುಗನಲ್ಲಿ ತಿಳಿವಿಲ್ಲದಿರುವ ಪದಕ್ಕೆ ಆತನಲ್ಲಿ ತಿಳಿವಿರುವ ಪದದ ಮೂಲಕ ಪದನೆರಕೆಗಳು ತಿಳಿವನ್ನು ಕೊಡಲು ಪ್ರಯತ್ನಿಸುತ್ತವೆ. ‘ಎಲ್ಲೆ’ ಪದದ ತಿಳಿವಿಲ್ಲದವರು ಮಾತ್ರವೇ ಪದನೆರಕೆಗಳಲ್ಲಿ ಅದರ ಅರ‍್ತವನ್ನು ಹುಡುಕಲು ಹೋಗುತ್ತಾರೆ. ಹಾಗೆ ಹುಡುಕುವವರಿಗೆ ‘ಗಡಿ’ ಎಂಬುದರ ತಿಳಿವು ಇರಬಹುದು ಎಂಬುದಾಗಿ ಪದನೆರಕೆಯನ್ನು ರಚಿಸುವವರು ಕಲ್ಪಿಸಿಕೊಂಡು ಆ ಪದವನ್ನು ಅದರ ಹುರುಳಾಗಿ ಕೊಡುತ್ತಾರೆ. ಇದಕ್ಕೆ ಬದಲು, ‘ಗಡಿ’ ಪದದ ತಿಳಿವಿಲ್ಲದವರು ಆ ಪದದ ಅರ‍್ತವನ್ನು ಪದನೆರಕೆಗಳಲ್ಲಿ ಹುಡುಕುತ್ತಾರೆ ಮತ್ತು ಅವರಿಗೆ ‘ಎಲ್ಲೆ’ ಎಂಬ ಪದದ ತಿಳಿವಿರಬಹುದೆಂದು ಪದನೆರಕೆಗಳನ್ನು ರಚಿಸುವವರು ಕಲ್ಪಿಸಿಕೊಂಡು ಆ ಪದವನ್ನು ಅದರ ಹುರುಳಾಗಿ ಕೊಡುತ್ತಾರೆ. ಎರಡರ ತಿಳಿವೂ ಇಲ್ಲದವರಿಗೆ ಅಂತಹ ಪದನೆರಕೆ ಯಾವ ನೆರವನ್ನೂ ನೀಡಲಾರದು.

ತಿಳಿವು ಮತ್ತು ಹುರುಳುಗಳ ನಡುವಿರುವ ಈ ವ್ಯತ್ಯಾಸ ಹುರುಳುಗಳ ನಡುವಿನ ಸಂಬಂದವೆಂತಹದು ಎಂಬುದನ್ನು ತಿಳಿಯುವಲ್ಲಿ ಬಹಳ ಪ್ರಯೋಜನಕ್ಕೆ ಬರುತ್ತದೆ. ಎರಡು ಪದಗಳಿಗೆ (‘ಎಲ್ಲೆ’ ಮತ್ತು ‘ಗಡಿ’ ಎಂಬವುಗಳಿಗೆ) ಒಂದೇ ಅರ‍್ತವಿದೆ ಎಂದು ಹೇಳುವಾಗ ನಾವು ಅವುಗಳಲ್ಲಿ ಒಂದನ್ನು ಇನ್ನೊಂದರ ಹುರುಳಾಗಿ ಬಳಸಬಲ್ಲೆವು ಎಂದಶ್ಟೇ ಹೇಳುತ್ತೇವಲ್ಲದೆ ನಿಜಕ್ಕೂ ಆ ಎರಡು ಪದಗಳಿಗೆ ನಮ್ಮಲ್ಲಿ ಒಂದೇ ರೀತಿಯ ತಿಳಿವಿದೆ ಎಂದೇನೂ ಹೇಳುವುದಿಲ್ಲ. ಯಾಕೆಂದರೆ, ಒಂದು ಪದದ ತಿಳಿವಿಗೆ ಹಲವು ಆಯಾಮಗಳಿದ್ದು ಅವೆಲ್ಲವುಗಳಲ್ಲೂ ಅದು ಇನ್ನೊಂದು ಪದದ ಹಾಗೆಯೇ ಇರಲು ಸಾದ್ಯವೇ ಇಲ್ಲ. ಎತ್ತುಗೆಗಾಗಿ, ‘ಗಡಿ’ ಪದವನ್ನು ಹೊತ್ತಿಗೆ ಸಂಬಂದಿಸಿದಂತೆಯೂ ‘ಗಡಿ’ ಇಲ್ಲವೇ ‘ಗಡುವು’ ಎಂಬ ರೂಪದಲ್ಲಿ ಬಳಸಲು ಬರುತ್ತದೆ; ಆದರೆ, ‘ಎಲ್ಲೆ’ ಎಂಬ ಪದಕ್ಕೆ ಅಂತಹ ಹೊತ್ತಿಗೆ ಸಂಬಂದಿಸಿದ ಬಳಕೆಯಿಲ್ಲ. ಇವೆರಡರೊಳಗೆ ಇಂತಹ ಇನ್ನೂ ಹಲವು ವ್ಯತ್ಯಾಸಗಳಿವೆಯಾದ ಕಾರಣ, ಅವೆರಡರ ಅರ‍್ತ ಒಂದೇ ಎನ್ನುವುದು ಹುರುಳಿಗೆ ಸಂಬಂದಿಸಿದ ಪರಿಕಲ್ಪನೆಯಲ್ಲದೆ ತಿಳಿವಿಗೆ ಸಂಬಂದಿಸಿದ ಪರಿಕಲ್ಪನೆಯಲ್ಲ.

ಒಂದು ಪದದ ಹುರುಳನ್ನು ಪದಕಂತೆ ಇಲ್ಲವೇ ಸೊಲ್ಲಿನ ಮೂಲಕ ವಿವರಿಸುವಲ್ಲೂ ಇಂತಹದೇ ಸಮಸ್ಯೆ ನಮ್ಮೆದುರಿಗಿದೆ. ನಾವು ಕೊಡುವ ಪದಕಂತೆ ಇಲ್ಲವೇ ಸೊಲ್ಲು ಆ ಪದದ ತಿಳಿವಿನ ಕೆಲವು ಅಂಶಗಳನ್ನು ಮಾತ್ರವೇ ಸೂಚಿಸಬಲ್ಲುದಲ್ಲದೆ ಎಲ್ಲಾ ಅಂಶಗಳನ್ನೂ ಸೂಚಿಸಲಾರದು. ಕೆಲವು ಪದಗಳ ಹಿಂದಿರುವ ತಿಳಿವನ್ನು ಸರಿಯಾಗಿ ತಿಳಿಸಬೇಕಿದ್ದಲ್ಲಿ ಒಂದು ದೊಡ್ಡ ಪ್ರಬಂದವನ್ನೇ ಬರೆಯಬೇಕಾದೀತು. ಹಾಗಾಗಿ, ಇಲ್ಲೂ ನಮ್ಮೆದುರಿಗಿರುವುದು ಹುರುಳಿಗೆ ಸಂಬಂದಿಸಿದ ಪರಿಕಲ್ಪನೆಯೇ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter

ಪದಗಳ ಹಿನ್ನಡವಳಿಯನ್ನು ಅರಿಯುವ ಬಗೆ

ನುಡಿಯರಿಮೆಯ ಇಣುಕುನೋಟ – 29

ಕನ್ನಡದ ಯಾವ ಪದವನ್ನು ಬೇಕಿದ್ದರೂ ಸಂಸ್ಕ್ರುತದ ಪದಗಳಿಂದ ಬಂದುವೆಂಬುದಾಗಿ ತೋರಿಸಿಕೊಡಬಲ್ಲೆವು ಎಂಬ ನಂಬಿಕೆ ಕೆಲವರಲ್ಲಿದೆ; ಹೀಗೆ ತೋರಿಸಿಕೊಡುವುದಕ್ಕಾಗಿ ಅವರು ಪದಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಕಾಣಿಸುವ ಹೋಲಿಕೆಗಳನ್ನು ಮಾತ್ರವಲ್ಲದೆ ಹಲವಾರು ಬಗೆಯ ಕಯ್ಚಳಕಗಳನ್ನೂ ಬಳಸುತ್ತಾರೆ.

ಈ ಕಯ್ಚಳಕಗಳ ಮೂಲಕ ಅವರು ಉಲಿ ಇಲ್ಲವೇ ಹುರುಳುಗಳಲ್ಲಿ ಹೋಲಿಕೆಗಳು ಕಾಣಿಸದಿದ್ದರೂ ಸಂಬಂದವನ್ನು ಕಾಣಬಲ್ಲರು; ಎತ್ತುಗೆಗಾಗಿ, ಕನ್ನಡದ ‘ನೆತ್ತರು’ ಪದವನ್ನು ಸಂಸ್ಕ್ರುತದ ‘ರುಧಿರ’ ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯಿದ್ದರೂ ಉಲಿಯ ಹೋಲಿಕೆ ತುಂಬಾ ಕಡಿಮೆ; ಕನ್ನಡದ ‘ಕಟ್ಟೆ’ ಪದವನ್ನು ಸಂಸ್ಕ್ರುತದ ‘ಕಕ್ಷಾ’ (ಕಂಕುಳು) ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯೂ ತುಂಬಾ ಕಡಿಮೆ. ಹೀಗಿದ್ದರೂ, ಕಯ್ಚಳಕಗಳ ಮೂಲಕ ಅವರು ಇವನ್ನು ಒಂದಕ್ಕೊಂದು ಜೋಡಿಸಿ ಬಿಡುತ್ತಾರೆ. ಇಂತಹ ಕಯ್ಚಳಕಗಳು ಅವರಿಗೆ ತಮ್ಮ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನೆರವಾಗುತ್ತವೆಯಾದರೂ, ನಿಜಕ್ಕೂ ಆ ಪದಗಳ ಹಿನ್ನಡವಳಿ (ಚರಿತ್ರೆ) ಎಂತಹದು ಎಂಬುದನ್ನು ತಿಳಿದುಕೊಳ್ಳುವಲ್ಲಿ ಅವು ಯಾವ ನೆರವನ್ನೂ ನೀಡುವುದಿಲ್ಲ.

ಕನ್ನಡದ ಪದಗಳು ಎರಡು ಬಗೆಗಳಲ್ಲಿ ಸಂಸ್ಕ್ರುತ ಪದಗಳೊಂದಿಗೆ ಸಂಬಂದಿಸಿರಬಲ್ಲುವು: ಅವೆರಡೂ ಒಂದೇ ನುಡಿಕುಟುಂಬದ ನುಡಿಗಳೆಂಬುದೊಂದು ಬಗೆ, ಮತ್ತು ಅವುಗಳಲ್ಲಿ ಒಂದು ಇನ್ನೊಂದರಿಂದ ಪದಗಳನ್ನು ಎರವಲು ಪಡೆದಿದೆಯೆಂಬುದಿನ್ನೊಂದು ಬಗೆ. ಹಾಗಾಗಿ, ಯಾವ ಬಗೆಯ ಸಂಬಂದವನ್ನು ಅವುಗಳ ಪದಗಳ ನಡುವೆ ಕಾಣಲಾಗುತ್ತದೆ ಎಂಬುದನ್ನು ಮೊದಲು ತಿಳಿಸಬೇಕಾಗುತ್ತದೆ.

ನುಡಿಗಳಲ್ಲಿ ಕಾಲದಿಂದ ಕಾಲಕ್ಕೆ ಹಲವು ಬಗೆಯ ಮಾರ್‍ಪಾಡುಗಳು ನಡೆಯುತ್ತಲೇ ಇರುತ್ತವೆ; ಇವು ಉಲಿಗಳನ್ನು ಮಾರ್‍ಪಡಿಸಬಹುದು, ಪದಗಳನ್ನು ಇಲ್ಲವೇ ಅವುಗಳ ಹುರುಳುಗಳನ್ನು ಮಾರ್‍ಪಡಿಸಬಹುದು, ಮತ್ತು ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳನ್ನು ಮಾರ್‍ಪಡಿಸಬಹುದು. ಇಂತಹ ಹಲವು ಬಗೆಯ ಮಾರ್‍ಪಾಡುಗಳು ನಡೆದುದರಿಂದಾಗಿ ಹಳೆಗನ್ನಡವಿದ್ದುದು ನಡುಗನ್ನಡವಾಗಿ ಇವತ್ತು ಹೊಸಗನ್ನಡವಾಗಿದೆ, ಮತ್ತು ಹೊಸಗನ್ನಡವೂ ಹಲವು ಬಗೆಯ ಆಡುನುಡಿಗಳಾಗಿ ಒಡೆದುಕೊಂಡಿದೆ.

ಕಾಲದಿಂದ ಕಾಲಕ್ಕೆ ನಡೆಯುವ ಇಂತಹ ಮಾರ್‍ಪಾಡುಗಳಲ್ಲಿ ನುಡಿಯ ಉಲಿಗಳಲ್ಲಿ ನಡೆಯುವ ಮಾರ್‍ಪಾಡುಗಳೇ ತುಂಬಾ ಮುಕ್ಯವಾದವುಗಳು; ಯಾಕೆಂದರೆ, ಅವುಗಳಿಂದಾಗಿ ಪದಗಳ ಮತ್ತು ಒಟ್ಟು(ಪ್ರತ್ಯಯ)ಗಳ ರೂಪದಲ್ಲಿ ಮಾತ್ರವಲ್ಲದೆ, ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲೂ ಮಾರ್‍ಪಾಡುಗಳು ನಡೆಯುತ್ತವೆ. ಕನ್ನಡದ ಹಿನ್ನಡವಳಿಯಲ್ಲಿ ಇಂತಹ ಹಲವು ಬಗೆಯ ಉಲಿಗಳ ಮಾರ್‍ಪಾಡುಗಳು ನಡೆದಿವೆ.

ಹಳೆಗನ್ನಡದ ಪಕಾರ ಹಕಾರವಾಗಿರುವುದು (ಪಾಲು>ಹಾಲು, ಪಳೆ>ಹಳೆ, ಪೋಗು>ಹೋಗು); ರ-ಱ, ಳ-ೞಗಳ ನಡುವಿನ ವ್ಯತ್ಯಾಸ ಇಲ್ಲವಾಗಿರುವುದು, ಉದ್ದ ತೆರೆಯುಲಿ (ಸ್ವರ) ಮತ್ತು ತಡೆಯುಲಿ(ಸ್ಪರ‍್ಶ)ಗಳ ನಡುವಿನ ಮೂಗುಲಿ (ಅನುನಾಸಿಕ) ಬಿದ್ದುಹೋಗಿರುವುದು (ನೂಂಕು>ನೂಕು, ದಾಂಟು>ದಾಟು) ಮೊದಲಾದುವು ಇಂತಹ ಉಲಿಗಳ ಮಾರ್‍ಪಾಡುಗಳು.

ಇವು ಉಲಿಗಳ ಮಾರ್‍ಪಾಡುಗಳಲ್ಲದೆ ಪದಗಳ ಮಾರ್‍ಪಾಡುಗಳಲ್ಲ ಎಂಬುದನ್ನು ಗಮನಿಸುವುದು ಅವಶ್ಯ; ಪಕಾರ ಹಕಾರವಾಗುವಂತಹ ಒಂದು ಮಾರ್‍ಪಾಡು ನಡೆದಾಗ, ಪಕಾರವಿದ್ದ ಎಲ್ಲಾ (ಸಾವಿರಕ್ಕಿಂತಲೂ ಹೆಚ್ಚು) ಪದಗಳೂ ಅದಕ್ಕೆ ಒಳಗಾಗಿರುತ್ತವೆ. ಇಂತಹ ಮಾರ್‍ಪಾಡುಗಳು ಒಂದು ಉಲಿಯನ್ನು ಎಲ್ಲೆಡೆಗಳಲ್ಲೂ ತಾಗಬಹುದು, ಇಲ್ಲವೇ ಕೆಲವೆಡೆಗಳಲ್ಲಿ ಮಾತ್ರ ತಾಗಬಹುದು; ಪಕಾರ ಹಕಾರವಾಗುವ ಮಾರ್‍ಪಾಡು ಪಕಾರವನ್ನು ಎಲ್ಲೆಡೆಗಳಲ್ಲೂ ತಾಗಿದೆ; ಆದರೆ, ಎಕಾರ ಇಕಾರವಾಗುವ ಇನ್ನೊಂದು ಮಾರ್‍ಪಾಡು ಎಕಾರದ ಬಳಿಕ ಒತ್ತೆ ಮುಚ್ಚುಲಿ (ವ್ಯಂಜನ) ಮತ್ತು ಇಕಾರ ಇಲ್ಲವೇ ಉಕಾರ ಬಂದಿರುವಲ್ಲಿ ಮಾತ್ರ ನಡೆದಿದೆ, ಬೇರೆಡೆಗಳಲ್ಲಿ ಎಕಾರ ಮಾರ್‍ಪಡದೆ ಉಳಿದಿದೆ (ಬಿಳಿ, ಬಿಸಿ, ನಿಡು ಎಂಬಂತಹ ಪದಗಳಲ್ಲಿ ಈ ಮಾರ್‍ಪಾಡು ನಡೆದಿದೆ. ಆದರೆ ಬೆಳ್ಳಗೆ, ಬೆಚ್ಚಗೆ, ನೆಟ್ಟಗೆ ಎಂಬಂತಹ ಪದಗಳಲ್ಲಿ ನಡೆದಿಲ್ಲ). ಇದಲ್ಲದೆ, ಇಂತಹ ಮಾರ್‍ಪಾಡುಗಳಿಗೆಲ್ಲ ಒಂದು ಗಡುವಿರುತ್ತದೆ; ಈ ಗಡುವು ಮುಗಿದ ಮೇಲೆ ಹಿಂದಿನ ಬರಹಗಳಿಂದ (ಪಾಲು, ಪುಟ್ಟ, ಪೆಟ್ಟು) ಇಲ್ಲವೇ ಬೇರೆ ನುಡಿಗಳಿಂದ (ಪಾಪ, ಪುಣ್ಯ, ಪೂಜೆ) ಪದಗಳು ಎರವಲಾಗಿ ಬಂದು ಈ ಮಾರ್‍ಪಾಡಿಗೆ ಹೊರಪಡಿಕೆಗಳಾಗಿ ಕಾಣಿಸಬಲ್ಲುವು.

ಎರಡು ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ತೀರ‍್ಮಾನಿಸುವಲ್ಲೆಲ್ಲ ಇಂತಹ ಉಲಿಗಳ ಮಾರ್‍ಪಾಡುಗಳನ್ನೇ ಮುಕ್ಯವಾದ ನೆಲೆಯಾಗಿ ಬಳಸಿಕೊಳ್ಳಲಾಗುತ್ತದೆ. ಯಾಕೆಂದರೆ, ನುಡಿಗಳಲ್ಲಿ ನಡೆಯುವ ಹಲವು ಬಗೆಯ ಮಾರ್‍ಪಾಡುಗಳಲ್ಲಿ ಉಲಿಗಳ ಮಾರ್‍ಪಾಡುಗಳ ಮೇಲೆ ಮಾತ್ರ ಪದಗಳ ಹುರುಳುಗಳು ಯಾವ ಪ್ರಬಾವವನ್ನೂ ಬೀರುವುದಿಲ್ಲ; ನೇರವಾಗಿ ಪದಗಳಲ್ಲಿ ಇಲ್ಲವೇ ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲಿ ನಡೆಯುವ ಮಾರ್‍ಪಾಡುಗಳ ಮೇಲೆ ಅವು ಹಲವು ಬಗೆಗಳಲ್ಲಿ ಪ್ರಬಾವವನ್ನು ಬೀರುತ್ತವೆ, ಮತ್ತು ಈ ರೀತಿ ಹುರುಳುಗಳಿಂದ ಪ್ರಬಾವಿತವಾಗಿರುವ ಮಾರ್‍ಪಾಡುಗಳನ್ನು ಕಚಿತವಾದ ಕಟ್ಟಲೆಗಳಲ್ಲಿ ಸೆರೆಹಿಡಿಯಲು ಬರುವುದಿಲ್ಲ; ಯಾಕೆಂದರೆ, ಹುರುಳುಗಳಿಂದ ಪ್ರಬಾವಿತವಾದ ಮಾರ್‍ಪಾಡುಗಳಿಗೆ ಹಲವಾರು ಬಗೆಯ ಹೊರಪಡಿಕೆಗಳಿರುತ್ತವೆ.

ಹಾಗಾಗಿ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂಬ ತೀರ್‍ಮಾನಕ್ಕೆ ಬರಬೇಕಿದ್ದಲ್ಲಿ ಕನ್ನಡದ ಹಿನ್ನಡವಳಿಯಲ್ಲಿ ನಡೆದ ಉಲಿಗಳ ಮಾರ್‍ಪಾಡುಗಳನ್ನೇ ಮುಕ್ಯ ನೆಲೆಯಾಗಿ ಬಳಸಿಕೊಳ್ಳಬೇಕಾಗುತ್ತದೆ. ಎಂದರೆ, ಕನ್ನಡ ಮತ್ತು ಸಂಸ್ಕ್ರುತ ಪದಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಕನ್ನಡದ ಹಿನ್ನಡವಳಿಯಲ್ಲಿ ನಡೆದಿದ್ದ ಹಲವು ಬಗೆಯ ಉಲಿಗಳ ಮಾರ್‍ಪಾಡುಗಳಿಂದಾಗಿ ಮೂಡಿಬಂದಿವೆ ಎಂಬುದಾಗಿ ತೋರಿಸಿಕೊಡಲು ಸಾದ್ಯವಾದಾಗ ಮಾತ್ರ ಕನ್ನಡ ಸಂಸ್ಕ್ರುತದಿಂದ ಬೆಳೆದುಬಂದಿದೆ ಎಂಬುದನ್ನು ಒಪ್ಪಿಕೊಳ್ಳಲು ಬರುತ್ತದೆ. ಆದರೆ, ಇದುವರೆಗೆ ಯಾರಿಗೂ ಆ ರೀತಿ ತೋರಿಸಿಕೊಡಲು ಸಾದ್ಯವಾಗಿಲ್ಲ.

ಹಾಗಾಗಿ, ಸದ್ಯಕ್ಕಂತೂ ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿಲ್ಲವೆಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ, ಮತ್ತು ಕನ್ನಡದಲ್ಲಿ ಮೂಲದ್ರಾವಿಡ ನುಡಿಯಿಂದ ಬಂದ ಕನ್ನಡದವೇ ಆದ ಪದಗಳು, ಮತ್ತು ಸಂಸ್ಕ್ರುತವೇ ಮೊದಲಾದ ಬೇರೆ ನುಡಿಗಳಿಂದ ಎರವಲಾಗಿ ಬಂದ ಪದಗಳು ಎಂಬುದಾಗಿ ಎರಡು ಬಗೆಯ ಪದಗಳು ಇವೆಯೆಂಬುದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ.

ಕನ್ನಡದ ಪದಗಳಿಗೂ ಸಂಸ್ಕ್ರುತದ ಪದಗಳಿಗೂ ನಡುವೆ ಅವುಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಹೋಲಿಕೆಯಿದೆಯಾದರೆ, ಅದಕ್ಕೆ ಹಲವು ಕಾರಣಗಳಿರಬಲ್ಲುವು. ಎತ್ತುಗೆಗಾಗಿ, ಈ ಎಲ್ಲಾ ಪದಗಳನ್ನೂ ಉಂಟುಮಾಡಿದವರು ಮಾನವರೇ ಎಂಬುದೊಂದು ಕಾರಣ; ಹೋಲಿಕೆ ಬರಿಯ ಆಕಸ್ಮಿಕವಾಗಿರಬಹುದೆಂಬುದಿನ್ನೊಂದು ಕಾರಣ. ಹಾಗಾಗಿ, ಒಂದು ನುಡಿ ಇನ್ನೊಂದರಿಂದ ಎರವಲು ಪಡೆದಿದೆಯೆಂಬುದು ಪದಗಳ ನಡುವಿರುವ ಹೋಲಿಕೆಗಳಿಗಿರುವ ಹಲವು ಕಾರಣಗಳಲ್ಲಿ ಒಂದು ಮಾತ್ರ. ಇದಲ್ಲದೆ, ಇಲ್ಲಿಯೂ ಒಂದು ಪದವನ್ನು ಯಾವ ನುಡಿ ಯಾವ ನುಡಿಯಿಂದ ಎರವಲಾಗಿ ಪಡೆದಿದೆ ಎಂಬುದನ್ನು ತೀರ್‍ಮಾನಿಸುವಲ್ಲಿ ಅರಕೆಗೆ ನೆಲೆಯಿದೆ.

ಸಾಮಾನ್ಯವಾಗಿ, ಒಂದು ಪದದ ಹರಹು ಎಂತಹದು ಎಂಬುದರ ಮೇಲೆ ಅದರ ಹಿನ್ನಡವಳಿಯೆಂತಹದು ಎಂಬುದನ್ನು ತೀರ್‍ಮಾನಿಸಲಾಗುತ್ತದೆ; ಎತ್ತುಗೆಗಾಗಿ, ಕನ್ನಡದ ಒಂದು ಪದಕ್ಕೆ ಸಮಾನವಾದ ಪದಗಳು ತಮಿಳು, ತೆಲುಗು, ಗೋಂಡಿ, ಕುಡುಕ್ ಮೊದಲಾದ ಬೇರೆ ಹಲವು ದ್ರಾವಿಡ ನುಡಿಗಳಲ್ಲೂ ಕಾಣಿಸಿಕೊಳ್ಳುತ್ತಿವೆಯಾದರೆ, ಮತ್ತು ಸಂಸ್ಕ್ರುತವನ್ನು ಹೊರತುಪಡಿಸಿ ಉಳಿದ ಲ್ಯಾಟಿನ್, ಗ್ರೀಕ್, ಪರ್‍ಶಿಯನ್ ಮೊದಲಾದ ಇಂಡೋ-ಯುರೋಪಿಯನ್ ನುಡಿಗಳಲ್ಲಿ ಕಾಣಿಸುವುದಿಲ್ಲವಾದರೆ, ಅದು ಕನ್ನಡದ್ದೇ ಆದ ಪದ, ಮತ್ತು ಸಂಸ್ಕ್ರುತಕ್ಕೇನೇ ಅದು ದ್ರಾವಿಡ ನುಡಿಗಳಿಂದ ಎರವಲಾಗಿ ಬಂದಿದೆ ಎಂದು ಹೇಳಬೇಕಾಗುತ್ತದೆ.

ಇಂತಹ ಅರಕೆಗಳನ್ನು ನಡೆಸದೆ ಬರಿಯ ಹೋಲಿಕೆಯ ಮೇಲೆ ಎಲ್ಲವೂ ಸಂಸ್ಕ್ರುತದಿಂದ ಬಂದಿವೆಯೆಂದು ಹೇಳುವುದನ್ನು ಒಂದು ಅರಿಮೆಯ ಹೇಳಿಕೆಯೆಂದು ತಿಳಿಯಲು ಬರುವುದಿಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)

facebooktwitter